Connect with us

ದಿನದ ಸುದ್ದಿ

ದಾವಣಗೆರೆ | 17.50 ಕೋಟಿಯ ಸುಸಜ್ಜಿತ ರೈಲ್ವೆ ನಿಲ್ದಾಣ, ಡಿಸಿಎಂ ಬಡಾವಣೆಯಲ್ಲಿ ಆಧುನಿಕ ರೈಲ್ವೆ ಕೆಳ ಸೇತುವೆ ಹಾಗೂ ಸ್ಮಾರ್ಟ್ ಸಿಟಿಗೆ ಸ್ಮಾರ್ಟ್ ರೈಲ್ವೆ ನಿಲ್ದಾಣ : ಜಿ.ಎಂ.ಸಿದ್ದೇಶ್ವರ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಯಡಿ ಸೇರ್ಪಡೆ ಆದ ಮೇಲೆ ಸ್ಮಾರ್ಟ್ ಸಿಟಿಗೆ ಸರಿಹೊಂದುವ ರೈಲ್ವೆ ನಿಲ್ದಾಣ ಆಗಬೇಕು ಹಾಗೂ ತಿಂಗಳಲ್ಲಿ ಸರಾಸರಿ 1.5 ಕೋಟಿಯಷ್ಟು ವರಮಾನ ಬರುವ ದಾವಣಗೆರೆ ರೈಲ್ವೆ ನಿಲ್ದಾಣ ಅತ್ಯಾಧುನಿಕ ಕಟ್ಟಡ ಹೊಂದಬೇಕು ಎಂಬ ನನ್ನ ಆಶಯ ಇಂದು ಈಡೇರಿದೆ ಎಂದು ಸಂಸದರಾದ ಜಿ.ಎಂ.ಸಿದ್ದೇಶ್ವರ ತಿಳಿಸಿದರು.

ಡಿಸಿಎಂ ಬಡಾವಣೆ ಬಳಿಯ ನವೀಕೃತ ರೈಲ್ವೆ ಕೆಳ ಸೇತುವೆ (ಯುಆರ್‍ಬಿ) ಹಾಗೂ ರೈಲ್ವೆ ನಿಲ್ದಾಣದ ನೂತನ ಕಟ್ಟಡವನ್ನು ಉದ್ಘಾಟಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನನ್ನ ಲೋಕಸಭಾ ಅವಧಿಯಲ್ಲಿ ನನಗೆ ತೃಪ್ತಿ ನೀಡಿದ ಕೆಲಸಗಳಲ್ಲಿ ರೈಲ್ವೆ ನಿಲ್ದಾಣ ನಿರ್ಮಾಣವೂ ಕೂಡ ಒಂದು.

ಇದನ್ನೂ ಓದಿ | ಭಾರತದಲ್ಲಿ 89,129 ಹೊಸ ಕೋವಿಡ್ ಪ್ರಕರಣಗಳು ದಾಖಲು

ಕೋವಿಡ್ ಆರ್ಥಿಕ ಸಂಕಷ್ಟದ ನಡುವೆಯೂ ಕೂಡ ರೈಲ್ವೆ ಇಲಾಖೆಯ ಸಾಮಥ್ರ್ಯ ಸ್ವಲ್ಪವೂ ಕಡಿಮೆಯಾಗಿಲ್ಲ. ಕೋವಿಡ್ ನಿಂದ ಲಾಕ್‍ಡೌನ್ ಆದ ಸಮಯದಲ್ಲಿ ಹಗಲಿರುಳೆನ್ನದೇ ಕಾಯನಿರ್ವಹಿಸಿದ್ದ ರೈಲ್ವೆ ನೌಕರರಿಗೆ ಅಭಿನಂದಿಸಿದರು. ನಗರದಲ್ಲಿ ರೂ. 17.50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನವೀಕೃತ ರೈಲ್ವೆ ನಿಲ್ದಾಣವನ್ನು ಮುಂದಿನ 2 ವರ್ಷಗಳಲ್ಲಿ ಜಿ ಪ್ಲಸ್ 2 ಮಾದರಿ ಕಟ್ಟಡವಾಗಿ ಪರಿವರ್ತಿಸುವ ಗುರಿ ಹೊಂದಿದ್ದೇವೆ ಎಂದರು.

ನಗರದಲ್ಲಿ ಖಾಸಗಿ ಬಸ್ ನಿಲ್ದಾಣ ಕಾಮಗಾರಿ ಆರಂಭವಾಗಿ ಇನ್ನೂ ಮುಗಿದಿಲ್ಲ. ಆದರೆ ರೈಲ್ವೆ ನಿಲ್ದಾಣ ಕೈಗೆತ್ತಿಕೊಂಡ ಒಂದು ವರ್ಷದಲ್ಲೇ ಪೂರ್ಣಗೊಳಿಸಲಾಗಿದೆ. ಇದಕ್ಕೆ ಕೇಂದ್ರದ ಮಾಜಿ ಸಚಿವ ಸುರೇಶ್ ಅಂಗಡಿ ಕಾರಣೀಭೂತರು ಎಂದು ಅವರನ್ನು ಸ್ಮರಿಸಿದರು.

ರೈಲ್ವೆ ನಿಲ್ದಾಣವನ್ನು ಕಲಾತ್ಮಕವಾಗಿ ವಿನ್ಯಾಸಗೊಳಿಸಲಾಗಿದೆ. ಇಲ್ಲಿ ಫುಟ್‍ಓವರ್ ಬ್ರಿಡ್ಜ್, ವಿಶಾಲವಾದ ಫ್ಲಾಟ್‍ಫಾರ್ಮ್ ಶೆಲ್ಟರ್, ಸ್ಟೇಷನ್ ಕಟ್ಟಡ, ಪಾರ್ಕಿಂಗ್ ಹಾಗೂ ಗಾರ್ಡನ್ ವ್ಯವಸ್ಥೆ, ಲಿಫ್ಟ್, ಪಿ.ಆರ್‍ಎಸ್ ಸೌಲಭ್ಯ, ವಿಐಪಿ ಲಾಡ್ಜ್, ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಕಾಯುವ ಸಭಾಂಗಣ, ಅತ್ಯಾಧುನಿಕ ಮಿಸಲಾತಿ ವ್ಯವಸ್ಥೆ, ಬಸ್‍ಬೇ, ವಿಶ್ರಾಂತಿ ಕೊಠಡಿ ಸೇರಿದಂತೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ. ಹಾಗೂ ರೈಲ್ವೆ ಪ್ಲಾಟ್‍ಫಾರ್ಮ್ ಟಿಕೆಟ್ ಅನ್ನು ರೂ.10 ಕ್ಕೆ ಸೀಮಿತಗೊಳಿಸಲಾಗಿದೆ ಎಂದು ಸೂಚಿಸಿದರು.

ರೈಲ್ವೆ ಕಟ್ಟಡದ ಹೊರಗಡೆ ವಿಶಾಲವಾದ ಆಗಮನ ಮತ್ತು ನಿರ್ಗಮನ ರಸ್ತೆಗಳು, ವಾಹನ ನಿಲುಗಡೆ ಪ್ರದೇಶ, ಸೆಲ್ಪಿ ಪಾಯಿಂಟ್ (ಐ ಲವ್ ಡಿವಿಜಿ), ಆಟೋ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣದ ಮುಖ್ಯ ಪ್ರವೇಶ ದ್ವಾರ ಎದುರಿಗೆ ನಿರ್ಮಿಸಿರುವ 100 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಹಾರುತ್ತಿರುವ ಬೃಹತ್ ರಾಷ್ಟ್ರಧ್ವಜ, ಸುಂದರವಾದ ಗೋಡೆ ನಿರ್ಮಾಣ, ಟಿಕೇಟ್ ಕೌಂಟರ್, ಅತ್ಯಧುನಿಕ ಶೌಚಾಲಯ ಸೇರಿದಂತೆ ವಿವಿಧ ಸವಲತ್ತುಗಳು ಪ್ರಯಾಣಿಕರಿಗೆ ಸಂತಸ ತರಲಿದೆ ಎಂದರು.

ರೈಲು ನಿಲ್ದಾಣದ ಆವರಣದಲ್ಲಿ ವಿಮಾನ ನಿಲ್ದಾಣದಲ್ಲಿರುವ ಬೆಳಕು ವಿನ್ಯಾಸ ಮಾದರಿಯಲ್ಲಿ ಎಲ್‍ಇಡಿ ಬಲ್ಬ್‍ಗಳನ್ನು ಅಳವಡಿಸಲಾಗಿದ್ದು, ಇದರಿಂದ ಬಹಳಷ್ಟು ವಿದ್ಯುತ್ ಉಳಿತಾಯವಾಗಲಿದೆ. ಹಾಗೂ ರೈಲು ನಿಲ್ದಾಣದ ನೂತನ ಕಟ್ಟಡದ ಮೇಲೆ ಇನ್ನೊಂದು ಮಹಡಿಯನ್ನು ನಿರ್ಮಿಸಿ, ಅಭಿವೃದ್ಧಿಗೊಳಿಸುವ ಬಗ್ಗೆ ಪ್ರಸ್ತಾಪ ಸಲ್ಲಿಸಲಾಗಿದೆ.

ಮುಂಬರುವ ದಿನಗಳಲ್ಲಿ ಅದಕ್ಕೂ ಮಂಜೂರಾತಿ ದೊರೆಯಲಿದೆ. ಕಟ್ಟಡ ನಿರ್ಮಾಣದ ನಂತರ ಮಹಡಿ ಮೇಲೆ ಸೌರ ಫಲಕಗಳನ್ನು ಅಳವಡಿಸಿ ನಿಲ್ದಾಣಕ್ಕೆ ಅಗತ್ಯ ವಿದ್ಯುತ್ ಉತ್ಪಾದಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದೇವೆ ಎಂದರು.ರೈಲು ನಿಲ್ದಾಣದ ಪಕ್ಕದ ಉಪವಿಭಾಗಾಧಿಕಾರಿ ಕಚೇರಿಯ ಜಾಗವನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲು ಉದ್ದೇಶಿಸಲಾಗಿದೆ.

ಈ ಜಾಗಕ್ಕೆ ಪರ್ಯಾಯವಾಗಿ ರೈಲ್ವೆ ಇಲಾಖೆಯು ದೊಡ್ಡಬಾತಿ ಬಳಿ ಜಾಗ ನೀಡಲಿದೆ. ಉಪವಿಭಾಗಾಧಿಕಾರಿ ಕಚೇರಿ ನಿರ್ಮಿಸಲು ರೂ. 5 ಕೋಟಿ ಅನುದಾನವನ್ನು ಮುಖ್ಯಮಂತ್ರಿ ಮಂಜೂರು ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲಿ ನೂತನ ಕಚೇರಿಯನ್ನು ನಿರ್ಮಿಸಲಾಗುವುದು. ಈಗಿರುವ ಉಪವಿಭಾಗಾಧಿಕಾರಿ ಕಚೇರಿ ಜಾಗದಲ್ಲಿ ರೈಲು ನಿಲ್ದಾಣಕ್ಕೆ ಪ್ರವೇಶ ದ್ವಾರ ನಿರ್ಮಿಸಲಾಗುವುದು. ಜೊತೆಗೆ ಪಾರ್ಕಿಂಗ್ ಸ್ಥಳವನ್ನಾಗಿ ಅಭಿವೃದ್ಧಿಪಡಿಸಲಾಗುವುದು.

ಬಾಣಾವರದಿಂದ ದಾವಣಗೆರೆ ಮಾರ್ಗವಾಗಿ ಹುಬ್ಬಳ್ಳಿವರೆಗೆ ರೈಲ್ವೆ ಲೈನ್ ಎಲೆಕ್ಟ್ರಿಫಿಕೇಷನ್ ಗಾಗಿ 160 ಕೋಟಿ ವೆಚ್ಚದಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ಈಗಾಗಲೇ ದೇಶದಲ್ಲಿರುವ ಬಹುತೇಕ ಎಲ್ಲಾ ಮಾನವರಹಿತ ಲೆವೆಲ್ ಕ್ರಾಸಿಂಗ್‍ಗಳನ್ನು ತೆರವುಗೊಳಿಸಲಾಗಿದೆ. ಹಾಗೂ ಆತ್ಮನಿರ್ಭರ ಭಾರತ್ ಇದರ ಉದ್ದೇಶಗಳನ್ನು ಈಡೇರಿಸಲು ರೈಲ್ವೆ ಇಲಾಖೆ ಈಗಲೂ ಬದ್ಧವಾಗಿದೆ ಎಂದರು.

2012-13 ರಲ್ಲಿ ಪ್ರತಿದಿನ 4 ರಿಂದ 5 ಕಿ.ಮೀ ರೈಲ್ವೆ ಟ್ರ್ಯಾಕ್ ನಿರ್ಮಾಣ ಆಗ್ತಾ ಇತ್ತು. ಆದರೆ ಈಗ ಪ್ರತಿನಿತ್ಯ ಸರಾಸರಿ 23 ಕಿ.ಮೀ. ರೈಲ್ವೆ ಟ್ರ್ಯಾಕ್ ನಿರ್ಮಾಣ ಆಗುತ್ತಿದೆ. ಅಲ್ಲದೇ ಪ್ರಧಾನಮಂತ್ರಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 30 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸುಮಾರು 503 ಯೋಜನೆಗಳನ್ನು ಪೂರ್ಣಗೊಳಿಸುವ ಹಂತಕ್ಕೆ ತರಲಾಗಿದೆ.

ಹರಿಹರ ನಗರದ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿದ್ದೇನೆ. ಹರಿಹರ ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಕೋವಿಡ್ ಕಾರಣಕ್ಕೆ ಉಂಟಾದ ಆರ್ಥಿಕ ಸಂಕಷ್ಟದಿಂದ ಮಂಜೂರಾತಿ ಸಿಗಲು ವಿಳಂಬವಾಗಿದೆ. ಮುಂಬರುವ ದಿನಗಳಲ್ಲಿ ಮಂಜೂರಾತಿ ಸಿಗಲಿದೆ ಎಂದರು.

ಹಾಗೂ ಹರಿಹರದ ಅಮರಾವತಿ ಬಳಿ ರೈಲ್ವೆ ನಿಲ್ದಾಣಕ್ಕೆ 30 ಕೋಟಿ ವೆಚ್ಚದಲ್ಲಿ ಮೇಲು ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು ಶೀಘ್ರದಲ್ಲಿ ಉದ್ಘಾಟನೆ ಮಾಡಲಾಗುವುದು ಎಂದರು.

ಹನುಮನಹಳ್ಳಿ ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆಯ ವ್ಯವಸ್ಥೆಯನ್ನು ಈ ಹಿಂದಿನಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ. ಜಿ.ಎಂ.ಐ.ಟಿ ಕಾಲೇಜಿನ ಸಮೀಪದ ಕರೂರಿನಲ್ಲಿನ 203ನೇ ರೈಲ್ವೆ ಗೇಟ್ ಬಳಿ ಜುಲೈನಲ್ಲಿ ರೈಲ್ವೆ ಕೆಳಸೇತುವೆ ನಿರ್ಮಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ.

ರೂ. 15 ಕೋಟಿ ವೆಚ್ಚದಲ್ಲಿ ರೈಲು ನಿಲ್ದಾಣದ ಆಧುನೀಕರಣ, ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಹಾಗೂ ರೂ. 5 ಕೋಟಿ ವೆಚ್ಚದಲ್ಲಿ ಎಸ್ಕಲೇಟರ್ (ಚಲಿಸುವ ಮೆಟ್ಟಿಲು) ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಅದರಲ್ಲೂ ಎಸ್ಕಲೇಟರ್ ರಾಜ್ಯದ ಬೆಳಗಾವಿ, ಹುಬ್ಬಳ್ಳಿ, ಮಂಗಳೂರು, ಬೆಂಗಳೂರು, ಮೈಸೂರು ಬಿಟ್ಟರೆ ಇನ್ನಿತರ ಯಾವುದೇ ಜಿಲ್ಲೆಗಳಲ್ಲೂ ಇರಲಿಲ್ಲ. ಇದೀಗ ದಾವಣಗೆರೆಯಲ್ಲಿ ಆಗಿರುವುದು ಸಂತಸಕರ ಎಂದರು.

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದರುವ ಅಶೋಕ ರೈಲ್ವೆ ಗೇಟ್ ಬಳಿ ಅಂಡರ್ ಪಾಸ್ ನಿರ್ಮಿಸಲು ಈಗಾಗಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಖಾಸಗಿ ಜಮೀನಿನ ಮಾಲೀಕರೊಂದಿಗೆ ಜಿಲ್ಲಾಡಳಿತ ಮಾತುಕತೆ ನಡೆಸಿದ್ದು, ಶೀಘ್ರವೇ ಪರ್ಯಾಯ ಜಾಗವನ್ನು ಕೊಡುವ ಮೂಲಕ ಕಾಮಗಾರಿಗೆ ಚಾಲನೆ ನೀಡಲಾಗುವುದು. ಹರಿಹರದಲ್ಲಿ 47 ಎಕರೆ ಜಮೀನಿನಲ್ಲಿ ಎಥನಾಲ್ ಘಟಕವು ಶೀಘ್ರದಲ್ಲೆ ಸ್ಥಾಪನೆಯಾಗಲಿದೆ.

ಮಾಯಕೊಂಡದಿಂದ ಹರಿಹರದವರೆಗೆ ಈಗಾಗಲೇ ರೂ.250 ಕೋಟಿ ವೆಚ್ಚದಲ್ಲಿ ಡಬ್ಲಿಂಗ್ ಕಾಮಗಾರಿ ಪೂರ್ಣಗೊಂಡಿದೆ. ಮೆಗಾ ಜವಳಿ ಪಾರ್ಕ್ ನಿರ್ಮಿಸಲು 1038 ಎಕರೆ ಜಮೀನಿನ ಅಗತ್ಯವಿದ್ದು, ಇಲ್ಲಿಯವರೆಗೂ ಜಮೀನು ಸ್ವಾಧೀನ ನಡೆದಿಲ್ಲ. ಯಾವುದೇ ಕಾಮಗಾರಿ, ಯೋಜನೆಗಳನ್ನು ಪರಿಪೂರ್ಣಮಾಡಬೇಕೆಂದರೆ ಜಾಗದ ಕೊರತೆ ಇದೆ ಎಂದ ಅವರು ವೇಗವಾಗಿ ಬೆಳೆಯುತ್ತಿರುವ ನಗರಕ್ಕೆ ತಕ್ಕಂತೆ ವಿಮಾನ ನಿಲ್ದಾಣ ಆರಂಭಿಸಲು ಶ್ರಮಿಸಲಾಗುವುದು ಎಂದು ತಿಳಿಸಿದರು.

ಪ್ರಪಂಚದಲ್ಲಿಯೇ ನಾಲ್ಕನೇ ಅತಿದೊಡ್ಡ ರೈಲ್ವೆ ನೆಟ್‍ವರ್ಕ್ ಎಂಬ ಖ್ಯಾತಿಯನ್ನು ನಮ್ಮ ಇಂಡಿಯನ್ ರೈಲ್ವೆ ಹೊಂದಿದೆ. ಈ ನಿಟ್ಟಿನಲ್ಲಿ ಸ್ಮಾರ್ಟ್ ಸಿಟಿಗೆ ತಕ್ಕ ಹಾಗೆ ಸ್ಮಾರ್ಟ್ ರೈಲ್ವೆ ನಿಲ್ದಾಣ ಆಗಿರುವುದು ಸಂತೋಷವಾಗಿದೆ. ಪ್ರಸ್ತುತ ದೇಶದ ಶೇಕಡ 33 ರಷ್ಟು ಸರಕು ಸಾಗಾಟ ರೈಲ್ವೆ ಮೂಲಕ ನಡೆಯುತ್ತಿದೆ. ಇದನ್ನು 2030 ರ ವೇಳೆಗೆ ಶೇಕಡ 50 ಕ್ಕೆ ಮುಟ್ಟಿಸುವ ಗುರಿಯನ್ನು ರೈಲ್ವೆ ಇಲಾಖೆ ಹೊಂದಿದೆ.

ಬೇಡಿಕೆಗೆ ಮುಂಚೆಯೇ ಮೂಲಸೌಕರ್ಯ ಸಾಮಥ್ರ್ಯವನ್ನು ಸೃಷ್ಟಿಸುವುದು ರಾಷ್ಟ್ರೀಯ ರೈಲ್ವೆ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, 2030 ರೊಳಗೆ ದೇಶಾದ್ಯಂತ ಬ್ರಾಡ್‍ಗೇಜ್‍ನ್ನು ಸಂಪೂರ್ಣ ಎಲೆಕ್ಟ್ರಿಫಿಕೇಷನ್ ಮಾಡುವ ಗುರಿಯನ್ನು ರೈಲ್ವೆ ಇಲಾಖೆ ಹೊಂದಿದೆ. ಈಗಾಗಲೇ ಶೇಕಡ 58 ರಷ್ಟು ಎಲೆಕ್ಟ್ರಿಫಿಕೇಶನ್ ಕಾರ್ಯ ಪೂರ್ಣಗೊಂಡಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಹಾಪೌರರಾದ ಎಸ್.ಟಿ.ವೀರೇಶ್, ದೂಡ ಅಧ್ಯಕ್ಷರಾದ ಶಿವಕುಮಾರ್, ವಿಭಾಗೀಯ ಮುಖ್ಯ ವ್ಯವಸ್ಥಾಪಕರಾದ ರಾಹುಲ್ ಅಗರ್‍ವಾಲ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಮುಖಂಡರಾದ ಯಶವಂತರಾವ್ ಜಾದವ್, ವೀರೇಶ್ ಹನಗವಾಡಿ, ಲೋಕಿಕೆರೆ ನಾಗರಾಜ್, ಸುಧಾ ಜಯಪ್ರಕಾಶ್, ಲಿಂಗರಾಜ್ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending