ದಿನದ ಸುದ್ದಿ
ದಾವಣಗೆರೆ | ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ವಿನೂತನ ಕ್ರಮ : ಕೋವಿಡ್ ನಿಯಂತ್ರಣಕ್ಕಾಗಿ ಗ್ರಾಮಗಳ ದತ್ತು ಸ್ವೀಕಾರಕ್ಕೆ ಖಾಸಗಿ ವೈದ್ಯರಿಗೆ ಡಿಸಿ ಮನವಿ
ಸುದ್ದಿದಿನ,ದಾವಣಗೆರೆ : ಕೋವಿಡ್ ಸೋಂಕು ಗ್ರಾಮ ಮಟ್ಟದಲ್ಲಿ ವೇಗವಾಗಿ ಹರಡುತ್ತಿದ್ದು, ಇದನ್ನು ತಡೆಗಟ್ಟಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಗ್ರಾಮಗಳನ್ನು ದತ್ತು ಪಡೆದು, ಸತತ 10 ದಿನಗಳ ಕಾಲ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ, ರೋಗಪತ್ತೆ, ಚಿಕಿತ್ಸೆ ನಿರ್ಧರಣೆಗೆ ಜಿಲ್ಲೆಯಲ್ಲಿರುವ ಖಾಸಗಿ ವೈದ್ಯರು ಸಹಕರಿಸುವ ಮೂಲಕ ಜಿಲ್ಲೆಯ ಋಣ ತೀರಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಮನವಿ ಮಾಡಿದರು.
ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಕೋವಿಡ್ ಸೋಂಕಿತರ ಆರೋಗ್ಯ ಮೇಲ್ವಿಚಾರಣೆ ಮಾಡುವ ಸಂಬಂಧ ವೈದ್ಯರುಗಳ ನಿಯೋಜನೆ ಕುರಿತಂತೆ ಬುಧವಾರ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ 2ನೇ ಅಲೆ ಅವಧಿಯಲ್ಲಿ ನಿರೀಕ್ಷೆಗಿಂತ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಅನೇಕರು ನಮ್ಮ ಕಣ್ಣಮುಂದೆಯೇ ಮರೆಯಾಗುತ್ತಿದ್ದಾರೆ. ಸದ್ದಿಲ್ಲದೆ ಸೋಂಕು, ಬಡವರು, ಶ್ರೀಮಂತರು, ನಿರ್ಗತಿಕರು ಎನ್ನದೆ ಬಹಳಷ್ಟು ಜನರನ್ನು ಬಲಿತೆಗೆದುಕೊಳ್ಳುತ್ತಿದೆ.
ನಗರದ ಪ್ರತಿಷ್ಠಿತ ಬಡಾವಣೆಗಳಲ್ಲಿಯೇ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಇದಕ್ಕೆ ಕಾರಣ ಹೋಂ ಐಸೋಲೇಷನ್ನ ಅಸಮರ್ಪಕ ವ್ಯವಸ್ಥೆ. ಹಳೆ ದಾವಣಗೆರೆ ಪ್ರದೇಶದಲ್ಲಿ ಜನರು ಸೋಂಕಿನ ಭೀತಿಯಿಲ್ಲದೆ, ನಿತ್ಯವೂ ಅಗತ್ಯ ವಸ್ತಗಳ ಖರೀದಿ ನೆಪದಲ್ಲಿ ಜನಸಂದಣಿಯಲ್ಲಿ ಬೆರೆಯುವುದು ಕಂಡುಬರುತ್ತಿದ್ದು, ಯಾವಾಗ ಸೋಂಕು ಸ್ಫೋಟಗೊಳ್ಳುತ್ತದೆಯೋ ಎನ್ನುವ ಆತಂಕವಿದೆ. ದಾವಣಗೆರೆ ಜಿಲ್ಲೆ ವೈದ್ಯಕೀಯ ಕ್ಷೇತ್ರದಲ್ಲಿ ಇಡೀ ರಾಜ್ಯದಲ್ಲಿಯೇ ಖ್ಯಾತಿ ಹೊಂದಿದೆ.
ಅನೇಕಾನೇಕ ತಜ್ಞ ವೈದ್ಯರುಗಳು ಜಿಲ್ಲೆಯಲ್ಲಿದ್ದು, ಸಾರ್ವಜನಿಕರಿಗೆ ಸೇವೆ ನೀಡುತ್ತಿದ್ದಾರೆ. ದೇಶದಲ್ಲಿ ಈ ಹಿಂದೆ ಸಂಭವಿಸಿದ ಲಾತೂರ್ ಭೂಕಂಪ, ಕಂಡು ಕೇಳರಿಯದ ಪ್ರವಾಹ, ಕೊಡಗಿನಲ್ಲಿ ಅತಿವೃಷ್ಟಿಯಿಂದ ಉಂಟಾದ ಭೂಕುಸಿತ ಸಂದರ್ಭಗಳಲ್ಲಿ ಜಿಲ್ಲೆಯ ಖಾಸಗಿ ವೈದ್ಯರ ತಂಡ, ದುರಂತ ಸ್ಥಳಗಳಿಗೆ ತೆರಳಿ, ಜನರ ಪ್ರಾಣ ರಕ್ಷಣೆ ಮಾಡಿದ ನಿದರ್ಶನವಿದ್ದು, ಹೀಗಾಗಿ ಜಿಲ್ಲೆಯ ವೈದ್ಯರ ಬಗ್ಗೆ ನಮಗೆ ಹೆಮ್ಮೆ ಇದೆ. ಸದ್ಯ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಗ್ರಾಮಗಳಲ್ಲಿ ವೇಗವಾಗಿ ವ್ಯಾಪಿಸುತ್ತಿದ್ದು, ಜಿಲ್ಲೆ ಕಷ್ಟಕರ ಪರಿಸ್ಥಿತಿ ಎದುರಿಸುತ್ತಿದೆ.
ಲಾಕ್ಡೌನ್ ಪರಿಣಾಮವಾಗಿ ನಗರ, ಪಟ್ಟಣಗಳಿಂದ ಗ್ರಾಮಗಳಿಗೆ ಹಿಂದಿರುಗಿದ ಜನರಿಂದ ಸೋಂಕು ವ್ಯಾಪಕವಾಗುತ್ತಿದೆ. ಗ್ರಾಮಗಳಲ್ಲಿ ಜನರಿಗೆ ರೋಗದ ಬಗ್ಗೆ ಸರಿಯಾದ ತಿಳುವಳಿಕೆ ಇಲ್ಲ. ಜನರು ತಪ್ಪು ಕಲ್ಪನೆ ಹಾಗೂ ಭೀತಿಯಿಂದ ರೋಗ ಲಕ್ಷಣಗಳಿದ್ದರೂ ಪರೀಕ್ಷೆ ಮಾಡಿಸಿಕೊಳ್ಳದೆ, ರೋಗ ಮುಚ್ಚಿಡುವ ಪ್ರಯತ್ನ ಮಾಡುತ್ತಿದ್ದಾರೆ.
ಇಂತಹವರು ರೋಗವನ್ನು ಬೇರೆಯವರಿಗೆ ಹರಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಶೇ. 40 ರಷ್ಟು ಪ್ರಕರಣಗಳು ಗ್ರಾಮೀಣ ಪ್ರದೇಶಗಳಿಂದ ವರದಿಯಾಗುತ್ತಿವೆ. ಹೀಗಾಗಿ ಕೋವಿಡ್ ಸೋಂಕಿನ ಕುರಿತು ಗ್ರಾಮೀಣ ಜನರಲ್ಲಿ ಸರಿಯಾದ ತಿಳುವಳಿಕೆ, ಅರಿವು ಮೂಡಿಸಬೇಕಿದೆ, ಇದರ ಜೊತೆಗೆ ಅವರಲ್ಲಿನ ತಪ್ಪು ಕಲ್ಪನೆಗಳನ್ನು ತೊಡೆದುಹಾಕಿ, ಅವರಲ್ಲಿ ಚಿಕಿತ್ಸೆಯ ಬಗ್ಗೆ ಹಾಗೂ ಸರ್ಕಾರ ನಿಮ್ಮೊಂದಿಗಿದೆ ಎನ್ನುವ ವಿಶ್ವಾಸವನ್ನು ಮೂಡಿಸಬೇಕಿದೆ.
ಇದಕ್ಕಾಗಿ ಜಿಲ್ಲೆಯ ಎಲ್ಲ ಖಾಸಗಿ ವೈದ್ಯರ ಸಹಕಾರ ಈಗ ಅತ್ಯಗತ್ಯವಾಗಿದೆ. ಜಿಲ್ಲೆಯ ಗ್ರಾಮಗಳಲ್ಲಿ ಸರ್ಕಾರಿ ವೈದ್ಯರು, ಅಂಗನವಾಡಿ, ಆಶಾ ಕಾರ್ಯಕರ್ತರು, ಕಂದಾಯ ಇಲಾಖೆಯ ಸಿಬ್ಬಂದಿಗಳು ಈಗಾಗಲೆ ಲಭ್ಯರಿದ್ದು, ಇದರೊಂದಿಗೆ ಖಾಸಗಿ ವೈದ್ಯರನ್ನು ಒಳಗೊಂಡ ತಂಡವನ್ನು ರಚಿಸಲಾಗುವುದು. ಈ ತಂಡಕ್ಕೆ ಅಗತ್ಯ ಕೋವಿಡ್ ಕಿಟ್, ಸ್ಥಳದಲ್ಲಿಯೇ ಸೋಂಕು ಪತ್ತೆಹಚ್ಚಲು ರ್ಯಾಪಿಡ್ ಆಂಟಿಜನ್ ಟೆಸ್ಟ್ ಕಿಟ್, ಔಷಧಿಗಳು ಸೇರಿದಂತೆ ಎಲ್ಲ ಸೌಲಭ್ಯ ಒದಗಿಸಲಾಗುವುದು.
ಅಲ್ಲದೆ ವಾಹನದ ವ್ಯವಸ್ಥೆಯನ್ನು ಕೂಡ ಮಾಡಲಾಗುವುದು. ಖಾಸಗಿ ವೈದ್ಯರುಗಳು ಗ್ರಾಮ ಪಂಚಾಯತ್ ಮಟ್ಟದಲ್ಲಿ ಗ್ರಾಮಗಳನ್ನು ದತ್ತು ತೆಗೆದುಕೊಂಡು, ಸತತವಾಗಿ 10 ದಿನಗಳ ಕಾಲ ನಿಗದಿತ ಅವಧಿಯಲ್ಲಿ ಸೇವಾ ಮನೋಭಾವದೊಂದಿಗೆ ಸಹಕಾರ ನೀಡಿದಲ್ಲಿ, ಕೋವಿಡ್ ಅನ್ನು ಗ್ರಾಮ ಮಟ್ಟದಲ್ಲಿ ತಡೆಗಟ್ಟಲು ಸಾಧ್ಯವಿದೆ.
ಗ್ರಾಮಗಳು ಉಳಿದರೆ, ಇಡೀ ದೇಶ ಉಳಿದಂತೆ. ಯಾವುದೇ ಗ್ರಾಮದಲ್ಲಿ 15 ರಿಂದ 20 ಜನರಲ್ಲಿ ಸೋಂಕು ಇರುವುದು ದೃಢಪಟ್ಟಲ್ಲಿ ಆಯಾ ಗ್ರಾಮದ ಶಾಲೆ ಅಥವಾ ಸಮುದಾಯ ಭವನದಲ್ಲಿಯೇ ಕೋವಿಡ್ ಕೇರ್ ಸೆಂಟರ್ ತೆರೆದು, ಸೋಂಕಿತರಿಗೆ ಸೂಕ್ತ ವೈದ್ಯಕೀಯ ನೆರವು ನೀಡಲು ಜಿಲ್ಲಾಡಳಿತ ಸಿದ್ಧವಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಹೇಳಿದರು.
ತಂಡ ಕಾಯನಿರ್ವಹಣೆ ಬಗೆ
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಿಜಯ್ ಮಹಾಂತೇಶ್ ಅವರು ಗ್ರಾಮಗಳ ದತ್ತು ಸ್ವೀಕಾರ ಕುರಿತ ಕಾರ್ಯಕ್ರಮದ ವಿವರಣೆ ನೀಡಿ, ಖಾಸಗಿ ವೈದ್ಯರು ಕನಿಷ್ಟ 2 ತಿಂಗಳು ಗ್ರಾಮಗಳ ದತ್ತು ಸ್ವೀಕರಿಸಬೇಕು. ಖಾಸಗಿ ಹಾಗೂ ಸರ್ಕಾರಿ ವೈದ್ಯರನ್ನು ಒಳಗೊಂಡ ನಿಯೋಜಿತ ತಂಡಗಳು ದತ್ತು ಸ್ವೀಕೃತ ಗ್ರಾಮಗಳಿಗೆ ಭೇಟಿ ನೀಡಿ, ಅಲ್ಲಿನ ಜನರಲ್ಲಿ ವಿಶ್ವಾಸ ಮೂಡಿಸಬೇಕು.
ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೋಂಕು ಲಕ್ಷಣ ಹೊಂದಿರುವ ವ್ಯಕ್ತಿಗಳನ್ನು ಗುರುತಿಸಿ, ಅವರ ಪ್ರಾಥಮಿಕ ಸಂಪರ್ಕಿತರ ಪಟ್ಟಿ ಸಿದ್ಧಪಡಿಸಿಕೊಳ್ಳಬೇಕು, ರೋಗ ಲಕ್ಷಣಗಳುಳ್ಳ ಜನರಿಗೆ ರ್ಯಾಪಿಡ್ ಟೆಸ್ಟ್ ಮಾಡಬೇಕು. ಸೋಂಕು ದೃಢಪಟ್ಟವರ ಆರೋಗ್ಯ ಸ್ಥಿತಿಗತಿ ಹಾಗೂ ಸೋಂಕಿನ ತೀವ್ರತೆಗೆ ಅನುಗುಣವಾಗಿ ಹೋಂ ಐಸೋಲೇಷನ್, ಕೋವಿಡ್ ಕೇರ್ ಸೆಂಟರ್ ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಕುರಿತು ನಿರ್ಧರಿಸಬೇಕು.
ಇದನ್ನೂ ಓದಿ | ದಾವಣಗೆರೆ | ಹಾಪ್ ಕಾಮ್ಸ್ ವತಿಯಿಂದ ಮನೆಬಾಗಿಲಿಗೆ ತರಕಾರಿ
ಗ್ರಾಮೀಣರು ತಪ್ಪು ತಿಳುವಳಿಕೆಯಿಂದ ಮಾರ್ಗಸೂಚಿ ಪಾಲಿಸದೆ ಉಡಾಫೆಯಿಂದ ವರ್ತಿಸುತ್ತಿದ್ದಾರೆ. ಕೋವಿಡ್ ಸೋಂಕು ಲಕ್ಷಣ ಪ್ರಾರಂಭವಾಗಿ 5 ದಿನಗಳ ಒಳಗಾಗಿ ಸೋಂಕಿತರಿಗೆ ಚಿಕಿತ್ಸೆ ಪ್ರಾರಂಭವಾಗಬೇಕು, ಇಲ್ಲದಿದ್ದರೆ ಅಂತಹ ವ್ಯಕ್ತಿಯ ಜೀವಕ್ಕೇ ಅಪಾಯ ಎಂಬುದನ್ನು ಮರೆಯಬಾರದು.
ಈ ನಿಟ್ಟಿನಲ್ಲಿ ಗ್ರಾಮೀಣ ಜನರಲ್ಲಿ ಅರಿವು ಮೂಡಿಸಿ, ಸರ್ಕಾರಿ ವ್ಯವಸ್ಥೆಯೊಂದಿಗೆ ಖಾಸಗಿ ವೈದ್ಯರ ನೆರವು ಅತ್ಯಗತ್ಯವಾಗಿದೆ, ಖಾಸಗಿ ವೈದ್ಯರು ಇದಕ್ಕೆ ಸಹಕರಿಸುವ ಮೂಲಕ ಜಿಲ್ಲೆಯನ್ನು ಕೋವಿಡ್ ಸೋಂಕಿನಿಂದ ಮುಕ್ತಗೊಳಿಸಲು ಮುಂದಾಗಬೇಕು. ಇದಕ್ಕಾಗಿ ಅಗತ್ಯವಿರುವ ಎಲ್ಲ ನೆರವನ್ನು ಒದಗಿಸಲಾಗುವುದು ಎಂದರು.
ಸಹಕಾರಕ್ಕೆ ಸದಾ ಸಿದ್ಧ
ದಾವಣಗೆರೆ ಜಿಲ್ಲೆಯ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಅಧ್ಯಕ್ಷ ಡಾ. ಸೋಮಶೇಖರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಬಹಳಷ್ಟು ಜನರು ನಾವು ವೈದ್ಯರಿದ್ದೇವೆ. ವೈದ್ಯರು, ನರ್ಸ್ಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಅಗತ್ಯವಿರುವ ಸಿಬ್ಬಂದಿಗಳ ತಂಡವನ್ನು ರಚಿಸಿ, ಗ್ರಾಮಗಳಲ್ಲಿ ಕಾರ್ಯಾಚರಣೆ ಕೈಗೊಳ್ಳಲು ಸೂಕ್ತ ರೂಪರೇಷೆಗಳನ್ನು ಕೈಗೊಂಡಲ್ಲಿ, ಇದಕ್ಕೆ ಜಿಲ್ಲೆಯ ಎಲ್ಲ ವೈದ್ಯರು ಸಹಕಾರ ನೀಡಲು ಸಿದ್ಧರಿದ್ದೇವೆ.
ಜನರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಹಿಂಜರಿಯುತ್ತಿದ್ದಾರೆ, ಇದರಿಂದ ತಮ್ಮ ಪ್ರಾಣಕ್ಕೆ ಸಂಚಕಾರ ತಂದುಕೊಳ್ಳುತ್ತಿದ್ದಾರೆ. ಪ್ರಾಣ ಭಯ ಇದ್ದರೂ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಮುಂದಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ನರ್ಸಿಂಗ್ ಅಸೋಸಿಯೇಷನ್, ದಂತ ವೈದ್ಯರ ಸಂಘ ಸೇರಿದಂತೆ ವಿವಿಧ ವೈದ್ಯಕೀಯ ಕ್ಷೇತ್ರಗಳ ಸಂಘಗಳ ಪ್ರತಿನಿಧಿಗಳು, ಜಿಲ್ಲಾಡಳಿತದ ಕರೆಗೆ ಸ್ಪಂದಿಸಿ, ಕೋವಿಡ್ ನಿಯಂತ್ರಣಕ್ಕೆ ಯಾವುದೇ ಸೇವೆ ಸಲ್ಲಿಸಲು ಸದಾ ಸಿದ್ಧರಿದ್ದೇವೆ ಎನ್ನುವ ಭರವಸೆಯನ್ನು ಇದೇ ಸಂದರ್ಭದಲ್ಲಿ ನೀಡಿದರು.
ಸಭೆಯಲ್ಲಿ ದಾವಣಗೆರೆ ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಡಿಹೆಚ್ಒ ಡಾ. ನಾಗರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್, ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ನಟರಾಜ್, ಸೇರಿದಂತೆ ವಿವಿಧ ಅಧಿಕಾರಿಗಳು, ನಗರದ ವಿವಿಧ ಆಸ್ಪತ್ರೆಗಳ ವೈದ್ಯರುಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ4 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ3 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

