ದಿನದ ಸುದ್ದಿ

ದೇವರಾಜ ಅರಸು ಕೊಟ್ಟ ಕಾಣಿಕೆ ಇತಿಹಾಸದ ಪುಟಗಳಲ್ಲಿ ಮರೆಯಲಾಗದ್ದು : ಸಿ.ಎಂ. ಬಸವರಾಜ ಬೊಮ್ಮಾಯಿ

Published

on

ಸುದ್ದಿದಿನ ಡೆಸ್ಕ್ : ರಾಜ್ಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪ್ರಗತಿಗೆ ದಿವಂಗತ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು(D. Devaraj Urs – Former Chief minister of Karnataka ) ಕೊಟ್ಟ ಕಾಣಿಕೆ ಇತಿಹಾಸದ ಪುಟಗಳಲ್ಲಿ ಮರೆಯಲಾಗದ್ದು, ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Basavaraj Bommai Chief minister of Karnataka ) ಹೇಳಿದ್ದಾರೆ.

ವಿಧಾನಸೌಧದ ಬ್ಯಾಂಕ್ವೇಟ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಏರ್ಪಡಿಸಿದ್ದ ದೇವರಾಜ ಅರಸು
107 ಜನ್ಮ ದಿನಾಚರಣೆ ಹಾಗೂ ಅರಸು ಪ್ರಶಸ್ತಿ ಪ್ರಧಾನ ಮಾಡಿ ಅವರು ಮಾತನಾಡಿದರು.

ರಾಜಕೀಯ ರಂಗದಲ್ಲಿ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ತನ್ನದೇ ಆದ ಸ್ಥಾನ ಪಡೆಯಲು ಕಾರಣರಾಗಿದ್ದಾರೆ. ಕೃಷಿ ಆಧುನೀಕರಣ, ವಿದ್ಯುತ್ ಉತ್ಪಾದನೆ ಮತ್ತು ಹಿಂದುಳಿದವರು ಮತ್ತು ತುಳಿತಕ್ಕೆ ಒಳಗಾದವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಮಹಾನ್ ನಾಯಕ ಎಂದು ಬಣ್ಣಿಸಿದರು.

ಹಿಂದುಳಿದ ವರ್ಗಗಳ ಹಾಸ್ಟೆಲ್‌ಗಳ ಸುಧಾರಣೆ ಮತ್ತು ಮೂಲಸೌಲಭ್ಯಕ್ಕಾಗಿ ಸಚಿವರ ಕೋರಿಕೆಯಂತೆ 250 ಕೋಟಿ ರೂಪಾಯಿ ಅನುದಾನ ಒದಗಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಮೊದಲಾದವರು ಹಾಜರಿದ್ದರು.

ಇದನ್ನೂ ಓದಿ | ಕೆನಡಾದಲ್ಲಿ ಇಂದಿನಿಂದ 65ನೇ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ; ಸ್ಪೀಕರ್ ಓಂ ಬಿರ್ಲಾ ನೇತೃತ್ವದ ಭಾರತೀಯ ನಿಯೋಗ ಭಾಗಿ

ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ದೇವರಾಜ ಅರಸು ಜನ್ಮ ದಿನ ಆಚರಿಸಿದ ವರದಿಗಳು ಬಂದಿವೆ. ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಅರಸು ಜನ್ಮದಿನೋತ್ಸವಕ್ಕೆ ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜು ಚಾಲನೆ ನೀಡಿ, ಜನಕಲ್ಯಾಣ ಯೋಜನೆ ಮೂಲಕವೇ ಕರ್ನಾಟಕಕ್ಕೆ ಹೊಸ ನಾಯಕತ್ವ ಕೊಟ್ಟ ಮಹಾನ್ ನಾಯಕ ಎಂದು ಬಣ್ಣಿಸಿದರು. ಶಾಸಕ ಸಿ.ಟಿ. ರವಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಚಿತ್ರದುರ್ಗದ ತಾರಾಸು ರಂಗಮಂದಿರದಲ್ಲಿ ಸಮಾಜ ಕಲ್ಯಾಣ ಪಶುಸಂಗೋಪನೆ ಮತ್ತು ವಿವಿಧ ಇಲಾಖೆಯ ಸಹಯೋಗದೊಂದಿಗೆ ಏರ್ಪಡಿಸಿದ್ದ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಯನ್ನು ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಉದ್ಘಾಟಿಸಿದರು. ಅರಸು ಜಯಂತಿ ಅಂಗವಾಗಿ ಚಿತ್ರದುರ್ಗ ನಗರದಲ್ಲಿ ಭಾವಚಿತ್ರದ ಮೆರವಣಿಗೆ ನಡೆಯಿತು.

ದಾವಣಗೆರೆಯಲ್ಲಿಂದು ಅರಸು ಅವರ ಭಾವಚಿತ್ರದ ಬೃಹತ್ ಮೆರವಣಿಗೆಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಸಿ ಚಾಲನೆ ನೀಡಿದರು. ವಿವಿಧ ಕಲಾ ತಂಡಗಳು, ಸಂಘ, ಸಂಸ್ಥೆಗಳ ಸಾವಿರಾರು ಮಂದಿ ಭಾಗವಹಿಸಿದ್ದರು.

ನಂತರ ಜಿಲ್ಲಾಡಳಿತ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ್, ಮಾತನಾಡಿ ಈ ನಾಡು ಕಂಡ ಅಭಿವೃದ್ಧಿಯ ಹರಿಕಾರ ಅರಸು ಅವರು ಹಾಕಿಕೊಟ್ಟಿರುವ ಹಾದಿಯಲ್ಲಿ ನಾವೆಲ್ಲ ಸಾಗಬೇಕಿದೆ ಎಂದರು.

ಕಲಬುರಗಿ ಜಿಲ್ಲಾಡಳಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಲಬುರಗಿಯಲ್ಲಿ ಅರಸು ಭಾವಚಿತ್ರದ ಮೆರವಣಿಗೆ ನಡೆಯಿತು. ಹಾವೇರಿಯಲ್ಲಿ ಜಿಲ್ಲಾಡಳಿತ ಇಂದಿನಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ವೈವಿಧ್ಯಮಯ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಸಂಜಯ್ ಶೆಟ್ಟಣ್ಣವರ ಚಾಲನೆ ನೀಡಿದರು.

ಇದೇ ವೇಳೆ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಜಿಲ್ಲೆಯ ಹಾನ್‌ಗಲ್ ತಾಲ್ಲೂಕಿನ ಹುಲಗಡ್ಡಿ ಗ್ರಾಮದ ಚಂದ್ರಶೇಖರ್ ಅವರಿಗೆ 2022-23ನೇ ಸಾಲಿನ ಜಿಲ್ಲಾ ಮಟ್ಟದ ಅರಸು ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಬಳ್ಳಾರಿಯಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಸೋಮಶೇಖರ ರೆಡ್ಡಿ ಅರಸು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರು ನಾಮಕರಣ ಮಾಡಿ, ಭೂಸುಧಾರಣೆ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಭೂರಹಿತರ ಬದುಕಿನಲ್ಲಿ ಹೊಸ ಬೆಳಕು ಮೂಡುವಂತೆ ಮಾಡಿದ ಧೀಮಂತ ನಾಯಕ ಎಂದು ಹೇಳಿದರು.

ದೇವರಾಜ ಅರಸು ಜೀವನ ಸಾಧನೆ ಕುರಿತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಪಕ ಡಾ. ವೆಂಕಟಗಿರಿ ದಳವಾಯಿ ಉಪನ್ಯಾಸ ನೀಡಿದರು. ಜನ್ಮ ದಿನದ ಅಂಗವಾಗಿ ೩ ದಿನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನಾಳೆ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Trending

Exit mobile version