Connect with us

ದಿನದ ಸುದ್ದಿ

ದಾವಣಗೆರೆ | ಲಾಕ್‍ಡೌನ್ ಜಿಲ್ಲೆಗೆ ಹೋಗುವುದು ಮತ್ತು ಬರುವುದು ಬೇಡ ; ಅಗತ್ಯ ಸೇವೆ ಹೊರತುಪಡಿಸಿ ಇತರೆ ಸೇವೆಗಳ ಬಂದ್ : ಜಿಲ್ಲಾಧಿಕಾರಿ

Published

on

ಸುದ್ದಿದಿನ,ದಾವಣಗೆರೆ : ಕೊರೊನಾ ವೈರಸ್ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಯುಗಾದಿ ಹಬ್ಬವನ್ನು ತಾವು ಸದ್ಯ ಇರುವ ಸ್ಥಳದಲ್ಲೇ ಆಚರಿಸಬೇಕು. ಅನಗತ್ಯವಾಗಿ ಪರವೂರಿಗೆ, ನೆಂಟರ ಊರು ಎಂದು ತೆರಳಬಾರದು ಹಾಗೂ ಬೇರೆ ಜಿಲ್ಲೆಗಳಿಂದ ಸಹ ಯಾರೂ ದಾವಣಗೆರೆ ಜಿಲ್ಲೆಗೆ ಆಗಮಿಸಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸಾರ್ವಜನಿಕರಿಗೆ ಸೂಚನೆ ನೀಡಿದರು.

ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೊರೊನಾ ವೈರಸ್ ನಿಯಂತ್ರಣ ಮತ್ತು ತಡೆ ಕುರಿತಾಗಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳಿದ್ದು ಲಾಕ್‍ಡೌನ್ ಆಗಿರುವ ಒಂಭತ್ತು ಜಿಲ್ಲೆಗಳ ನಾಗರೀಕರು ದಾವಣಗೆರೆ ಜಿಲ್ಲೆಗೆ ಹಬ್ಬ ಅಥವಾ ಇತರೆ ಕಾರಣಗಳಿಗೆ ಬರಬಾರದು ಎಂಬುದು ಎಸ್‍ಪಿ, ಸಿಇಓ ಹಾಗೂ ನಮ್ಮೆಲ್ಲರ ಒಕ್ಕೊರಲ ಮನವಿಯಾಗಿದೆ ಎಂದರು.

ಚೆಕ್‍ಪೋಸ್ಟ್ ಮೂಲಕ ನಿಗಾವಣೆ

ದಾವಣಗೆರೆ ಜಿಲ್ಲೆಗೆ ಲಾಕ್‍ಡೌನ್ ಆಗಿರುವ ಒಂಭತ್ತು ಜಿಲ್ಲೆಗಳಿಂದ ಬರುವ ವಾಹನಗಳನ್ನು ತಪಾಸಣೆ ಮಾಡಲಾಗುವುದು. ಇದಕ್ಕಾಗಿ ಜಿಲ್ಲೆಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಆರಂಭಿಸಲಾಗುವುದು. ಜಿಲ್ಲೆಗೆ ಬೇರೆ ಬೇರೆ ಊರುಗಳಿಂದ ಬರುವ ವಾಹನಗಳಲ್ಲಿನ ಜನರನ್ನು ತಪಾಸಣೆ(ಸ್ಕ್ರೀನಿಂಗ್) ಮಾಡಲಾಗುವುದು.

ಅವರಿಗೆ ಯಾವುದೇ ಸೋಂಕು ಇರುವುದು ಕಂಡು ಬಂದರೆ ಅಂತಹವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ನಿಗಾವಣೆಗೆ ಇರಿಸಲಾಗುವುದು. ಚೆಕ್‍ಪೋಸ್ಟ್‍ಗಳಲ್ಲಿ ಅರಣ್ಯ ಇಲಾಖೆ, ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಗಳ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು ಎಂದರು.

ಬಸ್ ಓಡಾಟ ರದ್ದು

ಲಾಕ್‍ಡೌನ್ ಆಗಿರುವ 9 ಜಿಲ್ಲೆಗಳಿಂದ ಓಡಾಡುವ ಖಾಸಗಿ ಬಸ್‍ಗಳನ್ನು ಸಹ ನಿಲ್ಲಿಸಲಾಗುವು. ಹಾಗೂ ಜಿಲ್ಲೆಯಿಂದ ಸಹ ಈ 9 ಜಿಲ್ಲೆಗಳಿಗೆ ಯಾವುದೇ ಬಸ್‍ಗಳು ಓಡಾಡಬಾರದಂತೆ ಕೆಎಸ್‍ಆರ್‍ಟಿಸಿ, ಆರ್‍ಟಿಓ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.

ಎಲ್ಲ ಅಧಿಕಾರಿಗಳ ಮೊದಲ ಆದ್ಯತೆ ಕೊರೊನಾ ನಿಯಂತ್ರಣ

ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿ ಕೆಲಸಕ್ಕಿಂತ ಮುಖ್ಯವಾಗಿ ಮೊದಲನೇ ಆದ್ಯತೆಯಾಗಿ ಕೊರೊನಾ ವೈರಸ್ ನಿಯಂತ್ರಣದ ಕಾರ್ಯಗಳಲ್ಲಿ ಭಾಗಯಾಗಬೇಕು.

ಅಗತ್ಯ ಸೇವೆ ಹೊರತುಪಡಿಸಿ ಇತರೆ ಸೇವೆಗಳ ಬಂದ್

ಮೆಡಿಕಲ್ ಶಾಪ್, ಹಾಲು, ತರಕಾರಿ, ದಿನಸಿ ಅಂಗಡಿಗಳು, ಆಸ್ಪತ್ರೆಗಳು, ಪೆಟ್ರೋಲ್ ಬಂಕ್, ಕುಡಿಯುವ ನೀರಿನ ವ್ಯವಸ್ಥೆ, ಅಂಚೆ ಸೇವೆ, ಆಹಾರ, ಅಗ್ನಿಶಾಮಕ, ವಿದ್ಯುತ್ ಸೇರಿದಂತೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ವಾಣಿಜ್ಯ ಸೇವೆಗಳನ್ನು ಈ ಕ್ಷಣದಿಂದ ಸ್ಥಗಿತಗೊಳಿಸಲು ಆದೇಶಿಸಲಾಗುವುದು. ಬಾರ್ ಮತ್ತು ರೆಸ್ಟೋರೆಂಟ್, ಬಂಗಾರದ ಅಂಗಡಿ, ಬಟ್ಟೆ, ಪಾತ್ರೆ ಅಂಡಿಗಳು, ಹಾರ್ಡ್‍ವೇರ್ ಶಾಪ್‍ಗಳನ್ನು ಸ್ಥಗಿತಗೊಳಿಸಲಾಗಿದೆ ಎಂದರು.

ಆಹಾರ ಪಾರ್ಸೆಲ್‍ಗೆ ಅವಕಾಶ

ಹೋಟೆಲ್, ಕ್ಯಾಂಟಿನ್‍ಗಳಲ್ಲಿ ಕುಳಿತು ಊಟ ಮಾಡಲು ಅವಕಾಶ ಇಲ್ಲ. ಬದಲಾಗಿ ಪಾರ್ಸೆಲ್ ತೆಗೆದುಕೊಂಡು ಹೋಗಬಹುದು.

ಸುಳ್ಳುಸುದ್ದಿ ಹರಡಿದವರಿಗೆ ಕಠಿಣ ಕ್ರಮ

ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ. ಆದರೆ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಇದೆ ಎಂದು ಸುಳ್ಳುಸುದ್ದಿ ಹರಡುತ್ತಿದ್ದಾರೆಂಬ ವಿಷಯ ನನ್ನ ಗಮನಕ್ಕೆ ಬಂದಿದ್ದು, ಇಂತಹ ಸುಳ್ಳು ಸುದ್ದಿ ಹರಡಿಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಎಸ್‍ಪಿ ಹನುಮಂತರಾಯ ಮಾತನಾಡಿ, ಪಾಲಿಕೆ, ಆರ್‍ಟಿಓ, ಕೆಎಸ್‍ಆರ್‍ಟಿಸಿ ಹಾಗೂ ಸಿಜಿ ಆಸ್ಪತ್ರೆಯ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆಗೆ ಅನುಕೂಲವಾಗುವಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳನ್ನು ನೀಡಲಾಗುವುದು.

ವಿದೇಶಕ್ಕೆ ಹೋಗಿ ಬಂದು ಮನೆಯಲ್ಲಿ ಪ್ರತ್ಯೇಕವಾಗಿ ಅವಲೋಕನ ಅವಧಿಯಲ್ಲಿ ಇರಿಸಲಾಗಿರುವ ಮಾಹಿತಿಯನ್ನು ಪೊಲೀಸ್ ಇಲಾಖೆಗೆ ಪ್ರತಿ ದಿನ ನೀಡಬೇಕು. ನಮ್ಮ ನಿಯೋಜಿತ ಸಿಬ್ಬಂದಿಗಳು ಅಂತವರನ್ನು ಮನೆಯಲ್ಲೇ ಇರುವಂತೆ ನಿಗಾ ವಹಿಸುವರು. ಹಾಗೂ ಅವರ ಮನೆ ಮುಂದೆ ಕೊರೊನಾ ವೈರಸ್ ಜಾಗೃತಿ ಬಗ್ಗೆ ಭಿತ್ತಿಚಿತ್ರ ಅಂಟಿಸಲಾಗುವುದು. ಅವರು ಹೊರಗೆ ಹೋಗುವುದರಿಂದ ತೊಂದರೆ ಆಗುವ ಹಿನ್ನೆಲೆಯಲ್ಲಿ ವಿದೇಶಕ್ಕೆ ಹೋಗಿ ಬಂದವರು ಕಡ್ಡಾಯವಾಗಿ ಅವಲೋಕನ ಅವಧಿಯನ್ನು ಪೂರ್ಣಗೊಳಿಸಬೇಕು ಎಂದರು.

ಜಿಲ್ಲಾಧಿಕಾರಿಗಳು, ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಆರೋಗ್ಯ, ಕಂದಾಯ, ಸ್ಥಳೀಯ ಸಂಸ್ಥೆಗಳು, ಪಾಲಿಕೆ, ಆರ್‍ಟಿಓ, ಕೆಎಸ್‍ಆರ್‍ಟಿಸಿ ಸೇರಿದಂತೆ ನಿಗಾವಣೆಗಾಗಿ ನಿಯೋಜಿಸಲಾಗಿರುವ 6 ತಂಡಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು. ದಾಖಲಾತಿಗಳನ್ನು ನಿಖರವಾಗಿ ನಿರ್ವಹಿಸಬೇಕು ಎಂದರು.

ಲಾಕ್‍ಡೌನ್ ಬಗ್ಗೆ ಚಿಂತನೆ

ದಾವಣಗೆರೆ ಜಿಲ್ಲೆಯು ಸರ್ಕಾರ ಲಾಕ್‍ಡೌನ್ ಮಾಡಿರುವ ಜಿಲ್ಲೆಗಳಿಗೆ ಗಡಿಯಾಗಿರುವುದರ ಹಿನ್ನೆಲೆ ಹಾಗೂ ಸಾರ್ವಜನಿಕರು ಇಂದು ನಡೆದ ಫೋನ್‍ಇನ್ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣ ವರದಿಯಾಗುವವರೆಗೆ ಕಾಯದೇ ಮುನ್ನೆಚ್ಚರಿಕಾ ಕ್ರಮವಾಗಿ ಇಂದಿನಿಂದಲೇ ಲಾಕ್‍ಡೌನ್ ಮಾಡಬೇಕೆಂದು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಂದಿನಿಂದಲೇ ಲಾಕ್‍ಡೌನ್ ಮಾಡುವ ಬಗ್ಗೆ ಚಿಂತಿಸಲಾಗುವುದು ಎಂದ ಅವರು, ಲಾಕ್‍ಡೌನ್ ಮಾಡುವವರೆಗೆ ಕಾಯದೇ ವ್ಯಾಪಾರಸ್ಥರು, ವಾಣಿಜ್ಯ ಅಂಗಡಿಗಳ ಮಾಲೀಕರು ಸ್ವಯಂ ಬಂಧ್ ಮಾಡಬೇಕೆಂದರು.

ವಾರ್ಡುವಾರು ಕೈತೊಳೆಯುವ ಪಾಯಿಂಟ್

ಕೊರೊನಾ ಸೋಂಕು ಮುನ್ನೆಚ್ಚರಿಕೆ ಕ್ರಮವಾಗಿ ನಗರದ 45 ವಾರ್ಡುಗಳು ಸೇರಿದಂತೆ ಇತರೆ ಸ್ಥಳೀಐ ಸಂಸ್ಥೆಗಳು ಸೇರಿ ಒಟ್ಟು 158 ಪಾಯಿಂಟ್‍ಗಳಲ್ಲಿ ಸ್ಯಾನಿಟೈಸರ್/ಸಾಬೂನಿನಿಂದ ‘ಕೈ ತೊಳೆಯುವ ಕೇಂದ್ರ’ ಗಳನ್ನು ಮೊದಲನೇ ಹಂತದಲ್ಲಿ 15 ದಿನಗಳ ಕಾಲ ತೆರೆಯಲಾಗುವುದು. ಇಲ್ಲಿ ಸಾರ್ವಜನಿಕರು ಆಗಾಗ ಕೈ ತೊಳೆಯುವ ಮೂಲಕ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬಹುದು ಎಂದರು.

ಎಟಿಎಂ ಸ್ಯಾನಿಟೈಸರ್ ಕಡ್ಡಾಯ

ಎಲ್ಲ ಎಟಿಎಂ ಗಳಲ್ಲಿ ಸ್ಯಾನಿಟೈಸರ್‍ಗಳನ್ನು ಕಡ್ಡಾಯವಾಗಿ ಇಡಬೇಕು. ಸ್ಯಾನಿಟೈಸರ್ ಇಡದೇ ಇರುವ ಎಟಿಎಂನ ಬ್ಯಾಂಕುಗಳಿಗೆ ನೋಟಿಸ್ ನೀಡಲಾಗುವುದು.

ಎನ್-95 ಅವಶ್ಯಕತೆ ಇಲ್ಲ

ಚಿಗಟೇರಿ ಜಿಲ್ಲಾ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೆಡಿಕಲ್ ವಿದ್ಯಾರ್ಥಿಗಳು ಇದುವರೆಗೂ ಎನ್-95 ಮಾಸ್ಕ್ ಲಭ್ಯವಾಗಿಲ್ಲ ಹಾಗಾಗಿ ಕರ್ತವ್ಯ ನಿರ್ವಹಿಸಲು ಕಷ್ಟ ಎಂದು ದೂರಿರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಕರ್ತವ್ಯ ನಿರ್ವಹಿಸಲು ಎನ್-95 ಮಾಸ್ಕ್ ಬೇಕೆಂದಿಲ್ಲ. ಬದಲಾಗಿ ಟ್ರಿಪಲ್ ಲೇಯರ್ ಮಾಸ್ಕ್ ಸಾಕು.

ಸರ್ಕಾರದ ಆದೇಶದ ಅನ್ವಯ ಎಲ್ಲೆಡೆಯೂ ಎನ್-95 ಮಾಸ್ಕ್ ಅವಶ್ಯಕವಲ್ಲ. ಬದಲಾಗಿ ಐಸಿಯು ಹಾಗೂ ಐಸೋಲೇಷನ್ ವಾರ್ಡ್‍ಗಳಲ್ಲಿ ಅದರ ಅವಶ್ಯಕತೆ ಇದೆಯಷ್ಟೇ. ವಿದ್ಯಾರ್ಥಿಗಳಿಗೆ ಈ ಕುರಿತು ಯಾವುದೇ ಆತಂಕ ಬೇಡ. ಇದನ್ನು ಅರಿತು ಕರ್ತವ್ಯ ನಿರ್ವಹಿಸುವುದರೊಂದಿಗೆ ಜಿಲ್ಲಾಡಳಿತಕ್ಕೆ ಸಹಕರಿಸಬೇಕು. ಅದರಂತೆ ಅವಶ್ಯಕವಾಗಿರುವ ಸ್ಯಾನಿಟೈಸರ್ ಮತ್ತು ಮಾಸ್ಕ್‍ಗಳ ಕೊರತೆ ಬರದಂತೆ ನೋಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.ತಾಲ್ಲೂಕುಗಳಿಂದ ಬರುವ ಖಾಸಗಿ ಬಸ್‍ಗಳಲ್ಲಿ ಯದ್ವಾತದ್ವ ಜನರನ್ನು ತುಂಬಿಸುವುದು ಸೂಕ್ತವಲ್ಲ. ಈ ಬಗ್ಗೆ ಆರ್‍ಟಿಓ ಕ್ರಮ ವಹಿಸಬೇಕೆಂದರು ಹೇಳಿದರು.

ಬಸ್ ವ್ಯವಸ್ಥೆ ಇಲ್ಲದ ಕಡೆ ಆಟೋದವರು ಸಾರ್ವಜನಿಕರಿಂದ ದುಪ್ಪಟ್ಟು ಹಣ ಕೇಳುತ್ತಿರುವುದು ಗಮನಕ್ಕೆ ಬಂದಿದ್ದು, ಇದನ್ನು ಈಗಲೇ ನಿಲ್ಲಿಸಬೇಕೆಂದು ಸೂಚಿಸಿದರು.

ಪೊಲೀಸ್ ಇಲಾಖೆಯ ಸಹಾಯ ಪಡೆದು ಪಾಲಿಕೆಯ ಆರೋಗ್ಯ ನಿರೀಕ್ಷಕರು, ಅಂಗಡಿ, ಬಾರ್, ರೆಸ್ಟೋರೆಂಟ್ ಸೇರಿದಂತೆ ವಾಣಿಜ್ಯ ಮಳಿಗೆಗಳನ್ನು ಎಲ್ಲೆಡೆ ಮುಚ್ಚಿಸಬೇಕು ಎಂದ ಅವರು ಜಿಲ್ಲೆಯಲ್ಲಿ ಎಲ್ಲ ಕ್ವಾರಿಗಳನ್ನು ಸಹ ಇಂದಿನಿಂದಲೇ ಬಂದ್ ಮಾಡಬೇಕು ಎಂದು ಸೂಚಿಸಿದರು.

ಹಕ್ಕಿಜ್ವರ

ಜಿಲ್ಲಾಧಿಕಾರಿಗಳು, ಎಲ್ಲ ಕೋಳಿ ಫಾರಂಗಳನ್ನು ಸ್ವಚ್ಚಗೊಳಿಸುವ ಕೆಲಸ ಆಗಬೇಕು. ಸ್ವಚ್ಚತೆ ಮಾಡಿಸದೇ ಇರುವ ಫಾರ್ಮ್‍ಗಳನ್ನು ಶಾಶ್ವತವಾಗಿ ನಿಲ್ಲಿಸಲಾಗುವುದು ಎಂದರು.

ಸಭೆಯಲ್ಲಿ ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ, ಅಪರ ಜಿಲ್ಲಾಧಿಕರಿ ಪೂಜಾರ ವೀರಮಲ್ಲಪ್ಪ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಕೆಎಸ್‍ಆರ್‍ಟಿಸಿ ಡಿಸಿ ಸಿದ್ದೇಶ್, ಆರ್‍ಟಿಓ ಎನ್.ಜೆ.ಬಣಕಾರ್, ಡಿಹೆಚ್‍ಓ ಡಾ.ರಾಘವೇಂದ್ರಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ ಮನೆಗೆ ಬಿಎಲ್‍ಒಗಳ ಭೇಟಿ ಪ್ರಾರಂಭ

Published

on

ಸುದ್ದಿದಿನ,ದಾವಣಗೆರೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಾದ್ಯಂತ ‘ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಎಸ್.ಐ.ಆರ್. ಪ್ರಕ್ರಿಯೆ ಅತ್ಯಂತ ಚುರುಕಿನಿಂದ ಸಾಗುತ್ತಿದೆ. ಜಿಲ್ಲೆಯ ಒಟ್ಟು 7 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜೂನ್ 30 ರಿಂದಲೇ ಬೂತ್ ಮಟ್ಟದ ಅಧಿಕಾರಿಗಳು ಎನುಮೆರೇಷನ್ ನಮೂನೆಗಳೊಂದಿಗೆ ಮತದಾರರ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಜೂನ್ 16ರ ವರೆಗಿನ ಅಂಕಿ-ಅಂಶಗಳಂತೆ ಜಿಲ್ಲೆಯಲ್ಲಿ ಒಟ್ಟು 14,99,282 ಮತದಾರರಿದ್ದಾರೆ. ಮತದಾರರ ನಿಖರ ಮಾಹಿತಿ ಪಡೆಯಲು ಈಗಾಗಲೇ 8,99,435 ಎನುಮೆರೇಷನ್ ನಮೂನೆಗಳನ್ನು ಬಿಎಲ್‍ಒಗಳ ಮೂಲಕ ಸಾರ್ವಜನಿಕರಿಗೆ ವಿತರಿಸಲಾಗಿದ್ದು, ಈ ಪೈಕಿ 38,003 ನಮೂನೆಗಳ ಗಣಕೀಕರಣ ಪ್ರಕ್ರಿಯೆಯೂ ಪೂರ್ಣಗೊಂಡಿದೆ.

ಕ್ಷೇತ್ರವಾರು ಮಾಹಿತಿ ಮತ್ತು ಪ್ರಗತಿ ವಿವರ

ಜಗಳೂರು: 2,00,836 ಒಟ್ಟು ಮತದಾರರಿದ್ದು, 1,27,608 ನಮೂನೆಗಳನ್ನು ವಿತರಿಸಲಾಗಿದೆ. ಹರಿಹರ: 2,11,023 ಮತದಾರರಿದ್ದು, 1,55,143 ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ. ದಾವಣಗೆರೆ ಉತ್ತರ: 2,58,718 ಮತದಾರರ ಪೈಕಿ 69,881 ನಮೂನೆಗಳನ್ನು ವಿತರಿಸಲಾಗಿದೆ. ದಾವಣಗೆರೆ ದಕ್ಷಿಣ: 2,27,996 ಮತದಾರರಿದ್ದು, 79,365 ನಮೂನೆಗಳನ್ನು ಹಂಚಲಾಗಿದೆ. ಮಾಯಕೊಂಡ: 1,97,048 ಮತದಾರರಿದ್ದು, 1,66,618 ನಮೂನೆ ವಿತರಣೆಯಾಗಿದೆ. ಚನ್ನಗಿರಿ: 2,03,628 ಮತದಾರರ ಪೈಕಿ 1,64,380 ನಮೂನೆಗಳನ್ನು ತಲುಪಿಸಲಾಗಿದೆ. ಹೊನ್ನಾಳಿ: 2,00,033 ಒಟ್ಟು ಮತದಾರರಿದ್ದು, 1,36,440 ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ.

ಸ್ಥಳಾಂತರ, ವಲಸೆ ಹಾಗೂ ಮರಣ ಪ್ರಕರಣಗಳ ಪತ್ತೆ: ಮನೆ ಮನೆ ಭೇಟಿಯ ಸಂದರ್ಭದಲ್ಲಿ ಬಿಎಲ್‍ಒಗಳು ಮತದಾರರ ವಿವರಗಳನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ. ಜುಲೈ 1ರ ವರೆಗಿನ ವರದಿಯ ಪ್ರಕಾರ, ಜಿಲ್ಲಾದ್ಯಂತ ಒಟ್ಟು 421 ವಿಶೇಷ ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ 188 ಮರಣ ಹೊಂದಿದ ಪ್ರಕರಣಗಳು, 153 ಶಾಶ್ವತವಾಗಿ ವಲಸೆ ಹೋದವರು, 71 ದ್ವಿಪ್ರತಿ ಮತದಾರರು ಹಾಗೂ 5 ಅಪೂರ್ಣ ಮಾಹಿತಿ ಇರುವ ಪ್ರಕರಣಗಳು ಸೇರಿವೆ. ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ಗರಿಷ್ಠ 110 ಹಾಗೂ ಮಾಯಕೊಂಡದಲ್ಲಿ 93 ಇಂತಹ ಪ್ರಕರಣಗಳು ಪತ್ತೆಯಾಗಿವೆ. ಈ ಮನೆ ಮನೆ ಭೇಟಿ ಹಾಗೂ ನಮೂನೆಗಳ ಸಂಗ್ರಹಣೆ ಮತ್ತು ಗಣಕೀಕರಣ ಪ್ರಕ್ರಿಯೆಯು ಜುಲೈ 29, 2026 ರವರೆಗೆ ಮುಂದುವರಿಯಲಿದ್ದು, ಸಾರ್ವಜನಿಕರು ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿ ಸಹಕರಿಸಬೇಕೆಂದು ಜಿಲ್ಲಾಡಳಿತ ಕೋರಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕುಂದುವಾಡದಲ್ಲಿ ದೂಡಾ ಹೊಸ ಬಡಾವಣೆ ನಿರ್ಮಾಣ ಯೋಜನೆ ಕೈ ಬಿಡಲು ರೈತರ ಆಗ್ರಹ | ವಸತಿ ಯೋಜನೆ ಕೈ ಬಿಡಿ ಎಂದು ದೂಡಾಗೆ ಸೂಚಿಸಿದ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ

Published

on

ಸುದ್ದಿದಿನ,ದಾವಣಗೆರೆ : ನಗರದ ಹಳೇ ಕುಂದುವಾಡದಲ್ಲಿ ದೂಡಾದಿಂದ ನಿರ್ಮಾಣ ಮಾಡಲು ಹೊರಟಿರುವ ವಸತಿ(ಹೊಸ ಲೇ ಔಟ್) ಯೋಜನೆಯನ್ನ ಈ ಕೂಡಲೇ ಕೈ ಬಿಡಬೇಕು ಎಂದು ರೈತರು ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯನವರಿಗೆ ಹಾಗೂ ದೂಡಾ ಆಯುಕ್ತೆ ರೇಣುಕ ಇವರಿಗೆ ಮನವಿ ಸಲ್ಲಿಸಿದರು.

ನಗರದ ಬಾಪೂಜಿ ಗೆಸ್ಟ್ ಹೌಸ್ ನಲ್ಲಿ ಮನವಿ ಸಲ್ಲಿಸಿದ ಹಳೇ ಕುಂದುವಾಡ ರೈತರು, ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ರಿ. ಸರ್ವೆ ನಂಬರ್ 125ರಿಂದ 142ರಲ್ಲಿ ಹೊಸ ಬಡಾವಣೆ ನಿರ್ಮಾಣ ಮಾಡಲು ಮುಂದಾಗಿತ್ತು, ಆದರೆ ರೈತರು ಪ್ರಾಧಿಕಾರದ ಮಧ್ಯೆ ಒಡಂಬಡಿಕೆ ಆಗದ ಕಾರಣ ಪ್ರಕ್ರಿಯೆ ಕೈ ಬಿಟ್ಟಿತ್ತು. ಪ್ರಾಧಿಕಾರವು ಸಹ ಈ ಜಮೀನುಗಳ ದರ ಹೆಚ್ಚಿದ್ದು ಖರೀದಿ ಮಾಡುವುದಕ್ಕೆ ಆಗುವುದಿಲ್ಲ ಎಂದು ಸಹ ಹೇಳಿತ್ತು, ಅದರಂತೆ 19-02-2024 ರಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ ಸದರಿ ವಸತಿ ಯೋಜನೆ ಕೈ ಬಿಡಲು ಸಭೆ ತೀರ್ಮಾನಿಸಿ ನಗರಾಭಿವೃದ್ದಿ ಇಲಾಖೆಗೆ ಪತ್ರ ಬರೆದಿತ್ತು, ಆದರೆ ಇದುವರೆಗೂ ನಗರಾಭಿವೃದ್ಧಿ ಇಲಾಖೆ ಈ ಬಗ್ಗೆ ಕ್ರಮ ವಹಿಸಿಲ್ಲ, ಆರೇಳು ವರ್ಷಗಳಿಂದ ಅಲೆದಾಡಿಸುತ್ತಿದ್ದಾರೆ ಎಂದು ದೂರಿದರು.

ಇದರಿಂದ ರೈತರು ತುಂಬಾ ತೊಂದರೆಯಲ್ಲಿ ಸಿಲುಕಿದ್ದಾರೆ, ಕುರುಬ, ಮಡಿವಾಳ, ಉಪ್ಪಾರ ಜನಾಂಗ ಸೇರಿದಂತೆ ಬಹುತೇಕರು ಹಿಂದುಳಿದ ವರ್ಗದ ಸಣ್ಣ ಹಿಡುವಳಿದಾರರು ಇಲ್ಲಿದ್ದಾರೆ, ಸಾಲದ ಹೊರೆ ಜಾಸ್ತಿ ಆದ ಹಿನ್ನಲೆ ಹಲವರಿಗೆ ತೊಂದರೆ ಆಗಿದೆ, ಈ ವಸತಿ ಯೋಜನೆಯಲ್ಲಿ ಯಾವುದೇ ರೀತಿ ಭೂ ಸ್ವಾಧೀನ ಪ್ರಕ್ರಿಯೆ ನಡೆದಿರುವುದಿಲ್ಲ, ಯಾವುದೇ ಅಧಿಸೂಚನೆ (NOTIFICATION) ಆಗಿರುವುದಿಲ್ಲ. ಈ ಹಿಂದೆ ಸಚಿವರಾಗಿದ್ದ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭೂಮಿ ದರ ಹೆಚ್ಚಾಗಿದ್ದು, ಈ ಹಿನ್ನಲೆ ಸದರಿ ಯೋಜನೆ ಕೈ ಬಿಡುವಂತೆ ನಗರಾಭಿವೃದ್ದಿ ಇಲಾಖೆಗೆ ಪತ್ರ ಬರೆದಿದೆ, ಹೀಗಿದ್ದರು ನಮ್ಮಗಳ ಜಮೀನಿನ ಮೇಲೆ ದೂಡಾ ಹಕ್ಕು ಚಲಾಯಿಸಲು ಮುಂದಾಗಿ ಅಗ್ರಿಮೆಂಟ್, ರಿಜಿಸ್ಟ್ಟೇಷನ್, ಪೋಡು ಪ್ರಕ್ರಿಯೆ ಸೇರಿದಂತೆ ಇನ್ನಿತರೆ ಹಕ್ಕುಗಳನ್ನ ಚಲಾಯಿಸದಂತೆ ದಾವಣಗೆರೆ ಸಬ್ ರಿಜಿಸ್ಟ್ರಾರ್ ಗೆ ಪತ್ರ ಬರೆದು ಅಡ್ಡಿಪಡಿಸಿದೆ, ಈ ಹಿನ್ನಲೆ ನಗರಾಭಿವೃದ್ಧಿ ಇಲಾಖೆಯಿಂದ ದಯಮಾಡಿ ಈ ವಸತಿ ಯೋಜನೆ ಕೈ ಬಿಡಲು ಅನುಮತಿ ನೀಡುವಂತೆ ಹಾಗೂ ದಾವಣಗೆರೆ ಪ್ರಾಧೀಕಾರದ ಇಂದಿನ ಸಭೆಯಲ್ಲಿಯಲ್ಲಿಯೇ ಈ ಯೋಜನೆ ಕೈ ಬಿಡುವಂತೆ ಆದೇಶ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ರೈತರಿಗೆ ಭರವಸೆ ನೀಡಿದ ಯತೀಂದ್ರ ಅವರು, ಯಾವುದೇ ನೋಟಿಫಿಕೇಶನ್ ಆಗಿಲ್ಲ ಅನ್ನುವುದಾದರೇ ಬಲವಂತದಿಂದ ರೈತರ ಭೂಮಿ‌ ಕಿತ್ತುಕೊಳ್ಳುವುದು ಸರಿಯಲ್ಲ, ಈ ಬಗ್ಗೆ ಮಾಹಿತಿಯೊಂದಿಗೆ ಇಲಾಖೆಗೆ ಪತ್ರ ಬರೆಯಿರಿ, ಇಲಾಖೆಯಿಂದ ಯೋಜನೆ ಕೈ ಬಿಡುವ ಬಗ್ಗೆ ತೀರ್ಮಾನಿಸುತ್ತೇವೆ, ಬೇರೆ ಕಡೆಗಳಲ್ಲಿ ಜಾಗ ಗುರುತಿಸಿದ್ದು, ಅಲ್ಲಿ ವಸತಿ ಯೋಜನೆ ಮುಂದುವರೆಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್ ಜಿ ಗಣೇಶಪ್ಪ, ಮುಖಂಡರಾದ ನರಸಪ್ಪರ ಶಿವಪ್ಪ, ಮಿಟ್ಲಕಟ್ಟೆ ಚಂದ್ರಪ್ಪ, ರೇವಣಪ್ಪ, ದೇವರಾಜ್, ಸಣ್ಣಿಂಗಪ್ಪ, ಮಧುನಾಗರಾಜ್, ಗೋಣೆಪ್ಪ, ರಾಮಣ್ಣ, ಹನುಮಂತಪ್ಪ, ಈಶಪ್ಪ, ಆನಂದಪ್ಪ, ಗುಡ್ಡಪ್ಪ, ರಮೇಶ್, ನಾಗರಾಜ್, ಹನುಮಂತ್ ಸೇರಿದಂತೆ ಮತ್ತಿತರರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending