Connect with us

ದಿನದ ಸುದ್ದಿ

ದಾವಣಗೆರೆ | ಜೂನ್ 14,16,18 ರಂದು ಬೆಳಿಗ್ಗೆ 6 ರಿಂದ 12 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ; ಜೂನ್ 14 ರಿಂದ 21 ರವರೆಗೆ ಲಾಕ್‍ಡೌನ್ ಮುಂದುವರಿಕೆ : ಜಿಲ್ಲಾಧಿಕಾರಿ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಜೂನ್ 14 ರವರೆಗೆ ಇದ್ದ ಲಾಕ್‍ಡೌನ್ ಅನ್ನು ಜೂನ್ 21 ರ ಬೆಳಿಗ್ಗೆ 6 ರವೆರೆಗೆ ವಿಸ್ತರಿಸಿ ಆದೇಶಿಸಲಾಗಿದೆ.

ಜಿಲ್ಲಾಡಳಿತ ಭವನದಲ್ಲಿ ಇಂದು (ಶನಿವಾರ) ನಡೆದ ಸಭೆಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು, ಈ ಹಿಂದಿನ ಮಾರ್ಗಸೂಚಿಯಂತೆ ಲಾಕ್‍ಡೌನ್‍ನ ಎಲ್ಲಾ ನಿರ್ಬಂಧಗಳು ಮುಂದುವರೆದಿದ್ದು, ಜೂನ್ 14, 16, 18 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ರವರೆಗೆ ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು ತರಕಾರಿಗಳು, ಮಾಂಸ ಮತ್ತು ಮೀನು ಹಾಗೂ ಮದ್ಯದ ಅಂಗಡಿಗಳು, ಕೋವಿಡ್-19 ನಿರ್ವಹಣೆಯ ಸಂಬಂಧ ಹೊರಡಿಸಲಾದ ರಾಷ್ಟ್ರೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೆ ಒಳಪಟ್ಟು ಅನುಮತಿಸಲಾಗಿರುತ್ತದೆ.

ನಿರ್ಮಾಣ ಸ್ಥಳದಲ್ಲಿಯೇ ವಾಸವಾಗಿರುವ ಕಾರ್ಮಿಕರನ್ನು ಬಳಸಿಕೊಂಡು ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿಸಲಾಗಿರುವ ಹಿನ್ನೆಲೆಯಲ್ಲಿ ಕಟ್ಟಡ ಕೆಲಸ, ಕಾಮಗಾರಿಗಳು, ಕಟ್ಟಡ ಕಾಮಗಾರಿ ಸಾಮಾಗ್ರಿ ಮತ್ತು ಅಗತ್ಯ ವಸ್ತುಗಳಾದ ಸಿಮೆಂಟ್, ಕಬ್ಬಿಣ, ಪೇಂಟ್ಸ್, ಹಾರ್ಡ್‍ವೇರ್, ಗ್ಲಾಸ್, ಪ್ಲೆ-ವುಡ್, ಸಾಮಿಲ್ಸ್, ಎಲೆಕ್ಟ್ರೀಕಲ್ಸ್, ಟೈಲ್ಸ್ ಅಥವಾ ಮಾರ್ಬಲ್ಸ್, ಸ್ಯಾನಿಟರಿ ವೈರ್ಸ್ ಅಂಗಡಿಗಳ ಚಟುವಟಿಕೆಗಳನ್ನು ನಡೆಸಲು ಜೂನ್ 14, 16, 18 ರ ಬೆಳಿಗ್ಗೆ 9 ರಿಂದ 12 ಗಂಟೆಯವರೆಗೆ ಮೂರು ದಿನ ಅವಕಾಶ ಕಲ್ಪಿಸಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಜನಪ್ರತಿನಿಧಿಗಳೊಂದಿಗೆ ಈ ಬಗ್ಗೆ ಚರ್ಚೆ ನಡೆಸಿದ್ದು ಈ ಸಾಂಕ್ರಮಿಕವನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಹತ್ತಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು 25 ಗ್ರಾಮಗಳಲ್ಲಿ ವರದಿಯಾಗಿದ್ದು, ಆ ಗ್ರಾಮಗಳನ್ನು ಕಂಟೆನ್ಮೆಂಟ್ ಜೋನ್ ಮಾಡಲಾಗಿದೆ. ಈ ಗ್ರಾಮಗಳಲ್ಲಿ ವೈದ್ಯಕೀಯ ತುರ್ತು ಹಾಗೂ ಅಗತ್ಯ ಸೇವೆಗಳ ಹೊರತುಪಡಿಸಿ ಗ್ರಾಮದಿಂದ ಹೊರ ಹಾಗೂ ಒಳ ಸಂಚಾರವನ್ನು ಕಟ್ಟುನಿಟ್ಟಾಗಿ ಬಿಗಿಗೊಳಿಸಲಾಗಿದೆ.

ನರೇಗಾ ಹಾಗೂ ಕೃಷಿ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಉಳಿದ ದಿನ ಹಾಲು ಮೊಟ್ಟೆ, ಮೆಡಿಕಲ್ ಅಂಗಡಿಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ತರಕಾರಿ ಹಣ್ಣುಗಳನ್ನು ತಳ್ಳುಗಾಡಿ ಮುಖಾಂತರ ಮನೆ ಮನೆಗೆ ಹೋಗಿ ಮಾರಾಟ ಮಾಡಲು ಅನುವು ಮಾಡಿಕೊಡಲಾಗಿದೆ.

ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಾಗುವುದು ಎಂದ ಅವರು,
6-10 ಪ್ರಕರಣಗಳಿರುವ 64 ಗ್ರಾಮಗಳಲ್ಲಿ ಸರ್ವೇಕ್ಷಣೆಯನ್ನು ತೀವ್ರಗೊಳಿಸಿ ಸ್ಥಳೀಯ ಗ್ರಾಮಪ್ರತಿನಿಧಿಗಳು, ಪಿಡಿಓ ಇವರುಗಳಿಂದ ಜಾಗೃತಿ ಮೂಡಿಸಿ ಟೆಸ್ಟ್ ಗಳನ್ನು ಹೆಚ್ಚು ಮಾಡಲು ನಿರ್ದೇಶಿಸಲಾಗಿದೆ. ಹಾಗೂ ಜಿಲ್ಲೆಯಲ್ಲಿ ಜೂ.1 ರಂದು ಶೇ.23.47, ಜೂ.9 ರಂದು ಶೇ.12.65, ಜೂ.10 ರಂದು ಶೇ.10.23, ಜೂ.11 ರಂದು ಶೇ.6.81 ರಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಪಾಸಿಟಿವ್ ದರ ಕಡಿಮೆಯಾಗುತ್ತಿದೆ. ಇದು ಹೀಗೆ ಮುಂದುವರಿಯಬೇಕು ಎಂದರೆ ನಿರ್ಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದರು.

ಅನಗತ್ಯವಾಗಿ ಮನೆಯಿಂದ ಯಾರು ಹೊರ ಬರಬಾರದು ಹಾಗೂ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಕೋವಿಡ್ ಸೋಂಕಿತರನ್ನು ನೋಡಿಕೊಳ್ಳುವ ಅಟೆಂಡರ್‍ಗಳು ಸುಮ್ಮಸುಮ್ಮನೆ ಕಾರಣ ಹೇಳಿ ಹೊರಬರಬಾರದು ಎಂದು ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಪಿ.ರಿಷ್ಯಂತ್ ಮಾತನಾಡಿ, ಜಿಲ್ಲೆಯಲ್ಲಿ 26 ಕಡೆ ಚೆಕ್‍ಪೋಸ್ಟ್ ಇದ್ದು ಅಲ್ಲಿ ಸಿಬ್ಬಂದಿಗಳನ್ನು ಹೆಚ್ಚಳ ಮಾಡಲಾಗುವುದು. ಕೆಲವೆಡೆ ಇಬ್ಬರು ಸಿಬ್ಬಂದಿ ಇದ್ದು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂಬ ದೂರು ಇದೆ. ಹಾಗಾಗಿ ಹೋಂ ಗಾರ್ಡ್ ಗಳನ್ನು ಪಡೆದು ಸಿಬ್ಬಂದಿ ನೇಮಕ ಮಾಡಲಾಗುವುದು.

ಹಾಗೂ ನಿಯಾಮ ಉಲ್ಲಂಘಿಸುವವರ ವಿರುದ್ಧ ಕೇಸ್ ದಾಖಲಾಗಿಸಲಾಗುವುದು. ಅನಗತ್ಯವಾಗಿ ರಸ್ತೆಯಲ್ಲಿ ಓಡಾಡುವ ಬೈಕ್ ಸವಾರರನ್ನು ದಂಡ ವಿಧಿಸಿ ವಾಹನಗಳನ್ನು ಸೀಜ್ ಮಾಡಲಾಗುವುದು. ಗ್ರಾಮೀಣ ಭಾಗದಲ್ಲಿ ಪ್ಯಾಟ್ರೋಲ್ ವಾಹನಗಳಿಂದ ಗಸ್ತು ನಡೆಸಲಾಗುವುದು. ಆಸ್ಪತ್ರೆಗಳಲ್ಲಿ ರೋಗಿಗಳನ್ನು ನೋಡಿಕೊಳ್ಳುವವರು ಹೆಚ್ಚಾಗಿದ್ದು ಅಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನೇಮಿಸಿ ಜನದಟ್ಟನೆ ನಿಯಂತ್ರಿಸಲಾಗುವುದು ಎಂದರು.

ಇದನ್ನೂ ಓದಿ | ದಾವಣಗೆರೆ | ಜಿಲ್ಲೆಯ 25 ಗ್ರಾಮಗಳು ನಿಯಂತ್ರಿತ ವಲಯ : ಜಿಲ್ಲಾಧಿಕಾರಿ https://suddidina.com/davanagere-25-villages-in-the-district-controlled-zone-district-collector/

ಜಿ.ಪಂ. ಸಿಇಒ ವಿಜಯ ಮಹಾಂತೇಶ ದಾನಮ್ಮನವರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಜಾಗೃತಿ ಮೂಡಿಸಲಾಗುತ್ತಿದ್ದು, ಟೆಸ್ಟ್ ಗಳ ಸಂಖ್ಯೆ ಹೆಚ್ಚಿಸಲಾಗಿದೆ. ಹಾಗೂ ಪಾಸಿಟಿವ್ ದರ ಕಡಿಮೆಯಾಗುತ್ತಿದೆ. ಸೋಂಕಿತರನ್ನ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‍ಗೆ ಕಳುಹಿಸಲು ತಿಳಿಸಲಾಗುತ್ತಿದೆ ಎಂದರು.

ಆರ್.ಸಿ.ಹೆಚ್ ಅಧಿಕಾರಿ ಡಾ.ಮೀನಾಕ್ಷಿ ಮಾಹಿತಿ ನೀಡಿ ಜಿಲ್ಲೆಯಲ್ಲಿ ಈಗಾಗಲೇ 3,69,925 ಜನರಿಗೆ ಲಸಿಕೆ ಹಾಕಲಾಗಿದೆ ಎಂದರು.

ಸಭೆಯಲ್ಲಿ ಎಸಿ ಮಮತ ಹೊಸಗೌಡರ್, ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್, ಡಿಹೆಚ್‍ಒ ಡಾ.ನಾಗರಾಜ್, ಯೋಜನಾಧಿಕಾರಿ ನಜ್ಮಾ, ಎಎಸ್‍ಪಿ ರಾಜೀವ್, ಡಾ.ನಟರಾಜ್, ಡಾ.ಯತೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

25 ಗ್ರಾಮಗಳು ಕಂಟೆನ್ಮೆಂಟ್ ಜೋನ್ ವ್ಯಾಪ್ತಿಗೆ

ದಾವಣಗೆರೆ ತಾಲ್ಲೂಕಿನ ಅಣಬೇರು, ಕುಕ್ಕುವಾಡ, ಕೈದಾಳೆ, ಕುರ್ಕಿ, ತುರ್ಚಘಟ್ಟ, ಬೇತೂರು, ಕಾಶೀಪುರ, ಮಳಲಕೆರೆ ಗ್ರಾಮಗಳು, ಹರಿಹರ ತಾಲ್ಲೂಕಿನ ಗುತ್ತೂರು, ಕೆ.ಬೇವಿನಹಳ್ಳಿ, ನಂದಿತಾವರೆ, ಭಾನುವಳ್ಳಿ, ಹೊಳೆಸಿರಿಗೆರೆ, ಹಾಲಿವಾಣ ಗ್ರಾಮಗಳು, ಹೊನ್ನಾಳಿ ತಾಲ್ಲೂಕಿನ ಕುಳಗಟ್ಟೆ, ಹನುಮನಹಳ್ಳಿ, ಕೂಲಂಬಿ, ಗೊಲ್ಲರಹಳ್ಳಿ, ಐನೂರು ಗ್ರಾಮಗಳು, ನ್ಯಾಮತಿ ತಾಲ್ಲೂಕಿನ ದಾನಿಹಳ್ಳಿ, ಕುಂಕೊವ, ಫಲವನಹಳ್ಳಿ, ಸುರಹೊನ್ನೆ ಗ್ರಾಮಗಳು, ಚನ್ನಗಿರಿ ತಾಲ್ಲೂಕಿನ ಸಿದ್ದನಮಠ ಗ್ರಾಮ ಹಾಗೂ ಜಗಳೂರು ತಾಲ್ಲೂಕಿನ ಹೊಸಕೆರೆ ಗ್ರಾಮಗಳಲ್ಲಿ ಹತ್ತಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಈ ಗ್ರಾಮಗಳನ್ನು ಕಂಟೆನ್ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending