Connect with us

ಬಹಿರಂಗ

ಡಾಕಿನಿ ಎಂದರೆ ಬೌದ್ಧ ಭಿಕ್ಕುಣಿ / ಬೌದ್ಧ ಯೋಗಿಣಿ

Published

on

  • ಪರಶುರಾಮ್. ಎ

ಭಾರತದ ಬಹುಭಾಗ ಇತಿಹಾಸ, ಇತಿಹಾಸವೇ ಅಲ್ಲ. ಹಾಗೆಂದರೆ ಭಾರತಕ್ಕೆ ಇತಿಹಾಸವಿಲ್ಲ ಎಂದಲ್ಲ. ಭಾರತದ ಪ್ರಾಚೀನ ಇತಿಹಾಸವನ್ನು ಬೇಕೆಂದೆ ಮನುವಾದಿಗಳು ತಿರುಚಿದ್ದಾರೆ. ಬುದ್ಧ ಮತ್ತು ಆರ್ಯರ ನಡುವೆ ನಡೆದ ಈ ಇತಿಹಾಸವನ್ನು ಬೇಕೆಂದೆ ಮರೆಮಾಚಿದ್ದಾರೆ. ಹಾಗೂ ಮಕ್ಕಳಿಗೆ ಮಹಿಳೆಯರಿಗೆ ಮನೋರಂಜನಾ ಕಥೆಗಳನ್ನಾಗಿ ಮಾಡಿದ್ದಾರೆ ಎಂದು ಡಾ.ಬಿ.ಆರ್ ಅಂಬೇಡ್ಕರರು ಹೇಳಿರುವುದು ಎಷ್ಟು ಸತ್ಯವೆಂಬುದನ್ನು ನಾವು ಈಗ ಗಮನಿಸೋಣ.

ಈ ಮಾತಿನಿಂದ ನಮಗೆ ತಿಳಿಯುವುದೇನೆಂದರೆ ಒಂದು ಕಾಲದಲ್ಲಿ ಪ್ರಚಲಿತವಿದ್ದ ಬುದ್ಧ ಧರ್ಮವನ್ನು ಇತಿಹಾಸಕಾರರು ಬೇಕೆಂದೆ ನಿರ್ಲಕ್ಷಿಸಿದ್ದಾರೆ. ಮತ್ತು ತಿರಸ್ಕರಿಸಿದ್ದಾರೆ. ಇಂತಹ ಅದೆಷ್ಟೋ ನಿರ್ಲಕ್ಷಿತಗೊಂಡ ಬೌದ್ಧ ಇತಿಹಾಸವನ್ನು ಡಾ.ಬಿ.ಅಂಬೇಡ್ಕರರು ತಮ್ಮ ಅಪೂರ್ವ ಜ್ಞಾನ ಸಂಪತ್ತಿನಿಂದಾಗಿ ಬಯಲಿಗೆ ಎಳೆದಿದ್ದಾರೆ. ಅವರ ಪುಸ್ತಕ ಓದಿನ ದಾಹ ಇಂತಹ ಅಪೂರ್ವ ಇತಿಹಾಸದ ಮೇಲೆ ಬೆಳಕು ಚೆಲ್ಲಿದೆ. ಹಾಗೂ ಇತ್ತೀಚಿನ ಕೆಲವು ಸಂಶೋಧಕರು ಕೂಡಾ ಬೌದ್ಧ ಧರ್ಮಾವಲಂಬಿಗಳ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಸಿ ಬೆಳಕು ಚೆಲ್ಲಿದ್ದಾರೆ.

ಭಾರತದಲ್ಲಿ ಹುಟ್ಟಿದ ಬುದ್ಧ ಧರ್ಮವನ್ನು ಮತ್ತು ಅದರ ಅನುಯಾಯಿಗಳನ್ನು ವಿದೇಶಿ ಬ್ರಾಹ್ಮಣ ಆರ್ಯರು ಬೇಕುಂತಲೇ ತುಚ್ಛೀಕರಿಸಿ, ದುಷ್ಟೀಕರಿಸಿ, ಭಯ ಮತ್ತು ಕ್ಷುದ್ರರೆಂಬಂತೆ ಬಿಂಬಿಸಿದ್ದಾರೆ. “ಭಾರತದ ದಾರ್ಶನಿಕ ಚರ್ಚೆಗಳಲ್ಲಿ ದರ್ಶನವು ಇನ್ನೊಂದರ ಬಗ್ಗೆ ತಾತ್ವಿಕ ಭಿನ್ನಮತಗಳು ಸೂಚಿಸುವುದು ಸಾಮಾನ್ಯ. ಈ ಭಿನ್ನಮತಗಳು ಕೆಲವೊಮ್ಮೆ ಯುದ್ಧರೂಪಿಯಾಗಿ ಇರುತ್ತವೆ. ತಾತ್ವಿಕ ಭಿನ್ನಮತವು ತಾನಾಗಿಯೇ 1 ದೊಡ್ಡ ಸಮಸ್ಯೆಯಲ್ಲ. ಆದರೆ ತಾನು ಒಪ್ಪದ ವಿಚಾರಧಾರೆಯಯೂ ಇರಬಾರದು ಎಂಬ ಹಗೆತನದಲ್ಲಿ ಮತ್ತೊಂದನ್ನು ದುಷ್ಟೀಕರಿಸುವುದು ಸಮಸ್ಯೆ.

ಆಧುನಿಕ ರಾಜಕಾರಣದಲ್ಲಿ ಸೈದ್ಧಾಂತಿಕ ಗುಂಪುಗಳು ಹಗೆಗಳಾಗಿ ಕಾದಾಟ ಮಾಡುವಂತೆ ಚರಿತ್ರೆಯಲ್ಲಿ ಪಂಥಗಳು ಪರಸ್ಪರ ಸಂಘರ್ಷ ಮಾಡಿಸಿ ಭಾರತದ “ಅವೈದಿಕ” ಎನ್ನಲಾಗುವ ದಾರ್ಶನಿಕ ಧಾರೆ ಹಾಗೂ ಪಂಥಗಳನ್ನು ಏಕಕಾಲಕ್ಕೆ ವಿಶಾಲ ಸಮುದಾಯಗಳಿಂದ ಸ್ವೀಕಾರವನ್ನು ಸ್ಥಾಪಿತ ವರ್ಗದಿಂದ ವಿರೋಧವನ್ನು ಪಡೆದಿದ್ದವು. ವೈದಿಕ ಪುರಾಣಗಳು ತಮ್ಮ ವಿರೋಧಿಗಳನ್ನು ರಾಕ್ಷಸರನ್ನಾಗಿ ಚಿತ್ರಿಸುವಂತೆ ವೈದಿಕರು ದಾರ್ಶನಿಕರು ಕೂಡಾ “ಅವೈದಿಕ” ಭೌತವಾದಿ ದರ್ಶನ ಹಾಗೂ ಪಂಥಗಳನ್ನು ವಿಕೃತವಾಗಿ ಚಿತ್ರಿಸಲು ಇದನ್ನು ದಾರ್ಶನಿಕ ಅಮಾನುಷೀಕರಣ ಅಥವಾ ದುಷ್ಟೀಕರಣ ಎನ್ನಬಹುದು”. (ಕರ್ನಾಟಕ ನಾಥಪಂಥ- ರಹಮತ್ ತರೀಕೆರೆ. ಪುಟ 7).

ಹೀಗೇ ವಿರೋಧಿಗಳನ್ನು ವಿರೋಧಿಸುವ ಭರದಲ್ಲಿ ಉಪದ್ರವಿಗಳು, ರಾಕ್ಷಸರೆಂಬಂತೆ ಬಿಂಬಿತರಾದವರ ಸಾಲಿನಲ್ಲಿ ಬಹುತೇಕ ಬೌದ್ಧ ಅರಸರು, ಭಿಕ್ಕುಗಳು, ಭಿಕ್ಕುಣಿಗಳನ್ನು ಕಾಣಬಹುದು. ಈ ವೈದಿಕ ಧರ್ಮ ಕೇವಲ ದುಷ್ಟೀಕರಣವನ್ನು ಮಾತ್ರ ಮಾಡಿಲ್ಲ. ತಮ್ಮ ನಿಲುವುಗಳಿಗೆ ಹಿತಾಸಕ್ತಿ ಸ್ಥಾಪನೆಗೆ ಸಹಕರಿಸಿದ ವ್ಯಕ್ತಿಗಳು, ರಾಜರು, ಇತರರನ್ನು ದೈವತ್ವ ಮಟ್ಟಕ್ಕೆ ಸಹ ಏರಿಸಿದೆ. ಅದಕ್ಕೊಂದು ಉದಾಹರಣೆ “ಮಹಿಷಾಸುರ” ಒಂದು ಕಾಲದಲ್ಲಿ ಮಹಿಷನೂರು ಈಗ ಮೈಸೂರು ಆಗಿದೆ. ರಾಜನಾಗಿ ಆಳ್ವಿಕೆ ಮಾಡುತ್ತಿದ್ದ ಮಹಿಷಾಸುರನನ್ನು ವೈದಿಕರು ಉಪದೃವಿ ಕೇಡುಂಟು ಮಾಡುವ ರಾಕ್ಷಸನಂತೆ ಚಿತ್ರಿಸಿದ್ದಾರೆ.

ಮಹಿಷಾಸುರ ರಾಕ್ಷಸನಲ್ಲ ಈ ಭಾಗದ ಜನಪ್ರಿಯ ಜನಾನುರಾಗಿ ರಾಜ ಆತನೊಬ್ಬ ಬೌದ್ಧ ಧರ್ಮ ಪ್ರಚಾರಕನೂ ಕೂಡಾ ಹೌದು. ಮೈಸೂರಿನ ಚಾಮುಂಡಿ ಬೆಟ್ಟದ ಮೇಲೆ ಅತ್ಯಂತ ವಿಶಾಲವಾಗಿ ನಿರ್ಮಿಸಿ ನಿಲ್ಲಿಸಿರುವ ಮಹಿಷಾಸುರನ ಪ್ರತಿಮೆ ಈತನದ್ದೇ ಆಗಿದೆ. ಅವನು ನಿಜವಾಗಿ ದುಷ್ಟನಾಗಿದ್ದರೆ, ಮೈಸೂರಿನಂಥ ಸುಂದರ ನಗರಕ್ಕೆ ಅವನ ಹೆಸರು ಇಡಲು ಸಾಧ್ಯವಾಗುತ್ತಿತ್ತೆ? ಅತ್ಯಂತ ಕ್ರೂರಿಯಾದ ವ್ಯಕ್ತಿಯ ಹೆಸರನ್ನು ನರನಿಗಾಗಲಿ ಸ್ಥಳಕ್ಕಾಗಲಿ ಇಟ್ಟಿರುವ ನಿದರ್ಶನ ಎಲ್ಲಿಯಾದರೂ ಉಂಟೆ? ಬದಲಿಗೆ ಮಹಿಷ ಜನಾನುರಾಗಿ ಆದ್ದರಿಂದ, ಜನೋದ್ದಾರಕ ಕೆಲಸ ಮಾಡಿದ್ದರಿಂದ ಅವನ ಹೆಸರನ್ನು ಮೈಸೂರಿಗೆ ಕೃತಜ್ಞಾಪೂರ್ವಕವಾಗಿ ಇಡಲಾಗಿದೆ.

ಇದು ಎಂಥವರಿಗಾದರೂ ಹೊಳೆಯುವ ಸಾಮಾನ್ಯ ವಿಷಯ.
ಮಹಿಷಾಸುರ ರಾಕ್ಷಸನಲ್ಲ, ಅವನು ಬೌದ್ಧ ಭಿಕ್ಕು. ಅವನ ನಿಜವಾದ ಹೆಸರು ಮಹಾದೇವ. ಸಾಮ್ರಾಟ್ ಅಶೋಕನ ಕಾಲದಲ್ಲಿ, ಬೌದ್ಧ ಗುರು ಮೊಗ್ಗಲಿತಿಸ್ಸನ ಬುದ್ಧಧಮ್ಮ ಪ್ರಚಾರಕ್ಕಾಗಿ ತೇರಾ ಮಹಾದೇವನನ್ನು ಮಹಿಷಮಂಡಲಕ್ಕೂ, ತೇರಾ ರಕ್ಕಿತ ಎಂಬುವವನನ್ನು ಬನವಾಸಿಗೂ ಕಳುಹಿಸಿದ. (ನೋಡಿ; ಸಿದ್ಧಸ್ವಾಮಿಯವರ ಅಪರೂಪ ಮಾಹಿತಿಯುಳ್ಳ ಸಂಶೋಧನಾ ಕೃತಿ – ಪ್ರಾಚೀನ ಅಸುರ ರಾಷ್ಟ್ರ 2016. ಪುಟ. 27ಮತ್ತು 81-116)
ಮಹಿಷನಿಗೆ ಅಸುರ ಎಂಬ ಹೆಸರನ್ನು ಕಿತ್ತುಹಾಕಿ ಮಹಿಷ ಬೌದ್ಧ. ಮಹಿಷ ಗೌತಮ ಅಥವಾ ಭಿಕ್ಕು ಮಹಾದೇವ ಎಂಬ ಹೆಸರನ್ನು ಇಡಬೇಕು. ಅಸುರ ಎಂಬುದು ಆರೋಪಿತ ಹೆಸರು. ಬೈಗುಳ ಅದು – ಹೆಂಡ ಕುಡುಕ ಎಂದು! ಅಸುರ ಎಂದರೆ ಸುರೆಯನ್ನು ಕುಡಿಯದವನು ಎಂದು ಅರ್ಥ.

ಇಲ್ಲಿ ಕುಡಿಯುವವರಿಗೇ ಗೌರವ! ಕುಡಿಯದವರಿಗೆ ಅವಮಾನ! ಎಂಥ ಅದ್ಭುತ ವ್ಯವಸ್ಥೆ ಬ್ರಾಹ್ಮಣ ಧರ್ಮದ್ದು ಭಲೇ! ಜನರ ಏಳಿಗೆಗೆ ಹೋರಾಡಿ ಚಾತುರ್ವರ್ಣ ವ್ಯವಸ್ಥೆಯನ್ನು ಧಿಕ್ಕರಿಸಿದ ಪ್ರಜಾಪ್ರೇಮಿಗಳನ್ನು ರಾಕ್ಷಸರೆಂದು ತೀರಾ ಕ್ರೂರಿಗಳನ್ನಾಗಿ ಪುರಾಣಗಳಲ್ಲಿ ಹಾರುವರು ಚಿತ್ರಿಸಿರುವುದು ಹಾರುವರೆಷ್ಟು ಮಹಾರಕ್ಕಸರೆಂದು ನಿಜಕ್ಕೂ ತಿಳಿಯುತ್ತದೆ.(ಹೆಚ್ಚಿನ ಓದಿಗಾಗಿ ಸಿದ್ಧಸ್ವಾಮಿಯವರ ಬೌದ್ಧ ರಾಜ ಮಹಿಷಾಸುರ ಪುಸ್ತಕ ಓದಿ). ಎಂದು ಕೆ.ಎಸ್ ಭಗವಾನ್‌ರವರು ರಾಮಮಂದಿರ ಏಕೆಬೇಡ? ಎಂಬ ತಮ್ಮ ಪುಸ್ತಕದಲ್ಲಿ ಪ್ರಶ್ನಿಸಿದ್ದಾರೆ. ಅಲ್ಲದೆ ಜಮ್ನಾದಾಸ್ ಎಂಬುವವರು ತಿರುಪತಿಯ ವೆಂಕಟೇಶ್ವರ ಒಂದು ಬೌದ್ಧ ದೇವಾಲಯವೆಂದು ಸಂಶೋಧನಾ ಪುಸ್ತಕವನ್ನೇ ರಚಿಸಿದ್ದಾರೆ. ಇದು ಕನ್ನಡಕ್ಕೇ ಸಹ ಅನುವಾದಗೊಂಡಿದೆ.

ಇದೇ ರೀತಿಯಲ್ಲಿ ಇಲ್ಲಿನ ಸ್ಥಳೀಯ ದೇವತೆಗಳ ಹೆಸರುಗಳನ್ನು ಸಹ ಒಂದು ಕಾಲದಲ್ಲಿ ತಮ್ಮ ಮಕ್ಕಳಿಗೆ ಇಡುವ ಪದ್ಧತಿಯಿತ್ತು. ಆದರೆ ಅವುಗಳನ್ನು ಮನುಸ್ಮೃತಿಯಲ್ಲಿ ಭೀಕರ ಅಪಾಯವುಂಟುಮಾಡುವ ಕೆಡುಕನ್ನು ತರುವ ಹೆಸರುಗಳೆಂದು ಪಟ್ಟಿ ಮಾಡಿ ಅಂತಹ ಹೆಸರುಗಳನ್ನು ದುಷ್ಟರು ಎಂಬಂತೆ ಬಿಂಬಿಸ ತೊಡಗಿದರು. ಅಲ್ಲದೇ ಭೀಷಣವಾದ ಹೆಸರುಳ್ಳ ಹೆಣ್ಣುಗಳನ್ನು ಮದುವೆಯಾಗಬಾರದು ಎಂದಿದೆ ಮನುಸ್ಮೃತಿ.

ಮನುಸ್ಮೃತಿಯ 3ನೇ ಅಧ್ಯಾಯದ 9ನೇ ಸೂತ್ರವು ‘ನಕ್ಷತ್ರಗಳ, ವೃಕ್ಷಗಳ, ನದಿಗಳ, ಕಿರಾತ ಜಾತಿಗಳು ವಾಸಿಸುವ ಬೆಟ್ಟಗಳ, ಪಕ್ಷಿಗಳ, ಹಾವುಗಳ, ದಸ್ಯುಗಳ ಹೆಸರುಗಳನ್ನು ಹೊಂದಿದ ಹಾಗೂ ಕ್ರೂರವಾದ ಭೀಷಣ ಹೆಸರುಗಳುಳ್ಳ ಹೆಣ್ಣನ್ನು ಮದುವೆಯಾಗಬಾರದು’ ಎಂದಿದೆ. ಅಂದರೆ ಮನುಸ್ಮೃತಿಯ ಕಾಲದಲ್ಲಿ ಹಾಗೂ ಅದಕ್ಕೂ ಮೊದಲು ವಿವಿಧ ಬೌದ್ಧ ಭಿಕ್ಕುಗಳ-ಭಿಕ್ಕುಣಿಯರ, ನದಿ, ಪರ್ವತ, ಪಕ್ಷಿಗಳ ದೇವತೆಗಳ ಅಥವಾ ಕ್ಷುದ್ರ ರೆಂದು ವೈದಿಕರು ಬಗೆದ ವ್ಯಕ್ತಿಗಳ ಹೆಸರನ್ನು ಇಡುವ ಸಂಪ್ರದಾಯವೊಂದಿತ್ತು ಎಂಬುದು ಗಮನಿಸಬೇಕಾದ ವಿಚಾರವಾಗಿದೆ.

ಬುದ್ಧನ ಕಾಲದಲ್ಲಿ ಬೌದ್ಧ ಸಂನ್ಯಾಸಿ, ಭಿಕ್ಕು -ಭಿಕ್ಕುಣಿಯಾಗಿದ್ದವರನ್ನು ಮುಂದೆ ಅವರನ್ನು ರಾಕ್ಷಸ- ರಾಕ್ಷಸಿ ಉಪದ್ರವಿಗಳೆಂಬಂತೆ ಬಿಂಬಿತರಾದವರಲ್ಲಿ ‘ಡಾಕಿನಿ’ ಎಂಬ ಬೌದ್ಧ ಭಿಕ್ಕುಣಿಯು ಸಹ ಒಬ್ಬಳು. 2020ರ ಅಕ್ಟೋಬರ್ ಸಂವಾದ ಮಾಸಪತ್ರಿಕೆಯಲ್ಲಿ ಪ್ರೊ. ಶಿವಗಂಗಾ ರುಮ್ಮಾ ಎಂಬುವವರು “ಡಾಕಿಣಿ ಬೌದ್ಧ ಯೋಗಿಣಿ” ಎಂಬ ಸಂಶೋಧನಾ ಪ್ರಬಂಧ ಮಂಡಿಸಿದ್ದಾರೆ. ಈ ಪ್ರಬಂಧದ ಉದ್ದಕ್ಕೂ ‘ಡಾಕಿನಿ’ ಎಂಬ ಬೌದ್ಧ ಬಿಕ್ಕುಣಿ ಹೇಗೆ ಪಿಶಾಚಿ, ರಾಕ್ಷಸಿ ರೂಪ ಪಡೆದು ನಂತರದ ಕಾಲದಲ್ಲಿ ಉಪದ್ರವಿ ಎಂಬಂತೆ ಚಿತ್ರಿತವಾದಳು ಎಂದು ನಿರೂಪಿಸಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ ನಿಘಂಟು ಡಾಕಿನಿಯು ಹೆಣ್ಣು ದೆವ್ವಗಳಲ್ಲಿ ಒಂದು ಬಗೆಯ ಹೆಣ್ಣು ಪಿಶಾಚಿ ಎಂದು ಹೇಳುತ್ತದೆ. ಡಾಕಿನಿ ಎಂದರೆ ರಕ್ಕಸಿಯ ಖಡ್ಗ ಕಾಳಿ ದೇವಿಯ ಪರಿಚಾರಿಕೆಯರ ಒಂದು ವರ್ಗಕ್ಕೆ ಸೇರಿದವಳೆಂದೆ ಹೇಳುತ್ತದೆ. ಸುರಂಗ ಕವಿಯ ವೀರಭದ್ರ ಲೀಲಾರತ್ನ ಕೃತಿಯಲ್ಲಿ ಡಾಕಿನಿಯ ಉಲ್ಲೇಖ ಹೀಗೆ ಇದೆ;
ಅಗ್ಗದ ಯೋಗಿಣಿ ಚಂಡಿ ಭೈರವಿ
ಕಾಳಿ ದುರ್ಗಿ ಡಾಕಿನಿ ಪ್ರೇತಶ್ವಿನಿಯು
ಉಗ್ರದ ಹ್ರೂಂಕಾರಿ ಮಹಾಭೂತವೇತಾಳರೊಗ್ಗಿದಲುಋಬಿ ಕಾಳಗಕೆ” ಸುಮಾರು 16ನೇಯ ಶತಮಾನಕ್ಕಾಗಲೇ ಈ ಎಲ್ಲಾ ಹೆಣ್ಣು ದೈವಗಳು ಕೀಳು ದೈವಗಳಾಗಿ ಪರಿವರ್ತಿತವಾದವು.

ಡಾಕಿನಿ ಕೂಡಾ ಇಲ್ಲಿ ಅಗ್ಗದ ಮತ್ತು ಉಗ್ರ ಕೀಳು ದೈವಗಳಾಗಿದ್ದಾಳೆ. ಲಕ್ಷ್ಮೀಶನ ಜೈಮಿನಿ ಭಾರತದಲ್ಲಿ ಕೂಡಾ ಸುಧನ್ವ ಹಾಗೂ ಅರ್ಜುನನ ನಡುವೆ ನಡೆದ ಕಾಳಗದಲ್ಲಿ ರಣರಂಗದಲ್ಲಿ ಭೀಕರ ದೃಶ್ಯವನ್ನು ಲಕ್ಷ್ಮೀಶನಹೀಗೆ ಚಿತ್ರಿಸುತ್ತಾನೆ.
ಕಾಕ ಬಕ ಗೋಮಯ ಸಂತತಿಗಳಿಂ
ಡಾಕಿನಿ ಪಿಶಾಚಿ ವೇತಾಳ ಭೂತಂಗಳಿಂ ಭೀಕರದೊಳಂ ಜನಿಸಿದುವಾರ್ದು ರಿಂಗಣಗುಣಿವ ಕಲಿಗಳ ಕಪಾಲಂಗಳು” ಹೀಗೆ ಡಾಕಿನಿಯು ಇಲ್ಲಿಯೂ ಕೂಡಾ ಕ್ಷುದ್ರ ದೇವತೆಯಾಗಿ ಭೀಭತ್ಸ ರೂಪದಲ್ಲಿ ಚಿತ್ರಿತಗೊಂಡಿದ್ದಾಳೆ.

ಮರಾಠಿಯಲ್ಲಿ ಡಾಕಿನಿಗೆ ಡಂಕಿಣಿ ಎನ್ನುತ್ತಾರೆ. ಡಾಳಕಿ ಎಂಬ ಇನ್ನೊಂದು ಪದವು ಕೂಡಾ ಡಾಕಿನಿಯಿಂದಲೇ ಬಂದಿದೆ. ಡಾಳಕಿ ಎಂದರೆ ಗಯ್ಯಾಳಿ, ಮೋಸಗಾತಿ, ಎಂಬ ಅರ್ಥಗಳಿವೆ. ‘ಸಗ್ಗಂಬಡೆದು ಬಂದ ಪ್ರತ್ಯಕ್ಷಮಿಲ್ಲೆನಬಹುದು ಈ ಡಾಳಕಿ’. ಇಲ್ಲಿ ಮೋಸಗಾತಿ ಎಂಬ ಅರ್ಥವೇ ಇದೆ. ಹೀಗೆ ಡಾಕಿನಿ ಪದವು ಕೀಳು, ಕ್ಷುದ್ರ, ಉಗ್ರ, ರುದ್ರ, ಋಣಾತ್ಮಕ ವ್ಯಕ್ತಿತ್ವವಾಗಿಯೇ ಕನ್ನಡ ಸಾಹಿತ್ಯದಲ್ಲಿ ಚಿತ್ರಿತಗೊಂಡಿದೆ.

ಇನ್ನೂ ವಿಚಿತ್ರವೆಂದರೆ ಗ್ರಾಮದೇವತೆಯ ಮೇಲೆ ವಿಶೇಷ ಅಧ್ಯಯನವನ್ನು ನಡೆಸಿದ ಸಿದ್ಧಲಿಂಗಯ್ಯನವರ “ಗ್ರಾಮದೇವತೆಗಳು” ಪುಸ್ತಕವು ಈ ನೆಲದ ಎಲ್ಲಾ ತಳಸಮುದಾಯದ ದೇವತೆಗಳನ್ನು ಕುರಿತು ಹೇಳುತ್ತವೆಯಾದರೂ ಅಲ್ಲೆಲ್ಲಿಯೂ ಈ ಡಾಕಿನಿಯೆಂಬ ದೇವತೆಯ ಅಸ್ತಿತ್ವವಿಲ್ಲವೆಂದೇ ಹೇಳಬೇಕಾಗುತ್ತದೆ. ಅಷ್ಟೇ ಅಲ್ಲ ಕರ್ನಾಟಕ ಜನಪದ ಸ್ತ್ರೀ ದೈವಗಳೂ ಸಾಂಸ್ಕೃತಿಕ ಪದಕೋಶದಲ್ಲಿಯೂ ಈ ಡಾಕಿನಿಯ ಪ್ರಸ್ತಾಪವಿಲ್ಲ.

ಇಷ್ಟೆಲ್ಲಾ ಹೇಳುವ ಕಾರಣವೇನೆಂದರೆ ಒಂದು ಕಾಲದಲ್ಲಿ ಬೌದ್ಧ ಯೋಗಿನಿಯಾಗಿ ಪೂಜೆಗೊಂಡ ಡಾಕಿನಿಯು ನಂತರದ ಕಾಲಘಟ್ಟದಲ್ಲಿ ಇಂತಹ ಕ್ಷುದ್ರ ದೇವತೆಯಾಗಿ ಅವಗಣನೆಗೆ ಅಪಹಾಸ್ಯಕ್ಕೆ ಒಳಗಾದಳು. ಎಂಬುದು ತುಂಬಾ ಕುತೂಹಲಕರವಾದ ಸಂಗತಿಯಾಗಿದೆ. ವೈದಿಕರು ಬೌದ್ಧ ವ್ಯಕ್ತಿಗಳನ್ನು ಇತಿಹಾಸದಲ್ಲಿ ಚಿತ್ರಿಸುವಾಗ ಚಾರಿತ್ರಿಕ ಹಂತಗಳಲ್ಲಿ ತಮ್ಮ ಕೈಚಳಕ ತೋರಿಸಿದ್ದಾರೆ ಎನ್ನಲು ಇದಕ್ಕಿಂತ ಸಾಕ್ಷಿ ಬೇಕೆ?!

ಈ ಮೇಲಿನದು ಒಂದು ಸಾಕ್ಷಿಯಾದರೆ25 ನೇ ಡಿಸೆಂಬರ್ 1954ರಲ್ಲಿ ಪೂನಾದ ಹತ್ತಿರ ದೇಹು ರಸ್ತೆಯಲ್ಲಿ ಹೊಸದಾಗಿ ನಿರ್ಮಿಸಿದ ಬುದ್ಧ ವಿಹಾರದಲ್ಲಿ ಸ್ಥಾಪಿಸಿರುವ ಒಂದು ಬುದ್ಧ ಪ್ರತಿಮೆಯನ್ನು ಅನಾವರಣಗೊಳಿಸುತ್ತಾ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರರು ಅಲ್ಲಿದ್ದ ಸಭಿಕರಿಗೆ, “ಪಂಡರಾಪುರದಲ್ಲಿರುವ ವಿಠೋಬಾ ನಿಜಕ್ಕೂ ಬುದ್ಧನ ವಿಗ್ರಹವೇ ಆಗಿದೆ. ಪಾಂಡುರಂಗ ಎಂಬ ಹೆಸರು ಪುಂಡಲೀಕ ಶಬ್ದದ ನಿಷ್ಪತ್ತಿಯಾಗಿದೆ ಎನ್ನುತ್ತಾ.

ಪುಂಡಲೀಕ ಅಂದರೆ ಕಮಲ ಮತ್ತು ಪಾಳಿ ಭಾಷೆಯಲ್ಲಿ ಕಮಲವನ್ನು ಪಾಂಡುರಂಗ ಎನ್ನುತ್ತಾರೆ ಆದ್ದರಿಂದ ಪಾಂಡುರಂಗ ಎಂದರೆ ಬುದ್ಧನಲ್ಲದೇ ಬೇರೆ ಯಾರೂ ಅಲ್ಲ. ಬುದ್ಧನೇ ಆಗಿದ್ದಾನೆ. ಪಂಡರಾಪುರದ ಪಂಢರಿನಾಥನ ಬಗ್ಗೆ ಸಂಶೋಧನೆ ನಡೆದಿದೆ. ಪಂಡರಿನಾಥ ದೇವಾಲಯ ಬುದ್ಧನ ದೇವಾಲಯವೆಂದು ನಾನು ಸಿದ್ಧ ಮಾಡಿಕೊಡುವೆ ಎಂದರು.

ಪುಂಡಲೀಕ ಶಬ್ದವೇ ಪಾಂಡುರಂಗವೆಂದು ಪರಿವರ್ತಿತ ಹೊಂದಿದೆ. ಪುಂಡಲೀಕ ಎಂದರೆ ಕಮಲ. ಬುದ್ಧರಲ್ಲಿ ಮೂರ್ತಿ ಪೂಜೆ ಇಲ್ಲ. ಪಾಲಿ ಭಾಷೆಯಲ್ಲಿ ಕಮಲಕ್ಕೆ ಪಾಂಡುರಂಗವೆಂದು ಹೇಳುತ್ತಾರೆ. ಜನರಿಗೆ ಮೋಸ ಮಾಡಲು ಬುದ್ಧನ ಹೆಸರು ತಪ್ಪಿಸಲಾಯಿತು”. ಎಂದು ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ.

ಬಹುಶಃ ಡಾ.ಅಂಬೇಡ್ಕರರು ಆರೋಗ್ಯ ಸರಿಯಿದ್ದು ಇನ್ನಷ್ಟು ವರ್ಷಗಳು ಕಾಲ ಜೀವಿಸಿದ್ದರೆ ಈ ದೇಶದಲ್ಲಿನ ದೇವಾಲಯದಲ್ಲಿರುವ ಬೌದ್ಧ ಇತಿಹಾಸವನ್ನು ಹಾಗೂ ದೇವರೆಂದು, ರಾಕ್ಷಸರೆಂದು ಪರಿಗಣಿಸಲ್ಪಟ್ಟ ಬೌದ್ಧ ಭಿಕ್ಕು, ಭಿಕ್ಕುಣಿಯರ ಹೆಸರುಗಳನ್ನು ಬಯಲಿಗೆ ಎಳೆಯುತ್ತಿದ್ದರು. ಈ ಕಾರ್ಯ ಮಾಡುವ ಮೊದಲೇ ಅವರು ಅಸ್ತಂತಗರಾದರು.

ಒಟ್ಟಾರೆ ಭಾರತದಲ್ಲಿ ದೇವರೆಂದು ಪೂಜಿಸಲ್ಪಟ್ಟಿದ್ದ ಕೆಲವು ದೆವ್ವ, ಪಿಶಾಚಿ, ರಾಕ್ಷಸರೆಂಬಂತೆ ದುಷ್ಟೀಕರಿಸಲ್ಪಟ್ಟವರು ಬೌದ್ಧ ಭಿಕ್ಕುಗಳು- ಭಿಕ್ಕುಣಿಯರು ಆಗಿದ್ದರೆಂಬುದನ್ನು ಅರಿಯಬಹುದು. ಹಾಗೂ ವೈದಿಕರು ಬೇಕೆಂದೆ ಇವರುಗಳನ್ನು ದುಷ್ಟೀಕರಿಸಿ, ರೌದ್ರಾವತಾರಿಗಳನ್ನಾಗಿ ಮಾಡಿರುವುದು ಸಾಬೀತಾಗುತ್ತದೆ.

ಒಂದು ಕಾಲದಲ್ಲಿ ರಾಜರು ಬೌದ್ಧ ಭಿಕ್ಕು ಭಿಕ್ಕುಣಿಯರಾಗಿದ್ದ ಅದೆಷ್ಟೊ ವ್ಯಕ್ತಿಗಳು ನಮ್ಮ ಕಣ್ಣ ಮುಂದೆಯೇ ದೈಹಿಕವಾಗಿ ವಿರೂಪಗೊಳಿಸಿ, ಚಾರಿತ್ರಿಕವಾಗಿ ಖಳರನ್ನಾಗಿಸಿ, ಕ್ರೂರ, ಕೇಡುಂಟು ಮಾಡುವ ವಿಕೃತರನ್ನಾಗಿಸಿ ದೆವ್ವ ಪಿಶಾಚಿಗಳೆಂಬಂತೆ ಬಿಂಬಿಸಲಾಗಿರುವುದನ್ನು ಇತಿಹಾಸದಲ್ಲಿ ಕಾಣಬಹುದು. ಇಂತಹ ವ್ಯಕ್ತಿಗಳ ಬಗ್ಗೆ ಇನ್ನಷ್ಟು ಸಂಶೋಧನೆಗಳು ನಡೆಸುವುದು ಅವಶ್ಯಕವಿದೆ. ಇನ್ನಾದರೂ ಎಚ್ಚೆತ್ತುಕೊಂಡು ಬಹುಜನರು ಜಾಗೃತರಾಗಲಿ. ವೈದಿಕರ ಕಟ್ಟುಕತೆಗಳನ್ನು ನಂಬದೇ ಸಂಶೋಧಾನಾತ್ಮಕ ದೃಷ್ಟಿಯಿಂದ ಮುಂದುವರೆಯಲಿ ಎಂದು ಆಶೀಸುತ್ತೇನೆ.

ಆಕರ ಗ್ರಂಥಗಳು

  1. ಸಂವಾದ. ಮಾಸ ಪತ್ರಿಕೆ. ಅಕ್ಟೋಬರ್. 2020.
  2. ರಾಮಂದಿರ ಏಕೆ ಬೇಡ?. ಲೇಖಕರು; ಕೆ.ಎಸ್.ಭಗವಾನ್. ಪುಟ 18-19.
  3. ಕರ್ನಾಟಕ ನಾಥ ಪಂಥ. ಲೇಖಕರು; ರಹಮತ್ ತರೀಕೆರೆ. ಪುಟ-7.
  4. ಡಾ.ಬಿ.ಆರ್ ಅಂಬೇಡ್ಕರ್ ಭಾಷಣ ಬರಹ. ಸಂಪುಟ–7. ಪುಟ 18.
  5. ವಿಜಯಕ್ಕನ ವಿಚಾರ ಲಹರಿ. ಲೇಖಕಿ; ಶ್ರೀಮತಿ,ವಿಜಯಾ ಮಹೇಶ್. ಪ್ರಬುದ್ದ ಪ್ರಕಾಶನ 2017.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್‌ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ

Published

on

ದಾವಣಗೆರೆ: ಎಸ್‌ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್‌ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಜಯದೇವ ವೃತ್ತದಲ್ಲಿ ಸೇರಿದ ಎಸ್‌ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು  ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.

ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್‌ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್‌ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್‌ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

Continue Reading

ಅಂತರಂಗ

ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ

Published

on

~ ಡಾ. ಸುಜಾತಾ ಚಲವಾದಿ

ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.

ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.

ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.

ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.

ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.

ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.

ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.

ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್‌ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.

1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.

ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.

ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.

ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.

26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.

ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು

Published

on

ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.

ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.

ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.

ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.

ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.

——————————————————————-

ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?

ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.

ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?

ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.

ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?

ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.

ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?

ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.

ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.

ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?

ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)

ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?

ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)

ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?

ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.

ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?

ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.

ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending