Connect with us

ದಿನದ ಸುದ್ದಿ

ದಾವಣಗೆರೆ | ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕಠಿಣ ಕ್ರಮ ; ಮೇ. 21 ರಿಂದ 24 ರವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್‍ಡೌನ್ : ಸಚಿವ ಭೈರತಿ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ತಾಲ್ಲೂಕು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸಾಂಕ್ರಾಮಿಕ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದಿನೇ ದಿನೇ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ರೋಗ ಹರಡುವಿಕೆಯ ಸರಪಳಿಯನ್ನು ತುಂಡರಿಸಲು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೆಲವು ನಿಬಂಧನೆಗಳನ್ನು ಒಳಪಡಿಸಿ, ಮೇ. 21 ರಂದು ಬೆಳಿಗ್ಗೆ 10 ಗಂಟೆಯಿಂದ ಮೇ. 24 ರಂದು ಬೆಳಿಗ್ಗೆ 06 ಗಂಟೆಯವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್‍ಡೌನ್ ಜಾರಿಗೊಳಿಸಲಾಗಿದೆ.

ಮುಂದೆ ಸಂಭವಿಸಬಹುದಾದ ಅನಾಹುತವನ್ನು ತಡೆಗಟ್ಟುವ ಸಲುವಾಗಿ ಸಂಪೂರ್ಣ ಲಾಕ್‍ಡೌನ್‍ಗೆ ಸಾರ್ವಜನಿಕರು ಸಹಕರಿಸುವಂತೆ ಕೈಮುಗಿದು ಮನವಿ ಮಾಡಿಕೊಳ್ಳುತ್ತೇನೆ ಎಂದು ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್ ಹೇಳಿದರು.

ಜಿಲ್ಲೆಯಲ್ಲಿ ಮೇ. 21 ರಿಂದ ಮೂರು ದಿನಗಳ ಕಾಲ ಸಂಪೂರ್ಣ ಲಾಕ್‍ಡೌನ್ ಜಾರಿಗೊಳಿಸುವ ಕುರಿತಂತೆ ವಿವರಗಳನ್ನು ನೀಡಲು ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಇತ್ತೀಚೆಗೆ ನಡೆಸಿದ ಪ್ರಗತಿ ಪರಿಶೀಲಾ ಸಭೆಯಲ್ಲಿ ಪ್ರಸ್ತುತ ಕೋವಿಡ್-19 ಪರಿಸ್ಥಿತಿಯನ್ನು ಪರಿಗಣಿಸಿ ಪುನರಾವಲೋಕನ ಮಾಡಲಾಗಿತ್ತು. ಹೀಗಾಗಿ ಜಿಲ್ಲೆಯಲ್ಲಿ ಕೋವಿಡ್ ಸಾಂಕ್ರ್ರಾಮಿಕ ರೋಗ ತಡೆಗಟ್ಟಲು ಹೆಚ್ಚುವರಿಯಾಗಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಅತ್ಯವಶ್ಯಕವಾಗಿದೆ ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ.

ಕಳೆದ ಮೇ. 12 ರಿಂದ 24 ರವರೆಗೆ ಕಠಿಣ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಿತ್ತು. ಆದರೆ ಪ್ರಕರಣಗಳ ಸಂಖ್ಯೆ ಏರುತ್ತಲೆ ಇದೆ. ಹೀಗಾಗಿ ರೋಗ ಹರಡುವಿಕೆಯ ಸರಪಳಿಯನ್ನು ತುಂಡರಿಸಲು ಇನ್ನಷ್ಟು ಕಠಿಣ ಕ್ರಮ ಜರುಗಿಸುವುದು ಅನಿವಾರ್ಯವಾದ ಕಾರಣ ಮೂರು ದಿನ ಸಂಪೂರ್ಣ ಲಾಕ್‍ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ.

ಮೇ. 24 ರ ಬಳಿಕ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮುಖ್ಯಮಂತ್ರಿಗಳೇ ನಿರ್ಧಾರ ಕೈಗೊಳ್ಳಲಿದ್ದಾರೆ. ಸಾರ್ವಜನಿಕರು ಮುಂದೆ ಸಂಭವಿಸಬಹುದಾದ ಅನಾಹುತವನ್ನು ತಡೆಗಟ್ಟಲು ಮೂರು ದಿನಗಳ ಕಾಲ ಜಾರಿಗೊಳಿಸಿರುವ ಸಂಪೂರ್ಣ ಲಾಕ್‍ಡೌನ್‍ಗೆ ಸಹಕರಿಸಲು ಸಾರ್ವಜನಿಕರಲ್ಲಿ ಕೈಮುಗಿದು ಬೇಡಿಕೊಳ್ಳುತ್ತೇನೆ ಎಂದರು.

ಸಂಪೂರ್ಣ ಲಾಕ್‍ಡೌನ್ ನಿಬಂಧನೆಗಳು

ಜಿಲ್ಲೆಯಾದ್ಯಂತ ಮೇ. 21 ರಿಂದ ಮೇ. 24 ರವರೆಗೆ ಸಂಪೂರ್ಣ ಲಾಕ್‍ಡೌನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಆದೇಶ ಹೊರಡಿಸಿದ್ದಾರೆ. ಈ ಆದೇಶದ ಅನ್ವಯ, ಎಲ್ಲಾ ಅಂಗಡಿ ಮುಂಗಟ್ಟುಗಳು/ವಾಣಿಜ್ಯ/ಕೈಗಾರಿಕಾ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಅಗತ್ಯ ಚಟುವಟಿಕೆಗಳಿಗೆ ವಾಹನಗಳಲ್ಲಿ ಸಂಚರಿಸುವುದನ್ನು ನಿರ್ಬಂಧಿಸಿ, ನಡೆದುಕೊಂಡು ಹೊಗಲು ಮಾತ್ರ ಅವಕಾಶ ನೀಡಲಾಗಿದೆ.

ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ. ಮದುವೆ ಸಮಾರಂಭಕ್ಕೆ ಈಗಾಗಲೇ ನೀಡಲಾಗಿರುವ ಅನುಮತಿ ಪ್ರಕರಣಗಳಲ್ಲಿ ಕೇವಲ 10 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಮದುವೆಗಳಲ್ಲಿ ಸಾರ್ವಜನಿಕರಿಗೆ ಊಟದ ವ್ಯವಸ್ಥೆಯನ್ನು ನಿರ್ಬಂಧಿಸಲಾಗಿದೆ. ಉಳಿದ ಎಲ್ಲಾ ಸಾಮಾಜಿಕ, ಧಾರ್ಮಿಕ ಸಭೆ ಸಮಾರಂಭಗಳನ್ನು ಮೇ. 24 ರ ಬೆಳಿಗ್ಗೆ 6.00 ಗಂಟೆಯವರೆಗೆ ನಿರ್ಬಂಧಿಸಲಾಗಿದೆ.

ಅಂತ್ಯಸಂಸ್ಕಾರ/ಶವ ಸಂಸ್ಕಾರಗಳಲ್ಲಿ ಗರಿಷ್ಟ 5 ಜನರಿಗೆ ಮಾತ್ರ ಭಾಗವಹಿಸಲು ಅನುಮತಿಸಿದೆ. ದಾವಣಗೆರೆ ಜಿಲ್ಲೆಗೆ ಆಗಮಿಸುವವರನ್ನು ಪ್ರತೀ ಚೆಕ್ ಪೋಸ್ಟ್‍ಗಳಲ್ಲಿ ವಿಚಾರಣೆ ನಡೆಸಿ, ದಾವಣಗೆರೆ ಜಿಲ್ಲೆಯಲ್ಲಿ ವಾಸ್ತವ್ಯ ಹೂಡುವುದಾದಲ್ಲಿ ಎಲ್ಲಿ ತಂಗುತ್ತಾರೆ ಎಂಬ ಬಗ್ಗೆ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆನ್ನು ಪಡೆದುಕೊಳ್ಳಲಾಗುವುದು ಹಾಗೂ ಹೊರ ಜಿಲ್ಲೆಯಿಂದ ಆಗಮಿಸುವವರು ಕಡ್ಡಾಯವಾಗಿ 14 ದಿನಗಳ ಕಾಲ ಹೋಂ ಕ್ವಾರಂಟೈನ್‍ನಲ್ಲಿ ಇರಬೇಕು.

ವಾಹನ ಬಳಕೆಯನ್ನು ತುರ್ತು ವೈದ್ಯಕೀಯ ಸೇವೆಗಳಿಗೆ ಮಾತ್ರ ಬಳಸಬಹುದು, ವೈದ್ಯಕೀಯ ದಾಖಲೆಗಳನ್ನು ಚೆಕ್ ಪೋಸ್ಟ್‍ಗಳಲ್ಲಿ ತೋರಿಸಬೇಕು. ಇತರೆ ಎಲ್ಲಾ ಖಾಸಗಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ವೈದ್ಯಕೀಯ ಹಾಗೂ ತುರ್ತು ಸೇವೆಗಳ ಎಲ್ಲಾ ಅಧಿಕಾರಿಗಳು/ಸಿಬ್ಬಂದಿಗಳ ಕರ್ತವ್ಯ ನಿಮಿತ್ತ ಓಡಾಟಕ್ಕೆ ಯಾವುದೆ ನಿರ್ಬಂಧವಿರುವುದಿಲ್ಲ. ಆದರೆ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ತಪಾಸಣಾ ಸಿಬ್ಬಂದಿಗಳಿಗೆ ತೋರಿಸಬೇಕು.

ಕ್ಲಿನಿಕ್, ಆಸ್ಪತ್ರೆ, ಲಸಿಕೆ ಹಾಗೂ ಪರೀಕ್ಷೆ ಉದ್ದೇಶಗಳಿಗೆ ಕನಿಷ್ಟ ವೈದ್ಯಕೀಯ ದಾಖಲೆಗಳು, ವೈದ್ಯ ಸಲಹಾ ಚೀಟಿ, ಆಸ್ಪತ್ರೆಯಲ್ಲಿ ದಾಖಲಾದ ವಿವರಗಳ ರುಜುವಾತಿನೊಂದಿಗೆ ಸಂಚರಿಸಲು ಅನುಮತಿಸಲಾಗಿದೆ.

ಹೋಟೆಲ್, ರೆಸ್ಟೋರೆಂಟ್‍ಗಳು, ಉಪಾಹಾರ ಗೃಹಗಳು ಪಾರ್ಸಲ್ ಸೇವೆಗಳನ್ನು ಗ್ರಾಹಕರ ಮನೆ ಬಾಗಿಲಿಗೆ ವಿತರಿಸಲು ಮಾತ್ರ ಅನುಮತಿ ಇದೆ. ಯಾವುದೇ ರೀತಿಯ ಪಾರ್ಸ್‍ಲ್‍ಗಳನ್ನು ಗ್ರಾಹಕರು ನೇರವಾಗಿ ಖರೀದಿಸಲು ಅವಕಾಶವಿರುವುದಿಲ್ಲ.

ಕೋವಿಡ್-19ಕ್ಕೆ ಸಂಬಂಧಿಸಿದ ಕಾರ್ಯಕ್ಕೆ ನಿಯೋಜಿಸಿದ ಎಲ್ಲಾ ಕಛೇರಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸರ್ಕಾರದ ಆದೇಶ ಸಂಖ್ಯೆ ಆರ್‍ಡಿ/158/ಟಿಎನ್‍ಆರ್/2020 ದಿ.07.05.2021ರಂತೆ ಕಾರ್ಯನಿರ್ವಹಿಸಬೇಕು. ಆದರೆ, ಈ ಕಛೇರಿಗಳಿಗೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಲಾಗಿದೆ.

ಜಿಲ್ಲೆಯಲ್ಲಿ ಕಛೇರಿ ವೇಳೆಯನ್ನು ಮೀರಿ ತಮ್ಮ ಕರ್ತವ್ಯಗಳಿಗೆ ಹಾಜರಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಜಿಲ್ಲೆಯ ನ್ಯಾಯಾಂಗದ ಅಧಿಕಾರಿ/ಸಿಬ್ಬಂದಿಗಳು ತಮ್ಮ ಅಧಿಕೃತ ಗುರುತಿನ ಚೀಟಿಯನ್ನು ತೋರಿಸಿ ಸಂಚರಿಸುವುದಕ್ಕೆ ಅನುಮತಿಸಿದೆ.

ಸರ್ಕಾರದ ಆದೇಶದ ಪ್ರಕಾರ ಸರ್ಕಾರೇತರ ಸಂಸ್ಥೆಗಳ ಕಛೇರಿಗಳು, ಇತರೆ ಎಲ್ಲಾ ಕಛೇರಿಗಳ ಸಿಬ್ಬಂದಿಗಳು ಮನೆಯಿಂದಲೇ ಕೆಲಸ ನಿರ್ವಹಿಸಬೇಕು. ತುರ್ತು ಸೇವೆಗಳಿಗೆ ಸಂಬಂಧಪಟ್ಟ ಇಲಾಖೆಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ, ಅರೆ ಸರ್ಕಾರಿ ಮತ್ತು ಖಾಸಗಿ ಕಛೇರಿಗಳ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮನೆಯಿಂದಲೇ ಕೆಲಸ ನಿರ್ವಹಿಸಬೇಕು.

ಹಾಲು, ಡೈರಿ ಹಾಗೂ ಹಾಲಿನ ಬೂತುಗಳು ಮತ್ತು ಮೊಟ್ಟೆ ಅಂಗಡಿಗಳು ಮಾತ್ರ ಪ್ರತಿದಿನ ಬೆಳಿಗ್ಗೆ 6.00 ಗಂಟೆಯಿಂದ ಬೆ.10.00 ಗಂಟೆಯವರೆಗೆ ತೆರೆಯಲು ಅನುಮತಿಸಲಾಗಿದೆ. ಔಷಧಿ ಅಂಗಡಿಗಳು ಹಾಗೂ ಅಗತ್ಯ ಸೇವೆಗಳಾದ ಅಂಬುಲೆನ್ಸ್ ಅಗ್ನಿಶಾಮಕ ಮತ್ತು ಇತರೆ ತುರ್ತು ವೈದ್ಯಕೀಯ ಸೇವೆಗಳು, ವಿದ್ಯುತ್, ಪೆಟ್ರೋಲ್ ಪಂಪ್, ಆಮ್ಲಜನಕ ಉತ್ಪಾದನಾ ಘಟಕ, ನೀರು, ನೈರ್ಮಲ್ಯ ಸೇವೆಗಳಿಗೆ ಅನುಮತಿಸಲಾಗಿದೆ.

ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳ ಸಂಚಾರಕ್ಕೆ ಅಧಿಕೃತ ಪ್ರಯಾಣ ದಸ್ತಾವೇಜುಗಳು/ಟಿಕೆಟ್‍ಗಳನ್ನು ತೋರಿಸಿದರೆ ಮಾತ್ರ ಸಂಚರಿಸಲು ಅನುಮತಿಸಿದೆ. ಪಡಿತರ ನ್ಯಾಯಬೆಲೆ ಅಂಗಡಿಗಳು ತೆರೆಯಲು ಕೊಪನ್ ವ್ಯವಸ್ಥೆಯಿಂದ ಜನ ಗುಂಪು ಸೇರದಂತೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಷರತ್ತಿಗೊಳಪಟ್ಟು ಅನುಮತಿಸಲಾಗಿದೆ.

ಇಂದಿರಾ ಕ್ಯಾಂಟೀನ್ ತೆರೆಯಲು ಅನುಮತಿಸಲಾಗಿದೆ. ದಿನಪತ್ರಿಕೆ, ದೃಶ್ಯಮಾಧ್ಯಮಗಳ ಸೇವೆಗಳಿಗೆ ಅನುಮತಿಸಲಾಗಿದೆ. ಎಲ್ಲಾ ರೀತಿಯ ಸರಕುಗಳ ಸಾಗಾಣಿಕೆಗೆ ಮತ್ತು ಖಾಲಿ ವಾಹನಗಳಿಗೆ ಅನುಮತಿಸಲಾಗಿದೆ, ವಿಶೇಷವಾಗಿ ಅಮ್ಲಜನಕ ತರುವ ವಾಹನಗಳನ್ನು ತಡೆರಹಿತ ಸಾಗಾಟವನ್ನು ಅನುಮತಿಸಲಾಗಿದೆ.

ನಿರ್ಗತಿಕರ ಕೇಂದ್ರ, ವೃದ್ದಾಶ್ರಮ, ಬಾಲಮಂದಿರ, ಬಾಲಾಶ್ರಮ, ಅನಾಥಶ್ರಮ ಇವುಗಳಿಗೆ ಅನುಮತಿ ಇದೆ. ಅಂತರ ರಾಜ್ಯ ಮತ್ತು ಅಂತರ ಜಿಲ್ಲಾ ವ್ಯಕ್ತಿಗಳ ಸಂಚಾರವನ್ನು ಸರ್ಕಾರದ ಆದೇಶದಂತೆ ಅನುಮತಿ ಇದೆ. ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದ ಹಾಪ್-ಕಾಮ್ಸ್ ಮೂಲಕ ಮಾತ್ರ ಸಾರ್ವಜನಿಕರಿಗೆ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.

ಹಾಪ್-ಕಾಮ್ಸ್ ಲಭ್ಯವಿಲ್ಲದಿರುವ ಪ್ರದೇಶಗಳಲ್ಲಿ ಆಯುಕ್ತರು, ಮಹಾನಗರಪಾಲಿಕೆ ಮತ್ತು ಸಂಬಂಧಪಟ್ಟ ತಹಶೀಲ್ದಾರರು ಸ್ಥಳೀಯವಾಗಿ ಸೀಮಿತ ಸಂಖ್ಯೆಯಲ್ಲಿ ತಳ್ಳುವ ಗಾಡಿಯ ಮೂಲಕ ಮನೆ ಬಾಗಿಲಿಗೆ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ಮಾರಾಟ ಮಾಡಲು ಅನುಮತಿ ಕಲ್ಪಿಸಲಾಗಿದೆ.

ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು ತರಕಾರಿಗಳು, ಮಾಂಸ ಮತ್ತು ಮೀನು, ಹಾಗೂ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ. ಎಲ್ಲಾ ರೀತಿಯ ಮದ್ಯದಂಗಡಿಗಳನ್ನು ಮತ್ತು ಬಾರ್‍ಗಳನ್ನು ಈ ಅವಧಿಯಲ್ಲಿ ನಿಷೇಧಿಸಲಾಗಿರುತ್ತದೆ.

ಅಡುಗೆ ಅನಿಲ ಕಾರ್ಯನಿರ್ವಹಣೆಯನ್ನು ಮನೆ ಬಾಗಿಲಿಗೆ ತಲುಪಿಸುವ ಷರತ್ತಿಗೊಳಪಟ್ಟು ಕಾರ್ಯನಿರ್ವಹಣೆಯನ್ನು ಅನುಮತಿಸಲಾಗಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ಸಗಟು ಮಾರಾಟಗಾರರು ತರಕಾರಿ ಹಾಗೂ ಹಣ್ಣುಗಳನ್ನು ಖರೀದಿಸಲು ಹಾಗೂ ಬೇರೆಡೆ ಸಾಗಿಸಲು ಯಾವುದೇ ನಿರ್ಬಂಧ ಇರುವುದಿಲ್ಲ.

ನಿರ್ಮಾಣ ಸ್ಥಳದಲ್ಲಿಯೇ ವಾಸವಾಗಿರುವ ಕಾರ್ಮಿಕರನ್ನು ಬಳಸಿಕೊಂಡು ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿಸಲಾಗಿದೆ. ಇ-ಕಾಮರ್ಸ್/ಹೋಮ್ ಡೆಲಿವರಿ ಸೇವೆಗಳ ಮುಖಾಂತರ ಎಲ್ಲಾ ವಸ್ತುಗಳನ್ನು ಮನೆಗೆ ಸರಬರಾಜು ಮಾಡಲು ಅನುಮತಿಸಲಾಗಿದೆ.

ವಿನಾಯತಿ ನೀಡಿರುವ ಅಗತ್ಯ ಚಟುವಟಿಕೆಗಳಲ್ಲಿ ಕೋವಿಡ್-19ರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ನಿಗದಿಪಡಿಸಿದ ಮಾರ್ಗಸೂಚಿ ಅಥವಾ ನಿಬಂಧನೆಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ರ ವಿಭಾಗ 51 ರಿಂದ 60ರ ಅನ್ವಯ ಮತ್ತು ಐಪಿಸಿ ಸೆಕ್ಷನ್ 188 ರಂತೆ ಹಾಗೂ ಕರ್ನಾಟಕ ಸಾಂಕ್ರಾಮಿಕ ಕಾಯ್ದೆ, 2005ರ ವಿಭಾಗ 4, 5 ಮತ್ತು 10ರಂತೆ ಕ್ರಮ ಜರುಗಿಸಲಾಗುವುದು ಎಂದರು.

ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಶಾಸಕರುಗಳಾದ ಪ್ರೊ. ಲಿಂಗಣ್ಣ, ಎಸ್.ಎ. ರವೀಂದ್ರನಾಥ್, ಮಹಾನಗರಪಾಲಿಕೆ ಮೇಯರ್ ಎಸ್.ಟಿ. ವೀರೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಿಜಯ ಮಹಾಂತೇಶ್ ಸೇರಿದಂತೆ ವಿವಿಧ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

Published

on

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.

ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು

ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.

ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.

ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.

ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ

ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.

ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.

ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”

ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending