ದಿನದ ಸುದ್ದಿ
ದಾವಣಗೆರೆ | ಮಹಿಳೆಯರು ಸಂಕೋಲೆಗಳನ್ನು ಬದಿಗೊತ್ತಿ ಸಾಧನೆ ಕಡೆ ಗಮನ ಕೊಡಬೇಕು : ನ್ಯಾ.ಗೀತಾ.ಕೆ.ಬಿ

ಸುದ್ದಿದಿನ,ದಾವಣಗೆರೆ : ಪ್ರಸ್ತುತ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ವಿಶೇಷವಾದ ಸ್ಥಾನಮಾನಗಳಿಗೆ ಪಾತ್ರರಾಗಿದ್ದರೂ ಒದಗಿ ಬರುವ ಸಂಕೋಲೆಗಳನ್ನು ಬದಿಗೊತ್ತಿ ಸಾಧನೆ ಮಾಡುವತ್ತ ಗಮನಹರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಗೀತಾ.ಕೆ.ಬಿ ತಿಳಿಸಿದರು.
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ತಾಂತ್ರಿಕ ಮತ್ತು ಕಾಲೇಜು ಶಿಕ್ಷಣ ಇಲಾಖೆ, ಮಹಿಳಾ ದೌರ್ಜನ್ಯ ನಿವಾರಣೆ ಹಾಗು ಅಭಿವೃದ್ಧಿ ಕೋಶ ಮತ್ತು ಇತರೆ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರ ದಿನಾಚರಣೆಯನ್ನು ಕಳೆದ ಒಂದು ಶತಕದಿಂದಲೂ ಆಚರಿಸಲಾಗುತ್ತಿದ್ದು, 1911 ರಲ್ಲಿ ಡೆನ್ಮಾರ್ಕ್, ಆಸ್ಟ್ರಿಯ, ಜರ್ಮನ್, ಸ್ವಿಡ್ಜರ್ಲ್ಯಾಂಡ್ ದೇಶಗಳಲ್ಲಿ ದಶಲಕ್ಷಗಟ್ಟಲೇ ಜನರು ಒಂದೆಡೆ ಸೇರುವ ಮೂಲಕ ಮಹಿಳಾ ದಿನಾಚರಣೆಯನ್ನು ಆರಂಭಿಸಿದರು. ಅಂತರಾಷ್ಟ್ರೀಯ ಮಹಿಳೆಯರ ದಿನವನ್ನು ಮೊದಲ ಬಾರಿಗೆ ಕೂಲಿ ಚಳುವಳಿಯ ಮೂಲಕ ಉತ್ತರ ಅಮೆರಿಕ ಮತ್ತು ಯೂರೋಪ್ ದೇಶಗಳಲ್ಲಿ ಆಚರಿಸಲಾಯಿತು.
ಕೆಲವೇ ರಾಷ್ಟ್ರಗಳಿಗೆ ಸೀಮಿತವಾಗಿದ್ದ ಈ ದಿನಕ್ಕೆ ಸಂಯುಕ್ತ ರಾಷ್ಟ್ರಗಳು ಒಗ್ಗೂಡಿ 1977 ರಲ್ಲಿ ವಿಶ್ವಸಂಸ್ಥೆ ಮೂಲಕ ಅಧಿಕೃತ ಅನುಮೋದನೆ ನೀಡಿ ಮಾರ್ಚ್ 8 ಅನ್ನು ಅಂತರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಿಸುವಂತೆ ಘೋಷಿಸಿತು.
ಇದನ್ನೂ ಓದಿ | ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ : ಯುವತಿ ಪತ್ತೆ..!?
ಅಂದಿನ ದಿನಗಳಲ್ಲಿ ಮಹಿಳೆಯರಿಂದ ಪುರುಷರಿಗಿಂತ ಹೆಚ್ಚಾಗಿ ದುಡಿಸಿಕೊಂಡು ಕಡಿಮೆ ವೇತನ ನೀಡಿ, ಕೀಳಾಗಿ ಕಾಣಲಾಗುತ್ತಿತ್ತು. ಶೋಷಣೆ ಮಾಡುತ್ತಿದ್ದರು. ಇದರಿಂದ ಬೇಸತ್ತ ಮಹಿಳೆಯರು ಪ್ರಪಂಚದಲ್ಲಿ ಮಹಿಳೆಯರ ಅಸ್ತಿತ್ವ ಉಳಿಯಬೇಕಾದರೆ ಸಂಘಟಿತರಾಗಬೇಕು. ಸ್ತ್ರೀ ಅಬಲೆ ಅಲ್ಲ ಸಬಲೆ. ಹೆಣ್ಣಿನ ಅಸ್ತಿತ್ವವನ್ನು ಮಹಿಳೆಯರೇ ಉಳಿಸಬೇಕು ಎಂದು ಮಹಿಳೆಯರ ಮತದಾನಕ್ಕೆ, ಸಮಾನ ಕೆಲಸಕ್ಕೆ, ಸಮಾನ ವೇತನಕ್ಕಾಗಿ ರಾಷ್ಟ್ರದಾದ್ಯಂತ ಪ್ರತಿಭಟನೆ ನಡೆಸಿದರು.
ವೇದ ಕಾಲದಲ್ಲಿರದ ಲಿಂಗ ತಾರತಮ್ಯವು ನಂತರದ ಪುರುಷ ಪ್ರಧಾನ ಸಮಾಜದಲ್ಲಿ ತನ್ನ ಅಸ್ತಿತ್ವ ಪಡೆದು ಮಹಿಳೆಯರನ್ನು ಹತ್ತಿಕ್ಕಲು ಆರಂಭಿಸಿತು. ಪುರುಷ ಪ್ರಧಾನ ಸಮಾಜವು ಸ್ತ್ರೀ ಸಮಾನತೆಯನ್ನು ಕಸಿದುಕೊಂಡು ಅತೀ ಹೆಚ್ಚು ಶೋಷಣೆಗೆ ಒಳಪಡಿಸಿ, ದೌರ್ಜನ್ಯವೆಸಗಿತು. ಇಂತಹ ಧಾರುಣ ಸ್ಥಿತಿಯಲ್ಲಿ ಅಕ್ಕಮಹಾದೇವಿ ಸೇರಿದಂತೆ ಎಲ್ಲಾ ಶಿವಶರಣೆಯರು ಕ್ರಾಂತಿಕಾರಿ ಕಹಳೆಯನ್ನು ಊದಿ, ಆಧ್ಯಾತ್ಮದತ್ತ ಹೆಜ್ಜೆ ಹಾಕಿದರು.
ಕಳೆದ 20 ವರ್ಷಗಳಲ್ಲಿ ಅನೇಕ ಬದಲಾವಣೆಗಳು ಕಂಡುಬಂದಿದೆ. ಕಾನೂನುಗಳು ಸೇರಿದಂತೆ ಸರ್ಕಾರವು ಮಹಿಳೆಯರಿಗಾಗಿ ಎಲ್ಲಾ ಸ್ತರಗಳಲ್ಲೂ ಶೇ.33 ರಷ್ಟು ಮೀಸಲಾತಿ ಒದಗಿಸಿದ್ದು, ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಪುರುಷರಿಗಿಂತ ಯಾವುದರಲ್ಲೂ ಕಡಿಮೆಯಿಲ್ಲ ಎಂದು ಸಾಬೀತುಪಡಿಸುತ್ತಿದ್ದಾಳೆ.
ಮಾನಸಿಕವಾಗಿ ಹಾಗೂ ದೈಹಿಕವಾಗಿ ಪುರುಷನೊಂದಿಗೆ ಪೈಪೋಟಿ ನಡೆಸುತ್ತಿದ್ದಾಳೆ. ಇಡೀ ಕುಟುಂಬದ ಜವಾಬ್ಧಾರಿಯನ್ನು ವಹಿಸಿಕೊಳ್ಳುತ್ತಿದ್ದಾಳೆ ಎಂದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ.ತೂ.ಕ.ಶಂಕರಯ್ಯ ಮಾತನಾಡಿ, ಸ್ವಾತಂತ್ರ್ಯೋತ್ತರ ಭಾರತದಲ್ಲಿ ಮಹಿಳೆಯರನ್ನು ಕುರಿತು ಸ್ತ್ರೀ ಸ್ವಾತಂತ್ರ್ಯಕ್ಕೆ ಅರ್ಹಳಲ್ಲ ಎಂದು ಮನುಸ್ಮøತಿಯು ವಿಧಿಸಿದ ಕಟ್ಟುಪಾಡು ವೈಜ್ಞಾನಿಕ ಯುಗದಲ್ಲೂ ಮುಂದುವರೆಯುತ್ತಿರುವುದು ದುರಂತ. ಆದರೆ ಈಗ ಕಾಲ ಬದಲಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಭಾರತೀಯ ನಾರಿ ಈಗ ಪುರುಷನಿಗೆ ಸಮಾನಳು. ಹೆಣ್ಣು-ಗಂಡು ಸರಿಸಮಾನರೆಂದು ತಾತ್ವಿಕವಾಗಿ ಒಪ್ಪಿಕೊಂಡಿರುವ ಅಂಶವಾಗಿದೆ ಎಂದರು.
ಪುರುಷನ ಪ್ರತೀ ಸಾಧನೆಯ ಹಿಂದೆ ಹೆಣ್ಣಿರುತ್ತಾಳೆ. ಮಹಿಳೆಯಿಲ್ಲದೇ ಗಂಡು ಪರಿಪೂರ್ಣನಾಗಲಾರ. 12ನೇ ಶತಮಾನದಲ್ಲಿ ಆಯ್ದಕ್ಕಿ ಲಕ್ಕಮ್ಮ ತನ್ನೆಲ್ಲಾ ಆಸೆ ಆಕಾಂಕ್ಷೆಗಳನ್ನು ಬದಿಗೊತ್ತಿ ತನ್ನ ಗಂಡನನ್ನು ತಿದ್ದುವ ಮೂಲಕ ಕಾಯಕ ನಿಷ್ಠೆಯನ್ನು ಬೆಳೆಸುತ್ತಾಳೆ. ಇಂದಿನ ಭ್ರಷ್ಟಾಚಾರ ಯುಗದಲ್ಲಿ ಆಯ್ದಕ್ಕಿ ಲಕ್ಕಮ್ಮ ಸಮಾಜಕ್ಕೆ ಮಾದರಿಯಾಗುತ್ತಾಳೆ. ತನ್ನ ಮನೆಯವರನ್ನು ತಿದ್ದುವ ಮೂಲಕ ಸಂಸಾರದ ಆರ್ಥಿಕ ಸ್ಥಿತಿಯನ್ನು ಸುಧಾರಿಸುತ್ತಿದ್ದಾಳೆ.
ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುನ್ನುಗ್ಗುತ್ತಿದ್ದು, ಆಕೆಯನ್ನು ಕೇವಲ ಗೌರವಿಸುವುದಲ್ಲದೇ ಸರಿಸಮಾನವಾಗಿ ಕಾಣುವ ಮನಸ್ಥಿತಿ ಬೆಳೆಸಿಕೊಳ್ಳಬೇಕು ಎಂದರು. ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಮುಖ್ಯನ್ಯಾಯಿಕ ದಂಡಾಧಿಕಾರಿಗಳಾದ ಪ್ರೀತಿ ಎಸ್. ಜೋಶಿ ಮಾತನಾಡಿ, ಮಹಿಳೆಯರು ಕಾನೂನುಗಳನ್ನು ಅರ್ಥಮಾಡಿಕೊಳ್ಳುವ ಮೂಲಕ ಅವುಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು.
ಉದ್ಯೋಗಸ್ಥ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಅನೇಕ ಕಾಯ್ದೆ ಕಾನೂನುಗಳು ಜಾರಿಯಾಗಿದ್ದು ಮಹಿಳೆಯರು ಅದನ್ನು ದುರುಪಯೋಗ ಪಡಿಸಿಕೊಳ್ಳಬಾರದು. ನಾವು ಅನಪೇಕ್ಷಿತ ವ್ಯಕ್ತಿಗಳಿಂದ ತೊಂದರೆಯುಂಟಾದಾಗ ಮಾತ್ರ ಬಳಸಿಕೊಳ್ಳಬೇಕು. ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು. ಬಾಲ್ಯವಿವಾಹ, ಮಹಿಳೆಯರ ಮೇಲೆ ಆಗುವ ದೌರ್ಜನ್ಯ, ಶೋಷಣೆಗಳಂತಹ ಸಂದರ್ಭದಲ್ಲಿ ಕಾನೂನಿನ ಸಹಾಯ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಾದ ಎಲ್.ಹೆಚ್. ಅರುಣ್ಕುಮಾರ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರವೀಣ್ ನಾಯಕ್, ನ್ಯಾಯಾಧೀಶರಾದ ರಶ್ಮೀ ಎಂ.ಮರಡಿ, ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳಾದ ನಂದಿನಿ.ಎಂ.ಎನ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐ.ಕ್ಯೂ.ಎಸ್.ಸಿ. ಸಂಚಾಲಕ ಪ್ರೊ.ಟಿ.ವೀರೇಶ್, ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಎಂ.ಎಲ್.ತ್ರೀವೇಣಿ, ಪ್ರೋ.ಭೀಮಣ್ಣ ಸುಣಗಾರ್, ಡಾ.ಮಹೇಶ್.ಎನ್.ಪಾಟೀಲ್, ಡಾ.ದಾದಾಪೀರ್ ನವಿಲೇಹಾಳ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ

ಸುದ್ದಿದಿನ,ದಾವಣಗೆರೆ:ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ಇತ್ತೀಚಿಗೆ ನಡೆದ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂ ಡಿಪ್ಲೋಮೋ ಕಾಲೇಜಿನ ವಿವಿಧ ವಿಭಾಗಗಳಿಂದ 44 ಅಂತಿಮ ವರ್ಷದ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಮೆಕ್ಯಾನಿಕಲ್, ಸಿವಿಲ್, ಎಲೆಕ್ಟ್ರಿಕಲ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದಿಂದ ಒಟ್ಟು 44 ಅಂತಿಮ ವರ್ಷದ ವಿದ್ಯಾರ್ಥಿಗಳು ನ್ಯೂಜೈಸಾ ಟೆಕ್ನಾಲಜಿಸ್ ನಲ್ಲಿ ಉದ್ಯೋಗವಕಾಶಕ್ಕೆ ಅರ್ಹತೆ ಪಡೆದಿದ್ದಾರೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ತೇಜಸ್ವಿ ಕಟ್ಟಿಮನಿ ಟಿ.ಆರ್. ತಿಳಿಸಿದ್ದಾರೆ.
ಆಯ್ಕೆಯಾದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಜಿಎಂ ಕಾಲೇಜಿನ ಚೇರ್ಮನ್ ಆದ ಜಿ.ಎಂ. ಲಿಂಗರಾಜು, ಜಿಎಂಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ್ ಪಾಂಡೆ ಎಂಬಿ, ಕಾಲೇಜಿನ ಆಡಳಿತ ಅಧಿಕಾರಿಗಳಾದ ವೈ.ಯು. ಸುಭಾಷ್ ಚಂದ್ರ, ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಬಿ.ಎನ್. ಶ್ರೀಧರ್ ಅಭಿನಂದನೆ ಸಲ್ಲಿಸಿದ್ದು, 44 ವಿದ್ಯಾರ್ಥಿಗಳು ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ ಎಂದು ಹರುಷ ವ್ಯಕ್ತಪಡಿಸಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದು, ಈ ಸಂಭ್ರಮದಲ್ಲಿ ಜಿಎಂ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಸಿ. ನಿಂಗರಾಜು, ಡಿಪ್ಲೋಮೋದ ತರಬೇತಿ ಮತ್ತು ಉದ್ಯೋಗ ವಿಭಾಗದ ಸಂಯೋಜಕರಾದ ಯಾಸ್ಮಿನ್ ಬೇಗಮ್, ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥರಾದ ಕೆ.ಬಿ. ಜನಾರ್ಧನ್, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಸಿ.ಎನ್. ಸಂದೀಪ್, ಮೆಕಾನಿಕಲ್ ವಿಭಾಗದ ಮುಖ್ಯಸ್ಥರಾದ ಎಂ. ಪ್ರವೀಣ್ ಕುಮಾರ್, ಕೆ. ಗಿರಿಜಾ ಸೇರಿದಂತೆ ಇತರರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಫೆಬ್ರವರಿ 14 ಮತ್ತು 15 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025

ಸುದ್ದಿದಿನ,ಕಲಬುರಗಿ:ಕಲ್ಯಾಣ ಕರ್ನಾಟಕದ ಕೇಂದ್ರಸ್ಥಾನ ಕಲಬುರಗಿಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದಿಂದ ಕಲಬುರಗಿ ಶರಣಬಸವ ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 17 ಮತ್ತು 18 ರಂದು ಎರಡು ದಿನಗಳ ಕಾಲ ಭವಿಷ್ಯದಲ್ಲಿ ಪತ್ರಕರ್ತರಾಗುವ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ಮೀಡಿಯಾ ಫೆಸ್ಟ್-2025 ಕಾರ್ಯಕ್ರಮ ಆಯೋಜಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಲಬುರಗಿ ಉಪನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ ತಿಳಿಸಿದರು.
ಮಂಗಳವಾರ ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಮಾಧ್ಯಮ ಅಕಾಡೆಮಿ, ಶರಣಬಸವ ವಿಶ್ವವಿದ್ಯಾಲಯ ಹಾಗೂ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಲಬುರಗಿ ಇವರ ಸಹಯೋಗದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಕಾರ್ಯಾಗಾರ, ನುರಿತ ಪತ್ರಕರ್ತರಿಂದ ಗೋಷ್ಠಿ, ಸ್ಪರ್ಧೆಗಳು ನಡೆಯಲಿವೆ. ಕಲಬುರಗಿ ಮತ್ತು ಬೆಳಗಾವಿ ವಿಭಾಗದ ವಿಶ್ವವಿದ್ಯಾಲಯ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪತ್ರಿಕೋದ್ಯಮ ವಿಭಾಗದ ಸುಮಾರು 200 ವಿದ್ಯಾರ್ಥಿಗಳು ಮತ್ತು ಕಾಲೇಜಿನ ಪ್ರಾಧ್ಯಾಪಕರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು.
ಪತ್ರಿಕೋದ್ಯಮ ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ
ಶರಣಬಸವ ವಿಶ್ವವಿದ್ಯಾಲಯದ ಪತಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಪದವಿ ವಿಭಾಗದ ಮುಖ್ಯಸ್ಥ ಟಿ.ವಿ.ಶಿವಾನಂದನ್ ಮಾತನಾಡಿ, ಎರಡು ದಿನಗಳ ಕಾಲ ನಡೆಯುವ ಈ ಮಾಧ್ಯಮೋತ್ಸವದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ವೇದಿಕೆ ಒದಗಿಸಲಾಗುತ್ತಿದೆ. ಭವಿಷ್ಯದ ಸ್ಪರ್ಧಾತ್ಮಕ ಪತ್ರಕರ್ತರಲ್ಲಿ ಅತ್ಯುತ್ತಮರನ್ನು ಹೊರತರಲು ಹತ್ತು ಹಲವು ಸ್ಪರ್ಧೆಗಳನ್ನು ವಿನ್ಯಾಸಗೊಳಿಸಿದ್ದು, ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದ ವಿವಿಧ ಸ್ಥಳಗಳಲ್ಲಿ ಈ ಸ್ಪರ್ಧೆ ನಡೆಯಲಿವೆ. ಕಾರ್ಯಕ್ರಮ್ಕಕೆ ಆಗಮಿಸುವ ವಿದ್ಯಾರ್ಥಿಗಳಿಗೆ ವಿ.ವಿ.ಯಲ್ಲಿ ವಸತಿ, ಊಟದ ವ್ಯವಸ್ಥೆ ಮಾಡಿದ್ದು, ಸ್ಪರ್ಧೇಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕ ಇಲ್ಲ. ಪ್ರವೇಶ ಸಂಪೂರ್ಣ ಉಚಿತ ಇರಲಿದೆ. ಇನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯು ವಿದ್ಯಾರ್ಥಿಗಳ ನೋಂದಣಿ ಕಾರ್ಯ ನಿರ್ವಹಿಸುತ್ತಿದೆ ಎಂದರು.
ವೈಯಕ್ತಿಕ ಸ್ಪರ್ಧೆಗಳು ಮತ್ತು ಗುಂಪು ಸ್ಪರ್ಧೆಗಳು ಎಂದು ಎರಡು ವಿಭಾಗಗಳಾಗಿ ಸ್ಪರ್ಧೇಗಳನ್ನು ವಿಂಗಡಿಸಲಾಗಿದೆ. ವೈಯಕ್ತಿಕ ಸ್ಪರ್ಧೆಗಳಲ್ಲಿ ನೇರ ಪತ್ರಿಕಾಗೋಷ್ಠಿ ವರದಿ ಮಾಡುವಿಕೆ, ಪಿಟಿಸಿ ಮತ್ತು ಟಿವಿ ವರದಿ ಮಾಡುವಿಕೆ, ಸ್ಪಾಟ್ ಛಾಯಾಗ್ರಹಣ, ರೇಡಿಯೋ ಜಾಕಿ, ನುಡಿಚಿತ್ರ, ಜಾಹೀರಾತು ಬರವಣಿಗೆ, ಸಾಮಾಜಿಕ ಮಾಧ್ಯಮದ ವರದಿ ಮಾಡುವಿಕೆ ಮತ್ತು ಮುಖ್ಯಾಂಶಗಳನ್ನು ಬರೆಯುವ ಕಲೆ ಸೇರಿವೆ. ಗುಂಪು ಸ್ಪರ್ಧೆಗಳಲ್ಲಿ ಪ್ರಚಲಿತ ವಿದ್ಯಮಾನಗಳ ಕುರಿತು ರಸಪ್ರಶ್ನೆ, “ನಮ್ಮೂರ ಭಾಷೆ–ವರವಾ?
ಶಾಪವಾ?”
ಚರ್ಚಾ ಸ್ಪರ್ಧೆ ಸೇರಿದೆ ಎಂದರು.
ಕಲ್ಯಾಣ ಕರ್ನಾಟಕ ಮಾಧ್ಯಮೋತ್ಸವದ ಮತ್ತೊಂದು ವೈಶಿಷ್ಟ್ಯವೆಂದರೆ ಉದಯೋನ್ಮುಖ ಪತ್ರಕರ್ತರ ಕೌಶಲ್ಯಗಳನ್ನು ಉತ್ತಮಗೊಳಿಸುವ ಎರಡು ಕಾರ್ಯಾಗಾರಗಳು ಹಮ್ಮಿಕೊಳ್ಳಲಾಗಿದೆ. ಮೊದಲ ಕಾರ್ಯಾಗಾರದಲ್ಲಿ ಹಿರಿಯ ಪತ್ರಕರ್ತ ಹಾಗೂ ನಟ, ನಿರ್ದೇಶಕ ಮತ್ತು ಆಲ್ಮಾ ಮೀಡಿಯಾದ ಸಂಸ್ಥಾಪಕರಾದ ಗೌರೀಶ್ ಅಕ್ಕಿ, ಮಾಧ್ಯಮದ ಸ್ಪರ್ಧಾತ್ಮಕ ಜಗತ್ತನ್ನು ಪ್ರವೇಶಿಸುವ ಹಾಗೂ ಸವಾಲುಗಳನ್ನು ಎದುರಿಸಲು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದ ವಿದ್ಯಾರ್ಥಿಗಳನ್ನು ಪರಿಣಾಮಕಾರಿಯಾಗಿ ಸಿದ್ಧಪಡಿಸುವ ಕುರಿತು ಮಾತನಾಡಲಿದ್ದಾರೆ. ಎರಡನೇ ಕಾರ್ಯಾಗಾರದಲ್ಲಿ ನಕಲಿ ಸುದ್ದಿಗಳನ್ನು ಹೇಗೆ ಗುರುತಿಸುವುದು ಎಂಬುದರ ಕುರಿತು ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ ಹಿರಿಯ ಪತ್ರಕರ್ತೆ ಹಾಗೂ ಪ್ರಾಧ್ಯಾಪಕಿ ಪ್ರೊ. ಕಾಂಚನ ಕೌರ್ ಮಾತನಾಡಲಿದ್ದಾರೆ ಎಂದು ಕಾರ್ಯಕ್ರಮದ ರೂಪುರೇಷೆ ಕುರಿತು ವಿವರಿಸಿದ ಟಿ.ವಿ.ಶಿವಾನಂದನ್ ಅವರು, ಎರಡು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ನಡೆಯಲಿವೆ ಎಂದರು.
ಫೆಬ್ರವರಿ 17 ರಂದು ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಅವರು ಮೀಡಿಯಾ ಫೆಸ್ಟ್ ಉದ್ಘಾಟಿಸಲಿದ್ದಾರೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಡಾ. ದಾಕ್ಷಾಯಿಣಿ ಅವ್ವಾಜಿ ಮತ್ತು ಸಂಸ್ಥಾನದ 9ನೇ ಪೀಠಾಧಿಪತಿ ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಈ ಸಮಾರಂಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಷಾ ಖಾನಮ್, ಕೊಪ್ಪಳ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಬಿ. ಕೆ. ರವಿ, ಶರಣಬಸವ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಅನಿಲ್ಕುಮಾರ್ ಬಿಡವೆ, ಗುಲಬರ್ಗಾ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಶ್ರೀರಾಮುಲು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಭವಾನಿ ಸಿಂಗ್, ಕಲಬುರಗಿ ಘಟಕದ ಅಧ್ಯಕ್ಷ ಬಾಬುರಾವ್ ಯಡ್ರಾಮಿ ಮತ್ತು ಇನ್ನಿತರ ಗಣ್ಯರು ಈ ಮಾಧ್ಯಮೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.
ಫೆಬ್ರವರಿ 18 ರಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕಲಬುರಗಿಯ ಉತ್ತರ ಮತಕ್ಷೇತ್ರದ ಶಾಸಕಿ ಖನೀಜ್ ಫಾತಿಮಾ, ಕಲಬುರಗಿಯ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಮತ್ತು ಇತರ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಿದ್ದಾರೆ ಎಂದು ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಭವಾನಿ ಸಿಂಗ್, ಕಲಬುರಗಿ ಘಟಕದ ಜಿಲ್ಲಾಧ್ಯಕ್ಷ ಬಾಬುರಾವ್ ಯಡ್ರಾಮಿ ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days ago
ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025
-
ದಿನದ ಸುದ್ದಿ2 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
-
ದಿನದ ಸುದ್ದಿ3 days ago
ಪತ್ರಕರ್ತರ ಮೇಲೆ ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ ಹಲ್ಲೆ, ಕೊಲೆ ಬೆದರಿಕೆ
-
ದಿನದ ಸುದ್ದಿ5 days ago
ಸರ್ಕಾರಿ, ಅನುದಾನಿತ, ಕಲ್ಯಾಣ ಕರ್ನಾಟಕದಲ್ಲಿನ ಖಾಲಿ ಇರುವ 25 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಬಜೆಟ್ನಲ್ಲಿ ಅನುಮೋದನೆಗೆ ಪ್ರಸ್ತಾವನೆ : ಸಚಿವ ಎಸ್.ಮಧು ಬಂಗಾರಪ್ಪ
-
ದಿನದ ಸುದ್ದಿ6 hours ago
ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ