ದಿನದ ಸುದ್ದಿ

ಬಡಮಕ್ಕಳಿಗೆ ಶ್ರೀ ಧರ್ಮಸ್ಥಳ ಸಂಸ್ಥೆ ನೆರವು

Published

on

ಸುದ್ದಿದಿನ,ಹಾಸನ : ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜ್ಞಾನತಾಣ ಕಾರ್ಯಕ್ರಮದಡಿ ಕೊರೊನಾ ಸಂದರ್ಭದಲ್ಲಿ ಶಾಲಾ-ಕಾಲೇಜು ತರಗತಿ ಇಲ್ಲದೆ ಆನ್‍ಲೈನ್ ಕ್ಲಾಸ್‍ನಲ್ಲಿ ಭಾಗಿಯಾಗಲು ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಟ್ಯಾಬ್ ಮತ್ತು ಲ್ಯಾಪ್‍ಟಾಪ್ ಅನ್ನು ರಿಯಾಯ್ತಿ ದರದಲ್ಲಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಆರ್.ಪ್ರಸನ್ನ ಕುಮಾರ್ ಅವರು ಮಾತನಾಡಿ ಹಲವು ದಶಕಗಳಿಂದಲೂ ಜನಮುಖಿ ಸೇವೆ ಮಾಡಿಕೊಂಡು ಬರುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಕೊರೊನಾ ಸಂದರ್ಭದಲ್ಲಿ ಬಡ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುವ ಟ್ಯಾಬ್ ಮತ್ತು ಲ್ಯಾಪ್‍ಟಾಪ್ ವಿತರಣೆ ಮಾಡುವುದು ನಿಜಕ್ಕೂ ಮಾದರಿ ಕೆಲಸ ಎಂದು ತಿಳಿಸಿದರು.

ಗ್ರಾಮೀಣ ಮಕ್ಕಳು ಮೊಬೈಲ್ ಅಥವಾ ಲ್ಯಾಪ್‍ಟಾಪ್ ಜೊತೆಗೆ ನೆಟ್‍ವರ್ಕ್ ಸಮಸ್ಯೆಯಿಂದ ಆನ್‍ಲೈನ್ ಕ್ಲಾಸ್‍ನಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ರಿಯಾಯ್ತಿ ದರದಲ್ಲಿ ಕಲಿಕೆಗೆ ಬೇಕಾದ ಉಪಕರಣ ನೀಡುತ್ತಿರುವುದು ಶ್ಲಾಘನೀಯ ಎಂದ ಅವರು ಸೌಲಭ್ಯ ಪಡೆದ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಇದೇ ವೇಳೆ ಆಯ್ದ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಟ್ಯಾಬ್ ಮತ್ತು ಲ್ಯಾಪ್‍ಟಾಪ್ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಆಫ್ ಕ್ವಾಂಟಾ ಮಾಜಿ ಅಧ್ಯಕ್ಷರಾದ ರಮೇಶ್, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲ್ಲೂಕು ಯೋಜನಾನಾಧಿಕಾರಿ ಪುರುಷೋತ್ತಮ್, ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಜಿ.ಸುರೇಶ್, ಯೋಜನೆ ಸದಸ್ಯರಾದ ಬೊಮ್ಮೇಗೌಡ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version