ಬಹಿರಂಗ
ಡಾನಿಷ್ ಸಿದ್ದಿಖಿ- ಅಸಹಿಷ್ಣುತೆಗೆ ಮತ್ತೊಂದು ಬಲಿ
- ನಾ ದಿವಾಕರ
ಆಫ್ಘಾನಿಸ್ತಾನದ ಬಂಡುಕೋರರ ದಾಳಿಗೆ ಬಲಿಯಾದ ಭಾರತದ ಪತ್ರಿಕಾ ಛಾಯಾಗ್ರಾಹಕ ಡಾನಿಷ್ ಸಿದ್ದಿಖಿ ( 1983-2021 ) ಬಹುಶಃ ಜಗತ್ತಿನಾದ್ಯಂತ ಹೆಚ್ಚಾಗುತ್ತಿರುವ ಬಲಪಂಥೀಯ ಮತಾಂಧತೆ, ಅಸಹಿಷ್ಣುತೆ ಮತ್ತು ಉಲ್ಬಣಿಸುತ್ತಿರುವ ಹಿಂಸಾತ್ಮಕ ರಾಜಕಾರಣಕ್ಕೆ ಸಾಕ್ಷಿಯಾಗಿ, ಚಿರಸ್ಥಾಯಿಯಾಗಿ ಉಳಿಯಲಿದ್ದಾರೆ.
ರಾಯ್ಟರ್ಸ್ ಸುದ್ದಿ ಸಂಸ್ಥೆಯ ಮುಖ್ಯ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದ 38 ವರ್ಷದ ಡಾನಿಷ್ ಸಿದ್ದಿಖಿ ಆಫ್ಘಾನಿಸ್ತಾನದಲ್ಲಿ ನಡೆಯುತ್ತಿದ್ದ ಸೇನೆ ಮತ್ತು ತಾಲಿಬಾನ್ ಉಗ್ರರ ನಡುವಿನ ಕಾಳಗವನ್ನು ಸೆರೆಹಿಡಿಯುತ್ತಿದ್ದ ವೇಳೆ, ತಾಲಿಬಾನ್ ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಕಳೆದ ಹತ್ತು ವರ್ಷದಿಂದಲೂ ಈ ಸುದ್ದಿ ಸಂಸ್ಥೆಯೊಡನೆ ಕಾರ್ಯ ನಿರ್ವಹಿಸುತ್ತಿದ್ದ ಡಾನಿಷ್ 2018ರಲ್ಲಿ ಪುಲಿಟ್ಜರ್ ಪ್ರಶಸ್ತಿಗೆ ಭಾಜನರಾಗಿದ್ದರು.
ಇತ್ತೀಚೆಗೆ ಕೋವಿದ್ 2ನೆಯ ಅಲೆಯ ಸಂದರ್ಭದಲ್ಲಿ ಭಾರತದಲ್ಲಿ ಸಾವಿರಾರು ಅನಾಥ ಶವಗಳಿಗೆ ಸಾಮೂಹಿಕ ಶವಸಂಸ್ಕಾರ ಮಾಡಿದ ಚಿತ್ರಗಳನ್ನೂ ಸೆರೆಹಿಡಿದಿದ್ದ ಡಾನಿಷ್, ಕಳೆದ ವರ್ಷದ ದೆಹಲಿ ಗಲಭೆಗಳ ಸಂದರ್ಭದಲ್ಲೂ ತಮ್ಮ ಮನಮುಟ್ಟುವ ಛಾಯಾಚಿತ್ರಗಳ ಮೂಲಕ ವಾಸ್ತವಗಳನ್ನು ಜನರ ಮುಂದಿಟ್ಟಿದ್ದರು.
“ವಾಣಿಜ್ಯ, ವ್ಯಾಪಾರ ಮತ್ತು ರಾಜಕೀಯ ಚಟುವಟಿಕೆಗಳನ್ನು ಕ್ಯಾಮರಾದಲ್ಲಿ ಸೆರೆಹಿಡಿಯುವುದಕ್ಕಿಂತಲೂ, ಸ್ಫೋಟಕ ಸುದ್ದಿಗಳ ಹಿಂದಿನ ಮಾನವೀಯ ಮುಖವನ್ನು ತಮ್ಮ ಕ್ಯಾಮರಾ ಕಣ್ಣಿನ ಮೂಲಕ ಸೆರೆಹಿಡಿದು ಜನರಿಗೆ ಮುಟ್ಟಿಸುವುದರಲ್ಲಿ ನನಗೆ ಹೆಚ್ಚಿನ ಖುಷಿ ಇದೆ ”ಏಂದು ಹೇಳುತ್ತಿದ್ದ ಡಾನಿಷ್ ಇಂತಹುದೇ ಚಿತ್ರೀಕರಣದ ಸಂದರ್ಭದಲ್ಲಿ ಅಮಾನುಷ ಶಕ್ತಿಗಳ ದಾಳಿಗೆ ಬಲಿಯಾಗಿರುವುದು ವಿಡಂಬನೆ ಎನಿಸುತ್ತದೆ.
ಜಗತ್ತಿನ ರಾಜಕಾರಣದಲ್ಲಿ ಸಾಮಾನ್ಯ ಜನರನ್ನು ಕಾಡುತ್ತಿರುವ ಹಿಂಸೆಗೆ ನಾನಾ ರೂಪಗಳು. ಪ್ರಭುತ್ವಗಳ ವಿರುದ್ಧ ಹೋರಾಡುವ ವಿಚ್ಚಿದ್ರಕಾರಿ ಶಕ್ತಿಗಳ ಹಿಂಸೆ ಒಂದೆಡೆಯಾದರೆ, ಪ್ರಜಾ ವಿಮೋಚನೆಯ ಹೆಸರಿನಲ್ಲಿ ದಂಗೆಯೆದ್ದು, ಪ್ರಭುತ್ವದ ಶಕ್ತಿಗೆ ಸರಿಸಮನಾಗಿ ಹೋರಾಡುತ್ತಾ ಸಮಾಜದಲ್ಲಿ ಹಿಂಸೆ, ಕ್ಷೋಭೆಯನ್ನು ಹರಡುವ ಉಗ್ರಗಾಮಿಗಳ ಹಿಂಸೆ ಮತ್ತೊಂದೆಡೆ.
ಸಾಮಾನ್ಯ ಜನರ ದೃಷ್ಟಿಯಿಂದ ನೋಡಿದಾಗ ಹಿಂಸೆ ಅಥವಾ ಹಿಂಸಾತ್ಮಕ ಕೃತ್ಯಗಳನ್ನು ನಿರ್ದಿಷ್ಟ ಚೌಕಟ್ಟಿನಲ್ಲಿ ಬಂಧಿಸಿಡಲು ಸಾಧ್ಯವೇ ಇಲ್ಲ. ತಾಲಿಬಾನ್ ಉಗ್ರರು ಆಫ್ಘಾನಿಸ್ತಾನದಲ್ಲಿ ನಡೆಸುತ್ತಿರುವ ಪೈಶಾಚಿಕ ಕೃತ್ಯಗಳು ಪಾಕಿಸ್ತಾನದ ಪೇಷಾವರದಲ್ಲೂ ಸಂಭವಿಸಿವೆ, ಭಾರತದ ಗುಜರಾತ್ನಲ್ಲೂ ಸಂಭವಿಸಿವೆ, ಮುಂಬಯಿಯಲ್ಲೂ ಘಟಿಸಿವೆ. 2020ರಲ್ಲಿ ಭಾರತದ ರಾಜಧಾನಿ ದೆಹಲಿಯಲ್ಲೂ ಸಂಭವಿಸಿದೆ.
ಈ ಹಿಂಸಾಕೃತ್ಯಗಳನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಉಗ್ರವಾದ, ಉಗ್ರಗಾಮಿ ಚಟುವಟಿಕೆ, ಭಯೋತ್ಪಾದನೆ, ಜಿಹಾದ್ ಎಂದು ವರ್ಗೀಕರಿಸುವ ಜಗತ್ತಿನ ಪ್ರಭುತ್ವಗಳು ಜನಸಾಮಾನ್ಯರ ಪ್ರತಿರೋಧದ ಧ್ವನಿಯನ್ನು ಅಡಗಿಸಲು ಇನ್ನೂ ಹೆಚ್ಚಿನ ಹಿಂಸಾತ್ಮಕ ಮಾರ್ಗಗಳನ್ನು ಅನುಸರಿಸುತ್ತಿವೆ. ನಾಗರಿಕ ಸಮಾಜ ಇದನ್ನು ಗಮನಿಸುತ್ತಲೂ ಇದೆ. ಹತ್ಯೆಯಲ್ಲಿ ಪರ್ಯಾವಸಾನಗೊಳ್ಳುವ ಹಿಂಸೆ ಪ್ರಧಾನವಾಗಿ ಕಾಣುತ್ತದೆ. ಆದರೆ ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳಿಗಾಗಿ ಹೋರಾಡುವ ಸಾರ್ವಭೌಮ ಪ್ರಜೆಗಳನ್ನು ಚಿತ್ರಹಿಂಸೆಗೊಳಪಡಿಸುವ ಪ್ರಭುತ್ವದ ಹಿಂಸಾತ್ಮಕ ಮಾರ್ಗಗಳು ಸಾರ್ವಜನಿಕ ಮಾನ್ಯತೆ ಪಡೆದುಬಿಡುತ್ತವೆ.
ಆಫ್ಘಾನಿಸ್ತಾನದಲ್ಲಿ ಇದು ಇನ್ನೂ ಹೆಚ್ಚು ಸ್ಪಷ್ಟವಾಗಿ ಗೋಚರಿಸುತ್ತದೆ. ಇಂದು ಡಾನಿಷ್ ಸಿದ್ದಿಖಿ ಸಾವಿಗೆ ಸಂತಾಪ ಸೂಚಿಸುವ ಅಮೆರಿಕದ ಅಧ್ಯಕ್ಷರಾಗಲೀ, ಇತರ ಸಾಮ್ರಾಜ್ಯಶಾಹಿ ರಾಷ್ಟ್ರಗಳ ನಾಯಕರಾಗಲೀ ತಮ್ಮ ಬೆನ್ನ ಹಿಂದಿನ ಚರಿತ್ರೆ ಮತ್ತು ಸಮಕಾಲೀನ ಘಟನೆಗಳತ್ತ ಒಮ್ಮೆ ನೋಡಿದರೆ, ಈ ಸಮರವೀರರ ಅತ್ಯಾಧುನಿಕ ಶಸ್ತ್ರಾಸ್ತ್ರಗಳಿಗೆ ಬಲಿಯಾದ ಸಾವಿರಾರು, ಲಕ್ಷಾಂತರ ಜನರ ಶವಗಳ ಮೆರವಣಿಗೆಯೇ ಕಾಣುತ್ತದೆ.
ಇಂದು ಡಾನಿಷ್ ಕೊಲೆಗೆ ಕಾರಣರಾದ ತಾಲಿಬಾನ್ ಪಡೆಯೇ ಸಾಮ್ರಾಜ್ಯಶಾಹಿಯ , ಒಂದು ಕಾಲದ ಮುದ್ದಿನ, ಕೂಸು ಎನ್ನುವುದು ಚಾರಿತ್ರಿಕ ಸತ್ಯ. ಈ ತಾಲಿಬಾನ್ ಉಗ್ರರು ಇಸ್ಲಾಂ ಹೆಸರಿನಲ್ಲಿ ನಡೆಸುವ ನರಮೇಧಗಳಿಗೆ ಬಳಸಲಾಗುವ ಶಸ್ತ್ರಾಸ್ತ್ರಗಳ ಮೂಲವೇ ಅಮೆರಿಕದ ಪೆಂಟಗನ್. ಸಿರಿಯಾ, ಲೆಬನಾನ್, ಇರಾಕ್, ಯಮನ್ ಮತ್ತಿತರ ರಾಷ್ಟ್ರಗಳಲ್ಲಿ ಸಾಮ್ರಾಜ್ಯಗಳ ಡ್ರೋನ್ ದಾಳಿಗಳಿಗೆ ಬಲಿಯಾದ ಲಕ್ಷಾಂತರ ಅಮಾಯಕರ ಸಾಲಿಗೆ ತಾಲಿಬಾನ್ ತನ್ನದೂ ಒಂದಿಷ್ಟಿರಲಿ ಎಂದು ಶವಗಳನ್ನು ಸೇರಿಸುತ್ತಲೇ ಇರುತ್ತದೆ. ಡಾನಿಷ್ ಈ ಸಾವಿನ ಸರದಾರರ ಹರಕೆಯ ಕುರಿಯಂತೆ ಕಾಣುತ್ತಾರೆ.
ವಿಶ್ವದ ಎಲ್ಲ ಪ್ರಮುಖ ನಾಯಕರೂ ಡಾನಿಷ್ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಕೊನೆಗೆ ತಾಲಿಬಾನ್ ಮುಖ್ಯಸ್ತರೂ ಸಹ ಸಂತಾಪ ವ್ಯಕ್ತಪಡಿಸುವ ಮೂಲಕ ಪಾಪಪ್ರಜ್ಞೆಯನ್ನು ತೊಳೆದುಕೊಂಡಿದ್ದಾಗಿದೆ. ಆದರೆ ಭಾರತದ ಪ್ರಜೆಯೊಬ್ಬ, ವಿದೇಶಿ ನೆಲದಲ್ಲಿ ತನ್ನ ವೃತ್ತಿಯಲ್ಲಿ ತೊಡಗಿರುವಾಗ ಉಗ್ರವಾದಿಗಳ ಧಾಳಿಗೆ ಬಲಿಯಾಗಿದ್ದರೂ ಭಾರತದ ಪ್ರಧಾನಿ, ವಿದೇಶಾಂಗ ಮಂತ್ರಿ ಅಥವಾ ಆಡಳಿತಾರೂಢ ಪಕ್ಷದ ನಾಯಕರು ವಿಷಾದವನ್ನೂ ವ್ಯಕ್ತಪಡಿಸದೆ ಇರುವುದನ್ನು ನೋಡಿದರೆ, ಡಾನಿಷ್ ಸಿದ್ದಿಖಿ #ಆತ್ಮನಿರ್ಭರ ಭಾರತದ ದೃಷ್ಟಿಯಲ್ಲಿ ಸಾವಿಗೆ/ಹತ್ಯೆಗೆ ಅರ್ಹನಾಗಿದ್ದ ವ್ಯಕ್ತಿ ಎನಿಸುತ್ತದೆ.
ಫಾದರ್ ಸ್ಟ್ಯಾನ್ ಸ್ವಾಮಿ ಅವರಂತೆ ಡಾನಿಷ್ ಸಿದ್ದಿಖಿಯೂ ಸಹ ಸಾವಿನ ಕದ ತಟ್ಟುತ್ತಿದ್ದ ಒಬ್ಬ ಸಂವೇದನಾಶೀಲ ಪ್ರಜೆ ಆಗಿದ್ದಿರಬಹುದು. ಹತ್ಯೆಯ ಹಿಂದಿನ ಹಿಂಸೆಗಿಂತಲೂ, ಹತ್ಯೆಯನ್ನು ಸಂಭ್ರಮಿಸುವ ಮನಸ್ಥಿತಿ ಮತ್ತು ಹತ್ಯೆಯ ಬಗ್ಗೆ ಮೌನ ವಹಿಸುವ ಮನಸ್ಥಿತಿ ಇನ್ನೂ ಹಿಂಸಾತ್ಮಕ ಅಲ್ಲವೇ ?
ಭಾರತಕ್ಕೆ ಇದೇನೂ ಹೊಸತಲ್ಲ. ಸಾವಿರಾರು ಸಿದ್ದಿಖಿಗಳು, ಸ್ವಾಮಿಗಳು, ನಿಯೋಗಿಗಳು, ಸಫ್ದಾರ್ ಹಷ್ಮಿಗಳು ಈ ದೇಶದ ಮಣ್ಣಲ್ಲಿ ಅನಾಥರಂತೆ ಮಣ್ಣಾಗಿ ಹೋಗಿದ್ದಾರೆ. ಕಳೆದ ವರ್ಷದ ಲಾಕ್ಡೌನ್ ವೇಳೆಯಲ್ಲಿ ಸಾವು ಬದುಕಿನೊಡನೆ ಸೆಣಸಾಡಿದ ವಲಸೆ ಕಾರ್ಮಿಕರು, ತಮ್ಮ ಮೂಲ ನೆಲೆಯಿಂದಲೇ ಉಚ್ಚಾಟಿಸಲ್ಪಟ್ಟು ನಿರಾಶ್ರಿತರಾದ ರೋಹಿಂಗ್ಯಾಗಳು, ವಾರಸುದಾರರಿಲ್ಲದೆ ಸಾಮೂಹಿಕವಾಗಿ ದಹಿಸಲ್ಪಟ್ಟ ಅಸಂಖ್ಯಾತ ಕೋವಿದ್ ಪೀಡಿತ ಶವಗಳು, ಗಂಗೆಯಲ್ಲಿ ತೇಲಿಬಂದ ಶವಗಳು, ಇವೆಲ್ಲವನ್ನೂ ತಮ್ಮ ಮಸೂರದಲ್ಲಿ ಬಂಧಿಸಿ ಸಾರ್ವಜನಿಕರ ಮುಂದಿಟ್ಟಿದ್ದ ಡಾನಿಷ್, ದೆಹಲಿ ಗಲಭೆಯ ಸಂದರ್ಭದಲ್ಲಿ ಸಾರ್ವಜನಿಕವಾಗಿ, ಕೈಕಟ್ಟಿ ನಿಂತಿದ್ದ ಪೊಲೀಸರ ಎದುರೇ ಪ್ರತಿಭಟನಕಾರರಿಗೆ ಪಿಸ್ತೂಲು ತೋರಿಸಿ ಹೆದರಿಸಿದ್ದ ಬಿಜೆಪಿ ನಾಯಕನ ಚಿತ್ರವನ್ನೂ ಸೆರೆಹಿಡಿದಿದ್ದರು. ಬಹುಶಃ ಸಾಯುವ ಅರ್ಹತೆ ಪಡೆಯಲು ಇಷ್ಟು ಸಾಕಾಗಿತ್ತು ಎನಿಸುತ್ತದೆ. ಡಾನಿಷ್ ಸಹ ಮತ್ತೊಂದು ಅನಾಥ ಶವವಾಗಿ ಅಂತ್ಯ ಕಂಡಿದ್ದಾರೆ.
ಹಥ್ರಾಸ್ನಲ್ಲಿ ನಡುರಾತ್ರಿಯಲ್ಲಿ ದಹಿಸಲ್ಪಟ್ಟ ಅತ್ಯಾಚಾರಕ್ಕೀಡಾದ ಯುವತಿಗೂ, ಜಾಮೀನು ದೊರೆಯದೆ ಸೆರೆವಾಸದಲ್ಲೇ ಅಂತ್ಯ ಕಂಡ ರೋಗಪೀಡಿತ ಸ್ಟ್ಯಾನ್ ಸ್ವಾಮಿಗೂ, ದನದ ಮಾಂಸದ ತುಂಡನ್ನು ಮನೆಯಲ್ಲಿಟ್ಟ ತಪ್ಪಿಗಾಗಿ ಹತ್ಯೆಗೀಡಾದ ಅಖ್ಲಾಕ್ಗೂ, ತಾಲಿಬಾನ್ ಉಗ್ರರ ಧಾಳಿಗೆ ಬಲಿಯಾದ ಡಾನಿಷ್ಗೂ ವ್ಯತ್ಯಾಸವೇನಿದೆ ? ಸಾವನ್ನು ಸಾಪೇಕ್ಷಗೊಳಿಸುವ ವಿಕೃತ ಪರಂಪರೆಯೊಂದನ್ನು ನಾವು, ಭಾರತೀಯರು ಪೋಷಿಸಿಕೊಂಡೇ ಬಂದಿದ್ದೇವೆ.
ಹಾಗೆಯೇ ನಮಗೆ ಚಾಮರಾಜನಗರದಲ್ಲಿ ಆಮ್ಲಜನಕ ಇಲ್ಲದೆ ಸತ್ತ 24 ಅಮಾಯಕರೂ ನಗಣ್ಯ ಎನಿಸಿಬಿಡುತ್ತಾರೆ. ಹಸಿವಿನಿಂದ ಕಂಗೆಟ್ಟು ನಡುಬೀದಿಯಲ್ಲೇ ಸತ್ತ ವಲಸೆ ಕಾರ್ಮಿಕರೂ ನಿಕೃಷ್ಟರಾಗಿಬಿಡುತ್ತಾರೆ. ಆತ್ಮಹತ್ಯೆಗೆ ಶರಣಾಗುವ ಲಕ್ಷಾಂತರ ರೈತರೂ ನಿರ್ಲಕ್ಷಿತರಾಗಿಬಿಡುತ್ತಾರೆ.
ನವ ಉದಾರವಾದ, ಬಲಪಂಥೀಯ ರಾಜಕಾರಣ, ಜಾತಿ ದ್ವೇಷ, ಮತಾಂಧತೆ, ದ್ವೇಷ ರಾಜಕಾರಣ ಮತ್ತು ಇವೆಲ್ಲವನ್ನೂ ಕಾಪಾಡಲು ಅಗತ್ಯವಾದ ಹಿಂಸಾತ್ಮಕ ಮನಸ್ಥಿತಿ ಇಂದು ವಿಭಿನ್ನ ಧಾರೆಗಳಲ್ಲಿ ನಮ್ಮ ನಡುವೆ ಪ್ರವಹಿಸುತ್ತಿದೆ. ದೇಶಾದ್ಯಂತ ಕೋವಿದ್ ಮೊದಲನೆ ಅಲೆಯ ಸಂದರ್ಭದಲ್ಲಿ ನೂರಾರು ವಲಸೆ ಕಾರ್ಮಿಕರು ಕೂಳಿಲ್ಲದೆ ಅನಾಥರಂತೆ ಸಾವನ್ನಪ್ಪಿದ್ದರು, ಎರಡನೆ ಅಲೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ, ಆಮ್ಲಜನಕದ ಕೊರತೆಯಿಂದ ಸಾವಿರಾರು ಜನರು ಸಾವನ್ನಪ್ಪಿದ್ದಾರೆ.
ಆದರೆ ಈ ಸಾವುಗಳ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಸಂಸತ್ತಿನಲ್ಲಿ ಹೇಳುವ ಮೂಲಕ ಕೇಂದ್ರ ಸರ್ಕಾರ ಕೈತೊಳೆದುಕೊಳ್ಳುತ್ತದೆ. ತಾಲಿಬಾನ್ ಕ್ರೌರ್ಯಕ್ಕೂ ಈ ಬೌದ್ಧಿಕ ಕ್ರೌರ್ಯಕ್ಕೂ ವ್ಯತ್ಯಾಸವೇನಾದರೂ ಕಾಣಲು ಸಾಧ್ಯವೇ ? ಒಟ್ಟಿನಲ್ಲಿ ಸಾಮಾನ್ಯ ಜನರ ಸಾವು ಸ್ವೀಕೃತವಾದ ಒಂದು ವಿದ್ಯಮಾನ, ಕೆಲವೊಮ್ಮೆ ಸ್ವೀಕಾರಾರ್ಹ, ಕೆಲವೊಮ್ಮೆ ಅಪೇಕ್ಷಿತ, ಕೆಲವೊಮ್ಮೆ ನಿರೀಕ್ಷಿತ ಇನ್ನು ಕೆಲವೊಮ್ಮೆ ನಿಗದಿತ. ಹೌದಲ್ಲವೇ ?
ಹಾಗಾಗಿಯೇ ಡಾನಿಷ್ ಸಿದ್ದಿಖಿ ಒಬ್ಬ ಹುತಾತ್ಮನಾಗಲಿಲ್ಲ. ವಿದೇಶಿ ಉಗ್ರವಾದಿಗಳ ಗುಂಡೇಟಿಗೆ, ವಿದೇಶಿ ನೆಲದಲ್ಲೇ ಬಲಿಯಾದ ಭಾರತದ ಪತ್ರಿಕಾ ಛಾಯಾಗ್ರಾಹಕನೊಬ್ಬನಿಗೆ ರಾಷ್ಟ್ರೀಯ ಸಮ್ಮಾನ ದೊರೆಯಲಿಲ್ಲ. ರಾಷ್ಟ್ರೀಯ ಸಂತಾಪವೂ ದೊರೆಯಲಿಲ್ಲ. ದ್ವೇಷ ರಾಜಕಾರಣದ ಮುದ್ದು ಕೂಸುಗಳು ಸಾಮಾಜಿಕ ತಾಣಗಳಲ್ಲಿ ಸಂಭ್ರಮಿಸಿ, ಕೇಕೆ ಹಾಕಿದ್ದವು. ಆಫ್ಘಾನಿಸ್ತಾನದ ಬಲಿಪೀಠದಲ್ಲಿ, ತಾಲಿಬಾನ್ ಅರಣ್ಯ ನ್ಯಾಯಕ್ಕೆ ಬಲಿಯಾದ ಡಾನಿಷ್ ಸಿದ್ದಿಖಿ , #ಆತ್ಮನಿರ್ಭರ ಭಾರತದ ದೃಷ್ಟಿಯಲ್ಲಿ ಓರ್ವ ಮುಸ್ಲಿಂ ಆಗಿಬಿಟ್ಟ, ಪ್ರತಿರೋಧದ ದನಿಯಾಗಿಬಿಟ್ಟ, ನಮ್ಮ ಸ್ವಘೋಷಿತ ದೇಶಪ್ರೇಮದ ವ್ಯಾಪ್ತಿಯಿಂದ ಹೊರತಾಗಿಬಿಟ್ಟ.
ಹಾಗಾಗಿ ಕ್ಯಾಮರಾ ಹಿಡಿದ ಈ ಸೇನಾನಿ ಶಸ್ತ್ರ ಹಿಡಿದ ಸೇನಾನಿಗಿಂತಲೂ ಭಿನ್ನವಾಗಿ ಕಂಡುಬಿಟ್ಟ. ತ್ರಿವರ್ಣ ಧ್ಜಜದ ಹೊದಿಕೆಗಾಗಲೀ, ಭಾವೈಕ್ಯತೆಯ ಸಂಕೇತವಾಗಿ ಸಮ್ಮಾನಕ್ಕಾಗಲೀ ಹಕ್ಕುದಾರನಾಗಲಿಲ್ಲ. ಕೊನೆಯ ಪಕ್ಷ ಆಳುವ ವರ್ಗಗಳ ಸಂತಾಪದ ಮಾತುಗಳಿಗೂ ಅರ್ಹನಾಗಲಿಲ್ಲ.
ಇದೇನೂ ಅತಿಶಯ ಎನಿಸುವುದಿಲ್ಲ. ಏಕೆಂದರೆ ಈ ಪವಿತ್ರ ಭೂಮಿಯಲ್ಲೇ ಕಳೆದ ಐದಾರು ವರ್ಷಗಳಲ್ಲಿ ಪತ್ರಕರ್ತರ ಮೇಲೆ 200ಕ್ಕೂ ಹೆಚ್ಚು ಧಾಳಿಗಳು ನಡೆದಿವೆ. 2014-19ರ ಅವಧಿಯಲ್ಲಿ 40 ಪತ್ರಕರ್ತರು ಹತ್ಯೆಗೀಡಾಗಿದ್ದಾರೆ. ಇವರ ಪೈಕಿ 21 ಮೃತರು ನೇರ ಪತ್ರಿಕಾ ಧರ್ಮವನ್ನೇ ಪಾಲಿಸುತ್ತಿದ್ದವರಾಗಿದ್ದಾರೆ.
2010ರ ನಂತರ ದಾಖಲಾಗಿರುವ ಪತ್ರಕರ್ತರ ಹತ್ಯೆಯ 30 ಪ್ರಕರಣಗಳಲ್ಲಿ ಮೂರರಲ್ಲಿ ಮಾತ್ರವೇ ಶಿಕ್ಷೆಯಾಗಿದೆ. 2014ರ ನಂತರ ಯಾವುದೇ ಶಿಕ್ಷೆಯಾಗಿಲ್ಲ. ಒಂದು ಅಧ್ಯಯನದ ಪ್ರಕಾರ 2014ರ ನಂತರ 19 ಮಹಿಳಾ ಪತ್ರಕರ್ತರು ಹಲ್ಲೆಗೊಳಗಾಗಿದ್ದಾರೆ. ಮಹಿಳಾ ಆಯೋಗಕ್ಕಾಗಲೀ, ಸಚಿವಾಲಯಕ್ಕಾಗಲೀ ಇದು ಗಂಭೀರ ವಿಚಾರ ಎನಿಸಿಯೇ ಇಲ್ಲ.
ಕಳೆದ ಏಳು ವರ್ಷಗಳಲ್ಲಿ ಮಾಧ್ಯಮ ವಲಯದಲ್ಲಿ ಸೃಷ್ಟಿಯಾಗಿರುವ ಧೃವೀಕರಣವೂ ಈ ನಿಷ್ಕ್ರಿಯತೆಗೆ ಕಾರಣವಾಗಿದೆ. ರಾಜಕೀಯ ಪಕ್ಷಗಳ, ನಾಯಕರ ಮತ್ತು ಅಧಿಕಾರ ಕೇಂದ್ರಕ್ಕೆ ನಿಕಟ ಸಂಪರ್ಕ ಹೊಂದಿರುವವರ ಮಾಲಿಕತ್ವದಲ್ಲಿರುವ ಸುದ್ದಿ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ಪತ್ರಕರ್ತರ ಮೇಲಿನ ಧಾಳಿಗಳು ರಾಜಕೀಯ ಲೆಕ್ಕಾಚಾರಗಳಾಗಿ ಮಾತ್ರವೇ ಕಾಣುತ್ತದೆ.
“ ಸುದ್ದಿಯ ಸಂಸ್ಕರಣ ಮತ್ತು ಅಭಿಪ್ರಾಯ ಉತ್ಪಾದನೆ ”ಯ ಕಾರ್ಖಾನೆಗಳಂತೆ ಕಾರ್ಯ ನಿರ್ವಹಿಸುತ್ತಿರುವ ಬಹುಪಾಲು ಸುದ್ದಿಮನೆಗಳು ಮತ್ತು ಪತ್ರಿಕೆಗಳು ತಮ್ಮ ಪತ್ರಿಕೋದ್ಯಮದ ಸಂಹಿತೆಗಳಿಗಿಂತಲೂ, ತಾವು ಆಶ್ರಯಿಸುವ ರಾಜಕೀಯ ಅಧಿಕಾರ ಕೇಂದ್ರಗಳ ಸಂಹಿತೆಗಳನ್ನು ಹೆಚ್ಚು ನಿಷ್ಠೆಯಿಂದ ಪಾಲಿಸುತ್ತಿರುವುದನ್ನೂ ಈ ಸಂದರ್ಭದಲ್ಲಿ ಗಮನಿಸಬೇಕಿದೆ. ಕರ್ನಾಟಕದ ಗೌರಿ ಲಂಕೇಶ್, ಶ್ರೀನಗರದ ಶೂಜತ್ ಬುಖಾರಿ, ದೂರದರ್ಶನದ ಛಾಯಾಗ್ರಾಹಕ ಅಚ್ಯುತಾನಂದಸಾಹು (ಮಾವೋವಾದಿಗಳ ಗುಂಡೇಟಿಗೆ ಬಲಿಯಾದ್ದರು), ಈ ಮೂರು ಪ್ರಕರಣಗಳನ್ನು ಹೊರತುಪಡಿಸಿದರೆ ಉಳಿದೆಲ್ಲ ಪ್ರಸಂಗಗಳಲ್ಲಿ ಸಾಮಾನ್ಯವಾಗಿ ರಾಜಕೀಯ ಅಕ್ರಮಗಳ ವಿರುದ್ಧ ಮತ್ತು ಭೂಮಾಫಿಯಾ, ಜಲ ಮಾಫಿಯಾ, ಹೆಂಡದ ದೊರೆಗಳ ವಿರುದ್ಧ ಕಾರ್ಯಾಚರಣೆ ನಡೆಸಿದ ಪತ್ರಕರ್ತರೇ ಧಾಳಿಗೊಳಗಾಗಿದ್ದಾರೆ. ಈ ವಿಚಾರದಲ್ಲಿ ಮಾತ್ರ ನಮ್ಮ ದೇಶ ಅಪ್ಪಟ ಜಾತ್ಯತೀತ.
2020ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆದ ಗಲಭೆಗಳ ಹಿನ್ನೆಲೆಯಲ್ಲಿ 14 ಪತ್ರಕರ್ತರ ವಿರುದ್ಧ ದೆಹಲಿ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ. ಎಲ್ಲರೂ ಮುಸ್ಲಿಂ ಸಮುದಾಯಕ್ಕೆ ಸೇರಿರುವುದು ಕಾಕತಾಳೀಯವೇನಲ್ಲ. ಇದೇ ಸಂದರ್ಭದಲ್ಲಿ ಸಾರ್ವಜನಿಕವಾಗಿಯೇ ಪಿಸ್ತೂಲು ತೋರಿಸಿದ ವ್ಯಕ್ತಿ ಸರ್ವ ಸ್ವತಂತ್ರನಾಗಿದ್ದರೆ, “ ಗೋಲಿ ಮಾರೋ ಸಾಲೋಂಕೋ ” ಎಂದು ಮುಕ್ತವಾಗಿ ಕರೆ ನೀಡಿದ ವ್ಯಕ್ತಿ ಸಾಂವಿಧಾನಿಕ ರಕ್ಷಣೆ ಪಡೆದಿದ್ದಾರೆ. ಇಷ್ಟರ ನಡುವೆ ಕಳೆದ ಏಳು ವರ್ಷಗಳಲ್ಲಿ ದೇಶಾದ್ಯಂತ 200 ಮಾಹಿತಿ ಹಕ್ಕು ಕಾರ್ಯಕರ್ತರು ಹತ್ಯೆಗೀಡಾಗಿದ್ದಾರೆ. ಈ ಕಾರ್ಯಕರ್ತರು ಯಾವುದೇ ಮಾಧ್ಯಮ ಸಮೂಹಕ್ಕೆ ಸೇರದೆ, ಸ್ವತಂತ್ರವಾಗಿ ಕಾರ್ಯನಿರ್ವಹಿಸುವುದರಿಂದ ಬಹುಶಃ ಗಣನೆಗೇ ಬರುವುದಿಲ್ಲ ಎನಿಸುತ್ತದೆ.
ಮಾಧ್ಯಮ ವಲಯದ ಈ ಬಂಧುಗಳ ಹತ್ಯೆಗಳಿಗೆ ಮತ್ತು ಅವರ ಮೇಲೆ ನಿರಂತರವಾಗಿ ನಡೆಯುತ್ತಿರುವ ಧಾಳಿಗಳ ಬಗ್ಗೆ ಮಾಧ್ಯಮ ಸಮೂಹವೇ ಮೌನವಾಗಿರುವುದನ್ನು ಗಮನಿಸಿದರೆ, ಈ ದೇಶದ ಅಧಿಕಾರ ರಾಜಕಾರಣ ಮತ್ತು ಕಾರ್ಪೋರೇಟ್ ಔದ್ಯಮಿಕ ಹಿತಾಸಕ್ತಿಗಳು ಮಾಧ್ಯಮ ವಲಯದ ಮೇಲೆ ಹೇಗೆ ನಿಯಂತ್ರಣ ಸಾಧಿಸಿವೆ ಎನ್ನುವುದು ಸ್ಪಷ್ಟವಾಗುತ್ತದೆ.
ಕೋವಿದ್ ಸಾವುಗಳ ಬಗ್ಗೆ ಮತ್ತು ಸರ್ಕಾರ ಕೋವಿದ್ ಸಾವುಗಳನ್ನು ಬಚ್ಚಿಡುತ್ತಿರುವುದನ್ನು ಸವಿಸ್ತಾರವಾಗಿ ವರದಿ ಮಾಡಿದ ದೈನಿಕ್ ಭಾಸ್ಕರ್ ಪತ್ರಿಕಾ ಸಮೂಹ ಈಗ ಆದಾಯ ತೆರಿಗೆ ಧಾಳಿಗೆ ಒಳಗಾಗಿದೆ. 2014ರಲ್ಲಿ ನರೇಂದ್ರ ಮೋದಿಯವರನ್ನು ವೈಭವೀಕರಿಸಿದಾಗ ಪ್ರಾಮಾಣಿಕವಾಗಿ ಕಂಡುಬಂದಿದ್ದ ಈ ಪತ್ರಿಕೆ ಈಗ ಪ್ರತಿರೋಧದ ಧ್ವನಿಯಾಗಿ ಶಿಕ್ಷೆಗೊಳಗಾಗುತ್ತಿದೆ. ಕರ್ನಾಟಕದಲ್ಲಿ ಪವರ್ ಟಿವಿ ವಾಹಿನಿಯ ಪ್ರಕರಣವನ್ನೂ ಇಲ್ಲಿ ಸ್ಮರಿಸಬಹುದು.
ಸ್ವತಂತ್ರ ಮಾಧ್ಯಮದ ಪರಿಕಲ್ಪನೆಯನ್ನೇ ಬದಿಗೊತ್ತಿ ಈ ರೀತಿಯ ರಾಜಕೀಯ ಧೃವೀಕರಣಕ್ಕೊಳಗಾಗಿರುವುದರಿಂದಲೇ ಮಾಧ್ಯಮ ವಲಯ ಇಂದು ಅತಿ ಹೆಚ್ಚು ಆಕ್ರಮಣಗಳನ್ನು ಎದುರಿಸುತ್ತಿದೆ. ಇದರ ಹೊರೆಯನ್ನು ಪತ್ರಕರ್ತರು ಹೊರುತ್ತಿದ್ದಾರೆ. ಆಳುವ ವರ್ಗಗಳ ಪರ, ಕಾರ್ಪೋರೇಟ್ ಪರ , ಭೂಮಾಫಿಯಾ ಮತ್ತಿತರ ಅಕ್ರಮ ಸಂತಾನಗಳ ಪರ ಇರುವ ಶಕ್ತಿಗಳು ಪ್ರಾಮಾಣಿಕ ವರದಿಗಾರರನ್ನು, ಮಾಹಿತಿ ಹಕ್ಕು ಕಾರ್ಯಕರ್ತರನ್ನು, ಸಾಮಾಜಿಕ ಕಾರ್ಯಕರ್ತರನ್ನು ಗುರಿಯಾಗಿಸಿ ತಮ್ಮ ಅಕ್ರಮ ಸಾಮ್ರಾಜ್ಯವನ್ನು ವಿಸ್ತರಿಸುತ್ತಿವೆ. #ಆತ್ಮನಿರ್ಭರ ಭಾರತದಲ್ಲಿ ಇಂತಹ ಶಕ್ತಿಗಳಿಗೆ ಹೆಚ್ಚು ನಿರ್ಭರವಾಗುತ್ತಿವೆ. ಪ್ರಾಮಾಣಿಕತೆ ದುರ್ಭರವಾಗುತ್ತಿವೆ. ಮತಾಂಧತೆ, ಜಾತಿ ದ್ವೇಷ ಮತ್ತು ಕೋಮುವಾದದ ಛಾಯೆ ಸಮಾಜದ ಮೇಲೆ ದಟ್ಟವಾಗಿ ಆವರಿಸುತ್ತಿರುವಂತೆಯೇ, ಈ ಅನ್ಯಾಯಗಳನ್ನು ಪ್ರಶ್ನಿಸುವ ವ್ಯವಧಾನವನ್ನೂ ನಮ್ಮ ಸುತ್ತಲಿನ ಸಮಾಜ ಕಳೆದುಕೊಳ್ಳುತ್ತಿದೆ.
ಈ ಕಗ್ಗೊಲೆಗಳ ವಿರುದ್ಧ, ರಾಜಕೀಯ ಪ್ರೇರಿತ, ದ್ವೇಷಪೂರಿತ, ಜಾತಿ ಪ್ರೇರಿತ ಹತ್ಯೆಗಳ ವಿರುದ್ಧ ನಾವು ಧ್ವನಿ ಎತ್ತಿ ಪ್ರತಿರೋಧ ವ್ಯಕ್ತಪಡಿಸಿದ್ದಲ್ಲಿ ಇಂದು ಡಾನಿಷ್ ಸಿದ್ದಿಖಿ ಅನಾಥ ಶವ ಆಗುತ್ತಿರಲಿಲ್ಲ. ಸುಶಿಕ್ಷಿತ ಎಂದು ಬೆನ್ನುತಟ್ಟಿಕೊಳ್ಳುವ ದೇಶದ ಬೃಹತ್ ಬೌದ್ಧಿಕ ವಲಯ ಇಂದು ಈ ನಿಷ್ಕ್ರಿಯತೆಯಿಂದ ಬಳಲುತ್ತಿದೆ. ಇದು ವಿಚ್ಚಿದ್ರಕಾರಿ ಶಕ್ತಿಗಳ ಪ್ರಾಬಲ್ಯವನ್ನು ಹೆಚ್ಚಿಸುತ್ತಿದೆ. ದುರಂತ ಎಂದರೆ ಪತ್ರಿಕಾ ಧರ್ಮ ಅಥವಾ ಮಾಧ್ಯಮ ಸಂಹಿತೆಯನ್ನು ಪಾಲಿಸಬೇಕಾದ ನಮ್ಮ ಸುದ್ದಿಮನೆಗಳೂ ತಮ್ಮ ನೈತಿಕ ಹೊಣೆಗಾರಿಕೆಯಿಂದ ವಿಮುಖವಾಗಿವೆ. ಡಾನಿಷ್ ಹತ್ಯೆಯನ್ನು ರಂಜನೀಯವಾಗಿ ಬಿತ್ತರಿಸುವ ಸುದ್ದಿಮನೆಗಳ ನಿರೂಪಕರಿಗೆ ನಮ್ಮ ನೆಲದಲ್ಲೇ ಅನಾಥರಾಗಿ ಮಡಿದ 200 ಪತ್ರಕರ್ತರ ಸಾವು ಗಣನೆಗೇ ಬರುವುದಿಲ್ಲ. ಮಾಧ್ಯಮ ಲೋಕದ ಈ ನಿರ್ದಯಿ ನಿಷ್ಕ್ರಿಯತೆ ಮತ್ತು ವಂದಿಮಾಗಧ ಧೋರಣೆಯೇ ಡಾನಿಷ್ ಸಿದ್ದಿಖಿ ಅಂತಹ ಅದ್ಭುತ ಪ್ರತಿಭೆಗಳಿಗೆ ಮಾರಕವಾಗುತ್ತದೆ.
ಜಾತೀಯತೆ, ಮತಾಂಧತೆ ಮತ್ತು ಹುಸಿ ದೇಶಪ್ರೇಮದ ಗುಂಗಿನಲ್ಲಿ ಬಹುಪಾಲು ಸುದ್ದಿಮನೆಗಳು, ಮಾಧ್ಯಮಗಳು ತಮ್ಮ ಸ್ವ ಪ್ರಜ್ಞೆಯನ್ನು ಮಾರಿಕೊಂಡಿವೆ, ಬಹಳಷ್ಟು ಮಾಧ್ಯಮ ಬಂಧುಗಳು ತಮ್ಮ ವಿವೇಕವನ್ನು ಒತ್ತೆ ಇಟ್ಟಿದ್ದಾರೆ, ತಮ್ಮ ವಿವೇಚನೆಯನ್ನು ಕಳೆದುಕೊಂಡಿದ್ದಾರೆ, ಸ್ವಾಮಿನಿಷ್ಠೆಗೆ ಬದ್ಧರಾಗಿ ವೃತ್ತಿನಿಷ್ಠೆಯನ್ನು ಕಳೆದುಕೊಂಡಿದ್ದಾರೆ. ಹಾಗಾಗಿಯೇ ಅಸಹಿಷ್ಣುತೆಯನ್ನೂ ಸಹ ಸಹನೀಯವಾಗಿಸುತ್ತಿದ್ದಾರೆ. ಆದರೆ ಈ ಪಾಪಪ್ರಜ್ಞೆ ಸಾರ್ವಜನಿಕರನ್ನಾದರೂ ಕಾಡುವಂತಾದರೆ, ಆಫ್ಘಾನ್ ನೆಲದಲ್ಲಿ ಉಗ್ರಗಾಮಿಗಳ ಧಾಳಿಗೆ ಬಲಿಯಾದ ಡಾನಿಷ್ ಸಿದ್ದಿಖಿಗೆ ಶ್ರದ್ಧಾಂಜಲಿ ಅರ್ಪಿಸುವ ಅರ್ಹತೆಯನ್ನಾದರೂ ಪಡೆಯಬಹುದೇನೋ !!!
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
ದಾವಣಗೆರೆ: ಎಸ್ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಎಸ್ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ10 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ9 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ


