ದಿನದ ಸುದ್ದಿ
ಸಕ್ಕರೆ ಕಾಯಿಲೆ ಸುತ್ತ ಮುತ್ತ..! ; ಹುಷಾರಾಗಿರಿ..!
ಪ್ರಪಂಚದಲ್ಲಿ ಅತಿ ಹೆಚ್ಚು ಸಕ್ಕರೆ ಕಾಯಿಲೆ ಇರುವ ನಂಬರ್ ಒನ್ ದೇಶ ಚೀನಾ, ಭಾರತ ಎರಡನೇ ಸ್ಥಾನದಲ್ಲಿದೆ. 2025 ರಲ್ಲಿ ಭಾರತವೇ ನಂಬರ್ ಒನ್ ಆಗಲಿದೆ ಎಂದು ವೈದ್ಯಕೀಯ ಜಗತ್ತು ಹೇಳುತ್ತಿದೆ. ನಮ್ಮ ದೇಶದಲ್ಲಿ ಸಾಕಷ್ಟು ಆಸ್ಪತ್ರೆಗಳಿವೆ. ಸಾಕಷ್ಟು ವೈದ್ಯರಿದ್ದಾರೆ. ಪ್ರತಿಯೊಂದು ಕಾಯಿಲೆಗೂ ಉತ್ತಮವಾದ ಔಷಧಿಗಳೂ ಇವೆ.
ಒಟ್ಟಿನಲ್ಲಿ ವೈದ್ಯಕೀಯ ಕ್ಷೇತ್ರ ಅತ್ಯಂತ ಮುಂದುವರೆದಿದೆ. ಆದರೂ ಬಿಪಿ ಶುಗರ್ ನಿಯಂತ್ರಣ ಏಕೆ ಸಾಧ್ಯವಾಗುತ್ತಿಲ್ಲ. ಇಂದಿಗೂ ಅನೇಕ ವೈದ್ಯರು ಬಿಪಿ ಶುಗರ್ ಕಾಯಿಲೆಗೆ ಔಷಧಿ ಜೀವನ ಪರ್ಯಂತರ ತೆಗೆದುಕೊಳ್ಳಲೇಬೇಕೆಂದು ಏಕೆ ಹೇಳುತ್ತಿದ್ದಾರೆ? ಈ ಬಗ್ಗೆ ಆಳವಾಗಿ ನೋಡಿದಾಗ ಪ್ರಮುಖವಾಗಿ ಇಂದಿನ ಅಧಿಕ ಜನರು ಅಧಿಕ ಆಹಾರ ಸೇವಿಸುತ್ತಿದ್ದಾರೆ. ಪದೇ ಪದೇ ಆಹಾರ ಸೇವಿಸುತ್ತಿದ್ದಾರೆ. ಪ್ರತಿದಿನ ಮೂರು ಹೊತ್ತು ಊಟ ಮಾಡಲೇಬೇಕು. ಹಸಿವೆ ಇರಲಿ ಇಲ್ಲದಿರಲಿ ಆಹಾರ ಸೇವಿಸುತ್ತಿದ್ದಾರೆ. ಅದರಲ್ಲೂ ಪ್ರಕೃತಿಯಿಂದ ಗಿಡ ಮರಗಳಿಂದ ಬರುವ ಆಹಾರವನ್ನು ನೇರವಾಗಿ ಸೇವಿಸುತ್ತಿಲ್ಲ. ಪ್ರತಿಯೊಂದು ಆಹಾರವೂ ಪ್ರೊಸೆಸ್ಡ್ ಪ್ಯಾಕ್ಡ್ ಆಗಿ ಬರುತ್ತಿದೆ. ಅದರಲ್ಲೂ ಎಣ್ಣೆಯಲ್ಲಿ ಕರಿದ, ಮಸಾಲೆಯಿಂದ ರುಚಿಕರವಾದ ಆಹಾರವೇ ಬೇಕು. ಉಪವಾಸ ಮಾಡುವವರು ಅತಿ ಕಡಿಮೆಯಾಗಿದ್ದಾರೆ. ಇದಕ್ಕೆಲ್ಲ ಕಾರಣ ಇಂದಿನ ಜನರಲ್ಲಿ ಅಧಿಕ ಹಣವಿದೆ. ಆಹಾರದ ಕೊರತೆಯಿಲ್ಲ. ಮನೆಯಲ್ಲಿ ಊಟವಿಲ್ಲವೆಂದರೆ ಹೋಟೆಲ್ಗೆ ಹೋಗಿ ಊಟ ಮಾಡುತ್ತಾರೆ. ಖಾಲಿ ಹೊಟ್ಟೆಯಲ್ಲಿ ಮಾತ್ರ ಇರುವುದಿಲ್ಲ.
ದೇಶದ ಶೇಕಡ 20 ರಷ್ಟು ಜನರಿಗೆ ತಮಗೆ ಬಿಪಿ ಮತ್ತು ಸಕ್ಕರೆ ಕಾಯಿಲೆ ಇರುವ ಬಗ್ಗೆ ಅರಿವೆಯೇ ಇರುವುದಿಲ್ಲ. ಶೇ.20 ರಷ್ಟು ಜನರು ತಮಗೆ ಬಿಪಿ ಅಥವಾ ಶುಗರ್ ಕಾಯಿಲೆ ಇಲ್ಲದೆ ಇದ್ದರೂ ಮಾತ್ರೆ ಸೇವಿಸುತ್ತಿದ್ದಾರೆ. ಶೇಕಡ 50 ರಷ್ಟು ಜನರು ಆಹಾರ ಮತ್ತು ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳದೇ ಬಿಪಿ ಸಕ್ಕರೆ ಕಾಯಿಲೆಗೆ ಮಾತ್ರೆ ಸೇವಿಸುತ್ತಿದ್ದಾರೆ. ಶೇಕಡ 30 ರಷ್ಟು ಜನರು ಅನವಶ್ಯಕ ಅತಿಯಾದ ನಿರಂತರ ಔಷಧಿಗಳ ಸೇವನೆಯಿಂದ ಹೈಬಿಪಿ ಮತ್ತು ಶುಗರ್ ಕಾಯಿಲೆಗೆ ಈಡಾಗುತ್ತಿದ್ದಾರೆ. ಬಿಪಿ ಮತ್ತು ಶುಗರ್ ಕಾಯಿಲೆ ಇವೆರಡೂ ಅಣ್ಣ ತಮ್ಮಂದಿರಿದ್ದಂತೆ. ಒಂದು ಬಂದರೆ ಇನ್ನೊಂದು ಬರಲೇಬೇಕು. ಇವೆರಡೂ ಬಂದಾಗ ಇತರೆ ಎಲ್ಲಾ ಕಾಯಿಲೆಗಳು ಒಂದೊಂದಾಗಿ ಬರುತ್ತವೆ.
ನಮ್ಮ ದೇಹದಲ್ಲಿರುವ ಮೇದೋಜೀರಕ ಗ್ರಂಥಿಯು (pancreatitis) ಶುಗರ್ ಕಾಯಿಲೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ಮೆದೋಜೀರಕ ಗ್ರಂಥಿಯು ಆಹಾರ ಜೀರ್ಣಗೊಳಿಸಲು ಕೆಲವು ರಾಸಾಯನಿಕಗಳನ್ನು ಉತ್ಪತ್ತಿ ಮಾಡುತ್ತದೆ. ಜೊತೆಗೆ ಇನ್ಸುಲಿನ್ ಉತ್ಪಾದಿಸುವ ಕೆಲಸವನ್ನೂ ಇದು ಮಾಡುತ್ತದೆ. ನಾವು ಸೇವಿಸುವ ಕೆಟ್ಟ ಆಹಾರದಿಂದ, ಕೆಟ್ಟ ಜೀವನ ಶೈಲಿಯಿಂದ ಈ ಮೆದೋಜೀರಕ ಗ್ರಂಥಿಯು ಬಲಹೀನಗೊಂಡು ಇನ್ಸುಲಿನ್ ಅನ್ನು ಕಡಿಮೆ ಉತ್ಪಾದಿಸುತ್ತದೆ ಅಥವಾ ಉತ್ಪಾದಿಸುವದನ್ನೇ ನಿಲ್ಲಿಸಿ ಬಿಡುತ್ತದೆ. ಆಗಲೇ ಶುಗರ್ ಕಾಯಿಲೆ ನಮಗೆ ಬರುತ್ತದೆ.
ನಾನು ಈ ಲೇಖನದಲ್ಲಿ ಜನಸಾಮಾನ್ಯರಿಗೆ ಅರ್ಥವಾಗುವಂತೆ ಸರಳವಾಗಿ ಮಾಹಿತಿ ಒದಗಿಸಿರುತ್ತೇನೆ. ನಾನು ತಿಳಿಸಿರುವ ಈ ಚಿಕಿತ್ಸಾ ಪದ್ಧತಿಯು ವಿಶ್ವದಲ್ಲಿಯೇ ಶ್ರೇಷ್ಠ ಚಿಕಿತ್ಸಾ ಪದ್ದತಿಯಾಗಿದೆ. ಇದನ್ನು 100% ಪಾಲಿಸುವ ಮೂಲಕ ನಿಮ್ಮ ಶುಗರ್ ಕಾಯಿಲೆಯನ್ನು 100% ಕಂಟ್ರೋಲ್ನಲ್ಲಿ ಇಡಬಹುದು. ಎಲ್ಲಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿದಲ್ಲಿ ನಿಮ್ಮ ಅನುಭವಕ್ಕೆ ಬರುತ್ತದೆ. ಅವರವರ ದೇಹ ಪ್ರಕೃತಿಗೆ ಅನುಗುಣವಾಗಿ ನಿಯಂತ್ರಣ ಹೊಂದಲು, ಗುಣಮುಖ ಹೊಂದಲು ಹೆಚ್ಚು ಕಡಿಮೆ ಸಮಯ ತೆಗೆದುಕೊಳ್ಳಬಹುದು. ಆದರೆ, ಶಾಶ್ವತ ಪರಿಹಾರ ಸಿಗುತ್ತದೆ.
ಸಕ್ಕರೆ ಕಾಯಿಲೆ ಎಂದರೇನು?
ಅಧಿಕ ಸಕ್ಕರೆ ಸೇವನೆಯಿಂದ ಸಕ್ಕರೆ ಕಾಯಿಲೆ ಬರುತ್ತದೆ ಎಂದು ಅನೇಕರು ತಿಳಿದುಕೊಂಡಿದ್ದಾರೆ. ಆದರೆ, ಇದು ತಪ್ಪು. ಏಕೆಂದರೆ ನಾವು ಪ್ರತಿ ದಿನ ಬೆಳಿಗ್ಗೆಯಿಂದ ರಾತ್ರಿಯವರೆಗೂ ಸೇವಿಸುವ ಎಲ್ಲಾ ಆಹಾರಗಳು ಕಾರ್ಬೋಹೈಡ್ರೇಟ್ ಎಂಬ ಸಕ್ಕರೆ ಅಂಶವನ್ನು ಹೊಂದಿರುತ್ತವೆ. ಅಂದರೆ, ನಾವು ಪ್ರತಿ ದಿನ ಸೇವಿಸುವ ಅನ್ನ, ಚಪಾತಿ, ಇಡ್ಲಿ, ವಡಾ, ದೋಸೆ ಇತರೆ ಎಲ್ಲವುಗಳಲ್ಲೂ ಶೇ.50 ಕ್ಕಿಂತ ಹೆಚ್ಚು ಸಕ್ಕರೆ ಅಂಶವಿರುತ್ತದೆ. ಈ ಆಹಾರ ಸೇವಿಸಿದಾಗ ಜೀರ್ಣಗೊಂಡು ಗ್ಲುಕೋಸ್ ರೂಪದಲ್ಲಿ ಪರಿವರ್ತನೆ ಹೊಂದಿ ರಕ್ತ ಸೇರುತ್ತದೆ. ರಕ್ತ ಸೇರಿದ ಈ ಗ್ಲುಕೋಸನ್ನು ಮೆದೋಜೀರಕ ಗ್ರಂಥಿ ಬಿಡುಗಡೆ ಮಾಡುವ ಇನ್ಸುಲಿನ್ ಎಂಬ ಹಾರ್ಮೋನು ರಕ್ತದ ಮೂಲಕ ಶರೀರದ ಎಲ್ಲಾ ಜೀವಕೋಶಗಳಿಗೆ ತಲುಪಿಸುತ್ತದೆ. ಆಗಲೇ ನಮಗೆ ಶಕ್ತಿ ಬರುತ್ತದೆ. ಈ ಗ್ಲುಕೋಸ್ ಜೀವಕೋಶಗಳಿಗೆ ತಲುಪದೇ ರಕ್ತದಲ್ಲಿಯೇ ಅಧಿಕವಾಗಿ ಸಂಗ್ರಹವಾಗುವುದನ್ನು ಸಕ್ಕರೆ ಕಾಯಿಲೆ ಎನ್ನುವರು.
ಟೈಪ್-1 ಮತ್ತು ಟೈಪ್-2 ಡಯಾಬಿಟೀಸ್ ಎಂದರೇನು?
ಕೆಲವು ಕಾರಣಗಳಿಂದ ಮೆದೋಜೀರಕ ಗ್ರಂಥಿಯು ಇನ್ಸುಲಿನ್ ಕಡಿಮೆ ಉತ್ಪಾದಿಸುತ್ತದೆ ಅಥವಾ ಉತ್ಪಾದಿಸುವುದನ್ನೆ ನಿಲ್ಲಿಸಿಬಿಡುತ್ತದೆ. ಆಗ ರಕ್ತದಲ್ಲಿರುವ ಗ್ಲುಕೋಸ್ ಉಪಯೋಗವಾಗದೆ ರಕ್ತದಲ್ಲಿಯೇ ಅಧಿಕವಾಗಿ ಉಳಿದುಬಿಡುತ್ತದೆ. ಇದನ್ನು ಟೈಪ್-1 ಡಯಾಬಿಟೀಸ್ ಎನ್ನುವರು. ಇದು ಮಕ್ಕಳಲ್ಲಿ ಅತಿ ಹೆಚ್ಚಾಗಿ ಕಂಡುಬರುತ್ತದೆ. ಕೆಲವರಲ್ಲಿ ಮೇದೋಜೀರಕ ಗ್ರಂಥಿ ಅಗತ್ಯ ಇನ್ಸುಲಿನ್ ಉತ್ಪಾದಿಸಿದರೂ ಗ್ಲುಕೋಸ್ ಉಪಯೋಗಿಸಿಕೊಳ್ಳಲು ಜೀವಕೋಶಗಳು ವಿಫಲವಾಗುತ್ತವೆ. ಇದರಿಂದಲೂ ರಕ್ತದಲ್ಲಿ ಅಧಿಕ ಗ್ಲುಕೋಸ್ ಸಂಗ್ರಹವಾಗುತ್ತದೆ. ಇದನ್ನೇ ಟೈಪ್-2 ಡಯಾಬಿಟೀಸ್ ಎನ್ನುವರು. ಇದು ಇಂದು ಎಲ್ಲರಲ್ಲೂ ಅತೀ ಹೆಚ್ಚಾಗಿ ಕಂಡುಬರುತ್ತಿದೆ.
ಅತಿಯಾದ ಹಸಿವು, ಪದೇ ಪದೇ ಮೂತ್ರ ವಿಸರ್ಜನೆ, ತೂಕ ಕಡಿಮೆಯಾಗುವುದು, ಗಾಯ ವಾಸಿಯಾಗಲು ವಿಳಂಬ, ಕಣ್ಣು ಮಂಜಾಗುವುದು, ಇವು ಸಕ್ಕರೆ ಕಾಯಿಲೆಯ ಪ್ರಮುಖ ಲಕ್ಷಗಳಾಗಿವೆ. ಇವುಗಳಲ್ಲಿ ಕೆಲವು ಲಕ್ಷಣಗಳು ಕಾಣದೇ ಇರಬಹುದು. ಈ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದಲ್ಲಿ ಶುಗರ್ ಪರೀಕ್ಷೆ ಮಾಡಿಸಿಕೊಳ್ಳಿ.
ಸಕ್ಕರೆ ಕಾಯಿಲೆ ಬರಲು ಕಾರಣವೇನು?
ಪ್ರಮುಖವಾಗಿ ಎರಡು ಕಾರಣಗಳಿಂದ ಸಕ್ಕರೆ ಕಾಯಿಲೆ ಬರುತ್ತದೆ. ತಪ್ಪಾದ ಆಹಾರ ಸೇವನೆ ಮತ್ತು ತಪ್ಪಾದ ಜೀವನ ಶೈಲಿಯಿಂದ ಸಕ್ಕರೆ ಕಾಯಿಲೆ ಬರುತ್ತದೆ. ಪ್ರೊಸೆಸ್ಡ್ ಪ್ಯಾಕ್ಡ್ ಫುಡ್ ಸೇವನೆ, ಕರಿದ ಹುರಿದ ಆಹಾರ, ಅತಿಯಾದ ಆಹಾರ, ಪದೇ ಪದೇ ಆಹಾರ ಸೇವನೆ, ತೂಕ ಹೆಚ್ಚಳ, ಅನವಶ್ಯಕ ಅತಿಯಾದ ಔಷಧಿಗಳ ಸೇವನೆ, ರೋಗ ನಿರೋಧಕ ವ್ಯವಸ್ಥೆಯ ಅಸಮತೋಲನ, ಅನುವಂಶಿಕ, ಮಾನಸಿಕ ಒತ್ತಡ, ಮತ್ತು ದೈಹಿಕ ಶ್ರಮ ಇಲ್ಲದೇ ಇರುವುದು ಈ ಎಲ್ಲಾ ಕಾರಣಗಳಿಂದಲೂ ಸಕ್ಕರೆ ಕಾಯಿಲೆ ಬರುತ್ತದೆ.
ಸಕ್ಕರೆ ಕಾಯಿಲೆಯ ನಾರ್ಮಲ್ ರೇಂಜ್
ಖಾಲಿ ಹೊಟ್ಟೇಲಿ 100 ರೊಳಗೆ ಇದ್ದಲ್ಲಿ ನಾರ್ಮಲ್, ಊಟದ ನಂತರ 140 ರೊಳಗಿದ್ದಲ್ಲಿ ನಾರ್ಮಲ್ ಎಂದು ವೈದ್ಯಕೀಯ ಕ್ಷೇತ್ರವು ಪರಿಗಣಿಸಿದೆ. ನಿಮಗೆ ಖಾಲಿ ಹೊಟ್ಟೇಲಿ 100 ರಿಂದ 126 ರೊಳಗಿದ್ದಲ್ಲಿ ಮತ್ತು ಊಟದ ನಂತರ 140 ರಿಂದ 200ರ ರೊಳಗಿದ್ದಲ್ಲಿ ನಿಮಗೆ ಸಕ್ಕರೆ ಖಾಯಿಲೆ ಬರುವ ಸಂಭವವಿರುತ್ತದೆ. ಮುಂಜಾಗ್ರತೆಯಾಗಿ ನಿಮ್ಮ ಆಹಾರದಲ್ಲಿ ಬದಲಾವಣೆ ಮತ್ತು ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಆದರೆ, ಶುಗರ್ ಮಾತ್ರೆ ತೆಗೆದುಕೊಳ್ಳುವ ಅವಶ್ಯಕತೆ ಇರುವುದಿಲ್ಲ. ಒಂದು ವೇಳೆ ಖಾಲಿ ಹೊಟ್ಟೇಲಿ 126ರ ಮೇಲಿದ್ದಲ್ಲಿ ಮತ್ತು ಊಟದ ನಂತರ 200 ಕ್ಕಿಂತ ಮೇಲಿದ್ದಲ್ಲಿ ನಿಮಗೆ ಸಕ್ಕರೆ ಕಾಯಿಲೆ ಇದ್ದು, ನಿಮ್ಮ ಆಹಾರದಲ್ಲಿ ಬದಲಾವಣೆ ಮತ್ತು ಜೀವನ ಶೈಲಿಯಲ್ಲಿ ಬದಲಾವಣೆ ಜೊತೆಗೆ ಅಲ್ಪ ಪ್ರಮಾಣದ ಶುಗರ್ ಔಷಧ ತೆಗೆದುಕೊಳ್ಳಲೇಬೇಕು. (ಬರಹ :ಸೂರ್ಯಕಾಂತ ಸಜ್ಜನ್)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.
ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.
ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.
ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.
ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.
ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.
ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.
ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್ನಾಯ್ಕ್.
ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ1 day agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ1 day agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

