ದಿನದ ಸುದ್ದಿ
ದಾವಣಗೆರೆ ಜಿ.ಪಂ ಸಾಮಾನ್ಯ ಸಭೆ | ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿಸುವಂತೆ ಸದಸ್ಯರ ಒತ್ತಾಯ
ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಅತಿ ಹೆಚ್ಚು ಮೆಕ್ಕೆಜೋಳ ಬೆಳೆಯಲಾಗುತ್ತಿದ್ದು ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳವನ್ನು ಖರೀದಿಸುವಂತೆ ಹಾಗೂ ಪಡಿತರ ವಿತರಣೆಯಲ್ಲಿ(ಪಿಡಿಎಸ್) ಮೆಕ್ಕಜೋಳವನ್ನು ಸೇರ್ಪಡೆಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಬೇಕೆಂದು ಜಿಲ್ಲಾ ಪಂಚಾಯತ್ ಸದಸ್ಯರು ಒತ್ತಾಯಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಕೆ.ವಿ.ಶಾಂತಕುಮಾರಿ ಇವರ ಅಧ್ಯಕ್ಷತೆಯಲ್ಲಿ ಇಂದು ಏರ್ಪಡಿಸಲಾಗಿದ್ದ ಸಾಮಾನ್ಯ ಸಭೆಯಲ್ಲಿ ಸದಸ್ಯರಾದ ಡಿ.ಜಿ.ವಿಶ್ವನಾಥ್ ಮಾತನಾಡಿ, ಜಿಲ್ಲೆಯ ಮುಕ್ಕಾಲು ಭಾಗದಲ್ಲಿ ಮೆಕ್ಕೆಜೋಳ ಬೆಳೆಯಲಾಗುತ್ತಿದೆ.
ಪ್ರಸ್ತುತ ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಗೆ ರೈತರು ಮೆಕ್ಕೆಜೋಳ ಮಾರಾಟ ಮಾಡುತ್ತಿದ್ದು, ಪ್ರತಿ ಕ್ವಿಂಟಾಲ್ಗೆ ಸುಮಾರು ರೂ.500 ನಷ್ಟ ಅನುಭವಿಸುವಂತಾಗಿದೆ. ರೈತರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲವಾಗಿದ್ದು, ರೈತರು ನಷ್ಟಕ್ಕೆ ಗುರಿಯಾಗುತ್ತಿದ್ದಾರೆ. ಆದ ಕಾರಣ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿಗೆ ಸರ್ಕಾರದ ಮೇಲೆ ಒತ್ತಡ ತಂದು ಅವಕಾಶ ಮಾಡಿಕೊಡಬೇಕು ಎಂದರು.
ಸದಸ್ಯರಾದ ಬಸವರಾಜಪ್ಪ ಮಾತನಾಡಿ, ಮೆಕ್ಕೆಜೋಳಕ್ಕೆ ದರ ನಿಗದಿಪಡಿಸಿ ಎಪಿಎಂಸಿ ಆವರ್ತನಿಧಿಯಲ್ಲಿ ಖರೀದಿಸುವ ವ್ಯವಸ್ಥೆ ಮಾಡಬೇಕು ಎಂದರು.
ಸದಸ್ಯರಾದ ಎ.ಆರ್. ಮಹೇಶ್ ಮಾತನಾಡಿ, ಕೇಂದ್ರ ಸರ್ಕಾರ ತಂದಿರುವ ಎಪಿಎಂಸಿ ತಿದ್ದುಪಡಿಯನ್ನು ಜನರು ಒಪ್ಪುತ್ತಿಲ್ಲ. ನಮ್ಮ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇರುವುದರಿಂದಲೇ ರೈತರ ಕಾಯ್ದೆಗಳನ್ನು ಜಾರಿಗೆ ತಂದಿದೆ ಎಂದಾಗ ಸದಸ್ಯರ ನಡುವೆ ಮಾತಿನ ಚಕಮಕಿ ಏರ್ಪಟ್ಟಿತು.
ಸದಸ್ಯೆ ಶೈಲಜಾ ಬಸವರಾಜ್ ಮಾತನಾಡಿ, ಕೇಂದ್ರ ನೀತಿ ಜಿಲ್ಲಾ ಪಂಚಾಯತ್ ವ್ಯಾಪ್ತಿ ಮೀರಿದ್ದಾಗಿದ್ದು, ನಮ್ಮ ವ್ಯಾಪ್ತಿಗೆ ಸಂಬಂಧಿಸಿದ ಚರ್ಚೆ ಮಾಡಿದರೆ ಒಳಿತು ಎಂದು ಸಲಹೆ ನೀಡಿದರು.
ಇದನ್ನೂ ಓದಿ | ಕೃಷಿ ಸಿಂಚಾಯಿ ಯೋಜನೆ | ಸಹಾಯಧನ ಪಡೆಯಲು ಅರ್ಜಿ ಆಹ್ವಾನ
ಕೃಷಿ ಜಂಟಿ ನಿರ್ದೇಶಕ ಶ್ರೀನಿವಾಸ ಚಿಂತಾಲ್ ಮಾತನಾಡಿ, ಜಿಲ್ಲಾ ಮಟ್ಟದ ಟಾಸ್ಕ್ಫೋರ್ಸ್ ಸಮಿತಿ ಸಭೆ ನಡೆಸಿ ಜಿಲ್ಲೆಯಲ್ಲಿನ ಮೆಕ್ಕೆಜೋಳ ಉತ್ಪಾದನೆ ಕುರಿತು ಮಾಹಿತಿ ಪಡೆದು ಜಿಲ್ಲಾಧಿಕಾರಿಗಳು ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಸುಮಾರು 5.5 ಲಕ್ಷ ಟನ್ ಮೆಕ್ಕೆಜೋಳ ಉತ್ಪಾದನೆ ಇದ್ದು, ರೂ.1825 ಮಾರುಕಟ್ಟೆ ದರ ನಿಗದಿಪಡಿಸಲಾಗಿದೆ.
ಆದರೆ ಮಾರುಕಟ್ಟೆಯಲ್ಲಿ ಬೇಡಿಕೆಗಿಂತ ಹೆಚ್ಚನ ಪೂರೈಕೆ ಇರುವುದರಿಂದ ದರ ಕಡಿಮೆ ಆಗಿದೆ. ಈ ಹಿನ್ನೆಲೆಯಲ್ಲಿ ಮೆಕ್ಕೆಜೋಳ ಬಳಕೆ ಮಾಡುವ ಕೈಗಾರಿಕೋದ್ಯಮಿಗಳನ್ನು ಕರೆದು ಸಭೆ ನಡೆಸಿ, ಮಾರುಕಟ್ಟೆ ದರದಲ್ಲಿ ಮೆಕ್ಕೆಜೋಳ ಖರೀದಿಸುವಂತೆ ಮನವೊಲಿಸುವ ಪ್ರಯತ್ನ ಮಾಡಲಾಗಿತ್ತು.
ಮೊದಲಿನಿಂದಲೂ ಮೆಕ್ಕೆಜೋಳ ಪಡಿತರ (ಪಿಡಿಎಸ್-ಪಬ್ಲಿಕ್ ಡಿಸ್ಟ್ರಿಬ್ಯೂಷನ್ ಸಿಸ್ಟಂ) ವಾಗಿ ಪಡಿತರ ಅಂಗಡಿಗಳಲ್ಲಿ ವಿತರಣೆಯಾಗುತ್ತಿಲ್ಲ. ಇದಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡಿಲ್ಲ. ಆದ ಕಾರಣ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಇದನ್ನು ಖರೀದಿಸುತ್ತಿಲ್ಲ. ಆದರೂ ಜಿಲ್ಲಾಡಳಿತದ ವತಿಯಿಂದ ಪ್ರಸ್ತಾವನೆ ಹೋಗಿದೆ ಎಂದರು.
ಎಪಿಎಂಸಿ ಸಹಾಯಕ ನಿರ್ದೇಶಕ ಪ್ರಭು ಮಾತನಾಡಿ, ಕಳೆದ ಆರು ವರ್ಷಗಳಿಂದ ಮೆಕ್ಕೆಜೋಳವನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸುತ್ತಿಲ್ಲ. ಆವರ್ತ ನಿಧಿ ರಾಜ್ಯ ವ್ಯಾಪ್ತಿಗೆ ಬರಲಿದ್ದು, ಸರ್ಕಾರ ಆದೇಶಿಸಿದರೆ ಕೆಎಂಎಫ್ ಮೂಲಕ ಖರೀದಿಸಬಹುದು ಎಂದರು.
ಸದಸ್ಯ ಬಸವರಾಜಪ್ಪ, ರೈತರ ಹಿತದೃಷ್ಟಿಯಿಂದ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ, ಆವರ್ತ ನಿಧಿ ಬಳಕೆ ಮಾಡಿಕೊಂಡು ಮೆಕ್ಕೆಜೋಳ ಖರೀದಿ ಮಾಡಬೇಕು. ಪಕ್ಕದ ಶಿಕಾರಿಪುರದಲ್ಲಿ ಕೆಎಂಎಫ್ ಮೂಲಕ ಖರೀದಿ ಮಾಡುತ್ತಿದ್ದಾರೆ ಎಂದರು.
ಸದಸ್ಯ ಮಹೇಶ್ ಪ್ರತಿಕ್ರಿಯಿಸಿ, ಮೆಕ್ಕೆಜೋಳ ಸೋಮಾರಿಗಳ ಬೆಳೆ ಎಂಬ ಹಣೆಪಟ್ಟಿ ಹೊತ್ತಿದ್ದು, ಮೆಕ್ಕೆಜೋಳ ಕಡಿಮೆ ಮಾಡಿ ತೋಟಗಾರಿಕೆ ಬೆಳೆಗಳಿಗೆ ಒತ್ತು ನೀಡಬೇಕೆಂದರು.
ಕೃಷಿ ಜಂಟಿ ನಿರ್ದೇಶಕ ಶ್ರೀನಿವಾಸ ಚಿಂತಾಲ್, ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಳೆಗೆ ಪೂರಕ ವಾತಾವರಣವಿದ್ದು ಸಂಪೂರ್ಣ ಯಾಂತ್ರೀಕೃತವಾಗಿರುವುದರಿಂದ ಎಲ್ಲರೂ ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಚನ್ನಗಿರಿ ಮತ್ತು ಹೊನ್ನಾಳಿಯಲ್ಲಿ ಅಡಿಕೆ ಹೆಚ್ಚು ಬೆಳೆಯುತ್ತಿದ್ದಾರೆ. ಇಲಾಖೆಯಿಂದ ಜೋಳ ಇಳುವರಿ ಕಡಿಮೆ ಮಾಡಲು ಅಂತರ ಬೆಳೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.
ಆಯ್ದ ಕೃಷಿಕರಿಗೆ ಗೂಗಲ್ ಮೀಟ್ ಮೂಲಕ 6:1 ಅನುಪಾತ ಅಂದರೆ ಆರು ಸಾಲಿಗೆ ಒಂದು ಸಾಲು ತೊಗರಿ ಬೆಳೆಯಂತೆ ಬೆಳೆಯಲು ಉತ್ತೇಜನ ನೀಡಲಾಗುತ್ತಿದೆ. ಇದರಿಂದ ರೈತರ ಆದಾಯವೂ ಹೆಚ್ಚಲಿದೆ. ತೊಗರಿಗೆ ರೂ.6 ಸಾವಿರ ಬೆಂಬಲ ಬೆಲೆ ಇದ್ದು ಪೂರ್ವನಿಯೋಜಿತವಾಗೇ ಖರೀದಿ ಕೇಂದ್ರದ ವ್ಯಾಪ್ತಿಗೆ ಬರುವುದು. ಮುಂಬರುವ ದಿನಗಳಲ್ಲಿ ಸಿರಿಧಾನ್ಯಗಳು ಕೂಡ ಪಿಡಿಎಸ್ ವ್ಯವಸ್ಥೆಗೆ ಒಳಪಡುವ ಸಾಧ್ಯತೆ ಇದೆ.
ಹಾಗೂ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ದ್ವಿದಳ ಧಾನ್ಯ ಬೆಳೆ ಹೆಚ್ಚುವ ಸಂಭವ ಇದೆ ಎಂದ ಅವರು ಬೀಜ ಲಭ್ಯತೆ ಹೆಚ್ಚಿಸಬೇಕಾಗಿದೆ. ಒಂದೇ ಬೆಳೆಗೆ ಜೋತು ಬೀಳದೆ ನಮ್ಮ ಪೂರ್ವಜರಂತೆ ಅಂತರ ಬೆಳೆ, ಮಿಶ್ರ ಬೆಳೆಗೆ ಒಲವು ತೋರಬೇಕೆಂದರು.
ಸದಸ್ಯರಾದ ತೇಜಸ್ವಿ ಪಟೇಲ್ ಮಾತನಾಡಿ, ಇಲಾಖೆ ರೈತರಿಗೆ ಒಂದು ಬೆಳೆ ಬಗ್ಗೆ ಸಂಪೂರ್ಣ ಯೋಜನೆ ಹಾಕಿಕೊಡಬೇಕು. ಕ್ರಾಪ್ ಪ್ರಾಜೆಕ್ಟ್ ಜೊತೆಗೆ ಬೀಜ, ಬೆಲೆ ಸೇರಿದಂತೆ ‘ಸೀಡ್ ಟು ಮಾರ್ಕೆಟ್’ ವ್ಯವಸ್ಥೆ ಮಾಡಿದಲ್ಲಿ ರೈತರಿಗೆ ಅನುಕೂಲವಾಗಲಿದೆ ಎಂದರು.
ಕೃಷಿ ಜಂಟಿ ನಿರ್ದೇಶಕರು, ಕೃಷಿಕರು ಒಂದು ನಿರ್ದಿಷ್ಟ ಪ್ರಾಜೆಕ್ಟ್ ತಯಾರಿಸಿ ಕೇಂದ್ರ ಸರ್ಕಾರದ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದಲ್ಲಿ ರೂ.2 ಕೋಟಿವರೆಗೆ ರಿಯಾಯತಿ ಲಭಿಸಲಿದೆ ಎಂದರು.
ಸದಸ್ಯ ಸುರೇಂದ್ರನಾಯ್ಕ, ಬೆಳೆ ಸುಟ್ಟು, ಫಂಗಸ್ ಇತರೆ ರೀತಿಯಲ್ಲಿ ನಷ್ಟವಾದರೆ ಪ್ರತಿ ಎಕರೆಗೆ ನೀಡುವ ರೂ.20 ಸಾವಿರ ಮರು ಬಿತ್ತನೆ ಮಾಡಲು ಬೀಜ, ಗೊಬ್ಬರಕ್ಕೂ ಸಾಕಾಗುವುದಿಲ್ಲ. ಇದನ್ನು ಹೆಚ್ಚಿಸಬೇಕೆಂದರೆ, ಸದಸ್ಯ ವಿಶ್ವನಾಥ್ ಮೊನ್ನೆ ಬಿದ್ದ ಅಕಾಲಿಕ ಮಳೆಗೆ ಹೊನ್ನಾಳಿಯಲ್ಲಿ ಸುಮಾರು 4 ರಿಂದ 5 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದ್ದ ಬಿಳಿ ಜೋಳ ಪೂರ್ತಿ ಕಪ್ಪಾಗಿದ್ದು ಹಾಳಾಗಿದೆ. ಈ ಬಗ್ಗೆ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಬೇಕೆಂದರು.
ಸದಸ್ಯರಾದ ಮಂಜುನಾಥ್ ಮಾತನಾಡಿ, ಜಗಳೂರು ಹಿಂದುಳಿದ ತಾಲ್ಲೂಕಾಗಿದ್ದು ಇಲ್ಲಿ ಮೆಕ್ಕೆಜೋಳ ಮುಖ್ಯ ಬೆಳೆ. ತೋಟಗಾರಿಕೆ ಬೆಳೆ ಬೆಳೆಯಲು ಹೋಗಿ ತಾವೇ ಸ್ವತಃ ಕೈಸುಟ್ಟುಕೊಂಡಿದ್ದೇನೆ. ತೋಟಗಾರಿಕೆಗೆ ಇಲ್ಲಿನ ವಾತಾವರಣ ಪೂರಕವಾಗಿಲ್ಲ ಎಂದರು.
ಜಿ.ಪಂ. ಸಿಇಓ ಡಾ.ವಿಜಯ ಮಹಾಂತೇಶ ದಾನಮ್ಮನವರ್ ಮಾತನಾಡಿ, ಹಿಂದೆಯೂ ಮೆಕ್ಕೆಜೋಳದ ಬಗ್ಗೆ ಚರ್ಚೆ ನಡೆದಿದೆ. ಮೆಕ್ಕೆಜೋಳವನ್ನು ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮತ್ತು ಪಿಡಿಎಸ್ ವ್ಯವಸ್ಥೆಗೆ ಒಳಪಡಿಸುವ ಕುರಿತು ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದರು.
ಸದಸ್ಯೆ ಮಂಜುಳ ಟಿ.ವಿ.ರಾಜು ಮಾತನಾಡಿ, ತಾಲ್ಲೂಕು ಮಟ್ಟದ ತೋಟಗಾರಿಕೆ ಅಧಿಕಾರಿಗಳು ಮೀಟಿಂಗ್ ಇನ್ನಿತರೆ ಕಚೇರಿ ಕೆಲಸದಲ್ಲಿ ಅತಿ ಹೆಚ್ಚಾಗಿ ನಿರತರಾಗಿರುತ್ತಾರೆ. ಆದರೆ ಅವರ ಅವಶ್ಯಕತೆ ರೈತರ ಕ್ಷೇತ್ರದಲ್ಲಿ ಹೆಚ್ಚಾಗಿದೆ. ತಾವೇ ತಮ್ಮ ತೋಟಕ್ಕೆ ಕರೆಸಲು ಕಷ್ಟಪಡುತ್ತಿದ್ದು, ಸಹಾಯಕ ನಿರ್ದೇಶಕರು ರೈತರ ಬಳಿಗೆ ಹೋಗಲು ಅವಕಾಶ ಮಾಡಿಕೊಡಬೇಕು.
ತಮ್ಮದೇ ತೋಟದಲ್ಲಿ ಅಡಿಕೆ ಗೊಳ್ಳು ಉದುರುತ್ತಿದೆ. ಮಣ್ಣು ಆರೋಗ್ಯ ಚೀಟಿ ಮಾಡಿಸುವ ಬಗ್ಗೆ ರೈತರಿಗೆ ಸಮರ್ಪಕ ಮಾಹಿತಿ ಇಲ್ಲ. ಆದ ಕಾರಣ ಅಧಿಕಾರಿ/ಸಿಬ್ಬಂದಿಗಳು ರೈತರ ತೋಟಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದರೆ, ಸದಸ್ಯರಾದ ತೇಜಸ್ವಿ ಪಟೇಲ್ ಮತ್ತಿತರರು ತಾಲ್ಲೂಕು ಮಟ್ಟದಲ್ಲಿ ಮಣ್ಣು ಆರೋಗ್ಯ ಕೇಂದ್ರದ ಅವಶ್ಯಕತೆ ಇದ್ದು, ತಾಲ್ಲೂಕುಗಳಲ್ಲಿ ತರೆಯಲು ಸೂಕ್ತ ವ್ಯವಸ್ಥೆ ಮಾಡುವಂತೆ ಕೋರಿದರು.
ಸಿಇಓ ಮಾತನಾಡಿ, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಲಾಗುವುದು. ಹಾಗೂ ಪಿಆರ್ಇಡಿ ವಿಭಾಗದ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಮುಗಿಸಬೇಕು. ಹಾಗೂ ಸದಸ್ಯ ಹದಡಿ ನಿಂಗಪ್ಪನವರು ಹೇಳಿದ ಜವಳಘಟ್ಟದ ಸ್ಕೂಲ್ ಕಾಮಗಾರಿ ಬದಲಾವಣೆ ಬಗ್ಗೆ ತಾವು ಶಿಕ್ಷಣ ಇಲಾಖೆ ಸಿಪಿಐ ರವರೊಂದಿಗೆ ಮಾತನಾಡುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶಾಂತಕುಮಾರಿ, ಚಿಕ್ಕಮ್ಮನಟ್ಟಿಯ ಅಂಗನವಾಡಿಯಲ್ಲಿ ನೀರು ನುಗ್ಗುತ್ತಿದ್ದು ಇದನ್ನು ಸರಿಸಪಡಿಸುವಂತೆ ಇಓ ರವರಿಗೆ ಸೂಚಿಸಿದರು.
ಸದಸ್ಯ ವಿಶ್ವನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಅನೇಕ ಯೋಜನೆಗಳಿದ್ದು ಜನರಿಗೆ ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲವಾಗಿ ಜನರಿಗೆ ತಲುಪುತ್ತಿಲ್ಲ. ತಮ್ಮ ತಾಲ್ಲೂಕಿನಲ್ಲಿ ಅನೇಕ ಬಾಲ್ಯ ವಿವಾಹಗಳಾಗಿದ್ದು ಬಾಲ್ಯ ವಿವಾಹ ತಡೆ ಕುರಿತು ಸರಿಯಾದ ಜಾಗೃತಿ ಇಲ್ಲವಾಗಿ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ಮಾತನಾಡಿ, ಬಾಲ್ಯ ವಿವಾಹ ತಡೆಯಲು ಸಕ್ರಿಯವಾಗಿ ಎಲ್ಲ ತಾಲ್ಲೂಕುಗಳಲ್ಲಿ ಕೆಲಸ ಮಾಡಲಾಗುತ್ತಿದೆ. ಬಾಲ್ಯ ವಿವಾಹವಾದ ನಂತರೂ ಪತ್ತೆ ಹಚ್ಚಿ ಪ್ರಕರಣ ದಾಖಲಿಸಲಾಗಿದೆ. ಬಾಲ್ಯ ವಿವಾಹ ತಡೆಯಲು ಸ್ಥಳೀಯರೂ ಕೂಡ ಸಹಕರಿಸಬೇಕು ಎಂದರು.
ಸಿಇಓ ಪ್ರತಿಕ್ರಿಯಿಸಿ, ಅಂಗನವಾಡಿ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸಲಾಗುತ್ತಿದೆ. ಅಂಗನವಾಡಿ ಸೇರಿದಂತೆ ಎಲ್ಲೆಡೆ ಆನ್ಲೈನ್ ವ್ಯವಸ್ಥೆ ಮಾಡಲಾಗಿದೆ. ಹಾಗೂ ಸದಸ್ಯರು ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮೀಟಿಂಗ್ಗಳನ್ನು ಕಡಿಮೆ ಮಾಡಲಾಗುವುದು. ಮಕ್ಕಳ ಸಹಾಯವಾಣಿ 1098 ಸಂಖ್ಯೆಯನ್ನು ಗ್ರಾ.ಪಂ ಕಚೇರಿ ಕಟ್ಟಡಗಳು ಇತರೆಡೆ ಬರೆಸಿ ಹಾಗೂ ಮಹಿಳಾ ಮತ್ತು ಮಕ್ಕಳ ಅಬಿವೃದ್ದಿ ಇಲಾಖೆಯಿಂದ ಸಹ ಜಾಗೃತಿ ಮೂಡಿಸಲಾಗುವುದು ಎಂದರು.
ಗ್ರಾ.ಪಂ ನಿರ್ವಹಣೆ ಟೆಂಡರ್ : ಸದಸ್ಯರಾದ ನಟರಾಜ್ ಮಾತನಾಡಿ, ಗ್ರಾ.ಪಂ ಗಳಿಗೆ 15 ನೇ ಹಣಕಾಸು ಯೋಜನೆಯಡಿ ಸಾಕಷ್ಟು ಅನುದಾನ ಬರುತ್ತಿದೆ. ಇದನ್ನು ದುರುಪಯೋಗಪಡಿಸುತ್ತಿರುವುದು ಸಹ ಎಲ್ಲರಿಗೆ ತಿಳಿದಿದೆ. ಇದರ ನಿರ್ವಹಣೆಗೆ ಟೆಂಡರ್ ಕರೆದಿಲ್ಲ. ಈ ಹಣಕಾಸು ನಿರ್ವಹಣೆಗೆ ಟೆಂಡರ್ ಕರೆಯಬೇಕು. ಈ ಬಗ್ಗೆ ಜಿ.ಪಂ ನಿಂದ ಆದೇಶಿಸಬೇಕೆಂದರು. ಬೇರೆ ಜಿಲ್ಲೆಗಳಲ್ಲಿ ಹಣಕಾಸು ನಿರ್ವಹಣೆಗೆ ಪ್ರತ್ಯೇಕ ಟೆಂಡರ್ ಕರೆದಿದ್ದು, ನಮ್ಮ ಜಿಲ್ಲೆಯಲ್ಲಿಯೂ ಕರೆಯಬೇಕು. ಹಣ ದುರುಪಯೋಗ ನಿಲ್ಲಿಸಬೇಕೆಂದರು.
ಸದಸ್ಯರಾದ ಸುರೇಂದ್ರನಾಯ್ಕ, ಗ್ರಾಮದಲ್ಲಿ ಸುಮಾರು 8 ರಿಂದ 10 ಬೋರ್ ಪಂಪ್ಗಳಿದ್ದು ಅದರ ನಿರ್ವಹಣೆಗೆ ಟೆಂಡರ್ ಕರೆಯಬೇಕು ಎಂದರು.
ಸಿಇಓ ಪ್ರತಿಕ್ರಿಯಿಸಿ, ಪಂಚಾಯತ್ ರಾಜ್ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಗ್ರಾ.ಪಂಗಳಿಗೆ ಪ್ರಮಾಧಿಕಾರ ನೀಡಲಾಗಿದ್ದು, ಜಿ.ಪಂ ಹಣಕಾಸು ನಿರ್ವಹಣೆ ಕುರಿತು ಟೆಂಡರ್ ಕರೆಯುವಂತೆ ಆದೇಶಿಸುವ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು. ಈ ಹಣಕಾಸಿನಲ್ಲಿ ಶೇ.25 ಕುಡಿಯುವ ನೀರು, ಶೇ.25 ಸ್ವಚ್ಚತೆ ಈ ರೀತಿ ವರ್ಗೀಕರಣ ಇದ್ದು, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಸದಸ್ಯ ತೇಜಸ್ವಿ ಪಟೇಲ್, ನೇರ ನಿರ್ವಹಣೆ ಮತ್ತು ಟೆಂಡರ್ ಎರಡೂ ಕಳಪೆಯಾಗಿರುವುದನ್ನು ಸಹ ನೋಡಿದ್ದು, ನಿರ್ವಹಣೆ ವಿಧಾನ ಹೇಗಿರಬೇಕು ಎಂಬುದಕ್ಕಿಂತ ಸಮರ್ಪಕ ಫಲಿತಾಂಶದ ಬಗ್ಗೆ ಗಮನಹರಿಸಬೇಕು ಎಂದರು.
ಸದಸ್ಯೆ ಮಂಜುಳಾ ಟಿ ವಿ ರಾಜು, ಗ್ರಾ.ಪಂ 15 ನೇ ಹಣಕಾಸಿನಲ್ಲಿ ಸದಸ್ಯರು ಹಣ ಹಂಚಿಕೆ ಮಾಡಿಕೊಳ್ಳುತ್ತಿದ್ದು, ಸಿಇಓ ಈ ಬಗ್ಗೆ ಗ್ರಾ.ಪಂ ವಾರು ಪರಿಶೀಲನೆ ನಡೆಸಿ ಕ್ರಮ ಕೈಗೊಂಡು ಹಣ ಸದ್ಬಳಕೆ ಆಗುವಂತೆ ಮಾಡಬೇಕೆಂದರು.
ಸದಸ್ಯ ಓಬಳಪ್ಪ ಮಾತನಾಡಿ, ಗ್ರಾ.ಪಂ ಯಲ್ಲಿ ಪರಮಾಧಿಕಾರ ಇದೆ. ಜೊತೆಗೆ ಹಣ ಕೂಡ ದುರುಪಯೋಗ ಆಗುತ್ತಿರುವುದು ಎಲ್ಲರಿಗೆ ತಿಳಿದ ವಿಷಯ. ಇದಕ್ಕೆ ಕಡಿವಾಣ ಹಾಕಲು ಸಿಇಓ ಸಲಹೆ ನೀಡಬೇಕೆಂದರು.
ಸದಸ್ಯೆ ಸವಿತಾ ಮಾತನಾಡಿ ತಮ್ಮ ಕ್ಷೇತ್ರ ಜಗಳೂರಿನಲ್ಲಿ ಕುಡಿಯುವ ನೀರಿಗೆ ತುಂಬಾ ಸಮಸ್ಯೆ ಇದೆ. ಅದರಲ್ಲಿ ಮುಸ್ಟೂರು, ಹನುಮಂತಾಪುರ ಇತರೆ ಗ್ರಾ.ಪಂ ಯವರು 6 ತಿಂಗಳಲ್ಲಿ 56 ಲಕ್ಷ ಹಣ ದುರುಪಯೋಗ ಮಾಡಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಆಗಬೇಕೆಂದರು.
ಸದಸ್ಯ ವಾಗೀಶ್ಸ್ವಾಮಿ, 15 ಹಣಕಾಸು ಬಂದಿರೋದೇ ತಪ್ಪು ಎನ್ನುವಂತಾಗಿದ್ದು, ಅವೈಜ್ಞಾನಿಕವಾಗಿ ಕೆಲಸಗಳು ಆಗುತ್ತಿವೆ. ಈ ಕುರಿತು ಬಿಸಿ ಮುಟ್ಟಿಸುವ ಕೆಲಸ ಆಗಬೇಕು ಎಂದರೆ ಸದಸ್ಯ ಸುರೇಂದ್ರನಾಯ್ಕ ಇನ್ನು ಒಂದು ತಿಂಗಳಲ್ಲಿ ಈ ಬಗ್ಗೆ ಸೂಕ್ತ ಕ್ರಮದ ಫಲಿತಾಂಶ ತಮಗೆ ಲಭಿಸಬೇಕೆಂದರು.
ಸದಸ್ಯ ತೇಜಸ್ವಿ ಪಟೇಲ್, ಜಿ.ಪಂ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿರುವ ಎಲ್ಲ ಗ್ರಾ.ಪಂ ವಾರು ಸಿಇಓ ಭೇಟಿ ನೀಡಿ ಎಲ್ಲ ಖರ್ಚುಗಳನ್ನು ಪರಿಶೀಲನೆ ಮಾಡಿದರೆ ಒಳಿತು ಎಂದರು.
ಸಿಇಓ ಪ್ರತಿಕ್ರಿಯಸಿ, ಕಾಯ್ದೆ ಉಲ್ಲಂಘನೆ ಯಾರೇ ಮಾಡಿದ್ದರೂ ಕ್ರಮ ವಹಿಸಲಾಗುವುದು. ಸೋಷಿಯಲ್ ಆಡಿಟ್ನಲ್ಲಿ ವರದಿಯಾಗಿರುತ್ತದೆ. ಜೊತೆಗೆ ತಮ್ಮ ಸಲಹೆ ಮೇರೆಗೆ ಪರಿಶೀಲನೆ ನಡೆಸಲಾಗುವುದು. ಪ್ರಾಥಮಿಕವಾಗಿ ತಾಲ್ಲೂಕಿನ ಇಓ ನನಗೆ ವರದಿ ನೀಡಿದ ನಂತರ ಕ್ರಮ ಕೈಗೊಳ್ಳುತ್ತೇನೆ ಎಂದರು.
ಕೊನೆಯ ಸಾಮಾನ್ಯ ಸಭೆ
ಇದು ಜಿ.ಪಂ ನ ಈ ಅವಧಿಯ ಕೊನೆಯ ಸಾಮಾನ್ಯ ಸಭೆಯಾಗಿದ್ದು, ಎಲ್ಲ ಸದಸ್ಯರು ಕೊನೆಯ ಸಾಮಾನ್ಯ ಸಭೆಯ ಪ್ರಸ್ತಾಪ ಮಾಡಿದರು. ಕೊನೆಯ ಸಾಮಾನ್ಯ ಸಭೆಯನ್ನಾದರೂ ಅಜೆಂಡಾ ಪ್ರಕಾರ ಮಾಡಬೇಕೆಂದು ಹಲವು ಸದಸ್ಯರು ಒತ್ತಾಯಿಸಿದರು. ಸದಸ್ಯರ ಹಾಸ್ಯ ಚಟಾಕಿ ಮತ್ತು ತಿಳಿ ವಾತಾವರಣ ಸಭೆಯಲ್ಲಿ ಕಂಡುಬಂತು.
ಸಭೆಯಲ್ಲಿ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ, ಕೃಷಿ ಮತ್ತು ಕೈಗಾರಿಕೆ ಸಮಿತಿ ಅಧ್ಯಕ್ಷ ಫಕೀರಪ್ಪ, ಶಿಕ್ಷಣ ಮತ್ತು ಆರೋಗ್ಯ ಸಮಿತಿ ಅಧ್ಯಕ್ಷ ವೀರಶೇಖರಪ್ಪ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಲೋಕೇಶ್, ಸದಸ್ಯರು, ತಾ.ಪಂ ಅಧ್ಯಕ್ಷರು, ಜಿ.ಪಂ ಉಪ ಕಾರ್ಯದರ್ಶಿ ಆನಂದ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

-
ದಿನದ ಸುದ್ದಿ5 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ4 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ4 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ4 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ5 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ5 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ5 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ5 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್



