ದಿನದ ಸುದ್ದಿ
ಹಸುರು ಹೋಗಿ ಕೆಂಪಾಗುವವರೆಗೆ ಕಾಯಬಾರದು ಬನ್ನಿ !
- ನಾಗೇಶ್ ಹೆಗಡೆ
ಐತಿಹಾಸಿಕ ರೈತ ಜಾಥಾಕ್ಕೆ ಇಲ್ಲಿವೆ ದೊಡ್ಡ ಕಾರಣಗಳು
ಹಿಂದೆಂದೂ ಕಂಡಿರದಷ್ಟುದೊಡ್ಡ ಸಂಖ್ಯೆಯಲ್ಲಿ ನಾಳೆ ರೈತರು ಮುನ್ನೆಲೆಗೆ ಬರಲಿದ್ದಾರೆ. ಹೊಟ್ಟೆಗೆ ಹಿಟ್ಟು/ಅನ್ನ ತಿನ್ನುವವರೆಲ್ಲ ಜಾತಿ/ಧರ್ಮ/ರಾಜಕೀಯ ಪಕ್ಷಭೇದ ಮರೆತು ರೈತರನ್ನು ಬೆಂಬಲಿಸಬೇಕು. ಏಕೆ ಬೆಂಬಲಿಸಬೇಕು ಎಂಬುದಕ್ಕೆ ಮುಖ್ಯ ಕಾರಣಗಳು ಇಂತಿವೆ:
1. ಎಲ್ಲ ಸುಧಾರಿತ ದೇಶಗಳಲ್ಲೂ ರೈತರ ಶ್ರಮಕ್ಕೆ ಸಬ್ಸಿಡಿ ನೀಡಲಾಗುತ್ತದೆ. ಅಮೆರಿಕದಲ್ಲಿ ರೈತರ ಉತ್ಪಾದನಾ ವೆಚ್ಚದ ಶೇ 12ರಷ್ಟು, ಐರೋಪ್ಯ ಸಂಘದವರು ಶೇ. 20ರಷ್ಟು ಮತ್ತು ಜಪಾನ್, ದ.ಕೊರಿಯಾ, ನಾರ್ವೆ, ಐಸ್ಲಾಂಡ್ ದೇಶಗಳಲ್ಲಿ ಶೇಕಡಾ 40-60ರಷ್ಟು ಸಬ್ಸಿಡಿ ನೀಡಿವೆ (2019ರಲ್ಲಿ). ಆದರೆ ಭಾರತ ದೇಶದಲ್ಲಿ ಶೂನ್ಯಕ್ಕಿಂತ ಶೇ 5ರಷ್ಟು ಕೆಳಗೆ! ಅಂದರೆ ರೈತರೇ ಬಳಕೆದಾರರಿಗೆ ಶೇಕಡಾ 5ರಷ್ಟು ಸಬ್ಸಿಡಿ ಕೊಡುತ್ತಾರೆ. ಜಗತ್ತಿನ ಅತಿ ಬಡ ಕೃಷಿಕರ ಬೆವರಿನ ದುಡಿಮೆಯ ಫಲ ಪಡೆಯುವ ನಾವು ಅದರ ಮೌಲ್ಯದಲ್ಲೂ ವಿನಾಯ್ತಿ ಕೇಳುತ್ತೇವೆ. ಅಷ್ಟೇ ಅಲ್ಲ;
2. ಅನುಕೂಲಸ್ಥ ದೇಶಗಳು ಹೊಸ ಹೊಸ ಮಾರ್ಗಗಳ ಮೂಲಕ ರೈತರಿಗೆ ಇನ್ನಷ್ಟು ವಿನಾಯ್ತಿ ಕೊಡುವ ಯೋಜನೆ ಹಾಕಿವೆ. ಅಂದರೆ ಉತ್ಪಾದನೆಗೆ ಅಷ್ಟೇ ಅಲ್ಲ; ಭೂಮಿಯ ಒಟ್ಟಾರೆ ಒಳಿತಿಗೆ (ಭೂತಾಪವನ್ನು ಕಡಿಮೆ ಮಾಡುವತ್ತ ರೈತರು ನೀಡುವ ಕೊಡುಗೆಗೆ) ಬೆಲೆ ಕಟ್ಟಿ ಅದಕ್ಕೂ ಪರಿಹಾರ ನೀಡತೊಡಗಿವೆ. ಅದನ್ನ ಪರಿಸರ ಕಲ್ಯಾಣ ಕೊಡುಗೆ ಎಂದು ಹೆಸರಿಸಿ ರೈತರ ಕೈಗೆ ಇನ್ನೂ ತುಸು ಹಣ ಸೇರುವಂತೆ ಮಾಡುತ್ತಿದ್ದಾರೆ.
3. ಸುಧಾರಿತ ದೇಶಗಳ ಆ ಅನುಕೂಲಸ್ಥ ರೈತರೊಂದಿಗೆ ನಮ್ಮ ಬಹುತೇಕ ಬಡ, ಹಿಂದುಳಿದ, ಅನಕ್ಷರಸ್ಥ ಕೃಷಿಕರು ಪೈಪೋಟಿ ಮಾಡಬೇಕು. ವಿಶೇಷವಾಗಿ ಬರ, ನೆರೆ ಹಾವಳಿಗೆ ತುತ್ತಾಗಿ ಯಾವುದೇ ಫಸಲಿನ ಬೆಲೆ (ಉದಾ ಈರುಳ್ಳಿಯ ಬೆಲೆ) ಜಾಸ್ತಿಯಾದಾಗ ಅದನ್ನು ತಗ್ಗಿಸಲೆಂದು ಸರಕಾರ ವಿದೇಶದಿಂದ ಅದನ್ನು ಆಮದು ಮಾಡಿಕೊಳ್ಳುತ್ತದೆ. ಮಳೆಯಲ್ಲಿ ನೆನೆದ ಈರುಳ್ಳಿಯನ್ನು ರೈತ ಮಹಿಳೆ ಕಷ್ಟಪಟ್ಟು ಹೆಕ್ಕಿ ಹೇಗೋ ಒಣಗಿಸಿ ಮಾರುಕಟ್ಟೆಗೆ ಸಾಗಿಸಿ, ತುಸು ಜಾಸ್ತಿ ಬೆಲೆ ಕೇಳಿದರೆ “ಇಲ್ಲ! ಈಜಿಪ್ತಿನಿಂದ ಈರುಳ್ಳಿ ಕಮ್ಮಿ ಬೆಲೆಗೆ ಬಂದಿದೆ, ನಿಮ್ಮದು ಬೇಡ” ಎನ್ನುತ್ತಾರೆ ವರ್ತಕರು.
4. ಈ ಕಾರಣಕ್ಕಾಗಿಯೇ ರೈತರು ತಮ್ಮ ಫಸಲಿಗೆ ಕನಿಷ್ಟ ಬೆಂಬಲ ಬೆಲೆಯನ್ನಾದರೂ (ಕಬೆಂಬೆ) ಕೊಡಿ ಎಂದು ಕೇಳುತ್ತಿದ್ದಾರೆ. ಅಂಥ 22 ಬೆಳೆಗಳಿಗೆ ಕಬೆಂಬೆ ಇದೆ ಹೌದು; ಆದರೆ ಅಕ್ಕಿ-ಗೋಧಿ ಬಿಟ್ಟರೆ ಇನ್ನುಳಿದವು ಹೆಸರಿಗಷ್ಟೆ. ಸರಕಾರ ಅವನ್ನು ಖರೀದಿ ಮಾಡುವುದಿಲ್ಲ. ಸರಕಾರದ್ದೇ ದಾಖಲೆಗಳ ಪ್ರಕಾರ ಹತ್ತು ಬೆಳೆಗಳ ಶೇ 70ರಷ್ಟು ಭಾಗ ಕಬೆಂಬೆಗಿಂತ ಕಡಿಮೆ ದರದಲ್ಲಿ ಮಾರಾಟವಾಗಿವೆ. ಅಕ್ಕಿ-ಗೋಧಿಗಿದ್ದ ಕಬೆಂಬೆಯನ್ನೂ ಸರಕಾರ ಹಿಂತೆಗೆದುಕೊಂಡೀತೆಂದು ಪಂಜಾಬ್ ರೈತರು ಭೀತರಾಗಿದ್ದಾರೆ.
5. ಕೃಷಿಯ ಕೂಲಿ ವೆಚ್ಚ, ಒಳಸುರಿಗಳ ಬೆಲೆ ವರ್ಷವರ್ಷಕ್ಕೂ ಹೆಚ್ಚುತ್ತಿದೆ. ಜೊತೆಗೆ ಹವಾಗುಣ ಸಂಕಷ್ಟಗಳಿಂದಾಗಿ ರೈತನ ಬೆಳೆ ಪ್ರಮಾಣ ಅನಿಶ್ಚಿತವಾಗುತ್ತಿದೆ. ಸರಕಾರಿ ನೌಕರರ ಸಂಬಳ ಕಳೆದ ಇಪ್ಪತ್ತು ವರ್ಷಗಳಲ್ಲಿ ಆರು ಪಟ್ಟು ಹೆಚ್ಚಾಗಿದೆ. ರೈತರು ಮಾತ್ರ ಮೇಲೇಳುವ ಬದಲು ನಿಂತಲ್ಲೇ ಕುಸಿಯುತ್ತಿದ್ದಾರೆ.
6. ರೈತರು ಅನಿವಾರ್ಯವಾಗಿ ಖಾಸಗಿ ಧನಿಕರಿಂದ ಸಾಲ ಪಡೆಯುತ್ತಾರೆ. ಉದ್ಯಮಿಗಳು ಸರಕಾರಿ ಬ್ಯಾಂಕ್ಗಳಿಂದ ಸಾಲ ಪಡೆದು, ಮರುಪಾವ್ತಿ ಮಾಡಲಾಗದಿದ್ದರೆ ಸರಕಾರ ಅಂಥ ಸಾಲವನ್ನು ರೈಟ್ ಆಫ್ (ಮನ್ನಾ) ಮಾಡಿಬಿಡುತ್ತದೆ. 2019ರಲ್ಲಿ ಉದ್ಯಮಿಗಳು ಪಡೆದ 254 ಸಾವಿರ ಕೋಟಿ ರೂಪಾಯಿಗಳಷ್ಟು ಇಂಥ ಕೆಟ್ಟ ಸಾಲಗಳನ್ನು ಸರಕಾರ ಮನ್ನಾ ಮಾಡಿದೆ.ರೈತರಿಗೆ ಸರಕಾರ ಆಗೊಮ್ಮೆ ಈಗೊಮ್ಮೆ ನೆರವನ್ನು ಘೋಷಿಸುತ್ತದೆ. ಆದರೆ ಅದರ ವೈಖರಿ ಹೇಗಿರುತ್ತದೆ ಎಂದರೆ (ಇಂದಿನ ಡೆಕ್ಕನ್ ಹೆರಾಲ್ಡ್ ವರದಿಯ ಪ್ರಕಾರ) 2019ರಲ್ಲಿ ಘೋಷಿಸಿದ್ದ ನೆರೆ ಪರಿಹಾರ ಧನದಲ್ಲಿ ಶೇ. 10ಕ್ಕಿಂತ ಕಡಿಮೆ ಹಣವನ್ನು ಸರಕಾರ ಬಿಡುಗಡೆ ಮಾಡಿದೆ. (ಘೋಷಿಸಿದ್ದು 427 ಕೋಟಿ; ಬಿಡುಗಡೆ ಮಾಡಿದ್ದು 41ಕೋಟಿ. ಅದರಲ್ಲೂ ಎಷ್ಟು ಅಂಶ ರೈತರಿಗೆ ತಲುಪಿದೆ ಲೆಕ್ಕಕ್ಕೆ ಸಿಗಲಿಕ್ಕಿಲ್ಲ).
ಇದುವರೆಗಿನ ಎಲ್ಲ ಸರಕಾರಗಳೂ ರೈತರ ಹಿತವನ್ನು ಕಡೆಗಣಿಸಿದ್ದಕ್ಕೇ ಈಗ ಸ್ಫೋಟಕ ಸ್ಥಿತಿ ಬಂದಿದೆ. ದನಿ ಇಲ್ಲದ ಜನರು ಈ ಬಾರಿ ಹೇಗೋ ದೇಶಾದ್ಯಂತ ಒಗ್ಗಟ್ಟಾಗಿ ದನಿ ಎತ್ತಿದ್ದಾರೆ. ಅವರು ಆಹಾರವನ್ನಷ್ಟೇ ಅಲ್ಲ, ತಮ್ಮ ನಿತ್ಯದ ಶ್ರಮದ ಮೂಲಕ ಕ್ಲೈಮೇಟ್ ವಿಪತ್ತುಗಳಿಗೆ ಕೈಲಾದ ಪರಿಹಾರವನ್ನೂ ನಮಗಾಗಿ ಕಲ್ಪಿಸುತ್ತಿದ್ದಾರೆ.
ಅವರ ದನಿಗೆ ನಮ್ಮ ದನಿಯನ್ನೂ ಸೇರಿಸೋಣ ಬನ್ನಿ.
ಅಷ್ಟಾದರೂ ಅನ್ನದ ಋಣ ತೀರಿಸೋಣ. ನಮ್ಮ ಬೆಂಬಲವನ್ನು ತೋರಿಸೋಣ.
(ಈ ಪೋಸ್ಟ್ನ ಮೊದಲರ್ಧದ ಮಾಹಿತಿ ಮೂಲ: ಡೌನ್ ಟು ಅರ್ಥ್ ಪಾಕ್ಷಿಕ 15-31, ಜನವರಿ 2021 ಸುನಿತಾ ನರೇನ್ ಸಂಪಾದಕೀಯ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.
ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.
ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ5 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ5 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ3 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

