ಕ್ರೀಡೆ

ಬೆಳಗಿನ ಪ್ರಮುಖ ಸುದ್ದಿಗಳು

Published

on

ಬೆಳಗಿನ ಪ್ರಮುಖ ಸುದ್ದಿಗಳು

  1. ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯರಸ್ತೆಗಳ ಅಸುಪಾಸಿನಲ್ಲಿ ಅನಧಿಕೃತ ಕಟ್ಟಡ ನಿರ್ಮಿಸದಂತೆ ಲೋಕೋಪಯೋಗಿ ಇಲಾಖೆಯಿಂದ ಹೊಸ ನಿಯಮ ಜಾರಿಗೆ ತರಲಾಗಿದೆ ಎಂದು ಇಲಾಖೆ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ಹೆದ್ದಾರಿಗಳ ಇಕ್ಕೆಲೆಗಳ ಕಟ್ಟಡ ನಿರ್ಮಾಣ ಎಷ್ಟು ಪ್ರಮಾಣದ ಅಂತರ ಕಾಪಾಡಿಕೊಳ್ಳಬೇಕು ಎಂಬ ನಿಯಮ, ವಿವರ ನಮೂದಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
  2. ಬೆಳಕು ಯೋಜನೆಯಡಿ ರಾಜ್ಯದಲ್ಲಿ ವಿದ್ಯುತ್ ರಹಿತ ಮನೆಗಳಿಗೆ ಸಂಪರ್ಕ ನೀಡಲಾಗಿದೆ. 24 ಗಂಟೆಯೊಳಗೆ ಟ್ರಾನ್ಸ್‌ಫರ್ಮರ್ ಬದಲಾವಣೆಗೆ ಕ್ರಮ ಕೈಗೊಳ್ಳಲಾಗಿದೆ.160ಕಡೆ ಟಿಸಿ ಬ್ಯಾಂಕ್ ಸ್ಥಾಪನೆ ಮಾಡಲಾಗಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಬಾಗಲಕೋಟೆಯಲ್ಲಿ ತಿಳಿಸಿದ್ದಾರೆ.

    ರಾಜ್ಯದಲ್ಲಿ ರೇಷ್ಮೆ ಉತ್ಪಾದನೆಗೆ ಆದ್ಯತೆ ನೀಡಲಾಗುವುದು ಎಂದು ಕರ್ನಾಟಕ ರೇಷ್ಮೆ ಕೈಗಾರಿಕಾ ನಿಗಮದ ನೂತನ ಅಧ್ಯಕ್ಷ ಗೌತಮ್ ಗೌಡ ರಾಮನಗರದಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ಹಾಲಿ ಇರುವ 17 ರೇಷ್ಮೆ ಕೈಗಾರಿಕಾ ನಿಗಮದ ಮಾರಾಟ ಮಳಿಗೆಗಳನ್ನು ವಿನೂತನವಾಗಿ ನವೀಕರಿಸಿ ಗ್ರಾಹಕರ ಅಭಿರುಚಿಗೆ ತಕ್ಕಂತೆ ಮಾರ್ಪಾಡು ಮಾಡಲಾಗುವುದು ಎಂದು ಅವರು ತಿಳಿಸಿದರು.

  3. ಕರ್ನಾಟಕ ಪರಿಕ್ಷಾ ಪ್ರಾಧಿಕಾರದ ವತಿಯಿಂದ ಇದೇ 7ರಂದು ನಡೆಯಲಿರುವ ಕೆಪಿಟಿಸಿಎಲ್ ಸ್ಪರ್ಧಾತ್ಮಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ – ಇಸ್ರೋ, ತನ್ನ ಸಣ್ಣ ಉಪಗ್ರಹ ಉಡಾವಣಾ ವಾಹನ – ಎಸ್‌ಎಸ್‌ಎಲ್‌ವಿ ಮೂಲಕ ಇದೇ 7ರ ಭಾನುವಾರದಂದು ಪ್ರಥಮ ಉಡಾವಣೆ ಮಾಡಲಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭಾರತೀಯ ಕಾಲಮಾನ ಭಾನುವಾರ ಬೆಳಿಗ್ಗೆ 9 ಗಂಟೆ 18 ನಿಮಿಷಕ್ಕೆ ಇಒಎಸ್-02ಉಪಗ್ರಹ ಉಡಾವಣೆಯಾಗಲಿದೆ ಎಂದು ಇಸ್ರೋ ತಿಳಿಸಿದೆ.

  4. 8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ, ಕೈಮಗ್ಗ ಮತ್ತು ಜವಳಿ ಇಲಾಖೆ ನಾಳೆಯಿಂದ ಆಗಸ್ಟ್ (5 ರಿಂದ) 7ರವರೆಗೆ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಆಯೋಜಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಬೆಂಗಳೂರಿನಲ್ಲಿ ಪ್ರದರ್ಶನ ಉದ್ಘಾಟಿಸಲಿದ್ದಾರೆ.
  5. ರಾಜ್ಯದಲ್ಲಿ ಪಿಎಸ್‌ಐ ನೇಮಕಾತಿಯ ಮರು ಪರೀಕ್ಷೆ ಶೀಘ್ರದಲ್ಲಿಯೇ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಪ್ರಕ್ರಿಯೆ ಮುಗಿದ ನಂತರ ಮರು ಪರೀಕ್ಷೆ ನಡೆಸುವ ಬಗ್ಗೆ ಪ್ರಕಟಣೆ ಹೊರಡಿಸಲಾಗುವುದು ಎಂದು ಸಚಿವರು ಹೇಳಿದರು.
  6. ರಾಜ್ಯ ಹೆದ್ದಾರಿ ಜಿಲ್ಲಾ ಮುಖ್ಯರಸ್ತೆಗಳ ಆಸುಪಾಸಿನಲ್ಲಿ ಅನಧಿಕೃತ ಕಟ್ಟಡ ನಿರ್ಮಿಸದಂತೆ ಲೋಕೋಪಯೋಗಿ ಇಲಾಖೆಯಿಂದ ಹೊಸ ನಿಯಮ ಜಾರಿಗೆ ತರಲಾಗಿದೆ ಎಂದು ಇಲಾಖೆ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ಸಿಟಿ ಕಾರ್ಪೋರೇಷನ್ ವ್ಯಾಪ್ತಿಯಲ್ಲಿ 12 ಮೀಟರ್ ದೂರದವರೆಗೆ ಅಂತರ ಪಾಲಿಸುವುದು ಕಡ್ಡಾಯವಾಗಿದೆ. ಪಟ್ಟಣ ಪಂಚಾಯತಿ, ನಗರಸಭೆ ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ೬ ಮೀಟರ್ ಅಂತರ ಕಾಪಾಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದ್ದಾರೆ.
  7. ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆ ’ಹರ್ ಘರ್ ತಿರಂಗ್’ ಕಾರ್ಯಕ್ರಮದ ಅಂಗವಾಗಿ ದಾವಣಗೆರೆ ಮಹಾನಗರ ಪಾಲಿಕೆಯಿಂದ ನಿನ್ನೆ ಕಾರ್ಮಿಕರಿಗೆ ತ್ರಿವರ್ಣ ಧ್ವಜ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಆಗಸ್ಟ್ 13 ರಿಂದ 15 ರ ವರೆಗೆ ಎಲ್ಲರ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಿ, ರಾಷ್ಟ್ರ ಪ್ರೇಮವನ್ನು ಎಲ್ಲೆಡೆ ಪಸರಿಸಿ, ಭಾರತ ಮಾತೆಗೆ ಗೌರವ ಸಲ್ಲಿಸಲು ಅನುಕೂಲವಾಗುವಂತೆ ಅಂಗಡಿ ವರ್ತಕರು, ಹಾಗೂ ಅಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಧ್ವಜ ವಿತರಣೆ ಕಾರ್ಯಕ್ಕೆ ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಸೋಗಿ ಶಾಂತಕುಮಾರ ಚಾಲನೆ ನೀಡಿದರು.
  8. 2021-22ರ ಸಾಲಿನಲ್ಲಿ 99.30 ಲಕ್ಷ ಮೆಟ್ರಿಕ್ ಟನ್‌ನಷ್ಟು ಸಕ್ಕರೆ ರಫ್ತು ಮಾಡಲಾಗಿದೆ ಎಂದು ಕೇಂದ್ರ ಆಹಾರ ಮತ್ತು ಸಾರ್ವಜನಿಕ ಸರಬರಾಜು ಖಾತೆ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ತಿಳಿಸಿದ್ದಾರೆ. ದೇಶದಲ್ಲಿ ಸಕ್ಕರೆ ಲಭ್ಯತೆ, ಮಾರಾಟ ಮತ್ತು ರಫ್ತು ವಹಿವಾಟನ್ನು ಸಚಿವಾಲಯ ನಿರಂತರವಾಗಿ ನಿಗಾ ವಹಿಸುತ್ತಿದೆ ಎಂದು ಅವರು ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
  9. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ 2 ದಿನಗಳ ಭೇಟಿಗಾಗಿ ಕಳೆದ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಕಳೆದ ರಾತ್ರಿ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಹಿರಿಯ ಸಚಿವರಾದ ಗೋವಿಂದ ಕಾರಜೋಳ, ಸಿಸಿ ಪಾಟೀಲ್, ಆರಗ ಜ್ಞಾನೇಂದ್ರ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು, ಅಮಿತ್ ಶಾ ಅವರನ್ನು ಸ್ವಾಗತಿಸಿದರು.
  10. ಇಂದು ಬೆಂಗಳೂರು ನಗರದಲ್ಲಿ ನಡೆಯಲಿರುವ 3ನೇ ಆವೃತ್ತಿಯ ’ಸಂಕಲ್ಪದಿಂದ ಸಿದ್ಧಿ’ ಕಾರ್ಯಕ್ರಮದಲ್ಲಿ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. ಅನಂತರ ಅವರು, ದೇಶದಲ್ಲೇ ಅತಿ ದೊಡ್ಡ ಹಾಲಿನ ಘಟಕವೆಂದು ಖ್ಯಾತಿಗಳಿಸಿರುವ ಕರ್ನಾಟಕ ಹಾಲು ಒಕ್ಕೂಟ-ಕೆಎಂಎಫ್‌ಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ ಭಾಗವಹಿಸಲಿದ್ದಾರೆ.
  11. ಹೈಕೋರ್ಟ್‌ನ ನ್ಯಾಯಮೂರ್ತಿ ಪಿ. ಕೃಷ್ಣಾಭಟ್ ಅವರು ಸೇವೆಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಅವರಿಗೆ ಹೈಕೋರ್ಟ್‌ನಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿದೆ. ಹಂಗಾಮಿ ಮುಖ್ಯನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
  12. ಕೇಂದ್ರ ಸಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ 2022ನೇ ಸಾಲಿನ ವಯೋಶ್ರೇಷ್ಠ ಸಮ್ಮಾನ್ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
  13. ಗೃಹ ರಕ್ಷಕ ದಳ ಮತ್ತು ರಾಜ್ಯ ವಿಪ್ಪತ್ತು ಸ್ಪಂದನಾ ಪಡೆಯಿಂದ ಇಂದು 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನ ಆಯೋಜಿಸಲಾಗಿದೆ. ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ನಡೆಯುವ ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತಿತರರು ಭಾಗವಹಿಸಲಿದ್ದಾರೆ.
  14. ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ತೇಜಸ್ವಿನಿ ಶಂಕರ್ ಅಥ್ಲೆಟಿಕ್ಸ್‌ನಲ್ಲಿ ದೇಶಕ್ಕೆ ಮೊದಲ ಪದಕ ಗೆದ್ದುಕೊಟ್ಟಿದ್ದಾರೆ. ಪುರುಷರ ಹೈಜಂಪ್ ಫೈನಲ್‌ನಲ್ಲಿ ಅವರು, ಐತಿಹಾಸಿಕ ಕಂಚಿನ ಪದಕ ತನ್ನದಾಗಿಸಿಕೊಂಡಿದ್ದಾರೆ. ಭಾರತದ ವೇಟ್‌ಲಿಫ್ಟರ್ ಗುರ್ದಿಪ್ ಸಿಂಗ್ ಪುರುಷರ 109ಕೆಜಿ ವಿಭಾಗದಲ್ಲಿ ಕಂಚಿನ ಪದಕವನ್ನು ಜಯಿಸಿದ್ದಾರೆ. ಭಾರತದ ಜುಡೊ ಪಟು ತುಲಿಕಾ ಮಾನ್ ಮಹಿಳೆಯರ 78 ಕೆಜಿ ವಿಭಾಗದಲ್ಲಿ ಸ್ಕಾಟ್‌ಲ್ಯಾಂಡ್‌ನ ಆಟಗಾರ್ತಿ ವಿರುದ್ಧ ಗೆದ್ದು, ಬೆಳ್ಳಿ ಪದಕವನ್ನು ಸಂಪಾದಿಸಿದ್ದಾರೆ.ಇದರೊಂದಿಗೆ ಭಾರತ ಒಟ್ಟು 5 ಚಿನ್ನ, 6 ಬೆಳ್ಳಿ, ಮತ್ತು 7 ಕಂಚಿನ ಪದಕ ಸೇರಿ 18 ಪದಕಗಳನ್ನು ಗೆದ್ದದಂತಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version