Connect with us

ದಿನದ ಸುದ್ದಿ

ದಾವಣಗೆರೆ | 17.50 ಕೋಟಿಯ ಸುಸಜ್ಜಿತ ರೈಲ್ವೆ ನಿಲ್ದಾಣ, ಡಿಸಿಎಂ ಬಡಾವಣೆಯಲ್ಲಿ ಆಧುನಿಕ ರೈಲ್ವೆ ಕೆಳ ಸೇತುವೆ ಹಾಗೂ ಸ್ಮಾರ್ಟ್ ಸಿಟಿಗೆ ಸ್ಮಾರ್ಟ್ ರೈಲ್ವೆ ನಿಲ್ದಾಣ : ಜಿ.ಎಂ.ಸಿದ್ದೇಶ್ವರ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಯಡಿ ಸೇರ್ಪಡೆ ಆದ ಮೇಲೆ ಸ್ಮಾರ್ಟ್ ಸಿಟಿಗೆ ಸರಿಹೊಂದುವ ರೈಲ್ವೆ ನಿಲ್ದಾಣ ಆಗಬೇಕು ಹಾಗೂ ತಿಂಗಳಲ್ಲಿ ಸರಾಸರಿ 1.5 ಕೋಟಿಯಷ್ಟು ವರಮಾನ ಬರುವ ದಾವಣಗೆರೆ ರೈಲ್ವೆ ನಿಲ್ದಾಣ ಅತ್ಯಾಧುನಿಕ ಕಟ್ಟಡ ಹೊಂದಬೇಕು ಎಂಬ ನನ್ನ ಆಶಯ ಇಂದು ಈಡೇರಿದೆ ಎಂದು ಸಂಸದರಾದ ಜಿ.ಎಂ.ಸಿದ್ದೇಶ್ವರ ತಿಳಿಸಿದರು.

ಡಿಸಿಎಂ ಬಡಾವಣೆ ಬಳಿಯ ನವೀಕೃತ ರೈಲ್ವೆ ಕೆಳ ಸೇತುವೆ (ಯುಆರ್‍ಬಿ) ಹಾಗೂ ರೈಲ್ವೆ ನಿಲ್ದಾಣದ ನೂತನ ಕಟ್ಟಡವನ್ನು ಉದ್ಘಾಟಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನನ್ನ ಲೋಕಸಭಾ ಅವಧಿಯಲ್ಲಿ ನನಗೆ ತೃಪ್ತಿ ನೀಡಿದ ಕೆಲಸಗಳಲ್ಲಿ ರೈಲ್ವೆ ನಿಲ್ದಾಣ ನಿರ್ಮಾಣವೂ ಕೂಡ ಒಂದು.

ಇದನ್ನೂ ಓದಿ | ಭಾರತದಲ್ಲಿ 89,129 ಹೊಸ ಕೋವಿಡ್ ಪ್ರಕರಣಗಳು ದಾಖಲು

ಕೋವಿಡ್ ಆರ್ಥಿಕ ಸಂಕಷ್ಟದ ನಡುವೆಯೂ ಕೂಡ ರೈಲ್ವೆ ಇಲಾಖೆಯ ಸಾಮಥ್ರ್ಯ ಸ್ವಲ್ಪವೂ ಕಡಿಮೆಯಾಗಿಲ್ಲ. ಕೋವಿಡ್ ನಿಂದ ಲಾಕ್‍ಡೌನ್ ಆದ ಸಮಯದಲ್ಲಿ ಹಗಲಿರುಳೆನ್ನದೇ ಕಾಯನಿರ್ವಹಿಸಿದ್ದ ರೈಲ್ವೆ ನೌಕರರಿಗೆ ಅಭಿನಂದಿಸಿದರು. ನಗರದಲ್ಲಿ ರೂ. 17.50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನವೀಕೃತ ರೈಲ್ವೆ ನಿಲ್ದಾಣವನ್ನು ಮುಂದಿನ 2 ವರ್ಷಗಳಲ್ಲಿ ಜಿ ಪ್ಲಸ್ 2 ಮಾದರಿ ಕಟ್ಟಡವಾಗಿ ಪರಿವರ್ತಿಸುವ ಗುರಿ ಹೊಂದಿದ್ದೇವೆ ಎಂದರು.

ನಗರದಲ್ಲಿ ಖಾಸಗಿ ಬಸ್ ನಿಲ್ದಾಣ ಕಾಮಗಾರಿ ಆರಂಭವಾಗಿ ಇನ್ನೂ ಮುಗಿದಿಲ್ಲ. ಆದರೆ ರೈಲ್ವೆ ನಿಲ್ದಾಣ ಕೈಗೆತ್ತಿಕೊಂಡ ಒಂದು ವರ್ಷದಲ್ಲೇ ಪೂರ್ಣಗೊಳಿಸಲಾಗಿದೆ. ಇದಕ್ಕೆ ಕೇಂದ್ರದ ಮಾಜಿ ಸಚಿವ ಸುರೇಶ್ ಅಂಗಡಿ ಕಾರಣೀಭೂತರು ಎಂದು ಅವರನ್ನು ಸ್ಮರಿಸಿದರು.

ರೈಲ್ವೆ ನಿಲ್ದಾಣವನ್ನು ಕಲಾತ್ಮಕವಾಗಿ ವಿನ್ಯಾಸಗೊಳಿಸಲಾಗಿದೆ. ಇಲ್ಲಿ ಫುಟ್‍ಓವರ್ ಬ್ರಿಡ್ಜ್, ವಿಶಾಲವಾದ ಫ್ಲಾಟ್‍ಫಾರ್ಮ್ ಶೆಲ್ಟರ್, ಸ್ಟೇಷನ್ ಕಟ್ಟಡ, ಪಾರ್ಕಿಂಗ್ ಹಾಗೂ ಗಾರ್ಡನ್ ವ್ಯವಸ್ಥೆ, ಲಿಫ್ಟ್, ಪಿ.ಆರ್‍ಎಸ್ ಸೌಲಭ್ಯ, ವಿಐಪಿ ಲಾಡ್ಜ್, ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಕಾಯುವ ಸಭಾಂಗಣ, ಅತ್ಯಾಧುನಿಕ ಮಿಸಲಾತಿ ವ್ಯವಸ್ಥೆ, ಬಸ್‍ಬೇ, ವಿಶ್ರಾಂತಿ ಕೊಠಡಿ ಸೇರಿದಂತೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ. ಹಾಗೂ ರೈಲ್ವೆ ಪ್ಲಾಟ್‍ಫಾರ್ಮ್ ಟಿಕೆಟ್ ಅನ್ನು ರೂ.10 ಕ್ಕೆ ಸೀಮಿತಗೊಳಿಸಲಾಗಿದೆ ಎಂದು ಸೂಚಿಸಿದರು.

ರೈಲ್ವೆ ಕಟ್ಟಡದ ಹೊರಗಡೆ ವಿಶಾಲವಾದ ಆಗಮನ ಮತ್ತು ನಿರ್ಗಮನ ರಸ್ತೆಗಳು, ವಾಹನ ನಿಲುಗಡೆ ಪ್ರದೇಶ, ಸೆಲ್ಪಿ ಪಾಯಿಂಟ್ (ಐ ಲವ್ ಡಿವಿಜಿ), ಆಟೋ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣದ ಮುಖ್ಯ ಪ್ರವೇಶ ದ್ವಾರ ಎದುರಿಗೆ ನಿರ್ಮಿಸಿರುವ 100 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಹಾರುತ್ತಿರುವ ಬೃಹತ್ ರಾಷ್ಟ್ರಧ್ವಜ, ಸುಂದರವಾದ ಗೋಡೆ ನಿರ್ಮಾಣ, ಟಿಕೇಟ್ ಕೌಂಟರ್, ಅತ್ಯಧುನಿಕ ಶೌಚಾಲಯ ಸೇರಿದಂತೆ ವಿವಿಧ ಸವಲತ್ತುಗಳು ಪ್ರಯಾಣಿಕರಿಗೆ ಸಂತಸ ತರಲಿದೆ ಎಂದರು.

ರೈಲು ನಿಲ್ದಾಣದ ಆವರಣದಲ್ಲಿ ವಿಮಾನ ನಿಲ್ದಾಣದಲ್ಲಿರುವ ಬೆಳಕು ವಿನ್ಯಾಸ ಮಾದರಿಯಲ್ಲಿ ಎಲ್‍ಇಡಿ ಬಲ್ಬ್‍ಗಳನ್ನು ಅಳವಡಿಸಲಾಗಿದ್ದು, ಇದರಿಂದ ಬಹಳಷ್ಟು ವಿದ್ಯುತ್ ಉಳಿತಾಯವಾಗಲಿದೆ. ಹಾಗೂ ರೈಲು ನಿಲ್ದಾಣದ ನೂತನ ಕಟ್ಟಡದ ಮೇಲೆ ಇನ್ನೊಂದು ಮಹಡಿಯನ್ನು ನಿರ್ಮಿಸಿ, ಅಭಿವೃದ್ಧಿಗೊಳಿಸುವ ಬಗ್ಗೆ ಪ್ರಸ್ತಾಪ ಸಲ್ಲಿಸಲಾಗಿದೆ.

ಮುಂಬರುವ ದಿನಗಳಲ್ಲಿ ಅದಕ್ಕೂ ಮಂಜೂರಾತಿ ದೊರೆಯಲಿದೆ. ಕಟ್ಟಡ ನಿರ್ಮಾಣದ ನಂತರ ಮಹಡಿ ಮೇಲೆ ಸೌರ ಫಲಕಗಳನ್ನು ಅಳವಡಿಸಿ ನಿಲ್ದಾಣಕ್ಕೆ ಅಗತ್ಯ ವಿದ್ಯುತ್ ಉತ್ಪಾದಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದೇವೆ ಎಂದರು.ರೈಲು ನಿಲ್ದಾಣದ ಪಕ್ಕದ ಉಪವಿಭಾಗಾಧಿಕಾರಿ ಕಚೇರಿಯ ಜಾಗವನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲು ಉದ್ದೇಶಿಸಲಾಗಿದೆ.

ಈ ಜಾಗಕ್ಕೆ ಪರ್ಯಾಯವಾಗಿ ರೈಲ್ವೆ ಇಲಾಖೆಯು ದೊಡ್ಡಬಾತಿ ಬಳಿ ಜಾಗ ನೀಡಲಿದೆ. ಉಪವಿಭಾಗಾಧಿಕಾರಿ ಕಚೇರಿ ನಿರ್ಮಿಸಲು ರೂ. 5 ಕೋಟಿ ಅನುದಾನವನ್ನು ಮುಖ್ಯಮಂತ್ರಿ ಮಂಜೂರು ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲಿ ನೂತನ ಕಚೇರಿಯನ್ನು ನಿರ್ಮಿಸಲಾಗುವುದು. ಈಗಿರುವ ಉಪವಿಭಾಗಾಧಿಕಾರಿ ಕಚೇರಿ ಜಾಗದಲ್ಲಿ ರೈಲು ನಿಲ್ದಾಣಕ್ಕೆ ಪ್ರವೇಶ ದ್ವಾರ ನಿರ್ಮಿಸಲಾಗುವುದು. ಜೊತೆಗೆ ಪಾರ್ಕಿಂಗ್ ಸ್ಥಳವನ್ನಾಗಿ ಅಭಿವೃದ್ಧಿಪಡಿಸಲಾಗುವುದು.

ಬಾಣಾವರದಿಂದ ದಾವಣಗೆರೆ ಮಾರ್ಗವಾಗಿ ಹುಬ್ಬಳ್ಳಿವರೆಗೆ ರೈಲ್ವೆ ಲೈನ್ ಎಲೆಕ್ಟ್ರಿಫಿಕೇಷನ್ ಗಾಗಿ 160 ಕೋಟಿ ವೆಚ್ಚದಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ಈಗಾಗಲೇ ದೇಶದಲ್ಲಿರುವ ಬಹುತೇಕ ಎಲ್ಲಾ ಮಾನವರಹಿತ ಲೆವೆಲ್ ಕ್ರಾಸಿಂಗ್‍ಗಳನ್ನು ತೆರವುಗೊಳಿಸಲಾಗಿದೆ. ಹಾಗೂ ಆತ್ಮನಿರ್ಭರ ಭಾರತ್ ಇದರ ಉದ್ದೇಶಗಳನ್ನು ಈಡೇರಿಸಲು ರೈಲ್ವೆ ಇಲಾಖೆ ಈಗಲೂ ಬದ್ಧವಾಗಿದೆ ಎಂದರು.

2012-13 ರಲ್ಲಿ ಪ್ರತಿದಿನ 4 ರಿಂದ 5 ಕಿ.ಮೀ ರೈಲ್ವೆ ಟ್ರ್ಯಾಕ್ ನಿರ್ಮಾಣ ಆಗ್ತಾ ಇತ್ತು. ಆದರೆ ಈಗ ಪ್ರತಿನಿತ್ಯ ಸರಾಸರಿ 23 ಕಿ.ಮೀ. ರೈಲ್ವೆ ಟ್ರ್ಯಾಕ್ ನಿರ್ಮಾಣ ಆಗುತ್ತಿದೆ. ಅಲ್ಲದೇ ಪ್ರಧಾನಮಂತ್ರಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 30 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸುಮಾರು 503 ಯೋಜನೆಗಳನ್ನು ಪೂರ್ಣಗೊಳಿಸುವ ಹಂತಕ್ಕೆ ತರಲಾಗಿದೆ.

ಹರಿಹರ ನಗರದ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿದ್ದೇನೆ. ಹರಿಹರ ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಕೋವಿಡ್ ಕಾರಣಕ್ಕೆ ಉಂಟಾದ ಆರ್ಥಿಕ ಸಂಕಷ್ಟದಿಂದ ಮಂಜೂರಾತಿ ಸಿಗಲು ವಿಳಂಬವಾಗಿದೆ. ಮುಂಬರುವ ದಿನಗಳಲ್ಲಿ ಮಂಜೂರಾತಿ ಸಿಗಲಿದೆ ಎಂದರು.

ಹಾಗೂ ಹರಿಹರದ ಅಮರಾವತಿ ಬಳಿ ರೈಲ್ವೆ ನಿಲ್ದಾಣಕ್ಕೆ 30 ಕೋಟಿ ವೆಚ್ಚದಲ್ಲಿ ಮೇಲು ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು ಶೀಘ್ರದಲ್ಲಿ ಉದ್ಘಾಟನೆ ಮಾಡಲಾಗುವುದು ಎಂದರು.

ಹನುಮನಹಳ್ಳಿ ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆಯ ವ್ಯವಸ್ಥೆಯನ್ನು ಈ ಹಿಂದಿನಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ. ಜಿ.ಎಂ.ಐ.ಟಿ ಕಾಲೇಜಿನ ಸಮೀಪದ ಕರೂರಿನಲ್ಲಿನ 203ನೇ ರೈಲ್ವೆ ಗೇಟ್ ಬಳಿ ಜುಲೈನಲ್ಲಿ ರೈಲ್ವೆ ಕೆಳಸೇತುವೆ ನಿರ್ಮಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ.

ರೂ. 15 ಕೋಟಿ ವೆಚ್ಚದಲ್ಲಿ ರೈಲು ನಿಲ್ದಾಣದ ಆಧುನೀಕರಣ, ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಹಾಗೂ ರೂ. 5 ಕೋಟಿ ವೆಚ್ಚದಲ್ಲಿ ಎಸ್ಕಲೇಟರ್ (ಚಲಿಸುವ ಮೆಟ್ಟಿಲು) ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಅದರಲ್ಲೂ ಎಸ್ಕಲೇಟರ್ ರಾಜ್ಯದ ಬೆಳಗಾವಿ, ಹುಬ್ಬಳ್ಳಿ, ಮಂಗಳೂರು, ಬೆಂಗಳೂರು, ಮೈಸೂರು ಬಿಟ್ಟರೆ ಇನ್ನಿತರ ಯಾವುದೇ ಜಿಲ್ಲೆಗಳಲ್ಲೂ ಇರಲಿಲ್ಲ. ಇದೀಗ ದಾವಣಗೆರೆಯಲ್ಲಿ ಆಗಿರುವುದು ಸಂತಸಕರ ಎಂದರು.

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದರುವ ಅಶೋಕ ರೈಲ್ವೆ ಗೇಟ್ ಬಳಿ ಅಂಡರ್ ಪಾಸ್ ನಿರ್ಮಿಸಲು ಈಗಾಗಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಖಾಸಗಿ ಜಮೀನಿನ ಮಾಲೀಕರೊಂದಿಗೆ ಜಿಲ್ಲಾಡಳಿತ ಮಾತುಕತೆ ನಡೆಸಿದ್ದು, ಶೀಘ್ರವೇ ಪರ್ಯಾಯ ಜಾಗವನ್ನು ಕೊಡುವ ಮೂಲಕ ಕಾಮಗಾರಿಗೆ ಚಾಲನೆ ನೀಡಲಾಗುವುದು. ಹರಿಹರದಲ್ಲಿ 47 ಎಕರೆ ಜಮೀನಿನಲ್ಲಿ ಎಥನಾಲ್ ಘಟಕವು ಶೀಘ್ರದಲ್ಲೆ ಸ್ಥಾಪನೆಯಾಗಲಿದೆ.

ಮಾಯಕೊಂಡದಿಂದ ಹರಿಹರದವರೆಗೆ ಈಗಾಗಲೇ ರೂ.250 ಕೋಟಿ ವೆಚ್ಚದಲ್ಲಿ ಡಬ್ಲಿಂಗ್ ಕಾಮಗಾರಿ ಪೂರ್ಣಗೊಂಡಿದೆ. ಮೆಗಾ ಜವಳಿ ಪಾರ್ಕ್ ನಿರ್ಮಿಸಲು 1038 ಎಕರೆ ಜಮೀನಿನ ಅಗತ್ಯವಿದ್ದು, ಇಲ್ಲಿಯವರೆಗೂ ಜಮೀನು ಸ್ವಾಧೀನ ನಡೆದಿಲ್ಲ. ಯಾವುದೇ ಕಾಮಗಾರಿ, ಯೋಜನೆಗಳನ್ನು ಪರಿಪೂರ್ಣಮಾಡಬೇಕೆಂದರೆ ಜಾಗದ ಕೊರತೆ ಇದೆ ಎಂದ ಅವರು ವೇಗವಾಗಿ ಬೆಳೆಯುತ್ತಿರುವ ನಗರಕ್ಕೆ ತಕ್ಕಂತೆ ವಿಮಾನ ನಿಲ್ದಾಣ ಆರಂಭಿಸಲು ಶ್ರಮಿಸಲಾಗುವುದು ಎಂದು ತಿಳಿಸಿದರು.

ಪ್ರಪಂಚದಲ್ಲಿಯೇ ನಾಲ್ಕನೇ ಅತಿದೊಡ್ಡ ರೈಲ್ವೆ ನೆಟ್‍ವರ್ಕ್ ಎಂಬ ಖ್ಯಾತಿಯನ್ನು ನಮ್ಮ ಇಂಡಿಯನ್ ರೈಲ್ವೆ ಹೊಂದಿದೆ. ಈ ನಿಟ್ಟಿನಲ್ಲಿ ಸ್ಮಾರ್ಟ್ ಸಿಟಿಗೆ ತಕ್ಕ ಹಾಗೆ ಸ್ಮಾರ್ಟ್ ರೈಲ್ವೆ ನಿಲ್ದಾಣ ಆಗಿರುವುದು ಸಂತೋಷವಾಗಿದೆ. ಪ್ರಸ್ತುತ ದೇಶದ ಶೇಕಡ 33 ರಷ್ಟು ಸರಕು ಸಾಗಾಟ ರೈಲ್ವೆ ಮೂಲಕ ನಡೆಯುತ್ತಿದೆ. ಇದನ್ನು 2030 ರ ವೇಳೆಗೆ ಶೇಕಡ 50 ಕ್ಕೆ ಮುಟ್ಟಿಸುವ ಗುರಿಯನ್ನು ರೈಲ್ವೆ ಇಲಾಖೆ ಹೊಂದಿದೆ.

ಬೇಡಿಕೆಗೆ ಮುಂಚೆಯೇ ಮೂಲಸೌಕರ್ಯ ಸಾಮಥ್ರ್ಯವನ್ನು ಸೃಷ್ಟಿಸುವುದು ರಾಷ್ಟ್ರೀಯ ರೈಲ್ವೆ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, 2030 ರೊಳಗೆ ದೇಶಾದ್ಯಂತ ಬ್ರಾಡ್‍ಗೇಜ್‍ನ್ನು ಸಂಪೂರ್ಣ ಎಲೆಕ್ಟ್ರಿಫಿಕೇಷನ್ ಮಾಡುವ ಗುರಿಯನ್ನು ರೈಲ್ವೆ ಇಲಾಖೆ ಹೊಂದಿದೆ. ಈಗಾಗಲೇ ಶೇಕಡ 58 ರಷ್ಟು ಎಲೆಕ್ಟ್ರಿಫಿಕೇಶನ್ ಕಾರ್ಯ ಪೂರ್ಣಗೊಂಡಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಹಾಪೌರರಾದ ಎಸ್.ಟಿ.ವೀರೇಶ್, ದೂಡ ಅಧ್ಯಕ್ಷರಾದ ಶಿವಕುಮಾರ್, ವಿಭಾಗೀಯ ಮುಖ್ಯ ವ್ಯವಸ್ಥಾಪಕರಾದ ರಾಹುಲ್ ಅಗರ್‍ವಾಲ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಮುಖಂಡರಾದ ಯಶವಂತರಾವ್ ಜಾದವ್, ವೀರೇಶ್ ಹನಗವಾಡಿ, ಲೋಕಿಕೆರೆ ನಾಗರಾಜ್, ಸುಧಾ ಜಯಪ್ರಕಾಶ್, ಲಿಂಗರಾಜ್ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending