Connect with us

ದಿನದ ಸುದ್ದಿ

ದಾವಣಗೆರೆ | ಲಾಕ್‍ಡೌನ್ ಜಿಲ್ಲೆಗೆ ಹೋಗುವುದು ಮತ್ತು ಬರುವುದು ಬೇಡ ; ಅಗತ್ಯ ಸೇವೆ ಹೊರತುಪಡಿಸಿ ಇತರೆ ಸೇವೆಗಳ ಬಂದ್ : ಜಿಲ್ಲಾಧಿಕಾರಿ

Published

on

ಸುದ್ದಿದಿನ,ದಾವಣಗೆರೆ : ಕೊರೊನಾ ವೈರಸ್ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಯುಗಾದಿ ಹಬ್ಬವನ್ನು ತಾವು ಸದ್ಯ ಇರುವ ಸ್ಥಳದಲ್ಲೇ ಆಚರಿಸಬೇಕು. ಅನಗತ್ಯವಾಗಿ ಪರವೂರಿಗೆ, ನೆಂಟರ ಊರು ಎಂದು ತೆರಳಬಾರದು ಹಾಗೂ ಬೇರೆ ಜಿಲ್ಲೆಗಳಿಂದ ಸಹ ಯಾರೂ ದಾವಣಗೆರೆ ಜಿಲ್ಲೆಗೆ ಆಗಮಿಸಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸಾರ್ವಜನಿಕರಿಗೆ ಸೂಚನೆ ನೀಡಿದರು.

ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೊರೊನಾ ವೈರಸ್ ನಿಯಂತ್ರಣ ಮತ್ತು ತಡೆ ಕುರಿತಾಗಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳಿದ್ದು ಲಾಕ್‍ಡೌನ್ ಆಗಿರುವ ಒಂಭತ್ತು ಜಿಲ್ಲೆಗಳ ನಾಗರೀಕರು ದಾವಣಗೆರೆ ಜಿಲ್ಲೆಗೆ ಹಬ್ಬ ಅಥವಾ ಇತರೆ ಕಾರಣಗಳಿಗೆ ಬರಬಾರದು ಎಂಬುದು ಎಸ್‍ಪಿ, ಸಿಇಓ ಹಾಗೂ ನಮ್ಮೆಲ್ಲರ ಒಕ್ಕೊರಲ ಮನವಿಯಾಗಿದೆ ಎಂದರು.

ಚೆಕ್‍ಪೋಸ್ಟ್ ಮೂಲಕ ನಿಗಾವಣೆ

ದಾವಣಗೆರೆ ಜಿಲ್ಲೆಗೆ ಲಾಕ್‍ಡೌನ್ ಆಗಿರುವ ಒಂಭತ್ತು ಜಿಲ್ಲೆಗಳಿಂದ ಬರುವ ವಾಹನಗಳನ್ನು ತಪಾಸಣೆ ಮಾಡಲಾಗುವುದು. ಇದಕ್ಕಾಗಿ ಜಿಲ್ಲೆಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಆರಂಭಿಸಲಾಗುವುದು. ಜಿಲ್ಲೆಗೆ ಬೇರೆ ಬೇರೆ ಊರುಗಳಿಂದ ಬರುವ ವಾಹನಗಳಲ್ಲಿನ ಜನರನ್ನು ತಪಾಸಣೆ(ಸ್ಕ್ರೀನಿಂಗ್) ಮಾಡಲಾಗುವುದು.

ಅವರಿಗೆ ಯಾವುದೇ ಸೋಂಕು ಇರುವುದು ಕಂಡು ಬಂದರೆ ಅಂತಹವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ನಿಗಾವಣೆಗೆ ಇರಿಸಲಾಗುವುದು. ಚೆಕ್‍ಪೋಸ್ಟ್‍ಗಳಲ್ಲಿ ಅರಣ್ಯ ಇಲಾಖೆ, ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಗಳ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು ಎಂದರು.

ಬಸ್ ಓಡಾಟ ರದ್ದು

ಲಾಕ್‍ಡೌನ್ ಆಗಿರುವ 9 ಜಿಲ್ಲೆಗಳಿಂದ ಓಡಾಡುವ ಖಾಸಗಿ ಬಸ್‍ಗಳನ್ನು ಸಹ ನಿಲ್ಲಿಸಲಾಗುವು. ಹಾಗೂ ಜಿಲ್ಲೆಯಿಂದ ಸಹ ಈ 9 ಜಿಲ್ಲೆಗಳಿಗೆ ಯಾವುದೇ ಬಸ್‍ಗಳು ಓಡಾಡಬಾರದಂತೆ ಕೆಎಸ್‍ಆರ್‍ಟಿಸಿ, ಆರ್‍ಟಿಓ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.

ಎಲ್ಲ ಅಧಿಕಾರಿಗಳ ಮೊದಲ ಆದ್ಯತೆ ಕೊರೊನಾ ನಿಯಂತ್ರಣ

ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿ ಕೆಲಸಕ್ಕಿಂತ ಮುಖ್ಯವಾಗಿ ಮೊದಲನೇ ಆದ್ಯತೆಯಾಗಿ ಕೊರೊನಾ ವೈರಸ್ ನಿಯಂತ್ರಣದ ಕಾರ್ಯಗಳಲ್ಲಿ ಭಾಗಯಾಗಬೇಕು.

ಅಗತ್ಯ ಸೇವೆ ಹೊರತುಪಡಿಸಿ ಇತರೆ ಸೇವೆಗಳ ಬಂದ್

ಮೆಡಿಕಲ್ ಶಾಪ್, ಹಾಲು, ತರಕಾರಿ, ದಿನಸಿ ಅಂಗಡಿಗಳು, ಆಸ್ಪತ್ರೆಗಳು, ಪೆಟ್ರೋಲ್ ಬಂಕ್, ಕುಡಿಯುವ ನೀರಿನ ವ್ಯವಸ್ಥೆ, ಅಂಚೆ ಸೇವೆ, ಆಹಾರ, ಅಗ್ನಿಶಾಮಕ, ವಿದ್ಯುತ್ ಸೇರಿದಂತೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ವಾಣಿಜ್ಯ ಸೇವೆಗಳನ್ನು ಈ ಕ್ಷಣದಿಂದ ಸ್ಥಗಿತಗೊಳಿಸಲು ಆದೇಶಿಸಲಾಗುವುದು. ಬಾರ್ ಮತ್ತು ರೆಸ್ಟೋರೆಂಟ್, ಬಂಗಾರದ ಅಂಗಡಿ, ಬಟ್ಟೆ, ಪಾತ್ರೆ ಅಂಡಿಗಳು, ಹಾರ್ಡ್‍ವೇರ್ ಶಾಪ್‍ಗಳನ್ನು ಸ್ಥಗಿತಗೊಳಿಸಲಾಗಿದೆ ಎಂದರು.

ಆಹಾರ ಪಾರ್ಸೆಲ್‍ಗೆ ಅವಕಾಶ

ಹೋಟೆಲ್, ಕ್ಯಾಂಟಿನ್‍ಗಳಲ್ಲಿ ಕುಳಿತು ಊಟ ಮಾಡಲು ಅವಕಾಶ ಇಲ್ಲ. ಬದಲಾಗಿ ಪಾರ್ಸೆಲ್ ತೆಗೆದುಕೊಂಡು ಹೋಗಬಹುದು.

ಸುಳ್ಳುಸುದ್ದಿ ಹರಡಿದವರಿಗೆ ಕಠಿಣ ಕ್ರಮ

ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ. ಆದರೆ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಇದೆ ಎಂದು ಸುಳ್ಳುಸುದ್ದಿ ಹರಡುತ್ತಿದ್ದಾರೆಂಬ ವಿಷಯ ನನ್ನ ಗಮನಕ್ಕೆ ಬಂದಿದ್ದು, ಇಂತಹ ಸುಳ್ಳು ಸುದ್ದಿ ಹರಡಿಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಎಸ್‍ಪಿ ಹನುಮಂತರಾಯ ಮಾತನಾಡಿ, ಪಾಲಿಕೆ, ಆರ್‍ಟಿಓ, ಕೆಎಸ್‍ಆರ್‍ಟಿಸಿ ಹಾಗೂ ಸಿಜಿ ಆಸ್ಪತ್ರೆಯ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆಗೆ ಅನುಕೂಲವಾಗುವಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳನ್ನು ನೀಡಲಾಗುವುದು.

ವಿದೇಶಕ್ಕೆ ಹೋಗಿ ಬಂದು ಮನೆಯಲ್ಲಿ ಪ್ರತ್ಯೇಕವಾಗಿ ಅವಲೋಕನ ಅವಧಿಯಲ್ಲಿ ಇರಿಸಲಾಗಿರುವ ಮಾಹಿತಿಯನ್ನು ಪೊಲೀಸ್ ಇಲಾಖೆಗೆ ಪ್ರತಿ ದಿನ ನೀಡಬೇಕು. ನಮ್ಮ ನಿಯೋಜಿತ ಸಿಬ್ಬಂದಿಗಳು ಅಂತವರನ್ನು ಮನೆಯಲ್ಲೇ ಇರುವಂತೆ ನಿಗಾ ವಹಿಸುವರು. ಹಾಗೂ ಅವರ ಮನೆ ಮುಂದೆ ಕೊರೊನಾ ವೈರಸ್ ಜಾಗೃತಿ ಬಗ್ಗೆ ಭಿತ್ತಿಚಿತ್ರ ಅಂಟಿಸಲಾಗುವುದು. ಅವರು ಹೊರಗೆ ಹೋಗುವುದರಿಂದ ತೊಂದರೆ ಆಗುವ ಹಿನ್ನೆಲೆಯಲ್ಲಿ ವಿದೇಶಕ್ಕೆ ಹೋಗಿ ಬಂದವರು ಕಡ್ಡಾಯವಾಗಿ ಅವಲೋಕನ ಅವಧಿಯನ್ನು ಪೂರ್ಣಗೊಳಿಸಬೇಕು ಎಂದರು.

ಜಿಲ್ಲಾಧಿಕಾರಿಗಳು, ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಆರೋಗ್ಯ, ಕಂದಾಯ, ಸ್ಥಳೀಯ ಸಂಸ್ಥೆಗಳು, ಪಾಲಿಕೆ, ಆರ್‍ಟಿಓ, ಕೆಎಸ್‍ಆರ್‍ಟಿಸಿ ಸೇರಿದಂತೆ ನಿಗಾವಣೆಗಾಗಿ ನಿಯೋಜಿಸಲಾಗಿರುವ 6 ತಂಡಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು. ದಾಖಲಾತಿಗಳನ್ನು ನಿಖರವಾಗಿ ನಿರ್ವಹಿಸಬೇಕು ಎಂದರು.

ಲಾಕ್‍ಡೌನ್ ಬಗ್ಗೆ ಚಿಂತನೆ

ದಾವಣಗೆರೆ ಜಿಲ್ಲೆಯು ಸರ್ಕಾರ ಲಾಕ್‍ಡೌನ್ ಮಾಡಿರುವ ಜಿಲ್ಲೆಗಳಿಗೆ ಗಡಿಯಾಗಿರುವುದರ ಹಿನ್ನೆಲೆ ಹಾಗೂ ಸಾರ್ವಜನಿಕರು ಇಂದು ನಡೆದ ಫೋನ್‍ಇನ್ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣ ವರದಿಯಾಗುವವರೆಗೆ ಕಾಯದೇ ಮುನ್ನೆಚ್ಚರಿಕಾ ಕ್ರಮವಾಗಿ ಇಂದಿನಿಂದಲೇ ಲಾಕ್‍ಡೌನ್ ಮಾಡಬೇಕೆಂದು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಂದಿನಿಂದಲೇ ಲಾಕ್‍ಡೌನ್ ಮಾಡುವ ಬಗ್ಗೆ ಚಿಂತಿಸಲಾಗುವುದು ಎಂದ ಅವರು, ಲಾಕ್‍ಡೌನ್ ಮಾಡುವವರೆಗೆ ಕಾಯದೇ ವ್ಯಾಪಾರಸ್ಥರು, ವಾಣಿಜ್ಯ ಅಂಗಡಿಗಳ ಮಾಲೀಕರು ಸ್ವಯಂ ಬಂಧ್ ಮಾಡಬೇಕೆಂದರು.

ವಾರ್ಡುವಾರು ಕೈತೊಳೆಯುವ ಪಾಯಿಂಟ್

ಕೊರೊನಾ ಸೋಂಕು ಮುನ್ನೆಚ್ಚರಿಕೆ ಕ್ರಮವಾಗಿ ನಗರದ 45 ವಾರ್ಡುಗಳು ಸೇರಿದಂತೆ ಇತರೆ ಸ್ಥಳೀಐ ಸಂಸ್ಥೆಗಳು ಸೇರಿ ಒಟ್ಟು 158 ಪಾಯಿಂಟ್‍ಗಳಲ್ಲಿ ಸ್ಯಾನಿಟೈಸರ್/ಸಾಬೂನಿನಿಂದ ‘ಕೈ ತೊಳೆಯುವ ಕೇಂದ್ರ’ ಗಳನ್ನು ಮೊದಲನೇ ಹಂತದಲ್ಲಿ 15 ದಿನಗಳ ಕಾಲ ತೆರೆಯಲಾಗುವುದು. ಇಲ್ಲಿ ಸಾರ್ವಜನಿಕರು ಆಗಾಗ ಕೈ ತೊಳೆಯುವ ಮೂಲಕ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬಹುದು ಎಂದರು.

ಎಟಿಎಂ ಸ್ಯಾನಿಟೈಸರ್ ಕಡ್ಡಾಯ

ಎಲ್ಲ ಎಟಿಎಂ ಗಳಲ್ಲಿ ಸ್ಯಾನಿಟೈಸರ್‍ಗಳನ್ನು ಕಡ್ಡಾಯವಾಗಿ ಇಡಬೇಕು. ಸ್ಯಾನಿಟೈಸರ್ ಇಡದೇ ಇರುವ ಎಟಿಎಂನ ಬ್ಯಾಂಕುಗಳಿಗೆ ನೋಟಿಸ್ ನೀಡಲಾಗುವುದು.

ಎನ್-95 ಅವಶ್ಯಕತೆ ಇಲ್ಲ

ಚಿಗಟೇರಿ ಜಿಲ್ಲಾ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೆಡಿಕಲ್ ವಿದ್ಯಾರ್ಥಿಗಳು ಇದುವರೆಗೂ ಎನ್-95 ಮಾಸ್ಕ್ ಲಭ್ಯವಾಗಿಲ್ಲ ಹಾಗಾಗಿ ಕರ್ತವ್ಯ ನಿರ್ವಹಿಸಲು ಕಷ್ಟ ಎಂದು ದೂರಿರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಕರ್ತವ್ಯ ನಿರ್ವಹಿಸಲು ಎನ್-95 ಮಾಸ್ಕ್ ಬೇಕೆಂದಿಲ್ಲ. ಬದಲಾಗಿ ಟ್ರಿಪಲ್ ಲೇಯರ್ ಮಾಸ್ಕ್ ಸಾಕು.

ಸರ್ಕಾರದ ಆದೇಶದ ಅನ್ವಯ ಎಲ್ಲೆಡೆಯೂ ಎನ್-95 ಮಾಸ್ಕ್ ಅವಶ್ಯಕವಲ್ಲ. ಬದಲಾಗಿ ಐಸಿಯು ಹಾಗೂ ಐಸೋಲೇಷನ್ ವಾರ್ಡ್‍ಗಳಲ್ಲಿ ಅದರ ಅವಶ್ಯಕತೆ ಇದೆಯಷ್ಟೇ. ವಿದ್ಯಾರ್ಥಿಗಳಿಗೆ ಈ ಕುರಿತು ಯಾವುದೇ ಆತಂಕ ಬೇಡ. ಇದನ್ನು ಅರಿತು ಕರ್ತವ್ಯ ನಿರ್ವಹಿಸುವುದರೊಂದಿಗೆ ಜಿಲ್ಲಾಡಳಿತಕ್ಕೆ ಸಹಕರಿಸಬೇಕು. ಅದರಂತೆ ಅವಶ್ಯಕವಾಗಿರುವ ಸ್ಯಾನಿಟೈಸರ್ ಮತ್ತು ಮಾಸ್ಕ್‍ಗಳ ಕೊರತೆ ಬರದಂತೆ ನೋಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.ತಾಲ್ಲೂಕುಗಳಿಂದ ಬರುವ ಖಾಸಗಿ ಬಸ್‍ಗಳಲ್ಲಿ ಯದ್ವಾತದ್ವ ಜನರನ್ನು ತುಂಬಿಸುವುದು ಸೂಕ್ತವಲ್ಲ. ಈ ಬಗ್ಗೆ ಆರ್‍ಟಿಓ ಕ್ರಮ ವಹಿಸಬೇಕೆಂದರು ಹೇಳಿದರು.

ಬಸ್ ವ್ಯವಸ್ಥೆ ಇಲ್ಲದ ಕಡೆ ಆಟೋದವರು ಸಾರ್ವಜನಿಕರಿಂದ ದುಪ್ಪಟ್ಟು ಹಣ ಕೇಳುತ್ತಿರುವುದು ಗಮನಕ್ಕೆ ಬಂದಿದ್ದು, ಇದನ್ನು ಈಗಲೇ ನಿಲ್ಲಿಸಬೇಕೆಂದು ಸೂಚಿಸಿದರು.

ಪೊಲೀಸ್ ಇಲಾಖೆಯ ಸಹಾಯ ಪಡೆದು ಪಾಲಿಕೆಯ ಆರೋಗ್ಯ ನಿರೀಕ್ಷಕರು, ಅಂಗಡಿ, ಬಾರ್, ರೆಸ್ಟೋರೆಂಟ್ ಸೇರಿದಂತೆ ವಾಣಿಜ್ಯ ಮಳಿಗೆಗಳನ್ನು ಎಲ್ಲೆಡೆ ಮುಚ್ಚಿಸಬೇಕು ಎಂದ ಅವರು ಜಿಲ್ಲೆಯಲ್ಲಿ ಎಲ್ಲ ಕ್ವಾರಿಗಳನ್ನು ಸಹ ಇಂದಿನಿಂದಲೇ ಬಂದ್ ಮಾಡಬೇಕು ಎಂದು ಸೂಚಿಸಿದರು.

ಹಕ್ಕಿಜ್ವರ

ಜಿಲ್ಲಾಧಿಕಾರಿಗಳು, ಎಲ್ಲ ಕೋಳಿ ಫಾರಂಗಳನ್ನು ಸ್ವಚ್ಚಗೊಳಿಸುವ ಕೆಲಸ ಆಗಬೇಕು. ಸ್ವಚ್ಚತೆ ಮಾಡಿಸದೇ ಇರುವ ಫಾರ್ಮ್‍ಗಳನ್ನು ಶಾಶ್ವತವಾಗಿ ನಿಲ್ಲಿಸಲಾಗುವುದು ಎಂದರು.

ಸಭೆಯಲ್ಲಿ ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ, ಅಪರ ಜಿಲ್ಲಾಧಿಕರಿ ಪೂಜಾರ ವೀರಮಲ್ಲಪ್ಪ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಕೆಎಸ್‍ಆರ್‍ಟಿಸಿ ಡಿಸಿ ಸಿದ್ದೇಶ್, ಆರ್‍ಟಿಓ ಎನ್.ಜೆ.ಬಣಕಾರ್, ಡಿಹೆಚ್‍ಓ ಡಾ.ರಾಘವೇಂದ್ರಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.

4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

Published

on

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.

“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.

ಶ್ರೀ ಎ. ಜಯಪ್ಪ ಅವರು ಎನ್‌.ಎಸ್‌.ಎಸ್‌. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.

ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್‌. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

Published

on

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.

ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್‌ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.

ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending