Connect with us

ದಿನದ ಸುದ್ದಿ

ಅಪೌಷ್ಟಿಕ ಮಕ್ಕಳನ್ನು ಎನ್‍ಆರ್‍ಸಿಗೆ ದಾಖಲಿಸದಿದ್ದರೆ ಶಿಸ್ತಿನ ಕ್ರಮ : ಡಿಸಿ ಮಹಾಂತೇಶ್ ಬೀಳಗಿ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳನ್ನು ಎನ್‍ಆರ್‍ಸಿ ಕೇಂದ್ರಗಳಿಗೆ ದಾಖಲು ಮಾಡಬೇಕು. ತಪ್ಪಿದಲ್ಲಿ ಸಂಬಂಧಿಸಿದ ಸಿಡಿಪಿಓ, ಅಧೀಕ್ಷಕರು ಮತ್ತು ವಿಷಯ ನಿರ್ವಾಹಕರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದರು.

ಸೋಮವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳಾದ ಪೋಷಣ್ ಅಭಿಯಾನ ಯೋಜನೆ, ಕಿರುಸಾಲ ಯೋಜನೆ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆಯಡಿ ಜಿಲ್ಲಾ ಮಟ್ಟದ ಸಮನ್ವಯ ಸಭೆ, ಬಾಲ್ಯ ವಿವಾಹ ನಿಷೇಧ ಯೋಜನೆ, ಸ್ವಾಧಾರ ಯೋಜನೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿನ ತೀವ್ರ ಮತ್ತು ಸಾಧಾರಣ ಸೇರಿದಂತೆ ಒಟ್ಟು 225 ಅಪೌಷ್ಟಿಕ ಮಕ್ಕಳನ್ನು ಗುರುತಿಸಲಾಗಿದೆ. ಯಾವುದೇ ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದೆಂದು ಸರ್ಕಾರ ಜಿಲ್ಲಾಸ್ಪತ್ರೆಯಲ್ಲಿ ಎನ್‍ಆರ್‍ಸಿ(ನ್ಯುಟ್ರಿಷನ್ ರಿಹ್ಯಾಬಿಲಿಟೇಷನ್ ಸೆಂಟರ್) ತೆರೆದಿದೆ. ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಇದೊಂದು ವರದಾನವಾಗಿದ್ದು, ಮಕ್ಕಳನ್ನು ಎನ್‍ಆರ್‍ಸಿಗೆ ದಾಖಲಿಸಬೇಕು. ತಾಲ್ಲೂಕುಗಳಲ್ಲಿ ಸಿಡಿಪಿಓ ಗಳು, ಅಧೀಕ್ಷಕರು, ವಿಷಯ ನಿರ್ವಾಹಕರು ಈ ಬಗ್ಗೆ ಗಮನ ಹರಿಸಿ, ಪೋಷಕರ ಮನವೊಲಿಸಿ ಈ ಮಕ್ಕಳನ್ನು ಕೇಂದ್ರಕ್ಕೆ ಸೇರಿಸಬೇಕು ಎಂದರು.

ತಾಲ್ಲೂಕುಗಳ ಸಿಡಿಪಿಓ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಪ್ರತಿಕ್ರಿಯಿಸಿ ಪೋಷಕರು ತಮ್ಮ ಮಕ್ಕಳನ್ನು ಕೇಂದ್ರಕ್ಕೆ ಸೇರಿಸಲು ಒಪ್ಪುತ್ತಿಲ್ಲ. ಏನಾದರೊಂದು ಕಾರಣ ಹೇಳುತ್ತಾರೆಂದರು.

ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಸರ್ಕಾರ ಎಷ್ಟೆಲ್ಲಾ ಹಣ ಖರ್ಚು ಮಾಡಿ ಸಿಆರ್‍ಸಿ ತೆರೆದಿದೆ. ಇದೊಂದು ಮುಖ್ಯವಾದ ಯೋಜನೆಯಾಗಿದ್ದು, ಹೇಗಾದರೂ ಪೋಷಕರ ಮನವೊಲಿಸಿ ಮಕ್ಕಳನ್ನು ಎನ್‍ಆರ್‍ಸಿ ದಾಖಲಿಸಿ, ಮಕ್ಕಳನ್ನು ಅಪೌಷ್ಟಿಕತೆಯಿಂದ ಹೊರತರಬೇಕು. ಇಲ್ಲದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ಮಾತನಾಡಿ, ಪೋಷಣ್ ಅಭಿವಯಾನ ಯೋಜನೆಯಡಿ 0 ಯಿಂದ 6 ವರ್ಷಗಳವರೆಗಿನ ಮಕ್ಕಳು, ಕಿಶೋರಿಯರು, ಗರ್ಭಿಣಿ ಮತ್ತು ಬಾಣಂತಿಯರ ಪೌಷ್ಟಿಕತಾ ಮಟ್ಟವನ್ನು ಸುಧಾರಿಸಲು ಸಮುದಾಯ ಆಧಾರಿತ ಚಟುವಟಿಕೆಗಳ ಮೂಲಕ ಹಲವಾರು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಪೋಷಣ್ ಅಭಿಯಾನ್ ಅಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಮುಖಾಮುಖಿ ಸಂವಾದ ಮಾಡಲು ಇ-ಐಎಲ್‍ಎ(ಇನ್ಕ್ರಿಮೆಂಟಲ್ ಲರ್ನಿಂಗ್ ಅಪ್ರೋಚ್) ಮಾಡ್ಯೂಲ್‍ಗಳನ್ನು ಅಭಿವೃದ್ದಿ ಪಡಿಸಿ ತರಬೇತಿ ನೀಡಲಾಗಿದೆ. ಜೊತೆಗೆ ಈ ಯೋಜನೆಯಡಿ ಸುಪೋಷಣಾ ದಿವಸ್, ಅನ್ನಪ್ರಾಶನ ದಿವಸ್, ತೀವ್ರ ಮತ್ತು ಸಾಧಾರಣ ಅಪೌಷ್ಟಕ ಮಕ್ಕಳು ಗುರುತಿಸುವಿಕೆ, ರಕ್ತಹೀನತೆ ಜಾಗೃತಿ ಸಭೆ, ಎದೆಹಾಲಿನ ಮಹತ್ವ, ಜಂತುಹುಳು ನಿವಾರಣೆ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ವಿವರಣೆ ನೀಡಿದರು.

ಮಾದರಿ ಪೌಷ್ಟಿಕ ಕೈತೋಟ ನಿರ್ಮಿಸಲು ಸೂಚನೆ

ಅಂಗನವಾಡಿ ಕೇಂದ್ರದಲ್ಲಿ ‘ಪೌಷ್ಟಿಕ ಕೈತೋಟ’ ಗಳನ್ನು ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರತಿ ತಾಲ್ಲೂಕಿನಲ್ಲಿ 5 ರಿಂದ 10 ಉತ್ತಮವಾದ ಪೌಷ್ಟಿಕ ಕೈತೋಟಗಳನ್ನು ನಿರ್ಮಿಸುವ ಮೂಲಕ ರಾಜ್ಯಕ್ಕೆ ಮಾದರಿಯಾಗಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಹಾಗೂ ಪೋಷಣ್ ಅಭಿಯಾನದಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ, ಪಂಚಾಯತ್‍ರಾಜ್, ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ಆಹಾರ ಇಲಾಖೆಗಳು ತಮ್ಮ ಪಾತ್ರವನ್ನು ಸಕ್ರಿಯವಾಗಿ ನಿರ್ವಹಿಸುವ ಮೂಲಕ ಯೋಜನೆಯ ಯಶಸ್ಸಿಗೆ ಸಹಕರಿಸಬೇಕೆಂದರು.

ಸಿಇಓ ಪದ್ಮಾ ಬಸವಂತಪ್ಪ ಮಾತನಾಡಿ, ಅಂಗನವಾಡಿ ಕೇಂದ್ರಗಳ ಆವರಣದಲ್ಲಿ ಪೌಷ್ಟಿಕ ಕೈತೋಟ ನಿರ್ಮಿಸಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲು ಸೂಚನೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ವಿಜಯಕುಮಾರ್ ಮಾತನಾಡಿ, 2020-21 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 62 ಬಾಲ್ಯ ವಿವಾಹ ಪ್ರಕರಣ ದಾಖಲಾಗಿದ್ದು, ಈ ಪೈಕಿ 61 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ಒಂದು ಬಾಲ್ಯ ವಿವಾಹ ನಡೆದಿದ್ದು ಎಫ್‍ಐಆರ್ ದಾಖಲಿಸಲಾಗಿದೆ ಎಂದರು.

ಬಾಲ್ಯ ವಿವಾಹ ತಡೆ ತಂಡ ಸಕ್ರಿಯವಾಗಿ ಕೆಲಸ ಮಾಡಬೇಕು

ಡಿಸಿ ಮಾತನಾಡಿ, ಕಳೆದ ಸಾಲಿಗೆ ಹೋಲಿಸಿದರೆ ಈ ಬಾರಿ ಬಾಲ್ಯ ವಿವಾಹ ಸಂಖ್ಯೆ ಹೆಚ್ಚಿದೆ. ಕೋವಿಡ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ಆರಂಭವಾಗಿಲ್ಲವೆಂದು ಎಷ್ಟೋ ಪೋಷಕರು ತಮ್ಮ ಮಕ್ಕಳನ್ನು ಮದುವೆ ಮಾಡುತ್ತಿದ್ದಾರೆ. ಆದ ಕಾರಣ ಬಾಲ್ಯ ವಿವಾಹ ತಡೆ ತಂಡ ಆದಷ್ಟು ಸಕ್ರಿಯವಾಗಿ ಕೆಲಸ ಮಾಡಬೇಕು. ಮುಖ್ಯವಾಗಿ ಪಿಡಿಓಗಳು, ಶಾಲಾ ಮುಖ್ಯಸ್ಥರು ಬಾಲ್ಯ ವಿವಾಹ ತಡೆಗೆ ಸಹಕರಿಸಬೇಕು. ಸಿಡಿಪಿಓ ಗ್ರಾಮ ಲೆಕ್ಕಿಗರು, ಆರ್‍ಐ, ಪೊಲೀಸ್ ಇಲಾಖೆಯವರು, ಎನ್‍ಜಿಓ ಸೇರಿದಂತೆ ತಂಡದ ಎಲ್ಲ ಸದಸ್ಯರು ಬಾಲ್ಯ ವಿವಾಹ ತಡೆಗೆ ಶ್ರಮಿಸಬೆಕೆಂದರು.

ಜಿ.ಪಂ ಸಿಇಓ ಪದ್ಮಾ ಬಸವಂತಪ್ಪ ಮಾತನಾಡಿ, 2020-21 ನೇ ಸಾಲಿನಲ್ಲಿ ಜಗಳೂರಿನಲ್ಲಿ 6, ದಾವಣಗೆರೆಯಲ್ಲಿ 18, ಹೊನ್ನಾಳಿಯಲ್ಲಿ 15, ಚನ್ನಗಿರಿಯಲ್ಲಿ 14 ಮತ್ತು ಹರಿಹರದಲ್ಲಿ 9 ಪ್ರಕರಣ ದಾಖಲಾಗಿದೆ. ಮುಂದುವರೆದ ತಾಲ್ಲೂಕುಗಳಲ್ಲೇ ಹೆಚ್ಚಾಗಿ ಪ್ರಕರಣ ದಾಖಲಾಗಿದ್ದು, ಬಾಲ್ಯ ವಿವಾಹ ತಡೆಗೆ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರ ತಂಡ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು.

ಬಾಲ್ಯ ವಿವಾಹ ತಡೆಗೆ ಜನನ ದಿನಾಂಕ ನೀಡುವಲ್ಲಿ ಪಾಮೇನಳ್ಳಿ ಶಾಲಾ ಮುಖ್ಯೋಪಾಧ್ಯಾಯರು ಸಹಕರಿಸಲಿಲ್ಲವೆಂದು ಮಕ್ಕಳ ಸಹಾಯವಾಣಿಯವರು ತಿಳಿಸಿದ್ದು, ಇನ್ನು ಮುಂದೆ ಹಾಗೆ ಅಸಹಕರಾರ ತೋರಿದವರ ವಿರುದ್ದ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಬಾಡಿಗೆ ಕಟ್ಟಡ ಬೇಡ

ಜಿಲ್ಲೆಯಲ್ಲಿ ಒಟ್ಟು 1721 ಅಂಗನವಾಡಿ ಕಟ್ಟಡಗಳಿದ್ದು ನಗರದಲ್ಲೇ 375 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಖಾಸಗಿ ಕಟ್ಟಡದಲ್ಲಿ ಅಂಗನವಾಡಿ ನಡೆಸುವುದು ಬೇಡ. ಸರ್ಕಾರಿ ಜಮೀನು ನೀಡಲಾಗುವುದು. ಎಸ್‍ಸಿಪಿ/ಟಿಎಸ್‍ಪಿ ಮತ್ತು ಇತರೆ ಯೋಜನೆಗಳಡಿ ಕಟ್ಟಡಗಳನ್ನು ನಿರ್ಮಿಸಬೇಕು.

ಹಾಗೂ ಶಾಲೆಗಳ ಹೆಚ್ಚುವರಿ ಕಟ್ಟಡವನ್ನು ಅಂಗನವಾಡಿ ಕಟ್ಟಡವಾಗಿ ಬಳಕೆ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ. ಇನ್ನು ಮುಂದೆ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಡೆಸಬಾರದು. ಆದಷ್ಟು ಶೀಘ್ರದಲ್ಲೇ ಜಾಗ ಗುರಿತಿಸಿ ಸ್ವಂತ ಕಟ್ಟಡಗಳನ್ನು ಹೊಂದಬೇಕೆಂದು ಸೂಚನೆ ನೀಡಿದ ಅವರು ತಾವು, ಸಿಇಓ ಅಂಗನವಾಡಿ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡುವುದಾಗಿ ತಿಳಿಸಿದರು.

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ರಡಿ 2020-21 ನೇ ಸಾಲಿನಲ್ಲಿ ದಾವಣಗೆರೆ ತಾಲ್ಲೂಕಿನಲ್ಲಿ 7, ಜಗಳೂರು 8, ಹರಿಹರ 5, ಹೊನ್ನಾಳಿ 4 ಮತ್ತು ಚನ್ನಗಿರಿ 3 ಸೇರಿದಂತೆ ಒಟ್ಟು 27 ಪ್ರಕರಣ ದಾಖಲಾಗಿದ್ದು, 02 ಪ್ರಕರಣಗಳ ಕೌಟುಂಬಿಕ್ ಘಟನಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.ಸಂರಕ್ಷಣಾಧಿಕಾರಿಗಳು 15 ಪ್ರಕರಣಗಳನ್ನು ಆಪ್ತಸಮಾಲೋಚನೆ ಮೂಲಕ ಇತ್ಯರ್ಥಪಡಿಸಿದ್ದು, 10 ಪ್ರಕರಣಗಳು ಆಪ್ತಸಮಾಲೋಚನೆ ಹಂತದಲ್ಲಿದೆ ಎಂದರು.

ಸ್ವಾಧಾರ ಯೋಜನೆಯಡಿ ನಗರದಲ್ಲಿ ಜಾಗೃತಿ ಮಹಿಳಾ ಸಂಘ ಮತ್ತು ಶುಭೋದಯ ಸ್ವಯಂ ಸೇವಾ ಸಂಸ್ಥೆಗಳು ಸ್ವಾಧಾರ ಗೃಹ ನಡೆಸುತ್ತಿದ್ದು, ಶೋಷಣೆಗೆ, ದೌರ್ಜನ್ಯಕ್ಕೊಳಗಾದ ಮಹಿಳೆಯರು ಮಕ್ಕಳು 6 ರಿಂದ 1 ವರ್ಷದವರೆಗೆ ತಾತ್ಕಾಲಿಕ ಆಶ್ರಯ ಜೊತೆಗೆ ಪುನರ್ವಸತಿಗಾಗಿ ಕೌಶಲ್ಯ ತರಬೇತಿ ಪಡೆಯುತ್ತಿದ್ದಾರೆ.

ಜಾಗೃತಿ ಮಹಿಳಾ ಸಂಘದಲ್ಲಿ ಪ್ರಸಕ್ತ ಸಾಲಿನ ಡಿಸೆಂಬರ್ ಅಂತ್ಯದವರೆಗೆ 46 ಮಹಿಳೆಯರು ಮಹಿಳೆಯರು 9ಮಕ್ಕಳು ದಾಖಲಾಗಿದ್ದು, ಈ ಪೈಕಿ 17 ಜನರನ್ನು ಪತಿ ಮತ್ತು ಪೋಷಕರ ವಶಕ್ಕೆ ನೀಡಿದ್ದು, 8 ಜನರು ಸ್ವಾವಲಂಬಿಗಳಾಗಿ ಹಾಗೂ ಒಬ್ಬರು ಮದುವೆಯಾಗಿ ಹಾಗೂ 08 ಮಕ್ಕಳು ಪೋಷಕರ ವಶಕ್ಕೆ ವಹಿಸಿ ಸಂಸ್ಥೆಯಿಂದ ಬಿಡುಗಡೆ ಹೊಂದಿರುತ್ತಾರೆ, ಶುಭೋದಯ ಸ್ವಯಂ ಸೇವಾ ಸಂಸ್ಥೆಯಲ್ಲಿ ಒಟ್ಟು 49 ಮಹಿಳೆಯರು ಮತ್ತು 9 ಮಕ್ಕಳು ದಾಖಲಾಗಿದ್ದು ಈ ಪೈಕಿ 23 ಮಹಿಳೆಯರು ಪತಿ ಮತ್ತು ಪೋಷಕರ ವಶಕ್ಕೆ 07 ಜನ ಸ್ವಾವಲಂಬಿಗಳಾಗಿ ಹಾಗೂ 03 ಮಕ್ಕಳ ತಾಯಿತಯ ವಶಕ್ಕೆ ವಹಿಸಿ ಬಿಡುಗಡೆ ಹೊಂದಿರುತ್ತಾರೆ. ಪುನರ್ವಸತಿಗಾಗಿ ಟೈಲರಿಂಗ್, ಬ್ಯುಟೀಷಿಯನ್, ಬ್ಯಾಗ್ ತಯಾರಿಕೆ, ಎಂಬ್ರಾಯಡರಿ, ಇತರೆ ತರಬೇತಿ ನೀಡಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿಗಳು, ಸಿಇಓ ಹಾಗೂ ಎಸ್‍ಪಿಯರೊಂದಿಗೆ ಸ್ವಾಧಾರ ಗೃಹಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು.

ಇದೇ ವೇಳೆ ಬಾಲ್ಯ ವಿವಾಹ ತಡೆಗೆ ಸಂಬಂಧಿಸಿದ ಕೈಪಿಡಿಯನ್ನು ಜಿಲ್ಲಾಧಿಕಾರಿ, ಜಿ.ಪಂ ಸಿಇಓ ಸೇರಿದಂತೆ ಅಧಿಕಾರಿಗಳು ಬಿಡುಗಡೆ ಮಾಡಿದರು.

ಸಭೆಯಲ್ಲಿ ಡಿವೈಎಸ್‍ಪಿ ಬಿ.ಎಸ್.ಬಸವರಾಜ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕೆ.ಸಿ.ಬಸವರಾಜಯ್ಯ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಲೋಕೇಶ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಗಂಗಾಧರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಕೌಸರ್ ರೇಷ್ಮಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಸುಶೃತ ಡಿ.ಶಾಸ್ತ್ರಿ, ಶಿಕ್ಷಣ ಇಲಾಖೆ ಇಓ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂರಕ್ಷಣಾಧಿಕಾರಿಗಳಾದ ಪೂರ್ಣಿಮಾ, ಸುಶೀಲಮ್ಮ, ಮಕ್ಕಳ ಸಹಾಯವಾಣಿಯ ಕೊಟ್ರೇಶ್, ವಿವಿಧ ಎನ್‍ಜಿಓ ಗಳ ಪದಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳ ಅಧಿಕಾರಿ/ಸಿಬ್ಬಂದಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

Published

on

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.

ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.

ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending