ದಿನದ ಸುದ್ದಿ
ದಾವಣಗೆರೆ | ಐದು ಅಡಿಗಿಂತ ಎತ್ತರದ ಗಣಪತಿ ಮೂರ್ತಿ ಕೂರಿಸಲು ಅನುಮತಿ ಇಲ್ಲ : ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ
ಸುದ್ದಿದಿನ,ದಾವಣಗೆರೆ : ಸರ್ಕಾರದ ಆದೇಶದಂತೆ ಗರಿಷ್ಠ ಐದು ಅಡಿಗಳಿಗಿಂತ ಎತ್ತರದ ಗಣಪತಿ ಮೂರ್ತಿಗಳನ್ನು ಕೂರಿಸುವಂತಿಲ್ಲ. ಅದರಂತೆ ನಗರದಲ್ಲಿಯೂ ಸಹ ಐದು ಅಡಿಗಿಂತ ಎತ್ತರದ ಗಣಪತಿ ಮೂರ್ತಿಗಳನ್ನು ಕೂರಿಸಲು ಯಾವುದೇ ಅನುಮತಿ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ತಿಳಿಸಿದರು.
ಮಂಗಳವಾರ ಜಿಲ್ಲಾಡಳಿತ ಭವನದಲ್ಲಿ ಏರ್ಪಸಿದ್ದ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆಯಲ್ಲಿ ವಹಿಸಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಪಿಓಪಿ ಗಣಪತಿ ಅಥವಾ ಪ್ಲಾಸ್ಟಿಕ್ ಗಣೇಶ ಮೂರ್ತಿಗಳನ್ನು ಹಬ್ಬಗಳಲ್ಲಿ ಬಳಸುವಂತಿಲ್ಲ. ಪರಿಸರಕ್ಕೆ ಹಾನಿಯಾಗದಂತೆ ಪರಿಸರ ಸ್ನೇಹಿಯಾಗಿ ಹಬ್ಬ ಆಚರಿಸಬೇಕು ಎಂದರು.
ಜಿಲ್ಲೆಯಲ್ಲಿ ಹಾಗೂ ಇತರೆ ಜಿಲ್ಲೆ, ರಾಜ್ಯಗಳಿಂದ ತಯಾರಾಗಿ ಬರುವ ಪಿಓಪಿ ಗಣಪತಿ ಮೂರ್ತಿಗಳನ್ನು ಮಾರಾಟ ಮಾಡುವಂತಿಲ್ಲ. ಹಾಗೇನಾದರೂ ಕಂಡುಬಂದಲ್ಲಿ ಸೂಕ್ತ ಕ್ರಮಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದರು. ಸಾರ್ವಜನಿಕರಿಗೆ ಪಿಓಪಿ ಗಣಪಗಳ ತಯಾರಿ ಮತ್ತು ಮಾರಾಟ ಕಂಡುಬಂದಲ್ಲಿ ಪಾಲಿಕೆಗೆ ಮಾಹಿತಿ ನೀಡುವಂತೆ ತಿಳಿಸಿದರು.
ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪಿಓಪಿ ಯಿಂದ ತಯಾರಾದ ಗಣಪತಿಗಳನ್ನು ಬಳಸುವಂತಿಲ್ಲ. ಹಾಗೆ ತಯಾರಾದ ಗಣಪಗಳನ್ನು ವಶಪಡಿಸಿಕೊಂಡು ಧಾರ್ಮಿಕ ವಿಧಿ ವಿಧಾನಗಳಿಗೆ ಭಂಗವಾಗದಂತೆ ವಿಲೇವಾರಿ ಮಾಡಲಾಗುವುದು. ಪಿಓಪಿ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ ಹಾಗೂ ಸಂಸ್ಥೆಗಳ ಪರವಾನಿಗೆ ರದ್ದು ಮಾಡಲಾಗುವುದು. ಪರವಾನಿಗೆ ಇಲ್ಲದ ತಯಾರಕ ಮತ್ತು ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಹಬ್ಬದ ಸಂದರ್ಭದಲ್ಲಿ ಗಣೇಶ ಮೂರ್ತಿಗಳನ್ನು ಸಾರ್ವಜನಿಕರು ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಸ್ಥಳಗಳಲ್ಲಿಯೇ ವಿಸರ್ಜಿಸಬೇಕು. ಹಾಗೂ ವಿಸರ್ಜನೆ ಸಂದರ್ಭದಲ್ಲಿ ಹಸಿಕಸ (ಹೂ-ಹಣ್ಣು, ಬಾಳೆಕಂಬ, ಮಾವಿನ ತೋರಣ ಇತ್ಯಾದಿ) ಸಮೇತ ಮೂರ್ತಿಗಳನ್ನು ವಿಸರ್ಜನೆ ಮಾಡದೇ ಪ್ರತ್ಯೇಕವಾಗಿ ವಿಲೇವಾರಿ ಮಾಡಬೇಕು. ಪ್ಲಾಸ್ಟರ್ ಆಫ್ ಪ್ಯಾರಿಸ್ ನಿಂದ ತಯಾರಿಸಿದ ಮೂರ್ತಿಗಳು, ಬಣ್ಣ ಲೇಪಿತ ವಿಗ್ರಹಗಳು ಪರಿಸರ ಹಾಗೂ ಜಲ ಮೂಲಗಳಿಗೆ ಹಾನಿಕಾರಕವಾಗಿದ್ದು, ಇದನ್ನು ತಡೆಗಟ್ಟಲು ಸೂಕ್ತ ಕ್ರಮ ವಹಿಸಿಬೇಕು. ವಾರ್ಡ್ ಮಟ್ಟದಲ್ಲಿ ಪೊಲೀಸರ ಸಹಯೋಗದೊಂದಿಗೆ ಸಮಿತಿಗಳನ್ನು ರಚಿಸಿಕೊಂಡು ಗಣೇಶ ಮೂರ್ತಿಗಳನ್ನು ಸೂಕ್ತ ವಿಲೇವಾರಿಗೆ ಕ್ರಮ ವಹಿಸಬೇಕು. ಸಾರ್ವಜನಿಕ ಗಣಪತಿಗಳನ್ನು ವಿಲೇವಾರಿ ಮಾಡಲು ನಿರ್ದಿಷ್ಟ ಜಲ ಮೂಲಗಳನ್ನು ನಿಗದಿಪಡಿಸಿ ಈ ಬಗ್ಗೆ ಸೂಕ್ತ ಪ್ರಕಟಣೆ ಹೊರಡಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಹಬ್ಬದ ಮುಂಚಿತವಾಗಿ ಶಾಲಾ-ಕಾಲೇಜ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಈ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅರಿವು ಮೂಡಿಸಬೇಕು ಎಂದು ತಿಳಿಸಿದರು.
“ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿ, ಆರೋಗ್ಯ ಹಾಗೂ ಪರಿಸರ ಮಾಲಿನ್ಯವನ್ನು ತಡೆಯುವ ದೃಷ್ಟಿಯಿಂದ ಜಿಲ್ಲಾದ್ಯಂತ ಹೆಚ್ಚಿನ ಶಬ್ದ ಹೊರಸೂಸುವ ಎಲ್ಲಾ ಧ್ವನಿವರ್ಧಕ ಸಾಧನಗಳ ಬಳಕೆಯನ್ನು ಕರ್ನಾಟಕ ಪೊಲೀಸ್ ಅಧಿನಿಯಮ ಕಲಂ 36, ಶಬ್ದ ಮಾಲಿನ್ಯ ನಿಯಮ 2000 & ಪರಿಸರ (ರಕ್ಷಣೆ)ಕಾಯ್ದೆ 1986 ರನ್ವಯ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದಲ್ಲಿ ಡಿಜೆ ಗಳನ್ನು ಜಪ್ತಿ ಮಾಡಿ ಮಾಲೀಕರು ಹಾಗೂ ಸಂಘ ಸಂಸ್ಥೆಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು.” ಎಂದು
ಜಿಲ್ಲಾಧಿಕಾರಿ ಮಹಾಂತೇಶ್ ಜಿ ಬೀಳಗಿ ಎಚ್ಚರಿಕೆ ನೀಡಿದರು.
ಮಹಾನಗರಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ ಮಾತನಾಡಿ, ಈಗಾಗಲೇ ಪರಿಸರ ಮಾಲಿನ್ಯ ನಿಯಂತ್ರಣ ಇಲಾಖೆ ಮತ್ತು ಪಾಲಿಕೆಯಿಂದ ಬೇರೆ ಬೇರೆ ತಂಡಗಳನ್ನು ರಚಿಸಿ ಪಿಓಪಿ ವಿಗ್ರಹಗಳ ತಯಾರಿಕೆ ಮತ್ತು ಮಾರಾಟವಾಗದಂತೆ ಕ್ರಮವಹಿಸಲಾಗಿದೆ. ಮೂರ್ತಿಗಳ ವಿಸರ್ಜನೆ ವೇಳೆ ಹಸಿಕಸವನ್ನು ಹಾಕಲು ಪ್ರತ್ಯೇಕ ಟ್ರಾಕ್ಟರ್ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ ಮಾತನಾಡಿ, ಜಿಲ್ಲೆ ಹಾಗೂ ತಾಲೂಕು ಮಟ್ಟಗಳಲ್ಲಿ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಈಗಾಗಲೇ ಸಮಿತಿಗಳನ್ನು ರಚಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನಗರದಲ್ಲಿ ಬಾತಿ ಹಾಗೂ ಶಿರಮಗೊಂಡನಹಳ್ಳಿ ಹತ್ತಿರ ಮೂರ್ತಿಗಳ ವಿಸರ್ಜನೆಗೆ ಸ್ಥಳಗಳನ್ನು ನಿಗದಿಮಾಡಲಾಗಿದೆ. ಹಾಗೂ 30 ಮೊಬೈಲ್ ಟ್ಯಾಂಕರ್ಗಳ ವ್ಯವಸ್ಥೆ ಮಾಡಲಾಗಿದೆ. ಜಗಳೂರು, ಮಲೆಬೇನ್ನೂರು, ಚನ್ನಗಿರಿ, ಹರಿಹರ ಹಾಗೂ ಹೊನ್ನಾಳಿಯಲ್ಲಿ ಮೂರ್ತಿಗಳ ವಿಸರ್ಜನೆಗೆ ಸ್ಥಳ ನಿಗದಿಪಡಿಸಲಾಗಿದೆ. ಹಬ್ಬದ ಮುಂಜಾಗ್ರತ ಕ್ರಮಗಳಾಗಿ ಮಣ್ಣಿನ ಗಣೇಶ ಮೂರ್ತಿ ಪೂಜಿಸಲು, ವಿಷಕಾರಿ ರಾಸಾಯನಿಕ, ಲೋಹ, ಪ್ಲಾಸ್ಟಿಕ್ ಲೇಪಿತ ಗಣೇಶ ಮೂರ್ತಿಗಳನ್ನು ಬಳಸದಂತೆ ಸೂಚಿಸಲಾಗಿದೆ.
ಸಾರ್ವಜನಿಕರ ಬಾವಿ, ಕೆರೆ, ಹೊಳೆ ಜಲಮೂಲಗಳಲ್ಲಿ ಮೂರ್ತಿಗಳನ್ನು ವಿಸರ್ಜಿಸದೇ ಬಕೆಟ್, ಸಂಚಾರಿ ವಿಸರ್ಜನಾ ವಾಹನ ಅಥವಾ ಸೂಚಿತ ನೀರಿನ ಕಟ್ಟೆಗಳಲ್ಲಿ ಮಾತ್ರ ವಿಸರ್ಜಿಸಬೇಕು. ಹಾಗೂ ಧ್ವನಿವರ್ಧಕಗಳನ್ನು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯ ವರೆಗೆ ಮಾತ್ರ ಬಳಸುವಂತೆ ಕ್ರಮಗಳನ್ನು ವಹಿಸಲಾಗಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್, ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ ಕೋಟ್ರೆಶ್, ತಹಶೀಲ್ದಾರ್ ಸಂತೋಷ್ಕುಮಾರ್ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243