ದಿನದ ಸುದ್ದಿ
ದಾವಣಗೆರೆ | ಪ್ರತಿ ತಾಲೂಕಿನಲ್ಲಿ ಗೋಶಾಲೆ ತೆರೆಯಿರಿ : ಎಸ್.ಆರ್. ಉಮಾಶಂಕರ್
ಸುದ್ದಿದಿನ,ದಾವಣಗೆರೆ : ಬರಪೀಡಿತ ತಾಲೂಕುಗಳೆಂದು ಗುರುತಿಸಿರುವ ಎಲ್ಲಾ ತಾಲೂಕುಗಳಲ್ಲಿ ಗೋಶಾಲೆ ತೆರೆಯಲು ಹೈಕೋರ್ಟ್ ಆದೇಶಿಸಿದ್ದು, ಅದರಂತೆ ಜಿಲ್ಲೆಯ ಜಗಳೂರು ತಾಲೂಕು ಹೊರತುಪಡಿಸಿ ಉಳಿದ ಎಲ್ಲಾ ತಾಲೂಕುಗಳಲ್ಲಿ ಸೂಕ್ತ ಸ್ಥಳಗಳನ್ನು ಗುರುತಿಸಿ ಒಂದೊಂದು ಗೋಶಾಲೆ ತೆರೆಯುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಜಿಲ್ಲಾಡಳಿತ ಕಚೇರಿಯಲ್ಲಿ ಆಯೋಜಿಸಿಲಾಗಿದ್ದ ಬರ ನಿರ್ವಹಣೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಗಳೂರು ತಾಲ್ಲೂಕಿನಲ್ಲಿ ಈಗಾಗಲೇ ಗೋಶಾಲೆ ತೆರೆಯಲಾಗಿದೆ. ಜಿಲ್ಲೆಯಲ್ಲಿ ವಾಡಿಕೆಯಷ್ಟು ಮಳೆಯಾಗದೆ, ಇತರೆ ತಾಲೂಕಗಳಲ್ಲಿ ಮೇವಿನ ಕೊರತೆಯಾಗಿರಬಹುದು. ಅಧಿಕಾರಿಗಳು ನೇರವಾಗಿ ಗ್ರಾಮಗಳಿಗೆ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿ ಮೇವಿನ ಕೊರೆತಯ ಬಗ್ಗೆ ಮಾಹಿತಿ ಪಡೆದು ಮೇವು ಒದಗಿಸುವ ಕಾರ್ಯ ಮಾಡಬೇಕು ಎಂದರು.
ಹೈಕೋರ್ಟ್ ಆದೇಶದಂತೆ ಜಿಲ್ಲೆಯ ಉಳಿದ ಎಲ್ಲಾ ತಾಲೂಕುಗಳಲ್ಲಿ ಗೋಶಾಲೆಗಳನ್ನು ತೆರೆದು, ಎರಡು ಲೋಡ್ಗಳಷ್ಟು ಮೇವು ಸ್ಟಾಕ್ ಮಾಡಬೇಕು. ಎರಡು ವಾರಗಳ ಕಾಲ ಕಾಯಿರಿ. ರೈತರು ಗೋಶಾಲೆಗೆ ಬಂದು ಮೇವು ತೆಗೆದುಕೊಂಡು ಹೋದರೆ ಸರಿ ಇಲ್ಲವಾದಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ. ಗೋಶಾಲೆ ಅವಶ್ಯಕತೆ ಇಲ್ಲದಿದ್ದಲ್ಲಿ ಮುಚ್ಚುವ ಕೆಲಸ ಮಾಡಬೇಕು ಎಂದರು.
ಜಗಳೂರು ತಾಲೂಕಿನ ತಹಶೀಲ್ದಾರ್ ತಿಮ್ಮಣ್ಣ ಮಾತನಾಡಿ, ತಾಲೂಕಿನಲ್ಲಿ ಮೇವಿನ ಕೊರತೆ ಹೆಚ್ಚಿರುವ ಮೂರು ಪ್ರದೇಶಗಳಲ್ಲಿ ಗೋಶಾಲೆ ತೆರೆಯಲಾಗಿದೆ. ಇನ್ನುಳಿದ ಎರಡು ಕಡೆಗಳಲ್ಲಿ ಮೇವಿನಬ್ಯಾಂಕ್ ತೆರೆದು ಮೇವಿನ ಕೊರತೆಯನ್ನು ನೀಗಿಸಲಾಗುತ್ತಿದೆ. ಬಳ್ಳಾರಿ, ಕೊಪ್ಪಳ, ರಾಯದುರ್ಗ ಪ್ರದೇಶಗಳಿಂದ ಸಜ್ಜೆ, ಮೆಕ್ಕೆಜೋಳ ಸಪ್ಪೆಯ ಹಸಿ ಮೇವನ್ನು ಪೂರೈಸಲಾಗುತ್ತಿದೆ. ತಾಲೂಕಿನಲ್ಲಿ ಮುಂದಿನ 08 ವಾರಗಳಿಗೆ ಆಗುವಷ್ಟು ಮೇವಿದ್ದು, ಮಳೆ ಬಂದು ಅಲ್ಲಲ್ಲಿ ಮೇವು ಚಿಗುರುತ್ತಿರುವ ಪರಿಣಾಮ ಮುಂದಿನ ದಿನಗಳಲ್ಲಿ ಮೇವಿನ ಕೊರತೆ ಆಗುವ ಸಂಭವವಿಲ್ಲ ಎಂದರು.
ಅಗತ್ಯವಿದ್ದರೆ ಜಗಳೂರು ತಾಲೂಕಿನಲ್ಲಿ ಇನ್ನೊಂದು ಮೇವಿನ ಬ್ಯಾಂಕ್ ತೆರೆದು ರೈತರಿಗೆ ಮೇವು ನೀಡಿ. ಅನುದಾನಕ್ಕಂತೂ ಕೊರತೆಯಿಲ್ಲ. ಎಲ್ಲಾ ತಾಲೂಕುಗಳಲ್ಲಿ ಗೋಶಾಲೆ ತೆರಯಲು ಕೂಡಲೇ ಅನುದಾನ ಬಿಡುಗಡೆ ಮಾಡಲಾಗುವುದು. ಮುಂಜಾಗ್ರತ ಕ್ರಮವಾಗಿ ಒಂದು ಅಥವಾ ಎರಡು ಟನ್ಗಳಷ್ಟು ಮೇವು ಸಂಗ್ರಹಿಸಿ ಎರಡು ಸಿಬ್ಬಂದಿಗಳನ್ನು ನಿಯೋಜಿಸಿ ರೈತರು ಬಂದರೆ ಮೇವು ನೀಡಿ. ರೈತರು ಬಾರದಿದ್ದಲ್ಲಿ ಜಿಲ್ಲಾಡಳಿತ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ತಿಳಿಸಿದರು.
ಪ್ರತಿ ತಾಲೂಕಿನ ಇಓ ಮತ್ತು ತಹಶೀಲ್ದಾರ್ಗಳು ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಮೇವಿನ ಕೊರೆತೆ-ಲಭ್ಯತೆ ಕುರಿತು ಪರಿಶೀಲಿಸಿ. ಮೇವು ಬೇಕು ಎನ್ನುವ ರೈತರ ಹೆಸರು ನೊಂದಾಯಿಸಿಕೊಂಡು ಮೊಬೈಲ್ಬ್ಯಾಂಕ್ ಮೂಲಕ ಮೇವು ಒದಗಿಸಿ. ಅಲ್ಲದೇ ಅಲ್ಲಿಯ ರೈತರೊಂದಿಗೆ ಮಿನಿಕಿಟ್ನ ಮಾಹಿತಿ ನೀಡಿ, ಮಿನಿಕಿಟ್ಗಳನ್ನು ವಿತರಿಸಿ. ಮುಂದಿನ ದಿನಗಳಲ್ಲಿ ಅಲ್ಲಿನ ರೈತರಿಂದಲೇ ಮೇವು ಖರೀದಿಸುವ ವ್ಯವಸ್ಥೆ ಮಾಡಿಕೊಳ್ಳಿ. ಇದರಿಂದ ಹಣವು ಉಳಿತಾಯವಾಗಲಿದೆ ಎಂದು ಉಮಾಶಂಕರ್ ಸಲಹೆ ನೀಡಿದರು.
ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಬಿ ಮುದುಗಲ್ ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಯ ಮಳೆಗಿಂತ ಶೇ.34 ರಷ್ಟು ಮಳೆ ಕಡಿಮೆಯಾಗಿದೆ. ಜಿಲ್ಲೆಯಾದ್ಯಂತ ನೀರಾವರಿ ಪ್ರದೇಶದಲ್ಲಿ ಶೇ.5 ಹಾಗೂ ಬೆದ್ದಲು ಪ್ರದೇಶದಲ್ಲಿ ಶೇ.86 ರಷ್ಟು ಬಿತ್ತನೆಯಾಗಿದೆ. ಕಳೆದ ಬಾರಿಗಿಂತ ಈ ಬಾರಿಯು ಮುಸುಕಿನ ಜೋಳ ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆಯಾಗಿದೆ ನಂತರ ಭತ್ತ, ತೋಟಗಾರಿಕೆಯಲ್ಲಿ ತೆಂಗು ಮತ್ತು ಅಡಿಕೆ ಹೆಚ್ಚಿನ ಬಿತ್ತನೆಯಾಗಿದೆ. ಎಂದು ಸಭೆಯಲ್ಲಿ ಮಾಹಿತಿ ನೀಡಿದರು.
ಬೆಳೆವಿಮೆ ಯೋಜನೆಯಡಿ ಈ ಬಾರಿ ಜಿಲ್ಲೆಯಲ್ಲಿ 28 ಸಾವಿರ ರೈತರು ನೊಂದಾಯಿಸಿದ್ದಾರೆ. ಹಿಂದಿನ ವರ್ಷಗಳ ಬೆಳೆವಿಮೆಯ ಮಾಹಿತಿ ಹಾಗೂ ಬಾಕಿ ಹಣದ ಮಾಹಿತಿ ಮತ್ತು ಕಿಸಾನ್ ಸಮ್ಮಾನ್ ಯೋಜನೆ ಕುರಿತು ಮಾಹಿತಿಯನ್ನು ಸಭೆಯಲ್ಲಿ ತಿಳಿಸಿದರು.
ನಗರ ಪ್ರದೇಶಗಳ ಕುಡಿಯುವ ನೀರು ಸರಬರಾಜು ಕುರಿತು ಮಾಹಿತಿ ನೀಡಿದ ಡಿ.ಯು.ಡಿ.ಸಿಯ ಯೋಜನಾ ನಿರ್ದೇಶಕಿ ನಜ್ಮಾ, ನಗರ ಪ್ರದೇಶಗಳಲ್ಲಿ ಎಲ್ಲಿಯೂ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿಲ್ಲ. ಸದ್ಯಕ್ಕೆ ದಾವಣಗೆರೆ ನಗರದಲ್ಲಿ 41 ವಾರ್ಡ್ಗಳಿಗೆ ವಾರಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ. ಇನ್ನುಳಿದ ಪ್ರದೇಶಗಳಲ್ಲಿ 5 ದಿನಗಳಿಗೊಮ್ಮೆ ನೀರು ಪೂರೈಸಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ನೀರಿನ ಹಾಹಾಕಾರವಂತೂ ಇಲ್ಲ ಎಂದರು.
ಜಗಳೂರು ತಾಲೂಕಿನಲ್ಲಿ ಇಂದಿಗೂ 77 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕವೇ ನೀರು ಸರಬರಾಜು ಮಾಡಲಾಗುತ್ತಿದೆ. ದಾವಣಗೆರೆ ಗ್ರಾಮಾಂತರ ಪ್ರದೇಶಗಳಲ್ಲಿ ಚಾನೆಲ್ಗಳಿಗೆ ಭದ್ರಾ ಜಲಾಶಯದ ನೀರು ಬಿಡದ ಪರಿಣಾಮ 27 ಪ್ರದೇಶಗಳಲ್ಲಿ (ಅಣಜಿ, ಆನಗೋಡು, ಮಾಯಕೊಂಡ ಇತರೆ ಪ್ರದೇಶಗಳಲ್ಲಿ) ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತಿತ್ತು. ಕೆಲವು ಪ್ರದೇಶಗಳಲ್ಲಿ ಬೋರ್ವೆಲ್ ಕೊರಸಲಾಗಿದ್ದು, ನೀರು ಸಿಕ್ಕಿದ ತಕ್ಷಣ ಪೈಪ್ಲೈನ್ ಮೂಲಕ ಸರಬರಾಜು ಮಾಡುವ ವ್ಯವಸ್ಥೆ ಮಾಡಲಾಗುವುದು ಎಂದರು.
ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿದ ಬಿಲ್ ಪಾವತಿಯಾಗಿದೆ. ಕೆಲವು ಜಿ.ಪಿ.ಎಸ್ ಸರಿಯಾಗಿ ಇಲ್ಲದಿರುವ ಕಡೆ ಹಣ ಮಂಜೂರು ಮಾಡಿಲ್ಲ. ಈಗಾಗಲೇ ಜಿಲ್ಲಾಡಳಿತ ತಂಡದಿಂದ ಪರಿಶೀಲನೆ ನಡೆಸಿದ್ದು ಮತ್ತೋಮ್ಮೆ ಪುನಃ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ತಿಮ್ಮಣ್ಣ ತಿಳಿಸಿದರು.
ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಮಾಹಿತಿ ಕೇಳಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದ ಅಧಿಕಾರಿಗಳು, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಿಂಚಣಿ ಅದಾಲತ್ ನಡೆಸಿ ಸರ್ಕಾರಿ ಯೋಜನೆಗಳ ಮಾಹಿತಿ ಮತ್ತು ಸೌಲಭ್ಯವನ್ನು ಒದಗಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.
ಜಗಳೂರು ತಾಲೂಕಿನಲ್ಲಿ ಗ್ರಾಮಭೇಟಿ ಕಾರ್ಯಕ್ರಮದ ಮೂಲಕ ಅಧಿಕಾರಿಗಳ ನಡೆ ಹಳ್ಳಿಯ ಕಡೆ ಎನ್ನುವ ಮೂಲಕ ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಅವಹಾಲು ಸ್ವೀಕರಿಸಿ ಅವುಗಳಿಗೆ ಪರಿಹಾರವನ್ನು ವಾರದಲ್ಲಿಯೇ ಒದಗಿಸುವ ಪ್ರಯತ್ನ ಮಾಡಲಾಗಿತ್ತು. ಅಂದಿನ ದಿನಕ್ಕೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಉದ್ಯೋಗಕ್ಕೆ ಹೆಚ್ಚಿನ ಬೇಡಿಕೆ ಇರುವುದರಿಂದ ಹೆಚ್ಚಿನ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಲಾಯಿತು. ಮುಂದಿನ ದಿನಗಳಲ್ಲಿ ಇನ್ನುಳಿದ ತಾಲೂಕುಗಳಿಗೂ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸುವ ಚಿಂತನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಯಲ್ಲಿ ಜಲಶಕ್ತಿ ಮತ್ತು ಜಲಾಮೃತ ಕಾರ್ಯಕ್ರಮಗಳಡಿಯಲ್ಲಿ ಶಾಲೆ, ಹಾಸ್ಟೆಲ್ ಹಾಗೂ ಸಾರ್ವಜನಿಕರಿಗೆ ಹೆಚ್ಚು ಅರಿವು ಮೂಡಿಸಿ ಜಿಲ್ಲೆಯ ಹಸಿರೀಕರಣಕ್ಕೆ ಒತ್ತು ನೀಡಿ. ಜಲಾಮೃತ ಕಾರ್ಯಕ್ರಮದಡಿಯಲ್ಲಿ ಮುಂದಿನ ದಿನಗಳಲ್ಲಿ ಪ್ರತಿ ಶಾಲೆಗೆ 5000 ಅನುದಾನ ನೀಡಲಿದ್ದು, ಈ ಅನುದಾನದಲ್ಲಿ ಕಿಚನ್ಗಾರ್ಡ್ನ್ನು ನಿರ್ಮಿಸಿ ಅಲ್ಲಿನ ಮಕ್ಕಳಿಗೆ ಅನುಕೂಲವಾಗುವಂತೆ ಪಪ್ಪಾಯ, ನುಗ್ಗೆಕಾಯಿ, ಸಫೋಟ, ಮಾವು, ಹುಣಸೆ, ನೇರಳೆ ಮರಗಳನ್ನು ಬೆಳೆಯಬೇಕು. ಈ ಕುರಿತು ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಸಹಕಾರದೊಂದಿಗೆ ಕ್ರಿಯಾಯೋಜನೆ ರೂಪಿಸಿಕೊಳ್ಳಬೇಕು ಎಂದು ಡಿ.ಡಿ.ಪಿ.ಐ ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲಹೆ ನೀಡಿದರು.
ಜಿಲ್ಲೆಯಲ್ಲಿ ಹಿಂದಿನ ದಿನಗಳಲ್ಲಿ ಬರ ನಿರ್ವಹಣೆಯನ್ನು ನಿರ್ವಹಿಸಿದ ರೀತಿಯಲ್ಲೇ ಮುಂದಿನ ದಿನಗಳಲ್ಲಿ ಇನ್ನು ಉತ್ತಮವಾಗಿ ಮತ್ತು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಸಭೆಯಲಿದ್ದ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಜಿಲ್ಲಾ ಸ್ಮಾರ್ಟ್ಸಿಟಿ ಲಿಮಿಟೆಡ್ನ ವ್ಯವಸ್ಥಾಪಕ ಷರೀಫ್, ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಜಿಲ್ಲಾ ಸಂಖ್ಯಾಧಿಕಾರಿ ರಾಜೇಶ್ವರಿ ಸೇರಿದಂತೆ ವಿವಿಧ ತಾಲೂಕಿನ ತಹಶೀಲ್ದಾರ್ಗಳು ಇತರೆ ಅಧಿಕಾರಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್ಕಿಟ್ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.
ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.
ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.
ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.
ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.
ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

