ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು
ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯನ್ನು ಸುಗಮ, ಪಾರದರ್ಶಕ ಮತ್ತು ಅತ್ಯಂತ ಸುರಕ್ಷಿತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ನಿರ್ದೇಶನ ನೀಡಿದರು.
ಅವರು ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯುವ ದೃಷ್ಟಿಯಿಂದ, ಮತ ಎಣಿಕೆ ಕೇಂದ್ರದ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ‘ವಾಹನ ಮುಕ್ತ ವಲಯ’ ಎಂದು ಘೋಷಿಸಲಾಗಿದೆ, ಎಣಿಕೆ ಕೇಂದ್ರದ ಗೇಟ್ನಿಂದ ಸುತ್ತಲಿನ 100 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಅಲ್ಲಿ ಸಿಆರ್ಪಿಸಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕೇಂದ್ರದ ಸುತ್ತಲೂ ಮೂರು ಹಂತದ ಸಮನ್ವಯ ಭದ್ರತಾ ವ್ಯವಸ್ಥೆಯನ್ನು (Three-tier coordinating security system) ಅಳವಡಿಸಲಾಗುವುದು. ಮತ ಎಣಿಕೆ ಪ್ರಕ್ರಿಯೆಗೆ ಯಾವುದೇ ಅಡ್ಡಿಯಾಗದಂತೆ ಮತ್ತು ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಅನುಮತಿ ಪಡೆದ ವಾಹನಗಳನ್ನು ಹೊರತುಪಡಿಸಿ ಉಳಿದ ಯಾವುದೇ ಖಾಸಗಿ ವಾಹನಗಳ ಪ್ರವೇಶವನ್ನು ಈ ವಲಯದಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಸೂಚನೆ ನೀಡಿದರು.
ಮತ ಎಣಿಕೆ ಕೇಂದ್ರದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೊಲೀಸ್ ಇಲಾಖೆಯ ವತಿಯಿಂದ ಪರ್ಯಾಯ ಸಂಚಾರ ಮಾರ್ಗಗಳನ್ನು ಗುರುತಿಸಲಾಗಿದೆ. ವಾಹನ ಸವಾರರು ಪೊಲೀಸ್ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಿ, ನಿಗದಿಪಡಿಸಿದ ಪರ್ಯಾಯ ರಸ್ತೆಗಳನ್ನು ಬಳಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.
ಮತ ಎಣಿಕೆ ಸಿಬ್ಬಂದಿ ಮತ್ತು ಅಭ್ಯರ್ಥಿಗಳಿಗೆ ಪ್ರತ್ಯೇಕ ವಾಹನ ಪಾಸ್ಗಳನ್ನು ವಿತರಿಸಲಾಗುವುದು. ಎಪಿಎಂಸಿ ಆವರಣ ಹಾಗೂ ಬಿಆರ್ಸಿ ಕಾಲೇಜು ಮೈದಾನದಲ್ಲಿ ವ್ಯವಸ್ಥಿತ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲು ಸೂಚಿಸಲಾಗಿದೆ. ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸಿಬ್ಬಂದಿಗಳ ಮೊಬೈಲ್ಗಳನ್ನು ಸುರಕ್ಷಿತವಾಗಿ ಇರಿಸಲು ಪ್ರತ್ಯೇಕ ಕೌಂಟರ್ ತೆರೆದು, ಟೋಕನ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಮತ ಎಣಿಕೆ ಕಾರ್ಯಕ್ಕೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಣಿಕೆ ಕೇಂದ್ರದ ಮೇಲ್ಛಾವಣಿ ಮತ್ತು ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಕೂಡಲೇ ಮರುಪರಿಶೀಲಿಸುವಂತೆ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.
ಮಳೆಯಿಂದಾಗಿ ಎಣಿಕೆ ಕೇಂದ್ರದ ಒಳಗೆ ನೀರು ಸೋರದಂತೆ ಹಾಗೂ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ವ್ಯವಸ್ಥೆ ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮತ ಎಣಿಕೆಯು ಪಾರದರ್ಶಕತೆ ಮತ್ತು ಭದ್ರತೆಯ ದೃಷ್ಟಿಯಿಂದ ಕೇಂದ್ರದಾದ್ಯಂತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯಕ್ಷಮತೆ ಹಾಗೂ ದೃಶ್ಯೀಕರಣ ವ್ಯಾಪ್ತಿಯನ್ನು ಅಧಿಕಾರಿಗಳು ಪರಿಶೀಲಿಸಿಕೊಂಡು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಪ್ರತಿಯೊಂದು ಎಣಿಕೆ ಟೇಬಲ್ ಹಾಗೂ ಮತಯಂತ್ರಗಳನ್ನು ತರುವ ಹಾದಿಯಲ್ಲಿ ಯಾವುದೇ ‘ಬ್ಲೈಂಡ್ ಸ್ಪಾಟ್’ ಇಲ್ಲದಂತೆ ಕ್ಯಾಮೆರಾಗಳ ಕವರೇಜ್ ಇರಬೇಕು. ಸಿಸಿಟಿವಿ ದೃಶ್ಯಾವಳಿಗಳು ಅಡೆತಡೆಯಿಲ್ಲದೆ ಚಿತ್ರೀಕರಣಗೊಳ್ಳುತ್ತಿರುವುದನ್ನು ತಾಂತ್ರಿಕ ತಂಡವು ದೃಢಪಡಿಸಿಕೊಳ್ಳಬೇಕು ಎಂದು ಅವರು ಸೂಚಿಸಿದರು.
ಮತ ಎಣಿಕೆ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹಾಗೂ ಅಭ್ಯರ್ಥಿಗಳ ಏಜೆಂಟರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆಯ ವತಿಯಿಂದ ಒಬ್ಬ ನುರಿತ ವೈದ್ಯರನ್ನೊಳಗೊಂಡ ವೈದ್ಯಕೀಯ ತಂಡವನ್ನು ನಿಯೋಜಿಸಬೇಕು. ತುರ್ತು ಸಂದರ್ಭ ಎದುರಾದಲ್ಲಿ ತಕ್ಷಣದ ಚಿಕಿತ್ಸೆಗಾಗಿ ಅಗತ್ಯ ಔಷಧೋಪಚಾರಗಳೊಂದಿಗೆ ಸುಸಜ್ಜಿತ ಅಂಬುಲೆನ್ಸ್ ಸೇವೆಯನ್ನು ಸ್ಥಳದಲ್ಲಿ ಸದಾ ಸಿದ್ಧವಾಗಿರಿಸಬೇಕು ಎಂದು ತಿಳಿಸಿದರು.
ಅಗ್ನಿಶಾಮಕ ಇಲಾಖೆಯು ಮತ ಎಣಿಕೆ ಕೇಂದ್ರದ ಒಳಾಂಗಣ ಮತ್ತು ಹೊರಾಂಗಣವನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರದ ಆವರಣದಲ್ಲಿ ಅಗ್ನಿಶಾಮಕ ವಾಹನಗಳನ್ನು (Fire Engines) ನಿಯೋಜಿಸಬೇಕು ಹಾಗೂ ಅಗ್ನಿಶಾಮಕ ಉಪಕರಣಗಳು ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಮತ ಎಣಿಕೆ ಪ್ರಕ್ರಿಯೆಯು ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುವಂತೆ ತಿಳಿಸಿದರು.
ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಭದ್ರತೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೇಖರ್ ಹೆಚ್.ಟಿ. ಅವರು ಮಾತನಾಡಿ, ಮತ ಎಣಿಕೆ ಕೇಂದ್ರದ ಒಳಗೆ ಮತ್ತು ಹೊರಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಕೇಂದ್ರದ ಸುತ್ತಮುತ್ತ ಸಶಸ್ತ್ರ ಮೀಸಲು ಪಡೆ ಹಾಗೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ನಿಗಾ ವಹಿಸಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಅನಧಿಕೃತ ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಉಪವಿಭಾಗಾಧಿಕಾರಿ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಚುನಾವಣಾಧಿಕಾರಿ ಸಂತೋಷ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತ ಗೌಡರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಮಹಾನಗರ ಪಾಲಿಕೆ ಕಾರ್ಯಪಾಲಕ ಅಭಿಯಂತರ ಉದಯ್ , ಬೆಸ್ಕಾಂ , ಕೆ.ಎಸ್.ಆರ್.ಟಿ.ಸಿ , ಆಗ್ನಿಶಾಮಕ ದಳ , ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243