ದಿನದ ಸುದ್ದಿ
ದಾವಣಗೆರೆ | ರಾಜ್ಯ ಮಹಿಳಾ ನಿಲಯದಲ್ಲಿ ನವಜೀವನಕ್ಕೆ ಕಾಲಿಟ್ಟ ಮೂರು ಜೋಡಿ : ನವದಂಪತಿಗಳಿಗೆ ಹರಸಿ, ಶುಭ ಕೋರಿದ ಜಿ.ಪಂ. ಅಧ್ಯಕ್ಷೆ, ಡಿಸಿ, ಎಸ್ಪಿ, ಸಿಇಒ
ಸುದ್ದಿದಿನ,ದಾವಣಗೆರೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ದಾವಣಗೆರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಮಹಿಳಾ ನಿಲಯದಲ್ಲಿ ಚಟುವಟಿಕೆಗಳು ಎಂದಿನಂತೆ ಸಾಮಾನ್ಯವಾಗಿರದೆ, ಬುಧವಾರದಂದು ಸಂಭ್ರಮ, ಗಡಿಬಿಡಿ ಮನೆಮಾಡಿತ್ತು. ಮಂಗಳವಾದ್ಯ ಮೊಳಗುತ್ತಾ, ಅಲ್ಲೊಂದು ಶುಭ ಸಮಾರಂಭವಿರುವ ಬಗ್ಗೆ ಸಂಕೇತ ನೀಡುತ್ತಿತ್ತು.
ಹೌದು, ಅದು ಶುಭ ಸಮಾರಂಭದ ಸಂದೇಶವೇ ಸರಿ. ಜೊತೆಗೆ ವಿಶೇಷ ಕಾರ್ಯಕ್ರಮದ ಮೆರಗು ಬೇರೆ. ವಿವಿಧ ಕಾರಣಗಳಿಂದ ಶೋಷಣೆಗೆ ಒಳಗಾಗಿ ರಾಜ್ಯ ಮಹಿಳಾ ನಿಲಯದಲ್ಲಿ ಆಶ್ರಯ ಪಡೆದಿದ್ದ ಮೂವರು ಯುವತಿಯರಿಗೆ ಬದುಕು ಕಟ್ಟಿಕೊಡುವ ಶುಭ ಸಮಾರಂಭವದು. 24 ವರ್ಷದ ಮಂಜುಳಾ, 19 ವರ್ಷದ ರೇಷ್ಮಾ ಹಾಗೂ 21 ವರ್ಷದ ಕುಪ್ಪಮ್ಮ ಸೇರಿದಂತೆ ಮೂವರು ಯುವತಿಯರಿಗೆ ಸುಂದರ ಬದುಕು ಕಟ್ಟಿಕೊಡಲು ಮೂವರು ಯುವಕರು ಮುಂದಾಗಿದ್ದು ಮೂವರು ನೂತನ ವಧು ವರರ ಪಾಲಕರು, ಸ್ನೇಹಿತರು, ಬಂಧುಮಿತ್ರರು, ಅಧಿಕಾರಿ ಸಿಬ್ಬಂದಿಗಳು, ಸಾರ್ವಜನಿಕರೂ ಸೇರಿದಂತೆ ಎಲ್ಲರಲ್ಲೂ ಸಂತಸ ಮೂಡಿಸಿತ್ತು.
ಮಂಜುಳಾ ಇವರನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹೆದ್ಲಿ ಹೆನಿಯಾದ ಉಮೇಶ್ ಹೆಚ್.ಜಿ ಅವರು ಬಾಳ ಸಂಗಾತಿಯಾಗಿ ಸ್ವೀಕರಿಸಿದರೆ, ರೇಷ್ಮಾ ಅವರನ್ನು ಉತ್ತರಕನ್ನಡ ಜಿಲ್ಲೆ ಶಿರಸಿ ತಾಲ್ಲೂಕಿನ ಮುಂಡಗನಮನೆ ಗ್ರಾಮದ ನಾಗರಾಜ ಸುಬ್ರಾಯ ಹೆಗಡೆ ಅವರು ಹಾಗೂ ಕುಪ್ಪಮ್ಮ ಅವರನ್ನು ಶಿರಸಿ ತಾಲ್ಲೂಕಿನ ಶಿವಳ್ಳಿಯ ದಯಾನಂದ ಆರ್. ಭಟ್ಟ ಅವರು ಬಾಳ ಸಂಗಾತಿಯಾಗಿಸಿಕೊಂಡರು.
ವಿಶೇಷ ಕಾರ್ಯಕ್ರಮದಲ್ಲಿ ನವ ಜೀವನಕ್ಕೆ ಕಾಲಿಟ್ಟ ಉಮೇಶ್ ಹೆಚ್.ಜಿ. ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿ, ಇಂತಹ ಮಾದರಿ ಕಾರ್ಯಕ್ರಮದಲ್ಲಿ ಮದುವೆಯಾಗುತ್ತಿರುವುದು ಸಂತಸ ತಂದಿದೆ. ಗ್ರಾಮದಲ್ಲಿ ತಾನು ಪುರೋಹಿತ ವೃತ್ತಿ ಜೊತೆಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು, ತಮ್ಮ ಸಮುದಾಯದಲ್ಲಿ ಪುರೋಹಿತ ವೃತ್ತಿ, ಕೃಷಿ ಮಾಡುವವರಿಗೆ ಹೆಣ್ಣು ಕೊಡುವುದು ದುಸ್ಥರವಾಗಿದೆ. ಹೀಗಾಗಿ ಸರ್ಕಾರಿ ಯೋಜನೆಯ ಬಗ್ಗೆ ಮಾಹಿತಿ ಪಡೆದು, ನಿಯಮಾನುಸಾರ ರಾಜ್ಯ ಮಹಿಳಾ ನಿಲಯಕ್ಕೆ ಅರ್ಜಿ ಸಲ್ಲಿಸಿ, ಕುಟುಂಬದ ಒಪ್ಪಿಗೆ ಪಡೆದು, ಮದುವೆಯಾಗುತ್ತಿದ್ದೇನೆ ಎಂದರು.
ಇವರಿಗೆ ಬಾಳ ಸಂಗಾತಿಯಾದ ಮಂಜುಳಾ ಪ್ರತಿಕ್ರಿಯಸಿ, ಉಮೇಶ್ ಅವರನ್ನು ಮದುವೆಯಾಗುತ್ತಿರುವುದಕ್ಕೆ ಖುಷಿಯಾಗಿದೆ ಎಂದರು. ಇನ್ನೋರ್ವ ನವ ವರ ದಯಾನಂದ ಭಟ್ಟ ಮಾತನಾಡಿ, ತಾನು ಮಾದರಿ ಜೀವನ ಕಟ್ಟಿಕೊಳ್ಳುವ ಯತ್ನ ಮಾಡಿದ್ದು, ನಿಲಯದ ನಿವಾಸಿಯಾಗಿದ್ದ ರೇಷ್ಮ ಅವರನ್ನು ಬಾಳ ಸಂಗಾತಿಯಾಗಿ ಸ್ವೀಕರಿಸಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಮೈಸೂರು ಪೇಟಾ ಧರಿಸಿ, ಮದುವೆ ಸಮಾರಂಭದ ನೇತೃತ್ವ ವಹಿಸಿದ್ದರು. ತಾವೇ ಮುಂದೆ ನಿಂತು ನೂತನ ವಧು ವರರು ವಿವಾಹ ಜೀವನಕ್ಕೆ ಕಾಲಿರಿಸಿದ ಸಂಭ್ರಮಕ್ಕೆ ಸಾಕ್ಷಿಯಾದರು. ಅಲ್ಲದೆ ಅಕ್ಷತೆಯನ್ನು ನವ ದಂಪತಿಗಳಿಗೆ ಹಾಕಿ ಶುಭ ಹಾರೈಸಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪದ್ಮಾ ಬಸವಂತಪ್ಪ ಅವರು ಉಪಸ್ಥಿತರಿದ್ದು, ಮದುವೆ ಸಂಭ್ರಮದ ಸಂತಸ ಹಂಚಿಕೊಂಡು, ನೂತನ ದಂಪತಿಗಳಿಗೆ ಶುಭ ಕೋರಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ಅವರು ಈ ಸಂದರ್ಭದಲ್ಲಿ ಮಾಧ್ಯಮದವರಿಗೆ ಮಾಹಿತಿ ನೀಡಿ, ದಾವಣಗೆರೆಯಲ್ಲಿನ ರಾಜ್ಯ ಮಹಿಳಾ ನಿಲಯದ ಸಂಸ್ಥೆ 1977 ರಿಂದಲೂ ಕಾರ್ಯ ನಿರ್ವಹಿಸುತ್ತಿದೆ. ನಾನಾ ಕಾರಣಗಳಿಂದ ಶೋಷಣೆ, ಅತ್ಯಾಚಾರ, ದೌರ್ಜನ್ಯಕ್ಕೆ ಒಳಗಾದ, ದೈಹಿಕ ಅಥವಾ ಮಾನಸಿಕವಾಗಿ ತೊಂದರೆ ಎದುರಿಸುವ ಮಹಿಳೆಯರಿಗೆ ತಾತ್ಕಾಲಿಕವಾಗಿ ಆಶ್ರಯ ನೀಡುವುದಲ್ಲದೆ, ಅಂತಹವರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವಂತೆ ಮಾಡುವ ಕಾರ್ಯವನ್ನು ಮಹಿಳಾ ನಿಲಯ ನಿರ್ವಹಿಸುತ್ತಿದೆ.
18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ರಕ್ಷಣೆ, ಪೋಷಣೆ, ವೈದ್ಯಕೀಯ ನೆರವು, ಪುನರ್ವಸತಿ ಸೌಲಭ್ಯದ ಅವಕಾಶವಿದೆ. ಸಂಸ್ಥೆಯಲ್ಲಿ ದಾಖಲಾದ ಮಹಿಳೆಯರು ಅಥವಾ ಮಕ್ಕಳು ನ್ಯಾಯಾಲಯಗಳಿಂದ ವಿವಿಧ ಕಾನೂನುಗಳಡಿ ಇತರೆ ಪುನರ್ವಸತಿ ಅಥವಾ ಅಂತಿಮ ತೀರ್ಮಾನದವರೆಗೆ ದಾಖಲಾಗಲು ಅವಕಾಶವಿದೆ. ಸಂಸ್ಥೆಯಲ್ಲಿ ಸದ್ಯ 63 ನಿವಾಸಿಗಳು, 06 ಮಕ್ಕಳು ಆಶ್ರಯ ಪಡೆದಿದ್ದಾರೆ. ಇಂದಿನವರೆಗೆ 39 ವಿವಾಹಗಳು, 07 ನಾಮಕರಣಗಳನ್ನು ಸಂಸ್ಥೆಯಲ್ಲಿ ನೆರವೇರಿಸಲಾಗಿದೆ. ಈ ಹಿಂದೆ ಸಂಸ್ಥೆಯಲ್ಲಿ ವಿವಾಹವಾದ ಮಹಿಳೆಯರು ತಮ್ಮ ಸುಖ ಜೀವನ ನಡೆಸುತ್ತಿದ್ದಾರೆ ಎಂದರು.
ರಾಜ್ಯ ಮಹಿಳಾ ನಿಲಯದ ಅಧೀಕ್ಷಕಿ ಸುಜಾತಾ ಅಲ್ಲದೆ ನಿಲಯದ ಸಿಬ್ಬಂದಿಗಳು ವಿಶೇಷ ಮದುವೆ ಸಮಾರಂಭವನ್ನು ಅಚ್ಚುಕಟ್ಟಾಗಿ ನೆರವೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು