ಬಹಿರಂಗ
ಡಾಕಿನಿ ಎಂದರೆ ಬೌದ್ಧ ಭಿಕ್ಕುಣಿ / ಬೌದ್ಧ ಯೋಗಿಣಿ
- ಪರಶುರಾಮ್. ಎ
ಭಾರತದ ಬಹುಭಾಗ ಇತಿಹಾಸ, ಇತಿಹಾಸವೇ ಅಲ್ಲ. ಹಾಗೆಂದರೆ ಭಾರತಕ್ಕೆ ಇತಿಹಾಸವಿಲ್ಲ ಎಂದಲ್ಲ. ಭಾರತದ ಪ್ರಾಚೀನ ಇತಿಹಾಸವನ್ನು ಬೇಕೆಂದೆ ಮನುವಾದಿಗಳು ತಿರುಚಿದ್ದಾರೆ. ಬುದ್ಧ ಮತ್ತು ಆರ್ಯರ ನಡುವೆ ನಡೆದ ಈ ಇತಿಹಾಸವನ್ನು ಬೇಕೆಂದೆ ಮರೆಮಾಚಿದ್ದಾರೆ. ಹಾಗೂ ಮಕ್ಕಳಿಗೆ ಮಹಿಳೆಯರಿಗೆ ಮನೋರಂಜನಾ ಕಥೆಗಳನ್ನಾಗಿ ಮಾಡಿದ್ದಾರೆ ಎಂದು ಡಾ.ಬಿ.ಆರ್ ಅಂಬೇಡ್ಕರರು ಹೇಳಿರುವುದು ಎಷ್ಟು ಸತ್ಯವೆಂಬುದನ್ನು ನಾವು ಈಗ ಗಮನಿಸೋಣ.
ಈ ಮಾತಿನಿಂದ ನಮಗೆ ತಿಳಿಯುವುದೇನೆಂದರೆ ಒಂದು ಕಾಲದಲ್ಲಿ ಪ್ರಚಲಿತವಿದ್ದ ಬುದ್ಧ ಧರ್ಮವನ್ನು ಇತಿಹಾಸಕಾರರು ಬೇಕೆಂದೆ ನಿರ್ಲಕ್ಷಿಸಿದ್ದಾರೆ. ಮತ್ತು ತಿರಸ್ಕರಿಸಿದ್ದಾರೆ. ಇಂತಹ ಅದೆಷ್ಟೋ ನಿರ್ಲಕ್ಷಿತಗೊಂಡ ಬೌದ್ಧ ಇತಿಹಾಸವನ್ನು ಡಾ.ಬಿ.ಅಂಬೇಡ್ಕರರು ತಮ್ಮ ಅಪೂರ್ವ ಜ್ಞಾನ ಸಂಪತ್ತಿನಿಂದಾಗಿ ಬಯಲಿಗೆ ಎಳೆದಿದ್ದಾರೆ. ಅವರ ಪುಸ್ತಕ ಓದಿನ ದಾಹ ಇಂತಹ ಅಪೂರ್ವ ಇತಿಹಾಸದ ಮೇಲೆ ಬೆಳಕು ಚೆಲ್ಲಿದೆ. ಹಾಗೂ ಇತ್ತೀಚಿನ ಕೆಲವು ಸಂಶೋಧಕರು ಕೂಡಾ ಬೌದ್ಧ ಧರ್ಮಾವಲಂಬಿಗಳ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಸಿ ಬೆಳಕು ಚೆಲ್ಲಿದ್ದಾರೆ.
ಭಾರತದಲ್ಲಿ ಹುಟ್ಟಿದ ಬುದ್ಧ ಧರ್ಮವನ್ನು ಮತ್ತು ಅದರ ಅನುಯಾಯಿಗಳನ್ನು ವಿದೇಶಿ ಬ್ರಾಹ್ಮಣ ಆರ್ಯರು ಬೇಕುಂತಲೇ ತುಚ್ಛೀಕರಿಸಿ, ದುಷ್ಟೀಕರಿಸಿ, ಭಯ ಮತ್ತು ಕ್ಷುದ್ರರೆಂಬಂತೆ ಬಿಂಬಿಸಿದ್ದಾರೆ. “ಭಾರತದ ದಾರ್ಶನಿಕ ಚರ್ಚೆಗಳಲ್ಲಿ ದರ್ಶನವು ಇನ್ನೊಂದರ ಬಗ್ಗೆ ತಾತ್ವಿಕ ಭಿನ್ನಮತಗಳು ಸೂಚಿಸುವುದು ಸಾಮಾನ್ಯ. ಈ ಭಿನ್ನಮತಗಳು ಕೆಲವೊಮ್ಮೆ ಯುದ್ಧರೂಪಿಯಾಗಿ ಇರುತ್ತವೆ. ತಾತ್ವಿಕ ಭಿನ್ನಮತವು ತಾನಾಗಿಯೇ 1 ದೊಡ್ಡ ಸಮಸ್ಯೆಯಲ್ಲ. ಆದರೆ ತಾನು ಒಪ್ಪದ ವಿಚಾರಧಾರೆಯಯೂ ಇರಬಾರದು ಎಂಬ ಹಗೆತನದಲ್ಲಿ ಮತ್ತೊಂದನ್ನು ದುಷ್ಟೀಕರಿಸುವುದು ಸಮಸ್ಯೆ.
ಆಧುನಿಕ ರಾಜಕಾರಣದಲ್ಲಿ ಸೈದ್ಧಾಂತಿಕ ಗುಂಪುಗಳು ಹಗೆಗಳಾಗಿ ಕಾದಾಟ ಮಾಡುವಂತೆ ಚರಿತ್ರೆಯಲ್ಲಿ ಪಂಥಗಳು ಪರಸ್ಪರ ಸಂಘರ್ಷ ಮಾಡಿಸಿ ಭಾರತದ “ಅವೈದಿಕ” ಎನ್ನಲಾಗುವ ದಾರ್ಶನಿಕ ಧಾರೆ ಹಾಗೂ ಪಂಥಗಳನ್ನು ಏಕಕಾಲಕ್ಕೆ ವಿಶಾಲ ಸಮುದಾಯಗಳಿಂದ ಸ್ವೀಕಾರವನ್ನು ಸ್ಥಾಪಿತ ವರ್ಗದಿಂದ ವಿರೋಧವನ್ನು ಪಡೆದಿದ್ದವು. ವೈದಿಕ ಪುರಾಣಗಳು ತಮ್ಮ ವಿರೋಧಿಗಳನ್ನು ರಾಕ್ಷಸರನ್ನಾಗಿ ಚಿತ್ರಿಸುವಂತೆ ವೈದಿಕರು ದಾರ್ಶನಿಕರು ಕೂಡಾ “ಅವೈದಿಕ” ಭೌತವಾದಿ ದರ್ಶನ ಹಾಗೂ ಪಂಥಗಳನ್ನು ವಿಕೃತವಾಗಿ ಚಿತ್ರಿಸಲು ಇದನ್ನು ದಾರ್ಶನಿಕ ಅಮಾನುಷೀಕರಣ ಅಥವಾ ದುಷ್ಟೀಕರಣ ಎನ್ನಬಹುದು”. (ಕರ್ನಾಟಕ ನಾಥಪಂಥ- ರಹಮತ್ ತರೀಕೆರೆ. ಪುಟ 7).
ಹೀಗೇ ವಿರೋಧಿಗಳನ್ನು ವಿರೋಧಿಸುವ ಭರದಲ್ಲಿ ಉಪದ್ರವಿಗಳು, ರಾಕ್ಷಸರೆಂಬಂತೆ ಬಿಂಬಿತರಾದವರ ಸಾಲಿನಲ್ಲಿ ಬಹುತೇಕ ಬೌದ್ಧ ಅರಸರು, ಭಿಕ್ಕುಗಳು, ಭಿಕ್ಕುಣಿಗಳನ್ನು ಕಾಣಬಹುದು. ಈ ವೈದಿಕ ಧರ್ಮ ಕೇವಲ ದುಷ್ಟೀಕರಣವನ್ನು ಮಾತ್ರ ಮಾಡಿಲ್ಲ. ತಮ್ಮ ನಿಲುವುಗಳಿಗೆ ಹಿತಾಸಕ್ತಿ ಸ್ಥಾಪನೆಗೆ ಸಹಕರಿಸಿದ ವ್ಯಕ್ತಿಗಳು, ರಾಜರು, ಇತರರನ್ನು ದೈವತ್ವ ಮಟ್ಟಕ್ಕೆ ಸಹ ಏರಿಸಿದೆ. ಅದಕ್ಕೊಂದು ಉದಾಹರಣೆ “ಮಹಿಷಾಸುರ” ಒಂದು ಕಾಲದಲ್ಲಿ ಮಹಿಷನೂರು ಈಗ ಮೈಸೂರು ಆಗಿದೆ. ರಾಜನಾಗಿ ಆಳ್ವಿಕೆ ಮಾಡುತ್ತಿದ್ದ ಮಹಿಷಾಸುರನನ್ನು ವೈದಿಕರು ಉಪದೃವಿ ಕೇಡುಂಟು ಮಾಡುವ ರಾಕ್ಷಸನಂತೆ ಚಿತ್ರಿಸಿದ್ದಾರೆ.
ಮಹಿಷಾಸುರ ರಾಕ್ಷಸನಲ್ಲ ಈ ಭಾಗದ ಜನಪ್ರಿಯ ಜನಾನುರಾಗಿ ರಾಜ ಆತನೊಬ್ಬ ಬೌದ್ಧ ಧರ್ಮ ಪ್ರಚಾರಕನೂ ಕೂಡಾ ಹೌದು. ಮೈಸೂರಿನ ಚಾಮುಂಡಿ ಬೆಟ್ಟದ ಮೇಲೆ ಅತ್ಯಂತ ವಿಶಾಲವಾಗಿ ನಿರ್ಮಿಸಿ ನಿಲ್ಲಿಸಿರುವ ಮಹಿಷಾಸುರನ ಪ್ರತಿಮೆ ಈತನದ್ದೇ ಆಗಿದೆ. ಅವನು ನಿಜವಾಗಿ ದುಷ್ಟನಾಗಿದ್ದರೆ, ಮೈಸೂರಿನಂಥ ಸುಂದರ ನಗರಕ್ಕೆ ಅವನ ಹೆಸರು ಇಡಲು ಸಾಧ್ಯವಾಗುತ್ತಿತ್ತೆ? ಅತ್ಯಂತ ಕ್ರೂರಿಯಾದ ವ್ಯಕ್ತಿಯ ಹೆಸರನ್ನು ನರನಿಗಾಗಲಿ ಸ್ಥಳಕ್ಕಾಗಲಿ ಇಟ್ಟಿರುವ ನಿದರ್ಶನ ಎಲ್ಲಿಯಾದರೂ ಉಂಟೆ? ಬದಲಿಗೆ ಮಹಿಷ ಜನಾನುರಾಗಿ ಆದ್ದರಿಂದ, ಜನೋದ್ದಾರಕ ಕೆಲಸ ಮಾಡಿದ್ದರಿಂದ ಅವನ ಹೆಸರನ್ನು ಮೈಸೂರಿಗೆ ಕೃತಜ್ಞಾಪೂರ್ವಕವಾಗಿ ಇಡಲಾಗಿದೆ.
ಇದು ಎಂಥವರಿಗಾದರೂ ಹೊಳೆಯುವ ಸಾಮಾನ್ಯ ವಿಷಯ.
ಮಹಿಷಾಸುರ ರಾಕ್ಷಸನಲ್ಲ, ಅವನು ಬೌದ್ಧ ಭಿಕ್ಕು. ಅವನ ನಿಜವಾದ ಹೆಸರು ಮಹಾದೇವ. ಸಾಮ್ರಾಟ್ ಅಶೋಕನ ಕಾಲದಲ್ಲಿ, ಬೌದ್ಧ ಗುರು ಮೊಗ್ಗಲಿತಿಸ್ಸನ ಬುದ್ಧಧಮ್ಮ ಪ್ರಚಾರಕ್ಕಾಗಿ ತೇರಾ ಮಹಾದೇವನನ್ನು ಮಹಿಷಮಂಡಲಕ್ಕೂ, ತೇರಾ ರಕ್ಕಿತ ಎಂಬುವವನನ್ನು ಬನವಾಸಿಗೂ ಕಳುಹಿಸಿದ. (ನೋಡಿ; ಸಿದ್ಧಸ್ವಾಮಿಯವರ ಅಪರೂಪ ಮಾಹಿತಿಯುಳ್ಳ ಸಂಶೋಧನಾ ಕೃತಿ – ಪ್ರಾಚೀನ ಅಸುರ ರಾಷ್ಟ್ರ 2016. ಪುಟ. 27ಮತ್ತು 81-116)
ಮಹಿಷನಿಗೆ ಅಸುರ ಎಂಬ ಹೆಸರನ್ನು ಕಿತ್ತುಹಾಕಿ ಮಹಿಷ ಬೌದ್ಧ. ಮಹಿಷ ಗೌತಮ ಅಥವಾ ಭಿಕ್ಕು ಮಹಾದೇವ ಎಂಬ ಹೆಸರನ್ನು ಇಡಬೇಕು. ಅಸುರ ಎಂಬುದು ಆರೋಪಿತ ಹೆಸರು. ಬೈಗುಳ ಅದು – ಹೆಂಡ ಕುಡುಕ ಎಂದು! ಅಸುರ ಎಂದರೆ ಸುರೆಯನ್ನು ಕುಡಿಯದವನು ಎಂದು ಅರ್ಥ.
ಇಲ್ಲಿ ಕುಡಿಯುವವರಿಗೇ ಗೌರವ! ಕುಡಿಯದವರಿಗೆ ಅವಮಾನ! ಎಂಥ ಅದ್ಭುತ ವ್ಯವಸ್ಥೆ ಬ್ರಾಹ್ಮಣ ಧರ್ಮದ್ದು ಭಲೇ! ಜನರ ಏಳಿಗೆಗೆ ಹೋರಾಡಿ ಚಾತುರ್ವರ್ಣ ವ್ಯವಸ್ಥೆಯನ್ನು ಧಿಕ್ಕರಿಸಿದ ಪ್ರಜಾಪ್ರೇಮಿಗಳನ್ನು ರಾಕ್ಷಸರೆಂದು ತೀರಾ ಕ್ರೂರಿಗಳನ್ನಾಗಿ ಪುರಾಣಗಳಲ್ಲಿ ಹಾರುವರು ಚಿತ್ರಿಸಿರುವುದು ಹಾರುವರೆಷ್ಟು ಮಹಾರಕ್ಕಸರೆಂದು ನಿಜಕ್ಕೂ ತಿಳಿಯುತ್ತದೆ.(ಹೆಚ್ಚಿನ ಓದಿಗಾಗಿ ಸಿದ್ಧಸ್ವಾಮಿಯವರ ಬೌದ್ಧ ರಾಜ ಮಹಿಷಾಸುರ ಪುಸ್ತಕ ಓದಿ). ಎಂದು ಕೆ.ಎಸ್ ಭಗವಾನ್ರವರು ರಾಮಮಂದಿರ ಏಕೆಬೇಡ? ಎಂಬ ತಮ್ಮ ಪುಸ್ತಕದಲ್ಲಿ ಪ್ರಶ್ನಿಸಿದ್ದಾರೆ. ಅಲ್ಲದೆ ಜಮ್ನಾದಾಸ್ ಎಂಬುವವರು ತಿರುಪತಿಯ ವೆಂಕಟೇಶ್ವರ ಒಂದು ಬೌದ್ಧ ದೇವಾಲಯವೆಂದು ಸಂಶೋಧನಾ ಪುಸ್ತಕವನ್ನೇ ರಚಿಸಿದ್ದಾರೆ. ಇದು ಕನ್ನಡಕ್ಕೇ ಸಹ ಅನುವಾದಗೊಂಡಿದೆ.
ಇದೇ ರೀತಿಯಲ್ಲಿ ಇಲ್ಲಿನ ಸ್ಥಳೀಯ ದೇವತೆಗಳ ಹೆಸರುಗಳನ್ನು ಸಹ ಒಂದು ಕಾಲದಲ್ಲಿ ತಮ್ಮ ಮಕ್ಕಳಿಗೆ ಇಡುವ ಪದ್ಧತಿಯಿತ್ತು. ಆದರೆ ಅವುಗಳನ್ನು ಮನುಸ್ಮೃತಿಯಲ್ಲಿ ಭೀಕರ ಅಪಾಯವುಂಟುಮಾಡುವ ಕೆಡುಕನ್ನು ತರುವ ಹೆಸರುಗಳೆಂದು ಪಟ್ಟಿ ಮಾಡಿ ಅಂತಹ ಹೆಸರುಗಳನ್ನು ದುಷ್ಟರು ಎಂಬಂತೆ ಬಿಂಬಿಸ ತೊಡಗಿದರು. ಅಲ್ಲದೇ ಭೀಷಣವಾದ ಹೆಸರುಳ್ಳ ಹೆಣ್ಣುಗಳನ್ನು ಮದುವೆಯಾಗಬಾರದು ಎಂದಿದೆ ಮನುಸ್ಮೃತಿ.
ಮನುಸ್ಮೃತಿಯ 3ನೇ ಅಧ್ಯಾಯದ 9ನೇ ಸೂತ್ರವು ‘ನಕ್ಷತ್ರಗಳ, ವೃಕ್ಷಗಳ, ನದಿಗಳ, ಕಿರಾತ ಜಾತಿಗಳು ವಾಸಿಸುವ ಬೆಟ್ಟಗಳ, ಪಕ್ಷಿಗಳ, ಹಾವುಗಳ, ದಸ್ಯುಗಳ ಹೆಸರುಗಳನ್ನು ಹೊಂದಿದ ಹಾಗೂ ಕ್ರೂರವಾದ ಭೀಷಣ ಹೆಸರುಗಳುಳ್ಳ ಹೆಣ್ಣನ್ನು ಮದುವೆಯಾಗಬಾರದು’ ಎಂದಿದೆ. ಅಂದರೆ ಮನುಸ್ಮೃತಿಯ ಕಾಲದಲ್ಲಿ ಹಾಗೂ ಅದಕ್ಕೂ ಮೊದಲು ವಿವಿಧ ಬೌದ್ಧ ಭಿಕ್ಕುಗಳ-ಭಿಕ್ಕುಣಿಯರ, ನದಿ, ಪರ್ವತ, ಪಕ್ಷಿಗಳ ದೇವತೆಗಳ ಅಥವಾ ಕ್ಷುದ್ರ ರೆಂದು ವೈದಿಕರು ಬಗೆದ ವ್ಯಕ್ತಿಗಳ ಹೆಸರನ್ನು ಇಡುವ ಸಂಪ್ರದಾಯವೊಂದಿತ್ತು ಎಂಬುದು ಗಮನಿಸಬೇಕಾದ ವಿಚಾರವಾಗಿದೆ.
ಬುದ್ಧನ ಕಾಲದಲ್ಲಿ ಬೌದ್ಧ ಸಂನ್ಯಾಸಿ, ಭಿಕ್ಕು -ಭಿಕ್ಕುಣಿಯಾಗಿದ್ದವರನ್ನು ಮುಂದೆ ಅವರನ್ನು ರಾಕ್ಷಸ- ರಾಕ್ಷಸಿ ಉಪದ್ರವಿಗಳೆಂಬಂತೆ ಬಿಂಬಿತರಾದವರಲ್ಲಿ ‘ಡಾಕಿನಿ’ ಎಂಬ ಬೌದ್ಧ ಭಿಕ್ಕುಣಿಯು ಸಹ ಒಬ್ಬಳು. 2020ರ ಅಕ್ಟೋಬರ್ ಸಂವಾದ ಮಾಸಪತ್ರಿಕೆಯಲ್ಲಿ ಪ್ರೊ. ಶಿವಗಂಗಾ ರುಮ್ಮಾ ಎಂಬುವವರು “ಡಾಕಿಣಿ ಬೌದ್ಧ ಯೋಗಿಣಿ” ಎಂಬ ಸಂಶೋಧನಾ ಪ್ರಬಂಧ ಮಂಡಿಸಿದ್ದಾರೆ. ಈ ಪ್ರಬಂಧದ ಉದ್ದಕ್ಕೂ ‘ಡಾಕಿನಿ’ ಎಂಬ ಬೌದ್ಧ ಬಿಕ್ಕುಣಿ ಹೇಗೆ ಪಿಶಾಚಿ, ರಾಕ್ಷಸಿ ರೂಪ ಪಡೆದು ನಂತರದ ಕಾಲದಲ್ಲಿ ಉಪದ್ರವಿ ಎಂಬಂತೆ ಚಿತ್ರಿತವಾದಳು ಎಂದು ನಿರೂಪಿಸಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ ನಿಘಂಟು ಡಾಕಿನಿಯು ಹೆಣ್ಣು ದೆವ್ವಗಳಲ್ಲಿ ಒಂದು ಬಗೆಯ ಹೆಣ್ಣು ಪಿಶಾಚಿ ಎಂದು ಹೇಳುತ್ತದೆ. ಡಾಕಿನಿ ಎಂದರೆ ರಕ್ಕಸಿಯ ಖಡ್ಗ ಕಾಳಿ ದೇವಿಯ ಪರಿಚಾರಿಕೆಯರ ಒಂದು ವರ್ಗಕ್ಕೆ ಸೇರಿದವಳೆಂದೆ ಹೇಳುತ್ತದೆ. ಸುರಂಗ ಕವಿಯ ವೀರಭದ್ರ ಲೀಲಾರತ್ನ ಕೃತಿಯಲ್ಲಿ ಡಾಕಿನಿಯ ಉಲ್ಲೇಖ ಹೀಗೆ ಇದೆ;
ಅಗ್ಗದ ಯೋಗಿಣಿ ಚಂಡಿ ಭೈರವಿ
ಕಾಳಿ ದುರ್ಗಿ ಡಾಕಿನಿ ಪ್ರೇತಶ್ವಿನಿಯು
ಉಗ್ರದ ಹ್ರೂಂಕಾರಿ ಮಹಾಭೂತವೇತಾಳರೊಗ್ಗಿದಲುಋಬಿ ಕಾಳಗಕೆ” ಸುಮಾರು 16ನೇಯ ಶತಮಾನಕ್ಕಾಗಲೇ ಈ ಎಲ್ಲಾ ಹೆಣ್ಣು ದೈವಗಳು ಕೀಳು ದೈವಗಳಾಗಿ ಪರಿವರ್ತಿತವಾದವು.
ಡಾಕಿನಿ ಕೂಡಾ ಇಲ್ಲಿ ಅಗ್ಗದ ಮತ್ತು ಉಗ್ರ ಕೀಳು ದೈವಗಳಾಗಿದ್ದಾಳೆ. ಲಕ್ಷ್ಮೀಶನ ಜೈಮಿನಿ ಭಾರತದಲ್ಲಿ ಕೂಡಾ ಸುಧನ್ವ ಹಾಗೂ ಅರ್ಜುನನ ನಡುವೆ ನಡೆದ ಕಾಳಗದಲ್ಲಿ ರಣರಂಗದಲ್ಲಿ ಭೀಕರ ದೃಶ್ಯವನ್ನು ಲಕ್ಷ್ಮೀಶನಹೀಗೆ ಚಿತ್ರಿಸುತ್ತಾನೆ.
“ಕಾಕ ಬಕ ಗೋಮಯ ಸಂತತಿಗಳಿಂ
ಡಾಕಿನಿ ಪಿಶಾಚಿ ವೇತಾಳ ಭೂತಂಗಳಿಂ ಭೀಕರದೊಳಂ ಜನಿಸಿದುವಾರ್ದು ರಿಂಗಣಗುಣಿವ ಕಲಿಗಳ ಕಪಾಲಂಗಳು” ಹೀಗೆ ಡಾಕಿನಿಯು ಇಲ್ಲಿಯೂ ಕೂಡಾ ಕ್ಷುದ್ರ ದೇವತೆಯಾಗಿ ಭೀಭತ್ಸ ರೂಪದಲ್ಲಿ ಚಿತ್ರಿತಗೊಂಡಿದ್ದಾಳೆ.
ಮರಾಠಿಯಲ್ಲಿ ಡಾಕಿನಿಗೆ ಡಂಕಿಣಿ ಎನ್ನುತ್ತಾರೆ. ಡಾಳಕಿ ಎಂಬ ಇನ್ನೊಂದು ಪದವು ಕೂಡಾ ಡಾಕಿನಿಯಿಂದಲೇ ಬಂದಿದೆ. ಡಾಳಕಿ ಎಂದರೆ ಗಯ್ಯಾಳಿ, ಮೋಸಗಾತಿ, ಎಂಬ ಅರ್ಥಗಳಿವೆ. ‘ಸಗ್ಗಂಬಡೆದು ಬಂದ ಪ್ರತ್ಯಕ್ಷಮಿಲ್ಲೆನಬಹುದು ಈ ಡಾಳಕಿ’. ಇಲ್ಲಿ ಮೋಸಗಾತಿ ಎಂಬ ಅರ್ಥವೇ ಇದೆ. ಹೀಗೆ ಡಾಕಿನಿ ಪದವು ಕೀಳು, ಕ್ಷುದ್ರ, ಉಗ್ರ, ರುದ್ರ, ಋಣಾತ್ಮಕ ವ್ಯಕ್ತಿತ್ವವಾಗಿಯೇ ಕನ್ನಡ ಸಾಹಿತ್ಯದಲ್ಲಿ ಚಿತ್ರಿತಗೊಂಡಿದೆ.
ಇನ್ನೂ ವಿಚಿತ್ರವೆಂದರೆ ಗ್ರಾಮದೇವತೆಯ ಮೇಲೆ ವಿಶೇಷ ಅಧ್ಯಯನವನ್ನು ನಡೆಸಿದ ಸಿದ್ಧಲಿಂಗಯ್ಯನವರ “ಗ್ರಾಮದೇವತೆಗಳು” ಪುಸ್ತಕವು ಈ ನೆಲದ ಎಲ್ಲಾ ತಳಸಮುದಾಯದ ದೇವತೆಗಳನ್ನು ಕುರಿತು ಹೇಳುತ್ತವೆಯಾದರೂ ಅಲ್ಲೆಲ್ಲಿಯೂ ಈ ಡಾಕಿನಿಯೆಂಬ ದೇವತೆಯ ಅಸ್ತಿತ್ವವಿಲ್ಲವೆಂದೇ ಹೇಳಬೇಕಾಗುತ್ತದೆ. ಅಷ್ಟೇ ಅಲ್ಲ ಕರ್ನಾಟಕ ಜನಪದ ಸ್ತ್ರೀ ದೈವಗಳೂ ಸಾಂಸ್ಕೃತಿಕ ಪದಕೋಶದಲ್ಲಿಯೂ ಈ ಡಾಕಿನಿಯ ಪ್ರಸ್ತಾಪವಿಲ್ಲ.
ಇಷ್ಟೆಲ್ಲಾ ಹೇಳುವ ಕಾರಣವೇನೆಂದರೆ ಒಂದು ಕಾಲದಲ್ಲಿ ಬೌದ್ಧ ಯೋಗಿನಿಯಾಗಿ ಪೂಜೆಗೊಂಡ ಡಾಕಿನಿಯು ನಂತರದ ಕಾಲಘಟ್ಟದಲ್ಲಿ ಇಂತಹ ಕ್ಷುದ್ರ ದೇವತೆಯಾಗಿ ಅವಗಣನೆಗೆ ಅಪಹಾಸ್ಯಕ್ಕೆ ಒಳಗಾದಳು. ಎಂಬುದು ತುಂಬಾ ಕುತೂಹಲಕರವಾದ ಸಂಗತಿಯಾಗಿದೆ. ವೈದಿಕರು ಬೌದ್ಧ ವ್ಯಕ್ತಿಗಳನ್ನು ಇತಿಹಾಸದಲ್ಲಿ ಚಿತ್ರಿಸುವಾಗ ಚಾರಿತ್ರಿಕ ಹಂತಗಳಲ್ಲಿ ತಮ್ಮ ಕೈಚಳಕ ತೋರಿಸಿದ್ದಾರೆ ಎನ್ನಲು ಇದಕ್ಕಿಂತ ಸಾಕ್ಷಿ ಬೇಕೆ?!
ಈ ಮೇಲಿನದು ಒಂದು ಸಾಕ್ಷಿಯಾದರೆ25 ನೇ ಡಿಸೆಂಬರ್ 1954ರಲ್ಲಿ ಪೂನಾದ ಹತ್ತಿರ ದೇಹು ರಸ್ತೆಯಲ್ಲಿ ಹೊಸದಾಗಿ ನಿರ್ಮಿಸಿದ ಬುದ್ಧ ವಿಹಾರದಲ್ಲಿ ಸ್ಥಾಪಿಸಿರುವ ಒಂದು ಬುದ್ಧ ಪ್ರತಿಮೆಯನ್ನು ಅನಾವರಣಗೊಳಿಸುತ್ತಾ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರರು ಅಲ್ಲಿದ್ದ ಸಭಿಕರಿಗೆ, “ಪಂಡರಾಪುರದಲ್ಲಿರುವ ವಿಠೋಬಾ ನಿಜಕ್ಕೂ ಬುದ್ಧನ ವಿಗ್ರಹವೇ ಆಗಿದೆ. ಪಾಂಡುರಂಗ ಎಂಬ ಹೆಸರು ಪುಂಡಲೀಕ ಶಬ್ದದ ನಿಷ್ಪತ್ತಿಯಾಗಿದೆ ಎನ್ನುತ್ತಾ.
ಪುಂಡಲೀಕ ಅಂದರೆ ಕಮಲ ಮತ್ತು ಪಾಳಿ ಭಾಷೆಯಲ್ಲಿ ಕಮಲವನ್ನು ಪಾಂಡುರಂಗ ಎನ್ನುತ್ತಾರೆ ಆದ್ದರಿಂದ ಪಾಂಡುರಂಗ ಎಂದರೆ ಬುದ್ಧನಲ್ಲದೇ ಬೇರೆ ಯಾರೂ ಅಲ್ಲ. ಬುದ್ಧನೇ ಆಗಿದ್ದಾನೆ. ಪಂಡರಾಪುರದ ಪಂಢರಿನಾಥನ ಬಗ್ಗೆ ಸಂಶೋಧನೆ ನಡೆದಿದೆ. ಪಂಡರಿನಾಥ ದೇವಾಲಯ ಬುದ್ಧನ ದೇವಾಲಯವೆಂದು ನಾನು ಸಿದ್ಧ ಮಾಡಿಕೊಡುವೆ ಎಂದರು.
ಪುಂಡಲೀಕ ಶಬ್ದವೇ ಪಾಂಡುರಂಗವೆಂದು ಪರಿವರ್ತಿತ ಹೊಂದಿದೆ. ಪುಂಡಲೀಕ ಎಂದರೆ ಕಮಲ. ಬುದ್ಧರಲ್ಲಿ ಮೂರ್ತಿ ಪೂಜೆ ಇಲ್ಲ. ಪಾಲಿ ಭಾಷೆಯಲ್ಲಿ ಕಮಲಕ್ಕೆ ಪಾಂಡುರಂಗವೆಂದು ಹೇಳುತ್ತಾರೆ. ಜನರಿಗೆ ಮೋಸ ಮಾಡಲು ಬುದ್ಧನ ಹೆಸರು ತಪ್ಪಿಸಲಾಯಿತು”. ಎಂದು ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ.
ಬಹುಶಃ ಡಾ.ಅಂಬೇಡ್ಕರರು ಆರೋಗ್ಯ ಸರಿಯಿದ್ದು ಇನ್ನಷ್ಟು ವರ್ಷಗಳು ಕಾಲ ಜೀವಿಸಿದ್ದರೆ ಈ ದೇಶದಲ್ಲಿನ ದೇವಾಲಯದಲ್ಲಿರುವ ಬೌದ್ಧ ಇತಿಹಾಸವನ್ನು ಹಾಗೂ ದೇವರೆಂದು, ರಾಕ್ಷಸರೆಂದು ಪರಿಗಣಿಸಲ್ಪಟ್ಟ ಬೌದ್ಧ ಭಿಕ್ಕು, ಭಿಕ್ಕುಣಿಯರ ಹೆಸರುಗಳನ್ನು ಬಯಲಿಗೆ ಎಳೆಯುತ್ತಿದ್ದರು. ಈ ಕಾರ್ಯ ಮಾಡುವ ಮೊದಲೇ ಅವರು ಅಸ್ತಂತಗರಾದರು.
ಒಟ್ಟಾರೆ ಭಾರತದಲ್ಲಿ ದೇವರೆಂದು ಪೂಜಿಸಲ್ಪಟ್ಟಿದ್ದ ಕೆಲವು ದೆವ್ವ, ಪಿಶಾಚಿ, ರಾಕ್ಷಸರೆಂಬಂತೆ ದುಷ್ಟೀಕರಿಸಲ್ಪಟ್ಟವರು ಬೌದ್ಧ ಭಿಕ್ಕುಗಳು- ಭಿಕ್ಕುಣಿಯರು ಆಗಿದ್ದರೆಂಬುದನ್ನು ಅರಿಯಬಹುದು. ಹಾಗೂ ವೈದಿಕರು ಬೇಕೆಂದೆ ಇವರುಗಳನ್ನು ದುಷ್ಟೀಕರಿಸಿ, ರೌದ್ರಾವತಾರಿಗಳನ್ನಾಗಿ ಮಾಡಿರುವುದು ಸಾಬೀತಾಗುತ್ತದೆ.
ಒಂದು ಕಾಲದಲ್ಲಿ ರಾಜರು ಬೌದ್ಧ ಭಿಕ್ಕು ಭಿಕ್ಕುಣಿಯರಾಗಿದ್ದ ಅದೆಷ್ಟೊ ವ್ಯಕ್ತಿಗಳು ನಮ್ಮ ಕಣ್ಣ ಮುಂದೆಯೇ ದೈಹಿಕವಾಗಿ ವಿರೂಪಗೊಳಿಸಿ, ಚಾರಿತ್ರಿಕವಾಗಿ ಖಳರನ್ನಾಗಿಸಿ, ಕ್ರೂರ, ಕೇಡುಂಟು ಮಾಡುವ ವಿಕೃತರನ್ನಾಗಿಸಿ ದೆವ್ವ ಪಿಶಾಚಿಗಳೆಂಬಂತೆ ಬಿಂಬಿಸಲಾಗಿರುವುದನ್ನು ಇತಿಹಾಸದಲ್ಲಿ ಕಾಣಬಹುದು. ಇಂತಹ ವ್ಯಕ್ತಿಗಳ ಬಗ್ಗೆ ಇನ್ನಷ್ಟು ಸಂಶೋಧನೆಗಳು ನಡೆಸುವುದು ಅವಶ್ಯಕವಿದೆ. ಇನ್ನಾದರೂ ಎಚ್ಚೆತ್ತುಕೊಂಡು ಬಹುಜನರು ಜಾಗೃತರಾಗಲಿ. ವೈದಿಕರ ಕಟ್ಟುಕತೆಗಳನ್ನು ನಂಬದೇ ಸಂಶೋಧಾನಾತ್ಮಕ ದೃಷ್ಟಿಯಿಂದ ಮುಂದುವರೆಯಲಿ ಎಂದು ಆಶೀಸುತ್ತೇನೆ.
ಆಕರ ಗ್ರಂಥಗಳು
- ಸಂವಾದ. ಮಾಸ ಪತ್ರಿಕೆ. ಅಕ್ಟೋಬರ್. 2020.
- ರಾಮಂದಿರ ಏಕೆ ಬೇಡ?. ಲೇಖಕರು; ಕೆ.ಎಸ್.ಭಗವಾನ್. ಪುಟ 18-19.
- ಕರ್ನಾಟಕ ನಾಥ ಪಂಥ. ಲೇಖಕರು; ರಹಮತ್ ತರೀಕೆರೆ. ಪುಟ-7.
- ಡಾ.ಬಿ.ಆರ್ ಅಂಬೇಡ್ಕರ್ ಭಾಷಣ ಬರಹ. ಸಂಪುಟ–7. ಪುಟ 18.
- ವಿಜಯಕ್ಕನ ವಿಚಾರ ಲಹರಿ. ಲೇಖಕಿ; ಶ್ರೀಮತಿ,ವಿಜಯಾ ಮಹೇಶ್. ಪ್ರಬುದ್ದ ಪ್ರಕಾಶನ 2017.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.
1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)
ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.
2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ
ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.
3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)
ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.
4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ
ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.
5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)
ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.
6. ಸಮನ್ವಯದ ದಾರಿ….
ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ3 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ58 minutes agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ


