ದಿನದ ಸುದ್ದಿ
ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ : ಪಿಎಸ್ಐ ಅರ್ಜುನ್ ವಿರುದ್ಧ ಪ್ರಕರಣ ದಾಖಲು
ಸುದ್ದಿದಿನ, ಚಿಕ್ಕಮಗಳೂರು: ದಲಿತ ಯುವಕ ಪುನೀತ್ ಎಂಬಾತನಿಗೆ ಠಾಣೆಯಲ್ಲಿ ಚಿತ್ರಹಿಂಸೆ ನೀಡಿ ಮೂತ್ರ ಕುಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಣಿಬೀಡು ಠಾಣಾಧಿಕಾರಿಯಾಗಿದ್ದ ಅರ್ಜುನ್ ವಿರುದ್ಧ ಪ್ರಕರಣ ದಾಖಲಾಗಿದೆ.
ಐಪಿಸಿ ಸೆಕ್ಷನ್ 342/323/504/506/330/348 ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ದೌರ್ಜನ್ಯ ಪ್ರಕರಣದ ಅಡಿಯಲ್ಲಿ ಕೇಸ್ ದಾಖಲಾಗಿದೆ.
ಗೋಣಿಬೀಡು ಠಾಣೆ ವ್ಯಾಪ್ತಿಯ ಕಿರುಗುಂದ ಗ್ರಾಮದ ದಲಿತ ಯುವಕ ಪುನೀತ್ ನನ್ನು ಪ್ರಕರಣವೊಂದರ ಸಂಬಂಧ ಠಾಣೆಗೆ ಕರೆದೊಯ್ದು ಅಲ್ಲಿ ಬಾಂಬೆ ಟೀಟೆಂಟ್ ನೀಡಲಾಗಿದೆ. ತನಗೆ ತೀವ್ರ ಬಾಯಾರಿಕೆ ಆಗುತ್ತಿದೆ ಎಂದು ಯುವಕ ಗೋಗರೆದಾಗ ಠಾಣಾಧಿಕಾರಿ ಅರ್ಜುನ್ ಇತರರು ಸೇರಿ ಕೈದಿಯೊಬ್ಬನಿಂದ ಬಲತ್ಕಾರವಾಗಿ ಮೂತ್ರ ಕುಡಿಸಿದ್ದಾರೆ ಎಂದು ಯುವಕ ಆರೋಪಿಸಿದ್ದ.
ಈ ಕುರಿತು ತನಿಖೆ ನಡೆಸಿ ಠಾಣಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೇಲಾಧಿಕಾರಿಗಳಿಗೆ ಪತ್ರವನ್ನು ಬರೆಯಲಾಗಿತ್ತು. ಡಿವೈಎಸ್ಪಿಗೆ ತನಿಖೆ ನಡೆಸುವಂತೆ ಆದೇಶಿಸಿದ ಜಿಲ್ಲಾ ರಕ್ಷಣಾಧಿಕಾರಿ ಠಾಣಾಧಿಕಾರಿಯನ್ನು ವರ್ಗಾವಣೆ ಮಾಡಿದ್ದರು. ಈ ಕ್ರಮವು ತೀವ್ರ ಟೀಕೆಗೆ ಒಳಗಾಗಿತ್ತು.
ಸಾಮಾಜಿಕ ಮಾಧ್ಯಮಗಳಲ್ಲಿ ಯುವಕನ ಹೇಳಿಕೆ ವಿಡಿಯೋ ವೈರಲ್ ಆಗಿ ಪ್ರಕರಣ ಭಾರಿ ಚರ್ಚೆಗೆ ಅವಕಾಶ ಮಾಡಿತ್ತು .ಠಾಣಾಧಿಕಾರಿ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಅಮಾನತು ಮಾಡಬೇಕೆಂಬ ಒತ್ತಾಯವೂ ಕೇಳಿಬಂದಿತ್ತು.
ಕೃಪೆ : NEWSCKM.com
ಸುದ್ದಿದಿನ.ಕಾಂ|ವಾಟ್ಸಾಪ್|9980346243