Connect with us

ದಿನದ ಸುದ್ದಿ

ಮಾನವೀಯತೆ ಇಲ್ಲದ ಪ್ರಜಾತಂತ್ರದಲ್ಲಿ ನಾವು..?

Published

on

  • ನಾ ದಿವಾಕರ

73 ವರ್ಷದ ಸ್ವತಂತ್ರ ಆಡಳಿತದಲ್ಲಿ ಭಾರತ ಬಹುತೇಕ ಎರಡು ವರ್ಷಗಳ ಸರ್ವಾಧಿಕಾರವನ್ನು ಕಂಡಿದೆ, 1975ರ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ. ತುರ್ತುಪರಿಸ್ಥಿತಿಯ ನಂತರದ 45 ವರ್ಷಗಳಲ್ಲಿ ಭಾರತ ಮತ್ತೊಮ್ಮೆ ಸರ್ವಾಧಿಕಾರವನ್ನು ಕಂಡಿಲ್ಲವಾದರೂ, ಪ್ರಜಾತಂತ್ರದ ಮೂಲ ಮೌಲ್ಯಗಳನ್ನು ಕಳೆದುಕೊಳ್ಳುತ್ತಲೇ ಬರುತ್ತಿದೆ.

ಭಾರತದ ಸಂವಿಧಾನ ಪ್ರಜೆಗಳಿಗೆ ನೀಡುವ ಹಕ್ಕುಗಳನ್ನು ಪ್ರಜಾತಂತ್ರದ ಚೌಕಟ್ಟಿನಲ್ಲಿಯೇ ದಮನಿಸುವ, ಹತ್ತಿಕ್ಕುವ ಮತ್ತು ನಿರಾಕರಿಸುವ ಪ್ರವೃತ್ತಿಯನ್ನು ಈ 45 ವರ್ಷಗಳಲ್ಲಿ ಗಮನಿಸುತ್ತಲೇ ಬಂದಿದ್ದೇವೆ. ಕಳೆದ ಐದು ವರ್ಷಗಳಲ್ಲಿ ಇದು ಸಾಂವಿಧಾನಿಕವಾಗಿ ಸ್ವೀಕೃತ ಎನಿಸುವಷ್ಟು ಮಟ್ಟಿಗೆ ಹೆಚ್ಚಾಗುತ್ತಿದೆ.

1980ರ ದಶಕದಲ್ಲಿ ಮಾನವ ಹಕ್ಕು ಚಳುವಳಿಗಳು ಪ್ರವರ್ಧಮಾನಕ್ಕೆ ಬಂದ ನಂತರ ಭಾರತದ ಆಳುವ ವರ್ಗಗಳಲ್ಲಿ ಸಂಚಲನ ಉಂಟಾಗಿತ್ತು. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಭಾರತದಲ್ಲಿ ಮಾನವ ಹಕ್ಕುಗಳ ರಕ್ಷಣೆಯ ಬಗ್ಗೆ ಹೆಚ್ಚಿನ ಪ್ರಜ್ಞೆ ಮೂಡಿತ್ತು. ನಂತರದ ದಿನಗಳಲ್ಲಿ ಪ್ರಜಾತಂತ್ರದ ರಕ್ಷಣೆಗೆ ಮೂಲ ಮಂತ್ರ ಇರುವುದೇ ಮಾನವ ಹಕ್ಕುಗಳ ರಕ್ಷಣೆಯಲ್ಲಿ ಎನ್ನುವ ಜಾಗೃತಿ ಮೂಡಿತ್ತು. ಈ ಸಂದರ್ಭದಲ್ಲಿ ಅಧಿಕಾರ ಕೇಂದ್ರಗಳು ಮತ್ತು ಆಡಳಿತ ವ್ಯವಸ್ಥೆ ಮಾನವ ಹಕ್ಕುಗಳ ಕಾರ್ಯಕರ್ತರನ್ನು, ಸಂಘಟನೆಗಳನ್ನು ಅಮೆರಿಕದ ಏಜೆಂಟರು ಎಂದೇ ಪರಿಗಣಿಸುತ್ತಿದ್ದವು.

ಪ್ರಜಾತಂತ್ರ ಮೌಲ್ಯಗಳನ್ನು ಎತ್ತಿಹಿಡಿಯುವ ದನಿಗಳೂ ಇದೇ ಸಂದರ್ಭದಲ್ಲೇ ಜಾಗೃತವಾಗಿದ್ದವು. ದೇಶಾದ್ಯಂತ ರಾಜಕೀಯ ಆಂದೋಲನಗಳಷ್ಟೇ ಅಲ್ಲದೆ, ಸಾಂಸ್ಕೃತಿಕ ಲೋಕದಲ್ಲಿ, ಸಾಹಿತ್ಯ , ನಾಟಕ, ಸಿನಿಮಾ, ಕಾವ್ಯ ಹೀಗೆ ಎಲ್ಲ ವಲಯಗಳಲ್ಲೂ ಮಾನವ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಬೃಹತ್ ಜನಾಂದೋಲನಕ್ಕೆ ಭಾರತ ಸಾಕ್ಷಿಯಾಗಿತ್ತು. 1970 ಮತ್ತು 80ರ ದಶಕದಲ್ಲಿ , ತುರ್ತುಪರಿಸ್ಥಿತಿಯ ನಂತರದ ಬದಲಾದ ಆಡಳಿತ ಧೋರಣೆಯ ಹಿನ್ನೆಲೆಯಲ್ಲೇ, ಮಾನವ ಹಕ್ಕುಗಳ ಹೋರಾಟವೂ ಹೊಸ ಆಯಾಮ ಪಡೆದುಕೊಂಡಿದ್ದನ್ನು ಸೂಕ್ಷ್ಮವಾಗಿ ಗಮನಿಸಬೇಕು.

ಏಕೆಂದರೆ ಮಾನವ ಹಕ್ಕುಗಳ ರಕ್ಷಣೆ ಒಂದು ಬೃಹತ್ ಜನಾಂದೋಲನವಾಗಿ ರೂಪುಗೊಳ್ಳಲಿಲ್ಲ. ಪಿಯುಸಿಎಲ್, ಪಿಯುಡಿಆರ್ ಮುಂತಾದ ಸಂಘಟನೆಗಳು ದೇಶಾದ್ಯಂತ ತಮ್ಮ ನೆಲೆ ಕಂಡುಕೊಂಡರೂ, ಎಲ್ಲ ರಾಜ್ಯಗಳಲ್ಲಿ ಪ್ರಾತಿನಿಧ್ಯ ಹೊಂದಿದ್ದರೂ, ಒಂದು ಸಮೂಹ ಚಳುವಳಿಯಂತೆ ರೂಪುಗೊಳ್ಳಲು ಸಾಧ್ಯವಾಗಲಿಲ್ಲ.

ಈ ಸಂದರ್ಭದಲ್ಲಿ ರೂಪುಗೊಂಡ ದಲಿತ ಚಳುವಳಿಗಳು, ಮಹಿಳಾ ಅಂದೋಲನಗಳು ಮತ್ತು ರಾಜಕೀಯ ಹೋರಾಟಗಳು ಮಾನವ ಹಕ್ಕುಗಳನ್ನು ತಮ್ಮ ಹೋರಾಟದ ಒಂದು ಭಾಗವಾಗಿ ಪರಿಗಣಿಸಿದ್ದರೂ, ಮಾನವ ಹಕ್ಕು ರಕ್ಷಣೆಗೆ ಒಂದು ರಾಜಕೀಯ ಸ್ವರೂಪ ನೀಡಲು ಮುಂದಾಗಲಿಲ್ಲ.

ಹಾಗಾಗಿ ಎಲ್ಲ ಚಳುವಳಿಗಳಲ್ಲೂ ಮಾನವ ಹಕ್ಕು ರಕ್ಷಣೆ ಒಂದು ಕಾರ್ಯಸೂಚಿಯಾಗಿ ಬಳಕೆಯಾಗಿತ್ತೇ ಹೊರತು, ಸೈದ್ಧಾಂತಿಕ ತಳಹದಿಯಾಗಿ ರೂಪುಗೊಳ್ಳಲಿಲ್ಲ. ಮಾನವ ಹಕ್ಕುಗಳ ಪರಿಕಲ್ಪನೆ ಎಲ್ಲ ರಾಜಕೀಯ ಮತ್ತು ಸಾಮಾಜಿಕ ಆಂದೋಲನಗಳಲ್ಲಿ ಅಂತರ್ಗತವಾಗಿದ್ದರೂ, ಅಧಿಕಾರ ರಾಜಕಾರಣದ ನೆಲೆಯಲ್ಲಿ ಈ ಪರಿಕಲ್ಪನೆಯೇ ಸಾಪೇಕ್ಷ ನೆಲೆ ಪಡೆಯುವುದನ್ನೂ ಕಂಡಿದ್ದೇವೆ.

ಇಂದು ಸಾವು ಬದುಕಿನ ನಡುವೆ ಹೋರಾಡುತ್ತಿರುವ ಕವಿ, ಲೇಖಕ, ಸಾಮಾಜಿಕ ಕಾರ್ಯಕರ್ತ ವರವರರಾವ್ ಈ ಸಾಪೇಕ್ಷತೆಗೆ ಬಲಿಯಾಗುತ್ತಿರುವವರಲ್ಲಿ ಒಬ್ಬರು. ಈ ನಿಟ್ಟಿನಲ್ಲಿ ನೋಡಿದಾಗ ವರವರರಾವ್ ಏಕಾಂಗಿಯಾಗಿ ಕಾಣುವುದಿಲ್ಲ. ಅವರೊಂದಿಗೆ ಪ್ರೊಫೆಸರ್ ಸಾಯಿಬಾಬಾ ಇದ್ದಾರೆ.

ಬದಲಾದ ಭಾರತದಲ್ಲಿ ಇನ್ನೂ ಹೆಚ್ಚು ಕಾರ್ಯಕರ್ತರು ಇವರುಗಳೊಡನೆ ಅನುಭವಿಸುವ ಸಾಧ್ಯತೆಗಳೂ ಇವೆ. ಪ್ರಭುತ್ವ ಪ್ರತಿರೋಧದ ದನಿಗಳನ್ನು ಹತ್ತಿಕ್ಕಲು ಬಳಸಬಹುದಾದ ಎಲ್ಲ ಅಸ್ತ್ರಗಳನ್ನೂ ಇಂದು ಭಾರತದಲ್ಲಿ ಪ್ರಯೋಗಿಸಲಾಗುತ್ತಿದೆ. ಅಧಿಕಾರ ರಾಜಕಾರಣ ಮತ್ತು ಅಧಿಪತ್ಯ ರಾಜಕಾರಣದಲ್ಲಿ ಇಂತಹ ಕ್ರೌರ್ಯಗಳೂ ಸ್ವೀಕೃತವಾಗುವಂತೆ ಸಮೂಹ ಸನ್ನಿ ಸೃಷ್ಟಿಸಲಾಗುತ್ತದೆ.

ಈ ಸಮೂಹ ಸನ್ನಿಗೆ ಮತೀಯವಾದ, ಜಾತಿವಾದ, ಪ್ರಾದೇಶಿಕತೆ, ಭೌಗೋಳಿಕ ದೇಶದ ಪರಿಕಲ್ಪನೆ ಮತ್ತು ದೇಶಭಕ್ತಿ-ಪ್ರೇಮ ಮುಂತಾದ ಅತಿ ಭಾವುಕ ಕಲ್ಪನೆಗಳು ಇವೆಲ್ಲವೂ ನೆರವಾಗುತ್ತವೆ. ಕಳೆದ 50 ವರ್ಷದಲ್ಲಿ ಭಾರತದ ರಾಜಕೀಯ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಭಾರತದ ಪ್ರಭುತ್ವ ಮಾನವ ಹಕ್ಕುಗಳಿಗೆ ಎಂದೂ ಸಹ ಮಾನ್ಯತೆ ನೀಡಿಲ್ಲ.

ಸರ್ಕಾರಗಳು ಬದಲಾಗಿವೆ. ಪಕ್ಷಗಳು ಬದಲಾಗಿವೆ. ಹೊಸ ಪಕ್ಷಗಳು ಉದಯಿಸಿವೆ ಆದರೆ ಪ್ರಭುತ್ವದ ಧೋರಣೆಯನ್ನು ಪ್ರಶ್ನಿಸುವ ಯಾವುದೇ ರಾಜಕೀಯ ಪಕ್ಷವನ್ನು ಗುರುತಿಸಲಾಗುವುದಿಲ್ಲ. ಎಲ್ಲ ರಾಜಕೀಯ ಪಕ್ಷಗಳೂ ತಮ್ಮ ಕಾರ್ಯಕರ್ತರ, ನಾಯಕರ ಹಿತಾಸಕ್ತಿಗಾಗಿ ಮಾನವ ಹಕ್ಕುಗಳ ಸಂಹಿತೆಗಳನ್ನು ಬಳಸಿಕೊಳ್ಳುತ್ತವೆಯೇ ಹೊರತು, ದೇಶದ ಸಾಮಾನ್ಯ ಜನತೆಯ ಸಾಂವಿಧಾನಿಕ, ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆಗೆ ಕಟಿಬದ್ಧವಾಗಿಲ್ಲ ಎನ್ನುವುದು ಸ್ಪಷ್ಟ.

ಭಾರತದ ಸಂಸದೀಯ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಯಾವುದೇ ಆಡಳಿತಾರೂಢ ಪಕ್ಷವೂ ಸಹ ಮಾನವ ಹಕ್ಕು ಉಲ್ಲಂಘನೆಯ ಆರೋಪದಿಂದ ಮುಕ್ತವಾಗಿಲ್ಲ ಎನ್ನುವುದೂ ಗಮನಾರ್ಹ ಸಂಗತಿ. ಮಾನವ ಹಕ್ಕುಗಳ ಪರಿಕಲ್ಪನೆ ಮೂಲತಃ ಪ್ರಜೆಗಳ ಸಾಂವಿಧಾನಿಕ ಹಕ್ಕುಗಳಿಗೆ ಸಂಬಂಧಿಸಿದ್ದು ಮತ್ತು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಈ ಹಕ್ಕುಗಳು ಮತ್ತಷ್ಟು ಮಾನ್ಯತೆ ಪಡೆಯುತ್ತವೆ.

ಅಂತಾರಾಷ್ಟ್ರೀಯ ಸಂಹಿತೆಗಳ ಅನುಸಾರ ಪ್ರತಿಯೊಬ್ಬ ಪ್ರಜೆಯ ಜೀವಿಸುವ ಹಕ್ಕನ್ನು ರಕ್ಷಿಸುವುದು ಪ್ರಭುತ್ವದ ಕರ್ತವ್ಯವಾಗಿರುತ್ತದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರಜೆಗಳ ಬದುಕುವ ಹಕ್ಕು ಕಸಿದುಕೊಳ್ಳುವ ಹಕ್ಕು ಪ್ರಭುತ್ವಕ್ಕೆ ಇರುವುದಿಲ್ಲ. ಹಾಗಾಗಿಯೇ ವಿಶ್ವದ ಬಹುಪಾಲು ರಾಷ್ಟ್ರಗಳು ಮರಣದಂಡನೆಯಂತಹ ಜೀವ ವಿರೋಧಿ ಶಿಕ್ಷೆಯನ್ನು ಬಹಿಷ್ಕರಿಸಿವೆ. ಆದರೆ ಭಾರತ ಇದಕ್ಕೆ ಹೊರತಾಗಿದೆ.

ದುರಂತ ಎಂದರೆ ಭಾರತದಲ್ಲಿ ಯಾವುದೇ ರಾಜಕೀಯ ಪಕ್ಷವೂ ಈ ಕುರಿತು ಯೋಚಿಸಿಯೂ ಇಲ್ಲ. ಅಪರಾಧ, ದಂಡನೆ ಮತ್ತು ಶಿಕ್ಷೆ ಈ ಮೂರು ವಿದ್ಯಮಾನಗಳ ನಡುವೆ ಮಾನವ ಹಕ್ಕುಗಳನ್ನು ರಕ್ಷಿಸುವ ನೈತಿಕ ಹೊಣೆಗಾರಿಗೆ ಆಡಳಿತ ವ್ಯವಸ್ಥೆಯ ಮೇಲಿರುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಶಾಹಿಗಳಿಂದ ಉಂಟಾಗಬಹುದಾದ ಕಾರ್ಯಾಂಗದ ಪ್ರಮಾದಗಳನ್ನು ಶಾಸಕಾಂಗವು ಸರಿಪಡಿಸಬೇಕಾಗುತ್ತದೆ.

ಒಂದು ವೇಳೆ ಶಾಸಕಾಂಗವೂ ಪ್ರಜೆಗಳ ಹಕ್ಕುಗಳನ್ನು ಕಸಿಯಲು ವಾಮ ಮಾರ್ಗಗಳನ್ನು ಅನುಸರಿಸಿದರೆ ನ್ಯಾಯಾಂಗ ತನ್ನ ಸಾಂವಿಧಾನಿಕ ಹೊಣೆಯನ್ನು ನಿಭಾಯಿಸಬೇಕಾಗುತ್ತದೆ. ಇದು ಭಾರತದ ಸಂವಿಧಾನದ ಮೂಲ ಮಂತ್ರವೂ ಆಗಿದೆ. ಸರ್ವೋಚ್ಚ ನ್ಯಾಯಾಲಯ ಈ ನಿಟ್ಟಿನಲ್ಲಿ ಹಲವಾರು ಸಂದರ್ಭಗಳಲ್ಲಿ ತನ್ನ ಮೇರು ಸ್ಥಾನವನ್ನು ಸಾರ್ಥಕಪಡಿಸಿಕೊಂಡಿರುವುದನ್ನು ಅಲ್ಲಗಳೆಯಲಾಗುವುದಿಲ್ಲ. ಶೋಷಣೆಗೊಳಗಾದ, ನ್ಯಾಯವಂಚಿತರಾದ, ಅವಕಾಶವಂಚಿತರಾದ ಜನಸಮುದಾಯಗಳಿಗೆ ನ್ಯಾಯ ದೊರಕಿಸುವಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯ ಯಶಸ್ವಿಯಾಗಿದೆ.

ಆದರೆ ಪ್ರಸ್ತುತ ಸಂದರ್ಭದಲ್ಲಿ ಇವೆಲ್ಲವೂ ಗತ ಇತಿಹಾಸದಂತೆ ಕಾಣುತ್ತಿದೆ. 1975ರ ತುರ್ತುಪರಿಸ್ಥಿಯ ನಂತರ ಭಾರತೀಯ ಪ್ರಭುತ್ವದಲ್ಲಿ ಉಂಟಾದ ಮನ್ವಂತರ ಪ್ರಕ್ರಿಯೆಯನ್ನು ಈ ಹಿನ್ನೆಲೆಯಲ್ಲೇ ನಿಷ್ಕರ್ಷೆ ಮಾಡಬೇಕಾಗುತ್ತದೆ. ಜನಾಂದೋಲನಗಳನ್ನು ಹತ್ತಿಕ್ಕಲು, ಪ್ರಜೆಗಳ ಆಕ್ರೋಶದ ದನಿಗಳನ್ನು ದಮನಿಸಲು, ನಾಗರಿಕ ಸಮಾಜದ ಪ್ರತಿರೋಧವನ್ನು ಮಣಿಸಲು ಪ್ರಭುತ್ವ ಬಳಸುತ್ತಿರುವ ಎಲ್ಲ ಕರಾಳ ಶಾಸನಗಳಿಗೂ ಶಿಲಾನ್ಯಾಸ ಮಾಡಿದ್ದು ಶ್ರೀಮತಿ ಇಂದಿರಾಗಾಂಧಿ ಮತ್ತು ಅವರು ಹೇರಿದ ತುರ್ತುಪರಿಸ್ಥಿತಿ ಎನ್ನುವುದು ಚಾರಿತ್ರಿಕ ಸತ್ಯ. ಇಂದು ಭಾರತದ ಸಾರ್ವಭೌಮ ಪ್ರಜೆಗಳು ಉಸಿರುಗಟ್ಟುವ ವಾತಾವರಣದಲ್ಲಿ ಬದುಕವಂತಾಗಿದ್ದರೆ, ಪ್ರತಿರೋಧ ವ್ಯಕ್ತಪಡಿಸಲೂ ಹಿಂಜರಿಯುವಂತಹ ಸನ್ನಿವೇಶ ಉಂಟಾಗಿದ್ದರೆ ಇದರ ಮೂಲವನ್ನು ತುರ್ತುಪರಿಸ್ಥಿತಿಯಲ್ಲಿ ಗುರುತಿಸಬಹುದು.

45 ವರ್ಷಗಳ ಹಿಂದಿನ ತುರ್ತುಪರಿಸ್ಥಿತಿಯನ್ನು ನೆನೆಯುತ್ತಾ, ಅಂದಿನ ತಮ್ಮ ಹೋರಾಟ, ಸೆರೆವಾಸ, ಚಿತ್ರಹಿಂಸೆಗೊಳಪಟ್ಟ ಸನ್ನಿವೇಶಗಳನ್ನು ರಸವತ್ತಾಗಿ ಬಣ್ಣಿಸುತ್ತಾ, ಪ್ರಜಾತಂತ್ರ ಮತ್ತು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಉಪನ್ಯಾಸ ನೀಡುವ ಪ್ರತಿಯೊಂದು ರಾಜಕೀಯ ಪಕ್ಷವೂ, ಪ್ರತಿಯೊಬ್ಬ ರಾಜಕೀಯ ನಾಯಕನೂ ಒಮ್ಮೆ ಈ 45 ವರ್ಷಗಳಲ್ಲಿ ಭಾರತದ ಶ್ರೇಷ್ಠ ಸಂವಿಧಾನದ ಚೌಕಟ್ಟಿನಲ್ಲೇ ಜಾರಿಗೊಳಿಸುವ ಕರಾಳ ಶಾಸನಗಳತ್ತ ಗಮನಹರಿಸಿದರೆ ನಾಚಿ ತಲೆತಗ್ಗಿಸಬೇಕಾಗುತ್ತದೆ.

ತುರ್ತುಪರಿಸ್ಥಿತಿಯಲ್ಲಿ ಜಾರ್ಜ್ ಫರ್ನಾಂಡಿಸ್ ಮುಂತಾದ ನಾಯಕರು ಅನುಭವಿಸಿದ ಚಿತ್ರಹಿಂಸೆಯನ್ನು ಇಂದಿನ ವರವರರಾವ್ ಅವರ ಪರಿಸ್ಥಿತಿಗೆ ಮುಖಾಮುಖಿಯಾಗಿಸಿ ನೋಡಲು ಆತ್ಮಸಾಕ್ಷಿಯೂ ಇರಬೇಕು, ಆತ್ಮಸ್ಥೈರ್ಯವೂ ಬೇಕಲ್ಲವೇ ? ಬಹುಶಃ ನ್ಯಾಯಾಂಗವೂ ಇಲ್ಲಿ ನಿಷ್ಕರ್ಷೆಗೊಳಗಾಗಬೇಕಿದೆ.

1980ರ ನಂತರ ಭಾರತ ತನ್ನ ಸಮಾಜವಾದಿ ಧೋರಣೆಯನ್ನು ಕೈಬಿಟ್ಟು ನವ ಉದಾರವಾದಿ ಆರ್ಥಿಕ ನೀತಿಗಳನ್ನು ಅನುಸರಿಸಲು ಆರಂಭಿಸಿದ ನಂತರ, ಭಾರತದ ಪ್ರಭುತ್ವದ ಧೋರಣೆಯೂ ಹಂತಹಂತವಾಗಿ ಬದಲಾಗುತ್ತಿರುವುದನ್ನು ಗಮನಿಸಬೇಕಿದೆ. ಇದೇ ಸಂದರ್ಭದಲ್ಲಿ ದೇಶದಲ್ಲಿ ಉಲ್ಬಣಿಸಿದ ಸಿಖ್ ಪ್ರತ್ಯೇಕತಾವಾದ, ಕಾಶ್ಮೀರದ ಉಗ್ರವಾದ ಮತ್ತು ಪ್ರತ್ಯೇಕತಾವಾದ, ಹಿಂದೂ ಮೂಲಭೂತವಾದ ಮತ್ತು ಈ ಮೂರೂ ವಿದ್ಯಮಾನಗಳ ನಡುವೆ ದೇಶದಲ್ಲಿ ತಾರಕಕ್ಕೇರಿದ ಮತೀಯ ಮೂಲಭೂತವಾದ ಆಡಳಿತ ವ್ಯವಸ್ಥೆಯ ಕರಾಳ ಶಾಸನಗಳಿಗೆ ಮಾನ್ಯತೆ ದೊರೆಯಲು ನೆರವಾಗಿದ್ದನ್ನೂ ಅಲ್ಲಗಳೆಯುವಂತಿಲ್ಲ. ಈ ಸಂದರ್ಭದಲ್ಲೇ “ ಅನ್ಯರ ” ಪರಿಕಲ್ಪನೆಗೂ ಸಾರ್ವತ್ರಿಕ ಮಾನ್ಯತೆ ದೊರೆತಿತ್ತು. ಪ್ರಭುತ್ವದ ದಮನಕಾರಿ ನೀತಿಗಳಿಗೆ ಈ ಪರಿಕಲ್ಪನೆ ಪುಷ್ಟಿ ನೀಡಿತ್ತು. ಸಾವು, ಚಿತ್ರಹಿಂಸೆ ಮತ್ತು ಶಿಕ್ಷೆ ಮೂರೂ ಸಹ ಸಾಪೇಕ್ಷ ನೆಲೆಯಲ್ಲಿ ಮಾನ್ಯತೆ ಪಡೆದುಬಿಟ್ಟವು.

ಈ ಮಾನ್ಯತೆಗಾಗಿಯೇ ಭಾರತದ ಪ್ರಭುತ್ವ ಮತ್ತು ಆಡಳಿತಾರೂಢ ರಾಜಕೀಯ ಪಕ್ಷಗಳು ಹಲವಾರು ಭೂತದ ನೆಲೆಗಳನ್ನೂ ಸೃಷ್ಟಿಸಿವೆ. ಈ ನೆಲೆಗಳಲ್ಲಿ ಪ್ರಧಾನವಾಗಿ ಕಾಣುವುದು 1967ರ ನಕ್ಸಲ್‍ಬಾರಿ ಚಳುವಳಿ ಮತ್ತು ಅದರಿಂದ ದೇಶಾದ್ಯಂತ ಉಗಮಿಸಿದ ನೂರಾರು ಹೋರಾಟಗಳು.

ನವ ಉದಾರವಾದ- ಮತೀಯವಾದ ಮತ್ತು ಅಧಿಪತ್ಯ ರಾಜಕಾರಣವನ್ನು ಪ್ರಶ್ನಿಸುವ, ದೇಶದ ಶ್ರಮಜೀವಿಗಳ, ಅವಕಾಶವಂಚಿತರ, ಶೋಷಿತ ಸಮುದಾಯಗಳ ಮತ್ತು ದುರ್ಬಲ ವರ್ಗಗಳ ಮೂಲಭೂತ ಹಕ್ಕುಗಳಿಗಾಗಿ, ಜೀವಿಸುವ ಹಕ್ಕುಗಳಿಗಾಗಿ ಹೋರಾಡುವ ಮತ್ತು ಆಡಳಿತವ್ಯವಸ್ಥೆಯ ಜನವಿರೋಧಿ ನೀತಿಗಳಿಗೆ ಪ್ರತಿರೋಧ ವ್ಯಕ್ತಪಡಿಸುವ ಎಲ್ಲ ದನಿಗಳನ್ನೂ ಈ ಒಂದು ಚಳುವಳಿಯ ಚೌಕಟ್ಟಿನಲ್ಲೇ ನಿಷ್ಕರ್ಷೆ ಮಾಡುವ ಮೂಲಕ, ದನಿಗಳನ್ನು ದಮನಿಸುವ ನೀತಿಗಳಿಗೆ ಸಾರ್ವಜನಿಕ ಮಾನ್ಯತೆ ಪಡೆಯುವಲ್ಲಿ ಆಳುವ ವರ್ಗಗಳು ಯಶಸ್ವಿಯಾಗಿದ್ದವು. ಈ ಸಮೂಹ ಸನ್ನಿಯನ್ನು ಸೃಷ್ಟಿಸಲು ಕಾಶ್ಮೀರದ ಉಗ್ರವಾದ, ಭಯೋತ್ಪಾದನೆ ಮತ್ತು ಹಿಂದುತ್ವ ರಾಜಕಾರಣ ನೆರವಾಗಿದ್ದವು.

1990ರ ನಂತರದಲ್ಲಿ ಭಾರತದ ಜನತಂತ್ರದಲ್ಲಿ ಎರಡು ಚಿಂತನಾವಾಹಿನಿಗಳು ಸ್ಪಷ್ಟವಾಗಿ ಉಗಮಿಸಿದವು. ನವ ಉದಾರವಾದ, ಜಾಗತೀಕರಣ, ಹಣಕಾಸು ಬಂಡವಾಳದ ಅಧಿಪತ್ಯ , ಸಾಂಸ್ಕೃತಿಕ ಮತೀಯ ರಾಜಕಾರಣ ಮತ್ತು ಪ್ರಾದೇಶಿಕ ಹಾಗೂ ಜಾತಿ ರಾಜಕಾರಣ ಈ ಎಲ್ಲವನ್ನೂ ಪ್ರತಿನಿಧಿಸುವ ಒಂದು ವರ್ಗ ಅಧಿಕಾರ ರಾಜಕಾರಣಕ್ಕೆ ಸ್ಪಷ್ಟ ತಳಪಾಯ ನಿರ್ಮಿಸುವಲ್ಲಿ ಯಶಸ್ವಿಯಾದವು.

ಈ ಆಳುವ ವರ್ಗಗಳಿಗೆ ಒತ್ತಾಸೆಯಾಗಿ ನಿಂತಿದ್ದು ಮಾರುಕಟ್ಟೆ ಶಕ್ತಿಗಳು ಮತ್ತು ಭಾರತದ ಕಾರ್ಪೋರೇಟ್ ವಲಯ. 1998ರ ನಂತರದ ಎಲ್ಲ ಚುನಾವಣೆಗಳಲ್ಲೂ ಕಾರ್ಪೋರೇಟ್-ಮಾರುಕಟ್ಟೆ ಶಕ್ತಿಗಳ ಪ್ರಭಾವವನ್ನು ಈ ಹಿನ್ನೆಲೆಯಲ್ಲಿ ಗ್ರಹಿಸಬಹುದು. ಬಂಡವಾಳ ವ್ಯವಸ್ಥೆಯ ಶೋಷಕ ನೆಲೆಗಳನ್ನು ಗಟ್ಟಿಗೊಳಿಸಲು ಜನಾಂದೋಲನಗಳನ್ನು ಹತ್ತಿಕ್ಕುವ ಕರಾಳ ಶಾಸನಗಳೂ ಆಳುವ ವರ್ಗಗಳ ಪ್ರತಿನಿಧಿಗಳಲ್ಲಿ ಮಾನ್ಯತೆ ಪಡೆದಿದ್ದವು.

1970-80ರ ದಶಕದಲ್ಲಿ ದೇಶದ ದುಡಿಯುವ ವರ್ಗಗಳೊಡನೆ, ಶ್ರಮಜೀವಿಗಳೊಡನೆ, ಶೋಷಿತ-ಅವಕಾಶವಂಚಿತ ಜನಸಮುದಾಯಗಳೊಡನೆ ಗುರುತಿಸಿಕೊಳ್ಳುತ್ತಿದ್ದ ರಾಜಕೀಯ ಪಕ್ಷಗಳು ಕ್ರಮೇಣ ಈ ಜನಸಮುದಾಯಗಳನ್ನು ತಮ್ಮ ಅಧಿಕಾರ ರಾಜಕಾರಣದ ವಿಸ್ತರಣೆಯ ಕಾಲಾಳುಗಳನ್ನಾಗಿ ಬಳಸಿಕೊಂಡಿದ್ದನ್ನೂ ಗಮನಿಸಬಹುದು. ಈ ಸಂದರ್ಭದಲ್ಲೇ ಅಸಂಖ್ಯಾತ ಜನಾಂದೋಲನಗಳು ನಿಷ್ಕ್ರಿಯವಾಗತೊಡಗಿದವು.

ದಲಿತ ಸಂಘಟನೆಗಳನ್ನೂ ಸೇರಿದಂತೆ ಹಲವು ಚಳುವಳಿಗಳು ಯಾವುದೋ ಒಂದು ರಾಜಕೀಯ ಪಕ್ಷದ ಬಾಲಂಗೋಚಿಗಳಾದವು. ಕಾರ್ಮಿಕ ಸಂಘಟನೆಗಳು ತಮ್ಮ ಸಾಮಾಜಿಕ ಹೊಣೆಗಾರಿಕೆಯನ್ನು ಮರೆತು ಸ್ವ ಹಿತಾಸಕ್ತಿ ರಕ್ಷಣೆಯ ಗುಂಪುಗಳಾದವು. ರಾಜಕೀಯೇತರ ಚಳುವಳಿಗಳ ಮೂಲಕ ಶೋಷಿತರ ಪರ ದನಿ ಎತ್ತಿದ್ದ ಹಲವಾರು ಸಂಘಟನೆಗಳು ಆಡಳಿತ ವ್ಯವಸ್ಥೆಯ ಕೆಂಗಣ್ಣಿಗೆ ಗುರಿಯಾದವು.
ಈ ವಿಘಟನೆಯ ಫಲವನ್ನು ಜನಾಂದೋಲನಗಳ ನಿಷ್ಕ್ರಿಯತೆಯಲ್ಲಿ ಕಾಣುತ್ತಿದ್ದೇವೆ.

ಕಳೆದ ಆರು ವರ್ಷಗಳಲ್ಲಿ ಕಾರ್ಪೋರೇಟ್-ಮಾರುಕಟ್ಟೆಯ ಶಕ್ತಿಗಳು ದೇಶದ ಆಡಳಿತ ವ್ಯವಸ್ಥೆಯನ್ನು ನಿಯಂತ್ರಿಸುತ್ತಿರುವಂತೆಯೇ, ಭಾರತದ ಆಳುವ ವರ್ಗಗಳು ಜನಸಾಮಾನ್ಯರ ಪ್ರತಿರೋಧದ ದನಿಗಳನ್ನು ಹತ್ತಿಕ್ಕಲು ಸಂವಿಧಾನದ ಚೌಕಟ್ಟಿನಲ್ಲೇ ಕರಾಳ ಶಾಸನಗಳನ್ನು ರೂಪಿಸುತ್ತಿವೆ. ಈ ಜನವಿರೋಧಿ ನೀತಿಗಳನ್ನು ವಿರೋಧಿಸುವ ದನಿಗಳನ್ನು ಶಾಶ್ವತವಾಗಿ ಅಡಗಿಸುವ ದುಷ್ಟ ಧೋರಣೆಯನ್ನೂ ಕಾಣುತ್ತಿದ್ದೇವೆ. ಆನಂದ್ ತೇಲ್ತುಂಬ್ಡೆ, ಸುಧಾ ಭರದ್ವಾಜ್, ಸಾಯಿಬಾಬಾ, ಗೌತಮ್ ನವಲಖಾ ಮತ್ತು ವರವರರಾವ್ ಮತ್ತು ಅಸಂಖ್ಯಾತ ಹೋರಾಟಗಾರರು ಈ ದುಷ್ಟ ನೀತಿಗೆ ಬಲಿಯಾಗುತ್ತಿದ್ದಾರೆ.

ರಾಜಕೀಯ ವಲಯದಲ್ಲಿ ಜಾಗೃತವಾಗಿದ್ದ ತಾತ್ವಿಕ-ಸೈದ್ಧಾಂತಿಕ ನೆಲೆಗಳೆಲ್ಲವೂ ಪ್ರಭುತ್ವದ ಚೌಕಟ್ಟಿನಲ್ಲಿ ಬಂದಿಯಾಗಿರುವ ಸಂದರ್ಭದಲ್ಲಿ ಇಂದು ದೇಶದ ಬಹುಸಂಖ್ಯಾತ ಜನತೆ ತಮ್ಮ ಹಕ್ಕುಗಳಿಗಾಗಿ, ಜೀವನೋಪಾಯಕ್ಕಾಗಿ, ಬದುಕುವ ಅವಕಾಶಕ್ಕಾಗಿ ನಿರಂತರ ಹೋರಾಟ ನಡೆಸಬೇಕಾದ ಸನ್ನಿವೇಶವನ್ನು ಎದುರಿಸುತ್ತಿದೆ.

ಹೋರಾಟದ ನೆಲೆಗಳ ಪುನರುತ್ಥಾನದೊಂದಿಗೇ ಅಧಿಕಾರ ರಾಜಕಾರಣದ ಕಾಲಾಳುಗಳಾಗಿರುವ ಅಸಂಖ್ಯಾತ ಶೋಷಿತರನ್ನು ಮತ್ತೊಮ್ಮೆ ಪ್ರತಿರೋಧದ ನೆಲೆಯಲ್ಲಿ ಸಂಘಟಿಸುವ ಹೊಣೆಗಾರಿಕೆ ಜನಾಂದೋಲನಗಳ ಮೇಲಿದೆ. ಶೋಷಣೆಯ ವಿಭಿನ್ನ ಆಯಾಮಗಳನ್ನು ಸಾಪೇಕ್ಷ ನೆಲೆಯಲ್ಲಿ ನೋಡುವ ಧೋರಣೆಯಿಂದ ಜನಾಂದೋಲನಗಳು ಹೊರಬರಬೇಕಿದೆ.

ಸಾವು ಬದುಕಿನ ನಡುವೆ ಸೆಣಸುತ್ತಿರುವ ಕವಿ ವರವರರಾವ್ ಈ ಸಂದರ್ಭದಲ್ಲಿ ಪ್ರಭುತ್ವ ವಿರೋಧಿ ನೆಲೆಯ ಸಂಕೇತವಾಗಿ ಕಾಣುತ್ತಾರೆ. ತೇಲ್ತುಂಬ್ಡೆ , ಸಾಯಿಬಾಬಾ ಮತ್ತಿತರರು ಈ ಸಾಂಕೇತಿಕ ನೆಲೆಯ ಪ್ರತಿನಿಧಿಗಳಾಗಿ ಕಾಣುತ್ತಾರೆ. ಹೋರಾಟದ ನೆಲೆಗಳು ಕರಾಳ ಶಾಸನಗಳ ದಾಳಿಯಿಂದ ನಿಷ್ಕ್ರಿಯವಾಗುತ್ತಿರುವ ದುರಂತ ಸನ್ನಿವೇಶವನ್ನು ಕಾಣುತ್ತಿದ್ದೇವೆ.

ಹಾಗಾಗಿಯೇ ದೇಶದ ಕೈಗಾರಿಕಾ ನೀತಿ, ಕಾರ್ಮಿಕ ನೀತಿ, ಕೃಷಿ ನೀತಿ ಮತ್ತು ಹಣಕಾಸು ನೀತಿ ಎಲ್ಲವೂ ಕಾರ್ಪೋರೇಟ್-ಮಾರುಕಟ್ಟೆ ಶಕ್ತಿಗಳ ಅಣತಿಯಂತೆ ಬದಲಾಗುತ್ತಿವೆ. ಸಮಸ್ತ ರಾಜಕೀಯ ವರ್ಗ ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿದೆ. ಶ್ರಮಜೀವಿ ವರ್ಗಗಳು ತಮ್ಮ ಮೂಲ ನೆಲೆಯನ್ನೇ ಕಳೆದುಕೊಂಡು ಗತಕಾಲದ ಜೀತಪದ್ಧತಿಗೆ ಒಳಗಾಗುವ ಸನ್ನಿವೇಶವನ್ನು ಎದುರಿಸುತ್ತಿದ್ದೇವೆ.

ಕೃಷಿ ಭೂಮಿ, ಬ್ಯಾಂಕಿಂಗ್ ವ್ಯವಸ್ಥೆ, ವಿಮಾ ವಲಯ, ಕಲ್ಲಿದ್ದಲು ನಿಕ್ಷೇಪಗಳು, ವಿಮಾನಯಾನ, ರೈಲು ಮಾರ್ಗಗಳು, ಗಣಿಗಾರಿಕೆ, ಸಾರ್ವಜನಿಕ ಸಾರಿಗೆ, ಸಾರ್ವಜನಿಕ ಉದ್ದಿಮೆಗಳು, ಕೈಗಾರಿಕಾ ವಲಯ , ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರ ಎಲ್ಲವೂ ಖಾಸಗೀಕರಣಕ್ಕೊಳಗಾಗುತ್ತಿರುವ ಸಂದರ್ಭದಲ್ಲೂ ರಾಜಕೀಯ ಪಕ್ಷಗಳು ಅಧಿಕಾರ ರಾಜಕಾರಣದ ಚೌಕಟ್ಟಿನಿಂದ ಹೊರಬರಲಾಗದೆ, ಪ್ರಭುತ್ವದ ದಮನಕಾರಿ ಆಡಳಿತ ನೀತಿಗಳಿಗೆ ಪೂರಕವಾಗಿ ವರ್ತಿಸುತ್ತಿರುವುದು ಸ್ಪಷ್ಟವಾಗುತ್ತಿದೆ. ವರವರರಾವ್, ತೇಲ್ತುಂಬ್ಡೆ ಮುಂತಾದ ಸಾಮಾಜಿಕ ಕಳಕಳಿಯುಳ್ಳ ಹೋರಾಟಗಾರರು ಅನಾಥರಂತೆ ಕಾಣುತ್ತಿದ್ದರೆ ಅದಕ್ಕೆ ಕಾರಣ ರಾಜಕೀಯ ಪಕ್ಷಗಳು ಈ ನೆಲೆಯಲ್ಲಿ ಪ್ರಜ್ಞಾಶೂನ್ಯವಾಗಿರುವುದು.

ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಇಂದು ಭಾರತದ ಶೋಷಿತ ದುಡಿಯುವ ವರ್ಗಗಳು ತಮ್ಮ ಅಳಿವು ಉಳಿವಿನ ಸಂಘರ್ಷಕ್ಕೆ ಸಜ್ಜಾಗಬೇಕಿದೆ. ಕಾರ್ಪೋರೇಟ್ ಅಧಿಪತ್ಯಕ್ಕೆ ಶರಣಾಗುತ್ತಿರುವ ರಾಜಕೀಯ ನೆಲೆಗಳಿಂದ ಭಿನ್ನವಾದ ಜನಾಂದೋಲನದ ನೆಲೆಯನ್ನು ಬಲಪಡಿಸುವ ತುರ್ತು ನಮ್ಮ ಮುಂದಿದೆ. ಮಾನವೀಯ ಮೌಲ್ಯಗಳನ್ನೇ ಕಳೆದುಕೊಂಡಿರುವ ಒಂದು ಆಡಳಿತ ವ್ಯವಸ್ಥೆಯಲ್ಲಿ ಈ ದೇಶದ ಬಹುಸಂಖ್ಯಾತ ಜನತೆ ತಮ್ಮ ಬದುಕು ರೂಪಿಸಿಕೊಳ್ಳಬೇಕಿದೆ.

ಪ್ರತಿಯೊಂದು ಪ್ರತಿರೋಧದ ದನಿಯನ್ನೂ ಶಾಶ್ವತವಾಗಿ ದಮನಿಸುವ ಪ್ರಭುತ್ವದ ನೀತಿಯ ನಡುವೆಯೇ, ಶೋಷಿತರ ಹಕ್ಕುಗಳಿಗಾಗಿ ಹೋರಾಡಬೇಕಿದೆ. ಪ್ರಭುತ್ವ ಮತ್ತು ಪ್ರಜೆಗಳ ನಡುವೆ ಒಂದು ಕಾಲಘಟ್ಟದಲ್ಲಿ ಶೋಷಿತರ ಬೆಂಗಾವಲಿನಂತಿದ್ದ ಕೆಲವು ರಾಜಕೀಯ ನೆಲೆಗಳು ಇಂದು ಮರೆಯಾಗಿವೆ. ಶೋಷಿತರ ದನಿಗೆ ದನಿಯಾಗುವ ಬದಲು, ತಮ್ಮ ಅಸ್ತಿತ್ವ ಕಾಪಾಡಿಕೊಳ್ಳಲು ಶೋಷಿತರ ದನಿಯನ್ನು ಅಸ್ತ್ರದಂತೆ ಬಳಸಿಕೊಳ್ಳುವ ರಾಜಕೀಯ ಪಕ್ಷಗಳ ಮತ್ತು ನಾಯಕರ ವಿಶ್ವಾಸ ದ್ರೋಹದ ವಿರುದ್ಧ ಶೋಷಿತ ಸಮುದಾಯಗಳು ಹೋರಾಡಬೇಕಿದೆ.

ಜನತಂತ್ರದ ಉಳಿವಿಗಾಗಿ, ಗಣತಂತ್ರದ ಉಳಿವಿಗಾಗಿ ಮತ್ತು ಪ್ರಜಾಸತ್ತಾತ್ಮಕ ಸಾಂವಿಧಾನಿಕ ಮೌಲ್ಯಗಳ ಉಳಿವಿಗಾಗಿ ಹೊಸ ನೆಲೆಗಳನ್ನು ಸೃಷ್ಟಿಸಬೇಕಾದ ಅನಿವಾರ್ಯತೆ ಎದುರಾಗಿದೆ. ವರವರರಾವ್ ಈ ಅನಿವಾರ್ಯತೆಯನ್ನು ಪ್ರತಿನಿಧಿಸುವ ಒಂದು ಕ್ಷೀಣ ದನಿಯಾಗಿ ನಮ್ಮ ನಡುವೆ ಉಸಿರಾಡುತ್ತಿದ್ದಾರೆ. “ ದೇಶವೆಂದರೆ ಮಣ್ಣಲ್ಲವೋ ಮನುಜರು ” ಈ ಘೋಷ ವಾಕ್ಯ ನಮ್ಮೊಳಗಿನ ಮಾನವೀಯತೆಯನ್ನು ಜಾಗೃತಿಗೊಳಿಸಿದರೆ ಬಹುಶಃ ನಾವು ವಿಶ್ವಮಾನವತೆಯನ್ನು ಸಾಧಿಸಲು, ಕಾರ್ಪೋರೇಟ್-ಮಾರುಕಟ್ಟೆ ರಾಜಕಾರಣದ ಅಮಾನುಷ ವ್ಯವಸ್ಥೆಯ ವಿರುದ್ಧ ಹೋರಾಡಲು ಸಜ್ಜಾಗಬಹುದು. ಇದು ಜನಾಂದೋಲನಗಳ ಮುಂದಿರುವ ಬೃಹತ್ ಸವಾಲು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ದಾವಣಗೆರೆಯ ಬಾಷಾನಗರ,ಆನೆಕೊಂಡ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮನೆಮನೆಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಮತಯಾಚನೆ ಮಾಡಿ ನಂತರ ಮಾತನಾಡಿದರು.

ರಾಜ್ಯದಲ್ಲಿ ನಿಮ್ಮದೇ ಕಾಂಗ್ರೆಸ್ ಸರ್ಕಾರವಿದ್ದು, ಅದನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದೆ ಎಂದ ಅವರು ಶಾಮನೂರು ಕುಟುಂಬವು ಸದಾ ಜನರ ಸಮಸ್ಯೆಗಳ ಪರಿಹಾರಕ್ಕೆ ನಿಂತುಕೊಳ್ಳುತ್ತದೆ ಎಂಬ ಭರವಸೆಯನ್ನೂ ನೀಡಿದರು.

ಪ್ರಚಾರದ ವೇಳೆ ಸ್ಥಳೀಯರು ತಮ್ಮ ಬೇಡಿಕೆಗಳ ಮನವಿಯನ್ನು ಸಲ್ಲಿಸಿದರ ಬಗ್ಗೆ ಜನರಿಗೆ ಭರವಸೆ ನೀಡಿದರು. ಜನರ ಹಕ್ಕುಪತ್ರದ ಸಮಸ್ಯೆಗಳು ಕುರಿತು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಸಾಕಷ್ಟು ಸಮಸ್ಯೆಗಳನ್ನು ಪರಿಹರಿಸಿದ್ದರು.ಈಗ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಜನರ ಎಲ್ಲಾ ಸಮಸ್ಯೆಗಳ ಪರಿಹಾರ ಮಾಡುತ್ತಿದ್ದಾರೆ ಎಂದರು.

ಯುವ ನಾಯಕ ಸಮರ್ಥ್ ಶಾಮನೂರು ಕುರಿತು ಮಾತನಾಡಿದ ಅವರು ಸಮರ್ಥ್ ಜನರೊಂದಿಗೆ ಉತ್ತಮ ಒಡನಾಟ ಹೊಂದಿರುವುದಾಗಿ ತಿಳಿಸಿದರು. ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸಿ, ಏಪ್ರಿಲ್ 9 ರಂದು ಮತಗಟ್ಟೆಗೆ ಬಂದು ಕ್ರಮ ಸಂಖ್ಯೆ 3ರ ‘ಹಸ್ತ’ ಚಿಹ್ನೆಗೆ ಮತ ಹಾಕಿ ಸಮರ್ಥ್ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು. ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾಕಷ್ಟು ಸಂಖ್ಯೆಯಲ್ಲಿ ಜನರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

Published

on

~ಗೋವರ್ಧನ ನವಿಲೇಹಾಳು

ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.

ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.

ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.

ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.

ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?

ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.

ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.

ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ

Published

on

ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಸರಕಾರದ ದುರಾಡಳಿತ ಸಂಬಂಧ ಆರೋಪ ಪಟ್ಟಿ ಬಿಡುಗಡೆ ಮಾಡಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಕಳೆದ 3 ವರ್ಷಗಳಲ್ಲಿ ಈ ಸರಕಾರ ಒಳ್ಳೆಯ ಕಾರಣಕ್ಕೆ ಯಾವಾಗ ಹೆಸರಾಗಿತ್ತು ಎಂದು ಹೇಳಲೂ ಸಿಗುವುದಿಲ್ಲ. ಭ್ರಷ್ಟಾಚಾರ, ಬೆಲೆ ಏರಿಕೆ, ದರೋಡೆ ಪ್ರಕರಣಗಳು ಸುದ್ದಿಯಾದವು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು 3 ವರ್ಷಗಳಾಗಿವೆ. ಈ ಅವಧಿಯ ಭ್ರಷ್ಟಾಚಾರ, ಬೆಲೆ ಏರಿಕೆ, ದುರಾಡಳಿತ ಕುರಿತ ಚಾರ್ಜ್ ಶೀಟನ್ನು ಇವತ್ತು ಬಿಡುಗಡೆ ಮಾಡಿದ್ದೇವೆ ಎಂದರು.

ಡ್ರಗ್ಸ್ ವಿಚಾರದಲ್ಲಿ ರಾಜ್ಯ ಸುದ್ದಿಯಾಗಿದೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ ಇದೆ. ಸರಕಾರಿ ನೌಕರರು ಆತ್ಮಹತ್ಯೆ ಮಾಡಿಕೊಂಡರು. ಬಾಣಂತಿಯರು, ಹಸುಗೂಸುಗಳ ಸರಣಿ ಸಾವಿನ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಸರಕಾರಿ ಆಸ್ಪತ್ರೆಯಲ್ಲಿ ಔಷಧಿ ಕೊರತೆಗೆ ಈ ಸರಕಾರ ಸುದ್ದಿಯಲ್ಲಿತ್ತು. ಅಂಗನವಾಡಿ ಶಿಕ್ಷಕಿಯರ ಚಳವಳಿ, ಆಶಾ ಕಾರ್ಯಕರ್ತೆಯರ ಚಳವಳಿ, ಅತಿಥಿ ಉಪನ್ಯಾಸಕರಿಂದ ಸಂಬಳ ಸಿಗುತ್ತಿಲ್ಲವೆಂದು ಹೋರಾಟ, ಗುತ್ತಿಗೆ ನೌಕರರ ಹೋರಾಟ- ಹೀಗೆ ಚಳವಳಿಗಳ ಕಾಟಕ್ಕೆ ಈ ಸರಕಾರ ಸುದ್ದಿಯಲ್ಲಿದೆ ಎಂದು ವ್ಯಂಗ್ಯವಾಡಿದರು.

ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ

ಕಳೆದ 3 ವರ್ಷದಲ್ಲಿ ಕೆಟ್ಟ ಕಾರಣಕ್ಕಾಗಿ ಈ ಸರಕಾರ ಸುದ್ದಿಯಲ್ಲಿದೆಯೇ ಹೊರತು ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ವಿಶ್ಲೇಷಿಸಿದರು. ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಲಿಯಾದವರು ನೂರಾರು ಜನ; ರಸ್ತೆ ಗುಂಡಿ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಹೀಗೆ ಪ್ರತಿನಿತ್ಯ ಸರಕಾರ ಸುದ್ದಿಯಲ್ಲಿ ಇರುವುದು ಕೇವಲ ಕೆಟ್ಟ ಕಾರಣಕ್ಕಾಗಿ ಎಂದು ಆರೋಪಿಸಿದರು. ಅಭಿವೃದ್ಧಿ ಕೆಲಸ ಮಾಡಿದ್ದಕ್ಕಾಗಿ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ಆಕ್ಷೇಪಿಸಿದರು.

ಮುಡಾ, ವಾಲ್ಮೀಕಿ ನಿಗಮದ ಹಗರಣ ಮಾನಗೆಟ್ಟ ಕೆಲಸವಲ್ಲವೇ?

ಮುಖ್ಯಮಂತ್ರಿಗಳು ಬಿಜೆಪಿಯವರು ಮಾನಗೆಟ್ಟವರು ಎಂದು ಭಾಷಣದಲ್ಲಿ ಹೇಳಿದ್ದಾರೆ. ಯಾರು ಮುಖ್ಯಮಂತ್ರಿಗಳೇ ಮಾನಗೆಟ್ಟವರು? ಮುಡಾ ಹಗರಣ ಯಾರ ಮೇಲೆ ಬಂತು? ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ನಿಮ್ಮ ಸರಕಾರದ ಸಚಿವರೇ ರಾಜೀನಾಮೆ ಕೊಡಬೇಕಾಯಿತಲ್ಲವೇ? ಇದು ಮಾನಗೆಟ್ಟ ಕೆಲಸವಲ್ಲವೇ? ಎಂದು ಕೇಳಿದರು. ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಬಳಕೆ ಆಗಬೇಕಾದ ಹಣವನ್ನು ನಿಮ್ಮ ಒಬ್ಬ ಸಚಿವರು ಹೆಂಡತಿಗೆ ಒಡವೆ ಕೊಡಿಸಲು, ಚುನಾವಣೆಗೆ ಬಾರ್ ನಿಂದ ಎಣ್ಣೆ ಸರಬರಾಜು ಮಾಡಲು ಹಣ ಬಳಸಿದ್ದು ಮರ್ಯಾದೆ ಇದ್ದವರು ಮಾಡುವ ಕೆಲಸವೇ ಎಂದು ಕೇಳಿದರು.

ಮರ್ಯಾದೆ ಇದ್ದವರು ಅಧಿಕಾರಕ್ಕೆ ಅಂಟಿಕೊಳ್ಳುವರೇ?
ನೀವು ಬಿಜೆಪಿ ಮೇಲೆ ಶೇ 40 ಆರೋಪ ಹೊರಿಸಿ ಅಧಿಕಾರಕ್ಕೆ ಬಂದಿದ್ದೀರಿ. ಗುತ್ತಿಗೆದಾರರು ಶೇ 60 ಕಮಿಷನ್‍ನ ಸರಕಾರ ಎಂದು ನಿಮ್ಮ ಸರಕಾರದ ಮೇಲೆ ಆರೋಪ ಮಾಡಿದ್ದಾರಲ್ಲವೇ? ಮರ್ಯಾದೆ ಇದ್ದವರು ಆ ಆರೋಪ ಕೇಳಿಯೂ ಅಧಿಕಾರಕ್ಕೆ ಅಂಟಿಕೊಳ್ಳುತ್ತಾರಾ ಎಂದು ಪ್ರಶ್ನೆಯನ್ನು ಮುಂದಿಟ್ಟರು. ನಿಮ್ಮ ಅಬಕಾರಿ ಸಚಿವರ ಮೇಲೆ ಬಾರ್ ಮಾಲೀಕರು ತಿಂಗಳ ಮಾಮೂಲಿ ಕೇಳುವ ಕುರಿತು ಆರೋಪ ಮಾಡಿದ್ದಾರಲ್ಲವೇ? ಇದು ಮರ್ಯಾದೆ ಇದ್ದವರು ಮಾಡುವ ಕೆಲಸವೇ? ಮಾನಗೆಟ್ಟವರು ಮಾಡುವ ಕೆಲಸವೇ ಎಂದು ಪ್ರಶ್ನೆ ಹಾಕಿದರು.

ಮುಖ್ಯಮಂತ್ರಿಗಳೇ, ಇಡೀ ಸಂಪುಟದಲ್ಲಿ ಮಾನಗೆಟ್ಟವರು ಇದ್ದಾರೆಯೇ ಹೊರತು ಮರ್ಯಾದೆ ಇದ್ದವರು ಯಾರಿದ್ದಾರೆ ಹೇಳಿ ಎಂದು ಕೇಳಿದರು. ಮಾನಗೆಟ್ಟ ಕೆಲಸ ಮಾಡುವವರನ್ನು ಸಚಿವರನ್ನಾಗಿ ಮಾಡಿಕೊಂಡು, ಶೇ 60ರ ಆರೋಪ ಹೊತ್ತುಕೊಂಡು ನೀವು ಬಿಜೆಪಿ ವಿರುದ್ಧ ಮಾನಗೆಟ್ಟ ಬಿಜೆಪಿ ಎಂದು ಆರೋಪ ಮಾಡುತ್ತೀರಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.

ನಿಮ್ಮದು ದರೋಡೆಕೋರ ಸರಕಾರವಲ್ಲವೇ?

ರಾಜ್ಯದ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಅವರು ಬಿಜೆಪಿಯನ್ನು ಜೇಬುಗಳ್ಳರು ಎಂದಿದ್ದಾರೆ. ನೀವು ಬಿಜೆಪಿ ಸರಕಾರವನ್ನು ಜೇಬುಗಳ್ಳರು ಎಂದು ಕರೆಯುವುದಾದರೆ ಯುದ್ಧದ ಕಾರಣಕ್ಕೆ ಕೆಲವು ಬೆಲೆ ಏರಿಕೆಗಳಾಗಿವೆ. ನಿಮ್ಮ ಸರಕಾರವನ್ನು ದರೋಡೆಕೋರ ಸರಕಾರ ಎಂದು ಕರೆಯುವುದರಲ್ಲಿ ತಪ್ಪೇನಿದೆ ಎಂದು ಕೇಳಿದರು. ನಿಮ್ಮ ಸರಕಾರ ಯಾವ್ಯಾವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ ಎಂಬ ಪಟ್ಟಿ ಕೊಡಲೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.

20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ..

ನಂದಿನಿ ಹಾಲಿನ ದರ ಏರಿಕೆ ಮಾಡಿದ್ದೀರಿ. ಪೆಟ್ರೋಲ್ ಮೇಲೆ 3 ರೂ. ಸೆಸ್, ಡೀಸೆಲ್ ಮೇಲೆ 5.08 ರೂ. ಸೆಸ್ ಹಾಕಿದ್ದೀರಿ. ಕೇಂದ್ರ ಸರಕಾರ ದರ ಇಳಸಿದರೆ ನೀವು ಸೆಸ್ ಹಾಕಿ ಅವರ ಲಾಭ ಜನರಿಗೆ ಸಿಗದಂತೆ ಮಾಡಿದ್ದೀರಿ ಎಂದು ಟೀಕಿಸಿದರು. ಬಸ್ ಪ್ರಯಾಣ ದರ ಶೇ 15, ಮೆಟ್ರೋ ದರ ಶೇ 50ರಷ್ಟು ಹೆಚ್ಚಿಸಿದ್ದೀರಿ. ಪ್ರತಿ ಯೂನಿಟ್ 4.50 ರೂ. ವಿದ್ಯುತ್ ದರವನ್ನು ರೂ 5.90 ಮಾಡಿದ್ದೀರಿ. ವಾಣಿಜ್ಯ ದರವನ್ನು 7 ರೂ.ಗೂ ಹೆಚ್ಚಳ ಮಾಡಲಾಗಿದೆ. ಅಬಕಾರಿ ಸುಂಕವನ್ನು ಶೇ 20ರಷ್ಟು ಏರಿಸಿದ್ದೀರಿ. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದೀರಿ. 20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ. ಅದರ ಜಾಗಕ್ಕೆ 100, 200 ರೂ.ಗಳ ಸ್ಟಾಂಪ್ ಪೇಪರ್ ಖರೀದಿಸಬೇಕಾಗಿದೆ. ನಮ್ಮ ಚಿನ್ನ ನಾವು ಒತ್ತೆ ಇಡಲು 0.5ರಷ್ಟು ಸ್ಟಾಂಪ್ ಡ್ಯೂಟಿ ಕಟ್ಟಬೇಕಾಗಿದೆ ಎಂದು ಆಕ್ಷೇಪಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending