Connect with us

ದಿನದ ಸುದ್ದಿ

ದಾವಣಗೆರೆ | 17.50 ಕೋಟಿಯ ಸುಸಜ್ಜಿತ ರೈಲ್ವೆ ನಿಲ್ದಾಣ, ಡಿಸಿಎಂ ಬಡಾವಣೆಯಲ್ಲಿ ಆಧುನಿಕ ರೈಲ್ವೆ ಕೆಳ ಸೇತುವೆ ಹಾಗೂ ಸ್ಮಾರ್ಟ್ ಸಿಟಿಗೆ ಸ್ಮಾರ್ಟ್ ರೈಲ್ವೆ ನಿಲ್ದಾಣ : ಜಿ.ಎಂ.ಸಿದ್ದೇಶ್ವರ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಯಡಿ ಸೇರ್ಪಡೆ ಆದ ಮೇಲೆ ಸ್ಮಾರ್ಟ್ ಸಿಟಿಗೆ ಸರಿಹೊಂದುವ ರೈಲ್ವೆ ನಿಲ್ದಾಣ ಆಗಬೇಕು ಹಾಗೂ ತಿಂಗಳಲ್ಲಿ ಸರಾಸರಿ 1.5 ಕೋಟಿಯಷ್ಟು ವರಮಾನ ಬರುವ ದಾವಣಗೆರೆ ರೈಲ್ವೆ ನಿಲ್ದಾಣ ಅತ್ಯಾಧುನಿಕ ಕಟ್ಟಡ ಹೊಂದಬೇಕು ಎಂಬ ನನ್ನ ಆಶಯ ಇಂದು ಈಡೇರಿದೆ ಎಂದು ಸಂಸದರಾದ ಜಿ.ಎಂ.ಸಿದ್ದೇಶ್ವರ ತಿಳಿಸಿದರು.

ಡಿಸಿಎಂ ಬಡಾವಣೆ ಬಳಿಯ ನವೀಕೃತ ರೈಲ್ವೆ ಕೆಳ ಸೇತುವೆ (ಯುಆರ್‍ಬಿ) ಹಾಗೂ ರೈಲ್ವೆ ನಿಲ್ದಾಣದ ನೂತನ ಕಟ್ಟಡವನ್ನು ಉದ್ಘಾಟಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನನ್ನ ಲೋಕಸಭಾ ಅವಧಿಯಲ್ಲಿ ನನಗೆ ತೃಪ್ತಿ ನೀಡಿದ ಕೆಲಸಗಳಲ್ಲಿ ರೈಲ್ವೆ ನಿಲ್ದಾಣ ನಿರ್ಮಾಣವೂ ಕೂಡ ಒಂದು.

ಇದನ್ನೂ ಓದಿ | ಭಾರತದಲ್ಲಿ 89,129 ಹೊಸ ಕೋವಿಡ್ ಪ್ರಕರಣಗಳು ದಾಖಲು

ಕೋವಿಡ್ ಆರ್ಥಿಕ ಸಂಕಷ್ಟದ ನಡುವೆಯೂ ಕೂಡ ರೈಲ್ವೆ ಇಲಾಖೆಯ ಸಾಮಥ್ರ್ಯ ಸ್ವಲ್ಪವೂ ಕಡಿಮೆಯಾಗಿಲ್ಲ. ಕೋವಿಡ್ ನಿಂದ ಲಾಕ್‍ಡೌನ್ ಆದ ಸಮಯದಲ್ಲಿ ಹಗಲಿರುಳೆನ್ನದೇ ಕಾಯನಿರ್ವಹಿಸಿದ್ದ ರೈಲ್ವೆ ನೌಕರರಿಗೆ ಅಭಿನಂದಿಸಿದರು. ನಗರದಲ್ಲಿ ರೂ. 17.50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನವೀಕೃತ ರೈಲ್ವೆ ನಿಲ್ದಾಣವನ್ನು ಮುಂದಿನ 2 ವರ್ಷಗಳಲ್ಲಿ ಜಿ ಪ್ಲಸ್ 2 ಮಾದರಿ ಕಟ್ಟಡವಾಗಿ ಪರಿವರ್ತಿಸುವ ಗುರಿ ಹೊಂದಿದ್ದೇವೆ ಎಂದರು.

ನಗರದಲ್ಲಿ ಖಾಸಗಿ ಬಸ್ ನಿಲ್ದಾಣ ಕಾಮಗಾರಿ ಆರಂಭವಾಗಿ ಇನ್ನೂ ಮುಗಿದಿಲ್ಲ. ಆದರೆ ರೈಲ್ವೆ ನಿಲ್ದಾಣ ಕೈಗೆತ್ತಿಕೊಂಡ ಒಂದು ವರ್ಷದಲ್ಲೇ ಪೂರ್ಣಗೊಳಿಸಲಾಗಿದೆ. ಇದಕ್ಕೆ ಕೇಂದ್ರದ ಮಾಜಿ ಸಚಿವ ಸುರೇಶ್ ಅಂಗಡಿ ಕಾರಣೀಭೂತರು ಎಂದು ಅವರನ್ನು ಸ್ಮರಿಸಿದರು.

ರೈಲ್ವೆ ನಿಲ್ದಾಣವನ್ನು ಕಲಾತ್ಮಕವಾಗಿ ವಿನ್ಯಾಸಗೊಳಿಸಲಾಗಿದೆ. ಇಲ್ಲಿ ಫುಟ್‍ಓವರ್ ಬ್ರಿಡ್ಜ್, ವಿಶಾಲವಾದ ಫ್ಲಾಟ್‍ಫಾರ್ಮ್ ಶೆಲ್ಟರ್, ಸ್ಟೇಷನ್ ಕಟ್ಟಡ, ಪಾರ್ಕಿಂಗ್ ಹಾಗೂ ಗಾರ್ಡನ್ ವ್ಯವಸ್ಥೆ, ಲಿಫ್ಟ್, ಪಿ.ಆರ್‍ಎಸ್ ಸೌಲಭ್ಯ, ವಿಐಪಿ ಲಾಡ್ಜ್, ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಕಾಯುವ ಸಭಾಂಗಣ, ಅತ್ಯಾಧುನಿಕ ಮಿಸಲಾತಿ ವ್ಯವಸ್ಥೆ, ಬಸ್‍ಬೇ, ವಿಶ್ರಾಂತಿ ಕೊಠಡಿ ಸೇರಿದಂತೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ. ಹಾಗೂ ರೈಲ್ವೆ ಪ್ಲಾಟ್‍ಫಾರ್ಮ್ ಟಿಕೆಟ್ ಅನ್ನು ರೂ.10 ಕ್ಕೆ ಸೀಮಿತಗೊಳಿಸಲಾಗಿದೆ ಎಂದು ಸೂಚಿಸಿದರು.

ರೈಲ್ವೆ ಕಟ್ಟಡದ ಹೊರಗಡೆ ವಿಶಾಲವಾದ ಆಗಮನ ಮತ್ತು ನಿರ್ಗಮನ ರಸ್ತೆಗಳು, ವಾಹನ ನಿಲುಗಡೆ ಪ್ರದೇಶ, ಸೆಲ್ಪಿ ಪಾಯಿಂಟ್ (ಐ ಲವ್ ಡಿವಿಜಿ), ಆಟೋ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣದ ಮುಖ್ಯ ಪ್ರವೇಶ ದ್ವಾರ ಎದುರಿಗೆ ನಿರ್ಮಿಸಿರುವ 100 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಹಾರುತ್ತಿರುವ ಬೃಹತ್ ರಾಷ್ಟ್ರಧ್ವಜ, ಸುಂದರವಾದ ಗೋಡೆ ನಿರ್ಮಾಣ, ಟಿಕೇಟ್ ಕೌಂಟರ್, ಅತ್ಯಧುನಿಕ ಶೌಚಾಲಯ ಸೇರಿದಂತೆ ವಿವಿಧ ಸವಲತ್ತುಗಳು ಪ್ರಯಾಣಿಕರಿಗೆ ಸಂತಸ ತರಲಿದೆ ಎಂದರು.

ರೈಲು ನಿಲ್ದಾಣದ ಆವರಣದಲ್ಲಿ ವಿಮಾನ ನಿಲ್ದಾಣದಲ್ಲಿರುವ ಬೆಳಕು ವಿನ್ಯಾಸ ಮಾದರಿಯಲ್ಲಿ ಎಲ್‍ಇಡಿ ಬಲ್ಬ್‍ಗಳನ್ನು ಅಳವಡಿಸಲಾಗಿದ್ದು, ಇದರಿಂದ ಬಹಳಷ್ಟು ವಿದ್ಯುತ್ ಉಳಿತಾಯವಾಗಲಿದೆ. ಹಾಗೂ ರೈಲು ನಿಲ್ದಾಣದ ನೂತನ ಕಟ್ಟಡದ ಮೇಲೆ ಇನ್ನೊಂದು ಮಹಡಿಯನ್ನು ನಿರ್ಮಿಸಿ, ಅಭಿವೃದ್ಧಿಗೊಳಿಸುವ ಬಗ್ಗೆ ಪ್ರಸ್ತಾಪ ಸಲ್ಲಿಸಲಾಗಿದೆ.

ಮುಂಬರುವ ದಿನಗಳಲ್ಲಿ ಅದಕ್ಕೂ ಮಂಜೂರಾತಿ ದೊರೆಯಲಿದೆ. ಕಟ್ಟಡ ನಿರ್ಮಾಣದ ನಂತರ ಮಹಡಿ ಮೇಲೆ ಸೌರ ಫಲಕಗಳನ್ನು ಅಳವಡಿಸಿ ನಿಲ್ದಾಣಕ್ಕೆ ಅಗತ್ಯ ವಿದ್ಯುತ್ ಉತ್ಪಾದಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದೇವೆ ಎಂದರು.ರೈಲು ನಿಲ್ದಾಣದ ಪಕ್ಕದ ಉಪವಿಭಾಗಾಧಿಕಾರಿ ಕಚೇರಿಯ ಜಾಗವನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲು ಉದ್ದೇಶಿಸಲಾಗಿದೆ.

ಈ ಜಾಗಕ್ಕೆ ಪರ್ಯಾಯವಾಗಿ ರೈಲ್ವೆ ಇಲಾಖೆಯು ದೊಡ್ಡಬಾತಿ ಬಳಿ ಜಾಗ ನೀಡಲಿದೆ. ಉಪವಿಭಾಗಾಧಿಕಾರಿ ಕಚೇರಿ ನಿರ್ಮಿಸಲು ರೂ. 5 ಕೋಟಿ ಅನುದಾನವನ್ನು ಮುಖ್ಯಮಂತ್ರಿ ಮಂಜೂರು ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲಿ ನೂತನ ಕಚೇರಿಯನ್ನು ನಿರ್ಮಿಸಲಾಗುವುದು. ಈಗಿರುವ ಉಪವಿಭಾಗಾಧಿಕಾರಿ ಕಚೇರಿ ಜಾಗದಲ್ಲಿ ರೈಲು ನಿಲ್ದಾಣಕ್ಕೆ ಪ್ರವೇಶ ದ್ವಾರ ನಿರ್ಮಿಸಲಾಗುವುದು. ಜೊತೆಗೆ ಪಾರ್ಕಿಂಗ್ ಸ್ಥಳವನ್ನಾಗಿ ಅಭಿವೃದ್ಧಿಪಡಿಸಲಾಗುವುದು.

ಬಾಣಾವರದಿಂದ ದಾವಣಗೆರೆ ಮಾರ್ಗವಾಗಿ ಹುಬ್ಬಳ್ಳಿವರೆಗೆ ರೈಲ್ವೆ ಲೈನ್ ಎಲೆಕ್ಟ್ರಿಫಿಕೇಷನ್ ಗಾಗಿ 160 ಕೋಟಿ ವೆಚ್ಚದಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ಈಗಾಗಲೇ ದೇಶದಲ್ಲಿರುವ ಬಹುತೇಕ ಎಲ್ಲಾ ಮಾನವರಹಿತ ಲೆವೆಲ್ ಕ್ರಾಸಿಂಗ್‍ಗಳನ್ನು ತೆರವುಗೊಳಿಸಲಾಗಿದೆ. ಹಾಗೂ ಆತ್ಮನಿರ್ಭರ ಭಾರತ್ ಇದರ ಉದ್ದೇಶಗಳನ್ನು ಈಡೇರಿಸಲು ರೈಲ್ವೆ ಇಲಾಖೆ ಈಗಲೂ ಬದ್ಧವಾಗಿದೆ ಎಂದರು.

2012-13 ರಲ್ಲಿ ಪ್ರತಿದಿನ 4 ರಿಂದ 5 ಕಿ.ಮೀ ರೈಲ್ವೆ ಟ್ರ್ಯಾಕ್ ನಿರ್ಮಾಣ ಆಗ್ತಾ ಇತ್ತು. ಆದರೆ ಈಗ ಪ್ರತಿನಿತ್ಯ ಸರಾಸರಿ 23 ಕಿ.ಮೀ. ರೈಲ್ವೆ ಟ್ರ್ಯಾಕ್ ನಿರ್ಮಾಣ ಆಗುತ್ತಿದೆ. ಅಲ್ಲದೇ ಪ್ರಧಾನಮಂತ್ರಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 30 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸುಮಾರು 503 ಯೋಜನೆಗಳನ್ನು ಪೂರ್ಣಗೊಳಿಸುವ ಹಂತಕ್ಕೆ ತರಲಾಗಿದೆ.

ಹರಿಹರ ನಗರದ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿದ್ದೇನೆ. ಹರಿಹರ ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಕೋವಿಡ್ ಕಾರಣಕ್ಕೆ ಉಂಟಾದ ಆರ್ಥಿಕ ಸಂಕಷ್ಟದಿಂದ ಮಂಜೂರಾತಿ ಸಿಗಲು ವಿಳಂಬವಾಗಿದೆ. ಮುಂಬರುವ ದಿನಗಳಲ್ಲಿ ಮಂಜೂರಾತಿ ಸಿಗಲಿದೆ ಎಂದರು.

ಹಾಗೂ ಹರಿಹರದ ಅಮರಾವತಿ ಬಳಿ ರೈಲ್ವೆ ನಿಲ್ದಾಣಕ್ಕೆ 30 ಕೋಟಿ ವೆಚ್ಚದಲ್ಲಿ ಮೇಲು ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು ಶೀಘ್ರದಲ್ಲಿ ಉದ್ಘಾಟನೆ ಮಾಡಲಾಗುವುದು ಎಂದರು.

ಹನುಮನಹಳ್ಳಿ ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆಯ ವ್ಯವಸ್ಥೆಯನ್ನು ಈ ಹಿಂದಿನಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ. ಜಿ.ಎಂ.ಐ.ಟಿ ಕಾಲೇಜಿನ ಸಮೀಪದ ಕರೂರಿನಲ್ಲಿನ 203ನೇ ರೈಲ್ವೆ ಗೇಟ್ ಬಳಿ ಜುಲೈನಲ್ಲಿ ರೈಲ್ವೆ ಕೆಳಸೇತುವೆ ನಿರ್ಮಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ.

ರೂ. 15 ಕೋಟಿ ವೆಚ್ಚದಲ್ಲಿ ರೈಲು ನಿಲ್ದಾಣದ ಆಧುನೀಕರಣ, ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಹಾಗೂ ರೂ. 5 ಕೋಟಿ ವೆಚ್ಚದಲ್ಲಿ ಎಸ್ಕಲೇಟರ್ (ಚಲಿಸುವ ಮೆಟ್ಟಿಲು) ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಅದರಲ್ಲೂ ಎಸ್ಕಲೇಟರ್ ರಾಜ್ಯದ ಬೆಳಗಾವಿ, ಹುಬ್ಬಳ್ಳಿ, ಮಂಗಳೂರು, ಬೆಂಗಳೂರು, ಮೈಸೂರು ಬಿಟ್ಟರೆ ಇನ್ನಿತರ ಯಾವುದೇ ಜಿಲ್ಲೆಗಳಲ್ಲೂ ಇರಲಿಲ್ಲ. ಇದೀಗ ದಾವಣಗೆರೆಯಲ್ಲಿ ಆಗಿರುವುದು ಸಂತಸಕರ ಎಂದರು.

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದರುವ ಅಶೋಕ ರೈಲ್ವೆ ಗೇಟ್ ಬಳಿ ಅಂಡರ್ ಪಾಸ್ ನಿರ್ಮಿಸಲು ಈಗಾಗಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಖಾಸಗಿ ಜಮೀನಿನ ಮಾಲೀಕರೊಂದಿಗೆ ಜಿಲ್ಲಾಡಳಿತ ಮಾತುಕತೆ ನಡೆಸಿದ್ದು, ಶೀಘ್ರವೇ ಪರ್ಯಾಯ ಜಾಗವನ್ನು ಕೊಡುವ ಮೂಲಕ ಕಾಮಗಾರಿಗೆ ಚಾಲನೆ ನೀಡಲಾಗುವುದು. ಹರಿಹರದಲ್ಲಿ 47 ಎಕರೆ ಜಮೀನಿನಲ್ಲಿ ಎಥನಾಲ್ ಘಟಕವು ಶೀಘ್ರದಲ್ಲೆ ಸ್ಥಾಪನೆಯಾಗಲಿದೆ.

ಮಾಯಕೊಂಡದಿಂದ ಹರಿಹರದವರೆಗೆ ಈಗಾಗಲೇ ರೂ.250 ಕೋಟಿ ವೆಚ್ಚದಲ್ಲಿ ಡಬ್ಲಿಂಗ್ ಕಾಮಗಾರಿ ಪೂರ್ಣಗೊಂಡಿದೆ. ಮೆಗಾ ಜವಳಿ ಪಾರ್ಕ್ ನಿರ್ಮಿಸಲು 1038 ಎಕರೆ ಜಮೀನಿನ ಅಗತ್ಯವಿದ್ದು, ಇಲ್ಲಿಯವರೆಗೂ ಜಮೀನು ಸ್ವಾಧೀನ ನಡೆದಿಲ್ಲ. ಯಾವುದೇ ಕಾಮಗಾರಿ, ಯೋಜನೆಗಳನ್ನು ಪರಿಪೂರ್ಣಮಾಡಬೇಕೆಂದರೆ ಜಾಗದ ಕೊರತೆ ಇದೆ ಎಂದ ಅವರು ವೇಗವಾಗಿ ಬೆಳೆಯುತ್ತಿರುವ ನಗರಕ್ಕೆ ತಕ್ಕಂತೆ ವಿಮಾನ ನಿಲ್ದಾಣ ಆರಂಭಿಸಲು ಶ್ರಮಿಸಲಾಗುವುದು ಎಂದು ತಿಳಿಸಿದರು.

ಪ್ರಪಂಚದಲ್ಲಿಯೇ ನಾಲ್ಕನೇ ಅತಿದೊಡ್ಡ ರೈಲ್ವೆ ನೆಟ್‍ವರ್ಕ್ ಎಂಬ ಖ್ಯಾತಿಯನ್ನು ನಮ್ಮ ಇಂಡಿಯನ್ ರೈಲ್ವೆ ಹೊಂದಿದೆ. ಈ ನಿಟ್ಟಿನಲ್ಲಿ ಸ್ಮಾರ್ಟ್ ಸಿಟಿಗೆ ತಕ್ಕ ಹಾಗೆ ಸ್ಮಾರ್ಟ್ ರೈಲ್ವೆ ನಿಲ್ದಾಣ ಆಗಿರುವುದು ಸಂತೋಷವಾಗಿದೆ. ಪ್ರಸ್ತುತ ದೇಶದ ಶೇಕಡ 33 ರಷ್ಟು ಸರಕು ಸಾಗಾಟ ರೈಲ್ವೆ ಮೂಲಕ ನಡೆಯುತ್ತಿದೆ. ಇದನ್ನು 2030 ರ ವೇಳೆಗೆ ಶೇಕಡ 50 ಕ್ಕೆ ಮುಟ್ಟಿಸುವ ಗುರಿಯನ್ನು ರೈಲ್ವೆ ಇಲಾಖೆ ಹೊಂದಿದೆ.

ಬೇಡಿಕೆಗೆ ಮುಂಚೆಯೇ ಮೂಲಸೌಕರ್ಯ ಸಾಮಥ್ರ್ಯವನ್ನು ಸೃಷ್ಟಿಸುವುದು ರಾಷ್ಟ್ರೀಯ ರೈಲ್ವೆ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, 2030 ರೊಳಗೆ ದೇಶಾದ್ಯಂತ ಬ್ರಾಡ್‍ಗೇಜ್‍ನ್ನು ಸಂಪೂರ್ಣ ಎಲೆಕ್ಟ್ರಿಫಿಕೇಷನ್ ಮಾಡುವ ಗುರಿಯನ್ನು ರೈಲ್ವೆ ಇಲಾಖೆ ಹೊಂದಿದೆ. ಈಗಾಗಲೇ ಶೇಕಡ 58 ರಷ್ಟು ಎಲೆಕ್ಟ್ರಿಫಿಕೇಶನ್ ಕಾರ್ಯ ಪೂರ್ಣಗೊಂಡಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಹಾಪೌರರಾದ ಎಸ್.ಟಿ.ವೀರೇಶ್, ದೂಡ ಅಧ್ಯಕ್ಷರಾದ ಶಿವಕುಮಾರ್, ವಿಭಾಗೀಯ ಮುಖ್ಯ ವ್ಯವಸ್ಥಾಪಕರಾದ ರಾಹುಲ್ ಅಗರ್‍ವಾಲ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಮುಖಂಡರಾದ ಯಶವಂತರಾವ್ ಜಾದವ್, ವೀರೇಶ್ ಹನಗವಾಡಿ, ಲೋಕಿಕೆರೆ ನಾಗರಾಜ್, ಸುಧಾ ಜಯಪ್ರಕಾಶ್, ಲಿಂಗರಾಜ್ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

Published

on

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.

ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ

ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.

ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.

‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.

‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.

ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ

ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.

ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಅವ್ಯವಹಾರ | ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಕೆ. ಲಮಾಣಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಕೊಪ್ಪಳ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇಲ್ಲಿ 2022-23 ರಿಂದ 2024-25ನೇ ಸಾಲಿನ ಅವಧಿಯಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಅರೇ ಸರ್ಕಾರಿ ಖಾತೆಯ ಅನುದಾನದಲ್ಲಿ ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ನಿಯಮಬಾಹಿರವಾಗಿ ಖರೀದಿ ಪ್ರಕ್ರಿಯೆಗೆ ಮುಂದಾಗಿ ಲಕ್ಷಾಂತರ ರೂಪಾಯಿಗಳನ್ನು ವಂಚಿಸಿರುವ ಪ್ರಾಂಶುಪಾಲರಾದ ಡಾ. ಗಣಪತಿ ಕೆ. ಲಮಾಣಿ ಇವರ ವಿರುದ್ಧ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇವರಿಂದ ಅರೇ ಸರ್ಕಾರಿ ಖಾತೆಯ ಅನುದಾನದ ಬಳಕೆಯ ಅಧಿಕೃತ ದಾಖಲೆಗಳನ್ನು ಪಡೆದು, ಪರಿಶೀಲನೆ ಮಾಡಿದಾಗ ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ಮಾಡಿರುವುದು ಮಾತ್ರವಲ್ಲದೆ, ವೆಂಕಟೇಶ್ ಟ್ರೇರ‍್ಸ್, ಕುಕನೂರು ಮತ್ತು ವೆಂಕಟೇಶ್ ಟ್ರೇರ‍್ಸ್, ತಳಕಲ್ಲ ಎಂಬ ಒಂದೇ ಹೆಸರಿನ ಏಜೆನ್ಸಿಯ ಮೂಲಕ ಎರಡು ಸ್ಥಳಗಳ ಹೆಸರಿನಲ್ಲಿ ನಕಲಿ ಜಿ.ಎಸ್.ಟಿ ಬಿಲ್ಲುಗಳನ್ನು ಸೃಷ್ಟಿಸಿಕೊಂಡು ಲಕ್ಷಾಂತರ ರೂಪಾಯಿ ಅನುದಾನವನ್ನು ವಂಚನೆ ಮಾಡಿರುವುದು ಕಂಡುಬದಿರುತ್ತದೆ.

ಪ್ರಾಂಶುಪಾಲರಿಗೆ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಮನವಿ ಸಲ್ಲಿಸಲಾಗಿತ್ತು. 3 ತಿಂಗಳು ಕಳೆದರೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರು ಯಾವುದೇ ಪ್ರತ್ಯುತ್ತರ ನೀಡದ ಕಾರಣ, ನಕಲಿ ಜಿ.ಎಸ್.ಟಿ ಮೂಲಕ ಹಣ ವಂಚಿಸಿರುವ ಪ್ರಕರಣವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಗೆ ದೂರು ನೀಡಿ, ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳೇಶ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯಿಂದ ಫಾಸ್ಟ್ ಫುಡ್ ತಯಾರಿಕೆ ಕುರಿತ 12 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ.

ತರಬೇತಿಯು ಫೆಬ್ರವರಿ 16 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿಯನ್ನು ಸಲ್ಲಿಸಬಹುದು. 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು. ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9481506564, 9740982585, 9380162042, 9241482541, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending