ದಿನದ ಸುದ್ದಿ
ಪ್ರತಿ ಗ್ರಾಮಪಂಚಾಯತಿಗಳಲ್ಲಿ ಮಕ್ಕಳ ಗ್ರಾಮಸಭೆ ನಡೆಸಲು ಸುತ್ತೋಲೆ; ಮಕ್ಕಳ ಹಕ್ಕುಗಳ ಉಲ್ಲಂಘನೆ ಮಾಡಿದಲ್ಲಿ ಕ್ರಮ: ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ : ಪ್ರತಿ ಗ್ರಾಮದಲ್ಲೂ ಮಕ್ಕಳ ಗ್ರಾಮಸಭೆ ಕಡ್ಡಾಯವಾಗಿ ಮಾಡಬೇಕು, ಅಲ್ಲಿ ಮಕ್ಕಳಿರುವಂತೆ ನೋಡಿಕೊಳ್ಳಬೇಕು. ಮಕ್ಕಳ ಹಕ್ಕುಗಳು ಉಲ್ಲಂಘನೆ ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು. ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ ದಾವಣಗೆರೆ, ಬ್ರೆಡ್ಸ್ ಸಂಸ್ಥೆ, ಬೆಂಗಳೂರು. ಡಾನ್ ಬಾಸ್ಕೋ ಬಾಲಕಾರ್ಮಿಕರ ಮಿಷನ್ ಕ್ರೀಮ್ ಯೋಜನೆ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಕ್ಕಳ ಸ್ನೇಹಿ ಅಧಿಕಾರಿಗಳಿಗೆ ಸನ್ಮಾನ ಸಮಾರಂಭ ಹಾಗೂ ಸಿಆರ್ಇಎಎಂ ಯೋಜನೆಯ ಅನುಷ್ಠಾನದಲ್ಲಿ ಇಲಾಖೆಗಳ ಸಮನ್ವಯತೆ ಕುರಿತು ಜಿಲ್ಲಾ ಮಟ್ಟದ ಅಡ್ವೋಕಸಿ ಕಾರ್ಯಾಗಾರ ಉಧ್ಘಾಟಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು.
ಡಾನ್ ಬಾಸ್ಕೋ ಸಂಸ್ಥೆ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸುತಿದ್ದು, ಈ ಸಂಸ್ಥೆ ನಮ್ಮ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ನಮಗೆ ಹೆಮ್ಮೆ. ಮಕ್ಕಳ ಗ್ರಾಮ ಸಭೆ ಮಾಡುವುದರಿಂದ ಒತ್ತಡ, ಬಾಲ ಕಾರ್ಮಿಕ ಪದ್ದತಿ, ಬಾಲ್ಯವಿವಾಹದಂತಹ ಮಕ್ಕಳ ಸಮಸ್ಯೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಪತ್ತೆ ಹಚ್ಚಲು ಸಹಕಾರಿಯಾಗುತ್ತದೆ.
ಇದನ್ನೂ ಓದಿ | ಸತ್ಯಪ್ಪ ಸಾಹುಕಾರ’ ಎಂಬ ರೈತ ನಾಯಕ..!
ಮಕ್ಕಳ ಅನುಕೂಲಗಳ ಬಗ್ಗೆ ಚರ್ಚೆಯಾಗಬೇಕು ಹಾಗೂ ಮಕ್ಕಳ ಹಕ್ಕುಗಳು ಯಾವ ರೀತಿಯಲ್ಲಿ ಉಲ್ಲಂಘನೆಯಾಗುತ್ತವೆ ಎಂಬುದನ್ನು ಚರ್ಚೆ ಮಾಡಿ ಕ್ರಮ ಕೈಗೊಳ್ಳಲು ಸೂಕ್ತ ವೇದಿಕೆ ಕಲ್ಪಿಸಬೇಕು ಮತ್ತು ಮಕ್ಕಳ ಹಕ್ಕುಗಳ ಸಂಘಗಳನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಉತ್ತೇಜಿಸಲು ಡಿಡಿಪಿಐ ಮೂಲಕ ಸುತ್ತೋಲೆ ಹೊರಡಿಸಲಾಗುವುದು ಎಂದರು.
ಸಂಸ್ಥೆಯು ಎನ್ಜಿಒಗಳ ಸಹಾಯದಿಂದ ಬಡ ಮಕ್ಕಳಿಗಾಗಿ, ಮಕ್ಕಳ ಹಕ್ಕುಗಳ ಸಲುವಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ. ಈ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಸಿಆರ್ಇಎಂ ಯೋಜನೆ ಅಧಿಕಾರಿಗಳನ್ನು ಅಭಿನಂದಿಸಿದರು. ನಮ್ಮ ಎಲ್ಲಾ ಅಧಿಕಾರಿಗಳು ಮಕ್ಕಳ ಸ್ನೇಹಿ ಅಧಿಕಾರಿಗಳಾಗಿದ್ದು ಮಕ್ಕಳ ಹಕ್ಕುಗಳಿಗಾಗಿ ಕೆಲಸ ಮಾಡಲು ಸಿದ್ಧರಿದ್ದಾರೆ ಹಾಗೂ ಮಕ್ಕಳನ್ನು ರಕ್ಷಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಲಿದ್ದಾರೆ ಎಂದರು.
ಮಹಾನಗರ ಪಾಲಿಕೆಯ ಆಯುಕ್ತ ವಿಶ್ವನಾಥ್ ಮುದ್ದಜ್ಜಿ ಮಾತನಾಡಿ, ಮಕ್ಕಳ ರಕ್ಷಣೆ ಹಾಗೂ ಸುರಕ್ಷತೆಗಾಗಿ ಮಹಾನಗರ ಪಾಲಿಕೆ ಬದ್ದವಾಗಿದ್ದು, ಪಾಲಿಕೆಯ ವ್ಯಾಪ್ತಿಗೆ ಬರುವ ಎಲ್ಲಾ ಶಾಲಾ-ಕಾಲೇಜುಗಳ ಬಳಿ ರಸ್ತೆ ತಡೆಯನ್ನು ಹಾಕಿ ನಾಮಫಲಕಗಳನ್ನು ಹಾಕಲು ಕ್ರಮ ಕೈಗೊಳ್ಳುತ್ತೇವೆ ಎಂದರು.
ರೈಲ್ವೆ ಪೊಲೀಸ್ ಅಧಿಕಾರಿ ಮಾತನಾಡಿ, ಕಳೆದೆರಡು ವರ್ಷಗಳಲ್ಲಿ ಮನೆ ಬಿಟ್ಟು ಓಡಿಹೋಗುತ್ತಿದ್ದ ಸುಮಾರು 800 ಮಕ್ಕಳನ್ನು ರೈಲು ನಿಲ್ದಾಣದಲ್ಲಿ ಪತ್ತೆಹಚ್ಚಿ, ಅವರಿಗೆ ಕೌನ್ಸಲಿಂಗ್ ನಡೆಸಿ ಅವರನ್ನು ಪೋಷಕರಿಗೆ ಒಪ್ಪಿಸಲಾಗಿದೆ ಎಂದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್.ಎಮ್ ಮಾತನಾಡಿ, ಇತ್ತೀಚೆಗೆ ಮಕ್ಕಳು ಮನೆ ಬಿಟ್ಟು ಹೋಗುವ ಪ್ರಕರಣಗಳು ಹೆಚ್ಚಾಗುತ್ತಿದ್ದು ಪೋಷಕರು ಮಕ್ಕಳ ಮೇಲೆ ಒತ್ತಡ ಹಾಕುವುದನ್ನು ನಿಲ್ಲಿಸಿ, ಅವರ ಆಸಕ್ತಿಯ ಕ್ಷೇತ್ರಗಳಲ್ಲಿ ಬೆಳೆಯಲು ಬಿಡಬೇಕು. ಶಿಕ್ಷಕರು ಮಕ್ಕಳಲ್ಲಿರುವ ವಿಶೇಷ ಆಸಕ್ತಿ ಗುರುತಿಸಿ ಪೋಷಕರಿಗೆ ತಿಳಿಸುವ ಪ್ರಯತ್ನ ಮಾಡಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್ ಮಾತನಾಡಿ, ಈ ಮೊದಲು ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನನಗೆ ಈ ಹುದ್ದೆ ದೊರಕಿದ ಮೇಲೆ ಮಕ್ಕಳ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಒಳ್ಳೆಯ ಅವಕಾಶ ದೊರೆತಿದೆ. ಇಂದಿಗೂ ಅನೇಕ ಮಕ್ಕಳು ಸಂಕಷ್ಠದಲ್ಲಿದ್ದಾರೆ ಅವರನ್ನು ಗುರುತಿಸಿ ಸಹಾಯ ಮಾಡುವ ಅಭಿಲಾಶೆ ಇದೆ ಎಂದರು.
ಕಾರ್ಯಕ್ರಮದಲ್ಲಿ ಮಕ್ಕಳ ಸ್ನೇಹಿ ಅಧಿಕಾರಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್ ಅವರಿಗೆ ಸನ್ಮಾನಿಸಲಾಯಿತು.
ಜಿಲ್ಲಾಧಿಕಾರಿಗಳಿಂದ ಪುಸ್ತಕ ಬಿಡುಗಡೆ : ‘ಮಕ್ಕಳಿಗಾಗಿ ಮಕ್ಕಳ ಹಕ್ಕು’ ಎಂಬ ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡಿದ ಜಿಲ್ಲಾಧಿಕಾರಿಗಳು, ಮಕ್ಕಳಿಗಾಗಿ ಇಂತಹ ಪುಸ್ತಕವನ್ನು ಹೊರತರುತ್ತಿರುವುದು ಶ್ಲಾಘನೀಯ. ನಾವು ಕೂಡ ಸರ್ಕಾರಕ್ಕೆ ಪುಸ್ತಕ ಬಿಡುಗಡೆ ಮಾಡಲು ಶಿಫಾರಸ್ಸು ಮಾಡುತ್ತೇವೆ ಎಂದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಕೌಸರ್ ರೇಷ್ಮಾ, ಅಲ್ಪ ಸಂಖ್ಯಾತರ ಇಲಾಖೆಯ ಅಧಿಕಾರಿ ಬಿದರಿ, ಪರಿಶಿಷ್ಠ ಪಂಗಡ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ ನಾಯ್ಕ. ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಅಶೋಕ್ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ರಾಜ್ಯ ವಕೀಲರ ಸಂಘದ ಸದಸ್ಯರಾದ ಅರುಣ್ ಕುಮಾರ್ ಎಲ್.ಹೆಚ್, ಬ್ರೆಡ್ಸ್ ಸಂಸ್ಥೆ, ಕ್ರೀಮ್ ಯೋಜನೆ ಕಾರ್ಯಕಾರಿ ನಿರ್ದೇಶಕ ಫಾ. ಜಾಯ್ ನೆಡುಂಪರಂಬಿಲ್, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


