Connect with us

ದಿನದ ಸುದ್ದಿ

ದಾವಣಗೆರೆ – ಹರಿಹರ ನಗರಾಭಿವೃದ್ದಿ ಪ್ರಾಧಿಕಾರ 2022-23ನೇ ಸಾಲಿನ ಆಯ-ವ್ಯಯ ಸಭೆ ; ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಎಂ.ಸುರೇಶ್ ಇವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಪ್ರಾಧಿಕಾರದ 2022-23ನೇ ಸಾಲಿನ ಯೋಜಿತ ಆಯವ್ಯಯ ಸಭೆ ನಡೆಸಲಾಯಿತು.

ದೂಡಾ ಕಚೇರಿಯಲ್ಲಿ ನಡೆದ ಆಯವ್ಯಯ ಸಭೆಯಲ್ಲಿ ಆಯುಕ್ತರಾದ ಕುಮಾರಸ್ವಾಮಿಯವರು ರೂ.18258.76 ಲಕ್ಷಗಳ ಆದಾಯದ ಹಾಗೂ 18136.03 ಲಕ್ಷಗಳ ನಿರೀಕ್ಷಿತ ವೆಚ್ಚದ ಅಂದಾಜನ್ನು ಮಂಡಿಸಿದರು.

ಈ ಕೆಳಕಂಡಂತೆ 2022-23ರ ಆಯ-ವ್ಯಯದ ಪ್ರಮುಖ ಅಂಶ

  1. 2022-23ನೇ ಸಾಲಿನಲ್ಲಿ ಪ್ರಾಧಿಕಾರವು ತನ್ನ ವಿವಿಧ ಬ್ಯಾಂಕ್‍ಗಳಲ್ಲಿ ನಿಶ್ಚಿತ ಠೇವಣಿ ಒಳಗೊಂಡಂತೆ ಪ್ರಸಕ್ತ ಸಾಲಿನಲ್ಲಿನ ಆದಾಯವು ರೂ.18258.76 ಲಕ್ಷಗಳು ಬರುವುದಾಗಿ ನಿರೀಕ್ಷಿಸಿರುತ್ತದೆ.
  2. 2022-23ನೇ ಸಾಲಿನಲ್ಲಿ ಪ್ರಾಧಿಕಾರವು ತನ್ನ ಸಾಮಾನ್ಯ ಆಡಳಿತದ ನಿಶ್ಚಿತ ವೆಚ್ಚಗಳನ್ನು ಒಳಗೊಂಡಂತೆ ಪ್ರಾಧಿಕಾರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ರೂ.18136.03 ಲಕ್ಷಗಳ ವೆಚ್ಚವನ್ನು ವಹಿಸಲು ಉದ್ದೇಶಿಸಲಾಗಿದೆ.
  3. 2022-23ನೇ ಸಾಲಿನಲ್ಲಿ ಪ್ರಾಧಿಕಾರವು ರೂ.122.73 ಲಕ್ಷಗಳ ಉಳಿತಾಯದ ಆಯಾವ್ಯಯವನ್ನು ಮಂಡಿಸಲಾಗಿರುತ್ತದೆ.
  • 2022-23ನೇ ಸಾಲಿನಲ್ಲಿ ಉದ್ದೇಶಿಸಲಾಗಿರುವ ಅಭಿವೃದ್ಧಿ ಕಾಮಗಾರಿಗಳ ವಿವರ

    2021-22ನೇ ಸಾಲಿನಲ್ಲಿ ಕೈಗೊಂಡ ಕಾಮಗಾರಿಗಳು, ಕಾಮಗಾರಿಗಳು ಚಾಲ್ತಿಯಲ್ಲಿದ್ದು ಮುಂದುವರೆದ ಕಾಮಗಾರಿಗಳಾಗಿರುವುದರಿಂದ ದಾವಣಗೆರೆ ಹಾಗೂ ಹರಿಹರ ವ್ಯಾಪ್ತಿಯಲ್ಲಿನ ವಿವಿಧ ಕಾಮಗಾರಿಗಳಿಗೆ ಒಟ್ಟು ರೂ.10543.37 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.

  • ಪ್ರಾಧಿಕಾರವು ಪ್ರಸಕ್ತ ಸಾಲಿನಲ್ಲಿ ಕುಂದುವಾಡ ಗ್ರಾಮದಲ್ಲಿ ಅಂದಾಜು 53.00 ಎಕರೆಯಲ್ಲಿ ನೂತನ ವಸತಿ ಬಡಾವಣೆ ನಿರ್ಮಾಣಕ್ಕಾಗಿ 2021-22ನೇ ಸಾಲಿನಲ್ಲಿ ರೂ.6000.00ಲಕ್ಷಗಳನ್ನು ಕಾಯ್ದಿರಿಸಿದ್ದು, ಇದರೊಂದಿಗೆ ಪ್ರಸಕ್ತ ಅವಧಿಯಲ್ಲಿ ರೂ.4000.00 ಲಕ್ಷಗಳನ್ನು ಕಾಯ್ದಿರಿಸಿದ್ದು, ಒಟ್ಟು ರೂ.10,000-00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿರುತ್ತದೆ.
  • ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಬಾತಿ ಕೆರೆಯನ್ನು ಕೆರೆ ಸಂರಕ್ಷಣಾ ಪ್ರಾಧಿಕಾರದ ಅನುಮೋದನೆಯಂತೆ ಅಭಿವೃದ್ಧಿ ಪಡಿಸಿ ಸೌಂದರ್ಯಕರಣಗೊಳಿಸಿ ಹಾಗೂ ಆಕರ್ಷಕ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ದಿ ಪಡಿಸುವ ಸಲುವಾಗಿ ರೂ.846.00 ಲಕ್ಷಗಳ ಮೊತ್ತವನ್ನು ಮುಂದುವರೆದ ಕಾಮಗಾರಿಯಲ್ಲಿ ಕಾಯ್ದಿರಿಸಿದ್ದು, ಈಗ ದರಗಳ ಏರಿಳಿತದಿಂದ 2022-23ನೇ ಸಾಲಿನ ಆಯಾವ್ಯಯದಲ್ಲಿ ರೂ.44.00 ಲಕ್ಷಗಳನ್ನು ಸೇರಿಸಿಕೊಂಡು ಒಟ್ಟು ರೂ.890.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿರುತ್ತದೆ.
  • ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಹಾಗೂ ದಾವಣಗೆರೆ ಮಹಾನಗರಕ್ಕೆ ಕುಡಿಯುವ ನೀರಿನ ಜಲ ಮೂಲವಾದ ಟಿ.ವಿ.ಸ್ಟೇಷನ್ ಕೆರೆಯನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ರೂ.275.00 ಲಕ್ಷಗಳನ್ನು ಮುಂದುವರೆದ ಕಾಮಗಾರಿಯಲ್ಲಿ ಕಾಯ್ದಿರಿಸಲಾಗಿದೆ.
  • ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಹೊನ್ನೂರು ಕೆರೆಯನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ರೂ.35.00 ಲಕ್ಷಗಳ ಮೊತ್ತವನ್ನು ಮುಂದುವರೆದ ಕಾಮಗಾರಿಯಲ್ಲಿ ಕಾಯ್ದಿರಿಸಲಾಗಿದೆ.
  • ದಾ-ಹ ನಗರಾಭಿವೃದ್ಧಿ ಪ್ರಾಧಿಕಾರವು ಮಹಾಯೋಜನೆ ವ್ಯಾಪ್ತಿಯಲ್ಲಿರುವ ಅಂದಾಜು 25.00 ಎಕರೆ ಭೂಮಿಯನ್ನು ಪ್ರಾಧಿಕಾರ ಮಹಾಯೋಜನೆಯಲ್ಲಿ ಉದ್ಯಾನವನಕ್ಕೆ ಕಾಯ್ದಿರಿಸಿರುವ ಜಮೀನುಗಳಲ್ಲಿ ಅಂದಾಜು 25.00 ಎಕರೆ ಜಮೀನನ್ನು ಭೂ ಸ್ವಾಧೀನ/ನೇರ ಖರೀದಿ ಮಾಡಿಕೊಂಡು ದಾವಣಗೆರೆ ನಾಗರೀಕರಿಗೆ ಒಂದು ಬೃಹತ್ ಅತ್ಯುತ್ತಮ ಉದ್ಯಾನವನ್ನು ನಿರ್ಮಿಸುವ ಸಲುವಾಗಿ ರೂ.1050.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
  • ಶ್ರೀ ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿ ಪ್ರಾಧಿಕಾರದ ವಶದಲ್ಲಿರುವ ನಿವೇಶನದಲ್ಲಿ ಅಧಿಕಾರಿ/ನೌಕರರಿಗಾಗಿ ವಸತಿ ಸಮುಚ್ಛಯ ಹಾಗೂ ಅತಿಥಿ ಗೃಹ ನಿರ್ಮಾಣಕ್ಕಾಗಿ ರೂ.500.00 ಲಕ್ಷಗಳ ಮೊತ್ತವನ್ನು ಮುಂದುವರೆದ ಕಾಮಗಾರಿಯಲ್ಲಿ ಕಾಯ್ದಿರಿಸಲಾಗಿದೆ.
  • ಆರ್.ಟಿ.ಓ. ಕಛೇರಿ ಎದುರುಗಡೆಯಲ್ಲಿರುವ ಪ್ರಾಧಿಕಾರದ ಜಾಗದಲ್ಲಿ ನೂತನ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕಾಗಿ ರೂ.500.00 ಲಕ್ಷಗಳ ಮೊತ್ತವನ್ನು ಮುಂದುವರೆದ ಕಾಮಗಾರಿಯಲ್ಲಿ ಕಾಯ್ದಿರಿಸಲಾಗಿದೆ.
  • ಪ್ರಾಧಿಕಾರದ ವ್ಯಾಪ್ತಿಯ ಪಿ.ಬಿ. ರಸ್ತೆಯ ಡಿ.ಸಿ.ಎಂ. ಟೌನ್‍ಶಿಫ್‍ನ ರೈಲ್ವೆ ಅಂಡರ್ ಪಾಸ್ ನಿಂದ ಚಿಂದೋಡಿಲೀಲಾ ರಂಗ ಮಂದಿರದವರೆಗೆ ದ್ವಿಪಥ ರಸ್ತೆಯ ರಸ್ತೆ ವಿಭಜಕದಲ್ಲಿ ಅಲಂಕಾರಿಕ ಕೋನಿಕಲ್ ವಿದ್ಯುತ್ ದೀಪಗಳನ್ನು ಅಳವಡಿಸುವ ಕಾಮಗಾರಿಗೆ ರೂ.179.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
  • ಪ್ರಾಧಿಕಾರ ವ್ಯಾಪ್ತಿಯಲ್ಲಿ ಪ್ರಾಧಿಕಾರದ ಮಹಾಯೋಜನೆಯಲ್ಲಿರುವ ಶ್ರೀ ಜಿ. ಮಲ್ಲಿಕಾರ್ಜುನಪ್ಪ ದ್ವಿಪಥ ರಸ್ತೆಯು ಪಿ.ಬಿ. ರಸ್ತೆಗೆ ಕೂಡುವ ಶ್ರೀ ಜಿ.ಮಲ್ಲಿಕಾರ್ಜುನ ವೃತ್ತದ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ರೂ.50.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
  • ಪ್ರಾಧಿಕಾರದಿಂದ ನಿರ್ಮಾಣ ಮಾಡಲಾದ ಶ್ರೀ ಜೆ.ಹೆಚ್.ಪಟೇಲ್ ಬಡಾವಣೆಯ ಸಂಪೂರ್ಣ ಅಭಿವೃದ್ಧಿ ರಸ್ತೆಗಳ ಡಾಂಬರೀಕರಣ, ವೃತ್ತಗಳ ಅಭಿವೃದ್ಧಿ, ಉದ್ಯಾನವನಗಳ ಅಭಿವೃದ್ಧಿ ಮತ್ತು ಸೋಲಾರ್ ದೀಪ ಅಳವಡಿಸಲು, ವಿದ್ಯುತ್ ದೀಪಗಳ ಅಳವಡಿಕೆ, ಕುಡಿಯುವ ನೀರು ಒಳಚರಂಡಿ ಹಾಗೂ ಸ್ವಚ್ಛತೆ ಸಂಬಂಧಿಸಿದ ಕಾಮಗಾರಿಗಳಿಗಾಗಿ ರೂ.975.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
  • ದಾವಣಗೆರೆ-ಹರಿಹರ ಮಹಾಯೋಜನೆ ಪರಿಷ್ಕøತ-2 ತಯಾರಿಕೆಗೆ ರೂ.50.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
  • ಪ್ರಾಧಿಕಾರದ ವ್ಯಾಪ್ತಿಯ ಹರಿಹರ ನಗರಕ್ಕೆ ಸಂಬಂಧಿಸಿದಂತೆ ವಿವಿಧ ರಸ್ತೆ ನಿರ್ಮಾಣ ಕಾಮಗಾರಿಗಳಿಗಾಗಿ ರೂ.100.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
  • ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ನಾಗನೂರು, ಶಿರಮಗೊಂಡನಹಳ್ಳಿ ಕೆರೆ ಅಭಿವೃದ್ಧಿ ಪಡಿಸುವ ಸಲುವಾಗಿ ರೂ.200.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
  • ಪ್ರಾಧಿಕಾರದ ವ್ಯಾಪ್ತಿಯ ತರಳಬಾಳು ಬಡಾವಣೆಯಲ್ಲಿ 10ನೇ ಕ್ರಾಸ್‍ನಲ್ಲಿ ಸಿ.ಸಿ. ರಸ್ತೆ ನಿರ್ಮಾಣಕ್ಕಾಗಿ ರೂ.75.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
  • ಪ್ರಾಧಿಕಾರದ ವ್ಯಾಪ್ತಿಯ ತರಳಬಾಳು ಬಡಾವಣೆಯಲ್ಲಿ 11ನೇ ಕ್ರಾಸ್‍ನಲ್ಲಿ ಸಿ.ಸಿ. ರಸ್ತೆ ನಿರ್ಮಾಣಕ್ಕಾಗಿ ರೂ.75.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
  • ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.33 ರಲ್ಲಿ ಬರುವ ದುರ್ಗಾಂಭಿಕಾ ಬಡಾವಣೆಯ ಮುಖ್ಯ ಮತ್ತು ಅಡ್ಡ ರಸ್ತೆ ಹಾಗೂ ಡಾಬಾ ಸ್ಟಾಪ್ ಎದುರಿನ ಮುಖ್ಯ ರಸ್ತೆಗಳಲ್ಲಿ ಸಿ.ಸಿ ರಸ್ತೆ ಅಭಿವೃದ್ದಿ ಕಾಮಗಾರಿ ಮತ್ತು ನಿಟುವಳ್ಳಿ ಮುಖ್ಯ ರಸ್ತೆಯಲ್ಲಿ ಹದಡಿ ರಸ್ತೆಯಿಂದ ಎಸ್.ಬಿ.ಐ. ಬ್ಯಾಂಕ್ ವರೆಗೂ ಮಳೆ ನೀರು ಚರಂಡಿ ನಿರ್ಮಾಣ ಕಾಮಗಾರಿಗೆ ರೂ.140.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
  • ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ ವಿಜಯನಗರ ಬಡಾವಣೆಯ 1ನೇ ಮೇನ್, 2ನೇ ಕ್ರಾಸ್ ರಸ್ತೆಯಲ್ಲಿ ಸಿ.ಸಿ. ಚರಂಡಿ ಮತ್ತು ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗೆ ರೂ.50.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
  • ದಾವಣಗೆರೆ ನಗರದ ಶ್ರೀ ಎಸ್.ನಿಜಲಿಂಗಪ್ಪ ಬಡಾವಣೆಯ ಅಮೃತಮಯಿ ಶಾಲೆಯ ಪಕ್ಕದಲ್ಲಿರುವ ಆಟದ ಮೈದಾನಕ್ಕೆ ಆವರಣ ಗೋಡೆ ನಿರ್ಮಿಸುವ ಕಾಮಗಾರಿಗೆ ರೂ.10.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
  • ದಾವಣಗೆರೆ ನಗರದ ಪಿ.ಬಿ. ರಸ್ತೆಯಿಂದ ಕುಂದುವಾಡ ರಸ್ತೆ ಕೂಡುವ ರಸ್ತೆಯಲ್ಲಿ ಅಡ್ಡಲಾಗಿ ಬಂದಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಲು ರೂ.10.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
  • ಮಹಾಯೋಜನೆಯಲ್ಲಿರುವ ದಾವಣಗೆರೆ ನಗರದ ವಾರ್ಡ್ ನಂ: 28 ಕಸ್ತೂರಿ ಬಾ ಬಡಾವಣೆ ಅಜ್ಜಂಪುರ ಶೆಟ್ರು ಲೇಔಟ್ ನಲ್ಲಿರುವ ರಸ್ತೆಯನ್ನು ಶಿವಪ್ಪ ಸರ್ಕಲ್‍ನಿಂದ ನಿಟುವಳ್ಳಿಗೆ ಹೋಗುವ ರಸ್ತೆಯಿಂದ ಕೆ.ಬಿ. ಬಡಾವಣೆಗೆ ಹೋಗುವ ರಸ್ತೆಯ ವರೆಗೆ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ರೂ.23.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
  • ಮಹಾಯೋಜನೆಯಲ್ಲಿರುವ ದಾವಣಗೆರೆ ನಗರದ ವಾರ್ಡ್ ನಂ: 33ರ ಸರಸ್ವತಿ ನಗರ ಬಿ ಬ್ಲಾಕ್‍ನಲ್ಲಿ ಮನೆ ನಂ: 780/83/2ರ ಮುಂಭಾಗದ ರಸ್ತೆ ಹಾಗೂ ಪಂಚಮುಖಿ ಆಂಜನೇಯ ದೇವಸ್ಥಾನದ ಮುಂಭಾಗದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಕಾಮಗಾರಿಗೆ ರೂ.27.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
  • ದಾವಣಗೆರೆ ಮಹಾಯೋಜನೆಯಲ್ಲಿರುವ ವಾರ್ಡ್ ನಂ: 33 ಸರಸ್ವತಿ ನಗರ ಬಿ ಬ್ಲಾಕ್ 9ನೇ ಕ್ರಾಸ್‍ನಲ್ಲಿ ಕೆ.ಎಸ್.ಎಸ್. ಕಾಲೇಜು ಹತ್ತಿರ ಇರುವ ಪಾರ್ಕ್ ಅಭಿವೃದ್ಧಿಗಾಗಿ ರೂ.50.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
  • ದಾವಣಗೆರೆ ಮಹಾಯೋಜನೆಯಲ್ಲಿರುವ ವಾರ್ಡ್ ನಂ: 13 ಶ್ರೀ ಡಿ.ದೇವರಾಜ ಕ್ವಾಟರ್ಸ್ ಹತ್ತಿರ ಇರುವ ಮುಖ್ಯ ರಸ್ತೆಯಲ್ಲಿ ಬೇತೂರು ಮುಖ್ಯ ರಸ್ತೆಯಿಂದ ಇಂದಿರಾ ನಗರ, ಎ.ಕೆ. ಹಟ್ಟಿಯವರೆಗೂ ಸಿ.ಸಿ. ರಸ್ತೆ ನಿರ್ಮಿಸಿ ಎರಡು ಬದಿಯಲ್ಲಿ ಸಿ.ಸಿ. ಚರಂಡಿ ನಿರ್ಮಿಸಿ ಪಾದಚಾರಿ ರಸ್ತೆ ನಿರ್ಮಿಸುವ ಕಾಮಗಾರಿಗಾಗಿ ರೂ.50.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
  • ಶ್ರೀ ಎಸ್.ನಿಜಲಿಂಗಪ್ಪ ಬಡಾವಣೆಯ ಅಮರ್ ಜವಾನ್ ಉದ್ಯಾನವನದಲ್ಲಿ ಬಯಲು ವೇದಿಕೆ ಮುಂಭಾಗದಲ್ಲಿ ಪೇವರ್ ಅಳವಡಿಸಿ ಅಭಿವೃದ್ಧಿ ಪಡಿಸುವ ಕಾಮಗಾರಿಗಾಗಿ ರೂ.8.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
  • ಮಹಾಯೋಜನೆಯಲ್ಲಿರುವ ದಾವಣಗೆರೆ ವಾರ್ಡ್ ನಂ: 29 ಆನಗೋಡು ಹೋಟೇಲ್ ನಿಂದ ಡಿ.ಸಿ.ಎಂ. ಕಾಂಪೌಂಡ್ ವರೆಗೂ (ಕೊಟ್ಟೂರೇಶ್ವರ ಬಡಾವಣೆ) ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ.30.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
  • ಮಹಾಯೋಜನೆಯಲ್ಲಿರುವ ದಾವಣಗೆರೆ ನಗರದ ಬಾಡಾ ಕ್ರಾಸ್‍ನಿಂದ ಬೇತೂರು ಗ್ರಾಮದವರೆಗೆ ರಿಂಗ್ ರಸ್ತೆ ನಿರ್ಮಿಸಲು ಡಿ.ಪಿ.ಆರ್. ತಯಾರಿಸಲು ರೂ.10.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.

    ಸಭೆಯಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ.ರವೀಂದ್ರನಾಥ್, ದೂಡಾ ಸದಸ್ಯರುಗಳಾದ ಮಾರುತಿರಾವ್ ಘಾಟ್ಗೆ, ಲಕ್ಷ್ಮಣ, ಬಾತಿ ಚಂದ್ರಶೇಖರ್, ಗೌರಮ್ಮ.ವಿ.ಪಾಟೀಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಗೊಂಡ ಬಸರಗಿ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಕೆ.ಹೆಚ್.ಶ್ರೀಕರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪ್ರಾಧಿಕಾರದ ಜಂಟಿ ನಿರ್ದೇಶಕರು, ಸಹಾಯಕ ನಿರ್ದೇಶಕರು ಮತ್ತು ಲೆಕ್ಕಪರಿಶೋಧನಾಧಿಕಾರಿಗಳು ಉಪಸ್ಥಿತರಿದ್ದರು.

    ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ ಯೋಜನೆಯಡಿ ಅರ್ಹ ಉದ್ದಿಮೆದಾರರಿಗೆ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಈಗಾಗಲೇ ಬ್ಯಾಂಕಿನಿಂದ ಸಾಲ ಪಡೆದು ಘಟಕಗಳನ್ನು ಸ್ಥಾಪಿಸಿರುವ ಅರ್ಹ ಉದ್ದಿಮೆದಾರರು ಹಾಗೂ ಬ್ಯಾಂಕ ಸಾಲ ಪಡೆದು ಉದ್ದಿಮೆ ಸ್ಥಾಪಿಸಲು ಇಚ್ಚಿಸಿರುವ ಉದ್ದಿಮೆದಾರರು ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಪಿ.ಬಿ ರಸ್ತೆ ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

Published

on

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

  • ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
  • ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
  • NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
  • “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP 

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್‌ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.

http://Visit : www.suddidina.com

ಇಂಡಿಯಾ ಗೇಟ್‌ನಿಂದ ಮೆರವಣಿಗೆ

ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.

ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’

ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.

“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.

“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ” 

  • CJP ಆರೋಪ

ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ

ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.

ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.

ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್‌ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

Continue Reading

ದಿನದ ಸುದ್ದಿ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

Published

on

KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ
KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

  • 329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್

  • 658 OMR ಕಾರ್ಬನ್ ಶೀಟ್‌ಗಳು FSLಗೆ

  • IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ED ಗಂಭೀರ ಆರೋಪ

  • ₹70–80 ಲಕ್ಷ ಲಂಚದ ಆರೋಪವೂ ತನಿಖೆಯಲ್ಲಿದೆ

  • ಪ್ರಶ್ನೆಪತ್ರ ಸಿದ್ಧತೆ, ಮುದ್ರಣದ CCTV ದೃಶ್ಯಗಳ ಬಗ್ಗೆಯೂ ಅನುಮಾನ 

ಸುದ್ದಿದಿನ,ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಜಾರಿ ನಿರ್ದೇಶನಾಲಯ (ED) ರಾಜ್ಯದ ವಿವಿಧೆಡೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಅದರ ಬೆನ್ನಲ್ಲೇ ಅಪರಾಧ ತನಿಖಾ ಇಲಾಖೆ (CID) ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

http://Visit : www.suddidina.com

329 ಅಭ್ಯರ್ಥಿಗಳಿಗೆ ನೋಟಿಸ್ ಏಕೆ?

ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಈಗಾಗಲೇ 658 OMR ಕಾರ್ಬನ್ ಶೀಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಮೂಲ OMR ಉತ್ತರ ಪತ್ರಿಕೆಗಳೊಂದಿಗೆ ಹೋಲಿಕೆ ಮಾಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಅಭ್ಯರ್ಥಿಗಳು ಗುರುತಿಸಿದ್ದ ಉತ್ತರಗಳ ಕಾರ್ಬನ್ ಪ್ರತಿಯಲ್ಲಿ ಮತ್ತು ಮೂಲ OMRನಲ್ಲಿ ವ್ಯತ್ಯಾಸವಿದೆಯೇ ಎಂಬುದನ್ನು ಪರಿಶೀಲಿಸುವುದು ತನಿಖೆಯ ಪ್ರಮುಖ ಭಾಗವಾಗಿದೆ.

ಇದೀಗ 329 ಅಭ್ಯರ್ಥಿಗಳನ್ನೂ ವಿಚಾರಣೆಗೆ ಒಳಪಡಿಸುವ CID ಕ್ರಮ ಪ್ರಕರಣದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ವಿಚಾರಣೆಯ ಮೂಲಕ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ, ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಅಥವಾ ಉತ್ತರಗಳ ಮಾಹಿತಿ ಮುಂಚಿತವಾಗಿ ಸಿಕ್ಕಿತೇ, OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿದೆಯೇ ಎಂಬುದರ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

IAS ಅಧಿಕಾರಿಯತ್ತ ತನಿಖೆಯ ಚಿತ್ತ

ಈ ಪ್ರಕರಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ KPSCಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ MSME ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಬೆಂಗಳೂರಿನ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಿವಾಸದ ಮೇಲೂ ED ಶೋಧ ನಡೆಸಿದೆ.

ED ಆರೋಪದ ಪ್ರಕಾರ, ಗಂಗ್ವಾರ್ ಅವರು ತಮ್ಮ ಇಬ್ಬರು ಪುತ್ರರಿಗೆ KPSC ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ದೊರಕಿಸಿಕೊಡಲು ವ್ಯಕ್ತಿಯೊಬ್ಬರಿಂದ ಸುಮಾರು ₹1.1 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಈ ಆರೋಪ ಇನ್ನೂ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗಿಲ್ಲ.

ಪ್ರಶ್ನೆಪತ್ರಿಕೆ ಸಿದ್ಧತೆಯಲ್ಲೂ ಅನುಮಾನ

ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಮತ್ತು ಮುದ್ರಿಸುವ ಪ್ರಕ್ರಿಯೆಗೆ ಸಂಬಂಧಿಸಿದ CCTV ದೃಶ್ಯಾವಳಿಗಳ ಅನುಪಸ್ಥಿತಿಯನ್ನೂ ED ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕ್ರಿಯೆಯಲ್ಲಿ CCTV ದಾಖಲೆಗಳು ಪ್ರಮುಖ ಭದ್ರತಾ ಕ್ರಮವಾಗಿರುವುದರಿಂದ, ಅವುಗಳ ಲಭ್ಯತೆ ಮತ್ತು ನಿರ್ವಹಣೆಯೂ ತನಿಖೆಯ ಪ್ರಮುಖ ಅಂಶವಾಗಿದೆ.

ಇದರ ಜೊತೆಗೆ, ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹70–80 ಲಕ್ಷದವರೆಗೆ ಲಂಚ ಕೇಳಲಾಗಿದೆ ಎಂಬ ಆರೋಪಗಳೂ ತನಿಖೆಯಲ್ಲಿವೆ. ಪ್ರಶ್ನೆಪತ್ರಿಕೆ ಸೋರಿಕೆ, OMR ತಿದ್ದುಪಡಿ ಮತ್ತು ನೇಮಕಾತಿ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.

KPSCಯಂತಹ ನೇಮಕಾತಿ ಸಂಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವ ಆರೋಪಗಳಾಗಿರುವುದರಿಂದ, CID ಮತ್ತು ED ತನಿಖೆಯ ಮುಂದಿನ ಹಂತಗಳು ಮಹತ್ವ ಪಡೆದುಕೊಂಡಿವೆ. 329 ಅಭ್ಯರ್ಥಿಗಳ ವಿಚಾರಣೆ, OMR ಕಾರ್ಬನ್ ಶೀಟ್‌ಗಳ FSL ವರದಿ ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆಯ ಬಳಿಕ ಪ್ರಕರಣದ ನಿಜವಾದ ಚಿತ್ರಣ ಇನ್ನಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.

ಮೇಲಿನ ಹಣ, ಅಕ್ರಮ ಮತ್ತು ಅಧಿಕಾರಿಯ ವಿರುದ್ಧದ ಆರೋಪಗಳು ತನಿಖಾ ಸಂಸ್ಥೆಗಳು ಮುಂದಿಟ್ಟಿರುವ ಆರೋಪಗಳಾಗಿದ್ದು, ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಆರೋಪಗಳೆಂದೇ ಪರಿಗಣಿಸಬೇಕೆಂದು ಕೋರ್ಟ್ ತಿಳಿಸಿದೆ.

 

Continue Reading

Trending