ದಿನದ ಸುದ್ದಿ

ದಾವಣಗೆರೆ | ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡಕ್ಕೆ ಶಂಕುಸ್ಥಾಪನೆ : ಬಿ.ಶ್ರೀರಾಮಲು

Published

on

ಸುದ್ದಿದಿನ,ದಾವಣಗೆರೆ : ತಾಯಿ ಮತ್ತು ಮಕ್ಕಳ ಮರಣ ಪ್ರಮಾಣ ಕಡಿಮೆ ಮಾಡಬೇಕೆಂಬ ಉದ್ದೇಶದಿಂದ ಇಂದು ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಸುಮಾರು ರೂ. 21 ಕೋಟಿ ವೆಚ್ಚದಲ್ಲಿ 100 ಹಾಸಿಗೆಗಳ ಸಾಮಥ್ರ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಜೊತೆಗೆ ವೈದ್ಯರು/ಶುಶ್ರೂಷಕರ ವಸತಿಗೃಹ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದು ಆರೋಗ್ಯ ಸಚಿವರಾದ ಬಿ. ಶ್ರೀರಾಮುಲು ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಂಜಿನಿಯರಿಂಗ್ ಘಟಕ ದಾವಣಗೆರೆ ಇವರ ವತಿಯಿಂದ ಜು.04 ರಂದು ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 100 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನಾ ಸಮಾರಂಭದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ತಾಯಿ ಮತ್ತು ಮಕ್ಕಳ ಮರಣ ಪ್ರಮಾಣವನ್ನು ತಗ್ಗಿಸಲು ರಾಜ್ಯದಲ್ಲಿ ಪ್ರಸ್ತುತ 17 ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳು ಕಾರ್ಯ ನಿರ್ವಹಿಸುತ್ತಿವೆ. ದಾವಣಗೆರೆ ಸುತ್ತಮುತ್ತಲಿನ ಜನತೆಗೆ ಅನುಕೂಲವಾಗುವ ಉದ್ದೇಶದಿಂದ ಸಂಸದರಾದ ಜಿ.ಎಂ.ಸಿದ್ದೇಶ್ವರ್ ಇವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ದಾವಣಗೆರೆ ಜಿಲ್ಲೆಗೆ ಒಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಬೇಕೆಂದು ಮಂಜೂರು ಮಾಡಿಸಿದ್ದಾರೆ.

ಈ ಆಸ್ಪತ್ರೆಯ ಕಾಮಗಾರಿಯನ್ನು ನಿಗದಿತ ಅವಧಿ ಅಂದರೆ 15 ತಿಂಗಳ ಒಳಗೆ ಮುಗಿಸಿ ನಂತರ ಸಂಸದರು, ಉಸ್ತುವಾರಿ ಸಚಿವರು, ಶಾಸಕರೆಲ್ಲ ಸೇರಿ ಉದ್ಘಾಟನೆಯನ್ನು ಸಹ ನೆರವೇರಿಸುವೆವು ಎಂದ ಅವರು ರಾಜ್ಯದಲ್ಲಿ ತಾಯಿ ಮತ್ತು ಮಕ್ಕಳ ಮರಣ ಪ್ರಮಾಣ ಇಳಿಮುಖವಾಗಿರುವುದಕ್ಕೆ ಕೇಂದ್ರ ಸರ್ಕಾರ ಪ್ರಶಂಸೆ ವ್ಯಕ್ತಪಡಿಸಿದೆ ಎಂದರು.

ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಕೋವಿಡ್ ಸೋಂಕನ್ನು ಸಮರೋಪಾದಿಯಲ್ಲಿ ನಿರ್ವಹಿಸಲಾಗುತ್ತಿದೆ. ಕೋವಿಡ್ ನಿಯಂತ್ರಣದಲ್ಲಿ ಒಂದು ನಯಾಪೈಸೆಯ ಅವ್ಯಹಾರ ಆಗಿಲ್ಲ. ಪ್ರಶಂಸನೀಯವಾಗಿ ಕೆಲಸ ಮಾಡಲಾಗುತ್ತಿದೆ. ವಿರೋಧ ಪಕ್ಷದವರ ಆರೋಪದಲ್ಲಿ ಹುರುಳಿಲ್ಲ. ಯಾವುದೇ ರೀತಿಯ ತನಿಖೆಗೆ ನಾವು ಸಿದ್ದರಿದ್ದೇವೆ. ಶ್ವೇತ ಪತ್ರ ಹೊರಡಿಸಿದರೂ ಸಿದ್ದರಾಗಿದ್ದೇವೆ.

ಮಾನ್ಯ ಮುಖಮಂತ್ರಿಗಳ ನೇತೃತ್ವದಲ್ಲಿ ನಾವೆಲ್ಲ ಒಗ್ಗೂಡಿ ಸಮನ್ವಯದಿಂದ ಕೆಲಸ ಮಾಡುತ್ತಿದ್ದೇವೆ. ಸಂಘ ಸಂಸ್ಥೆಗಳೂ ಸಹ ನಮ್ಮೊಂದಿಗೆ ದುಡಿಯುತ್ತಿದ್ದಾರೆ. ಆರೋಪ ಮಾಡುವುದಕ್ಕಿಂತ ನಮ್ಮೊಂದಿಗೆ ಕೈಜೋಡಿಸಿ ಕೆಲಸ ಮಾಡುವುದು ಒಳಿತು ಎಂದ ಅವರು ಕೋವಿಡ್ ನಿರ್ವಹಣೆ ವಿಷಯವಾಗಿ ವಿಶ್ವವೇ ಭಾರತದ ಕೆಲಸವನ್ನು ಶ್ಲಾಘಿಸುತ್ತಿದೆ ಎಂದರು.

ಈ ವೇಳೆ ಶಾಸಕರಾದ ರವೀಂದ್ರನಾಥ್, ಮಾಡಾಳ್ ವಿರೂಪಾಕ್ಷಪ್ಪ, ಎಸ್.ವಿ.ರಾಮಚಂದ್ರ, ಪ್ರೊ.ಲಿಂಗಣ್ಣ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಎಸ್‍ಪಿ ಹನುಮಂತರಾಯ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪೂರ, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಜಿಲ್ಲಾಸ್ಪತ್ರೆ ಡಿಎಸ್ ಡಾ.ನಾಗರಾಜ್, ಡಿಹೆಚ್‍ಓ ಡಾ.ರಾಘವೇಂದ್ರಸ್ವಾಮಿ ಮತ್ತಿತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version