ದಿನದ ಸುದ್ದಿ
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲರನ್ನು ಅವಹೇಳಿಸಿ ಶೂ ಖರೀದಿಸಲು ಹಣ ಕಳಿಸಿದ ಇಂಜಿನಿಯರ್ ಗೆ ಅವರು ಕೊಟ್ಟ ಉತ್ತರ..! : ಮಿಸ್ ಮಾಡ್ದೆ ಓದಿ
- ಮೂಲ : ಮಲಯಾಳ, ಕನ್ನಡಕ್ಕೆ: ರಶೀದ್ ಅಬ್ದುಲ್ ಹಮೀದ್ (HA ) ಕಕ್ಕಿಂಜೆ
ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲರನ್ನು ಅವಹೇಳಿಸಿ ಅವರಿಗೆ ಶೂ ಖರೀದಿಸಲು 364 ರೂ ಕಳಿಸಿ ಫೇಸ್ಬುಕ್ ಪೋಸ್ಟ್ ಮಾಡಿದ ಇಂಜಿನಿಯರ್ ಗೆ ಕೇಜ್ರಿವಾಲರು ನೀಡಿದ ಉತ್ತರ.
ಪ್ರಿಯ ಇಂಜಿನಿಯರ್ ಗೆಳೆಯಾ,
“ತಾವು ಕಳಿಸಿದ ಹಣ ತಲುಪಿದೆ. ಅದರಲ್ಲಿ ಒಂದು ಜೊತೆ ಶೂ ಖರೀದಿಸಿದೆ. ನಿಮಗೆ ತಿಳಿದಿರುವ ಹಾಗೆ ನಮ್ಮ ರೂಪಾಯಿ ಮೌಲ್ಯವು ಪಾತಾಳಕ್ಕೆ ಇಳಿದಿರುವೂದರಿಂದ 364 ರುಪಾಯಿಗೆ ಅಷ್ಟೇನೂ ಉತ್ತಮ ಶೂ ಸಿಗಲಿಲ್ಲ. ನಾನು ಆಫೀಸಿಗೆ ಶೂ ಉಪಯೋಗಿಸುವುದಿಲ್ಲ. ಹಾಗಾಗಿ ಬೆಳಗ್ಗೆ ಜಾಗಿಂಗ್ ಹೋಗುವಾಗ ಇದನ್ನು ಉಪಯೋಗಿಸುವೆ. ನಿಮ್ಮ ಸಹೃದಯಿ ಮನಸ್ಸಿಗೆ ಕೃತಜ್ಞತೆಗಳು.
ನಿಮ್ಮಂತಹ ರಾಷ್ಟ್ರದ ಬಗ್ಗೆ ಚಿಂತಿಸುವ ಯುವಜನತೆ ನಮ್ಮ ರಾಷ್ಟ್ರದ ಬಲು ದೊಡ್ಡ ಶಕ್ತಿ ಎಂಬುದರಲ್ಲಿ ಎರಡು ಮಾತಿಲ್ಲ. ಆದರೂ ನಮ್ಮ ರಾಷ್ಟ್ರದ ಪ್ರಧಾನಿ ವಿದೇಶಗಳಿಗೆ ತೆರಳಿ ಭಾರತದಲ್ಲಿ ಜನಿಸಿದ್ದು ಕೂಡ ಅಪಮಾನವಾಯಿತು ಎನ್ನುವಂತಹ ಮಾತುಗಳನ್ನು ಆಡುವುದು, ರಾಷ್ಟ್ರ ಗೀತೆಗೆ ಗೌರವ ಸಲ್ಲಿಸದೆ ನಡೆಯುವುದು, ಹೆಮ್ಮೆಯ ಬಾವುಟದ ಮೇಲೆ ಸಹಿ ಹಾಕುವುದನ್ನು ನೋಡಿಯೂ ನೋಡದಂತೆ ನಟಿಸಬಾರದು.
ಒಬ್ಬ ಮುಖ್ಯಮಂತ್ರಿಯ ಚಪ್ಪಲನ್ನು ಗುರುತು ಮಾಡಿದ ತಾವು 40.36% ಇರುವ ನಿರ್ಗತಿಕ ಮತ್ತು, ‘ಭಾರತದ ಸ್ವರ್ಗ’ ಎಂದು ಬಿಂಬಿಸುವ ಗುಜರಾತಿನಲ್ಲಿ ಕೂಡ 62.78 % ಜನರು ತಮ್ಮ ಪ್ರಾಥಮಿಕ ಕಾರ್ಯಗಳನ್ನು ಬಯಲು ಪ್ರದೇಶದಲ್ಲಿ ಮಾಡುವುದು, ದೈನಂದಿನ ಒಂದು ಹೊತ್ತಿನ ತುತ್ತಿಗಾಗಿ ಕೃಷಿಕರು ಆತ್ಮಹತ್ಯೆ ಮಾಡಿಕೊಳ್ಳುವುದು, ಭ್ರಷ್ಟಾಚಾರ ದಿನನಿತ್ಯ ನಡೆಯುವುದು, ಜಾತಿ ಮತದ ಹೆಸರಲ್ಲಿ ತಮ್ಮೊಳಗೆ ಜಗಳ ತಂದಿಕ್ಕಿ ISIS ನಂತಹ ಸಂಘಟನೆಗಳು ಮೊಳಕೆಯೊಡೆಯುವುದು, ಜೀವಿಸಲು ಅತ್ಯಗತ್ಯ ಸಾಮಾನುಗಳ ಬೆಲೆ ಗಗನಕ್ಕೆ ಏರುವುದು ಮಾತ್ರವಲ್ಲ ಸೈನಿಕರು ಸಾವನ್ನಪ್ಪುವುದು ಕಂಡಿಲ್ಲ ಎಂಬಂತೆ ತಾವು ನಟಿಸಬಾರದು.
ನಿಮಗಿದು ಗೊತ್ತೇ ?? ನಾನು ಕೂಡ ಒಬ್ಬ ಇಂಜಿನಿಯರ್ ನ ಮಗನಾಗಿದ್ದೇನೆ, ಅಲ್ಲದೆ IIT ಯವನೂ ಅಲ್ಲದೆ IRS, ಮತ್ತು ಒಬ್ಬ ಆದಾಯ ತೆರಿಗೆ ಉದ್ಯೋಗಸ್ತೆಯ ಪತಿಯಾಗಿದ್ದೇನೆ, ಆರ್ಥಿಕವಾಗಿ ಒಂದು ಉತ್ತಮ ಕುಟುಂಬ, ಆದರೂ ವಿದ್ಯಾಬ್ಯಾಸದಲ್ಲಿ ಮತ್ತು ಉದ್ಯೋಗದಲ್ಲಿ ನಾನು ಒಮ್ಮೆಯೂ ನಮ್ಮ ರಾಜಕೀಯ ನೇತಾರರನ್ನು ಅವರ ವೇಷದಲ್ಲಿ ಅಲ್ಲ ಅವರು ಮಾಡುವ ಕೆಲಸದಲ್ಲಿ ಗಮನ ನೀಡಿದವನಾಗಿದ್ದೇನೆ. ಇಂದಿರಾ ಗಾಂಧಿಯವರ ಬಿಳಿ ಕೂದಲೊ ದೇವೇಗೌಡರ ಕೂದಲಿಲ್ಲದ ತಲೆಯೋ ನನ್ನ ಗಮನಕ್ಕೆ ಬಂದಿಲ್ಲ, ಅಲ್ಲದೆ ಅವರು ನೇತಾರರಾಗಿರುವ ಸಮಯದಲ್ಲಿ ನಮ್ಮ ರಾಷ್ಟ್ರದ ಜನಜೀವನ ರೀತಿ ಹೇಗಿದೆ ಎಂಬುದರಲ್ಲಾಗಿತ್ತು ನನ್ನ ಗಮನ ಮತ್ತು ನೋಟ.
ಭಿಕ್ಷೆ ಬೇಡುವ ಮಕ್ಕಳು, ಅವರ ಪಾಲನೆಗಾಗಿ ಶರೀರ ಮಾರುವ ತಾಯಂದಿರು, ಆದಾಗ್ಯೂ ಬಡತನ ತಡೆಯಲಾರದೆ ಆತ್ಮಹತ್ಯೆ ನಡೆಸುವ ತಂದೆಯಂದಿರು, ನಮ್ಮ ದೇಶದ ಈ ವ್ಯವಸ್ಥೆಯಾಗಿದೆ ಬಲು ದೊಡ್ಡ ಅವಮಾನ ಎಂದು ಹೇಳಲು ನನಗೆ ನಿರಾಶೆ ಇದೆ. ಇದಕ್ಕೊಂದು ಪರಿಹಾರ ಕಂಡುಕೊಳ್ಳಬೇಕು ಎಂದು ನಾನು ಚಿಂತಿಸಿದೆ.
ಅದಕ್ಕಾಗಿ ನಾನು ನನ್ನ ಉದ್ಯೋಗಕ್ಕೆ ರಾಜಿ ಕೊಟ್ಟೆ, ಜನರ ನಡುವೆ ಇಳಿದು ಕೆಲಸ ಮಾಡಿದೆ, ಅದರ ಪ್ರತಿಫಲ ತಿಳಿಯಲು ಆರಂಭಿಸಿತು, ಜನರು ನನ್ನೊಂದಿಗೆ ನಿಂತರು ಚುನಾವಣೆಯಲ್ಲಿ ಅವರು ನನ್ನ ಗುರುತನ್ನು ಪ್ರದರ್ಶಿಸಿದರು, ಇಂದು ನನಗೆ ಅವರ ಕನಸುಗಳನ್ನು ನನಸು ಗೊಳಿಸುವ ಕೆಲಸದಲ್ಲಿ ನಿರತನಾಗಿದ್ದೇನೆ ಆದೂದರಿಂದ ನಾನದನ್ನು ಮರೆತೆ, ಕೋಟ್ಟು ಸೂಟು ಕನ್ನಡಕ ಹಾಕಿ ಸುತ್ತಬೇಕು ಎಂದೂ ವಿದೇಶಗಳಲ್ಲಿ ಹೋಗಿ ಸೆಲ್ಫಿ ತೆಗೆಯಬೇಕೆಂದು.
ಇಂಜಿನಿಯರ್ ಆದಾಗ ನಿಮಗೆ ಮುಖ್ಯಮಂತ್ರಿಯರ ಚಪ್ಪಲ್ ಒಂದು ಕೊರತೆಯಾಗಿ ಕಂಡಿತು, ತಾವು ಅದಕ್ಕೆ ಪರಿಹಾರ ಕಂಡು ಹಿಡಿದಿರಿ ಮೊದಲಾಗಿ ಅದನ್ನು ನಾನು ಅಭಿನಂದಿಸುತ್ತೇನೆ.ಆದರೆ ನಾನು ಇಂಜಿನಿಯರ್ ಆದಾಗ ನಮ್ಮ ರಾಷ್ಟ್ರದ ಏನೆಲ್ಲ ಕೊರತೆಗಳು ಎಂದು ನನ್ನ ಸ್ವರಾಜ್ ಎಂಬ ಪುಸ್ತಕದಲ್ಲಿದೆ, ಅದರಲ್ಲಿ ಹೇಳುವ ಕೊರತೆಗಳನ್ನ ಪರಿಹರಿಸಲು ನಿಮ್ಮ ಸಹಾಯ ಖಂಡಿತ ಬೇಕೆಂದು ನಿರೀಕ್ಷಿಸುತ್ತಾ..”
–ನಿಮ್ಮವನೇ ಆದ ಅರವಿಂದ್ ಕೇಜ್ರಿವಾಲ್
“ಒಳಿತನ್ನು ಹೇಳಲು ರಾಜಕೀಯ ನೋಡಬೇಕಾಗಿಲ್ಲ.”
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾ. ಶಾಮನೂರು ಶಿವಶಂಕರಪ್ಪ ನಿಧನ ; ವೀರಶೈವ ವಿಧಿವಿಧಾನದಂತೆ ಕಲ್ಲೇಶ್ವರ ಮಿಲ್ನಲ್ಲಿ ಅಂತ್ಯ ಸಂಸ್ಕಾರ
ಸುದ್ದಿದಿನ,ದಾವಣಗೆರೆ:ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪನವರು ನಿಧನರಾಗಿದ್ದು ಅವರ ಅಂತ್ಯ ಸಂಸ್ಕಾರವು ಸರ್ಕಾರಿ ಸಕಲ ಗೌರವಗಳೊಂದಿಗೆ ಹಾಗೂ ವೀರಶೈವ ಸಂಪ್ರದಾಯದಂತೆ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಅಪಾರ ಜನಸ್ತೋಮದೊಂದಿಗೆ ಸೋಮವಾರ ಸಂಜೆ ಜರುಗಿತು.
ಡಾ; ಶಾಮನೂರು ಶಿವಶಂಕರಪ್ಪನವರಿಗೆ 95 ವರ್ಷವಾಗಿದ್ದು ವಯೋಸಹಜ ಅನಾರೋಗ್ಯದಿಂದ ಡಿಸೆಂಬರ್ 14 ರಂದು ನಿಧನ ಹೊಂದಿದ್ದರು. 6 ಭಾರಿ ಶಾಸಕರಾಗಿ, ಒಮ್ಮೆ ಸಂಸದರಾಗಿ ಸುಧೀರ್ಘ ರಾಜಕೀಯ ಸೇವೆಯಲ್ಲಿದ್ದ ಇವರು ರಾಜ್ಯ ಸೇರಿದಂತೆ ದಾವಣಗೆರೆಗೆ ಹೊಸ ರೂಪಕೊಟ್ಟಿದ್ದರು.
ಸೋಮವಾರ ಬೆಳಗ್ಗೆ 7.30 ಗಂಟೆಯಿಂದ ಪಾರ್ಥಿವ ಶರೀರಕ್ಕೆ ಸ್ವಗೃಹದಲ್ಲಿ ಕುಟುಂಬಸ್ಥರ ವಿವಿಧ ಪೂಜೆ ಪುನಸ್ಕಾರಗಳೊಂದಿಗೆ ವಿಧಿ ವಿಧಾನಗಳು ನಡೆದು, ಮಧ್ಯಾಹ್ನದಿಂದ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇಡಲಾಗಿತ್ತು. ಸಾವಿರಾರು ಜನರು ಆಗಮಿಸಿ ಸರತಿ ಸಾಲಿನಲ್ಲಿ ಅಂತಿಮ ದರ್ಶನ ಪಡೆದರು.
ಮಧ್ಯಾಹ್ನ 3.30 ರಿಂದ ಹೈಸ್ಕೂಲ್ ಮೈದಾನದಿಂದ ಹೊರಟು ಹಳೇ ದಾವಣಗೆರೆ ಮಂಡಿಪೇಟೆ, ಕಾಯಿಪೇಟೆ, ಅರಳಿವೃತ್ತದ ಮೂಲಕ ಕಲ್ಲೇಶ್ವರ ಮಿಲ್ಗೆ ಪಾರ್ಥಿವ ಶರೀರ ತಲುಪಿತು. ಸಂಜೆ 4.30 ರಿಂದ ಅಂತಿಮ ವಿಧಿ ವಿಧಾನಗಳು ನಡೆದವು.
ಅಂತಿಮ ಸಂಸ್ಕಾರದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ಉಪ ಮುಖ್ಯಮಂತ್ರಿಯವರಾದ ಡಿ.ಕೆ.ಶಿವಕುಮಾರ್ ಅವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಬೃಹತ್ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಅವರು, ಇಂಧನ ಸಚಿವರಾದ ಕೆ.ಜೆ.ಜಾರ್ಜ್ರವರು, ಸಮಾಜ ಕಲ್ಯಾಣ ಸಚಿವರಾದ ಡಾ; ಹೆಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ, ಅಲ್ಪಸಂಖ್ಯಾತರ ಕಲ್ಯಾಣ, ವಸತಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ ಪಾಟೀಲ, ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ.ಎಸ್.ಪಾಟೀಲ, ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ.ಸುಧಾಕರ್ ಸೇರಿದಂತೆ ಶಾಸಕರು ಸೇರಿದಂತೆ ವಿವಿಧ ಮಠಾಧೀಶರು ಭಾಗವಹಿಸಿ ಪುಷ್ಪ ನಮನ ಸಲ್ಲಿಸಿ ಅಂತಿಮ ದರ್ಶನ ಪಡೆದರು.
ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ರಾಷ್ಟ್ರಧ್ವಜವನ್ನು ಪಾರ್ಥಿವ ಶರೀರಕ್ಕೆ ಹೊದಿಸಿ ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಿ ಗೌರವ ಸಲ್ಲಿಸಲಾಯಿತು. ನಂತರ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಿ ಅಂತಿಮವಾಗಿ ಶೋಕ ವ್ಯಕ್ತಪಡಿಸಲಾಯಿತು. ರಾಷ್ಟ್ರಧ್ವಜವನ್ನು ಅವರ ಪುತ್ರರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಸ್ತಾಂತರಿಸಿದರು. ನಂತರ ಸಾಂಪ್ರದಾಯಿಕ ಪೂಜೆ, ವಿಧಿ, ವಿಧಾನಗಳೊಂದಿಗೆ ಪಾರ್ಥಿವ ಶರೀರವನ್ನು ಐಕ್ಯ ಮಂಟಪದಲ್ಲಿ ಇಡಲಾಯಿತು.
ಡಾ; ಶಾಮನೂರು ಶಿವಶಂಕರಪ್ಪನವರ ಪುತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಸೊಸೆ ಹಾಗೂ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್, ಇನ್ನಿಬ್ಬರು ಪುತ್ರರಾದ ಎಸ್.ಎಸ್.ಬಕ್ಕೇಶ್, ಎಸ್.ಎಸ್.ಗಣೇಶ್ ಸೇರಿದಂತೆ ಶಾಮನೂರು ಶಿವಶಂಕರಪ್ಪನವರ ಕುಟುಂಬಸ್ಥರು ಅಂತಿಮ ವಿಧಿ ವಿಧಾನದಲ್ಲಿ ಭಾಗವಹಿಸಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಎಸ್.ಆರ್.ಬೊಮ್ಮಾಯಿ, ಗೃಹ ಸಚಿವರಾದ ಜಿ.ಪರಮೇಶ್ವರ್, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ಕೃಷಿ ಸಚಿವರಾದ ಚಲುವರಾಯಸ್ವಾಮಿ, ಬಿ.ಜೆ.ಪಿ.ಪಕ್ಷದ ರಾಜ್ಯಾದ್ಯಕ್ಷರಾದ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಶಾಸಕರು, ವಿಧಾನ ಪರಿಷತ್ ಸದಸ್ಯರು ಅಂತಿಮ ದರ್ಶನ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್ಪಿಯನ್ನು ಕ್ವಿಂಟಲ್ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.
ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.
ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್ಆರ್ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.
ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
-
ದಿನದ ಸುದ್ದಿ4 days ago2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
-
ದಿನದ ಸುದ್ದಿ5 days agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
-
ದಿನದ ಸುದ್ದಿ5 days agoಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
-
ದಿನದ ಸುದ್ದಿ2 days agoಡಾ. ಶಾಮನೂರು ಶಿವಶಂಕರಪ್ಪ ನಿಧನ ; ವೀರಶೈವ ವಿಧಿವಿಧಾನದಂತೆ ಕಲ್ಲೇಶ್ವರ ಮಿಲ್ನಲ್ಲಿ ಅಂತ್ಯ ಸಂಸ್ಕಾರ

