Connect with us

ದಿನದ ಸುದ್ದಿ

ದಾವಣಗೆರೆ | ಜುಲೈ 5 ರವರೆಗೆ ಲಾಕ್‍ಡೌನ್ ಮುಂದುವರಿಕೆ : ಏನಿರತ್ತೆ..? ಏನಿರಲ್ಲ..?

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಸತತವಾಗಿ ಏರಿಕೆಯಾಗುತ್ತಿರುವುದರಿಂದ ಜೂ.21 ರ ಬೆಳಿಗ್ಗೆ 6 ಗಂಟೆಯಿಂದ ಜುಲೈ 5 ರ ಬೆಳಿಗ್ಗೆ 5 ಗಂಟೆಯವರೆಗೆ ಲಾಕ್‍ಡೌನ್ ಮುಂದುವರೆಯಲಿದ್ದು ಕೋವಿಡ್-19ರ ಮಾರ್ಗಸೂಚಿಗಳ ಪಾಲನೆಯ ಷರತ್ತಿಗೆ ಒಳಪಟ್ಟು ಬಸ್‍ಗಳ ಆಸನದ ಗರಿಷ್ಠ ಶೇ.50ರ ಸಾಮಥ್ರ್ಯದೊಂದಿಗೆ ಬಸ್ ಸಂಚಾರಕ್ಕೆ ಅನುಮತಿಸಿದೆ.ಪ್ರಯಾಣಿಕರು ಬಸ್‍ಗಳಲ್ಲಿ ನಿಂತು ಪ್ರಯಾಣಿಸಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಹಿನ್ನೆಲೆ ಹೊರಡಿಸಲಾಗಿರುವ ನಿರ್ಬಂಧ/ಮಾರ್ಗಸೂಚಿಗಳ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಪ್ರತಿ ದಿನ ರಾತ್ರಿ 7 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕಫ್ರ್ಯೂ ಇರಲಿದ್ದು, ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವಾರಂತ್ಯದ ಕಫ್ರ್ಯೂ ಜಾರಿ ಮಾಡಲಾಗಿದೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.6.37 ರಷ್ಟಿದ್ದು ಮುಂದಿನ ಎರಡು ಮೂರು ದಿನಗಳಲ್ಲಿ ಶೇ.5 ರೊಳಗೆ ತರಲು ಪ್ರಯತ್ನಿಸಲಾಗುತ್ತಿದೆ.

ಹೊಸ ನಿಬಂಧನೆಗಳನ್ವಯ ಕೆಲವು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಸರ್ಕಾರದ ಆದೇಶದಂತೆ ಬಿಡುಗಡೆ ಮಾಡಿದ್ದು, ಜು.5 ರವರೆಗೆ ಜಾರಿಯಲ್ಲಿರುತ್ತದೆ. ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಆದರೆ, ಸರಕು ಸಾಗಾಣಿಕೆ ವಾಹನಗಳಿಗೆ ಸಂಚಾರಕ್ಕೆ ಅವಕಾಶವಿರುವ ಹಿನ್ನಲೆಯಲ್ಲಿ ಸದರಿ ವಾಹನಗಳು ಸರಕುಗಳನ್ನು ರಶೀದಿಯಲ್ಲಿ ನಮೂಧಿತ ವಿಳಾಸದ ಅಂಗಡಿ ಮತ್ತು ಗೋದಾಮುಗಳಲ್ಲಿ ಇಳಿಸಲು ಮತ್ತು ತೆಗೆದುಕೊಂಡು ಹೋಗಲು ಮಾತ್ರ ದಿನ ಪೂರ್ತಿ ಅವಕಾಶ ನೀಡಲಾಗಿದೆ.

ಕೃಷಿ ಉಪಕರಣ ಬಾಡಿಗೆ ಕೇಂದ್ರಗಳಿಗೆ, ಯಂತ್ರೋಪಕರಣಗಳಿಗೆ ಸಂಬಂಧಿಸಿದ ಅಂಗಡಿಗಳು ಮತ್ತು ಗೋದಾಮುಗಳು ಸೇರಿದಂತೆ ಎಲ್ಲಾ ಕೃಷಿ ಮತ್ತು ತತ್ಸಂಬಂಧಿತ ಕಾರ್ಯಚಟುವಟಿಕೆಗಳಿಗೆ ಅನುಮತಿಸಿದೆ ಹಾಗೂ ಸಿಬ್ಬಂದಿಗಳು ಕೃಷಿ ಕೈಗಾರಿಕಾ ಸಂಸ್ಥೆಗಳು ನೀಡಿದ ಅರ್ಹ ಗುರುತಿನ ಚೀಟಿ, ಅಧಿಕೃತ ಪತ್ರವನ್ನು ತೋರಿಸುವ ಮೂಲಕ ಓಡಾಡುವುದಕ್ಕೆ ಅನುಮತಿಸಿದೆ.

ಕೃಷಿ ಚಟುವಟಿಕೆಗಳಿಗೆ ಅನುವಾಗುವಂತೆ ಅಗತ್ಯ ವಸ್ತುಗಳಾದ ಬೀಜ, ಗೊಬ್ಬರ, ಕೀಟ ನಾಶಕಗಳು, ಕೃಷಿ ಕೋಯ್ಲು ಯಂತ್ರೋಪಕರಣಗಳ ಸಾಗಣೆ ಮತ್ತು ಸಂಬಂಧಿಸಿದ ಅಂಗಡಿಗಳನ್ನು ಸೋಮವಾರ ದಿಂದ ಶುಕ್ರವಾರದವರೆಗೆ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುಮತಿಸಿದೆ.

ಸಾರ್ವಜನಿಕರು ತುರ್ತು ಅಗತ್ಯ ಚಟುವಟಿಕೆಗಳಿಗೆ ವಾಹನಗಳಲ್ಲಿ ಸಂಚರಿಸಲು ಅವಕಾಶ ನೀಡಿದೆ. ಅನಗತ್ಯವಾಗಿ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ. ನಿಗಧಿತ ಮದುವೆ ಕಾರ್ಯಕ್ರಮಗಳನ್ನು ನಡೆಸಲು, ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆದು ಗರಿಷ್ಠ 40 ಹತ್ತಿರದ ಸಂಬಂಧಿಗಳು ಮಾತ್ರ ಭಾಗವಹಿಸಿ ಅವರುಗಳ ಮನೆಯಲ್ಲಿ ಮದುವೆ ಕಾರ್ಯಕ್ರಮ ನಡೆಸಲು ಅವಕಾಶ ನೀಡಲಾಗಿದೆ. ಈ ಮದುವೆಗಳಲ್ಲಿ ಸಾರ್ವಜನಿಕರಿಗೆ ಊಟದ ವ್ಯವಸ್ಥೆಯನ್ನು ನಿರ್ಬಂಧಿಸಲಾಗಿದೆ. ಉಳಿದ ಎಲ್ಲಾ ಸಾಮಾಜಿಕ, ಧಾರ್ಮಿಕ ಸಭೆ ಸಮಾರಂಭಗಳನ್ನು ನಿರ್ಬಂಧಿಸಲಾಗಿದೆ.

ಅಂತ್ಯಸಂಸ್ಕಾರ ಅಥವಾ ಶವ ಸಂಸ್ಕಾರಗಳಲ್ಲಿ ಗರಿಷ್ಟ 5 ಜನರಿಗೆ ಮಾತ್ರ ಭಾಗವಹಿಸಲು ಅನುಮತಿಸಿದೆ. ದಾವಣಗೆರೆ ಜಿಲ್ಲೆಗೆ ಅಗಮಿಸುವವರನ್ನು ಪ್ರತೀ ಚಕ್ ಪೋಸ್ಟ್‍ಗಳಲ್ಲಿ ವಿಚಾರಣೆ ನಡೆಸಿ, ಜಿಲ್ಲೆಯಲ್ಲಿಯೇ ವಾಸ್ತವ್ಯ ಹೂಡುವುದಾದಲ್ಲಿ ಎಲ್ಲಿ ತಂಗುತ್ತಾರೆ ಎಂಬ ಬಗ್ಗೆ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆನ್ನು ಪಡೆದುಕೊಳ್ಳುವುದು ಹಾಗೂ ಹೊರ ಜಿಲ್ಲೆಯಿಂದ ಆಗಮಿಸುವವರು ಕಡ್ಡಾಯವಾಗಿ 14 ದಿನಗಳ ಕಾಲ ಹೋಂ ಕ್ವಾರಂಟೈನ್‍ನಲ್ಲಿ ಇರತಕ್ಕದ್ದು.

ವಾಹನ ಬಳಕೆಯನ್ನು ತುರ್ತು ವೈದ್ಯಕೀಯ ಸೇವೆಗಳಿಗೆ ಮಾತ್ರ ಬಳಸಬಹುದು, ವೈದ್ಯಕೀಯ ದಾಖಲೆಗಳನ್ನು ಚೆಕ್ ಪೋಸ್ಟ್‍ಗಳಲ್ಲಿ ತೋರಿಸತಕ್ಕದ್ದು. ಇತರೆ ಎಲ್ಲಾ ಖಾಸಗಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ವೈದ್ಯಕೀಯ ಹಾಗೂ ಆಯುಷ್ ಹಾಗೂ ಪಶು ವೈದ್ಯಕೀಯ ಆಸ್ಪತ್ರೆಗಳು ಸೇರಿದಂತೆ ತುರ್ತು ಸೇವೆಗಳ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಕರ್ತವ್ಯ ನಿಮಿತ್ತ ಓಡಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಆದರೆ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ತಪಾಸಣಾ ಸಿಬ್ಬಂಧಿಗಳಿಗೆ ಹಾಜರುಪಡಿಸಬೇಕಾಗುತ್ತದೆ.

ಖಾಸಗಿ ಭದ್ರತಾ ಸೇವೆಗಳಿಗೆ ಅನುಮತಿಸಲಾಗಿದೆ. ಕ್ಲಿನಿಕ್, ಆಸ್ಪತ್ರೆ, ಲಸಿಕೆ ಹಾಗೂ ಪರೀಕ್ಷೆ ಉದ್ದೇಶಗಳಿಗೆ ಕನಿಷ್ಟ ವೈದ್ಯಕೀಯ ದಾಖಲೆಗಳು, ವೈದ್ಯ ಸಲಹಾ ಚೀಟಿ, ಆಸ್ಪತ್ರೆಯಲ್ಲಿ ದಾಖಲಾದ ವಿವರಗಳ ರುಜುವಾತಿನೊಂದಿಗೆ ಸಂಚರಿಸಲು ಅನುಮತಿಸಿದೆ. ಹೋಟೆಲ್, ರೆಸ್ಟೋರೆಂಟ್‍ಗಳು, ಉಪಹಾರ ಗೃಹಗಳು ಪಾರ್ಸಲ್ ಸೇವೆಗಳನ್ನು ಗ್ರಾಹಕರ ಮನೆ ಬಾಗಿಲಿಗೆ ವಿತರಿಸಲು ಮಾತ್ರ ಅನುಮತಿಸಲಾಗಿದೆ. ಯಾವುದೇ ರೀತಿಯ ಪಾರ್ಸ್‍ಲ್‍ಗಳನ್ನು ಗ್ರಾಹಕರು ನೇರವಾಗಿ ಖರೀದಿಸಲು ಅವಕಾಶವಿರುವುದಿಲ್ಲ.

ಕೋವಿಡ್-19ಕ್ಕೆ ಸಂಬಂಧಿಸಿದ ಕಾರ್ಯಕ್ಕೆ ನಿಯೋಜಿಸಿದ ಎಲ್ಲಾ ಕಛೇರಿಗಳು, ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ಸರ್ಕಾರದ ಆದೇಶದಂತೆ ಮೇ.7 ರಂತೆ ಕಾರ್ಯನಿರ್ವಹಿಸಬಹುದು. ಆದರೆ, ಈ ಕಚೇರಿಗಳಿಗೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಲಾಗಿದೆ. ಜಿಲ್ಲೆಯಲ್ಲಿ ಕಚೇರಿ ವೇಳೆಯನ್ನು ಮೀರಿ ತಮ್ಮ ಕರ್ತವ್ಯಗಳಿಗೆ ಹಾಜರಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಜಿಲ್ಲೆಯ ನ್ಯಾಯಾಂಗದ ಅಧಿಕಾರಿ, ಸಿಬ್ಬಂದಿಗಳು ತಮ್ಮ ಅಧಿಕೃತ ಗುರುತಿನ ಚೀಟಿಯನ್ನು ತೋರಿಸಿ ಸಂಚರಿಸುವುದಕ್ಕೆ ಅನುಮತಿಸಿದೆ.

ಭಾರತ ಸರ್ಕಾರದ, ಅದರ ಸ್ವಾಯತ್ತ, ಅಧೀನ ಸಂಸ್ಥೆಗಳ ಮತ್ತು ಸಾರ್ವಜನಿಕ ನಿಗಮಗಳ ಕಛೇರಿಗಳಾದ ದೂರಸಂಪರ್ಕ, ಅಂಚೆ ಕಛೇರಿ, ಬ್ಯಾಂಕುಗಳು, ಆರ್‍ಬಿಐ ನಿಯಂತ್ರಿತ ಹಣಕಾಸು ಸಂಸ್ಥೆಗಳು, ರೈಲ್ವೇ ಮತ್ತು ತತ್ಸಂಬಂಧಿತ ಕಾರ್ಯಾಚರಣೆಗಳು ಕನಿಷ್ಟ ಸಿಬ್ಬಂದಿಗಳೊಂದಿಗೆ ಮಾತ್ರ ಕಾರ್ಯನಿರ್ವಹಿಸತಕ್ಕದ್ದು.
ಟ್ಯಾಕ್ಸ್ ಅಡಿಟರ್ ಹಾಗೂ ಟ್ಯಾಕ್ಸ್ ಪ್ರಾಕ್ಟಿಷನರಗಳ ಕಚೇರಿಗಳು ಕಾರ್ಯನಿರ್ವಹಿಸಲು ಅನುಮತಿಸಿದೆ.

ಸರ್ಕಾರೇತರ ಸಂಸ್ಥೆಗಳ ಕಚೇರಿಗಳು, ಇತರೆ ಎಲ್ಲಾ ಕಚೇರಿಗಳ ಸಿಬ್ಬಂದಿಗಳು ಮನೆಯಿಂದಲೇ ಕೆಲಸ ನಿರ್ವಹಿಸಬಹುದು. ತುರ್ತು ಸೇವೆಗಳಿಗೆ ಸಂಬಂಧಪಟ್ಟ ಇಲಾಖೆಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ ಹಾಗೂ ಅರೆ ಸರ್ಕಾರಿ ಮತ್ತು ಖಾಸಗಿ ಕಚೇರಿಗಳ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂಧಿಗಳು ಮನೆಯಿಂದಲೇ ಕೆಲಸ ನಿರ್ವಹಿಸುವುದು.

ಹಾಲು, ಡೈರಿ, ಹಾಲಿನ ಬೂತು, ಪಶು ಆಹಾರ ಅಂಗಡಿಗಳು, ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು ತರಕಾರಿಗಳು, ಮಾಂಸ ಮತ್ತು ಮೀನು ಹಾಗೂ ಎಲ್ಲಾ ಮದ್ಯದ ಅಂಗಡಿಗಳು ಮತ್ತು ಸಿಎಲ್-4 ಸನ್ನದು ಹೊಂದಿರುವ ಕ್ಲಬ್‍ಗಳಲ್ಲಿ ಪಾರ್ಸ್‍ಲ್ ಸೇವೆ ಮಾತ್ರ ಅವಕಾಶ.

ಕಟ್ಟಡ ಕಾಮಗಾರಿ, ದುರಸ್ತಿಗೆ ಸಂಬಂಧಿಸಿದ ವಸ್ತುಗಳನ್ನು ಪೂರೈಸುವ ಎಲ್ಲಾ ಅಂಗಡಿಗಳು (ಸಿಮೆಂಟ್, ಕಬ್ಬಿಣ, ಪೇಂಟ್ಸ್, ಹಾರ್ಡವೇರ್, ಗ್ಲಾಸ್, ಪ್ಲೆ-ವುಡ್, ಸಾಮಿಲ್ಸ್, ಎಲೆಕ್ಟ್ರೀಕಲ್ಸ್, ಪೈಪ್ಸ್, ಟೈಲ್ಸ್/ಮಾರ್ಬಲ್ಸ್, ಸ್ಯಾನಿಟರಿ ವೇರ್ಸ್), ಕನ್ನಡಕದ ಅಂಗಡಿಗಳು, ಪಡಿತರ ನ್ಯಾಯಬೆಲೆ ಅಂಗಡಿಗಳು ಕೋವಿಡ್-19 ನಿರ್ವಹಣೆಯ ಸಂಬಂಧ ಹೊರಡಿಸಲಾದ ರಾಷ್ಟ್ರೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೆ ಒಳಪಟ್ಟು ಸೋಮವಾರ ದಿಂದ ಶುಕ್ರವಾರದವರೆಗೆ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಲು ಅನುಮತಿಸಲಾಗಿದೆ.

ಔಷಧಿ ಅಂಗಡಿಗಳು ಹಾಗೂ ಅಗತ್ಯ ಸೇವೆಗಳಾದ ಅಂಬುಲೆನ್ಸ್ ಅಗ್ನಿಶಾಮಕ ಮತ್ತು ಇತರೆ ತುರ್ತು ವೈದ್ಯಕೀಯ ಸೇವೆಗಳು, ವಿದ್ಯುತ್, ಪೆಟ್ರೋಲ್ ಪಂಪ್, ಅಮ್ಲಜನಕ ಉತ್ಪದಾನ ಘಟಕ, ನೀರು, ನೈರ್ಮಲ್ಯ ಸೇವೆಗಳಿಗೆ ಅನುಮತಿಸಲಾಗಿದೆ.
ಗರಿಷ್ಠ 02 ಪ್ರಯಾಣಿಕರ ಸಾಮಥ್ರ್ಯದೊಂದಿಗೆ ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಸಂಚರಿಸಲು ಅನುಮತಿಸಿದೆ.

ಕೋವಿಡ್-19 ರ ರಾಷ್ಟ್ರೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೆ ಒಳಪಟ್ಟು ವಾಕಿಂಗ್ ಮತ್ತು ಜಾಗಿಂಗ್ ಉದ್ದೇಶಕ್ಕಾಗಿ ಮಾತ್ರ ಉದ್ಯಾನವನಗಳನ್ನು ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ತೆರೆಯಲು ಅನುಮತಿಸಿದೆ. ಆದರೆ, ಯಾವುದೇ ಗುಂಪು ಚಟುವಟಿಕೆಗಳಿಗೆ ಅವಕಾಶವಿಲ್ಲ.

ಆರೋಗ್ಯ ಕ್ಷೇತ್ರದ ಕೌಶಲ್ಯ ತರಬೇತಿ ಹಾಗೂ ಘನತ್ಯಾಜ್ಯ ನಿರ್ವಹಣೆ ಸಂಬಂಧಿತ ತರಬೇತಿಗೆ ಅವಕಾಶ. ಇಂದಿರಾ ಕ್ಯಾಂಟೀನ್ ತೆರೆಯಲು, ದಿನಪತ್ರಿಕೆ, ದೃಶ್ಯಮಾಧ್ಯಮಗಳ ಸೇವೆಗಳಿಗೆ ಹಾಗೂ ಎಲ್ಲಾ ರೀತಿಯ ಸರಕುಗಳ ಸಾಗಾಣಿಕೆಗೆ ಮತ್ತು ಖಾಲಿ ವಾಹನಗಳಿಗೆ ಅನುಮತಿಸಲಾಗಿದೆ. ವಿಶೇಷವಾಗಿ ಅಮ್ಲಜನಕ ತರುವ ವಾಹನಗಳನ್ನು ತಡೆರಹಿತ ಸಾಗಾಟವನ್ನು ಅನುಮತಿಸಲಾಗಿದೆ.

ನಿರ್ಗತಿಕರ ಕೇಂದ್ರ, ವೃದ್ದಾಶ್ರಮ, ಬಾಲಮಂದಿರ, ಬಾಲಾಶ್ರಮ, ಅನಾಥಶ್ರಮ ಇವುಗಳಿಗೆ ಅನುಮತಿಸಲಾಗಿದೆ. ಅಂತರ ರಾಜ್ಯ ಮತ್ತು ಅಂತರ ಜಿಲ್ಲಾ ವ್ಯಕ್ತಿಗಳ ಸಂಚಾರವನ್ನು ಮೇ.7ರ ಸರ್ಕಾರದ ಆದೇಶದಂತೆ ಅನುಮತಿಸಲಾಗಿದೆ.

ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದ ಹಾಪ್-ಕಾಮ್ಸ್ ಮೂಲಕ ಮಾತ್ರ ಸಾರ್ವಜನಿಕರಿಗೆ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ಮಾರಾಟ ಮಾಡಲು ಅನುಮತಿಸಿದೆ. ಹಾಪ್-ಕಾಮ್ಸ್ ಲಭ್ಯವಿಲ್ಲದಿರುವ ಪ್ರದೇಶಗಳಲ್ಲಿ ಆಯುಕ್ತರು, ಮಹಾನಗರಪಾಲಿಕೆ ಮತ್ತು ಸಂಬಂಧಪಟ್ಟ ತಹಶೀಲ್ದಾರರು ಸ್ಥಳೀಯವಾಗಿ ಸೀಮಿತ ಸಂಖ್ಯೆಯಲ್ಲಿ ತಳ್ಳುವ ಗಾಡಿಯ ಮೂಲಕ ಮನೆ ಬಾಗಿಲಿಗೆ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ಮಾರಾಟ ವ್ಯವಸ್ಥೆ ಮಾಡಲು ಅನುಮತಿಸಿದೆ.

ಅಡುಗೆ ಅನಿಲ ಕಾರ್ಯನಿರ್ವಹಣೆಯನ್ನು ಮನೆ ಬಾಗಿಲಿಗೆ ತಲುಪಿಸುವ ಷರತ್ತಿಗೊಳಪಟ್ಟು ಕಾರ್ಯನಿರ್ವಹಣೆಯನ್ನು ಅನುಮತಿಸಲಾಗಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ಸಗಟು ಮಾರಾಟಗಾರರು ತರಕಾರಿ ಹಾಗೂ ಹಣ್ಣುಗಳನ್ನು ಖರೀದಿಸಲು ಹಾಗೂ ಬೇರೆಡೆ ಸಾಗಿಸಲು ಯಾವುದೇ ನಿರ್ಬಂಧನವಿರುವುದಿಲ್ಲ. ಇ-ಕಾಮರ್ಸ್, ಹೋಮ್ ಡೆಲಿವರಿ ಸೇವೆಗಳ ಮುಖಾಂತರ ಎಲ್ಲಾ ವಸ್ತುಗಳನ್ನು ಮನೆಗೆ ಸರಬರಾಜು ಮಾಡಲು ಅನುಮತಿಸಲಾಗಿದೆ.

ಎಲ್ಲಾ ವಿಧದ ಉತ್ಪಾದಿತ ಘಟಕಗಳು ಸಂಸ್ಥೆಗಳು, ಕೈಗಾರಿಕೆಗಳು, ಕೋವಿಡ್ ನಿಯಮವಾಳಿಯ ಮೇಲೆ ಶೇ.50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಬಹುದು. ಹಾಗೂ ಗಾರ್ಮೆಟ್ಸ್ ಗಳಲ್ಲಿ ಶೇ.30ರ ಸಿಬ್ಬಂದಿಯೊಂದಿಗೆ ಕೋವಿಡ್ ಕ್ರಮವನ್ನು ಅನುಸರಿಸಿ ಕಾರ್ಯನಿರ್ವಹಿಸಬಹುದಾಗಿದೆ. ವಿನಾಯತಿ ನೀಡಿರುವ ಅಗತ್ಯ ಚಟುವಟಿಕೆಗಳಲ್ಲಿ ಕೋವಿಡ್-19ರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕೆಂದು ತಿಳಿಸಿದರು.

ಈ ಮೇಲೆ ತಿಳಿಸಿದ ಮಾರ್ಗಸೂಚಿ ಅಥವಾ ನಿಬಂಧನೆಗಳನ್ನು ಉಲ್ಲಂಘಿಸಿದ ಪಕ್ಷದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಜಿಲ್ಲೆಯಲ್ಲಿ ಪಾಸಿಟಿವಿಟಿ ಮತ್ತು ಡೆತ್ ರೇಟ್ ಜಾಸ್ತಿ ಇದ್ದು, ಇದನ್ನು ಕಡಿಮೆಗೊಳಿಸಲು ಜಿಲ್ಲಾಡಳಿತ ಕಾರ್ಯನ್ಮೂಖವಾಗಿದ್ದು, ಈ ಕಾರ್ಯಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಣಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಡಿಹೆಚ್‍ಓ ಡಾ.ನಾಗರಾಜ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪ್ರವಾಸೋದ್ಯಮ ಇಲಾಖೆ | ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಆಹಾರ ಕರಕುಶಲ ಸಂಸ್ಥೆ ಮೈಸೂರು ( Food Craft Institute ) ಮತ್ತು ಹೋಟೆಲ್ ನಿರ್ವಹಣಾ ಸಂಸ್ಥೆ ಬೆಂಗಳೂರು (Institute Of Hotel Management ) ಇವರ ಸಹಯೋಗದಲ್ಲಿ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಲ್ಟಿ ಕ್ಯೂಸಿನ್ ಕುಕ್ ( Multi Cusine Cook ) ಮತ್ತು ಫುಡ್ ಅಂಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ್ ( Food And Beverage Service Steward ) ನಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಜಿಲ್ಲೆಯ ಅಭ್ಯರ್ಥಿಗಳು ಮಾ.25 ರಿಂದ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿನ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಏಪ್ರಿಲ್ 3 ರೊಳಗೆ ನೇರವಾಗಿ ಇಲಾಖೆಗೆ ಸಲ್ಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಬಿ.ಕಾವ್ಯ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಯಲಕ್ಷ್ಮಿ ಕಾರಂತ್‌ ಅವರಿಗೆ ‘ಯಕ್ಷ ಧ್ರುವ’ ರಾಜ್ಯ ಪ್ರಶಸ್ತಿ ಪ್ರದಾನ

Published

on

ಸುದ್ದಿದಿನ,ದಾವಣಗೆರೆ:ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಜಯಲಕ್ಷ್ಮಿ ಕಾರಂತ್‌ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ಭಂಟರ ಭವನದಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಪೌಂಡೇಷನ್ ಟ್ರಸ್ಟ್ ಹಮ್ಮಿಕೊಳ್ಳಲಾದ ಮಹಿಳಾ ಘಟಕದ 8ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ “ಯಕ್ಷ ಧ್ರುವ” ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು ಎಂದು ಕಲಾಕುಂಚ ಯಕ್ಷರಂಗದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.

ಹಿರಿಯ, ಕಿರಿಯ ಮಹಿಳೆಯರಿಗೆ, ಮಕ್ಕಳಿಗೆ ಯಕ್ಷಗಾನ ಮದ್ದಳೆ ತರಬೇತಿ, ಮಹಾಭಾರತ, ರಾಮಾಯಣ ಪರಂಪರೆಯ ಪೌರಾಣಿಕ ಪ್ರಸಂಗಗಳ ರಚನೆ, ನಿವೃತ್ತಿ ಶಿಕ್ಷಕಿಯಾದರೂ ಶೈಕ್ಷಣಿಕ ಕಾಳಜಿಯ ಸ್ವಯಂ ಸೇವೆಯೊಂದಿಗೆ, ಕಲೆ, ಸಾಹಿತ್ಯ, ಸಂಗೀತ, ಭಜನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಗುರುತಿಸಿ ಶ್ರೀಮತಿ ಜಯಲಕ್ಷ್ಮಿ ಕಾರಂತ್‌ರನ್ನು ಮಹತ್ವಪೂರ್ಣ ಈ ಪ್ರಶಸ್ತಿಗೆ ಭಾಜನಾಗಿದ್ದು ಕಲಾಕುಂಚ ಯಕ್ಷರಂಗ ಸೇರಿದಂತೆ ವಿವಿಧ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ಅಲರ್ಟ್..!

Published

on

  • ಸುನೀತ ಕುಶಾಲನಗರ

ದಿಯ ನೇವರಿಸಿದ ಗಾಳಿ
ಮುದಗೊಳಿಸಿ ಸರಿಯಿತು.
ಜಡಿ ಮಳೆ ಧೋ ಎಂದು
ಸಕಾಲಿಕವಾಗಿ ಸುರಿದು
ಹೊಸ ಹುಟ್ಟು.

ಆದರೇನು?
ಹಿಂಗಾರು, ಮುಂಗಾರು
ಆಗೊಮ್ಮೆ ಈಗೊಮ್ಮೆ
ಪದೇ ಪದೇ ಅದೇ ರಾಗ .

ಸುರಿದು ತುಂತುರು
ಕಾಣಿಸಿ ನಿಂತಿತೆನ್ನುವಾಗ
ಮತ್ತೆ ನಿಲ್ಲದ ಹಠ.

ಮಳೆಗೆ ಈಗ ಮುಟ್ಟು
ನಿಲ್ಲುವ ಸಮಯವೋ?
ಗುಡುಗು,ಮಿಂಚಿನಿಂದ
ಮುಟ್ಟಿನಲ್ಲಿ ಏರುಪೇರೋ ?
ಒಟ್ಟಿನಲ್ಲಿ
ನದಿಯ ಸೋಕಿದ ಗಾಳಿ
ಸಮುದ್ರದೊಳಗೆ ವಿಲೀನ.

ಅಕಾಲಿಕ ಮಳೆ…
ಇಳೆಗೆ ಸೊಂಟ ಬೇನೆ
ನದಿಯ ತಾಕಿದ ಬೆಳದಿಂಗಳು
ಕಿವಿಯಲ್ಲಿ ಉಸುರಿತು

ಹರಿಯುತ್ತಿರುವ ನದಿಯು
ಬೀಸುವ ಗಾಳಿಯು
ತಲೆಯೆತ್ತಿ ನಿಂತ ಬೆಟ್ಟವೂ
ಸ್ಥಾನ ಬದಲಿಸಲು
ಹೊತ್ತು ಬೇಕೆ?
ನಿಲ್ಲದ ಮಳೆಯ ಮುಟ್ಟಿಗೆ
ಸಲ್ಲುವ ಘೋಷಣೆ
ಹೈ ಅಲರ್ಟ್!

ಬದುಕಿನ ಧ್ಯಾನ
ಯೆಲ್ಲೋ, ಆರೆಂಜ್, ರೆಡ್
ಬಣ್ಣಗಳ ಅಲರ್ಟ್ ನಲ್ಲೇ
ಕಳೆದು ಹೋಗುತ್ತಿದೆ.

ಕಾಮನ ಬಿಲ್ಲ ತೋರಿಸಿ
ಸರಿದು ಬಿಡು ಮಳೆಯೇ
ಇಳೆಯ ಉಸಿರು
ಹಸಿರಾಗಲಿ. (ಕವಯಿತ್ರಿ: ಸುನೀತ ಕುಶಾಲನಗರ)

ಕವಯಿತ್ರಿ: ಸುನೀತ ಕುಶಾಲನಗರ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending