ದಿನದ ಸುದ್ದಿ
ಅಪೌಷ್ಟಿಕ ಮಕ್ಕಳನ್ನು ಎನ್ಆರ್ಸಿಗೆ ದಾಖಲಿಸದಿದ್ದರೆ ಶಿಸ್ತಿನ ಕ್ರಮ : ಡಿಸಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳನ್ನು ಎನ್ಆರ್ಸಿ ಕೇಂದ್ರಗಳಿಗೆ ದಾಖಲು ಮಾಡಬೇಕು. ತಪ್ಪಿದಲ್ಲಿ ಸಂಬಂಧಿಸಿದ ಸಿಡಿಪಿಓ, ಅಧೀಕ್ಷಕರು ಮತ್ತು ವಿಷಯ ನಿರ್ವಾಹಕರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದರು.
ಸೋಮವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳಾದ ಪೋಷಣ್ ಅಭಿಯಾನ ಯೋಜನೆ, ಕಿರುಸಾಲ ಯೋಜನೆ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆಯಡಿ ಜಿಲ್ಲಾ ಮಟ್ಟದ ಸಮನ್ವಯ ಸಭೆ, ಬಾಲ್ಯ ವಿವಾಹ ನಿಷೇಧ ಯೋಜನೆ, ಸ್ವಾಧಾರ ಯೋಜನೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿನ ತೀವ್ರ ಮತ್ತು ಸಾಧಾರಣ ಸೇರಿದಂತೆ ಒಟ್ಟು 225 ಅಪೌಷ್ಟಿಕ ಮಕ್ಕಳನ್ನು ಗುರುತಿಸಲಾಗಿದೆ. ಯಾವುದೇ ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದೆಂದು ಸರ್ಕಾರ ಜಿಲ್ಲಾಸ್ಪತ್ರೆಯಲ್ಲಿ ಎನ್ಆರ್ಸಿ(ನ್ಯುಟ್ರಿಷನ್ ರಿಹ್ಯಾಬಿಲಿಟೇಷನ್ ಸೆಂಟರ್) ತೆರೆದಿದೆ. ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಇದೊಂದು ವರದಾನವಾಗಿದ್ದು, ಮಕ್ಕಳನ್ನು ಎನ್ಆರ್ಸಿಗೆ ದಾಖಲಿಸಬೇಕು. ತಾಲ್ಲೂಕುಗಳಲ್ಲಿ ಸಿಡಿಪಿಓ ಗಳು, ಅಧೀಕ್ಷಕರು, ವಿಷಯ ನಿರ್ವಾಹಕರು ಈ ಬಗ್ಗೆ ಗಮನ ಹರಿಸಿ, ಪೋಷಕರ ಮನವೊಲಿಸಿ ಈ ಮಕ್ಕಳನ್ನು ಕೇಂದ್ರಕ್ಕೆ ಸೇರಿಸಬೇಕು ಎಂದರು.
ತಾಲ್ಲೂಕುಗಳ ಸಿಡಿಪಿಓ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಪ್ರತಿಕ್ರಿಯಿಸಿ ಪೋಷಕರು ತಮ್ಮ ಮಕ್ಕಳನ್ನು ಕೇಂದ್ರಕ್ಕೆ ಸೇರಿಸಲು ಒಪ್ಪುತ್ತಿಲ್ಲ. ಏನಾದರೊಂದು ಕಾರಣ ಹೇಳುತ್ತಾರೆಂದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಸರ್ಕಾರ ಎಷ್ಟೆಲ್ಲಾ ಹಣ ಖರ್ಚು ಮಾಡಿ ಸಿಆರ್ಸಿ ತೆರೆದಿದೆ. ಇದೊಂದು ಮುಖ್ಯವಾದ ಯೋಜನೆಯಾಗಿದ್ದು, ಹೇಗಾದರೂ ಪೋಷಕರ ಮನವೊಲಿಸಿ ಮಕ್ಕಳನ್ನು ಎನ್ಆರ್ಸಿ ದಾಖಲಿಸಿ, ಮಕ್ಕಳನ್ನು ಅಪೌಷ್ಟಿಕತೆಯಿಂದ ಹೊರತರಬೇಕು. ಇಲ್ಲದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ಮಾತನಾಡಿ, ಪೋಷಣ್ ಅಭಿವಯಾನ ಯೋಜನೆಯಡಿ 0 ಯಿಂದ 6 ವರ್ಷಗಳವರೆಗಿನ ಮಕ್ಕಳು, ಕಿಶೋರಿಯರು, ಗರ್ಭಿಣಿ ಮತ್ತು ಬಾಣಂತಿಯರ ಪೌಷ್ಟಿಕತಾ ಮಟ್ಟವನ್ನು ಸುಧಾರಿಸಲು ಸಮುದಾಯ ಆಧಾರಿತ ಚಟುವಟಿಕೆಗಳ ಮೂಲಕ ಹಲವಾರು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಪೋಷಣ್ ಅಭಿಯಾನ್ ಅಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಮುಖಾಮುಖಿ ಸಂವಾದ ಮಾಡಲು ಇ-ಐಎಲ್ಎ(ಇನ್ಕ್ರಿಮೆಂಟಲ್ ಲರ್ನಿಂಗ್ ಅಪ್ರೋಚ್) ಮಾಡ್ಯೂಲ್ಗಳನ್ನು ಅಭಿವೃದ್ದಿ ಪಡಿಸಿ ತರಬೇತಿ ನೀಡಲಾಗಿದೆ. ಜೊತೆಗೆ ಈ ಯೋಜನೆಯಡಿ ಸುಪೋಷಣಾ ದಿವಸ್, ಅನ್ನಪ್ರಾಶನ ದಿವಸ್, ತೀವ್ರ ಮತ್ತು ಸಾಧಾರಣ ಅಪೌಷ್ಟಕ ಮಕ್ಕಳು ಗುರುತಿಸುವಿಕೆ, ರಕ್ತಹೀನತೆ ಜಾಗೃತಿ ಸಭೆ, ಎದೆಹಾಲಿನ ಮಹತ್ವ, ಜಂತುಹುಳು ನಿವಾರಣೆ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ವಿವರಣೆ ನೀಡಿದರು.
ಮಾದರಿ ಪೌಷ್ಟಿಕ ಕೈತೋಟ ನಿರ್ಮಿಸಲು ಸೂಚನೆ
ಅಂಗನವಾಡಿ ಕೇಂದ್ರದಲ್ಲಿ ‘ಪೌಷ್ಟಿಕ ಕೈತೋಟ’ ಗಳನ್ನು ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರತಿ ತಾಲ್ಲೂಕಿನಲ್ಲಿ 5 ರಿಂದ 10 ಉತ್ತಮವಾದ ಪೌಷ್ಟಿಕ ಕೈತೋಟಗಳನ್ನು ನಿರ್ಮಿಸುವ ಮೂಲಕ ರಾಜ್ಯಕ್ಕೆ ಮಾದರಿಯಾಗಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಹಾಗೂ ಪೋಷಣ್ ಅಭಿಯಾನದಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ, ಪಂಚಾಯತ್ರಾಜ್, ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ಆಹಾರ ಇಲಾಖೆಗಳು ತಮ್ಮ ಪಾತ್ರವನ್ನು ಸಕ್ರಿಯವಾಗಿ ನಿರ್ವಹಿಸುವ ಮೂಲಕ ಯೋಜನೆಯ ಯಶಸ್ಸಿಗೆ ಸಹಕರಿಸಬೇಕೆಂದರು.
ಸಿಇಓ ಪದ್ಮಾ ಬಸವಂತಪ್ಪ ಮಾತನಾಡಿ, ಅಂಗನವಾಡಿ ಕೇಂದ್ರಗಳ ಆವರಣದಲ್ಲಿ ಪೌಷ್ಟಿಕ ಕೈತೋಟ ನಿರ್ಮಿಸಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲು ಸೂಚನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ವಿಜಯಕುಮಾರ್ ಮಾತನಾಡಿ, 2020-21 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 62 ಬಾಲ್ಯ ವಿವಾಹ ಪ್ರಕರಣ ದಾಖಲಾಗಿದ್ದು, ಈ ಪೈಕಿ 61 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ಒಂದು ಬಾಲ್ಯ ವಿವಾಹ ನಡೆದಿದ್ದು ಎಫ್ಐಆರ್ ದಾಖಲಿಸಲಾಗಿದೆ ಎಂದರು.
ಬಾಲ್ಯ ವಿವಾಹ ತಡೆ ತಂಡ ಸಕ್ರಿಯವಾಗಿ ಕೆಲಸ ಮಾಡಬೇಕು
ಡಿಸಿ ಮಾತನಾಡಿ, ಕಳೆದ ಸಾಲಿಗೆ ಹೋಲಿಸಿದರೆ ಈ ಬಾರಿ ಬಾಲ್ಯ ವಿವಾಹ ಸಂಖ್ಯೆ ಹೆಚ್ಚಿದೆ. ಕೋವಿಡ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ಆರಂಭವಾಗಿಲ್ಲವೆಂದು ಎಷ್ಟೋ ಪೋಷಕರು ತಮ್ಮ ಮಕ್ಕಳನ್ನು ಮದುವೆ ಮಾಡುತ್ತಿದ್ದಾರೆ. ಆದ ಕಾರಣ ಬಾಲ್ಯ ವಿವಾಹ ತಡೆ ತಂಡ ಆದಷ್ಟು ಸಕ್ರಿಯವಾಗಿ ಕೆಲಸ ಮಾಡಬೇಕು. ಮುಖ್ಯವಾಗಿ ಪಿಡಿಓಗಳು, ಶಾಲಾ ಮುಖ್ಯಸ್ಥರು ಬಾಲ್ಯ ವಿವಾಹ ತಡೆಗೆ ಸಹಕರಿಸಬೇಕು. ಸಿಡಿಪಿಓ ಗ್ರಾಮ ಲೆಕ್ಕಿಗರು, ಆರ್ಐ, ಪೊಲೀಸ್ ಇಲಾಖೆಯವರು, ಎನ್ಜಿಓ ಸೇರಿದಂತೆ ತಂಡದ ಎಲ್ಲ ಸದಸ್ಯರು ಬಾಲ್ಯ ವಿವಾಹ ತಡೆಗೆ ಶ್ರಮಿಸಬೆಕೆಂದರು.
ಜಿ.ಪಂ ಸಿಇಓ ಪದ್ಮಾ ಬಸವಂತಪ್ಪ ಮಾತನಾಡಿ, 2020-21 ನೇ ಸಾಲಿನಲ್ಲಿ ಜಗಳೂರಿನಲ್ಲಿ 6, ದಾವಣಗೆರೆಯಲ್ಲಿ 18, ಹೊನ್ನಾಳಿಯಲ್ಲಿ 15, ಚನ್ನಗಿರಿಯಲ್ಲಿ 14 ಮತ್ತು ಹರಿಹರದಲ್ಲಿ 9 ಪ್ರಕರಣ ದಾಖಲಾಗಿದೆ. ಮುಂದುವರೆದ ತಾಲ್ಲೂಕುಗಳಲ್ಲೇ ಹೆಚ್ಚಾಗಿ ಪ್ರಕರಣ ದಾಖಲಾಗಿದ್ದು, ಬಾಲ್ಯ ವಿವಾಹ ತಡೆಗೆ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರ ತಂಡ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು.
ಬಾಲ್ಯ ವಿವಾಹ ತಡೆಗೆ ಜನನ ದಿನಾಂಕ ನೀಡುವಲ್ಲಿ ಪಾಮೇನಳ್ಳಿ ಶಾಲಾ ಮುಖ್ಯೋಪಾಧ್ಯಾಯರು ಸಹಕರಿಸಲಿಲ್ಲವೆಂದು ಮಕ್ಕಳ ಸಹಾಯವಾಣಿಯವರು ತಿಳಿಸಿದ್ದು, ಇನ್ನು ಮುಂದೆ ಹಾಗೆ ಅಸಹಕರಾರ ತೋರಿದವರ ವಿರುದ್ದ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಬಾಡಿಗೆ ಕಟ್ಟಡ ಬೇಡ
ಜಿಲ್ಲೆಯಲ್ಲಿ ಒಟ್ಟು 1721 ಅಂಗನವಾಡಿ ಕಟ್ಟಡಗಳಿದ್ದು ನಗರದಲ್ಲೇ 375 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಖಾಸಗಿ ಕಟ್ಟಡದಲ್ಲಿ ಅಂಗನವಾಡಿ ನಡೆಸುವುದು ಬೇಡ. ಸರ್ಕಾರಿ ಜಮೀನು ನೀಡಲಾಗುವುದು. ಎಸ್ಸಿಪಿ/ಟಿಎಸ್ಪಿ ಮತ್ತು ಇತರೆ ಯೋಜನೆಗಳಡಿ ಕಟ್ಟಡಗಳನ್ನು ನಿರ್ಮಿಸಬೇಕು.
ಹಾಗೂ ಶಾಲೆಗಳ ಹೆಚ್ಚುವರಿ ಕಟ್ಟಡವನ್ನು ಅಂಗನವಾಡಿ ಕಟ್ಟಡವಾಗಿ ಬಳಕೆ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ. ಇನ್ನು ಮುಂದೆ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಡೆಸಬಾರದು. ಆದಷ್ಟು ಶೀಘ್ರದಲ್ಲೇ ಜಾಗ ಗುರಿತಿಸಿ ಸ್ವಂತ ಕಟ್ಟಡಗಳನ್ನು ಹೊಂದಬೇಕೆಂದು ಸೂಚನೆ ನೀಡಿದ ಅವರು ತಾವು, ಸಿಇಓ ಅಂಗನವಾಡಿ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡುವುದಾಗಿ ತಿಳಿಸಿದರು.
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ರಡಿ 2020-21 ನೇ ಸಾಲಿನಲ್ಲಿ ದಾವಣಗೆರೆ ತಾಲ್ಲೂಕಿನಲ್ಲಿ 7, ಜಗಳೂರು 8, ಹರಿಹರ 5, ಹೊನ್ನಾಳಿ 4 ಮತ್ತು ಚನ್ನಗಿರಿ 3 ಸೇರಿದಂತೆ ಒಟ್ಟು 27 ಪ್ರಕರಣ ದಾಖಲಾಗಿದ್ದು, 02 ಪ್ರಕರಣಗಳ ಕೌಟುಂಬಿಕ್ ಘಟನಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.ಸಂರಕ್ಷಣಾಧಿಕಾರಿಗಳು 15 ಪ್ರಕರಣಗಳನ್ನು ಆಪ್ತಸಮಾಲೋಚನೆ ಮೂಲಕ ಇತ್ಯರ್ಥಪಡಿಸಿದ್ದು, 10 ಪ್ರಕರಣಗಳು ಆಪ್ತಸಮಾಲೋಚನೆ ಹಂತದಲ್ಲಿದೆ ಎಂದರು.
ಸ್ವಾಧಾರ ಯೋಜನೆಯಡಿ ನಗರದಲ್ಲಿ ಜಾಗೃತಿ ಮಹಿಳಾ ಸಂಘ ಮತ್ತು ಶುಭೋದಯ ಸ್ವಯಂ ಸೇವಾ ಸಂಸ್ಥೆಗಳು ಸ್ವಾಧಾರ ಗೃಹ ನಡೆಸುತ್ತಿದ್ದು, ಶೋಷಣೆಗೆ, ದೌರ್ಜನ್ಯಕ್ಕೊಳಗಾದ ಮಹಿಳೆಯರು ಮಕ್ಕಳು 6 ರಿಂದ 1 ವರ್ಷದವರೆಗೆ ತಾತ್ಕಾಲಿಕ ಆಶ್ರಯ ಜೊತೆಗೆ ಪುನರ್ವಸತಿಗಾಗಿ ಕೌಶಲ್ಯ ತರಬೇತಿ ಪಡೆಯುತ್ತಿದ್ದಾರೆ.
ಜಾಗೃತಿ ಮಹಿಳಾ ಸಂಘದಲ್ಲಿ ಪ್ರಸಕ್ತ ಸಾಲಿನ ಡಿಸೆಂಬರ್ ಅಂತ್ಯದವರೆಗೆ 46 ಮಹಿಳೆಯರು ಮಹಿಳೆಯರು 9ಮಕ್ಕಳು ದಾಖಲಾಗಿದ್ದು, ಈ ಪೈಕಿ 17 ಜನರನ್ನು ಪತಿ ಮತ್ತು ಪೋಷಕರ ವಶಕ್ಕೆ ನೀಡಿದ್ದು, 8 ಜನರು ಸ್ವಾವಲಂಬಿಗಳಾಗಿ ಹಾಗೂ ಒಬ್ಬರು ಮದುವೆಯಾಗಿ ಹಾಗೂ 08 ಮಕ್ಕಳು ಪೋಷಕರ ವಶಕ್ಕೆ ವಹಿಸಿ ಸಂಸ್ಥೆಯಿಂದ ಬಿಡುಗಡೆ ಹೊಂದಿರುತ್ತಾರೆ, ಶುಭೋದಯ ಸ್ವಯಂ ಸೇವಾ ಸಂಸ್ಥೆಯಲ್ಲಿ ಒಟ್ಟು 49 ಮಹಿಳೆಯರು ಮತ್ತು 9 ಮಕ್ಕಳು ದಾಖಲಾಗಿದ್ದು ಈ ಪೈಕಿ 23 ಮಹಿಳೆಯರು ಪತಿ ಮತ್ತು ಪೋಷಕರ ವಶಕ್ಕೆ 07 ಜನ ಸ್ವಾವಲಂಬಿಗಳಾಗಿ ಹಾಗೂ 03 ಮಕ್ಕಳ ತಾಯಿತಯ ವಶಕ್ಕೆ ವಹಿಸಿ ಬಿಡುಗಡೆ ಹೊಂದಿರುತ್ತಾರೆ. ಪುನರ್ವಸತಿಗಾಗಿ ಟೈಲರಿಂಗ್, ಬ್ಯುಟೀಷಿಯನ್, ಬ್ಯಾಗ್ ತಯಾರಿಕೆ, ಎಂಬ್ರಾಯಡರಿ, ಇತರೆ ತರಬೇತಿ ನೀಡಲಾಗುತ್ತಿದೆ ಎಂದರು.
ಜಿಲ್ಲಾಧಿಕಾರಿಗಳು, ಸಿಇಓ ಹಾಗೂ ಎಸ್ಪಿಯರೊಂದಿಗೆ ಸ್ವಾಧಾರ ಗೃಹಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು.
ಇದೇ ವೇಳೆ ಬಾಲ್ಯ ವಿವಾಹ ತಡೆಗೆ ಸಂಬಂಧಿಸಿದ ಕೈಪಿಡಿಯನ್ನು ಜಿಲ್ಲಾಧಿಕಾರಿ, ಜಿ.ಪಂ ಸಿಇಓ ಸೇರಿದಂತೆ ಅಧಿಕಾರಿಗಳು ಬಿಡುಗಡೆ ಮಾಡಿದರು.
ಸಭೆಯಲ್ಲಿ ಡಿವೈಎಸ್ಪಿ ಬಿ.ಎಸ್.ಬಸವರಾಜ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕೆ.ಸಿ.ಬಸವರಾಜಯ್ಯ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಲೋಕೇಶ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಗಂಗಾಧರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಕೌಸರ್ ರೇಷ್ಮಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಸುಶೃತ ಡಿ.ಶಾಸ್ತ್ರಿ, ಶಿಕ್ಷಣ ಇಲಾಖೆ ಇಓ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂರಕ್ಷಣಾಧಿಕಾರಿಗಳಾದ ಪೂರ್ಣಿಮಾ, ಸುಶೀಲಮ್ಮ, ಮಕ್ಕಳ ಸಹಾಯವಾಣಿಯ ಕೊಟ್ರೇಶ್, ವಿವಿಧ ಎನ್ಜಿಓ ಗಳ ಪದಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳ ಅಧಿಕಾರಿ/ಸಿಬ್ಬಂದಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.
ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.
COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.
ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.
‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.
ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.
ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.
ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;
1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.
ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.
ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ತನಿಖಾ ವರದಿನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷö್ಯ ತೋರಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇಲ್ಲಿನ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿನ ಬುಡಕಟ್ಟು ಸಮುದಾಯಗಳ ಪ್ರಗತಿಗೆ ಸಂಬAಧಿಸಿದAತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರೂ. 695 ಲಕ್ಷ ರೂಪಾಯಿಗಳನ್ನು ಸರ್ಕಾರ ಬಿಡುಗಡೆ ಮಾಡಿರುತ್ತದೆ. ಸದರಿ ಅನುದಾನದ ಖರ್ಚು-ವೆಚ್ಚದಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಅಕ್ರಮಗಳು ನಡೆದಿರುವ ಅಧಿಕೃತ ದಾಖಲೆಗಳನ್ನು ಲಗತ್ತಿಸಿ ಇಲಾಖಾ ತನಿಖೆ ನಡೆಸುವಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರಿಗೆ ದಿನಾಂಕ: 27-04-2026 ರಂದು ದೂರು ನೀಡಲಾಗಿತ್ತು.
ಆದರೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಸಾರ್ವಜನಿಕ ಹಿತಾಸಕ್ತಿ ಕೇಂದ್ರಿತ ದೂರು ಅರ್ಜಿಗೆ ಸಂಬಂಧಿಸಿದಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡಿರುವುದಿಲ್ಲ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


