ದಿನದ ಸುದ್ದಿ
ದಾವಣಗೆರೆ | ಜನಸ್ಪಂದನ ಸಭೆ ; ಸಾರ್ವಜನಿಕರಿಂದ ಅರ್ಜಿಗಳ ಮಹಾಪೂರ : ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್, ಮಿಸ್ ಮಾಡ್ದೆ ಓದಿ..!
ಸುದ್ದಿದಿನ,ದಾವಣಗೆರೆ : ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧ್ಯಕ್ಷತೆಯಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಜನಸ್ಪಂದನ ಸಭೆಯಲ್ಲಿ ಅರ್ಜಿಗಳ ಮಹಾಪೂರವೇ ಹರಿದುಬಂದಿದೆ.
ಶಿವನಗರದ ನಸ್ರಿನ್ ಬಾನು ಎಂಬುವವರು ಅರ್ಜಿ ಸಲ್ಲಿಸಿ ನನ್ನ ಅಕ್ಕ ಸೌದಿ ಅರೇಬಿಯಾಕ್ಕೆ ತೆರಳಿದ್ದು ಅಲ್ಲಿ ಕಾಣೆಯಾಗಿದ್ದಾರೆ. ಅವರನ್ನು ಹುಡುಕಿಕೊಡಿ ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಈ ಕುರಿತು ನಾನು ಸಂಸದರೊಂದಿಗೆ ಮಾತನಾಡಿ, ಭಾರತ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ. ನಂತರ ರಾಯಭಾರಿ ಕಚೇರಿಯಿಂದ ಸಂವಹನ ನಡೆಸಿ ಅವರನ್ನು ಹುಡುಕುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಸಾಂತ್ವನ ಹೇಳಿದರು.
ನ್ಯಾಮತಿ ತಾಲ್ಲೂಕಿನ ಕೃಷಿಕರೋರ್ವರು ಕೃಷಿ ಇಲಾಖೆ ಜಮೀನಿನಲ್ಲಿ ಆಶ್ರಯ ಮನೆಗಳನ್ನು ಕಟ್ಟಲು ಅವಕಾಶ ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಈ ಸಂಬಂಧ ಈಗಾಗಲೇ ನನ್ನ ಮೇಲೆ ನ್ಯಾಯಾಂಗದಲ್ಲಿ ಪ್ರಕರಣ ದಾಖಲಿಸಲಾಗಿದೆ. ಕೋರ್ಟ್ನಲ್ಲಿಯೇ ಉತ್ತರಿಸುತ್ತೇನೆ ಎಂದು ಅವರನ್ನು ವಾಪಸ್ಸು ಕಳುಹಿಸಿಕೊಟ್ಟರು.
ಇದನ್ನೂ ಓದಿ | ಅಂತರಾಷ್ಟ್ರೀಯ ಪತ್ರ ಲೇಖನ ಸ್ಪರ್ಧೆ
ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಮೊದಲು ಕೃಷಿ ಇಲಾಖೆ ಜಮೀನಿನಲ್ಲಿ ಆಶ್ರಯ ಮನೆ ಕಟ್ಟಲು ಅವಕಾಶ ಮಾಡಿಕೊಡಬೇಕೆಂದು ಅರ್ಜಿ ಸಲ್ಲಿಸಿದ್ದು, ಇದು ಕೃಷಿ ಇಲಾಖೆಗೆ ಸಂಬಂಧ ಪಡುತ್ತದೆ ಎಂದು ತಿಳಿಸಿದ್ದೆ. ನಂತರ ಅವಕಾಶವಿದ್ದರೆ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಿ ಎಂದು ಕೃಷಿ ಅಧಿಕಾರಿಗಳಿಗೆ ಪತ್ರ ಸಹ ಬರೆದಿದ್ದೆ. ಆದರೆ ಅಧಿಕಾರಿಗಳು ಪ್ರತಿಕ್ರಿಯಿಸಿ ಆ ಜಮೀನಿನ ಅವಶ್ಯಕತೆ ಇದೆ.
ಇಲ್ಲಿ ಕೃಷಿ ಫಾರ್ಮ್ ಇದ್ದು, ಮುಂದಿನ ಎಲ್ಲಾ ಕೃಷಿ ಚಟುವಟಿಕೆಗಳಿಗೆ ಜಮೀನಿನ ಬಳಕೆ ಮಾಡಿಕೊಳ್ಳುವ ಕಾರಣ ಜಮೀನನ್ನು ಕೊಡಲಾಗುವುದಿಲ್ಲ. ಬದಲಾಗಿ ಬೇರೆ ಜಮೀನನ್ನು ಕೊಡಿಸಲು ಯತ್ನಿಸುತ್ತೇವೆ ಎಂದಿದ್ದರು. ಈ ಕಾರಣದಿಂದ ನನ್ನ ಮೇಲೆ ನ್ಯಾಯಾಂಗದಲ್ಲಿ ಪ್ರಕರಣ ದಾಖಲಿಸಿದ್ದು, ಕೋರ್ಟ್ಗೆ ಸಮಸ್ಯೆ ಕುರಿತು ಮನವರಿಕೆ ಮಾಡಿದ್ದೇವೆ ಎಂದರು.
ದಾವಣಗೆರೆ ತಾಲ್ಲೂಕು ಮಾಯಕೊಂಡ ಹೋಬಳಿ, ಹೂವಿನಮಡು ಗ್ರಾಮದ ವೃದ್ಧರೋರ್ವರು ಅರ್ಜಿ ಸಲ್ಲಿಸಲು ಬರುವ ವೇಳೆ ಅವರನ್ನು ಡಿಸಿ ಯವರು ತಡೆದು ವೃದ್ದರ ಬಳಿಯೇ ಹೋಗಿ ಸಮಸ್ಯೆ ಆಲಿಸಿದರು. ಗ್ರಾಮದ ಸರ್ವೇ ನಂ.15 ರಲ್ಲಿ 10 ಜನ ಅತೀ ಸಣ್ಣ ರೈತರಿದ್ದು, ಎಲ್ಲರೂ ಬುಡಕಟ್ಟು ಜನಾಂಗಕ್ಕೆ ಸೇರಿದ್ದೇವೆ.
ಇಲ್ಲಿರುವ ಸುಮಾರು 10 ಎಕರೆ ವಿಸ್ತೀರ್ಣದ ನೀರಾವರಿ ಕೃಷಿ ಜಮೀನಿನಲ್ಲಿ 1 ಎಕರೆ, 20 ಗುಂಟೆ ಹೀಗೆ ನಾವೆಲ್ಲರೂ ಜಮೀನನ್ನು ಹೊಂದಿದ್ದು, ಕಳೆದ 60 ವರ್ಷಗಳಿಂದ ಸರ್ವೆ ನಂ.14 ರ ಬಸವರಾಜಪ್ಪ ಎಂಬುವವರ ಜಮೀನಿನಲ್ಲಿ ಉಪಕಾಲುವೆ ಮೂಲಕ ನೀರನ್ನು ಹರಿಸಿಕೊಳ್ಳತ್ತಾ ಬಂದಿದ್ದು, ಇದೀಗ ಕಾಲುವೆಗಳನ್ನು ಮುಚ್ಚಿದ್ದಾರೆ. ಅದನ್ನು ಕೂಡಲೇ ತೆರವುಗೊಳಿಸಿ ನೀರು ಹರಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ಕೂಡಲೇ ಅದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗೆ ಸೂಚಿಸುತ್ತೇನೆ ಎಂದರು.
ಸಾಮಾಜಿಕ ಕಾರ್ಯಕರ್ತ ಎಂ.ಎಸ್.ಮಲ್ಲಿಕಾರ್ಜುನ ಇಂಗಳೇಶ್ವರ ಅರ್ಜಿ ಸಲ್ಲಿಸಿ, ಸುನಂದಮ್ಮ ಅವರಿಗೆ ಸರ್ಕಾರದಿಂದ ಮಂಜೂರಾಗಿರುವ ಡೊ.ನಂ. 775/16, ಹದಡಿ ರಸ್ತೆ, ತರಳಬಾಳು ಬಡಾವಣೆಯಲ್ಲಿ 30*25 ಅಳತೆಯಲ್ಲಿರುವ ಈ ಜಾಗವನ್ನು ನಿವೃತ್ತಿ ಸರ್ಕಾರ ನೌಕರರಾದ ಕೆ.ಬಿ.ಚನ್ನಪ್ಪ ಅವರು ಖರೀದಿ ಮಾಡಿ, ಮಹಾನಗರಪಾಲಿಕೆಯಿಂದ ಕಟ್ಟಡ ಪರವಾನಿಗೆ ಪಡೆಯದೆ ಮೂರು ಅಂತಸ್ತಿನ ಮಹಡಿ ಕಟ್ಟಿದ್ದಾರೆ.
ಆದ ಕಾರಣ ಈ ಜಾಗವನ್ನು ಪರಿಶೀಲಿಸಿ, ವಾಪಸ್ ಪಡೆದು ಸರ್ಕಾರಿ ಕಚೇರಿಗೆ ಉಪಯೋಗಿಸಿಕೊಳ್ಳಬೇಕು ಎಂದು ಕೋರಿದರು. ಇದಕ್ಕೆ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ಪಾಲಿಕೆ ಆಯುಕ್ತರಿಗೆ ತಿಳಿಸಿ, ಸೂಕ್ತ ತನಿಖೆ ಮಾಡಲು ಆದೇಶಿಸುತ್ತೇನೆ ಎಂದರು.
ಹರಿಹರ ತಾಲ್ಲೂಕಿನ ಹಲಸಬಾಳು ಗ್ರಾಮದ ಗ್ರಾಮಸ್ಥರಾದ ಬಸವರಾಜ, ಹಾಲಮ್ಮ ಸೇರಿದಂತೆ ಅನೇಕರು ಅರ್ಜಿ ಸಲ್ಲಿಸಿ ಗ್ರಾಮದ ಸರ್ವೇ ನಂ.27 ರಲ್ಲಿ ಕಳೆದ 75 ರಿಂದ 80 ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸಮಾಡುತ್ತಿದ್ದು, ನಮಗೆ ನಮ್ಮ ಮನೆಯ ಹಕ್ಕುಪತ್ರ ಕೊಡಬೇಕಾಗಿ ಮನವಿ ಮಾಡಿದ್ದು, ಈ ಕುರಿತು ತಾವುಗಳು ಸ್ಪಂದಿಸಿದ್ದೀರಿ.
ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ಸಲ್ಲಿಸಿದ್ದು, ನೋಟಿಸು ನೀಡದೆ, ನಮ್ಮ ಗಮನಕ್ಕೆ ತಾರದೆ, ಮುದ್ದತ್ತಿಗೂ ಅವಕಾಶ ಕೊಡದೇ, ವಕೀಲರಿಗೂ ತಿಳಿಸದೆ ಮನವಿಯನ್ನು ತಿರಸ್ಕರಿಸಿರುತ್ತಾರೆ. ಈ ಕುರಿತು ನಮಗೆ ನ್ಯಾಯ ಒದಗಿಸಿ ಎಂದು ಮನವಿ ಮಾಡಿದರು. ಇದಕ್ಕೆ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ಹರಿಹರದ ತಹಶೀಲ್ದಾರರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಎಂ.ಎಸ್.ಮಲ್ಲಿಕಾರ್ಜುನ ಇಂಗಳೇಶ್ವರ ಅರ್ಜಿ ಸಲ್ಲಿಸಿ ಪಿಬಿ ರಸ್ತೆಯಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ಹಿಂಭಾಗದಲ್ಲಿ ಕಟ್ಟಡ ಮಾಲೀಕರಾದ ಅಶೋಕ್ ಕುಮಾರ್ ಸಿಂಗ್ ಅವರು ಡೊ.ನಂ. 113/4 ರಲ್ಲಿ ರಾಜ ಕಾಲುವೆಯ ಮೇಲೆ ಒತ್ತುವರಿ ಮಾಡಿರುತ್ತಾರೆ ಎಂದು ದೂರು ನೀಡಿದ್ದು, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ. ಆದ ಕಾರಣ ಕಟ್ಟಡ ಪರವಾನಿಗೆ ದಾಖಲೆಗಳನ್ನು ಪರಿಶೀಲಿಸಿ ಹೆಚ್ಚುವರಿ ಇದ್ದಲ್ಲಿ ಸೂಕ್ತ ಕ್ರಮ ತೆಗೆದುಕೊಂಡು ಕಟ್ಟಡ ತೆರವುಗೊಳಿಸಬೇಕು ಎಂದು ಮನವಿ ಮಾಡಿದರು.
ದಾವಣಗೆರೆ ಜಿಲ್ಲಾ ಕನ್ನಡಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಅರ್ಜಿ ಸಲ್ಲಿಸಿ ಸಾವಿರಾರು ಕೋಟಿ ರೂ. ಮೌಲ್ಯದ ಮಹಾನಗರಪಾಲಿಕೆ ವ್ಯಾಪ್ತಿಯ ಸರ್ಕಾರಿ ಜಾಗ, ರಾಜಕಾಲುವೆ, ಉದ್ಯಾನವನಗಳು, ಹೈ-ಟೆನ್ಶನ್ ಮಾರ್ಗದ ಜಾಗಗಳ ಒತ್ತುವರಿ ತೆರವುಗೊಳಿಸಬೇಕು. ದುರುಪಯೋಗ ಪಡಿಸಿಕೊಳ್ಳುತ್ತಿರುವ ಅಧಿಕಾರಿಗಳು, ಇಂಜಿನಿಯರ್ಗಳ ಮೇಲೆ ಕೂಡಲೇ ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಪರಿಶೀಲಿಸುತ್ತೇವೆ ಎಂದರು.
ಕನ್ನಡ ಜಾಗೃತಿ ಸಮಿತಿ ಕಾರ್ಯದರ್ಶಿ ಅರ್ಜಿ ಸಲ್ಲಿಸಿ ನಲ್ಲೂರು ಗ್ರಾಮದಲ್ಲಿ ಸುಮಾರು 12 ಮೆಡಿಕಲ್ ಅಂಗಡಿಗಳಿದ್ದು, ಕಳೆದ ಮೂರು ತಿಂಗಳಿಂದ ಭಾನುವಾರದಂದು ಸಂಪೂರ್ಣವಾಗಿ ಬಂದ್ ಮಾಡುತ್ತಿದ್ದಾರೆ. ಇದರಿಂದ ಗ್ರಾಮದ ಜನರಿಗೆ ತೊಂದರೆಯಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಿಹೆಚ್ಓರವರಿಗೆ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು.
ಚನ್ನಗಿರಿ ತಾಲ್ಲೂಕಿನ ಕೆರೆಬಿಳಚಿ ಗ್ರಾಮದ ಸ್ಥಳೀಯ ಹೈದರ್ ಅಲಿ ಖಾನ್ ಅರ್ಜಿ ಸಲ್ಲಿಸಿ ಕೆರೆಬಿಳಚಿ ಗ್ರಾಮಕ್ಕೆ ಬಸ್ ಬಿಡುವಂತೆ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಆದೇಶಿಸಿದ್ದು, ಇಲ್ಲಿವರೆಗೂ ಸಾರಿಗೆ ಸೌಕರ್ಯ ಕಲ್ಪಿಸಿಲ್ಲ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದರು. ಇದಕ್ಕೆ ಜಿಲ್ಲಾಧಿಕಾರಿ ಕೆರೆಬಿಳಚಿ ಗ್ರಾಮಕ್ಕೆ ಬಸ್ ವ್ಯವಸ್ಥೆ ಮಾಡುತ್ತೇವೆ ಎಂದರು.
ಸಾಮಾಜಿಕ ಕಾರ್ಯಕರ್ತ ಎಂ.ಎಸ್.ಮಲ್ಲಿಕಾರ್ಜುನ ಇಂಗಳೇಶ್ವರ ಅರ್ಜಿ ಸಲ್ಲಿಸಿ ದೊಡ್ಡ ಬೂದಿಹಾಳ ಹಾಗೂ ಆನಗೋಡು, ಪಾಮೇನಹಳ್ಳಿಗಳಲ್ಲಿ ಭೂ ಪರಿವರ್ತನೆ ಆಗದೆ ಲೇಔಟ್ ಆಗಿ ಪರಿವರ್ತನೆ ಮಾಡಿ ನಕಲಿ ಸರ್ಟಿಫಿಕೇಟ್ಗಳಲ್ಲಿ ಮಹಾನಗರಪಾಲಿಕೆಯ ಸೀಲು ಸಹಿಗಳನ್ನು ಬಳಸಿ ಮಾರಾಟ ಮಾಡುತ್ತಿದ್ದಾರೆ. ಇದನ್ನು ಜಿಲ್ಲಾಧಿಕಾರಿಗಳು ಕೂಡಲೇ ತಡೆದು ಸ್ಥಳ ಪರಿಶೀಲಿಸಿ ಎಲ್ಲಾ ಸರ್ವೇ ನಂಬರ್ಗಳನ್ನು ಉಪನೋಂದಣಿ ಕಚೇರಿಯಲ್ಲಿ ಆಸ್ತಿ ನೋಂದಣಿ ಆಗುವುದನ್ನು ತಡೆಯಬೇಕು. ಹಾಗೂ ಜಮೀನು ಮಾಲೀಕರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ವಿನಂತಿಸಿದರು. ಅದಕ್ಕೆ ಜಿಲ್ಲಾಧಿಕಾರಿ ಜಿಲ್ಲಾ ನೋಂದಾಣಾಧಿಕಾರಿಗಳಿಗೆ ಪರಿಶೀಲಿಸುವಂತೆ ತಿಳಿಸುತ್ತೇನೆ ಎಂದರು.
ಮುದಹದಡಿ ಗ್ರಾಮದ ಆರ್.ಪರಶುರಾಮಪ್ಪ ಅರ್ಜಿ ಸಲ್ಲಿಸಿ ಗ್ರಾಮದ ಸರ್ವೇ ನಂ.20/3 ರಲ್ಲಿ 3 ಎಕರೆ 27 ಗುಂಟೆ ಜಮೀನಿನ ಬೆಳೆಗೆ ಹದಡಿ ಕಾರ್ಪೋರೇಷನ್ ಬ್ಯಾಂಕಿನಲ್ಲಿ ಸಾಲ ಪಡೆದಿದ್ದು, ರೈತರ ಸಾಲ ಮನ್ನಾ ಯೋಜನೆಯಿಂದ ಮೊದಲನೆ ಕಂತು ನನ್ನ ಸಾಲಕ್ಕೆ ಜಮಾಗೊಂಡಿದೆ. 2ನೇ ಕಂತು ಜಮಾಗೊಂಡು ವಾಪಸ್ ಹೋಗಿದೆ. ಸರ್ಕಾರದ ಈ ಯೋಜನೆಯನ್ನು ದೊರಕಿಸಿ ಕೊಡಿ ಎಂದರು. ಇದಕ್ಕೆ ಜಿಲ್ಲಾಧಿಕಾರಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.
ಆಲೂರು ಗ್ರಾಮದ ಗ್ರಾಮಸ್ಥರು ಅರ್ಜಿ ಸಲ್ಲಿಸಿ ಇಲ್ಲಿಯ ಗ್ರಾಮ ಲೆಕ್ಕಾಧಿಕಾರಿ ನಾಗರಾಜ ಮಲ್ಲಾಪುರ ಎಂಬುವವರು ಜನಸಾಮಾನ್ಯರಿಗೆ ಸ್ಪಂದಿಸದೇ ಸರಿಯಾಗಿ ಕರ್ತವ್ಯ ನಿರ್ವಹಿಸದೇ ಇರುವ ಕಾರಣ ಅವರನ್ನು ಮೂಲ ಸ್ಥಾನಕ್ಕೆ ವರ್ಗಾವಣೆ ಮಾಡಿ, ಆ ಜಾಗಕ್ಕೆ ಬೇರೆಯವನ್ನು ನೇಮಿಸಿಕೊಡಬೇಕೆಂದು ಮನವಿ ಮಾಡಿದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ತನಿಖೆ ನಡೆಸುತ್ತೇವೆ ಎಂದರು.
ನ್ಯಾಮತಿ ತಾಲ್ಲೂಕಿನ ಹಾಲೇಶ್ ಅರ್ಜಿ ಸಲ್ಲಿಸಿ, ಇಲ್ಲಿಯ ಶಿವಾನಂದಪ್ಪ ಬಡಾವಣೆಯಲ್ಲಿ ಸರ್ವೇ ನಂ. 135 ರಲ್ಲಿ ಸುಮಾರು 74 ಜನರಿಗೆ ಹಕ್ಕು ಪತ್ರ ನೀಡಿದ್ದು, ವಾಸವಿರುವ 15 ಕುಟುಂಬಗಳನ್ನು ಕೈಬಿಟ್ಟು ವಾಸವಿಲ್ಲದಿರುವ 14-15 ಕುಟುಂಬಗಳಿಗೆ ಅಕ್ರಮ ಪತ್ರ ನೀಡಿ ಖಾತೆ ಏರಿಸಲಾಗಿದೆ ಆದ್ದರಿಂದ ತಾವೇ ಖುದ್ದಾಗಿ ಬಂದು ಪರಿಶೀಲಿಸಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ತನಿಖೆ ನಡೆಸುತ್ತೇವೆ ಎಂದರು.
ಹೊನ್ನಾಳಿಯ ಪ್ರಕಾಶ್.ಸಿ.ಎಸ್ ಅರ್ಜಿ ಸಲ್ಲಿಸಿ ಇಲ್ಲಿಯ ಕೆನರಾ ಬ್ಯಾಂಕ್ನಲ್ಲಿ ರೂ.20 ಸಾವಿರ ಸಾಲ ಪಡೆದು ಅದರ ಬಾಬ್ತು ತೀರಿಸಲು ಒಂದು ವರ್ಷ ಪಿಗ್ನಿ ಕಟ್ಟಿರುತ್ತೇನೆ. ಸಂಬಂಧಪಟ್ಟ ಬ್ಯಾಂಕ್ ವ್ಯವಸ್ಥಾಪಕರಿಗೆ ವಿಚಾರಿಸಿದರೆ ಅಸಡ್ಡೆಯಿಂದ ಉತ್ತರಿಸಿ ಹಣ ಪಾವತಿಸಬೇಕೆಂದು ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಬ್ಯಾಂಕಿಗೆ ಅಸಲು ಮಾತ್ರ ಕಟ್ಟಲು ಸಾಧ್ಯವಾಗುತ್ತಿದ್ದು ಇದಕ್ಕೆ ಅವಕಾಶ ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಜಿಲ್ಲಾಧಿಕಾರಿ ಲೀಡ್ ಬ್ಯಾಂಕ್ ಮ್ಯಾನೇಜರ್ ಗೆ ತಿಳಿಸಿ ಸೂಕ್ತಕ್ರಮ ಕೈಗೊಳ್ಳುವಂತೆ ಆದೇಶಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಮುದ್ದಜ್ಜಿ, ಡಿಹೆಚ್ಒ ಡಾ.ನಾಗರಾಜ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ರೇಷ್ಮಾ ಕೌಸರ್, ಕೌಸರ್ ಬಾನು, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಮಾ.20 ಗ್ರಾಮ ವಾಸ್ತವ್ಯ
ಮಾ.20 ರ ಶನಿವಾರದಂದು ಚನ್ನಗಿರಿ ತಾಲ್ಲೂಕಿನ ತಿಪ್ಪಗೊಂಡನಹಳ್ಳಿಯಲ್ಲಿ ಗ್ರಾಮವಾಸ್ತವ್ಯ ಮಾಡಲಿದ್ದು, ಕಡಿಮೆ ಸಂಖ್ಯೆಯಲ್ಲಿ ಜನರನ್ನು ಸೇರಿಸುವಂತೆ ಆದೇಶಿಸಲಾಗಿದೆ.
ಮಾ.24 ಕನಸು ಬಿತ್ತುವ, ರಾಷ್ಟ್ರ ಕಟ್ಟುವ ಕಾರ್ಯಕ್ರಮ
ಕಳೆದ ವರ್ಷ “ಕನಸು ಬಿತ್ತುವ ಕೆಲಸ, ರಾಷ್ಟ್ರ ಕಟ್ಟುವ ಕೆಲಸ” ಎಂಬ ಯೋಜನೆಗೆ ಚಾಲನೆ ನೀಡಿದ್ದು, ಕೊರೋನ ಸೋಂಕಿನ ಕಾರಣದಿಂದಾಗಿ ಮುಂದುವರೆಸಲು ಆಗಿರಲಿಲ್ಲ. ಇದೀಗ ಮಾ.24 ರಂದು ನ್ಯಾಮತಿ ತಾಲ್ಲೂಕಿನ ಮಲ್ಲಿಗೆ ಗ್ರಾಮದಲ್ಲಿ ಸುಮಾರು 4-5 ಶಾಲೆಗಳ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ.
| ಮಹಾಂತೇಶ ಬೀಳಗಿ, ಜಿಲ್ಲಾಧಿಕಾರಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

