Connect with us

ದಿನದ ಸುದ್ದಿ

ದಾವಣಗೆರೆ | ಲಾಕ್‍ಡೌನ್ ಜಿಲ್ಲೆಗೆ ಹೋಗುವುದು ಮತ್ತು ಬರುವುದು ಬೇಡ ; ಅಗತ್ಯ ಸೇವೆ ಹೊರತುಪಡಿಸಿ ಇತರೆ ಸೇವೆಗಳ ಬಂದ್ : ಜಿಲ್ಲಾಧಿಕಾರಿ

Published

on

ಸುದ್ದಿದಿನ,ದಾವಣಗೆರೆ : ಕೊರೊನಾ ವೈರಸ್ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಯುಗಾದಿ ಹಬ್ಬವನ್ನು ತಾವು ಸದ್ಯ ಇರುವ ಸ್ಥಳದಲ್ಲೇ ಆಚರಿಸಬೇಕು. ಅನಗತ್ಯವಾಗಿ ಪರವೂರಿಗೆ, ನೆಂಟರ ಊರು ಎಂದು ತೆರಳಬಾರದು ಹಾಗೂ ಬೇರೆ ಜಿಲ್ಲೆಗಳಿಂದ ಸಹ ಯಾರೂ ದಾವಣಗೆರೆ ಜಿಲ್ಲೆಗೆ ಆಗಮಿಸಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸಾರ್ವಜನಿಕರಿಗೆ ಸೂಚನೆ ನೀಡಿದರು.

ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೊರೊನಾ ವೈರಸ್ ನಿಯಂತ್ರಣ ಮತ್ತು ತಡೆ ಕುರಿತಾಗಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳಿದ್ದು ಲಾಕ್‍ಡೌನ್ ಆಗಿರುವ ಒಂಭತ್ತು ಜಿಲ್ಲೆಗಳ ನಾಗರೀಕರು ದಾವಣಗೆರೆ ಜಿಲ್ಲೆಗೆ ಹಬ್ಬ ಅಥವಾ ಇತರೆ ಕಾರಣಗಳಿಗೆ ಬರಬಾರದು ಎಂಬುದು ಎಸ್‍ಪಿ, ಸಿಇಓ ಹಾಗೂ ನಮ್ಮೆಲ್ಲರ ಒಕ್ಕೊರಲ ಮನವಿಯಾಗಿದೆ ಎಂದರು.

ಚೆಕ್‍ಪೋಸ್ಟ್ ಮೂಲಕ ನಿಗಾವಣೆ

ದಾವಣಗೆರೆ ಜಿಲ್ಲೆಗೆ ಲಾಕ್‍ಡೌನ್ ಆಗಿರುವ ಒಂಭತ್ತು ಜಿಲ್ಲೆಗಳಿಂದ ಬರುವ ವಾಹನಗಳನ್ನು ತಪಾಸಣೆ ಮಾಡಲಾಗುವುದು. ಇದಕ್ಕಾಗಿ ಜಿಲ್ಲೆಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಆರಂಭಿಸಲಾಗುವುದು. ಜಿಲ್ಲೆಗೆ ಬೇರೆ ಬೇರೆ ಊರುಗಳಿಂದ ಬರುವ ವಾಹನಗಳಲ್ಲಿನ ಜನರನ್ನು ತಪಾಸಣೆ(ಸ್ಕ್ರೀನಿಂಗ್) ಮಾಡಲಾಗುವುದು.

ಅವರಿಗೆ ಯಾವುದೇ ಸೋಂಕು ಇರುವುದು ಕಂಡು ಬಂದರೆ ಅಂತಹವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ನಿಗಾವಣೆಗೆ ಇರಿಸಲಾಗುವುದು. ಚೆಕ್‍ಪೋಸ್ಟ್‍ಗಳಲ್ಲಿ ಅರಣ್ಯ ಇಲಾಖೆ, ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಗಳ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು ಎಂದರು.

ಬಸ್ ಓಡಾಟ ರದ್ದು

ಲಾಕ್‍ಡೌನ್ ಆಗಿರುವ 9 ಜಿಲ್ಲೆಗಳಿಂದ ಓಡಾಡುವ ಖಾಸಗಿ ಬಸ್‍ಗಳನ್ನು ಸಹ ನಿಲ್ಲಿಸಲಾಗುವು. ಹಾಗೂ ಜಿಲ್ಲೆಯಿಂದ ಸಹ ಈ 9 ಜಿಲ್ಲೆಗಳಿಗೆ ಯಾವುದೇ ಬಸ್‍ಗಳು ಓಡಾಡಬಾರದಂತೆ ಕೆಎಸ್‍ಆರ್‍ಟಿಸಿ, ಆರ್‍ಟಿಓ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.

ಎಲ್ಲ ಅಧಿಕಾರಿಗಳ ಮೊದಲ ಆದ್ಯತೆ ಕೊರೊನಾ ನಿಯಂತ್ರಣ

ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿ ಕೆಲಸಕ್ಕಿಂತ ಮುಖ್ಯವಾಗಿ ಮೊದಲನೇ ಆದ್ಯತೆಯಾಗಿ ಕೊರೊನಾ ವೈರಸ್ ನಿಯಂತ್ರಣದ ಕಾರ್ಯಗಳಲ್ಲಿ ಭಾಗಯಾಗಬೇಕು.

ಅಗತ್ಯ ಸೇವೆ ಹೊರತುಪಡಿಸಿ ಇತರೆ ಸೇವೆಗಳ ಬಂದ್

ಮೆಡಿಕಲ್ ಶಾಪ್, ಹಾಲು, ತರಕಾರಿ, ದಿನಸಿ ಅಂಗಡಿಗಳು, ಆಸ್ಪತ್ರೆಗಳು, ಪೆಟ್ರೋಲ್ ಬಂಕ್, ಕುಡಿಯುವ ನೀರಿನ ವ್ಯವಸ್ಥೆ, ಅಂಚೆ ಸೇವೆ, ಆಹಾರ, ಅಗ್ನಿಶಾಮಕ, ವಿದ್ಯುತ್ ಸೇರಿದಂತೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ವಾಣಿಜ್ಯ ಸೇವೆಗಳನ್ನು ಈ ಕ್ಷಣದಿಂದ ಸ್ಥಗಿತಗೊಳಿಸಲು ಆದೇಶಿಸಲಾಗುವುದು. ಬಾರ್ ಮತ್ತು ರೆಸ್ಟೋರೆಂಟ್, ಬಂಗಾರದ ಅಂಗಡಿ, ಬಟ್ಟೆ, ಪಾತ್ರೆ ಅಂಡಿಗಳು, ಹಾರ್ಡ್‍ವೇರ್ ಶಾಪ್‍ಗಳನ್ನು ಸ್ಥಗಿತಗೊಳಿಸಲಾಗಿದೆ ಎಂದರು.

ಆಹಾರ ಪಾರ್ಸೆಲ್‍ಗೆ ಅವಕಾಶ

ಹೋಟೆಲ್, ಕ್ಯಾಂಟಿನ್‍ಗಳಲ್ಲಿ ಕುಳಿತು ಊಟ ಮಾಡಲು ಅವಕಾಶ ಇಲ್ಲ. ಬದಲಾಗಿ ಪಾರ್ಸೆಲ್ ತೆಗೆದುಕೊಂಡು ಹೋಗಬಹುದು.

ಸುಳ್ಳುಸುದ್ದಿ ಹರಡಿದವರಿಗೆ ಕಠಿಣ ಕ್ರಮ

ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ. ಆದರೆ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಇದೆ ಎಂದು ಸುಳ್ಳುಸುದ್ದಿ ಹರಡುತ್ತಿದ್ದಾರೆಂಬ ವಿಷಯ ನನ್ನ ಗಮನಕ್ಕೆ ಬಂದಿದ್ದು, ಇಂತಹ ಸುಳ್ಳು ಸುದ್ದಿ ಹರಡಿಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಎಸ್‍ಪಿ ಹನುಮಂತರಾಯ ಮಾತನಾಡಿ, ಪಾಲಿಕೆ, ಆರ್‍ಟಿಓ, ಕೆಎಸ್‍ಆರ್‍ಟಿಸಿ ಹಾಗೂ ಸಿಜಿ ಆಸ್ಪತ್ರೆಯ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆಗೆ ಅನುಕೂಲವಾಗುವಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳನ್ನು ನೀಡಲಾಗುವುದು.

ವಿದೇಶಕ್ಕೆ ಹೋಗಿ ಬಂದು ಮನೆಯಲ್ಲಿ ಪ್ರತ್ಯೇಕವಾಗಿ ಅವಲೋಕನ ಅವಧಿಯಲ್ಲಿ ಇರಿಸಲಾಗಿರುವ ಮಾಹಿತಿಯನ್ನು ಪೊಲೀಸ್ ಇಲಾಖೆಗೆ ಪ್ರತಿ ದಿನ ನೀಡಬೇಕು. ನಮ್ಮ ನಿಯೋಜಿತ ಸಿಬ್ಬಂದಿಗಳು ಅಂತವರನ್ನು ಮನೆಯಲ್ಲೇ ಇರುವಂತೆ ನಿಗಾ ವಹಿಸುವರು. ಹಾಗೂ ಅವರ ಮನೆ ಮುಂದೆ ಕೊರೊನಾ ವೈರಸ್ ಜಾಗೃತಿ ಬಗ್ಗೆ ಭಿತ್ತಿಚಿತ್ರ ಅಂಟಿಸಲಾಗುವುದು. ಅವರು ಹೊರಗೆ ಹೋಗುವುದರಿಂದ ತೊಂದರೆ ಆಗುವ ಹಿನ್ನೆಲೆಯಲ್ಲಿ ವಿದೇಶಕ್ಕೆ ಹೋಗಿ ಬಂದವರು ಕಡ್ಡಾಯವಾಗಿ ಅವಲೋಕನ ಅವಧಿಯನ್ನು ಪೂರ್ಣಗೊಳಿಸಬೇಕು ಎಂದರು.

ಜಿಲ್ಲಾಧಿಕಾರಿಗಳು, ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಆರೋಗ್ಯ, ಕಂದಾಯ, ಸ್ಥಳೀಯ ಸಂಸ್ಥೆಗಳು, ಪಾಲಿಕೆ, ಆರ್‍ಟಿಓ, ಕೆಎಸ್‍ಆರ್‍ಟಿಸಿ ಸೇರಿದಂತೆ ನಿಗಾವಣೆಗಾಗಿ ನಿಯೋಜಿಸಲಾಗಿರುವ 6 ತಂಡಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು. ದಾಖಲಾತಿಗಳನ್ನು ನಿಖರವಾಗಿ ನಿರ್ವಹಿಸಬೇಕು ಎಂದರು.

ಲಾಕ್‍ಡೌನ್ ಬಗ್ಗೆ ಚಿಂತನೆ

ದಾವಣಗೆರೆ ಜಿಲ್ಲೆಯು ಸರ್ಕಾರ ಲಾಕ್‍ಡೌನ್ ಮಾಡಿರುವ ಜಿಲ್ಲೆಗಳಿಗೆ ಗಡಿಯಾಗಿರುವುದರ ಹಿನ್ನೆಲೆ ಹಾಗೂ ಸಾರ್ವಜನಿಕರು ಇಂದು ನಡೆದ ಫೋನ್‍ಇನ್ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣ ವರದಿಯಾಗುವವರೆಗೆ ಕಾಯದೇ ಮುನ್ನೆಚ್ಚರಿಕಾ ಕ್ರಮವಾಗಿ ಇಂದಿನಿಂದಲೇ ಲಾಕ್‍ಡೌನ್ ಮಾಡಬೇಕೆಂದು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಂದಿನಿಂದಲೇ ಲಾಕ್‍ಡೌನ್ ಮಾಡುವ ಬಗ್ಗೆ ಚಿಂತಿಸಲಾಗುವುದು ಎಂದ ಅವರು, ಲಾಕ್‍ಡೌನ್ ಮಾಡುವವರೆಗೆ ಕಾಯದೇ ವ್ಯಾಪಾರಸ್ಥರು, ವಾಣಿಜ್ಯ ಅಂಗಡಿಗಳ ಮಾಲೀಕರು ಸ್ವಯಂ ಬಂಧ್ ಮಾಡಬೇಕೆಂದರು.

ವಾರ್ಡುವಾರು ಕೈತೊಳೆಯುವ ಪಾಯಿಂಟ್

ಕೊರೊನಾ ಸೋಂಕು ಮುನ್ನೆಚ್ಚರಿಕೆ ಕ್ರಮವಾಗಿ ನಗರದ 45 ವಾರ್ಡುಗಳು ಸೇರಿದಂತೆ ಇತರೆ ಸ್ಥಳೀಐ ಸಂಸ್ಥೆಗಳು ಸೇರಿ ಒಟ್ಟು 158 ಪಾಯಿಂಟ್‍ಗಳಲ್ಲಿ ಸ್ಯಾನಿಟೈಸರ್/ಸಾಬೂನಿನಿಂದ ‘ಕೈ ತೊಳೆಯುವ ಕೇಂದ್ರ’ ಗಳನ್ನು ಮೊದಲನೇ ಹಂತದಲ್ಲಿ 15 ದಿನಗಳ ಕಾಲ ತೆರೆಯಲಾಗುವುದು. ಇಲ್ಲಿ ಸಾರ್ವಜನಿಕರು ಆಗಾಗ ಕೈ ತೊಳೆಯುವ ಮೂಲಕ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬಹುದು ಎಂದರು.

ಎಟಿಎಂ ಸ್ಯಾನಿಟೈಸರ್ ಕಡ್ಡಾಯ

ಎಲ್ಲ ಎಟಿಎಂ ಗಳಲ್ಲಿ ಸ್ಯಾನಿಟೈಸರ್‍ಗಳನ್ನು ಕಡ್ಡಾಯವಾಗಿ ಇಡಬೇಕು. ಸ್ಯಾನಿಟೈಸರ್ ಇಡದೇ ಇರುವ ಎಟಿಎಂನ ಬ್ಯಾಂಕುಗಳಿಗೆ ನೋಟಿಸ್ ನೀಡಲಾಗುವುದು.

ಎನ್-95 ಅವಶ್ಯಕತೆ ಇಲ್ಲ

ಚಿಗಟೇರಿ ಜಿಲ್ಲಾ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೆಡಿಕಲ್ ವಿದ್ಯಾರ್ಥಿಗಳು ಇದುವರೆಗೂ ಎನ್-95 ಮಾಸ್ಕ್ ಲಭ್ಯವಾಗಿಲ್ಲ ಹಾಗಾಗಿ ಕರ್ತವ್ಯ ನಿರ್ವಹಿಸಲು ಕಷ್ಟ ಎಂದು ದೂರಿರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಕರ್ತವ್ಯ ನಿರ್ವಹಿಸಲು ಎನ್-95 ಮಾಸ್ಕ್ ಬೇಕೆಂದಿಲ್ಲ. ಬದಲಾಗಿ ಟ್ರಿಪಲ್ ಲೇಯರ್ ಮಾಸ್ಕ್ ಸಾಕು.

ಸರ್ಕಾರದ ಆದೇಶದ ಅನ್ವಯ ಎಲ್ಲೆಡೆಯೂ ಎನ್-95 ಮಾಸ್ಕ್ ಅವಶ್ಯಕವಲ್ಲ. ಬದಲಾಗಿ ಐಸಿಯು ಹಾಗೂ ಐಸೋಲೇಷನ್ ವಾರ್ಡ್‍ಗಳಲ್ಲಿ ಅದರ ಅವಶ್ಯಕತೆ ಇದೆಯಷ್ಟೇ. ವಿದ್ಯಾರ್ಥಿಗಳಿಗೆ ಈ ಕುರಿತು ಯಾವುದೇ ಆತಂಕ ಬೇಡ. ಇದನ್ನು ಅರಿತು ಕರ್ತವ್ಯ ನಿರ್ವಹಿಸುವುದರೊಂದಿಗೆ ಜಿಲ್ಲಾಡಳಿತಕ್ಕೆ ಸಹಕರಿಸಬೇಕು. ಅದರಂತೆ ಅವಶ್ಯಕವಾಗಿರುವ ಸ್ಯಾನಿಟೈಸರ್ ಮತ್ತು ಮಾಸ್ಕ್‍ಗಳ ಕೊರತೆ ಬರದಂತೆ ನೋಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.ತಾಲ್ಲೂಕುಗಳಿಂದ ಬರುವ ಖಾಸಗಿ ಬಸ್‍ಗಳಲ್ಲಿ ಯದ್ವಾತದ್ವ ಜನರನ್ನು ತುಂಬಿಸುವುದು ಸೂಕ್ತವಲ್ಲ. ಈ ಬಗ್ಗೆ ಆರ್‍ಟಿಓ ಕ್ರಮ ವಹಿಸಬೇಕೆಂದರು ಹೇಳಿದರು.

ಬಸ್ ವ್ಯವಸ್ಥೆ ಇಲ್ಲದ ಕಡೆ ಆಟೋದವರು ಸಾರ್ವಜನಿಕರಿಂದ ದುಪ್ಪಟ್ಟು ಹಣ ಕೇಳುತ್ತಿರುವುದು ಗಮನಕ್ಕೆ ಬಂದಿದ್ದು, ಇದನ್ನು ಈಗಲೇ ನಿಲ್ಲಿಸಬೇಕೆಂದು ಸೂಚಿಸಿದರು.

ಪೊಲೀಸ್ ಇಲಾಖೆಯ ಸಹಾಯ ಪಡೆದು ಪಾಲಿಕೆಯ ಆರೋಗ್ಯ ನಿರೀಕ್ಷಕರು, ಅಂಗಡಿ, ಬಾರ್, ರೆಸ್ಟೋರೆಂಟ್ ಸೇರಿದಂತೆ ವಾಣಿಜ್ಯ ಮಳಿಗೆಗಳನ್ನು ಎಲ್ಲೆಡೆ ಮುಚ್ಚಿಸಬೇಕು ಎಂದ ಅವರು ಜಿಲ್ಲೆಯಲ್ಲಿ ಎಲ್ಲ ಕ್ವಾರಿಗಳನ್ನು ಸಹ ಇಂದಿನಿಂದಲೇ ಬಂದ್ ಮಾಡಬೇಕು ಎಂದು ಸೂಚಿಸಿದರು.

ಹಕ್ಕಿಜ್ವರ

ಜಿಲ್ಲಾಧಿಕಾರಿಗಳು, ಎಲ್ಲ ಕೋಳಿ ಫಾರಂಗಳನ್ನು ಸ್ವಚ್ಚಗೊಳಿಸುವ ಕೆಲಸ ಆಗಬೇಕು. ಸ್ವಚ್ಚತೆ ಮಾಡಿಸದೇ ಇರುವ ಫಾರ್ಮ್‍ಗಳನ್ನು ಶಾಶ್ವತವಾಗಿ ನಿಲ್ಲಿಸಲಾಗುವುದು ಎಂದರು.

ಸಭೆಯಲ್ಲಿ ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ, ಅಪರ ಜಿಲ್ಲಾಧಿಕರಿ ಪೂಜಾರ ವೀರಮಲ್ಲಪ್ಪ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಕೆಎಸ್‍ಆರ್‍ಟಿಸಿ ಡಿಸಿ ಸಿದ್ದೇಶ್, ಆರ್‍ಟಿಓ ಎನ್.ಜೆ.ಬಣಕಾರ್, ಡಿಹೆಚ್‍ಓ ಡಾ.ರಾಘವೇಂದ್ರಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ

Published

on

ಸುದ್ದಿದಿನ,ದಾವಣಗೆರೆ: ಅಪರೂಪದ ಲಿವರ್ (ಯಕೃತ್ತಿನ) ಟ್ಯೂಮರ್ನಿಂದ ಬಳಲುತ್ತಿದ್ದ 56 ವರ್ಷದ ಮಹಿಳೆಗೆ ಇಲ್ಲಿನ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸುಮಾರು ಆರು ಗಂಟೆಗಳ ಕಾಲ ನಡೆದ ಈ ಅತ್ಯಂತ ಸಂಕೀರ್ಣ ಶಸ್ತ್ರಚಿಕಿತ್ಸೆಯಲ್ಲಿ, ವೈದ್ಯರು ಟ್ಯೂಮರ್ (ಗಡ್ಡೆ) ಯನ್ನುಸಂಪೂರ್ಣವಾಗಿ ತೆಗೆದುಹಾಕುವುದರ ಜೊತೆಗೆ ಲಿವರ್ನ ಆರೋಗ್ಯಕರ ಭಾಗಗಳಿಗೆ ಯಾವುದೇ ಹಾನಿಯಾಗದಂತೆ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಿತ್ರದುರ್ಗ ಮೂಲದ ಈ ಮಹಿಳೆ, ಬೊಜ್ಜಿನ ಸಮಸ್ಯೆಯ ಜೊತೆಗೆ ಟೈಪ್-2 ಮಧುಮೇಹ ಮತ್ತು ಹೈಪೋಥೈರಾಯ್ಡಿಸಮ್ (ಥೈರಾಯ್ಡ್ ಸಮಸ್ಯೆ) ದಂತಹ ಕಾಯಿಲೆಗಳಿಂದಲೂ ಬಳಲುತ್ತಿದ್ದರು. ಕಳೆದ ಎರಡು ತಿಂಗಳಿನಿಂದ ನಿರಂತರ ಹೊಟ್ಟೆನೋವು ಹಾಗೂ ಹಸಿವಾಗದಿರುವ ಸಮಸ್ಯೆಯಿಂದ ಅವರು ಒದ್ದಾಡುತ್ತಿದ್ದರು. ಇದಕ್ಕಾಗಿ ಸ್ಥಳೀಯ ಕ್ಲಿನಿಕ್ಗಳು ಮತ್ತು ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಅಲ್ಲಿನ ತಪಾಸಣೆಯಲ್ಲಿ ಅವರಿಗೆ ಲಿವರ್ ಟ್ಯೂಮರ್ ಇರುವುದು ಪತ್ತೆಯಾಗಿತ್ತು.

ಸರಿಯಾದ ಚಿಕಿತ್ಸೆ ಸಿಗದೆ ಕಾಯಿಲೆ ಉಲ್ಬಣಗೊಂಡಿದ್ದಾಗ, ಅವರ ಪರಿಚಿತರೊಬ್ಬರು ದಾವಣಗೆರೆಯ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ಗೆ ಭೇಟಿ ನೀಡಿ, ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಆರ್.ಕೆ. ಹನುಮಂತ ನಾಯ್ಕ್ ಅವರನ್ನು ಸಂಪರ್ಕಿಸಲು ಸಲಹೆ ನೀಡಿದರು. ಮೊದಲ ತಪಾಸಣೆಯ ನಂತರ, ಮಹಿಳೆಯನ್ನು ಸ್ಕ್ಯಾನಿಂಗ್ ಮತ್ತು ಇತರ ಪರೀಕ್ಷೆಗಳಿಗೆ ಒಳಪಡಿಸಲಾಯಿತು. ಈ ವೇಳೆ ಅವರ ಲಿವರ್ನ ಎಡಭಾಗದ (ಲೆಫ್ಟ್ ಲೋಬ್) ಆಳದಲ್ಲಿ ಗಡ್ಡೆಯೊಂದು ಬೆಳೆದಿರುವುದು ಕಂಡುಬಂತು. ಹೆಚ್ಚಿನ ಪರೀಕ್ಷೆಗಳ ನಂತರ ಇದು ‘ಇಂಟ್ರಾಹೆಪಾಟಿಕ್ ಚೋಲಾಂಜಿಯೋಕಾರ್ಸಿನೋಮ’ (intrahepatic cholangiocarcinoma) ಎಂಬ ಕಾಯಿಲೆ ಎಂದು ದೃಢಪಟ್ಟಿತು. ಈ ಹಿಂದೆಯೇ ಅವರಿಗೆ ಈ ಕಾಯಿಲೆ ಇರುವುದು ಪತ್ತೆಯಾಗಿದ್ದರೂ, ಶಸ್ತ್ರಚಿಕಿತ್ಸೆಯಲ್ಲಿನ ಸಂಕೀರ್ಣತೆಯ ಕಾರಣದಿಂದಾಗಿ ಹಿಂದಿನ ವೈದ್ಯರು ಅದನ್ನು ತೆಗೆದುಹಾಕಲು ಹಿಂದೇಟು ಹಾಕಿದ್ದರು.

ಸುಮಾರು 95 ಕೆ.ಜಿ ತೂಕವಿದ್ದ ಆ ಮಹಿಳೆ ಬೊಜ್ಜು ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದರಿಂದ, ಇಂತಹ ದೊಡ್ಡ ಶಸ್ತ್ರಚಿಕಿತ್ಸೆಗೆ ಒಳಪಡಿಸುವುದು ಅತ್ಯಂತ ಅಪಾಯಕಾರಿಯಾಗಿತ್ತು. ಶಸ್ತ್ರಚಿಕಿತ್ಸೆಗೂ ಮುನ್ನ, ಈ ರೋಗಿಯು ಶಸ್ತ್ರಚಿಕಿತ್ಸೆಯನ್ನು ತಡೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವೈದ್ಯರು ಹೃದಯ ಮತ್ತು ಶ್ವಾಸಕೋಶದ ವಿವರವಾದ ಪರೀಕ್ಷೆಗಳನ್ನು ನಡೆಸಿದರು.

ಈ ಸವಾಲಿನ ಪ್ರಕರಣವನ್ನು ಕೈಗೆತ್ತಿಕೊಂಡ ಡಾ. ಹನುಮಂತ ನಾಯ್ಕ್ ಮತ್ತು ಅವರ ತಂಡ, ಕ್ಯಾನ್ಸರ್ ಗಡ್ಡೆಯನ್ನು ಯಶಸ್ವಿಯಾಗಿ ತೆಗೆದುಹಾಕಲು ಸುಮಾರು ಆರು ಗಂಟೆಗಳ ಕಾಲ ಶ್ರಮಿಸಿತು. ಇದರ ಜೊತೆಗೆ ಸಾಕಷ್ಟು ಆರೋಗ್ಯಕರ ಲಿವರ್ ಸರಿಯಾಗಿ ಕಾರ್ಯನಿರ್ವಹಿಸುವಂತೆಯೂ ನೋಡಿಕೊಂಡಿತು. ಈ ಶಸ್ತ್ರಚಿಕಿತ್ಸೆಯು ಪಿತ್ತಕೋಶದ (ಗಾಲ್ ಬ್ಲಾಡರ್) ಜೊತೆಗೆ ಲಿವರ್ನ II, III, IVa ಮತ್ತು IVb ಭಾಗಗಳನ್ನು ತೆಗೆದುಹಾಕುವ ದೊಡ್ಡ ಶಸ್ತ್ರಚಿಕಿತ್ಸೆಯನ್ನು (ಮೇಜರ್ ಲೆಫ್ಟ್ ಹೆಪಟೆಕ್ಟಮಿ) ಒಳಗೊಂಡಿತ್ತು. ಈ ಪ್ರಕ್ರಿಯೆಯಲ್ಲಿ ಮಧ್ಯದ ಹೆಪಾಟಿಕ್ ರಕ್ತನಾಳವನ್ನು ಅತ್ಯಂತ ಎಚ್ಚರಿಕೆಯಿಂದ ರಕ್ಷಿಸಲಾಯಿತು.

ಶಸ್ತ್ರಚಿಕಿತ್ಸೆಯ ನಂತರ ಮಹಿಳೆಯು ಅತ್ಯಂತ ತ್ವರಿತವಾಗಿ ಚೇತರಿಸಿಕೊಂಡರು. ಶಸ್ತ್ರಚಿಕಿತ್ಸೆ ಮುಗಿದ ಆರು ಗಂಟೆಗಳಲ್ಲೇ ದ್ರವಾಹಾರ ಸೇವಿಸಲು ಆರಂಭಿಸಿದ ಅವರು, ಕ್ರಮೇಣ ಮೃದುವಾದ ಆಹಾರವನ್ನು ಸೇವಿಸುವ ಹಂತಕ್ಕೆ ತಲುಪಿದರು. ಅವರ ಆರೋಗ್ಯ ಸ್ಥಿರವಾಗಿದ್ದರಿಂದ ಕೇವಲ ಐದು ದಿನಗಳಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು.

ಶಸ್ತ್ರಚಿಕಿತ್ಸೆ ಬಗ್ಗೆ ಮಾತನಾಡಿದ ಡಾ. ಆರ್. ಕೆ. ಹನುಮಂತ ನಾಯ್ಕ್, “ಟ್ಯೂಮರ್ನ ಗಾತ್ರ ಮತ್ತು ಅದು ಇದ್ದ ಜಾಗ, ಅದರ ಜೊತೆಗೆ ರೋಗಿಯ ಬೊಜ್ಜು ಮತ್ತು ಇತರ ವೈದ್ಯಕೀಯ ಸಮಸ್ಯೆಗಳಿಂದಾಗಿ ಇದು ತಾಂತ್ರಿಕವಾಗಿ ಅತ್ಯಂತ ಸವಾಲಿನ ಶಸ್ತ್ರಚಿಕಿತ್ಸೆಯಾಗಿತ್ತು. ಆರೋಗ್ಯಕರ ಲಿವರ್ ಅನ್ನು ಉಳಿಸಿಕೊಂಡು ಕ್ಯಾನ್ಸರ್ ಗಡ್ಡೆಯನ್ನು ಸಂಪೂರ್ಣವಾಗಿ ತೆಗೆದುಹಾಕುವುದು ನಮ್ಮ ಮೊದಲ ಆದ್ಯತೆಯಾಗಿತ್ತು. ಶಸ್ತ್ರಚಿಕಿತ್ಸೆಗೂ ಮುನ್ನ ಎಚ್ಚರಿಕೆಯ ಮೌಲ್ಯಮಾಪನ, ಶಸ್ತ್ರಚಿಕಿತ್ಸೆಯ ನಿಖರವಾದ ಯೋಜನೆ ಮತ್ತು ಶಸ್ತ್ರಚಿಕಿತ್ಸೆಯ ನಂತರದ ವ್ಯವಸ್ಥಿತ ಆರೈಕೆಯು ಈ ಯಶಸ್ಸಿಗೆ ಕಾರಣವಾಯಿತು” ಎಂದು ತಿಳಿಸಿದರು.

ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಕೇಂದ್ರದ ಫೆಸಿಲಿಟಿ ಡೈರೆಕ್ಟರ್ ಶ್ರೀ ಸುನಿಲ್ ಭಂಡಾರಿಗಲ್ ಮಾತನಾಡಿ, “ಹೆಚ್ಚಿನ ಅಪಾಯದಲ್ಲಿದ್ದ ರೋಗಿಗೆ ಇಂತಹ ಸಂಕೀರ್ಣವಾದ ಲಿವರ್ ಟ್ಯೂಮರ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿಭಾಯಿಸಿರುವುದು ನಮ್ಮ ಶಸ್ತ್ರಚಿಕಿತ್ಸಾ ತಂಡದ ಪರಿಣತಿ ಮತ್ತು ವಿವಿಧ ವಿಭಾಗಗಳ ವೈದ್ಯರ ಸಂಯೊಜನೆ ಆರೈಕೆಯ (multidisciplinary care) ಮಹತ್ವವನ್ನು ತೋರಿಸುತ್ತದೆ. ಸಂಕೀರ್ಣ ಆರೋಗ್ಯ ಸಮಸ್ಯೆಗಳಿಗೆ ಸುಧಾರಿತ, ಸಕಾಲಿಕ ಮತ್ತು ರೋಗಿ-ಕೇಂದ್ರಿತ ಚಿಕಿತ್ಸೆಯನ್ನು ಒದಗಿಸುವುದೇ ನಮ್ಮ ಪ್ರಮುಖ ಗುರಿಯಾಗಿದೆ” ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ

Published

on

~ಯೋಗೇಶ್ ಮಾಸ್ಟರ್, ಚಿಂತಕರು

ಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.

ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!

ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!

ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.

ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.

ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.

ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!

ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಶಿಕ್ಷಣ ಸಂಸ್ಥೆಗಳು ವೈಚಾರಿಕತೆ ; ವೈಜ್ಞಾನಿಕತೆಯ ಬೆಳಕು ಚೆಲ್ಲುವ ದೀಪಗಳಾಗಲಿ

Published

on

ಸುದ್ದಿದಿನ,ಚನ್ನಗಿರಿ: ಪಟ್ಟಣದ ಬಸವ ಚೇತನ ಎಜುಕೇರ್ ಪ್ರಿ – ಪ್ರೈಮರಿ ಸ್ಕೂಲ್ ನಲ್ಲಿ “ಬಂಧುತ್ವ ಫೌಂಡೇಶನ್ ‘ ವತಿಯಿಂದ ಇಂದು ಶ್ರಾವಣಮಾಸದ ನಾಗರ ಪಂಚಮಿ ಪ್ರಯುಕ್ತ ” ಮಿಲ್ಕ್ ಫೆಸ್ಟ್”( ಹಾಲು ಹಬ್ಬ ) ಎಂಬ ಕಾರ್ಯಕ್ರಮವನ್ನು ಮಕ್ಕಳಿಗೆ ಹಾಲು ಕುಡಿಸುವುದರ ಮೂಲಕ ವಿನೂತನವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ರಾಘು ದೊಡ್ಡಮನಿಯವರು ನಾಗರ ಪಂಚಮಿ ಹಬ್ಬದಂದು ನಮ್ಮ ಜನರು ಕಲ್ಲುನಾಗರಕ್ಕೆ ಮತ್ತು ಹುತ್ತಗಳಿಗೆ ಹಾಲು ಎರೆಯುವ ಸಂಪ್ರದಾಯವಿದೆ ಆದರೆ ಹಾವುಗಳು ಎಂದಿಗೂ ಹಾಲು ಕುಡಿಯುವುದಿಲ್ಲ, ಹಾಲು ಅದರ ಆಹಾರವಲ್ಲ ಹೀಗಿರುವಾಗ ಹಾಲನ್ನು ಈ ರೀತಿಯಲ್ಲಿ ಪೋಲು ಮಾಡುವ ಬದಲಾಗಿ ಅದೇ ಹಾಲನ್ನು ಮಕ್ಕಳಿಗೆ, ಬಡವರಿಗೆ, ರೋಗಿಗಳಿಗೆ ನೀಡಬೇಕು.

ಹಾಲು ಅತ್ಯಂತ ಪೌಷ್ಟಿಕ ಆಹಾರವಾಗಿದ್ದು ಕರ್ನಾಟಕವೊಂದರಲ್ಲಿ ಪ್ರತಿವರ್ಷ ಸಾವಿರಾರು ಮಕ್ಕಳು ಅಪೌಷ್ಟಿಕತೆಯಿಂದ ಮರಣ ಹೊಂದುತ್ತಿದ್ದಾರೆ ಆದ್ದರಿಂದ ನಮ್ಮ ಜನರು ಈ ವಿಷಯವಾಗಿ ಜಾಗೃತರಾಗಬೇಕಿದೆ ಮತ್ತು ಸಮಾಜದಲ್ಲಿ ಹೆಚ್ಚು ಬದಲಾವಣೆ ತರಬಹುದಾದ ಬಹುದೊಡ್ಡ ಜವಾಬ್ದಾರಿ ಹೊಂದಿರುವ ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳು ಮಕ್ಕಳ ಮೂಲಕ ಜನ ಸಮುದಾಯಕ್ಕೆ ವೈಚಾರಿಕತೆ ಮತ್ತು ವೈಜ್ಞಾನಿಕತೆಯ ಬೆಳಕು ಚೆಲ್ಲುವ ದೀಪಗಳಂತೆ ಕೆಲಸ ಮಾಡಬೇಕು ಎಂದು ಅಭಿಪ್ರಾಯ ಪಟ್ಟರು. ಈ ಸಂದರ್ಭದಲ್ಲಿ ಶಿಕ್ಷಕಿಯರಾದ ಸಹನಾ, ಸಿಂಧೂ, ಬಿಂದು, ಮುಕ್ತ, ಶ್ವೇತ ಇತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending