ದಿನದ ಸುದ್ದಿ
ರೇಣುಕಾಸ್ವಾಮಿ ಕೊಲೆ ಮತ್ತು ಗಂಡುಹೆಣ್ಣಿನ ನಡುವಿನ ಸಂಬಂಧ
- ರಾಜೇಂದ್ರ ಬುರಡಿಕಟ್ಟಿ
ರೇಣುಕಾಸ್ವಾಮಿ ಕೊಲೆ ಕೇಸನ್ನು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚಿಸುವ ಅನೇಕ ಸ್ನೇಹಿತರು ಈ ಕೇಸಿನಲ್ಲಿ ಮೊದಲನೆಯ ಮತ್ತು ಎರಡನೆಯ ಆರೋಪಿಗಳೆಂದು ಹೆಸರಿಸಲ್ಪಟ್ಟ ದರ್ಶನ್ ಮತ್ತು ಪವಿತ್ರ ಗೌಡ ಅವರ ನಡುವಿನ ಸಂಬಂಧದ ಬಗ್ಗೆ ಅನಗತ್ಯವಾಗಿ ಚರ್ಚಿಸಿ ಪವಿತ್ರಗೌಡ ಅವರನ್ನು ‘ಇಟ್ಟುಕೊಂಡವಳು’ ಇತ್ಯದಿ ಪದಬಳಸಿ ಹಿಯ್ಯಾಳಿಸಿದ್ದಾರೆ.
ಒಂದು ಟಿವಿ ಚಾನೆಲ್ ನವರು ಅವರನ್ನು ‘ಸೆಕೆಂಡ್ ಹ್ಯಾಂಡ್ ಸುಂದರಿ’ ಎಂದೂ ಕರೆದದ್ದು ವರದಿಯಾಗಿದೆ. ಇದನ್ನು ಮಾಡುವ ಹಕ್ಕು ಯಾರಿಗೂ ಇಲ್ಲ. ನಮ್ಮ ವಿರೋಧ ಇರಬೇಕಾದದ್ದು ಅವರು ರೂಪಿಸಿದ್ದಾರೆ ಎನ್ನಲಾದ ಕೊಲೆಯ ಕೇಸಿನ ಬಗ್ಗೆಯೇ ಹೊರತು ಅವರಿಬ್ಬರ ನಡುವಿನ ವೈಯಕ್ತಿಕ ಸಂಬಂಧದ ಬಗ್ಗೆ ಅಲ್ಲ.
ಗಂಡು ಹೆಣ್ಣಿನ ನಡುವಿನ ಸಂಬಂಧ ಎಂಬುದು ಅತ್ಯಂತ ಸಹಜವಾದದ್ದು. ಯಾರಿಗೆ ಯಾರ ಮೇಲೆ ಯಾವಾಗ ಆಕರ್ಷಣೆ ಉಂಟಾಗಿ ಸಂಬಂಧಗಳು ಬೆಸೆದುಕೊಳ್ಳುತ್ತವೆ ಎಂಬುದನ್ನು ಹೇಳಲಾಗದು. ಇದಕ್ಕೆ ‘ನೈತಿಕ’ ‘ಅನೈತಿಕ’ ಎಂಬ ಹಣೆಪಟ್ಟಿ ಹಚ್ಚಿ ಗೌರವಿಸುವ ಅಥವಾ ಅವಹೇಳನ ಮಾಡುವ ಕ್ರಮ ಸರಿಯಾದದ್ದಲ್ಲ. ಪ್ರತಿಯೊಬ್ಬರಿಗೂ ಆಯ್ಕೆಗಳಿರುತ್ತವೆ. ತಮಗೆ ಬೇಕಾದ ಗಂಡನ್ನು ಅಥವಾ ಹೆಣ್ಣನ್ನು ಆಯ್ದುಕೊಳ್ಳುವ ಅವರೊಡನೆ ಲೈಂಗಿಕ ಸಂಬಂಧವನ್ನು ಇಟ್ಟುಕೊಳ್ಳುವ ಸ್ವಾತಂತ್ರ್ಯವಿದೆ. ಎಲ್ಲರಿಗೂ ಇದೆ. ಅದನ್ನು ಪ್ರಶ್ನಿಸುವ ಹಕ್ಕು ಇತರರಿಗೆ ಇಲ್ಲ. ಪರಸ್ಪರ ಒಪ್ಪಿತ ಲೈಂಗಿಕ ಸಂಬಂಧವು ದೇಶದ ಕಾನೂನಿನ ಪ್ರಕಾರವೂ ಅಪರಾಧವಲ್ಲ.
ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಹಿರಿಯ ಸಾಹಿತಿ ಡಾ. ಶಿವರಾಮ ಕಾರಂತರು ತಮ್ಮ ಅನೇಕ ಕಾದಂಬರಿಗಳ ಮೂಲಕ ಇದಕ್ಕೆ ಸಂಬಂಧಿಸಿದಂತೆ ಒಂದು ತಾತ್ವಿಕತೆಯನ್ನು ನಮಗೆ ರೂಪಿಸಿಕೊಡುತ್ತಾರೆ. ಅದೆಂದರೆ ‘ಲೈಂಗಿಕ ಸುಖ ಎನ್ನುವುದು ಮನುಷ್ಯನ ಬದುಕು ಮನುಷ್ಯನಿಗೆ ನೀಡುವ ಅತ್ಯಂತ ಸುಖದ ಸಂಗತಿಗಳಲ್ಲಿ ಒಂದು. ಅದರಿಂದ ಯಾರೂ ವಂಚಿತರಾಗಬಾರದು. ಪರಸ್ಪರ ಒಪ್ಪಿಕೊಂಡ ಗಂಡು ಹೆಣ್ಣುಗಳ ನಡುವಿನ ಲೈಂಗಿಕ ಸಂಬಂಧದಲ್ಲಿ ಒಂದು ಚೆಲುವು ಇರುತ್ತದೆ. ಇಂತಹ ಒಂದು ಒಳ್ಳೆಯ ಸಂಬಂಧಕ್ಕೆ ಮದುವೆ ಎಂಬುದು ಒಂದು ‘ಪೂರ್ವಾಗತ್ಯ’ವಾಗಬೇಕಿಲ್ಲ. ಗಂಡುಹೆಣ್ಣಿನ ನಡುವಿನ ಒಂದು ಒಳ್ಳೆಯ ಸಂಬಂಧವು ವಿವಾಹದ ಒಳಗೂ ಇರಬಹುದು; ಹೊರಗೂ ಇರಬಹುದು. ಅದೇ ರೀತಿ ಒಂದು ಕೆಟ್ಟ ಸಂಬಂಧವು ವಿವಾಹದ ಒಳಗೂ ಇರಬಹುದು ಹೊರಗೂ ಇರಬಹುದು. ವಿವಾಹದ ಚೌಕಟ್ಟಿನ ಒಳಗಿನ ಒಂದು ಕೆಟ್ಟ ಸಂಬಂಧಕ್ಕಿಂತ ವಿವಾಹದ ಚೌಕಟ್ಟಿನ ಹೊರಗಿನ ಒಳ್ಳೆಯ ಸಂಬಂಧ ಬೆಲೆಯುಳ್ಳದ್ದು.
ಹೀಗಾಗಿ ಯಾರೊಡನೆ ಎಂತಹ ಸಂಬಂಧ ಇಟ್ಟುಕೊಳ್ಳಬೇಕು ಎಂಬುದು ಅವರವರ ವೈಯಕ್ತಿಕ ವಿಚಾರ. ಅದರಲ್ಲಿ ಇತರರು ತಲೆಹಾಕುವುದು ಅವಿವೇಕತನ. ‘ಮದುವೆ ಎಂಬುದು ಏಳೇಳು ಜನ್ಮಗಳ ಸಂಬಂಧ’ ಏನೇ ಆದರೂ ಅದರ ಗೆರೆದಾಟಿ ಬೇರೆಯವರೊಡನೆ ಲೈಂಗಿಕ ಸಂಬಂಧ ಇಟ್ಟುಕೊಳ್ಳಬಾರದು’ ಎನ್ನುವವರು ಹಾಗೆಯೇ ಇರಬಹುದು. ಅದಕ್ಕೂ ಅವರಿಗೆ ಸ್ವಾತಂತ್ರ್ಯವಿದೆ. ಆದರೆ ಮದುವೆಯ ಚೌಕಟ್ಟಿನ ಹೊರಗಿನ ಸಂಬಂಧಗಳನ್ನು ಟೀಕಿಸುವ ಸ್ವಾತಂತ್ರ್ಯ ಹಕ್ಕು ಅವರಿಗಿಲ್ಲ. ಈ ವಿಷಯದಲ್ಲಿ ನಮ್ಮ ಆಲೋಚನಾ ಕ್ರಮ ಸಾಕಷ್ಟು ಬದಲಾಗಬೇಕಿದೆ. ಒಂದು ಗಂಡು ಮತ್ತು ಒಂದು ಹೆಣ್ಣಿನ ನಡುವಿನ ಸಂಬಂಧ ಎಂಥದ್ದೇ ಇರಲಿ ಅದು ಅವರಿಬ್ಬರಿಗೂ ಸಂತೋಷವನ್ನು ಕೊಡುತ್ತಿದ್ದರೆ ಅದನ್ನು ಕಂಡು ನಾವು ಸಂತೋಷ ಪಡಬೇಕೆ ಹೊರತು ಹೊಟ್ಟೆಕಿಚ್ಚು ಪಡಬಾರದು. ಅದನ್ನು ಗೌರವಿಸುವುದನ್ನು ನಾವು ಮೊದಲು ಕಲಿಯಬೇಕು. ಈ ಹಿನ್ನಲೆಯಲ್ಲಿ ನಮ್ಮ ವಿರೋಧವಿರಬೇಕಾದದ್ದು ಅವರಿಬ್ಬರು ಸೇರಿ ವ್ಯಕ್ತಿಯೊಬ್ಬರ ಕೊಲೆಮಾಡಿದ್ದಾರೆ ಎನ್ನಲಾದ ವಿಚಾರಕ್ಕೆ ಹೊರತು ಅವರ ನಡುವಿನ ವೈಯಕ್ತಿಕ ಸಂಬಂಧದ ಬಗ್ಗೆ ಅಲ್ಲ. ಇಂತದ್ದೇ ವಿಚಾರವನ್ನು ಬೇರೆ ರೀತಿಯಲ್ಲಿ ಹೇಳಿರುವ ಸುಹಾಸಿನಿ ಶ್ರೀ Suhasini Shree ಅವರ ಒಂದು ಪೋಸ್ಟನ್ನೂ ಆಸಕ್ತಿ ಇರುವವರು ಗಮನಿಸಬಹುದು.(ರಾಬು (23-06-2024)
(ರಾಜೇಂದ್ರ ಬುರಡಿಕಟ್ಟಿ ಅವರ ಫೇಸ್ ಬುಕ್ ಬರೆಹ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


