Connect with us

ದಿನದ ಸುದ್ದಿ

ದಾವಣಗೆರೆ ಜಿ.ಪಂ ಸಾಮಾನ್ಯ ಸಭೆ | ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿಸುವಂತೆ ಸದಸ್ಯರ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಅತಿ ಹೆಚ್ಚು ಮೆಕ್ಕೆಜೋಳ ಬೆಳೆಯಲಾಗುತ್ತಿದ್ದು ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳವನ್ನು ಖರೀದಿಸುವಂತೆ ಹಾಗೂ ಪಡಿತರ ವಿತರಣೆಯಲ್ಲಿ(ಪಿಡಿಎಸ್) ಮೆಕ್ಕಜೋಳವನ್ನು ಸೇರ್ಪಡೆಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಬೇಕೆಂದು ಜಿಲ್ಲಾ ಪಂಚಾಯತ್ ಸದಸ್ಯರು ಒತ್ತಾಯಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಕೆ.ವಿ.ಶಾಂತಕುಮಾರಿ ಇವರ ಅಧ್ಯಕ್ಷತೆಯಲ್ಲಿ ಇಂದು ಏರ್ಪಡಿಸಲಾಗಿದ್ದ ಸಾಮಾನ್ಯ ಸಭೆಯಲ್ಲಿ ಸದಸ್ಯರಾದ ಡಿ.ಜಿ.ವಿಶ್ವನಾಥ್ ಮಾತನಾಡಿ, ಜಿಲ್ಲೆಯ ಮುಕ್ಕಾಲು ಭಾಗದಲ್ಲಿ ಮೆಕ್ಕೆಜೋಳ ಬೆಳೆಯಲಾಗುತ್ತಿದೆ.

ಪ್ರಸ್ತುತ ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಗೆ ರೈತರು ಮೆಕ್ಕೆಜೋಳ ಮಾರಾಟ ಮಾಡುತ್ತಿದ್ದು, ಪ್ರತಿ ಕ್ವಿಂಟಾಲ್‍ಗೆ ಸುಮಾರು ರೂ.500 ನಷ್ಟ ಅನುಭವಿಸುವಂತಾಗಿದೆ. ರೈತರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲವಾಗಿದ್ದು, ರೈತರು ನಷ್ಟಕ್ಕೆ ಗುರಿಯಾಗುತ್ತಿದ್ದಾರೆ. ಆದ ಕಾರಣ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿಗೆ ಸರ್ಕಾರದ ಮೇಲೆ ಒತ್ತಡ ತಂದು ಅವಕಾಶ ಮಾಡಿಕೊಡಬೇಕು ಎಂದರು.

ಸದಸ್ಯರಾದ ಬಸವರಾಜಪ್ಪ ಮಾತನಾಡಿ, ಮೆಕ್ಕೆಜೋಳಕ್ಕೆ ದರ ನಿಗದಿಪಡಿಸಿ ಎಪಿಎಂಸಿ ಆವರ್ತನಿಧಿಯಲ್ಲಿ ಖರೀದಿಸುವ ವ್ಯವಸ್ಥೆ ಮಾಡಬೇಕು ಎಂದರು.

ಸದಸ್ಯರಾದ ಎ.ಆರ್. ಮಹೇಶ್ ಮಾತನಾಡಿ, ಕೇಂದ್ರ ಸರ್ಕಾರ ತಂದಿರುವ ಎಪಿಎಂಸಿ ತಿದ್ದುಪಡಿಯನ್ನು ಜನರು ಒಪ್ಪುತ್ತಿಲ್ಲ. ನಮ್ಮ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇರುವುದರಿಂದಲೇ ರೈತರ ಕಾಯ್ದೆಗಳನ್ನು ಜಾರಿಗೆ ತಂದಿದೆ ಎಂದಾಗ ಸದಸ್ಯರ ನಡುವೆ ಮಾತಿನ ಚಕಮಕಿ ಏರ್ಪಟ್ಟಿತು.

ಸದಸ್ಯೆ ಶೈಲಜಾ ಬಸವರಾಜ್ ಮಾತನಾಡಿ, ಕೇಂದ್ರ ನೀತಿ ಜಿಲ್ಲಾ ಪಂಚಾಯತ್ ವ್ಯಾಪ್ತಿ ಮೀರಿದ್ದಾಗಿದ್ದು, ನಮ್ಮ ವ್ಯಾಪ್ತಿಗೆ ಸಂಬಂಧಿಸಿದ ಚರ್ಚೆ ಮಾಡಿದರೆ ಒಳಿತು ಎಂದು ಸಲಹೆ ನೀಡಿದರು.

ಇದನ್ನೂ ಓದಿ | ಕೃಷಿ ಸಿಂಚಾಯಿ ಯೋಜನೆ | ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಕೃಷಿ ಜಂಟಿ ನಿರ್ದೇಶಕ ಶ್ರೀನಿವಾಸ ಚಿಂತಾಲ್ ಮಾತನಾಡಿ, ಜಿಲ್ಲಾ ಮಟ್ಟದ ಟಾಸ್ಕ್‍ಫೋರ್ಸ್ ಸಮಿತಿ ಸಭೆ ನಡೆಸಿ ಜಿಲ್ಲೆಯಲ್ಲಿನ ಮೆಕ್ಕೆಜೋಳ ಉತ್ಪಾದನೆ ಕುರಿತು ಮಾಹಿತಿ ಪಡೆದು ಜಿಲ್ಲಾಧಿಕಾರಿಗಳು ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಸುಮಾರು 5.5 ಲಕ್ಷ ಟನ್ ಮೆಕ್ಕೆಜೋಳ ಉತ್ಪಾದನೆ ಇದ್ದು, ರೂ.1825 ಮಾರುಕಟ್ಟೆ ದರ ನಿಗದಿಪಡಿಸಲಾಗಿದೆ.

ಆದರೆ ಮಾರುಕಟ್ಟೆಯಲ್ಲಿ ಬೇಡಿಕೆಗಿಂತ ಹೆಚ್ಚನ ಪೂರೈಕೆ ಇರುವುದರಿಂದ ದರ ಕಡಿಮೆ ಆಗಿದೆ. ಈ ಹಿನ್ನೆಲೆಯಲ್ಲಿ ಮೆಕ್ಕೆಜೋಳ ಬಳಕೆ ಮಾಡುವ ಕೈಗಾರಿಕೋದ್ಯಮಿಗಳನ್ನು ಕರೆದು ಸಭೆ ನಡೆಸಿ, ಮಾರುಕಟ್ಟೆ ದರದಲ್ಲಿ ಮೆಕ್ಕೆಜೋಳ ಖರೀದಿಸುವಂತೆ ಮನವೊಲಿಸುವ ಪ್ರಯತ್ನ ಮಾಡಲಾಗಿತ್ತು.

ಮೊದಲಿನಿಂದಲೂ ಮೆಕ್ಕೆಜೋಳ ಪಡಿತರ (ಪಿಡಿಎಸ್-ಪಬ್ಲಿಕ್ ಡಿಸ್ಟ್ರಿಬ್ಯೂಷನ್ ಸಿಸ್ಟಂ) ವಾಗಿ ಪಡಿತರ ಅಂಗಡಿಗಳಲ್ಲಿ ವಿತರಣೆಯಾಗುತ್ತಿಲ್ಲ. ಇದಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡಿಲ್ಲ. ಆದ ಕಾರಣ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಇದನ್ನು ಖರೀದಿಸುತ್ತಿಲ್ಲ. ಆದರೂ ಜಿಲ್ಲಾಡಳಿತದ ವತಿಯಿಂದ ಪ್ರಸ್ತಾವನೆ ಹೋಗಿದೆ ಎಂದರು.

ಎಪಿಎಂಸಿ ಸಹಾಯಕ ನಿರ್ದೇಶಕ ಪ್ರಭು ಮಾತನಾಡಿ, ಕಳೆದ ಆರು ವರ್ಷಗಳಿಂದ ಮೆಕ್ಕೆಜೋಳವನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸುತ್ತಿಲ್ಲ. ಆವರ್ತ ನಿಧಿ ರಾಜ್ಯ ವ್ಯಾಪ್ತಿಗೆ ಬರಲಿದ್ದು, ಸರ್ಕಾರ ಆದೇಶಿಸಿದರೆ ಕೆಎಂಎಫ್ ಮೂಲಕ ಖರೀದಿಸಬಹುದು ಎಂದರು.

ಸದಸ್ಯ ಬಸವರಾಜಪ್ಪ, ರೈತರ ಹಿತದೃಷ್ಟಿಯಿಂದ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ, ಆವರ್ತ ನಿಧಿ ಬಳಕೆ ಮಾಡಿಕೊಂಡು ಮೆಕ್ಕೆಜೋಳ ಖರೀದಿ ಮಾಡಬೇಕು. ಪಕ್ಕದ ಶಿಕಾರಿಪುರದಲ್ಲಿ ಕೆಎಂಎಫ್ ಮೂಲಕ ಖರೀದಿ ಮಾಡುತ್ತಿದ್ದಾರೆ ಎಂದರು.

ಸದಸ್ಯ ಮಹೇಶ್ ಪ್ರತಿಕ್ರಿಯಿಸಿ, ಮೆಕ್ಕೆಜೋಳ ಸೋಮಾರಿಗಳ ಬೆಳೆ ಎಂಬ ಹಣೆಪಟ್ಟಿ ಹೊತ್ತಿದ್ದು, ಮೆಕ್ಕೆಜೋಳ ಕಡಿಮೆ ಮಾಡಿ ತೋಟಗಾರಿಕೆ ಬೆಳೆಗಳಿಗೆ ಒತ್ತು ನೀಡಬೇಕೆಂದರು.

ಕೃಷಿ ಜಂಟಿ ನಿರ್ದೇಶಕ ಶ್ರೀನಿವಾಸ ಚಿಂತಾಲ್, ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಳೆಗೆ ಪೂರಕ ವಾತಾವರಣವಿದ್ದು ಸಂಪೂರ್ಣ ಯಾಂತ್ರೀಕೃತವಾಗಿರುವುದರಿಂದ ಎಲ್ಲರೂ ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಚನ್ನಗಿರಿ ಮತ್ತು ಹೊನ್ನಾಳಿಯಲ್ಲಿ ಅಡಿಕೆ ಹೆಚ್ಚು ಬೆಳೆಯುತ್ತಿದ್ದಾರೆ. ಇಲಾಖೆಯಿಂದ ಜೋಳ ಇಳುವರಿ ಕಡಿಮೆ ಮಾಡಲು ಅಂತರ ಬೆಳೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.

ಆಯ್ದ ಕೃಷಿಕರಿಗೆ ಗೂಗಲ್ ಮೀಟ್ ಮೂಲಕ 6:1 ಅನುಪಾತ ಅಂದರೆ ಆರು ಸಾಲಿಗೆ ಒಂದು ಸಾಲು ತೊಗರಿ ಬೆಳೆಯಂತೆ ಬೆಳೆಯಲು ಉತ್ತೇಜನ ನೀಡಲಾಗುತ್ತಿದೆ. ಇದರಿಂದ ರೈತರ ಆದಾಯವೂ ಹೆಚ್ಚಲಿದೆ. ತೊಗರಿಗೆ ರೂ.6 ಸಾವಿರ ಬೆಂಬಲ ಬೆಲೆ ಇದ್ದು ಪೂರ್ವನಿಯೋಜಿತವಾಗೇ ಖರೀದಿ ಕೇಂದ್ರದ ವ್ಯಾಪ್ತಿಗೆ ಬರುವುದು. ಮುಂಬರುವ ದಿನಗಳಲ್ಲಿ ಸಿರಿಧಾನ್ಯಗಳು ಕೂಡ ಪಿಡಿಎಸ್ ವ್ಯವಸ್ಥೆಗೆ ಒಳಪಡುವ ಸಾಧ್ಯತೆ ಇದೆ.

ಹಾಗೂ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ದ್ವಿದಳ ಧಾನ್ಯ ಬೆಳೆ ಹೆಚ್ಚುವ ಸಂಭವ ಇದೆ ಎಂದ ಅವರು ಬೀಜ ಲಭ್ಯತೆ ಹೆಚ್ಚಿಸಬೇಕಾಗಿದೆ. ಒಂದೇ ಬೆಳೆಗೆ ಜೋತು ಬೀಳದೆ ನಮ್ಮ ಪೂರ್ವಜರಂತೆ ಅಂತರ ಬೆಳೆ, ಮಿಶ್ರ ಬೆಳೆಗೆ ಒಲವು ತೋರಬೇಕೆಂದರು.

ಸದಸ್ಯರಾದ ತೇಜಸ್ವಿ ಪಟೇಲ್ ಮಾತನಾಡಿ, ಇಲಾಖೆ ರೈತರಿಗೆ ಒಂದು ಬೆಳೆ ಬಗ್ಗೆ ಸಂಪೂರ್ಣ ಯೋಜನೆ ಹಾಕಿಕೊಡಬೇಕು. ಕ್ರಾಪ್ ಪ್ರಾಜೆಕ್ಟ್ ಜೊತೆಗೆ ಬೀಜ, ಬೆಲೆ ಸೇರಿದಂತೆ ‘ಸೀಡ್ ಟು ಮಾರ್ಕೆಟ್’ ವ್ಯವಸ್ಥೆ ಮಾಡಿದಲ್ಲಿ ರೈತರಿಗೆ ಅನುಕೂಲವಾಗಲಿದೆ ಎಂದರು.

ಕೃಷಿ ಜಂಟಿ ನಿರ್ದೇಶಕರು, ಕೃಷಿಕರು ಒಂದು ನಿರ್ದಿಷ್ಟ ಪ್ರಾಜೆಕ್ಟ್ ತಯಾರಿಸಿ ಕೇಂದ್ರ ಸರ್ಕಾರದ ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಿದಲ್ಲಿ ರೂ.2 ಕೋಟಿವರೆಗೆ ರಿಯಾಯತಿ ಲಭಿಸಲಿದೆ ಎಂದರು.

ಸದಸ್ಯ ಸುರೇಂದ್ರನಾಯ್ಕ, ಬೆಳೆ ಸುಟ್ಟು, ಫಂಗಸ್ ಇತರೆ ರೀತಿಯಲ್ಲಿ ನಷ್ಟವಾದರೆ ಪ್ರತಿ ಎಕರೆಗೆ ನೀಡುವ ರೂ.20 ಸಾವಿರ ಮರು ಬಿತ್ತನೆ ಮಾಡಲು ಬೀಜ, ಗೊಬ್ಬರಕ್ಕೂ ಸಾಕಾಗುವುದಿಲ್ಲ. ಇದನ್ನು ಹೆಚ್ಚಿಸಬೇಕೆಂದರೆ, ಸದಸ್ಯ ವಿಶ್ವನಾಥ್ ಮೊನ್ನೆ ಬಿದ್ದ ಅಕಾಲಿಕ ಮಳೆಗೆ ಹೊನ್ನಾಳಿಯಲ್ಲಿ ಸುಮಾರು 4 ರಿಂದ 5 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದ್ದ ಬಿಳಿ ಜೋಳ ಪೂರ್ತಿ ಕಪ್ಪಾಗಿದ್ದು ಹಾಳಾಗಿದೆ. ಈ ಬಗ್ಗೆ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಬೇಕೆಂದರು.

ಸದಸ್ಯರಾದ ಮಂಜುನಾಥ್ ಮಾತನಾಡಿ, ಜಗಳೂರು ಹಿಂದುಳಿದ ತಾಲ್ಲೂಕಾಗಿದ್ದು ಇಲ್ಲಿ ಮೆಕ್ಕೆಜೋಳ ಮುಖ್ಯ ಬೆಳೆ. ತೋಟಗಾರಿಕೆ ಬೆಳೆ ಬೆಳೆಯಲು ಹೋಗಿ ತಾವೇ ಸ್ವತಃ ಕೈಸುಟ್ಟುಕೊಂಡಿದ್ದೇನೆ. ತೋಟಗಾರಿಕೆಗೆ ಇಲ್ಲಿನ ವಾತಾವರಣ ಪೂರಕವಾಗಿಲ್ಲ ಎಂದರು.

ಜಿ.ಪಂ. ಸಿಇಓ ಡಾ.ವಿಜಯ ಮಹಾಂತೇಶ ದಾನಮ್ಮನವರ್ ಮಾತನಾಡಿ, ಹಿಂದೆಯೂ ಮೆಕ್ಕೆಜೋಳದ ಬಗ್ಗೆ ಚರ್ಚೆ ನಡೆದಿದೆ. ಮೆಕ್ಕೆಜೋಳವನ್ನು ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮತ್ತು ಪಿಡಿಎಸ್ ವ್ಯವಸ್ಥೆಗೆ ಒಳಪಡಿಸುವ ಕುರಿತು ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದರು.

ಸದಸ್ಯೆ ಮಂಜುಳ ಟಿ.ವಿ.ರಾಜು ಮಾತನಾಡಿ, ತಾಲ್ಲೂಕು ಮಟ್ಟದ ತೋಟಗಾರಿಕೆ ಅಧಿಕಾರಿಗಳು ಮೀಟಿಂಗ್ ಇನ್ನಿತರೆ ಕಚೇರಿ ಕೆಲಸದಲ್ಲಿ ಅತಿ ಹೆಚ್ಚಾಗಿ ನಿರತರಾಗಿರುತ್ತಾರೆ. ಆದರೆ ಅವರ ಅವಶ್ಯಕತೆ ರೈತರ ಕ್ಷೇತ್ರದಲ್ಲಿ ಹೆಚ್ಚಾಗಿದೆ. ತಾವೇ ತಮ್ಮ ತೋಟಕ್ಕೆ ಕರೆಸಲು ಕಷ್ಟಪಡುತ್ತಿದ್ದು, ಸಹಾಯಕ ನಿರ್ದೇಶಕರು ರೈತರ ಬಳಿಗೆ ಹೋಗಲು ಅವಕಾಶ ಮಾಡಿಕೊಡಬೇಕು.

ತಮ್ಮದೇ ತೋಟದಲ್ಲಿ ಅಡಿಕೆ ಗೊಳ್ಳು ಉದುರುತ್ತಿದೆ. ಮಣ್ಣು ಆರೋಗ್ಯ ಚೀಟಿ ಮಾಡಿಸುವ ಬಗ್ಗೆ ರೈತರಿಗೆ ಸಮರ್ಪಕ ಮಾಹಿತಿ ಇಲ್ಲ. ಆದ ಕಾರಣ ಅಧಿಕಾರಿ/ಸಿಬ್ಬಂದಿಗಳು ರೈತರ ತೋಟಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದರೆ, ಸದಸ್ಯರಾದ ತೇಜಸ್ವಿ ಪಟೇಲ್ ಮತ್ತಿತರರು ತಾಲ್ಲೂಕು ಮಟ್ಟದಲ್ಲಿ ಮಣ್ಣು ಆರೋಗ್ಯ ಕೇಂದ್ರದ ಅವಶ್ಯಕತೆ ಇದ್ದು, ತಾಲ್ಲೂಕುಗಳಲ್ಲಿ ತರೆಯಲು ಸೂಕ್ತ ವ್ಯವಸ್ಥೆ ಮಾಡುವಂತೆ ಕೋರಿದರು.

ಸಿಇಓ ಮಾತನಾಡಿ, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಲಾಗುವುದು. ಹಾಗೂ ಪಿಆರ್‍ಇಡಿ ವಿಭಾಗದ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಮುಗಿಸಬೇಕು. ಹಾಗೂ ಸದಸ್ಯ ಹದಡಿ ನಿಂಗಪ್ಪನವರು ಹೇಳಿದ ಜವಳಘಟ್ಟದ ಸ್ಕೂಲ್ ಕಾಮಗಾರಿ ಬದಲಾವಣೆ ಬಗ್ಗೆ ತಾವು ಶಿಕ್ಷಣ ಇಲಾಖೆ ಸಿಪಿಐ ರವರೊಂದಿಗೆ ಮಾತನಾಡುವುದಾಗಿ ತಿಳಿಸಿದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶಾಂತಕುಮಾರಿ, ಚಿಕ್ಕಮ್ಮನಟ್ಟಿಯ ಅಂಗನವಾಡಿಯಲ್ಲಿ ನೀರು ನುಗ್ಗುತ್ತಿದ್ದು ಇದನ್ನು ಸರಿಸಪಡಿಸುವಂತೆ ಇಓ ರವರಿಗೆ ಸೂಚಿಸಿದರು.

ಸದಸ್ಯ ವಿಶ್ವನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಅನೇಕ ಯೋಜನೆಗಳಿದ್ದು ಜನರಿಗೆ ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲವಾಗಿ ಜನರಿಗೆ ತಲುಪುತ್ತಿಲ್ಲ. ತಮ್ಮ ತಾಲ್ಲೂಕಿನಲ್ಲಿ ಅನೇಕ ಬಾಲ್ಯ ವಿವಾಹಗಳಾಗಿದ್ದು ಬಾಲ್ಯ ವಿವಾಹ ತಡೆ ಕುರಿತು ಸರಿಯಾದ ಜಾಗೃತಿ ಇಲ್ಲವಾಗಿ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ಮಾತನಾಡಿ, ಬಾಲ್ಯ ವಿವಾಹ ತಡೆಯಲು ಸಕ್ರಿಯವಾಗಿ ಎಲ್ಲ ತಾಲ್ಲೂಕುಗಳಲ್ಲಿ ಕೆಲಸ ಮಾಡಲಾಗುತ್ತಿದೆ. ಬಾಲ್ಯ ವಿವಾಹವಾದ ನಂತರೂ ಪತ್ತೆ ಹಚ್ಚಿ ಪ್ರಕರಣ ದಾಖಲಿಸಲಾಗಿದೆ. ಬಾಲ್ಯ ವಿವಾಹ ತಡೆಯಲು ಸ್ಥಳೀಯರೂ ಕೂಡ ಸಹಕರಿಸಬೇಕು ಎಂದರು.

ಸಿಇಓ ಪ್ರತಿಕ್ರಿಯಿಸಿ, ಅಂಗನವಾಡಿ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸಲಾಗುತ್ತಿದೆ. ಅಂಗನವಾಡಿ ಸೇರಿದಂತೆ ಎಲ್ಲೆಡೆ ಆನ್‍ಲೈನ್ ವ್ಯವಸ್ಥೆ ಮಾಡಲಾಗಿದೆ. ಹಾಗೂ ಸದಸ್ಯರು ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮೀಟಿಂಗ್‍ಗಳನ್ನು ಕಡಿಮೆ ಮಾಡಲಾಗುವುದು. ಮಕ್ಕಳ ಸಹಾಯವಾಣಿ 1098 ಸಂಖ್ಯೆಯನ್ನು ಗ್ರಾ.ಪಂ ಕಚೇರಿ ಕಟ್ಟಡಗಳು ಇತರೆಡೆ ಬರೆಸಿ ಹಾಗೂ ಮಹಿಳಾ ಮತ್ತು ಮಕ್ಕಳ ಅಬಿವೃದ್ದಿ ಇಲಾಖೆಯಿಂದ ಸಹ ಜಾಗೃತಿ ಮೂಡಿಸಲಾಗುವುದು ಎಂದರು.

ಗ್ರಾ.ಪಂ ನಿರ್ವಹಣೆ ಟೆಂಡರ್ : ಸದಸ್ಯರಾದ ನಟರಾಜ್ ಮಾತನಾಡಿ, ಗ್ರಾ.ಪಂ ಗಳಿಗೆ 15 ನೇ ಹಣಕಾಸು ಯೋಜನೆಯಡಿ ಸಾಕಷ್ಟು ಅನುದಾನ ಬರುತ್ತಿದೆ. ಇದನ್ನು ದುರುಪಯೋಗಪಡಿಸುತ್ತಿರುವುದು ಸಹ ಎಲ್ಲರಿಗೆ ತಿಳಿದಿದೆ. ಇದರ ನಿರ್ವಹಣೆಗೆ ಟೆಂಡರ್ ಕರೆದಿಲ್ಲ. ಈ ಹಣಕಾಸು ನಿರ್ವಹಣೆಗೆ ಟೆಂಡರ್ ಕರೆಯಬೇಕು. ಈ ಬಗ್ಗೆ ಜಿ.ಪಂ ನಿಂದ ಆದೇಶಿಸಬೇಕೆಂದರು. ಬೇರೆ ಜಿಲ್ಲೆಗಳಲ್ಲಿ ಹಣಕಾಸು ನಿರ್ವಹಣೆಗೆ ಪ್ರತ್ಯೇಕ ಟೆಂಡರ್ ಕರೆದಿದ್ದು, ನಮ್ಮ ಜಿಲ್ಲೆಯಲ್ಲಿಯೂ ಕರೆಯಬೇಕು. ಹಣ ದುರುಪಯೋಗ ನಿಲ್ಲಿಸಬೇಕೆಂದರು.

ಸದಸ್ಯರಾದ ಸುರೇಂದ್ರನಾಯ್ಕ, ಗ್ರಾಮದಲ್ಲಿ ಸುಮಾರು 8 ರಿಂದ 10 ಬೋರ್ ಪಂಪ್‍ಗಳಿದ್ದು ಅದರ ನಿರ್ವಹಣೆಗೆ ಟೆಂಡರ್ ಕರೆಯಬೇಕು ಎಂದರು.

ಸಿಇಓ ಪ್ರತಿಕ್ರಿಯಿಸಿ, ಪಂಚಾಯತ್ ರಾಜ್ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಗ್ರಾ.ಪಂಗಳಿಗೆ ಪ್ರಮಾಧಿಕಾರ ನೀಡಲಾಗಿದ್ದು, ಜಿ.ಪಂ ಹಣಕಾಸು ನಿರ್ವಹಣೆ ಕುರಿತು ಟೆಂಡರ್ ಕರೆಯುವಂತೆ ಆದೇಶಿಸುವ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು. ಈ ಹಣಕಾಸಿನಲ್ಲಿ ಶೇ.25 ಕುಡಿಯುವ ನೀರು, ಶೇ.25 ಸ್ವಚ್ಚತೆ ಈ ರೀತಿ ವರ್ಗೀಕರಣ ಇದ್ದು, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಸದಸ್ಯ ತೇಜಸ್ವಿ ಪಟೇಲ್, ನೇರ ನಿರ್ವಹಣೆ ಮತ್ತು ಟೆಂಡರ್ ಎರಡೂ ಕಳಪೆಯಾಗಿರುವುದನ್ನು ಸಹ ನೋಡಿದ್ದು, ನಿರ್ವಹಣೆ ವಿಧಾನ ಹೇಗಿರಬೇಕು ಎಂಬುದಕ್ಕಿಂತ ಸಮರ್ಪಕ ಫಲಿತಾಂಶದ ಬಗ್ಗೆ ಗಮನಹರಿಸಬೇಕು ಎಂದರು.

ಸದಸ್ಯೆ ಮಂಜುಳಾ ಟಿ ವಿ ರಾಜು, ಗ್ರಾ.ಪಂ 15 ನೇ ಹಣಕಾಸಿನಲ್ಲಿ ಸದಸ್ಯರು ಹಣ ಹಂಚಿಕೆ ಮಾಡಿಕೊಳ್ಳುತ್ತಿದ್ದು, ಸಿಇಓ ಈ ಬಗ್ಗೆ ಗ್ರಾ.ಪಂ ವಾರು ಪರಿಶೀಲನೆ ನಡೆಸಿ ಕ್ರಮ ಕೈಗೊಂಡು ಹಣ ಸದ್ಬಳಕೆ ಆಗುವಂತೆ ಮಾಡಬೇಕೆಂದರು.

ಸದಸ್ಯ ಓಬಳಪ್ಪ ಮಾತನಾಡಿ, ಗ್ರಾ.ಪಂ ಯಲ್ಲಿ ಪರಮಾಧಿಕಾರ ಇದೆ. ಜೊತೆಗೆ ಹಣ ಕೂಡ ದುರುಪಯೋಗ ಆಗುತ್ತಿರುವುದು ಎಲ್ಲರಿಗೆ ತಿಳಿದ ವಿಷಯ. ಇದಕ್ಕೆ ಕಡಿವಾಣ ಹಾಕಲು ಸಿಇಓ ಸಲಹೆ ನೀಡಬೇಕೆಂದರು.

ಸದಸ್ಯೆ ಸವಿತಾ ಮಾತನಾಡಿ ತಮ್ಮ ಕ್ಷೇತ್ರ ಜಗಳೂರಿನಲ್ಲಿ ಕುಡಿಯುವ ನೀರಿಗೆ ತುಂಬಾ ಸಮಸ್ಯೆ ಇದೆ. ಅದರಲ್ಲಿ ಮುಸ್ಟೂರು, ಹನುಮಂತಾಪುರ ಇತರೆ ಗ್ರಾ.ಪಂ ಯವರು 6 ತಿಂಗಳಲ್ಲಿ 56 ಲಕ್ಷ ಹಣ ದುರುಪಯೋಗ ಮಾಡಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಆಗಬೇಕೆಂದರು.

ಸದಸ್ಯ ವಾಗೀಶ್‍ಸ್ವಾಮಿ, 15 ಹಣಕಾಸು ಬಂದಿರೋದೇ ತಪ್ಪು ಎನ್ನುವಂತಾಗಿದ್ದು, ಅವೈಜ್ಞಾನಿಕವಾಗಿ ಕೆಲಸಗಳು ಆಗುತ್ತಿವೆ. ಈ ಕುರಿತು ಬಿಸಿ ಮುಟ್ಟಿಸುವ ಕೆಲಸ ಆಗಬೇಕು ಎಂದರೆ ಸದಸ್ಯ ಸುರೇಂದ್ರನಾಯ್ಕ ಇನ್ನು ಒಂದು ತಿಂಗಳಲ್ಲಿ ಈ ಬಗ್ಗೆ ಸೂಕ್ತ ಕ್ರಮದ ಫಲಿತಾಂಶ ತಮಗೆ ಲಭಿಸಬೇಕೆಂದರು.

ಸದಸ್ಯ ತೇಜಸ್ವಿ ಪಟೇಲ್, ಜಿ.ಪಂ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿರುವ ಎಲ್ಲ ಗ್ರಾ.ಪಂ ವಾರು ಸಿಇಓ ಭೇಟಿ ನೀಡಿ ಎಲ್ಲ ಖರ್ಚುಗಳನ್ನು ಪರಿಶೀಲನೆ ಮಾಡಿದರೆ ಒಳಿತು ಎಂದರು.

ಸಿಇಓ ಪ್ರತಿಕ್ರಿಯಸಿ, ಕಾಯ್ದೆ ಉಲ್ಲಂಘನೆ ಯಾರೇ ಮಾಡಿದ್ದರೂ ಕ್ರಮ ವಹಿಸಲಾಗುವುದು. ಸೋಷಿಯಲ್ ಆಡಿಟ್‍ನಲ್ಲಿ ವರದಿಯಾಗಿರುತ್ತದೆ. ಜೊತೆಗೆ ತಮ್ಮ ಸಲಹೆ ಮೇರೆಗೆ ಪರಿಶೀಲನೆ ನಡೆಸಲಾಗುವುದು. ಪ್ರಾಥಮಿಕವಾಗಿ ತಾಲ್ಲೂಕಿನ ಇಓ ನನಗೆ ವರದಿ ನೀಡಿದ ನಂತರ ಕ್ರಮ ಕೈಗೊಳ್ಳುತ್ತೇನೆ ಎಂದರು.

ಕೊನೆಯ ಸಾಮಾನ್ಯ ಸಭೆ

ಇದು ಜಿ.ಪಂ ನ ಈ ಅವಧಿಯ ಕೊನೆಯ ಸಾಮಾನ್ಯ ಸಭೆಯಾಗಿದ್ದು, ಎಲ್ಲ ಸದಸ್ಯರು ಕೊನೆಯ ಸಾಮಾನ್ಯ ಸಭೆಯ ಪ್ರಸ್ತಾಪ ಮಾಡಿದರು. ಕೊನೆಯ ಸಾಮಾನ್ಯ ಸಭೆಯನ್ನಾದರೂ ಅಜೆಂಡಾ ಪ್ರಕಾರ ಮಾಡಬೇಕೆಂದು ಹಲವು ಸದಸ್ಯರು ಒತ್ತಾಯಿಸಿದರು. ಸದಸ್ಯರ ಹಾಸ್ಯ ಚಟಾಕಿ ಮತ್ತು ತಿಳಿ ವಾತಾವರಣ ಸಭೆಯಲ್ಲಿ ಕಂಡುಬಂತು.

ಸಭೆಯಲ್ಲಿ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ, ಕೃಷಿ ಮತ್ತು ಕೈಗಾರಿಕೆ ಸಮಿತಿ ಅಧ್ಯಕ್ಷ ಫಕೀರಪ್ಪ, ಶಿಕ್ಷಣ ಮತ್ತು ಆರೋಗ್ಯ ಸಮಿತಿ ಅಧ್ಯಕ್ಷ ವೀರಶೇಖರಪ್ಪ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಲೋಕೇಶ್, ಸದಸ್ಯರು, ತಾ.ಪಂ ಅಧ್ಯಕ್ಷರು, ಜಿ.ಪಂ ಉಪ ಕಾರ್ಯದರ್ಶಿ ಆನಂದ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಿಶ್ವ ಮೊಸಳೆಗಳ ದಿನ ; ಮೊಸಳೆ ಬಗ್ಗೆ ನಿಮಗಿಷ್ಟು ತಿಳಿದಿರಲಿ

Published

on

  • ಸಂಜಯ್ ಹೊಯ್ಸಳ

ಪ್ರತಿ ವರ್ಷದ ಜೂನ್ 17 ನ್ನು ವಿಶ್ವ ಮೊಸಳೆ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವದಲ್ಲಿ ಪ್ರಮುಖವಾಗಿ 24 ಜಾತಿಯ ಮೊಸಳೆಗಳಿದ್ದು, ಭಾರತದಲ್ಲಿ ಸದ್ಯಕ್ಕೆ 3 ಪ್ರಬೇಧದ ಮೊಸಳೆ ಸಂತತಿಗಳಿವೆ. ಅವುಗಳೆಂದರೆ..

ಉಪ್ಪು ನೀರಿನ ಮೊಸಳೆ (Saltwater crocodile) 
ಮಗ್ಗರ್/ಮಾರ್ಷ್ (Mugger)
ಘಾರಿಯಲ್ (Gharial)

ಇವುಗಳಲ್ಲಿ ಕರ್ನಾಟಕದಲ್ಲಿನ ನದಿಗಳಲ್ಲಿ, ಕೆಲವು ದೊಡ್ಡ ಕೆರೆಗಳಲ್ಲಿ ಕಂಡುಬರುವ ಮೊಸಳೆಗಳು ಮಗ್ಗರ್/ಮಾರ್ಷ್ ಮೊಸಳೆಗಳಾಗಿವೆ. ಕರ್ನಾಟಕದಲ್ಲಿ ಮೊಸಳೆಗಳು ಹೆಚ್ಚಾಗಿ ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ಪಾತ್ರದಲ್ಲಿ ಕಂಡುಬರುತ್ತವೆ. ಇತ್ತೀಚೆಗೆ ಮೊಸಳೆಯ ದವಣೆಗೆ ಸಿಲುಕಿ‌ ಕೆಲವು ಸಾವು ನೋವಿನ ಪ್ರಕರಣಗಳು ಆ ಭಾಗದಲ್ಲಿ ವರದಿಯಾಗಿವೆ‌.

ಇನ್ನು ಉತ್ತರ ಕರ್ನಾಟಕದ ಭಾಗದ ಕೆಲವು ಪ್ರಮುಖ ನದಿಗಳ ಪಾತ್ರದಲ್ಲೂ ಮೊಸಳೆಗಳು ಆಗಾಗ್ಗೆ ಕಂಡುಬರುತ್ತವೆ. ನಾನು ನೋಡಿದಂತೆ ಉತ್ತರ ಕರ್ನಾಟಕ ಭಾಗಕ್ಕೆ ಹೋಲಿಸಿದರೆ ದಕ್ಷಿಣ ಕರ್ನಾಟಕ ಭಾಗದಲ್ಲಿ ಮೊಸಳೆಗಳ ದಾಳಿ ಪ್ರಕರಣಗಳು ತುಂಬಾ ಕಡಿಮೆ ಎನ್ನಬಹುದು. ಈ‌ ಭಾಗದ ನದಿಗಳಲ್ಲಿ ಮೊಸಳೆಗಳ ಸಂಖ್ಯೆ ಕಡಿಮೆ ಇರುವುದು ಇದಕ್ಕೆ ಕಾರ ಇರಬಹುದು.

ಕಾವೇರಿ ನದಿಯಲ್ಲಿ ಅತಿಹೆಚ್ಚು ಮೊಸಳೆಗಳು‌ ಕಂಡು ಬರುವುದು ಮಂಡ್ಯದ ಶ್ರೀರಂಗಪಟ್ಟಣ ತಾಲ್ಲೂಕಿನ ವಿಶ್ವವಿಖ್ಯಾತ ಪಕ್ಷಿ ಧಾಮವಾದ ರಂಗನತಿಟ್ಟು ಪಕ್ಷಿಧಾಮದಲ್ಲಿ. ಹಿಂದೆ ಪಂಚತಂತ್ರದಲ್ಲಿ ಮೊಸಳೆ ಮತ್ತು ಕೋತಿ‌ಕತೆಯಲ್ಲಿ ಮೊಸಳೆಯ ಹೆಂಡತಿಗೆ ಕೋತಿ‌ ನೇರಳೆ ಹಣ್ಣುಗಳನ್ನು ಹೊತ್ತೊಯ್ಯುವ ಕತೆಯಲ್ಲಿ ಗಂಡ ಮತ್ತು‌ ಹೆಂಡತಿ‌ ಮೊಸಳೆಯನ್ನು ಕಲ್ಪಿಸಿಕೊಂಡು ಮಾತ್ರ ನಾನು ಮೊದಲು ಅವುಗಳ ಸಹಜ ಆವಾಸಸ್ಥಾನದಲ್ಲಿ ಮೊಸಳೆಯನ್ನು ನೋಡಿದ್ದು ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಹರಿಯುವ ಲಕ್ಷ್ಮಣತೀರ್ಥ ನದಿಯಲ್ಲಿ. ನಂತರ ಬಂಡೀಪುರ ದಟ್ಟಡವಿಯಲ್ಲಿ ಹರಿಯುವ ಮೂಲೆಹೊಳೆ/ ನುಗು ನದಿಯಲ್ಲಿ…‌ ನಂತರದ ದಿನಗಳಲ್ಲಿ ಕಬಿನಿ, ಪಾಲರ್ ಸೇರಿ ಬಹಳಷ್ಟು ಕಡೆ ಬಹಳಷ್ಟು ಮೊಸಳೆಗಳನ್ನು ನೋಡುವ ಅವಕಾಶ ಸಿಕ್ಕಿತು.

ಘಾರಿಯಲ್ ಗಳು ತುಂಬಾ ಅಪರೂಪದ ಮೊಸಳೆ ಸಂತತಿಗಳಾಗಿದ್ದು, ಸದ್ಯ ಉತ್ತರ ಭಾರತದ ಕೆಲವು ನದಿಗಳು ಹಾಗೂ ನೇಪಾಳದಲ್ಲಿ ಮಾತ್ರ ಇವು ಕಾಣಸಿಗುತ್ತಿವೆ. ಇವುಳನ್ನು IUCN red list ಗೆ ಸೇರಿಸಿದ್ದು, ಇವುಗಳ ಸಂರಕ್ಷಣೆಗೆ ವಿಶೇಷ ಗಮನ ನೀಡಲಾಗಿದೆ.

ನಮಗೆಲ್ಲಾ ಗೊತ್ತಿರುವಂತೆ ಜೀವವೈವಿಧ್ಯತೆಯ ರಕ್ಷಣೆಯಲ್ಲಿ ಎಲ್ಲಾ ಜೀವಿಗಳ‌ ಇರುವಿಕೆ ಬಹಳ ಮುಖ್ಯ. ಜಲಚರಗಳಲ್ಲಿ ಅಗ್ರ ಪರಪಕ್ಷಕಗಳಲ್ಲಿ ಒಂದೆನಿಸಿದ ಮೊಸಳೆ ಜಲಚರ ಜೀವಿಗಳ ಸಮತೋಲನ ಸಾಧಿಸಿ ಅಲ್ಲಿನ ಜೀವವೈವಿಧ್ಯ ಕಾಪಾಡುವಲ್ಲಿ ಇವು ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ ನಾವು ಮೊಸಳೆಗಳನ್ನು ಕೂಡ ಇತರ ಪ್ರಾಣಿಗಳಂತೆ ರಕ್ಷಿಸಬೇಕು.

ಮುಖ್ಯವಾಗಿ ಅವುಗಳ ಆವಾಸಸ್ಥಾನವಾದ ನದಿ, ಸರೋವರದಂತಹ ಜಲಮೂಲಗಳನ್ನು ಸಂರಕ್ಷಿಸಬೇಕು. ಅಲ್ಲಿ ಅಕ್ರಮ ಮರಳುಗಾರಿಗೆ ತಡೆದು, ಜಲಮಾಲಿನ್ಯ ನಿಯಂತ್ರಣ ಮಾಡಬೇಕು. ಹಾಗೆ ಪ್ಲಾಸ್ಟಿಕ್ ತ್ಯಾಜ್ಯಗಳು ನದಿ, ಸರೋವರಗಳನ್ನು ಸೇರದಂತೆ ಕ್ರಮವಹಿಸಬೇಕು. ಹಾಗೆಯೇ ಎಲ್ಲಾದರೂ ಮೊಸಳೆಗಳು ಕಂಡುಬಂದರೆ ಗಾಬರಿಯಾಗದೆ ತಕ್ಷಣ ಅರಣ್ಯ ಇಲಾಖೆಯ ಗಮನಕ್ಕೆ ತರಬೇಕು. (ಬರಹ:ಸಂಜಯ್ ಹೊಯ್ಸಳ,ಫೇಸ್ ಬುಕ್ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

Published

on

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಹೇಳಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.

“ಐಪಿಸಿ, ಸಿಆರ್‌ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆ ಅನುಸರಣೆ ಹಾಗೂ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ” ಎಂದು ಮೇಘವಾಲ್ ತಿಳಿಸಿದರು.”

ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ” ಎಂದು ಮೇಘವಾಲ್ ವಿವರಿಸಿದ್ದಾರೆ.”

ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಸಹ ಈ ಬಗ್ಗೆ ತರಬೇತಿ ನೀಡುತ್ತಿವೆ. ಎಲ್ಲವೂ ಜೊತೆಜೊತೆಯಾಗಿ ಸಾಗುತ್ತಿದೆ ಮತ್ತು ಜುಲೈ 1 ರಿಂದ, ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ನಿರ್ಣಾಯಕವಾದ ಈ ಎಲ್ಲಾ ಮೂರು ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರಲಾಗುವುದು” ಎಂದು ಅವರು ಸ್ಪಷ್ಟಪಡಿಸಿದರು.

ದೇಶದಲ್ಲಿ ಅಪರಾಧ ನ್ಯಾಯ ಸುಧಾರಣೆಯು ದೇಶದ ನ್ಯಾಯದಾನ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಇದು ಸೂಚಿಸುತ್ತದೆ. ಮಹಿಳೆಯರು, ಮಕ್ಕಳು ಮತ್ತು ರಾಷ್ಟ್ರದ ವಿರುದ್ಧದ ಅಪರಾಧಗಳನ್ನು ಇದು ಮುಂಚೂಣಿಯಲ್ಲಿರಿಸುತ್ತದೆ. ಅಲ್ಲದೆ ಇದು ವಸಾಹತುಶಾಹಿ ಯುಗದ ಕಾನೂನುಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

Published

on

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ ನಂತರ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ 3.5 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8 ಸಾವಿರದ 500 ರೂಪಾಯಿಗಳನ್ನು ವರ್ಗಾವಣೆ ಮಾಡುವ ಭರವಸೆಯನ್ನು ಈಡೇರಿಸುವ ಬದಲು, ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರವು, ರಾಜ್ಯದ ಜನರಿಗೆ ಹೊರೆಯಾಗಿದೆ ಎಂದು ಹರ್ದೀಪ್ ಸಿಂಗ್ ಪುರಿ ಸಾಮಾಜಿಕ ಜಾಲತಾಣದಲ್ಲಿ ದೂರಿದ್ದಾರೆ. ಇಂತಹ ನಿರ್ಧಾರ ಹಣದುಬ್ಬರದ ಬಗ್ಗೆ ಮಾತನಾಡುವ ಕಾಂಗ್ರೆಸ್‌ನ ಬೂಟಾಟಿಕೆ ಬಹಿರಂಗಪಡಿಸುತ್ತದೆ. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್‌ಗೆ ಸುಮಾರು 8 ರೂಪಾಯಿಗಳಿಂದ 12 ರೂಪಾಯಿಗಳಷ್ಟು ಹೆಚ್ಚುವರಿ ವ್ಯಾಟ್ ಅನ್ನು ವಿಧಿಸುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.

ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಈಗ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಬಸ್ ದರ, ಹಾಲಿನ ದರ, ಅಗತ್ಯ ವಸ್ತುಗಳ ದರ ಹೆಚ್ಚಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆಡಳಿತದ ವ್ಯವಸ್ಥೆ ಕುಸಿದುಹೋಗಿದೆ ಎಂದು ದೂರಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ದರ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ಹಾಗೂ ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ದರ ಕಡಿಮೆ ಇದೆ ಎಂದು ಹೇಳಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರ ತೆರಿಗೆ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೆ ವ್ಯಾಟ್ ಹೆಚ್ಚಳ ಮಾಡಿತ್ತು ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹೆಚ್ಚಳದಿಂದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending