ದಿನದ ಸುದ್ದಿ
ಅಪೌಷ್ಟಿಕ ಮಕ್ಕಳನ್ನು ಎನ್ಆರ್ಸಿಗೆ ದಾಖಲಿಸದಿದ್ದರೆ ಶಿಸ್ತಿನ ಕ್ರಮ : ಡಿಸಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳನ್ನು ಎನ್ಆರ್ಸಿ ಕೇಂದ್ರಗಳಿಗೆ ದಾಖಲು ಮಾಡಬೇಕು. ತಪ್ಪಿದಲ್ಲಿ ಸಂಬಂಧಿಸಿದ ಸಿಡಿಪಿಓ, ಅಧೀಕ್ಷಕರು ಮತ್ತು ವಿಷಯ ನಿರ್ವಾಹಕರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದರು.
ಸೋಮವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳಾದ ಪೋಷಣ್ ಅಭಿಯಾನ ಯೋಜನೆ, ಕಿರುಸಾಲ ಯೋಜನೆ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆಯಡಿ ಜಿಲ್ಲಾ ಮಟ್ಟದ ಸಮನ್ವಯ ಸಭೆ, ಬಾಲ್ಯ ವಿವಾಹ ನಿಷೇಧ ಯೋಜನೆ, ಸ್ವಾಧಾರ ಯೋಜನೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿನ ತೀವ್ರ ಮತ್ತು ಸಾಧಾರಣ ಸೇರಿದಂತೆ ಒಟ್ಟು 225 ಅಪೌಷ್ಟಿಕ ಮಕ್ಕಳನ್ನು ಗುರುತಿಸಲಾಗಿದೆ. ಯಾವುದೇ ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದೆಂದು ಸರ್ಕಾರ ಜಿಲ್ಲಾಸ್ಪತ್ರೆಯಲ್ಲಿ ಎನ್ಆರ್ಸಿ(ನ್ಯುಟ್ರಿಷನ್ ರಿಹ್ಯಾಬಿಲಿಟೇಷನ್ ಸೆಂಟರ್) ತೆರೆದಿದೆ. ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಇದೊಂದು ವರದಾನವಾಗಿದ್ದು, ಮಕ್ಕಳನ್ನು ಎನ್ಆರ್ಸಿಗೆ ದಾಖಲಿಸಬೇಕು. ತಾಲ್ಲೂಕುಗಳಲ್ಲಿ ಸಿಡಿಪಿಓ ಗಳು, ಅಧೀಕ್ಷಕರು, ವಿಷಯ ನಿರ್ವಾಹಕರು ಈ ಬಗ್ಗೆ ಗಮನ ಹರಿಸಿ, ಪೋಷಕರ ಮನವೊಲಿಸಿ ಈ ಮಕ್ಕಳನ್ನು ಕೇಂದ್ರಕ್ಕೆ ಸೇರಿಸಬೇಕು ಎಂದರು.
ತಾಲ್ಲೂಕುಗಳ ಸಿಡಿಪಿಓ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಪ್ರತಿಕ್ರಿಯಿಸಿ ಪೋಷಕರು ತಮ್ಮ ಮಕ್ಕಳನ್ನು ಕೇಂದ್ರಕ್ಕೆ ಸೇರಿಸಲು ಒಪ್ಪುತ್ತಿಲ್ಲ. ಏನಾದರೊಂದು ಕಾರಣ ಹೇಳುತ್ತಾರೆಂದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಸರ್ಕಾರ ಎಷ್ಟೆಲ್ಲಾ ಹಣ ಖರ್ಚು ಮಾಡಿ ಸಿಆರ್ಸಿ ತೆರೆದಿದೆ. ಇದೊಂದು ಮುಖ್ಯವಾದ ಯೋಜನೆಯಾಗಿದ್ದು, ಹೇಗಾದರೂ ಪೋಷಕರ ಮನವೊಲಿಸಿ ಮಕ್ಕಳನ್ನು ಎನ್ಆರ್ಸಿ ದಾಖಲಿಸಿ, ಮಕ್ಕಳನ್ನು ಅಪೌಷ್ಟಿಕತೆಯಿಂದ ಹೊರತರಬೇಕು. ಇಲ್ಲದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ಮಾತನಾಡಿ, ಪೋಷಣ್ ಅಭಿವಯಾನ ಯೋಜನೆಯಡಿ 0 ಯಿಂದ 6 ವರ್ಷಗಳವರೆಗಿನ ಮಕ್ಕಳು, ಕಿಶೋರಿಯರು, ಗರ್ಭಿಣಿ ಮತ್ತು ಬಾಣಂತಿಯರ ಪೌಷ್ಟಿಕತಾ ಮಟ್ಟವನ್ನು ಸುಧಾರಿಸಲು ಸಮುದಾಯ ಆಧಾರಿತ ಚಟುವಟಿಕೆಗಳ ಮೂಲಕ ಹಲವಾರು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಪೋಷಣ್ ಅಭಿಯಾನ್ ಅಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಮುಖಾಮುಖಿ ಸಂವಾದ ಮಾಡಲು ಇ-ಐಎಲ್ಎ(ಇನ್ಕ್ರಿಮೆಂಟಲ್ ಲರ್ನಿಂಗ್ ಅಪ್ರೋಚ್) ಮಾಡ್ಯೂಲ್ಗಳನ್ನು ಅಭಿವೃದ್ದಿ ಪಡಿಸಿ ತರಬೇತಿ ನೀಡಲಾಗಿದೆ. ಜೊತೆಗೆ ಈ ಯೋಜನೆಯಡಿ ಸುಪೋಷಣಾ ದಿವಸ್, ಅನ್ನಪ್ರಾಶನ ದಿವಸ್, ತೀವ್ರ ಮತ್ತು ಸಾಧಾರಣ ಅಪೌಷ್ಟಕ ಮಕ್ಕಳು ಗುರುತಿಸುವಿಕೆ, ರಕ್ತಹೀನತೆ ಜಾಗೃತಿ ಸಭೆ, ಎದೆಹಾಲಿನ ಮಹತ್ವ, ಜಂತುಹುಳು ನಿವಾರಣೆ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ವಿವರಣೆ ನೀಡಿದರು.
ಮಾದರಿ ಪೌಷ್ಟಿಕ ಕೈತೋಟ ನಿರ್ಮಿಸಲು ಸೂಚನೆ
ಅಂಗನವಾಡಿ ಕೇಂದ್ರದಲ್ಲಿ ‘ಪೌಷ್ಟಿಕ ಕೈತೋಟ’ ಗಳನ್ನು ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರತಿ ತಾಲ್ಲೂಕಿನಲ್ಲಿ 5 ರಿಂದ 10 ಉತ್ತಮವಾದ ಪೌಷ್ಟಿಕ ಕೈತೋಟಗಳನ್ನು ನಿರ್ಮಿಸುವ ಮೂಲಕ ರಾಜ್ಯಕ್ಕೆ ಮಾದರಿಯಾಗಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಹಾಗೂ ಪೋಷಣ್ ಅಭಿಯಾನದಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ, ಪಂಚಾಯತ್ರಾಜ್, ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ಆಹಾರ ಇಲಾಖೆಗಳು ತಮ್ಮ ಪಾತ್ರವನ್ನು ಸಕ್ರಿಯವಾಗಿ ನಿರ್ವಹಿಸುವ ಮೂಲಕ ಯೋಜನೆಯ ಯಶಸ್ಸಿಗೆ ಸಹಕರಿಸಬೇಕೆಂದರು.
ಸಿಇಓ ಪದ್ಮಾ ಬಸವಂತಪ್ಪ ಮಾತನಾಡಿ, ಅಂಗನವಾಡಿ ಕೇಂದ್ರಗಳ ಆವರಣದಲ್ಲಿ ಪೌಷ್ಟಿಕ ಕೈತೋಟ ನಿರ್ಮಿಸಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲು ಸೂಚನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ವಿಜಯಕುಮಾರ್ ಮಾತನಾಡಿ, 2020-21 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 62 ಬಾಲ್ಯ ವಿವಾಹ ಪ್ರಕರಣ ದಾಖಲಾಗಿದ್ದು, ಈ ಪೈಕಿ 61 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ಒಂದು ಬಾಲ್ಯ ವಿವಾಹ ನಡೆದಿದ್ದು ಎಫ್ಐಆರ್ ದಾಖಲಿಸಲಾಗಿದೆ ಎಂದರು.
ಬಾಲ್ಯ ವಿವಾಹ ತಡೆ ತಂಡ ಸಕ್ರಿಯವಾಗಿ ಕೆಲಸ ಮಾಡಬೇಕು
ಡಿಸಿ ಮಾತನಾಡಿ, ಕಳೆದ ಸಾಲಿಗೆ ಹೋಲಿಸಿದರೆ ಈ ಬಾರಿ ಬಾಲ್ಯ ವಿವಾಹ ಸಂಖ್ಯೆ ಹೆಚ್ಚಿದೆ. ಕೋವಿಡ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ಆರಂಭವಾಗಿಲ್ಲವೆಂದು ಎಷ್ಟೋ ಪೋಷಕರು ತಮ್ಮ ಮಕ್ಕಳನ್ನು ಮದುವೆ ಮಾಡುತ್ತಿದ್ದಾರೆ. ಆದ ಕಾರಣ ಬಾಲ್ಯ ವಿವಾಹ ತಡೆ ತಂಡ ಆದಷ್ಟು ಸಕ್ರಿಯವಾಗಿ ಕೆಲಸ ಮಾಡಬೇಕು. ಮುಖ್ಯವಾಗಿ ಪಿಡಿಓಗಳು, ಶಾಲಾ ಮುಖ್ಯಸ್ಥರು ಬಾಲ್ಯ ವಿವಾಹ ತಡೆಗೆ ಸಹಕರಿಸಬೇಕು. ಸಿಡಿಪಿಓ ಗ್ರಾಮ ಲೆಕ್ಕಿಗರು, ಆರ್ಐ, ಪೊಲೀಸ್ ಇಲಾಖೆಯವರು, ಎನ್ಜಿಓ ಸೇರಿದಂತೆ ತಂಡದ ಎಲ್ಲ ಸದಸ್ಯರು ಬಾಲ್ಯ ವಿವಾಹ ತಡೆಗೆ ಶ್ರಮಿಸಬೆಕೆಂದರು.
ಜಿ.ಪಂ ಸಿಇಓ ಪದ್ಮಾ ಬಸವಂತಪ್ಪ ಮಾತನಾಡಿ, 2020-21 ನೇ ಸಾಲಿನಲ್ಲಿ ಜಗಳೂರಿನಲ್ಲಿ 6, ದಾವಣಗೆರೆಯಲ್ಲಿ 18, ಹೊನ್ನಾಳಿಯಲ್ಲಿ 15, ಚನ್ನಗಿರಿಯಲ್ಲಿ 14 ಮತ್ತು ಹರಿಹರದಲ್ಲಿ 9 ಪ್ರಕರಣ ದಾಖಲಾಗಿದೆ. ಮುಂದುವರೆದ ತಾಲ್ಲೂಕುಗಳಲ್ಲೇ ಹೆಚ್ಚಾಗಿ ಪ್ರಕರಣ ದಾಖಲಾಗಿದ್ದು, ಬಾಲ್ಯ ವಿವಾಹ ತಡೆಗೆ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರ ತಂಡ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು.
ಬಾಲ್ಯ ವಿವಾಹ ತಡೆಗೆ ಜನನ ದಿನಾಂಕ ನೀಡುವಲ್ಲಿ ಪಾಮೇನಳ್ಳಿ ಶಾಲಾ ಮುಖ್ಯೋಪಾಧ್ಯಾಯರು ಸಹಕರಿಸಲಿಲ್ಲವೆಂದು ಮಕ್ಕಳ ಸಹಾಯವಾಣಿಯವರು ತಿಳಿಸಿದ್ದು, ಇನ್ನು ಮುಂದೆ ಹಾಗೆ ಅಸಹಕರಾರ ತೋರಿದವರ ವಿರುದ್ದ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಬಾಡಿಗೆ ಕಟ್ಟಡ ಬೇಡ
ಜಿಲ್ಲೆಯಲ್ಲಿ ಒಟ್ಟು 1721 ಅಂಗನವಾಡಿ ಕಟ್ಟಡಗಳಿದ್ದು ನಗರದಲ್ಲೇ 375 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಖಾಸಗಿ ಕಟ್ಟಡದಲ್ಲಿ ಅಂಗನವಾಡಿ ನಡೆಸುವುದು ಬೇಡ. ಸರ್ಕಾರಿ ಜಮೀನು ನೀಡಲಾಗುವುದು. ಎಸ್ಸಿಪಿ/ಟಿಎಸ್ಪಿ ಮತ್ತು ಇತರೆ ಯೋಜನೆಗಳಡಿ ಕಟ್ಟಡಗಳನ್ನು ನಿರ್ಮಿಸಬೇಕು.
ಹಾಗೂ ಶಾಲೆಗಳ ಹೆಚ್ಚುವರಿ ಕಟ್ಟಡವನ್ನು ಅಂಗನವಾಡಿ ಕಟ್ಟಡವಾಗಿ ಬಳಕೆ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ. ಇನ್ನು ಮುಂದೆ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಡೆಸಬಾರದು. ಆದಷ್ಟು ಶೀಘ್ರದಲ್ಲೇ ಜಾಗ ಗುರಿತಿಸಿ ಸ್ವಂತ ಕಟ್ಟಡಗಳನ್ನು ಹೊಂದಬೇಕೆಂದು ಸೂಚನೆ ನೀಡಿದ ಅವರು ತಾವು, ಸಿಇಓ ಅಂಗನವಾಡಿ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡುವುದಾಗಿ ತಿಳಿಸಿದರು.
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ರಡಿ 2020-21 ನೇ ಸಾಲಿನಲ್ಲಿ ದಾವಣಗೆರೆ ತಾಲ್ಲೂಕಿನಲ್ಲಿ 7, ಜಗಳೂರು 8, ಹರಿಹರ 5, ಹೊನ್ನಾಳಿ 4 ಮತ್ತು ಚನ್ನಗಿರಿ 3 ಸೇರಿದಂತೆ ಒಟ್ಟು 27 ಪ್ರಕರಣ ದಾಖಲಾಗಿದ್ದು, 02 ಪ್ರಕರಣಗಳ ಕೌಟುಂಬಿಕ್ ಘಟನಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.ಸಂರಕ್ಷಣಾಧಿಕಾರಿಗಳು 15 ಪ್ರಕರಣಗಳನ್ನು ಆಪ್ತಸಮಾಲೋಚನೆ ಮೂಲಕ ಇತ್ಯರ್ಥಪಡಿಸಿದ್ದು, 10 ಪ್ರಕರಣಗಳು ಆಪ್ತಸಮಾಲೋಚನೆ ಹಂತದಲ್ಲಿದೆ ಎಂದರು.
ಸ್ವಾಧಾರ ಯೋಜನೆಯಡಿ ನಗರದಲ್ಲಿ ಜಾಗೃತಿ ಮಹಿಳಾ ಸಂಘ ಮತ್ತು ಶುಭೋದಯ ಸ್ವಯಂ ಸೇವಾ ಸಂಸ್ಥೆಗಳು ಸ್ವಾಧಾರ ಗೃಹ ನಡೆಸುತ್ತಿದ್ದು, ಶೋಷಣೆಗೆ, ದೌರ್ಜನ್ಯಕ್ಕೊಳಗಾದ ಮಹಿಳೆಯರು ಮಕ್ಕಳು 6 ರಿಂದ 1 ವರ್ಷದವರೆಗೆ ತಾತ್ಕಾಲಿಕ ಆಶ್ರಯ ಜೊತೆಗೆ ಪುನರ್ವಸತಿಗಾಗಿ ಕೌಶಲ್ಯ ತರಬೇತಿ ಪಡೆಯುತ್ತಿದ್ದಾರೆ.
ಜಾಗೃತಿ ಮಹಿಳಾ ಸಂಘದಲ್ಲಿ ಪ್ರಸಕ್ತ ಸಾಲಿನ ಡಿಸೆಂಬರ್ ಅಂತ್ಯದವರೆಗೆ 46 ಮಹಿಳೆಯರು ಮಹಿಳೆಯರು 9ಮಕ್ಕಳು ದಾಖಲಾಗಿದ್ದು, ಈ ಪೈಕಿ 17 ಜನರನ್ನು ಪತಿ ಮತ್ತು ಪೋಷಕರ ವಶಕ್ಕೆ ನೀಡಿದ್ದು, 8 ಜನರು ಸ್ವಾವಲಂಬಿಗಳಾಗಿ ಹಾಗೂ ಒಬ್ಬರು ಮದುವೆಯಾಗಿ ಹಾಗೂ 08 ಮಕ್ಕಳು ಪೋಷಕರ ವಶಕ್ಕೆ ವಹಿಸಿ ಸಂಸ್ಥೆಯಿಂದ ಬಿಡುಗಡೆ ಹೊಂದಿರುತ್ತಾರೆ, ಶುಭೋದಯ ಸ್ವಯಂ ಸೇವಾ ಸಂಸ್ಥೆಯಲ್ಲಿ ಒಟ್ಟು 49 ಮಹಿಳೆಯರು ಮತ್ತು 9 ಮಕ್ಕಳು ದಾಖಲಾಗಿದ್ದು ಈ ಪೈಕಿ 23 ಮಹಿಳೆಯರು ಪತಿ ಮತ್ತು ಪೋಷಕರ ವಶಕ್ಕೆ 07 ಜನ ಸ್ವಾವಲಂಬಿಗಳಾಗಿ ಹಾಗೂ 03 ಮಕ್ಕಳ ತಾಯಿತಯ ವಶಕ್ಕೆ ವಹಿಸಿ ಬಿಡುಗಡೆ ಹೊಂದಿರುತ್ತಾರೆ. ಪುನರ್ವಸತಿಗಾಗಿ ಟೈಲರಿಂಗ್, ಬ್ಯುಟೀಷಿಯನ್, ಬ್ಯಾಗ್ ತಯಾರಿಕೆ, ಎಂಬ್ರಾಯಡರಿ, ಇತರೆ ತರಬೇತಿ ನೀಡಲಾಗುತ್ತಿದೆ ಎಂದರು.
ಜಿಲ್ಲಾಧಿಕಾರಿಗಳು, ಸಿಇಓ ಹಾಗೂ ಎಸ್ಪಿಯರೊಂದಿಗೆ ಸ್ವಾಧಾರ ಗೃಹಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು.
ಇದೇ ವೇಳೆ ಬಾಲ್ಯ ವಿವಾಹ ತಡೆಗೆ ಸಂಬಂಧಿಸಿದ ಕೈಪಿಡಿಯನ್ನು ಜಿಲ್ಲಾಧಿಕಾರಿ, ಜಿ.ಪಂ ಸಿಇಓ ಸೇರಿದಂತೆ ಅಧಿಕಾರಿಗಳು ಬಿಡುಗಡೆ ಮಾಡಿದರು.
ಸಭೆಯಲ್ಲಿ ಡಿವೈಎಸ್ಪಿ ಬಿ.ಎಸ್.ಬಸವರಾಜ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕೆ.ಸಿ.ಬಸವರಾಜಯ್ಯ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಲೋಕೇಶ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಗಂಗಾಧರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಕೌಸರ್ ರೇಷ್ಮಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಸುಶೃತ ಡಿ.ಶಾಸ್ತ್ರಿ, ಶಿಕ್ಷಣ ಇಲಾಖೆ ಇಓ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂರಕ್ಷಣಾಧಿಕಾರಿಗಳಾದ ಪೂರ್ಣಿಮಾ, ಸುಶೀಲಮ್ಮ, ಮಕ್ಕಳ ಸಹಾಯವಾಣಿಯ ಕೊಟ್ರೇಶ್, ವಿವಿಧ ಎನ್ಜಿಓ ಗಳ ಪದಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳ ಅಧಿಕಾರಿ/ಸಿಬ್ಬಂದಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.
ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ
ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.
ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


