ದಿನದ ಸುದ್ದಿ
ರಕ್ತವನ್ನು ಶುದ್ಧವಾಗಿಟ್ಟುಕೊಳ್ಳಿ : ರೆಡ್ಕ್ರಾಸ್ ಕಾರ್ಯದರ್ಶಿ ಮಂಜುನಾಥ್ ಕರೆ
ಸುದ್ದಿದಿನ,ದಾವಣಗೆರೆ : ಶುದ್ಧ ರಕ್ತದಾನವು ಮತ್ತೊಬ್ಬರ ಜೀವ ಉಳಿವಿಗೆ ಕಾರಣವಾಗುತ್ತದೆ. ಆದ್ದರಿಂದ ರಕ್ತದ ಮಹತ್ವ ಅರಿತುಕೊಳ್ಳಿ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ದಾವಣಗೆರೆ ಜಿಲ್ಲಾ ಶಾಖೆಯ ಕಾರ್ಯದರ್ಶಿ ಮಂಜುನಾಥ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಅವರು ದಾವಣಗೆರೆ ರೆಡ್ ಕ್ರಾಸ್ ಸಂಸ್ಥೆ ಹಾಗೂ ದಾವಣಗೆರೆ ಹಿಮಾಲಯನ್ ಅಡ್ವೆಂಚರ್ ಅಂಡ್ ನೇಚರ್ ಅಕಾಡೆಮಿಯವರ ಸಹಯೋಗದಲ್ಲಿ ತಾಲ್ಲೂಕಿನ ಗೋಪನಾಳ್ ಗ್ರಾಮದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಹಮ್ಮಿಕೊಂಡಿದ್ದ ಉಚಿತ ರಕ್ತ ಗುಂಪು ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಅನ್ನದಾನ, ವಿದ್ಯಾದಾನದಂತೆ ರಕ್ತದಾನವೂ ಕೂಡ ಮಹಾದಾನಗಳಲ್ಲಿ ಒಂದಾಗಿದೆ. ರಕ್ತವು ಮಾನವನ ಚೈತನ್ಯಕ್ಕೆ ಅವಶ್ಯವಾದ ಅಂಗಾಂಶ. ರಕ್ತದಾನ ಮಾಡಿದರೆ ಮತ್ತೆ ಹೊಸ ಚೈತನ್ಯಯುಕ್ತ ರಕ್ತ ಉತ್ಪತ್ತಿಯಾಗುತ್ತದೆ. ಆದ್ದರಿಂದ ಭಯಪಡುವ ಅಗತ್ಯವಿಲ್ಲ. 18 ವರ್ಷ ತುಂಬಿದ ನಂತರ ವಿದ್ಯಾರ್ಥಿಗಳು ರಕ್ತದಾನ ನೀಡಲು ಮುಂದಾಗಬೇಕು ಎಂದರು. ಪ್ರಸ್ತುತ ಅತ್ಯವಶ್ಯ ಎನಿಸಿರುವ ಆಧಾರ್ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್ ನಂತೆ ರಕ್ತ ಗುಂಪಿನ ಕಾರ್ಡ್ ಸಹ ನಮ್ಮ ಬಳಿ ಇರಬೇಕಾಗಿದೆ ಎಂದು ತಿಳಿಸಿದರು.
ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಸತಿ ಶಾಲೆಯ ಪ್ರಾಚಾರ್ಯ ವಿ.ಸಿ ಅಂಜಿನಪ್ಪ ಮಾತನಾಡಿ, ಸರ್ಕಾರಿ ಶಾಲಾ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ರಕ್ತ ಗುಂಪು ಪರೀಕ್ಷೆಯನ್ನು ಉಚಿತವಾಗಿ ಆಯೋಜಿಸಿದ ಎರಡೂ ಸಂಸ್ಥೆಗಳ ಕಾರ್ಯ ಶ್ಲಾಘನೀಯ ಎಂದರಲ್ಲದೆ ಎರಡೂ ಸಂಸ್ಥೆಗಳ ಪದಾಧಿಕಾರಿಗಳಿಗೆ ಕೃತಜ್ಞತಾಪೂರ್ವಕ ವಂದನೆಗಳನ್ನು ಅರ್ಪಿಸಿದರು.
ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ್ ಅವರಿಗೆ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.ರೆಡ್ಕ್ರಾಸ್ ಸಂಸ್ಥೆಯ ಖಜಾಂಚಿ ಗೌಡ್ರು ಚನ್ನಬಸಪ್ಪ, ಅಕಾಡೆಮಿಯ ಸಂಸ್ಥಾಪಕ ಕಾರ್ಯದರ್ಶಿ ಎನ್.ಕೆ ಕೊಟ್ರೇಶ್ ವೇದಿಕೆಯಲ್ಲಿದ್ದರು.ಈ ಸಂದರ್ಭದಲ್ಲಿ ಅಕಾಡೆಮಿಯ ಸದಸ್ಯರಾದ ಅರವಿಂದ್, ಟೆಕ್ನಿಷಿಯನ್ ವಿನಯ್, ನಾಗಣ್ಣ ಸೇರಿದಂತೆ ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಜರಿದ್ದರು.ಶಿಬಿರದಲ್ಲಿ 100 ವಿದ್ಯಾರ್ಥಿಗಳ ರಕ್ತ ಗುಂಪು ಪರೀಕ್ಷೆ ಮಾಡಿ ಕಾರ್ಡ್ ನೀಡಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9986715401