Connect with us

ದಿನದ ಸುದ್ದಿ

ಖ್ಯಾತ ಸಮಾಜವಾದಿ ಚಿಂತಕ ಡಿ.ಎಸ್.ನಾಗಭೂಷಣ ನಿಧನ ; ಒಡನಾಡಿಗಳ ನುಡಿ ನಮನ

Published

on

ಸುದ್ದಿದಿನ ಡೆಸ್ಕ್ : ಖ್ಯಾತ ಸಮಾಜವಾದಿ ಚಿಂತಕ, ಬರಹಗಾರ , ವಿಮರ್ಶಕ, “ಗಾಂಧಿ ಕಥನ” ದ ಕರ್ತೃ ಡಿ.ಎಸ್.ನಾಗಭೂಷಣ (70) ಅವರು ಶಿವಮೊಗ್ಗದಲ್ಲಿ ರಾತ್ರಿ ನಿಧನರಾಗಿದ್ದಾರೆ. ಅಂತ್ಯಕ್ರಿಯೆ ಇಂದು, ಮೇ 19 ರ ಸಂಜೆ 5 ಗಂಟೆಗೆ ಶಿವಮೊಗ್ಗದ ವಿದ್ಯಾನಗರದ ರೋಟರಿ ಚಿತಾಗಾರದಲ್ಲಿ ನಡೆಯಲಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಿ.ಎಸ್.ನಾಗಭೂಷಣ ಅವರ ಒಡನಾಡಿಗಳಾದ, ಶ್ರೀಪಾದ್ ಯ, ದಿನೇಶ್ ಅಮೀನ್ ಮಟ್ಟು, ರಾಘವೇಂದ್ರ, ಸಾಗರ ಸೇರಿದಂತೆ ಹಲವು ನುಡಿ ನಮನ ಸಲ್ಲಿಸಿದ್ದಾರೆ.


  • ಶ್ರೀಪಾದ್ ಭಟ್, ಚಿಂತಕರು

ಡಿ. ಎಸ್. ನಾಗಭೂಷಣ ನಿಧನರಾಗಿದ್ದಾರೆ. ಕಳೆದ ಕೆಲ ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಡಿ. ಎಸ್. ಎನ್ ಜೊತೆಗೆ ಚರ್ಚೆ, ಸಂವಾದ ಜಗಳ ಸಾಮಾನ್ಯ ಸಂಗತಿಯಾಗಿತ್ತು. ಅವರು ಸಿಕ್ಕಾಗಲೆಲ್ಲ ಸಣ್ಣ ಮಟ್ಟದ ವಾದ ಮಾಡದೇ ಹೋದರೆ ನನಗೆ ಭಣ ಭಣ ಎನಿಸುತ್ತಿತ್ತು. ಆದರೆ ಅವರನ್ನು ಭೇಟಿಯಾಗಿ ಅನೇಕ ವರ್ಷಗಳಾಗಿದ್ದವು.

ಎಪ್ಪತ್ತರ ದಶಕದ ನಮ್ಮ ಬಾಲ್ಯದ ದಿನಗಳಲ್ಲಿ
ಆಕಾಶವಾಣಿಯಲ್ಲಿದ್ದ ಡಿ. ಎಸ್. ಎನ್ ಓದುತ್ತಿದ್ದ ಪ್ರದೇಶ ಸಮಾಚಾರ ಜನಪ್ರಿಯವಾಗಿತ್ತು. ಹಾಗೆಯೇ ಲೋಹಿಯಾ, ಕುವೆಂಪು, ಜಿಎಸ್ ಎಸ್, ಗಾಂಧಿ ಕುರಿತ ಅವರ ಆಳವಾದ ಓದು, ಗ್ರಹಿಕೆ ಮತ್ತು ವಿಚಾರ ಮಂಡನೆ ಬೆರಗುಗೊಳಿಸುತ್ತಿತ್ತು. ಪ್ರತಿಭಾವಂತ ಲೇಖಕ. ವಸ್ತುನಿಷ್ಠವಾಗಿ ಬರೆಯುವುದು ಹೇಗೆ ಎಂಬುದಕ್ಕೆ ಉತ್ತಮ ಉದಾಹರಣೆ ಡಿ. ಎಸ್. ಎನ್
he is one of the best reader.

1990ರಲ್ಲಿ ದೇವನೂರ ಮಹಾದೇವ ಅವರ ‘ಕುಸುಮ ಬಾಲೆ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದ ನೆಪದಲ್ಲಿ ಲೇಖಕರಿಗೆ ತುಮಕೂರಿನಲ್ಲಿ ಒಂದು ಅಭಿನಂದನೆ, ಚರ್ಚೆ ಗೋಷ್ಠಿಯಿತ್ತು. ನಾನು ಮೊದಲ ಬಾರಿಗೆ ಡಿ. ಎಸ್. ಎನ್ ರನ್ನು ಮಾತನಾಡಿಸಿದ್ದು ಅಲ್ಲಿ. ಆ ಸಮಾರಂಭಕ್ಕೆ ಬರಲು ಒಪ್ಪಿಕೊಂಡು ನಂತರ ಕೈ ಕೊಟ್ಟ ಲಂಕೇಶ್ ರನ್ನು ಶರ್ಟಿನ ತೋಳು ಮೇಲೇರಿಸಿಕೊಳ್ಳುತ್ತಾ ಟೀಕಿಸುತ್ತಿದ್ದ ಆ ದೃಶ್ಯ ನಿನ್ನೆ, ಮೊನ್ನೆ ನಡೆದಂತಿದೆ.

ಆದರೆ ತಮ್ಮ ಪ್ರತಿಭೆಯನ್ನು ಒರೆಗೆ ಹಚ್ಚುವ ಸಂದರ್ಭದಲ್ಲಿ ಚಂಡಿ ಹಿಡಿದು ಹಠದಿಂದ ವರ್ತಿಸುವ ಅವರ ಇನ್ನೊಂದು ಮುಖ ಅನೇಕ ಸಂದರ್ಭಗಳಲ್ಲಿ ಎದುರುಗಿರುವವರನ್ನು ಪರಚುತ್ತಿತ್ತು, ಗಾಯಗೊಳಿಸುತ್ತಿತ್ತು.
ತನ್ನದೇ ಸತ್ಯ ಎಂಬ ಧೋರಣೆ ಜಗಳಗಳಿಗೆ ಕಾರಣವಾಗಿದ್ದು ಲೆಕ್ಕವೇ ಇಲ್ಲ.

ನಾವು ಸ್ನೇಹಿತರು ‘ಇದೊಂದು ವಿಷಯದಲ್ಲಿ ಡಿ.ಎಸ್.ಎನ್ ಪ್ರಬುದ್ದರಾಗಿದ್ದರೆ ಎಷ್ಟು ಚಂದ’ ಎಂದು ಬೇಸರಿಸಿಕೊಳ್ಳುವುದು ಸಾಮಾನ್ಯವಾಗಿತ್ತು. ಆದರೆ ಬದುಕು ಹಾಗೆಲ್ಲಾ ಚೆಂದವಾಗಿ ಇರಲು ಬಿಡುವುದಿಲ್ಲ. ಡಿ. ಎಸ್. ಎನ್ ರವರಿಗೆ ಈ ಫೋಟೋ ತೋರಿಸಿ ಹೀಗೆ ಇರಬೇಕಿತ್ತು ಸರ್ ನೀವು ಎಂದು ಎಷ್ಟೋ ಬಾರಿ ಹೇಳಬೇಕೆಂದುಕೊಂಡಿದ್ದೆ. ಹೇಳಲಿಲ್ಲ. ತಮ್ಮ ಬದುಕಿನ ಪಯಣ ಮುಗಿಸಿ ಎದ್ದು ನಡೆದ ಡಿ. ಎಸ್. ಎನ್ ಗೆ ನಮನಗಳು.


  • ದಿನೇಶ್ ಅಮೀನ್ ಮಟ್ಟು, ಹಿರಿಯ ಪತ್ರಕರ್ತರು

ನೇರ, ನಿಷ್ಠುರ , ಪ್ರಾಮಾಣಿಕ, ಜಾತ್ಯತೀತ, ಸಿದ್ದಾಂತ ಬದ್ದ…ಎಂಬೀತ್ಯಾದಿ ವಿಶೇಷಣಗಳನ್ನು ಅಳುಕಿಲ್ಲದೆ ಬಳಸಲು ಸಾಧ್ಯವಿರುವ ನಮ್ಮ ನಡುವಿನ ಒಂದು ಕೈಬೆರಳೆಣಿಕೆಯ ವ್ಯಕ್ತಿಗಳಲ್ಲಿ ಡಿ.ಎಸ್.ನಾಗಭೂಷಣ್ ಒಬ್ಬರಾಗಿದ್ದರು.

ತರಗತಿಗಳಲ್ಲಿ ಎಂದೂ ಪಾಠ ಮಾಡದೆ ಇದ್ದರೂ ನನ್ನಂತಹ ಸಾವಿರಾರು ಕಿರಿಯರಿಗೆ ಅವರು ಬದುಕಿನ ಶಾಲೆಯ ಮೇಷ್ಟ್ರು ಆಗಿದ್ದರು. ಅವರ ಪ್ರತಿಯೊಂದು ಜಗಳ,‌ ಮುನಿಸುಗಳಲ್ಲಿ ಕಲಿಯುವ ಪಾಠ ಇತ್ತು.

ಹೆಚ್ಚು ಪರಿಚಯವೇ ಇಲ್ಲದ ದಿನಗಳಲ್ಲಿ ಅಂದರೆ ಸುಮಾರು ಹದಿನೈದು ವರ್ಷಗಳ ಹಿಂದೆ ನಾನು ದೆಹಲಿಯಲ್ಲಿದ್ದಾಗ ನನಗೆ ಪೋನ್ ಮಾಡಿ ಅವರ‌ ಪುಸ್ತಕಕ್ಕೆ ಬೆನ್ನುಡಿ ಬರೆಸಿದ್ದರು. ಅವರ ಕೋರಿಕೆಯನ್ನು ಕೇಳಿದಾಗಲೇ ಆಘಾತಕ್ಕೀಡಾಗಿದ್ದ ನಾನು ಒಲ್ಲೆ‌ ಎಂದಾಗ ಗದರಿಸಿ ಬರೆಸಿದ್ದರು.

ಅದರ ನಂತರ ನಿರಂತರವಾಗಿ ನನ್ನ ಮತ್ತು ಅವರ ನಡುವೆ ಸಣ್ಣ ಪುಟ್ಟ ಜಗಳಗಳು ನಡೆಯುತ್ತಲೇ ಇತ್ತು. ಇದೇ ವೇಳೆ ಅವರ ‘ಆದೇಶ’ಗಳನ್ನು ಗಳನ್ನು ನಾನು ವಿಧೇಯನಾಗಿ ಪಾಲಿಸುತ್ತಲೇ ಹೋಗುತ್ತಿದ್ದೆ.

ದೆಹಲಿಯಿಂದ ಬಂದ ನಂತರ ಬಹುಷ: ನಾನು ಭಾಗವಹಿಸಿದ್ದ ಮೊದಲ ಕಾರ್ಯಕ್ರಮ ಅವರೇ ಕುಪ್ಪಳ್ಳಿಯಲ್ಲಿ ಆಯೋಜಿಸಿದ್ದ ಸಮಾಜವಾದಿ ಶಿಬಿರ ಆಗಿತ್ತು.

ಹೊಸಮನುಷ್ಯ ಪತ್ರಿಕೆಗೆ ಮೂರೋ ನಾಲ್ಕೋ ದೀರ್ಘ ಲೇಖನಗಳನ್ನು ಬರೆಸಿದ್ದರು. ಅವರೇ ಏರ್ಪಡಿಸುತ್ತಿದ್ದ ಕಾರ್ಯಕ್ರಮಗಳಿಗೆ ಕರೆಸಿ‌ ಮಾತನಾಡಿಸುತ್ತಿದ್ದರು. ಅವುಗಳೆಲ್ಲ ಅವರು ನೀಡುತ್ತಿದ್ದ ‘ಆದೇಶ’ಗಳೇ ಆಗಿರುತ್ತಿದ್ದವು. ವಿಧೇಯ ಶಿಷ್ಯನ ರೀತಿ ನಾನು ತಲೆಯಾಡಿಸುತ್ತಿದ್ದೆ. ನನ್ನೊಳಗೆ ಅವರ ಬಗ್ಗೆ ಇದ್ದ ಗೌರವ ಇದಕ್ಕೆ ಕಾರಣ.

ಅಪ್ಪಟ ಲೋಹಿಯಾವಾದಿಯಾಗಿದ್ದ ಡಿಎಸ್ ಎನ್ ಕೇವಲ ಭಾಷಣ ಮಾಡಿಲ್ಲ, ಬರೆದು ಸಾಲು ಸಾಲು ಪುಸ್ತಕಗಳನ್ನು ಪ್ರಕಟಿಸಿದ್ದರು.‌ ಅವೆಲ್ಲವೂ ಲೋಹಿಯಾವಾದ ಪಾಠಕ್ಕೆ ಪಠ್ಯಗಳಂತಿವೆ.

ಲೋಹಿಯಾ ಅವರಂತೆ ಕೊನೆಯ ವರೆಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಭಿನ್ನಾಭಿಪ್ರಾಯ ಮತ್ತು ಅಂತರ ಇಟ್ಟುಕೊಂಡೇ ಬದುಕಿದರು. ಇದೇ ಕಾರಣದಿಂದಾಗಿ ಇತ್ತೀಚಿನ ವರೆಗೆ ಬಿಜೆಪಿಯನ್ನು ವಿರೋಧಿಸಬೇಕಾಗಿರುವಷ್ಟು ವಿರೋಧಿಸುತ್ತಿರಲಿಲ್ಲ.

ನಾನು ಮುಖ್ಯಮಂತ್ರಿ ಕಚೇರಿ ಸೇರಿದ ನಂತರ ಉದ್ದೇಶಪೂರ್ವಕವಾಗಿ ನನ್ನೊಡನೆ ಕಾಂಗ್ರೆಸ್ ಬಗ್ಗೆ ಕಟುವಾಗಿ ಮಾತನಾಡುತ್ತಿದ್ದರು. ನಾನು ಅಷ್ಟೇ ಕಟುವಾಗಿ ಬಿಜೆಪಿ, ಆರ್ ಎಸ್ ಎಸ್ ಗಳನ್ನು ಟೀಕಿಸುತ್ತಿದ್ದೆ. ನಮ್ಮ ನಡುವಿನ ಬಹುತೇಕ ಕೋಳಿಜಗಳಗಳಿಗೆ ಇದೇ ಕಾರಣವಾಗಿರುತ್ತಿತ್ತು. ಇತ್ತೀಚಿನ ದಿನಗಳಲ್ಲಿ ಈ ವಿಷಯದ ಚರ್ಚೆಗಳನ್ನು ನಡೆಸುತ್ತಿರಲಿಲ್ಲ.

ಹಣಕಾಸಿನ ವ್ಯವಹಾರದಲ್ಲಿ ಅವರಷ್ಟು ಪ್ರಾಮಾಣಿಕ, ನಿಷ್ಠುರರ ವ್ಯಕ್ತಿಗಳನ್ನೇ ನಾನು ಕಂಡಿಲ್ಲ, ಬಹುಷ: ಕಾಣಲು ಸಾಧ್ಯವೇ ಇಲ್ಲವೇನೋ? ಹೊಸ‌ಮನುಷ್ಯ ವಿಶೇಷಾಂಕಕ್ಕೆ ಲೇಖನಗಳನ್ನು ಬರೆದಾಗ ತಪ್ಪದೆ ಸಂಭಾವನೆ ಕೊಡುತ್ತಿದ್ದರು. ವಿಶೇಷಾಂಕಕ್ಕೆ ಜಾಹೀರಾತಿನಿಂದ ಬಂದಿರುವ ಹಣ ಮತ್ತು ಖರ್ಚಾಗಿರುವ ಹಣವನ್ನು ಲೆಕ್ಕ‌‌ಮಾಡಿ ಲೇಖಕರಿಗೆ ಹಂಚುತ್ತಿದ್ದರು.

‘ಸಾರ್, ಪತ್ರಿಕೆ ನಡೆಸುವುದು ಕಷ್ಟ ಇದೆ, ಉಳಿದ ಹಣ ಇಟ್ಕೊಳ್ಳಿ’ ಎಂದರೆ ಒಪ್ಪುತ್ತಿರಲಿಲ್ಲ. ಕೊನೆಗೆ ಪುಸ್ತಕ ಕಳಿಸಿ ಎಂದು ಹೇಳಿದಾಗ‌ ಲೆಕ್ಕಹಾಕಿ ಅಷ್ಟೇ ಬೆಲೆಯ ಪುಸ್ತಕ ಕಳಿಸಿದ್ದರು. ಇಂತಹ ನಿಷ್ಠುರ ಪ್ರಾಮಾಣಿಕತೆಯನ್ನು ಸಣ್ಣ ಪತ್ರಿಕೆಗಳು ಬಿಡಿ ದೊಡ್ಡ ಪತ್ರಿಕೆಗಳಿಂದಲೂ ನಿರೀಕ್ಷಿಸಲು ಸಾಧ್ಯ ಇಲ್ಲ.

ನಾಗಭೂಷಣ್ ಅವರಿಂದ ಕಲಿಯಬೇಕಾದ ಹಲವಾರು ಪಾಠಗಳಿವೆ, ಅವುಗಳಲ್ಲಿ ಎಂದೂ ಬತ್ತಿಹೋಗದ ಹಾಗೆ ಕಾಪಿಟ್ಟುಕೊಂಡ ಬಂದಿದ್ದ ಅವರ ಜೀವನೋತ್ಸಾಹವೂ ಒಂದು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರೂ ಅದೆಂದೂ ಅವರ ಓದು-ಬರವಣಿಗೆಗಳಿಗೆ ಅಡ್ಡಿಯಾಗಿರಲಿಲ್ಲ.

ನಾಗಭೂಷಣ್ ಅವರ ಬದುಕಿನ ಯಶಸ್ಸಿನಲ್ಲಿ
ಈ ಕಪ್ಪು ಹುಡುಗನ ಪ್ರೀತಿಗೆ ಬಿದ್ದು ಕೊನೆಯ ವರೆಗೂ ಅದನ್ನು ನಿಭಾಯಿಸಿದ ಸವಿತಾ ನಾಗಭೂಷಣ್ ಪಾತ್ರ ದೊಡ್ಡದು. ಗಂಡನ‌ ಆರೈಕೆಗಾಗಿ ಸ್ವಯಂನಿವೃತ್ತಿ ಪಡೆದು ತಾಯಿಯಂತೆ ಸಲಹಿದ್ದಾರೆ. ಒಂದು ರೀತಿಯಲ್ಲಿ ಇಬ್ಬರೂ ಪರಸ್ಪರರಿಗೆ ಮಕ್ಕಳಂತಿದ್ದರು. ಅನಿವಾರ್ಯವಾದ ಅಗಲಿಕೆಯ ದಿನಗಳಲ್ಲಿ ಹೇಗೆ ಬದುಕಬೇಕೆಂಬುದನ್ನು ನಾಗಭೂಷಣ್ ಖಂಡಿತ ಹೇಳಿಕೊಟ್ಟು ಹೋಗಿರುತ್ತಾರೆ, ಹಾಗೆಯೇ ಅವರು ಬದುಕಲಿ, ನಾಗಭೂಷಣ್ ಅವರನ್ನು ಪ್ರೀತಿಸುವವರೆಲ್ಲರೂ ಸವಿತಾ ಅವರ ಜೊತೆಯಲ್ಲಿಯೂ ಇರುತ್ತಾರೆ.

ನಾಲ್ಕು ದಿಕ್ಕುಗಳಿಂದಲೂ ನಿರಾಶೆ ,ಹತಾಶೆ, ಸೋಲುಗಳ ಕಾರ್ಮೋಡ ಆವರಿಸಿಕೊಳ್ಳುತ್ತಿರುವ ಇಂದಿನ ದಿನಗಳಲ್ಲಿ ನಾವೆಲ್ಲರೂ ಡಿಎಸ್ ಎನ್ ಅವರ ನಿಷ್ಠುರತೆ, ಪ್ರಾಮಾಣಿಕತೆ, ಬದ್ಧತೆಯ ಜೊತೆಗೆ ಒಂದೆರಡು ಬೊಗಸೆ ಅವರಲ್ಲಿದ್ದ ಜೀವನೋತ್ಸಾಹವನ್ನು ಪಡೆದುಕೊಳ್ಳಲು ಸಾಧ್ಯವಾದರೆ ನಮ್ಮ ಬದುಕು ಅರ್ಥಪೂರ್ಣವಾದೀತು,‌ ಅವರ ಹಾಗೆ.

ಪ್ರೀತಿಯ ಮೇಸ್ಟ್ರೇ, ನಿಮ್ಮೆಲ್ಲ ಪ್ರೀತಿ,‌ ಜಗಳ, ಕಾಳಜಿ, ನಂಬಿಕೆಗಳನ್ನು ಸದಾ ನೆನಪಲ್ಲಿಟ್ಟುಕೊಳ್ಳುವೆ. ಬದುಕು ಹೇಗಿರಬೇಕೆನ್ನುವುದನ್ನು ಬದುಕಿ ತೋರಿಸಿದ್ದೀರಿ.

ನಿಮಗೆ ಗೌರವಾದರದ ವಿದಾಯ…


  • ಎಂ ರಾಘವೇಂದ್ರ, ಪತ್ರಕರ್ತರು, ಸಾಗರ

ಬಿಟ್ಟು ಹೋಗಿರುವ ಆಸ್ತಿ ಕರಗುವುದಿಲ್ಲ…
( ಈ ಕ್ಷಣಕ್ಕೆ ಸಿಕ್ಕಿರುವವು ಇವು ಇನ್ನೂ ಸುಮಾರಿವೆ. )
ಹಿರಿಯ ಲೇಖಕರು,ಸಮಾಜವಾದಿ ಚಿಂತಕ ಡಿ.ಎಸ್.ನಾಗಭೂಷಣ ಅವರು ನಮ್ಮನ್ನು ಅಗಲಿದ್ದಾರೆ.ಅವರ ಗಾಂಧಿ ಕಥನ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭ್ಯವಾಗಿದೆ.ನೇರ ನಡೆ,ನುಡಿ,ನಿಷ್ಠುರ ವ್ಯಕ್ತಿ ತ್ವದ ಡಿಎಸ್ ಎನ್ ಸಾರ್ವಜನಿಕ ಬದುಕಿನಲ್ಲಿ ತೋರಬೇಕಾದ ಬದ್ದತೆ,ಪ್ರಾಮಾಣಿಕತೆಗೆ ಮಾದರಿಯಾಗಿದ್ದರು.

ಸಾಹಿತ್ಯ, ಸಂಸ್ಕೃತಿ,ಕಲೆ,ರಾಜಕೀಯದ ಕುರಿತು ಅಪಾರವಾದ ತಿಳವಳಿಕೆ,ಪಾಂಡಿತ್ಯ ಹೊಂದಿದ್ದ ನಾಗಭೂಷಣ್ ಸಮಕಾಲೀನ ವಿದ್ಯಮಾನಗಳಿಗೆ ಪ್ರತಿಕ್ರಿಯಿಸುತ್ತಿದ್ದ ರೀತಿ ವಿಶಿಷ್ಟವಾಗಿತ್ತು.
ಲೋಹಿಯಾರ ವಿಚಾರಧಾರೆಗಳಿಂದ ಪ್ರಭಾವಿತರಾಗಿದ್ದ ಅವರು ಈಚೀನ ವರ್ಷಗಳಲ್ಲಿ ಗಾಂಧೀವಾದದ ಕಡೆ ಹೆಚ್ಚು ಒಲವು ತೋರಿದ್ದರು.ಜಾಗತೀಕರಣ ತಂದಿರುವ ವಿಸ್ಮೃತಿಗಳನ್ನು ಎದುರಿಸಲು ಗಾಂಧೀ ಪ್ರತಿಪಾದಿಸಿದ ಸರಳ,ಸಭ್ಯ ,ಕಡಿಮೆ ಅವಶ್ಯಕತೆಗಳ ಬದುಕು ನಮ್ಮದಾಗಬೇಕು ಎಂದು ಬಯಸಿದ್ದರು.

ಪ್ರತಿವರ್ಷ ಅಕ್ಟೋಬರ್ ನಲ್ಲಿ ಲೋಹಿಯಾ ಪ್ರತಿಷ್ಠಾನದ ಮೂಲಕ ಕುಪ್ಪಳ್ಳಿಯಲ್ಲಿ ಅವರು ಆಯೋಜಿಸುತ್ತಿದ್ದ ಸಮಾಜವಾದಿ ಅಧ್ಯಯನ ಶಿಬಿರದ ಮೂಲಕ ಯುವಜನರಲ್ಲಿ ಗಾಂಧಿ,ಲೋಹಿಯಾ.ಅಂಬೇಡ್ಕರ್, ಜೆ.ಪಿ.ಚಿಂತನೆಯನ್ನು ತಲುಪಿಸಲು ಉತ್ಸುಕರಾಗಿದ್ದರು.ಮೇಲ್ನೋಟಕ್ಕೆ ಒರಟು ಸ್ವಭಾವದವರಂತೆ ಕಾಣುತ್ತಿದ್ದ ಡಿಎಸ್ ಎನ್ ಆಳದಲ್ಲಿ ಮಾನವೀಯ ಮೌಲ್ಯಗಳ ಪ್ರತಿಪಾದಕರಾಗಿದ್ದರು. ಬಲಪಂಥೀಯ ರಾಜಕಾರಣದ ದೋಷಗಳನ್ನು ಗುರುತಿಸಿ ಟೀಕಿಸುವಷ್ಟೆ ಪ್ರಖರತೆಯನ್ನು ಕಾಂಗ್ರೆಸ್ ನ ಓಲೈಕೆ ರಾಜಕಾರಣದ ಕುರಿತೂ ತೋರುತ್ತಿದ್ದರು.
ನಾಗಭೂಷಣ್ ರ ಎಲ್ಲ ಸಮಾಜಮುಖಿ ಕೆಲಸಗಳ ಹಿಂದೆ ಗಟ್ಟಿಯಾಗಿ ನಿಂತವರು ಅವರ ಪತ್ನಿ ಕವಯತ್ರಿ ಸವಿತಾ ನಾಗಭೂಷಣ. ಈ ಹೊತ್ತಿನಲ್ಲಿ ನಾವು ಸವಿತಾ ಅವರ ಜೊತೆ ನಿಲ್ಲಬೇಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending