ದಿನದ ಸುದ್ದಿ
ಬೆಳಗಿನ ಪ್ರಮುಖ ಸುದ್ದಿಗಳು | ಕೆಎಸ್ಒಯು ಅರ್ಜಿ ಆಹ್ವಾನ : ಚಂದ್ರಯಾನ ನೇರ ಪ್ರಸಾರ
ಬೆಳಗಿನ ಪ್ರಮುಖ ಸುದ್ದಿಗಳು
- ಕಾವೇರಿ ಹಾಗೂ ಮಹದಾಯಿ ಜಲವಿವಾದಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ.
- ಚಂದ್ರಯಾನ 3 ನೌಕೆಯ ವಿಕ್ರಮ್ ಲ್ಯಾಂಡರ್ ನಿರೀಕ್ಷೆಯಂತೆ ಇಂದು ಸಂಜೆ 6 ಗಂಟೆ 4 ನಿಮಿಷಕ್ಕೆ ಚಂದ್ರನ ಅಂಗಳದಲ್ಲಿ ಸುರಕ್ಷಿತವಾಗಿ ಇಳಿಸಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಸಿದ್ಧತೆ ಮಾಡಿಕೊಂಡಿದೆ. ಇಸ್ರೋದ ಜಾಲತಾಣ ಹಾಗೂ ಯೂಟ್ಯೂಬ್ ವಾಹಿನಿ, ಡಿಡಿ ನ್ಯಾಷನಲ್ ವಾಹಿನಿಗಳಲ್ಲಿ ಸಂಜೆ 5.27 ರಿಂದ ಚಂದ್ರಯಾನದ ನೇರಪ್ರಸಾರ ಮೂಡಿಬರಲಿದೆ.
- ಕನ್ನಡ ನಾಡು ಎಂದು ನಾಮಕರಣಗೊಂಡು 50 ವರ್ಷಗಳು ಸಂದ ಸಂದರ್ಭವನ್ನು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
- ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ಸಾಲ ಒದಗಿಸಲಾಗುವುದು ಎಂದು ವಕ್ಫ್ ಖಾತೆ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
- ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಬೀದಿ ಬದಿ ವ್ಯಾಪಾರಿಗಳು ಸಾಲ ಪಡೆಯದೇ ಇರುವವರಿಗೆ ಪ್ರಧಾನಮಂತ್ರಿ ಪಿ.ಎಂ ಸ್ವನಿಧಿ ಯೋಜನೆಯಡಿ ಸಾಲ ಸೌಲಭ್ಯ ನೀಡಲು ಕ್ರಮವಹಿಸಲಾಗುತ್ತಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕ್ಷೇತ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್ ಸೂಚಿಸಿದ್ದಾರೆ.
- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಇದೇ 31 ಕೊನೆ ದಿನ. ಹೆಚ್ಚಿನ ವಿವರಗಳು ಜಾಲತಾಣ www.ksoumysuru.ac.in ನಲ್ಲಿ ಲಭ್ಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243