ದಿನದ ಸುದ್ದಿ
ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗ ಯೋಜನೆ ಪ್ರಗತಿ ಪರಿಶೀಲನೆ ; ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ
ಸುದ್ದಿದಿನ,ಚಿತ್ರದುರ್ಗ: ಬಯಲುಸೀಮೆಯ ಜನರ ಬಹುದಿನಗಳ ಬೇಡಿಕೆಯಾಗಿರುವ ದಾವಣಗೆರೆ-ಚಿತ್ರದುರ್ಗ-ತುಮಕೂರು 198 ಕಿ.ಮೀ. ಉದ್ದದ ನೂತನ ನೇರ ರೈಲ್ವೆ ಮಾರ್ಗ ಯೋಜನೆಗೆ 06 ತಿಂಗಳ ಒಳಗಾಗಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗ ಯೋಜನೆ ಕುರಿತು ಚಿತ್ರದುರ್ಗ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಶನಿವಾರ ಮೂರು ಜಿಲ್ಲೆಗಳ ಅಧಿಕಾರಿಗಳು ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದಾವಣಗೆರೆ-ಚಿತ್ರದುರ್ಗ-ತುಮಕೂರು ರೈಲ್ವೆ ಮಾರ್ಗವು ಈ ಭಾಗದ ಜನರ ಬಹು ಬೇಡಿಕೆಯ ಯೋಜನೆಯಾಗಿದ್ದು, 198 ಕಿ.ಮೀ. ರೈಲ್ವೆ ಮಾರ್ಗಕ್ಕೆ 1801 ಕೋಟಿ ರೂ. ವೆಚ್ಚದ ಅಂದಾಜು ಮಾಡಲಾಗಿದೆ. ಈ ಯೋಜನೆಗೆ ರಾಜ್ಯ ಸರ್ಕಾರ ಶೇ. 50 ರಷ್ಟು ವೆಚ್ಚ ಭರಿಸಿದರೆ, ಉಳಿದ ಶೇ. 50 ರಷ್ಟು ವೆಚ್ಚವನ್ನು ರೈಲ್ವೆ ಇಲಾಖೆ ಭರಿಸಲು ಸಿದ್ಧವಾಗಿದೆ. ಪ್ರಮುಖವಾಗಿ ಈ ಯೋಜನೆಗೆ ಭೂಮಿ ಸ್ವಾಧೀನ ಪಡಿಸಿ, ರೈಲ್ವೆ ಇಲಾಖೆಗೆ ಹಸ್ತಾಂತರಿಸುವ ಗುರುತರ ಹೊಣೆ ರಾಜ್ಯ ಸರ್ಕಾರದ ಮೇಲಿದ್ದು, ಇದುವರೆಗೂ ಪ್ರಗತಿ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ ಸರ್ಕಾರ 900 ಕೋಟಿ ಅನುದಾನವನ್ನು ಬಿಡುಗಡೆ ಮಾಡಬೇಕಿದೆ ಅಲ್ಲದೆ, ವಿಶೇಷ ಭೂಸ್ವಾಧೀನ ಅಧಿಕಾರಿಯ ಕಚೇರಿಯನ್ನು ಚಿತ್ರದುರ್ಗದಲ್ಲಿ ಸ್ಥಾಪಿಸಿ, ಅಧಿಕಾರಿಯನ್ನು ರಾಜ್ಯ ಸರ್ಕಾರ ನೇಮಿಸಬೇಕು.
ಪ್ರಸ್ತುತ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಮುಗಿದ ಕೂಡಲೆ, ಮುಖ್ಯಮಂತ್ರಿಗಳನ್ನು ಭೇಟಿಯಾಗಿ, ಅನುದಾನ ಬಿಡುಗಡೆ ಹಾಗೂ ವಿಶೇಷ ಭೂಸ್ವಾಧೀನ ಅಧಿಕಾರಿಯನ್ನು ನೇಮಿಸಲು ಕ್ರಮ ಕೈಗೊಳ್ಳಲಾಗುವುದು. ಲೋಕಸಭೆಗೆ ಚುನಾವಣೆ ಮಾರ್ಚ್ ವೇಳೆಗೆ ಘೋಷಣೆಯಾಗುವ ಸಂಭವ ಇರುವುದರಿಂದ, ಅಧಿಕಾರಿಗಳು ಭೂಸ್ವಾಧೀನ ಪ್ರಕ್ರಿಯೆಯನ್ನು ಕೂಡಲೆ ಪ್ರಾರಂಭಿಸಬೇಕು. ಭೂಮಿ ಕಳೆದುಕೊಳ್ಳುವ ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕು.
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ರೈಲ್ವೆ ಮಾರ್ಗ ಬರುವುದರಿಂದ ಭೂಮಿಯ ಬೆಲೆ ದುಬಾರಿ ಇರುತ್ತದೆ. ಭೂಸ್ವಾಧೀನ ಪ್ರಕ್ರಿಯೆ ವಿಳಂಬವಾದಷ್ಟೂ ಭೂಮಿಯ ಬೆಲೆ ಇನ್ನಷ್ಟು ಹೆಚ್ಚಾಗುತ್ತದೆ. ಇದರಿಂದ ಯೋಜನೆಯ ಮೇಲೆ ಅನಗತ್ಯ ಹೆಚ್ಚುವರಿ ವೆಚ್ಚ ತಗುಲುವ ಸಾಧ್ಯತೆ ಇರುತ್ತದೆ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವುದು, ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವುದು ಹಾಗೂ ವಿಶೇಷ ಭೂಸ್ವಾಧೀನ ಅಧಿಕಾರಿಯನ್ನು ನೇಮಿಸುವ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿಯ ಅಗತ್ಯವಿದೆ. ಹೀಗಾಗಿ ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ಭೂಸ್ವಾಧೀನ ಅಧಿಕಾರಿಗಳು ಕೂಡಲೆ ಆದ್ಯತೆ ಮೇರೆಗೆ ಕ್ರಮ ಕೈಗೊಂಡು 06 ತಿಂಗಳ ಒಳಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಭೂಸ್ವಾಧೀನ ಬಳಿಕವೂ ಪರಿಹಾರ ಹಣ ಪಾವತಿ ವಿಳಂಬವಾದಲ್ಲಿ, ಪರಿಹಾರ ಮೊತ್ತಕ್ಕೆ ನಿಯಮಾನುಸಾರ ಬಡ್ಡಿ ಸಹಿತ ರೈತರಿಗೆ ಪರಿಹಾರ ಪಾವತಿಸಬೇಕು ಎಂದು ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್ ಸೂಚನೆ ನೀಡಿದರು.
ರೈಲ್ವೆ ಇಲಾಖೆ ಸಿದ್ಧ : ರೈಲ್ವೆ ಇಲಾಖೆ ಬೆಂಗಳೂರಿನ ಮುಖ್ಯ ಇಂಜಿನಿಯರ್ ಅಲೋಕ್ ತಿವಾರಿ ಅವರು ಮಾತನಾಡಿ, ಯೋಜನೆಗೆ ಒಟ್ಟಾರೆ 2165 ಎಕರೆ ಭೂಮಿ ಅಗತ್ಯವಿದ್ದು, ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಕೈಗೊಂಡು, ಭೂಮಿಯನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಿದ ಕೂಡಲೆ, ಕಾಮಗಾರಿಯನ್ನು ಪ್ರಾರಂಭಿಸಿ, ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ರೈಲ್ವೆ ಇಲಾಖೆ ಸನ್ನದ್ಧವಾಗಿದೆ ಎಂದರು. ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಈ ಹಿಂದೆ ಸಮೀಕ್ಷೆಗಾಗಿ ಘೋಷಣೆಯಾಗಿದ್ದ ಚಿತ್ರದುರ್ಗ-ಜಗಳೂರು-ಕೊಟ್ಟೂರು ನೂತನ ರೈಲ್ವೆ ಮಾರ್ಗದ ಕುರಿತು ಪ್ರಸ್ತಾಪಿಸಿದ್ದಕ್ಕೆ ಉತ್ತರಿಸಿದ ರೈಲ್ವೆ ಅಧಿಕಾರಿಗಳು, 78 ಕಿ.ಮೀ. ಉದ್ದದ ಈ ಯೋಜನೆಗೆ 554 ಕೋಟಿ ರೂ. ಅಂದಾಜು ವೆಚ್ಚವಾಗಲಿದ್ದು, ಯೋಜನೆ ಕುರಿತು ವಿಸ್ತøತ ಪರಿಶೀಲನೆಯ ಬಳಿಕ, ಈ ಯೋಜನೆ ಅಷ್ಟೇನು ಲಾಭದಾಯಕ ಹಾಗೂ ಕಾರ್ಯಸಾಧುವಲ್ಲ ಎಂಬುದಾಗಿ ರೈಲ್ವೆ ಮಂಡಳಿ ಸ್ಪಷ್ಟಪಡಿಸಿದೆ ಎಂದರು.
ಯೋಜನೆ ಪ್ರಗತಿ ಪರಿಶೀಲನೆ : ಚಿತ್ರದುರ್ಗ ಉಪವಿಭಾಗಾಧಿಕಾರಿ ವಿಜಯಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ 101. 35 ಕಿ.ಮೀ. ರೈಲ್ವೆ ಮಾರ್ಗ ಬರಲಿದ್ದು, 1063 ಎಕರೆ ಭೂಮಿ ಅಗತ್ಯವಿದ್ದು, ಪರಿಹಾರಕ್ಕಾಗಿ 560 ಕೋಟಿ ರೂ. ಅಗತ್ಯವಿದೆ. ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿದ ಕೂಡಲೆ, ಪರಿಹಾರ ಮೊತ್ತ ಪಾವತಿಸಲು ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಬೇಕಾಗುತ್ತದೆ. ಭೂಸ್ವಾಧೀನ ಪ್ರಕ್ರಿಯೆ ತ್ವರಿತವಾಗಿ ಕೈಗೊಳ್ಳಲಾಗುವುದು ಎಂದರು. ದಾವಣಗೆರೆ ಜಿಲ್ಲೆಯ ಅಧಿಕಾರಿ ರೇಷ್ಮಾ ಅವರು ಮಾತನಾಡಿ, ಜಿಲ್ಲೆಯಲ್ಲಿ 31. 05 ಕಿ.ಮೀ. ರೈಲ್ವೆ ಮಾರ್ಗ ಬರಲಿದ್ದು, 237 ಎಕರೆ ಭೂಮಿಯನ್ನು ಸ್ವಾಧೀನಕ್ಕೆ ತೆಗೆದುಕೊಳ್ಳಬೇಕಿದೆ. 7 ಗ್ರಾಮಗಳಲ್ಲಿ ಕಂದಾಯ ಹಾಗೂ ರೈಲ್ವೆ ಇಲಾಖೆ ಜಂಟಿ ಅಳತೆ ಮಾಡಿದ್ದು, ಇನ್ನು 7 ಗ್ರಾಮಗಳಲ್ಲಿ ಜಂಟಿ ಅಳತೆ ಕಾರ್ಯ ಬಾಕಿ ಇದೆ. ಜನವರಿ ಒಳಗಾಗಿ ಈ ಕಾರ್ಯ ಪೂರ್ಣಗೊಳ್ಳುತ್ತದೆ. ಪರಿಹಾರ ಪಾವತಿಗೆ 100 ಕೋಟಿ ರೂ. ಅನುದಾನದ ಅಗತ್ಯವಿದೆ. ಈಗಾಗಲೆ 237 ಎಕರೆ ಭೂಸ್ವಾಧೀನಕ್ಕೆ 11(1) ಅಧಿಸೂಚನೆ ಹೊರಡಿಸಲಾಗಿದೆ. 6 ತಿಂಗಳ ಒಳಗಾಗಿ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು.
ತುಮಕೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ ಅವರು ಮಾತನಾಡಿ, ಜಿಲ್ಲೆಯಲ್ಲಿ 59 ಕಿ.ಮೀ. ರೈಲ್ವೆ ಮಾರ್ಗ ಬರಲಿದ್ದು, 796 ಎಕರೆ ಭೂಮಿ ಅಗತ್ಯವಿದೆ. ಈಗಾಗಲೆ 26 ಎಕರೆ ಸರ್ಕಾರಿ ಭೂಮಿ ಲಭ್ಯವಿದ್ದು, ಉಳಿದ 661 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಿದೆ. ಈ ಪೈಕಿ 136 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಕಾಮಗಾರಿ ಪ್ರಾರಂಭಗೊಂಡಿದೆ. ಭೂಮಿ ಸ್ವಾಧೀನ ಸಂಬಂಧ ಪರಿಹಾರ ಪಾವತಿಸಲು 360 ಕೋಟಿ ರೂ. ಅನುದಾನದ ಅಗತ್ಯವಿದೆ. 6 ತಿಂಗಳ ಒಳಗಾಗಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದರು.
ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಮಾತನಾಡಿ, ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗವು ಸಾರ್ವಜನಿಕ ಹಿತದೃಷ್ಟಿಯಿಂದ ಅತ್ಯಂತ ಉಪಯುಕ್ತ ಯೋಜನೆಯಾಗಿದೆ. ಈ ಮಾರ್ಗದಲ್ಲಿ ಬಸ್ ಪ್ರಯಾಣ ದರ ಹಾಗೂ ಸರಕು ಸಾಗಾಣಿಕೆ ದರ ಅತ್ಯಂತ ದುಬಾರಿ ಇದೆ. ನೂತನ ರೈಲ್ವೆ ಮಾರ್ಗ ಬೇಗ ಪೂರ್ಣಗೊಂಡಲ್ಲಿ, ಸಾರ್ವಜನಿಕರಿಗೆ ಪ್ರಯಾಣಕ್ಕೆ ಹಾಗೂ ಸರಕು ಸಾಗಾಣಿಕೆಯೂ ಮಿತವ್ಯಯವಾಗಲಿದೆ. ಜಿಲ್ಲೆಯಲ್ಲಿ ಭೂಸ್ವಾಧೀನ ಕಾರ್ಯ ಕುರಿತು ತಾವೇ ಖುದ್ದಾಗಿ ಆಸಕ್ತಿ ವಹಿಸಿ, ಬೇಗ ಪೂರ್ಣಗೊಳಿಸಲು ಪ್ರಾಮಾಣಿಕ ಯತ್ನ ಮಾಡುವುದಾಗಿ ಭರವಸೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಎನ್. ರವೀಂದ್ರ, ಅಪರ ಜಿಲ್ಲಾಧಿಕಾರಿ ಸಂಗಪ್ಪ ಸೇರಿದಂತೆ ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ ಕಂದಾಯ ಇಲಾಖೆ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ ವಿಧಾನಗಳು, ಹೊಸ ಸಂಶೋಧನಾ ಕಲ್ಪನೆಗಳ ಸೃಷ್ಟಿ ಹಾಗೂ ಟೈಯರ್-1 ಸಂಶೋಧನಾ ಲೇಖನಗಳ ಬರಹದ ಪ್ರಮುಖ ಅಂಶಗಳು” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ, ಗುಣಮಟ್ಟದ ಸಂಶೋಧನೆಯೇ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ ಮತ್ತು ಜಾಗತಿಕ ಮಾನ್ಯತೆಯ ಮೂಲಾಧಾರವಾಗಿದೆ ಎಂದು ಹೇಳಿದರು.
ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಬಾರದು, ಅದು ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡುವ ದಿಕ್ಕಿನಲ್ಲಿ ಸಾಗಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಪ್ರಕಟಣೆಗಳು ವಿಶ್ವವಿದ್ಯಾಲಯದ ಸಂಶೋಧನಾ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯು ಕೆ ಮಾಂಚೆಸ್ಟರ್ನ ‘ಯೂನಿವರ್ಸಿಟಿ ಆಫ್ ಸ್ಯಾಲ್ಫೋರ್ಡ್’ನ ಕಂಪ್ಯೂಟರ್ ಸೈನ್ಸ್ ಪ್ರಾಧ್ಯಾಪಕ ಡಾ. ಶಿವಕುಮಾರ ಪಿ. ಮಾತನಾಡಿ, ಸಂಶೋಧನಾ ಸಮಸ್ಯೆ ಗುರುತಿಸುವಿಕೆ, ಸಂಶೋಧನಾ ಅಂತರ (Research Gap) ಪತ್ತೆ, ಸಾಹಿತ್ಯ ಸಮೀಕ್ಷೆ, ಪ್ರಯೋಗಾತ್ಮಕ ವಿನ್ಯಾಸ (Experimental Design), ಟೈಯರ್-1 ಜರ್ನಲ್ ಲೇಖನ ಬರಹ, ಪ್ರಕಟಣಾ ನೈತಿಕತೆ ಹಾಗೂ ವಿಮರ್ಶಕರ ಅಭಿಪ್ರಾಯಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
“ಒಂದು ಉತ್ತಮ ಸಂಶೋಧನಾ ಲೇಖನದ ಯಶಸ್ಸು ಅದರ ಹೊಸತನ, ವೈಜ್ಞಾನಿಕ ವಿಧಾನ ಮತ್ತು ಸ್ಪಷ್ಟವಾದ ಪ್ರಸ್ತುತೀಕರಣದಲ್ಲಿ ಅಡಗಿದೆ. ಸಂಶೋಧಕರು ಗುಣಮಟ್ಟದ ಸಮಸ್ಯೆಗಳನ್ನು ಆಯ್ಕೆ ಮಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದ ಪ್ರಕಟಣೆಗೆ ಸಿದ್ಧರಾಗಬೇಕು,” ಎಂದು ಅವರು ಕರೆ ನೀಡಿದರು.
ಕಾರ್ಯಾಗಾರದಲ್ಲಿ 250ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಅಧ್ಯಾಪಕರು ಭಾಗವಹಿಸಿದ್ದರು. ಪೋಸ್ಟರ್ ಪ್ರಸೆಂಟೇಷನ್ಗಳು, ಸಂವಾದಾತ್ಮಕ ಚರ್ಚೆಗಳು ಮತ್ತು ಸಂಶೋಧನಾ ಲೇಖನ ಬರಹದ ಪ್ರಾಯೋಗಿಕ ಮಾರ್ಗದರ್ಶನ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಭವಿಷ್ಯದಲ್ಲೂ ಇಂತಹ ಕಾರ್ಯಾಗಾರಗಳ ಸರಣಿಯನ್ನು ಆಯೋಜಿಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕುಲಸಚಿವ ಶ್ರೀ ಎಸ್. ಬಿ. ಗಂಟಿ, ಪರೀಕ್ಷಾಂಗ ಕುಲಸಚಿವ ಡಾ. ಸಿ. ಕೆ. ರಮೇಶ್, ಡಾ. ಬಸವಣ್ಣ ಎಮ್. ಅಧ್ಯಕ್ಷರು, ಎಮ್.ಸಿ.ಎ ವಿಭಾಗ, ಡಾ. ಚಂದ್ರಕಾಂತ ಎನ್. ಅಧ್ಯಕ್ಷರು, ಕಂಪ್ಯೂಟರ್ ಸೈನ್ಸ್ ವಿಭಾಗ, ಹಣಕಾಸು ಅಧಿಕಾರಿ ಡಾ. ಆರ್. ಶಶಿಧರ್ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ಅಂತರಂಗ3 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ4 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ5 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

