Connect with us

ದಿನದ ಸುದ್ದಿ

ದಾವಣಗೆರೆ ವಿ.ವಿ 12ನೇ ಘಟಿಕೋತ್ಸವ | ವಿಶ್ವವಿದ್ಯಾಲಯಗಳಲ್ಲಿ 2500 ಹುದ್ದೆಗಳು ಖಾಲಿ ಇವೆ : ಸಚಿವ ಡಾ.ಎಂ.ಸಿ. ಸುಧಾಕರ್

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿ ಜೀವನದ ಕನಸುಗಳನ್ನು ನನಸಾಗಿಸಲು ನಿರಂತರ ಪ್ರಯತ್ನ ಬಹಳ ಮುಖ್ಯವಾಗಿರುತ್ತದೆ. ಶಿಕ್ಷಣವು ವ್ಯಕ್ತಿಯ ಜೀವನದಲ್ಲಿ ಹೊಸ ಆಲೋಚನೆಗಳು, ಜ್ಞಾನ ಮತ್ತು ಸಾಧ್ಯತೆಗಳನ್ನು ತುಂಬುವ ನಿರಂತರ ಪ್ರಯಾಣವಾಗಿದೆ. ದಾವಣಗೆರೆ ವಿಶ್ವವಿದ್ಯಾನಿಲಯ 2009 ರಲ್ಲಿ ಸ್ಥಾಪನೆಯಾಗಿದ್ದರೂ ಪ್ರಗತಿಗೆ ಪೂರಕವಾಗಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

ಅವರು ಏಪ್ರಿಲ್ 2 ರಂದು ಬುಧವಾರ ತೋಳಹುಣಸೆಯಲ್ಲಿನ ದಾವಣಗೆರೆ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿಕ್ಷಣವು ನಮಗೆ ಉದ್ಯೋಗದ ಜೊತೆಗೆ ನೈತಿಕತೆ, ಸಹಾನುಭೂತಿ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಒದಗಿಸುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಜ್ಞಾನ ಪಡೆದು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು” ಎಂದರು.

ಶ್ರೇಷ್ಠ ವಿಜ್ಞಾನಿ ಮತ್ತು ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರು ಕನಸು ಎಂದರೆ ಮಲಗಿರುವಾಗ ಕಾಣುವುದಲ್ಲ, ಅದು ಎಂದಿಗೂ ನನಸಾಗುವುದಿಲ್ಲ. ನಿದ್ರೆ ಮಾಡದೇ ಕಾಣುವ ಕನಸು ಗುರಿಮುಟ್ಟುವರೆಗೆ ಅದು ನಿಮ್ಮನ್ನು ನಿದ್ದೆ ಮಾಡಲು ಬಿಡುವುದಿಲ್ಲ. ಅಂತಹ ಕನಸು ನಿಮ್ಮದಾಗಲಿ. ವಿದ್ಯಾವಂತ ಯುವಕರು ಮಾತ್ರ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಬಲ್ಲರು. ನೀವು ಯಾವುದೇ ಕ್ಷೇತ್ರ ಆಯ್ಕೆ ಮಾಡಿಕೊಂಡರೂ ನಿಮ್ಮ ಪ್ರಯತ್ನದಿಂದ ದೇಶವು ಪ್ರಗತಿ ಸಾಧಿಸುತ್ತದೆ ಎಂದು ಹೇಳಿದರು.

ಪ್ರಸ್ತುತ ಜಗತ್ತು ವೇಗವಾಗಿ ಬದಲಾಗುತ್ತಿದೆ, ಕೃತಕ ಬುದ್ಧಿಮತ್ತೆ, ದತ್ತಾಂಶ ವಿಜ್ಞಾನ, ಸುಸ್ಥಿರ ಅಭಿವೃದ್ಧಿ ಮತ್ತು ಉದ್ಯಮಶೀಲತೆಯಂತಹ ಕ್ಷೇತ್ರಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತಿವೆ. ಇತ್ತೀಚಿನ ತಂತ್ರಜ್ಞಾನಗಳು ಮತ್ತು ಆಲೋಚನೆಗಳೊಂದಿಗೆ ನೀವು ಯಾವಾಗಲೂ ನಿಮ್ಮನ್ನು ನವೀಕೃತವಾಗಿರಿಸಿಕೊಳ್ಳಬೇಕು. ಸ್ವಾತಂತ್ರ್ಯದ ನಂತರ ದೇಶವು ಎಲ್ಲಾ ಕ್ಷೇತ್ರಗಳಲ್ಲಿ ಅಭೂತಪೂರ್ವ ಪ್ರಗತಿಯನ್ನು ಸಾಧಿಸಿದೆ. ಈಗ ದೇಶದ ಆರ್ಥಿಕತೆಯು ಪ್ರಬಲವಾಗಿದ್ದು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ.

ಇದನ್ನು ಮತ್ತಷ್ಟು ಬಲಪಡಿಸಲು ಮತ್ತು ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಮುಂಚೂಣಿಗೆ ತರಲು ನಿಮ್ಮ ಕೊಡುಗೆ ಬಹಳ ಮುಖ್ಯವಾಗಿದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ತಾಪಮಾನ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿರುವುದರಿಂದ ಇಂತಹ ಪರಿಸರ ಅಸಮತೋಲನದ ಗಂಭೀರ ಸಮಸ್ಯೆಯ ಬಗ್ಗೆ ಯೋಚಿಸಬೇಕು. ಇದಕ್ಕಾಗಿ ನೀರು, ಅರಣ್ಯ ಮತ್ತು ವಾಯು ಸಂರಕ್ಷಣೆಯ ನಿಟ್ಟಿನಲ್ಲಿ ಕೆಲಸ ಮಾಡುವ ಅವಶ್ಯಕತೆಯಿದೆ. ಶಿಕ್ಷಣದಿಂದ ಪಡೆದ ಜ್ಞಾನದೊಂದಿಗೆ, ಮುಂಬರುವ ಪೀಳಿಗೆಗೆ ಸ್ಫೂರ್ತಿಯ ಮೂಲವಾಗಿ ಏಕ್ ಭಾರತ್, ಶ್ರೇಷ್ಠ ಭಾರತ ಮತ್ತು ಸ್ವಾವಲಂಬಿ ಭಾರತ ನಿರ್ಮಾಣದಲ್ಲಿ ಭಾಗವಹಿಸಿ ಎಂದು ಕರೆ ನೀಡಿದರು.

ದಾವಣಗೆರೆ ವಿಶ್ವವಿದ್ಯಾಲಯವು ಕಡಿಮೆ ಅವಧಿಯಲ್ಲಿ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಹೆಸರು ಗಳಿಸಿದೆ. ನಿರಂತರ ಮತ್ತು ಸಕಾರಾತ್ಮಕ ಪೂರ್ವಭಾವಿ ಪ್ರಯತ್ನಗಳ ಮೂಲಕ ಅಭಿವೃದ್ಧಿ ಹೊಂದಿದ ಭಾರತಕ್ಕೆ ಮಾನವ ಸಂಪನ್ಮೂಲಗಳನ್ನು ರೂಪಿಸುವಲ್ಲಿ ವಿಶ್ವವಿದ್ಯಾಲಯವು ಪ್ರಮುಖ ಪಾತ್ರ ವಹಿಸುತ್ತಿದೆ. ಘಟಿಕೋತ್ಸವದಲ್ಲಿ ಕಾಗಿನೆಲೆ ಪೀಠದ ಗೌರವಾನ್ವಿತ ಶ್ರೀ ಜಗದ್ಗುರು ನಿರಂಜನಾನಂದ ಪುರಿ ಸ್ವಾಮೀಜಿ, ಸಮಾಜ, ಸಾರ್ವಜನಿಕ ಹಿತಾಸಕ್ತಿ ಮತ್ತು ದೇಶದ ಹಿತಾಸಕ್ತಿಯಲ್ಲಿ ಕೆಲಸ ಮಾಡುತ್ತಿರುವ ಶ್ರೀ. ಎಸ್.ಎ.ರವೀಂದ್ರನಾಥ್, ಮತ್ತು ಪೆÇ್ರ.ಎಸ್.ಆರ್.ನಿರಂಜನ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗಿದೆ. ಅವರಿಗೆ ಅಭಿನಂದಿಸುತ್ತ, ಸಾರ್ವಜನಿಕ ಹಿತಾಸಕ್ತಿ ಮತ್ತು ದೇಶದ ಹಿತಾಸಕ್ತಿಯಲ್ಲಿ ಕೆಲಸ ಮಾಡುವುದನ್ನು ಮುಂದುವರಿಸಬೇಕು ಎಂದು ಮನವಿ ಮಾಡಿದರು.

ಪದವಿಯನ್ನು ಪಡೆದ ಎಲ್ಲಾ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಸಮಯದಲ್ಲಿ ಅನೇಕ ಸವಾಲುಗಳನ್ನು ಎದುರಿಸಿರಬಹುದು, ಆದರೆ ನೀವು ಅವುಗಳನ್ನು ಜಯಿಸಿದ್ದೀರಿ. ಜೀವನದ ಅತ್ಯಮೂಲ್ಯ ಕ್ಷಣಗಳಲ್ಲಿ ಒಂದಾಗಿರುವ ಈ ವಿಶೇಷ ದಿನವು ನಿಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯ ಸಂಭ್ರಮಾಚರಣೆಯ ಜೊತೆಗೆ ನಿಮ್ಮ ಕನಸುಗಳ ಹಾರಾಟ ಆರಂಭವಾಗಿದೆ. ಈಗ ನೀವು ಶಿಕ್ಷಣದ ಹಾದಿಯಿಂದ ಅನುಭವ ಮತ್ತು ಕ್ರಿಯೆಯ ಹಾದಿಗೆ ಹೆಜ್ಜೆ ಹಾಕಲಿದ್ದೀರಿ, ನಿಮ್ಮ ಹಾದಿ ಸುಗಮವಾಗಿರಲಿ ಘಟಿಕೋತ್ಸವದಲ್ಲಿ ಪದವಿ ಸ್ವೀಕರಿಸಿದ ಹಾಗೂ ರ್ಯಾಂಕ್ ಪಡೆದವರನ್ನು ಕುರಿತು ರಾಜ್ಯಪಾಲರು ಹಾರೈಸಿದರು.

ಘಟಿಕೋತ್ಸವದಲ್ಲಿ ಡಾ.ಎಂ.ಸಿ. ಸುಧಾಕರ್ ಮಾತನಾಡಿ ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲು ಸರ್ಕಾರ ತನ್ನ ಬದ್ದತೆಯನ್ನು ತೋರಿಸಿದೆ. ಶಿಕ್ಷಣದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಲು ವರದಿ ನೀಡಲು ಸಂಪುಟ ಉಪ ಸಮಿತಿಗೆ ವಹಿಸಲಾಗಿದೆ. ವರದಿ ಬಂದ ನಂತರ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಮಂಜೂರಾದ 2500 ಹುದ್ದೆಗಳು ಖಾಲಿ ಇವೆ. ಮತ್ತು ಇಲ್ಲಿ ಹೊಸ ಕೋರ್ಸ್‍ಗಳನ್ನು ಆರಂಭಿಸಲಾಗಿದ್ದು ಈ ಹುದ್ದೆಗಳು ಸೇರಿದಂತೆ ಸುಮಾರು 3500 ರಷ್ಟು ಹುದ್ದೆಗಳು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಹುದ್ದೆಗಳು ಖಾಲಿ ಇವೆ. ಸಂಪುಟ ಉಪ ಸಮಿತಿ ವರದಿ ನೀಡಿದ ನಂತರ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ. ಗುಣಮಟ್ಟ ಆಧರಿಸಿ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಬೇಕು. ಆದರೆ ಹೆಚ್ಚಿನ ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸುವುದರಿಂದ ಇದು ಸಾಧ್ಯವಾಗುವುದಿಲ್ಲ ಎಂಬ ಅಭಿಪ್ರಾಯವು ನನ್ನದಾಗಿದೆ ಎಂದರು.

ತಾಂತ್ರಿಕತೆ ಬಹಳ ಬದಲಾವಣೆಯಾಗಿದ್ದು ಕೃತಕ ಬುದ್ದಿಮತ್ತೆ ಹಾಗೂ ಮಷಿನ್ ಲರ್ನಿಂಗ್, ಡಾಟಾ ಸೈನ್ಸ್ ಬಳಕೆ ಮಾಡಿಕೊಂಡು ಸ್ಪರ್ಧಾತ್ಮಕತೆಯನ್ನು ಬೆಳೆಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಬೇಕಾಗಿದೆ ಎಂದರು.

ಮುಖ್ಯ ಅತಿಥಿ ಪದ್ಮಭೂಷಣ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆಯ ಮಾಜಿ ನಿರ್ದೇಶಕರಾದ ಪ್ರೊ.ಪಿ.ಬಲರಾಮ್ ಘಟಿಕೋತ್ಸವ ಭಾಷಣ ಮಾಡಿದರು.

ಘಟಿಕೋತ್ಸವದಲ್ಲಿ 57 ಅಭ್ಯರ್ಥಿಗಳಿಗೆ ಪಿಹೆಚ್‍ಡಿ ಪದವಿ ಪ್ರದಾನ ಮಾಡಲಾಯಿತು. 2023-24 ನೇ ಸಾಲಿನಲ್ಲಿ ಸ್ನಾತಕ ಪದವಿ ಪಡೆದ 12129 ವಿದ್ಯಾರ್ಥಿಗಳಿಗೆ ಮತ್ತು ಎಂ.ಎ, ಎಂ.ಎಸ್.ಡಬ್ಲ್ಮೂ, ಎಂ.ಕಾಂ, ಎಂ.ಬಿ.ಎ, ಎಂ.ಎಸ್ಸಿ, ಎಂ.ಪಿ.ಇಡಿ, ಎಂ.ಇಡಿ ಸ್ನಾತಕೋತ್ತರ 1919 ವಿದ್ಯಾರ್ಥಿಗಳಿಗೆ ಪದವಿ ಪಡೆಯಲು ಅರ್ಹರಾಗಿರುವರು. 87 ಸ್ವರ್ಣ ಪದಕಗಳಿದ್ದು ಸ್ನಾತಕ ಪದವಿಯಲ್ಲಿ 14 ವಿದ್ಯಾರ್ಥಿಗಳು 24 ಸ್ವರ್ಣ ಪದಕ ಪಡೆದರು. ಸ್ನಾತಕೋತ್ತರ ಪದವಿಯಲ್ಲಿ 32 ವಿದ್ಯಾರ್ಥಿಗಳು 63 ಸ್ವರ್ಣ ಪದಕ ಪಡೆದರು. ಎಂ.ಕಾಂ ನಲ್ಲಿ ರಿಯಾ ಐ.ಕೆ.ಇವರು ಅತೀ ಹೆಚ್ಚು ಅಂದರೆ 6 ಸ್ವರ್ಣ ಪದಕ ಪಡೆದರು.

ಸಮಾರಂಭದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಡಿ.ಕುಂಬಾರ್ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್‌ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.

ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending