Connect with us

ದಿನದ ಸುದ್ದಿ

ದಾವಣಗೆರೆ | ಜುಲೈ 5 ರವರೆಗೆ ಲಾಕ್‍ಡೌನ್ ಮುಂದುವರಿಕೆ : ಏನಿರತ್ತೆ..? ಏನಿರಲ್ಲ..?

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಸತತವಾಗಿ ಏರಿಕೆಯಾಗುತ್ತಿರುವುದರಿಂದ ಜೂ.21 ರ ಬೆಳಿಗ್ಗೆ 6 ಗಂಟೆಯಿಂದ ಜುಲೈ 5 ರ ಬೆಳಿಗ್ಗೆ 5 ಗಂಟೆಯವರೆಗೆ ಲಾಕ್‍ಡೌನ್ ಮುಂದುವರೆಯಲಿದ್ದು ಕೋವಿಡ್-19ರ ಮಾರ್ಗಸೂಚಿಗಳ ಪಾಲನೆಯ ಷರತ್ತಿಗೆ ಒಳಪಟ್ಟು ಬಸ್‍ಗಳ ಆಸನದ ಗರಿಷ್ಠ ಶೇ.50ರ ಸಾಮಥ್ರ್ಯದೊಂದಿಗೆ ಬಸ್ ಸಂಚಾರಕ್ಕೆ ಅನುಮತಿಸಿದೆ.ಪ್ರಯಾಣಿಕರು ಬಸ್‍ಗಳಲ್ಲಿ ನಿಂತು ಪ್ರಯಾಣಿಸಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಹಿನ್ನೆಲೆ ಹೊರಡಿಸಲಾಗಿರುವ ನಿರ್ಬಂಧ/ಮಾರ್ಗಸೂಚಿಗಳ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಪ್ರತಿ ದಿನ ರಾತ್ರಿ 7 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕಫ್ರ್ಯೂ ಇರಲಿದ್ದು, ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವಾರಂತ್ಯದ ಕಫ್ರ್ಯೂ ಜಾರಿ ಮಾಡಲಾಗಿದೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.6.37 ರಷ್ಟಿದ್ದು ಮುಂದಿನ ಎರಡು ಮೂರು ದಿನಗಳಲ್ಲಿ ಶೇ.5 ರೊಳಗೆ ತರಲು ಪ್ರಯತ್ನಿಸಲಾಗುತ್ತಿದೆ.

ಹೊಸ ನಿಬಂಧನೆಗಳನ್ವಯ ಕೆಲವು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಸರ್ಕಾರದ ಆದೇಶದಂತೆ ಬಿಡುಗಡೆ ಮಾಡಿದ್ದು, ಜು.5 ರವರೆಗೆ ಜಾರಿಯಲ್ಲಿರುತ್ತದೆ. ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಆದರೆ, ಸರಕು ಸಾಗಾಣಿಕೆ ವಾಹನಗಳಿಗೆ ಸಂಚಾರಕ್ಕೆ ಅವಕಾಶವಿರುವ ಹಿನ್ನಲೆಯಲ್ಲಿ ಸದರಿ ವಾಹನಗಳು ಸರಕುಗಳನ್ನು ರಶೀದಿಯಲ್ಲಿ ನಮೂಧಿತ ವಿಳಾಸದ ಅಂಗಡಿ ಮತ್ತು ಗೋದಾಮುಗಳಲ್ಲಿ ಇಳಿಸಲು ಮತ್ತು ತೆಗೆದುಕೊಂಡು ಹೋಗಲು ಮಾತ್ರ ದಿನ ಪೂರ್ತಿ ಅವಕಾಶ ನೀಡಲಾಗಿದೆ.

ಕೃಷಿ ಉಪಕರಣ ಬಾಡಿಗೆ ಕೇಂದ್ರಗಳಿಗೆ, ಯಂತ್ರೋಪಕರಣಗಳಿಗೆ ಸಂಬಂಧಿಸಿದ ಅಂಗಡಿಗಳು ಮತ್ತು ಗೋದಾಮುಗಳು ಸೇರಿದಂತೆ ಎಲ್ಲಾ ಕೃಷಿ ಮತ್ತು ತತ್ಸಂಬಂಧಿತ ಕಾರ್ಯಚಟುವಟಿಕೆಗಳಿಗೆ ಅನುಮತಿಸಿದೆ ಹಾಗೂ ಸಿಬ್ಬಂದಿಗಳು ಕೃಷಿ ಕೈಗಾರಿಕಾ ಸಂಸ್ಥೆಗಳು ನೀಡಿದ ಅರ್ಹ ಗುರುತಿನ ಚೀಟಿ, ಅಧಿಕೃತ ಪತ್ರವನ್ನು ತೋರಿಸುವ ಮೂಲಕ ಓಡಾಡುವುದಕ್ಕೆ ಅನುಮತಿಸಿದೆ.

ಕೃಷಿ ಚಟುವಟಿಕೆಗಳಿಗೆ ಅನುವಾಗುವಂತೆ ಅಗತ್ಯ ವಸ್ತುಗಳಾದ ಬೀಜ, ಗೊಬ್ಬರ, ಕೀಟ ನಾಶಕಗಳು, ಕೃಷಿ ಕೋಯ್ಲು ಯಂತ್ರೋಪಕರಣಗಳ ಸಾಗಣೆ ಮತ್ತು ಸಂಬಂಧಿಸಿದ ಅಂಗಡಿಗಳನ್ನು ಸೋಮವಾರ ದಿಂದ ಶುಕ್ರವಾರದವರೆಗೆ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುಮತಿಸಿದೆ.

ಸಾರ್ವಜನಿಕರು ತುರ್ತು ಅಗತ್ಯ ಚಟುವಟಿಕೆಗಳಿಗೆ ವಾಹನಗಳಲ್ಲಿ ಸಂಚರಿಸಲು ಅವಕಾಶ ನೀಡಿದೆ. ಅನಗತ್ಯವಾಗಿ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ. ನಿಗಧಿತ ಮದುವೆ ಕಾರ್ಯಕ್ರಮಗಳನ್ನು ನಡೆಸಲು, ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆದು ಗರಿಷ್ಠ 40 ಹತ್ತಿರದ ಸಂಬಂಧಿಗಳು ಮಾತ್ರ ಭಾಗವಹಿಸಿ ಅವರುಗಳ ಮನೆಯಲ್ಲಿ ಮದುವೆ ಕಾರ್ಯಕ್ರಮ ನಡೆಸಲು ಅವಕಾಶ ನೀಡಲಾಗಿದೆ. ಈ ಮದುವೆಗಳಲ್ಲಿ ಸಾರ್ವಜನಿಕರಿಗೆ ಊಟದ ವ್ಯವಸ್ಥೆಯನ್ನು ನಿರ್ಬಂಧಿಸಲಾಗಿದೆ. ಉಳಿದ ಎಲ್ಲಾ ಸಾಮಾಜಿಕ, ಧಾರ್ಮಿಕ ಸಭೆ ಸಮಾರಂಭಗಳನ್ನು ನಿರ್ಬಂಧಿಸಲಾಗಿದೆ.

ಅಂತ್ಯಸಂಸ್ಕಾರ ಅಥವಾ ಶವ ಸಂಸ್ಕಾರಗಳಲ್ಲಿ ಗರಿಷ್ಟ 5 ಜನರಿಗೆ ಮಾತ್ರ ಭಾಗವಹಿಸಲು ಅನುಮತಿಸಿದೆ. ದಾವಣಗೆರೆ ಜಿಲ್ಲೆಗೆ ಅಗಮಿಸುವವರನ್ನು ಪ್ರತೀ ಚಕ್ ಪೋಸ್ಟ್‍ಗಳಲ್ಲಿ ವಿಚಾರಣೆ ನಡೆಸಿ, ಜಿಲ್ಲೆಯಲ್ಲಿಯೇ ವಾಸ್ತವ್ಯ ಹೂಡುವುದಾದಲ್ಲಿ ಎಲ್ಲಿ ತಂಗುತ್ತಾರೆ ಎಂಬ ಬಗ್ಗೆ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆನ್ನು ಪಡೆದುಕೊಳ್ಳುವುದು ಹಾಗೂ ಹೊರ ಜಿಲ್ಲೆಯಿಂದ ಆಗಮಿಸುವವರು ಕಡ್ಡಾಯವಾಗಿ 14 ದಿನಗಳ ಕಾಲ ಹೋಂ ಕ್ವಾರಂಟೈನ್‍ನಲ್ಲಿ ಇರತಕ್ಕದ್ದು.

ವಾಹನ ಬಳಕೆಯನ್ನು ತುರ್ತು ವೈದ್ಯಕೀಯ ಸೇವೆಗಳಿಗೆ ಮಾತ್ರ ಬಳಸಬಹುದು, ವೈದ್ಯಕೀಯ ದಾಖಲೆಗಳನ್ನು ಚೆಕ್ ಪೋಸ್ಟ್‍ಗಳಲ್ಲಿ ತೋರಿಸತಕ್ಕದ್ದು. ಇತರೆ ಎಲ್ಲಾ ಖಾಸಗಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ವೈದ್ಯಕೀಯ ಹಾಗೂ ಆಯುಷ್ ಹಾಗೂ ಪಶು ವೈದ್ಯಕೀಯ ಆಸ್ಪತ್ರೆಗಳು ಸೇರಿದಂತೆ ತುರ್ತು ಸೇವೆಗಳ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಕರ್ತವ್ಯ ನಿಮಿತ್ತ ಓಡಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಆದರೆ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ತಪಾಸಣಾ ಸಿಬ್ಬಂಧಿಗಳಿಗೆ ಹಾಜರುಪಡಿಸಬೇಕಾಗುತ್ತದೆ.

ಖಾಸಗಿ ಭದ್ರತಾ ಸೇವೆಗಳಿಗೆ ಅನುಮತಿಸಲಾಗಿದೆ. ಕ್ಲಿನಿಕ್, ಆಸ್ಪತ್ರೆ, ಲಸಿಕೆ ಹಾಗೂ ಪರೀಕ್ಷೆ ಉದ್ದೇಶಗಳಿಗೆ ಕನಿಷ್ಟ ವೈದ್ಯಕೀಯ ದಾಖಲೆಗಳು, ವೈದ್ಯ ಸಲಹಾ ಚೀಟಿ, ಆಸ್ಪತ್ರೆಯಲ್ಲಿ ದಾಖಲಾದ ವಿವರಗಳ ರುಜುವಾತಿನೊಂದಿಗೆ ಸಂಚರಿಸಲು ಅನುಮತಿಸಿದೆ. ಹೋಟೆಲ್, ರೆಸ್ಟೋರೆಂಟ್‍ಗಳು, ಉಪಹಾರ ಗೃಹಗಳು ಪಾರ್ಸಲ್ ಸೇವೆಗಳನ್ನು ಗ್ರಾಹಕರ ಮನೆ ಬಾಗಿಲಿಗೆ ವಿತರಿಸಲು ಮಾತ್ರ ಅನುಮತಿಸಲಾಗಿದೆ. ಯಾವುದೇ ರೀತಿಯ ಪಾರ್ಸ್‍ಲ್‍ಗಳನ್ನು ಗ್ರಾಹಕರು ನೇರವಾಗಿ ಖರೀದಿಸಲು ಅವಕಾಶವಿರುವುದಿಲ್ಲ.

ಕೋವಿಡ್-19ಕ್ಕೆ ಸಂಬಂಧಿಸಿದ ಕಾರ್ಯಕ್ಕೆ ನಿಯೋಜಿಸಿದ ಎಲ್ಲಾ ಕಛೇರಿಗಳು, ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ಸರ್ಕಾರದ ಆದೇಶದಂತೆ ಮೇ.7 ರಂತೆ ಕಾರ್ಯನಿರ್ವಹಿಸಬಹುದು. ಆದರೆ, ಈ ಕಚೇರಿಗಳಿಗೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಲಾಗಿದೆ. ಜಿಲ್ಲೆಯಲ್ಲಿ ಕಚೇರಿ ವೇಳೆಯನ್ನು ಮೀರಿ ತಮ್ಮ ಕರ್ತವ್ಯಗಳಿಗೆ ಹಾಜರಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಜಿಲ್ಲೆಯ ನ್ಯಾಯಾಂಗದ ಅಧಿಕಾರಿ, ಸಿಬ್ಬಂದಿಗಳು ತಮ್ಮ ಅಧಿಕೃತ ಗುರುತಿನ ಚೀಟಿಯನ್ನು ತೋರಿಸಿ ಸಂಚರಿಸುವುದಕ್ಕೆ ಅನುಮತಿಸಿದೆ.

ಭಾರತ ಸರ್ಕಾರದ, ಅದರ ಸ್ವಾಯತ್ತ, ಅಧೀನ ಸಂಸ್ಥೆಗಳ ಮತ್ತು ಸಾರ್ವಜನಿಕ ನಿಗಮಗಳ ಕಛೇರಿಗಳಾದ ದೂರಸಂಪರ್ಕ, ಅಂಚೆ ಕಛೇರಿ, ಬ್ಯಾಂಕುಗಳು, ಆರ್‍ಬಿಐ ನಿಯಂತ್ರಿತ ಹಣಕಾಸು ಸಂಸ್ಥೆಗಳು, ರೈಲ್ವೇ ಮತ್ತು ತತ್ಸಂಬಂಧಿತ ಕಾರ್ಯಾಚರಣೆಗಳು ಕನಿಷ್ಟ ಸಿಬ್ಬಂದಿಗಳೊಂದಿಗೆ ಮಾತ್ರ ಕಾರ್ಯನಿರ್ವಹಿಸತಕ್ಕದ್ದು.
ಟ್ಯಾಕ್ಸ್ ಅಡಿಟರ್ ಹಾಗೂ ಟ್ಯಾಕ್ಸ್ ಪ್ರಾಕ್ಟಿಷನರಗಳ ಕಚೇರಿಗಳು ಕಾರ್ಯನಿರ್ವಹಿಸಲು ಅನುಮತಿಸಿದೆ.

ಸರ್ಕಾರೇತರ ಸಂಸ್ಥೆಗಳ ಕಚೇರಿಗಳು, ಇತರೆ ಎಲ್ಲಾ ಕಚೇರಿಗಳ ಸಿಬ್ಬಂದಿಗಳು ಮನೆಯಿಂದಲೇ ಕೆಲಸ ನಿರ್ವಹಿಸಬಹುದು. ತುರ್ತು ಸೇವೆಗಳಿಗೆ ಸಂಬಂಧಪಟ್ಟ ಇಲಾಖೆಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ ಹಾಗೂ ಅರೆ ಸರ್ಕಾರಿ ಮತ್ತು ಖಾಸಗಿ ಕಚೇರಿಗಳ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂಧಿಗಳು ಮನೆಯಿಂದಲೇ ಕೆಲಸ ನಿರ್ವಹಿಸುವುದು.

ಹಾಲು, ಡೈರಿ, ಹಾಲಿನ ಬೂತು, ಪಶು ಆಹಾರ ಅಂಗಡಿಗಳು, ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು ತರಕಾರಿಗಳು, ಮಾಂಸ ಮತ್ತು ಮೀನು ಹಾಗೂ ಎಲ್ಲಾ ಮದ್ಯದ ಅಂಗಡಿಗಳು ಮತ್ತು ಸಿಎಲ್-4 ಸನ್ನದು ಹೊಂದಿರುವ ಕ್ಲಬ್‍ಗಳಲ್ಲಿ ಪಾರ್ಸ್‍ಲ್ ಸೇವೆ ಮಾತ್ರ ಅವಕಾಶ.

ಕಟ್ಟಡ ಕಾಮಗಾರಿ, ದುರಸ್ತಿಗೆ ಸಂಬಂಧಿಸಿದ ವಸ್ತುಗಳನ್ನು ಪೂರೈಸುವ ಎಲ್ಲಾ ಅಂಗಡಿಗಳು (ಸಿಮೆಂಟ್, ಕಬ್ಬಿಣ, ಪೇಂಟ್ಸ್, ಹಾರ್ಡವೇರ್, ಗ್ಲಾಸ್, ಪ್ಲೆ-ವುಡ್, ಸಾಮಿಲ್ಸ್, ಎಲೆಕ್ಟ್ರೀಕಲ್ಸ್, ಪೈಪ್ಸ್, ಟೈಲ್ಸ್/ಮಾರ್ಬಲ್ಸ್, ಸ್ಯಾನಿಟರಿ ವೇರ್ಸ್), ಕನ್ನಡಕದ ಅಂಗಡಿಗಳು, ಪಡಿತರ ನ್ಯಾಯಬೆಲೆ ಅಂಗಡಿಗಳು ಕೋವಿಡ್-19 ನಿರ್ವಹಣೆಯ ಸಂಬಂಧ ಹೊರಡಿಸಲಾದ ರಾಷ್ಟ್ರೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೆ ಒಳಪಟ್ಟು ಸೋಮವಾರ ದಿಂದ ಶುಕ್ರವಾರದವರೆಗೆ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಲು ಅನುಮತಿಸಲಾಗಿದೆ.

ಔಷಧಿ ಅಂಗಡಿಗಳು ಹಾಗೂ ಅಗತ್ಯ ಸೇವೆಗಳಾದ ಅಂಬುಲೆನ್ಸ್ ಅಗ್ನಿಶಾಮಕ ಮತ್ತು ಇತರೆ ತುರ್ತು ವೈದ್ಯಕೀಯ ಸೇವೆಗಳು, ವಿದ್ಯುತ್, ಪೆಟ್ರೋಲ್ ಪಂಪ್, ಅಮ್ಲಜನಕ ಉತ್ಪದಾನ ಘಟಕ, ನೀರು, ನೈರ್ಮಲ್ಯ ಸೇವೆಗಳಿಗೆ ಅನುಮತಿಸಲಾಗಿದೆ.
ಗರಿಷ್ಠ 02 ಪ್ರಯಾಣಿಕರ ಸಾಮಥ್ರ್ಯದೊಂದಿಗೆ ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಸಂಚರಿಸಲು ಅನುಮತಿಸಿದೆ.

ಕೋವಿಡ್-19 ರ ರಾಷ್ಟ್ರೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೆ ಒಳಪಟ್ಟು ವಾಕಿಂಗ್ ಮತ್ತು ಜಾಗಿಂಗ್ ಉದ್ದೇಶಕ್ಕಾಗಿ ಮಾತ್ರ ಉದ್ಯಾನವನಗಳನ್ನು ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ತೆರೆಯಲು ಅನುಮತಿಸಿದೆ. ಆದರೆ, ಯಾವುದೇ ಗುಂಪು ಚಟುವಟಿಕೆಗಳಿಗೆ ಅವಕಾಶವಿಲ್ಲ.

ಆರೋಗ್ಯ ಕ್ಷೇತ್ರದ ಕೌಶಲ್ಯ ತರಬೇತಿ ಹಾಗೂ ಘನತ್ಯಾಜ್ಯ ನಿರ್ವಹಣೆ ಸಂಬಂಧಿತ ತರಬೇತಿಗೆ ಅವಕಾಶ. ಇಂದಿರಾ ಕ್ಯಾಂಟೀನ್ ತೆರೆಯಲು, ದಿನಪತ್ರಿಕೆ, ದೃಶ್ಯಮಾಧ್ಯಮಗಳ ಸೇವೆಗಳಿಗೆ ಹಾಗೂ ಎಲ್ಲಾ ರೀತಿಯ ಸರಕುಗಳ ಸಾಗಾಣಿಕೆಗೆ ಮತ್ತು ಖಾಲಿ ವಾಹನಗಳಿಗೆ ಅನುಮತಿಸಲಾಗಿದೆ. ವಿಶೇಷವಾಗಿ ಅಮ್ಲಜನಕ ತರುವ ವಾಹನಗಳನ್ನು ತಡೆರಹಿತ ಸಾಗಾಟವನ್ನು ಅನುಮತಿಸಲಾಗಿದೆ.

ನಿರ್ಗತಿಕರ ಕೇಂದ್ರ, ವೃದ್ದಾಶ್ರಮ, ಬಾಲಮಂದಿರ, ಬಾಲಾಶ್ರಮ, ಅನಾಥಶ್ರಮ ಇವುಗಳಿಗೆ ಅನುಮತಿಸಲಾಗಿದೆ. ಅಂತರ ರಾಜ್ಯ ಮತ್ತು ಅಂತರ ಜಿಲ್ಲಾ ವ್ಯಕ್ತಿಗಳ ಸಂಚಾರವನ್ನು ಮೇ.7ರ ಸರ್ಕಾರದ ಆದೇಶದಂತೆ ಅನುಮತಿಸಲಾಗಿದೆ.

ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದ ಹಾಪ್-ಕಾಮ್ಸ್ ಮೂಲಕ ಮಾತ್ರ ಸಾರ್ವಜನಿಕರಿಗೆ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ಮಾರಾಟ ಮಾಡಲು ಅನುಮತಿಸಿದೆ. ಹಾಪ್-ಕಾಮ್ಸ್ ಲಭ್ಯವಿಲ್ಲದಿರುವ ಪ್ರದೇಶಗಳಲ್ಲಿ ಆಯುಕ್ತರು, ಮಹಾನಗರಪಾಲಿಕೆ ಮತ್ತು ಸಂಬಂಧಪಟ್ಟ ತಹಶೀಲ್ದಾರರು ಸ್ಥಳೀಯವಾಗಿ ಸೀಮಿತ ಸಂಖ್ಯೆಯಲ್ಲಿ ತಳ್ಳುವ ಗಾಡಿಯ ಮೂಲಕ ಮನೆ ಬಾಗಿಲಿಗೆ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ಮಾರಾಟ ವ್ಯವಸ್ಥೆ ಮಾಡಲು ಅನುಮತಿಸಿದೆ.

ಅಡುಗೆ ಅನಿಲ ಕಾರ್ಯನಿರ್ವಹಣೆಯನ್ನು ಮನೆ ಬಾಗಿಲಿಗೆ ತಲುಪಿಸುವ ಷರತ್ತಿಗೊಳಪಟ್ಟು ಕಾರ್ಯನಿರ್ವಹಣೆಯನ್ನು ಅನುಮತಿಸಲಾಗಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ಸಗಟು ಮಾರಾಟಗಾರರು ತರಕಾರಿ ಹಾಗೂ ಹಣ್ಣುಗಳನ್ನು ಖರೀದಿಸಲು ಹಾಗೂ ಬೇರೆಡೆ ಸಾಗಿಸಲು ಯಾವುದೇ ನಿರ್ಬಂಧನವಿರುವುದಿಲ್ಲ. ಇ-ಕಾಮರ್ಸ್, ಹೋಮ್ ಡೆಲಿವರಿ ಸೇವೆಗಳ ಮುಖಾಂತರ ಎಲ್ಲಾ ವಸ್ತುಗಳನ್ನು ಮನೆಗೆ ಸರಬರಾಜು ಮಾಡಲು ಅನುಮತಿಸಲಾಗಿದೆ.

ಎಲ್ಲಾ ವಿಧದ ಉತ್ಪಾದಿತ ಘಟಕಗಳು ಸಂಸ್ಥೆಗಳು, ಕೈಗಾರಿಕೆಗಳು, ಕೋವಿಡ್ ನಿಯಮವಾಳಿಯ ಮೇಲೆ ಶೇ.50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಬಹುದು. ಹಾಗೂ ಗಾರ್ಮೆಟ್ಸ್ ಗಳಲ್ಲಿ ಶೇ.30ರ ಸಿಬ್ಬಂದಿಯೊಂದಿಗೆ ಕೋವಿಡ್ ಕ್ರಮವನ್ನು ಅನುಸರಿಸಿ ಕಾರ್ಯನಿರ್ವಹಿಸಬಹುದಾಗಿದೆ. ವಿನಾಯತಿ ನೀಡಿರುವ ಅಗತ್ಯ ಚಟುವಟಿಕೆಗಳಲ್ಲಿ ಕೋವಿಡ್-19ರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕೆಂದು ತಿಳಿಸಿದರು.

ಈ ಮೇಲೆ ತಿಳಿಸಿದ ಮಾರ್ಗಸೂಚಿ ಅಥವಾ ನಿಬಂಧನೆಗಳನ್ನು ಉಲ್ಲಂಘಿಸಿದ ಪಕ್ಷದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಜಿಲ್ಲೆಯಲ್ಲಿ ಪಾಸಿಟಿವಿಟಿ ಮತ್ತು ಡೆತ್ ರೇಟ್ ಜಾಸ್ತಿ ಇದ್ದು, ಇದನ್ನು ಕಡಿಮೆಗೊಳಿಸಲು ಜಿಲ್ಲಾಡಳಿತ ಕಾರ್ಯನ್ಮೂಖವಾಗಿದ್ದು, ಈ ಕಾರ್ಯಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಣಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಡಿಹೆಚ್‍ಓ ಡಾ.ನಾಗರಾಜ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.

ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.

ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.

ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)

ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.

ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.

ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.

ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.

ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್‌, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್‌ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು.

ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್ ನ ಆರೈಕೆ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದರು. ಸಂದರ್ಶನದ ವೇಳೆ ವೃದ್ಧರ ಸಮಸ್ಯೆಗಳನ್ನು ಆಲಿಸಿದ ಕೆಲ ವಿದ್ಯಾರ್ಥಿಗಳು ಭಾವುಕರಾದರು.

ಈ ಸಂದರ್ಭದಲ್ಲಿ ವಿಭಾಗದ ಅಧ್ಯಾಪಕರುಗಳಾದ ಡಾ. ಶಿವಣ್ಣ ಹೆಚ್. ಎಸ್, ಡಾ. ಸುರೇಶ್ ಹೆಚ್. ಎನ್, ಡಾ. ಮಾದನಾಯ್ಕ ಹೆಚ್ ಇವರು ಮಾರ್ಗದರ್ಶನ ನೀಡಿದ್ದು, ಪ್ರಾಂಶುಪಾಲರಾದ ಬಸವರಾಜ್ ಬಿ ತಹಸೀಲ್ದಾರ್ ಮತ್ತು ಆಶ್ರಮದ ಅರ್ಜುನ್, ವಿರೇಶ್ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.

ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.

ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.

ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.

ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.

ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending