ದಿನದ ಸುದ್ದಿ
ದಾವಣಗೆರೆಯಲ್ಲಿ ಹೊಸ ಕೆರೆಗಳ ನಿರ್ಮಾಣ : ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ
ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ ಎಲ್ಲಾ ಕೆರೆಗಳು ಸೇರಿ 595 ಕೆರೆಗಳಿದ್ದು ಇನ್ನೂ ಹೊಸದಾಗಿ ಕೆರೆಗಳ ನಿರ್ಮಾಣ ಮಾಡುವ ಮೂಲಕ ಮಳೆಗಾಲದಲ್ಲಿ ನೀರು ನಿಲ್ಲಿಸಿ, ಇಂಗಿಸುವ ಕೆಲಸ ಮಾಡಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ ತಿಳಿಸಿದರು.
ನೆಲ, ಜಲ ಹಾಗೂ ಪರಿಸರ ಸಂರಕ್ಷಣಾ ಆಂದೋಲನಾ ಸಮಿತಿ ಸದಸ್ಯರು ಹಾಗೂ ರೈತ ಮುಖಂಡರು ಮತ್ತು ವಿವಿಧ ಇಲಾಖೆ ಅಧಿಕಾರಿಗಳು, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಧಿಕಾರಿಗಳೊಂದಿಗೆ ನೆಲ, ಜಲ, ಪರಿಸರ ಸಂರಕ್ಷಣೆ ಕುರಿತು ಏರ್ಪಡಿಸಲಾದ ಸಭೆಯಲ್ಲಿ ಇಲಾಖಾವಾರು ಜಲಸಂರಕ್ಷಣಾ, ಅರಣ್ಯೀಕರಣ ಕಾಮಗಾರಿಗಳ ಪರಿಶೀಲನೆ ನಡೆಸಿ ಅವರು ಬುಧವಾರ ಮಾತನಾಡಿದರು.
ಪ್ರಾದೇಶಿಕ ಅರಣ್ಯ ಇಲಾಖೆಯಲ್ಲಿ 36 ಕೆರೆಗಳಿದ್ದು ಇವುಗಳಲ್ಲಿನ ಹೂಳನ್ನು ತೆಗೆಯುವ ಮೂಲಕ ಮಳೆಗಾಲದಲ್ಲಿ ಹೆಚ್ಚು ನೀರು ನಿಲ್ಲುವಂತೆ ಮಾಡುವ ಮೂಲಕ ಪ್ರಾಣಿ, ಪಕ್ಷಿಗಳಿಗೆ ಕುಡಿಯುವ ನೀರು ಜೊತೆಗೆ ಅಂತರ್ಜಲ ಹೆಚ್ಚಳಕ್ಕೆ ಅನುಕೂಲವಾಗಲಿದ್ದು ಇದಕ್ಕಾಗಿ ಕ್ರಿಯಾ ಯೋಜನೆ ರೂಪಿಸಲು ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ತಿಳಿಸಿ ಗ್ರಾಮಗಳ ಸಮೀಪ, ಕಂದಾಯ ಭೂಮಿ ಅಂಚಿನಲ್ಲಿ ಅರಣ್ಯ ಇಲಾಖೆ ಕೆರೆಗಳಿದ್ದಲ್ಲಿ ಹೂಳೆತ್ತುವಾಗ ಅಲ್ಲಿನ ಮಣ್ಣನ್ನು ರೈತರ ಹೊಲ, ತೋಟಗಳಿಗೆ ತೆಗೆದುಕೊಂಡು ಹೋಗಲು ಅವಕಾಶ ಕಲ್ಪಿಸಲಾಗುತ್ತದೆ.
ಈಗಿರುವ ಕೆರೆಗಳ ಜೊತೆಗೆ ಹೊಸದಾಗಿ ಕೆರೆಗಳ ನಿರ್ಮಾಣ ಮಾಡಲು ಜಲಸಂಪನ್ಮೂಲ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಅರಣ್ಯ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆ, ನಗರಾಭಿವೃದ್ದಿ ಪ್ರಾಧಿಕಾರದಿಂದ ಯೋಜನೆ ತಯಾರಿಸಬೇಕು. 10 ಎಕರೆಗಿಂತ ಹೆಚ್ಚು ಭೂ ಪರಿವರ್ತನೆಯಾಗಿ ನಿವೇಶನಗಳನ್ನು ನಿರ್ಮಾಣ ಮಾಡುವ ಬಡಾವಣೆಗಳಲ್ಲಿ ಲಭ್ಯವಾಗುವ ಸಿಎ ಸೈಟ್ಗಳಲ್ಲಿ ಸಣ್ಣ ಸಣ್ಣ ಕೆರೆಗಳ ನಿರ್ಮಾಣ ಮಾಡಬೇಕು.
ಜಲಾನಯನ ಅಭಿವೃದ್ದಿ : ಮಳೆಗಾಲದಲ್ಲಿ ಜಲಾನಯನ ಅಭಿವೃದ್ದಿ ಮಾಡಲು ನೀರನ್ನು ನಿಲ್ಲಿಸಿ, ಇಂಗಿಸಿ ಅಂತರ್ಜಲ ಹೆಚ್ಚಳ ಮಾಡಲು ಗೋಕಟ್ಟೆ, ಪಿಕಪ್, ನಿರ್ಮಾಣ ಮಾಡಬೇಕು ಮತ್ತು ಕೃಷಿ ಹೊಂಡಗಳ ನಿರ್ಮಾಣ, ಬದು ನಿರ್ಮಾಣ ಮಾಡಬೇಕು.
ಸುದ್ದಿದಿನ.ಕಾಂ|ವಾಟ್ಸಾಪ್|9980346243