ದಿನದ ಸುದ್ದಿ
ಪಂಚಾಯಿತಿ ಗ್ರಂಥಾಲಯಗಳಲ್ಲಿ ಡಿಜಿಟಲೀಕರಣ
![](https://suddidina.com/wp-content/uploads/2024/05/panchayiti_suddidina.jpg)
ಸುದ್ದಿದಿನ,ದಾವಣಗೆರೆ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಫೌಂಡೇಷನ್ ಮತ್ತು ಡೆಲ್ ಸಂಸ್ಥೆಯ ಸಹಯೋಗದಲ್ಲಿ ಈ ವರ್ಷ ಜಿಲ್ಲೆಯಲ್ಲಿನ 20 ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ತಿಳಿಸಿದರು.
ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶಿಕ್ಷಣ ಫೌಂಡೇಷನ್ ಸಿ.ಇ.ಓ. ಲೆಪ್ಟಿನೆಂಟ್ ಕಮಾಂಡರ್ ಸುನಿಲ್.ಎನ್ ರವರು ಮತ್ತು ಆರೋಗ್ಯ, ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಫೌಂಡೇಷನ್ ಮತ್ತು ಡೆಲ್ ಸಂಸ್ಥೆಯ ಸಹಯೋಗದಲ್ಲಿ ರಾಜ್ಯದ 6000 ಸಾವಿರ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ 4000 ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಡಿಜಿಟಲೀಕರಣ ಮಾಡುವ ಕಾರ್ಯ ಮುಂದುವರೆದಿದೆ. ಈ ವರ್ಷ ರಾಜ್ಯದ 1000 ಗ್ರಂಥಾಲಯಗಳಿಗೆ ಡಿಜಿಟಲೀಕರಣ ಅಳವಡಿಕೆ ಹಾಗೂ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮ ಅನುμÁ್ಠನ ಮಾಡಲಾಗುತ್ತಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಕಳೆದ ವರ್ಷ 61 ಗ್ರಾಮ ಪಂಚಾಯತ್ ಗ್ರಂಥಾಲಯಗಳಿಗೆ ಡಿಜಿಟಲಿಕರಣದ ಮೂಲಕ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮ ಅನುμÁ್ಠನ ಮಾಡಲಾಗಿದೆ. ಜೊತೆಗೆ ಈ ವರ್ಷ 20 ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಈ ಕಾರ್ಯಕ್ರಮವನ್ನು ಅನುμÁ್ಠನ ಮಾಡುವ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು.
ಗ್ರಾಮಾಂತರ ಪ್ರದೇಶದಲ್ಲಿನ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಕೌಶಲಗಳನ್ನು ಅಭಿವೃದ್ಧಿಪಡಿಸುವುದು, ಈ ಯೋಜನೆಯ ಉದ್ದೇಶವಾಗಿದೆ. ಇದಕ್ಕೆ ಪೂರಕವಾಗಿ ಲ್ಯಾಪ್ಟಾಪ್, ಆಂಡ್ರಾಯ್ಡ್ ಮೊಬೈಲ್. ಮಾನಿಟರ್, ಟಿವಿ, ಇಂಟರ್ನೆಟ್ ಸಂಪರ್ಕ ಸೇರಿ ಮೂಲ ತಾಂತ್ರಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಶಿಕ್ಷಣ ಫೌಂಡೇಷನ್ ಸಿ.ಇ.ಓ. ಲೆಪ್ಟಿನೆಂಟ್ ಕಮಾಂಡರ್ ಸುನಿಲ್.ಎನ್ ಮಾತನಾಡಿ ಶಿಕ್ಷಣ ಪೀಡಿಯಾ ಆಪ್ ಮೂಲಕ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಾಠ, ನೋಟ್ಸ್, ಸಂಬಂಧಿಸಿದ ವಿಡಿಯೋ, ಚಿತ್ರಗಳನ್ನು ಒದಗಿಸಲಾಗಿದೆ. ಪಿಯುಸಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳಿವೆ. ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸಣ್ಣ ಕಥೆಗಳಿವೆ. ಅಲ್ಲದೇ ಯುವಕರು ಡಿಜಿಟಲ್ ಕೌಶಲಗಳನ್ನು ಬೆಳೆಸಿಕೊಳ್ಳಲು ಬೇಕಾದ ವ್ಯವಸ್ಥೆಯಿದೆ. ವಿದ್ಯಾರ್ಥಿಗಳು ತಮ್ಮ ಸದಸ್ಯತ್ವ ಸಂಖ್ಯೆಯನ್ನು ನಮೂದಿಸುವ ಮೂಲಕ ಈ ಆಪ್ನ ಪ್ರಯೋಜನ ಪಡೆಯಬಹುದಾಗಿದೆ. ಜತೆಗೆ ಆನ್ಲೈನ್ ಸೇವೆಗಳು, ಅರ್ಜಿ ಸಲ್ಲಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಮಾಹಿತಿ ಇಲ್ಲಿ ಲಭ್ಯ ಹಾಗೂ ಸ್ವ ಸಹಾಯ ಸಂಘದ ಸದಸ್ಯರುಗಳಿಗೆ ಡಿಜಿಟಲ್ ಸ್ಕಿಲ್ಸ್ ಗೆ ಸಂಬಂಧಿಸಿದ ಮಾಹಿತಿ ಅಧಿವೇಶನವನ್ನು ನಡೆಸಲು ಯೋಜನೆ ರೂಪಿಸಲಾಗಿದೆ. ಜೊತೆಗೆ ಯುವಕರಿಗೆ ಕೃತಕ ಬುದ್ದಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ಕುರಿತು ಈ ವರ್ಷ ಮಾಹಿತಿ ನೀಡುವ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು.
ಶಿಕ್ಷಣ ಫೌಂಡೇಶನ್ ಆಯ್ಕೆಮಾಡಿಕೊಂಡ ಎಲ್ಲಾ ಗ್ರಾಮ ಪಂಚಾಯತ್ನ ಗ್ರಂಥಾಲಯಗಳಲ್ಲಿ ಡಿಜಿಟಲ್ ಸ್ಕಿಲ್ಸ್, ಶೈಕ್ಷಣಿಕ ವರ್ಷದ ಪಠ್ಯಪುಸ್ತಕದ ತರಗತಿಗಳು ಹಾಗೂ ಪಠ್ಯಾಂಶಗಳು, ವೃತ್ತಿ ಮಾರ್ಗದರ್ಶನ ವಿಷಯಗಳ ಕುರಿತು ಆನ್ಲೈನ್, ಆಫ್ಲೈನ್ ತರಬೇತಿಗಳ ಅಧಿವೇಶನಗಳನ್ನು ನಡೆಸುತ್ತಿದೆ. ಈ ತರಬೇತಿ ಅವಧಿಗಳು ಆಫ್ಲೈನ್ ಅಪ್ಲಿಕೇಶನ್ ಮೂಲಕ ಲಭ್ಯವಿರುತ್ತವೆ, ಇದನ್ನು ಯುವಕರು ಮತ್ತು ಮಕ್ಕಳು ಯಾವುದೇ ಸ್ಮಾರ್ಟ್ ಪೋನ್ನಲ್ಲಿ ನೋಡಬಹುದಾಗಿದೆ. ಫೌಂಡೇಶನ್ ಹೆಚ್ಚುವರಿಯಾಗಿ ಆಂಡ್ರಾಯ್ಡ್ ಆಧಾರಿತ ಸಾಪ್ಟ್ವೇರ್ ಅನ್ನು ಅಭಿವೃದ್ಧಿಪಡಿಸುತ್ತಿದೆ, ಇದು ಪ್ರತಿ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ನಡೆಯುತ್ತಿರುವ ಕೆಲಸವನ್ನು ಪ್ರದರ್ಶಿಸಲು ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಶಿಕ್ಷಣ ಫೌಂಡೇಷನ್ ಸಂಸ್ಥೆಯ ಶಂಭುಲಿಂಗ, ಗುರುಪಾದಪ್ಪ, ಸುರೇಶ್ ನಾಯ್ಕ ಹಾಗೂ ಇನ್ನಿತರರು ಭಾವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ಅಂತರಂಗ
ಆತ್ಮಕತೆ | ಅಪ್ಪನ ಮೈಸೂರು ಭೇಟಿ ಸಾವು – ನೋವು
![](https://suddidina.com/wp-content/uploads/2024/06/Runadagani_part7_suddidina.jpg)
- ರುದ್ರಪ್ಪ ಹನಗವಾಡಿ
ನಾನು ಮೈಸೂರಿನಲ್ಲಿ ಅಧ್ಯಾಪಕನಾಗಿ ಕೆಲಸ ನಿರ್ವಹಿಸುತ್ತಿರುವುದರ ಬಗ್ಗೆ ತಿಳಿದ ನಮ್ಮೂರಲ್ಲಿ ಎಲ್ಲರಿಗೂ ಸಂತೋಷವಾಗಿತ್ತು. ಅತ್ಯಂತ ಸಂತೋಷಗೊಂಡಿದ್ದ ಅಪ್ಪನನ್ನು ನಾನು ಮೈಸೂರಿಗೆ ಕರೆದುಕೊಂಡು ಬಂದು ಒಮ್ಮೆ ತೋರಿಸಬೇಕೆಂದು ಯೋಚಿಸಿದ್ದೆ. ಅಪ್ಪನು ಓಡಾಡಲು ಶಕ್ತಿ ಇದ್ದ ಕಾಲದಲ್ಲಿ ಎಲೆ ವ್ಯಾಪಾರಕ್ಕಾಗಿ ಧಾರವಾಡ, ಕಂಪ್ಲಿ, ಗಂಗಾವತಿ, ಹೊಸಪೇಟೆ, ಹರಿಹರ, ದಾವಣಗೆರೆ ಸಂತೆಗಳಲ್ಲಿ ಓಡಾಡುತ್ತಿದ್ದನು. ಇತ್ತೀಚೆಗೆ ಅವರಿಗೆ ಇದ್ದ ಕೆಮ್ಮು ದಮ್ಮುಗಳಿಂದ ಹೊರ ಊರುಗಳಿಗೆಲ್ಲೂ ಹೋಗುತ್ತಿರಲಿಲ್ಲ. ಅಪ್ಪನ ಹೆಚ್ಚಾದ ವಯಸ್ಸಿನ ಕಾರಣದಿಂದಲೇ ಹರಿಹರದಲ್ಲಿ ಹೈಸ್ಕೂಲಿಗೆ ಸೇರಿದ್ದ ಅಣ್ಣ ತಿಪ್ಪಣ್ಣನನ್ನು ಶಾಲೆ ಬಿಡಿಸಿ ತೋಟದ ಕೆಲಸಕ್ಕೆ ಹಾಕಿಕೊಂಡಿದ್ದ. ಹಾಗಾಗಿ ಈಗೆಲ್ಲ ಸಂತೆಗಳಿಗೆ ಅಣ್ಣನನ್ನೇ ಕಳಿಸುತ್ತಿದ್ದ.
ನಾನು ಮೈಸೂರಿನಲ್ಲಿ ಮತ್ತೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪುನಃ ನನ್ನ ಉಪನ್ಯಾಸಕ ಹುದ್ದೆಯನ್ನು ವಿಶ್ವವಿದ್ಯಾಲಯ ಮುಂದುವರೆಸಿತು. ಈ ನಡುವೆ ಪಾಲ್ ಇ ಸೈಮನ್ಸ್ ಅವರ ಪ್ರಾಜೆಕ್ಟ್ ಪೂರ್ಣಗೊಂಡಿತ್ತು. ಹಾಗಾಗಿ ಅವರು ವಾಪಸ್ ಅಮೇರಿಕೆಗೆ ಹೊರಟುಹೋದರು. ಹೋಗುವ ಮುನ್ನ ತಮ್ಮಲ್ಲಿದ್ದ ರ್ಯಾಲೀ ಬೈಸಿಕಲ್ ಮತ್ತು ಆರಾಮವಾಗಿ ಕೂರಲು ತೆಗೆದುಕೊಂಡಿದ್ದ `ಇಸೀ ಚೇರ್’ನ್ನು ನನಗೆ ಇಟ್ಟುಕೊಳ್ಳಲು ಹೇಳಿದರು. ಉಳಿದಂತೆ ತನ್ನೆಲ್ಲ ವಸ್ತುಗಳನ್ನು ಅಚ್ಚುಕಟ್ಟಾಗಿ ಪ್ಯಾಕ್ ಮಾಡಿಕೊಳ್ಳಲು ನಾನು ಸಹಕರಿಸಿದೆ.
ಈ ಸಮಯಕ್ಕಾಗಲೇ ಮಹೇಶ ರಾಜ್ಯಶಾಸ್ತçದಲ್ಲಿ ಎಂ.ಎ. ಮುಗಿಸಿದ್ದ. ಅವನು ಮುಂದೆ ಕಾನೂನು ವ್ಯಾಸಂಗ ಮಾಡಲು ಮೈಸೂರಿನಲ್ಲಿಯೇ ಇರುವ ತೀರ್ಮಾನ ಮಾಡಿದ್ದ. ಹಾಗಾಗಿ ಹಾಲಿ ಇದ್ದ ಮನೆಯನ್ನು ನಾನು ಬಿಟ್ಟು
ಕೆ.ಜಿ. ಕೊಪ್ಪಲಲ್ಲಿ ನಾನು ಅವನೂ ಸೇರಿ ಬಾಡಿಗೆ ಮನೆ ಮಾಡಿದೆವು. ನಂತರದಲ್ಲಿ ನಮ್ಮ ಊರಿನಲ್ಲಿ ಪಿಯುಸಿ ಪಾಸು ಮಾಡಿ ಊರಲ್ಲಿದ್ದ ಬಾರಿಕರ ಮಾಂತೇಶಿ, ಐನೇರ ಮುಕ್ತಾಯಕ್ಕ ಇವರುಗಳು ಕೂಡ ಮೈಸೂರಿಗೆ ಬಂದು ಓದು ಮುಂದುವರೆಸಲು ನನ್ನ ಸಹಾಯ ಕೋರಿದ್ದರು. ನಾನು ಅವರನ್ನೂ ಸಹ ನನ್ನ ಜೊತೆಗೆ ಮೈಸೂರಿಗೆ ಕರೆತಂದು, ಮುಕ್ತಾಯಕ್ಕನಿಗೆ ಸರಸ್ವತಿಪುರಂನಲ್ಲಿ ಸಣ್ಣ ಬಾಡಿಗೆ ಮನೆ ಮಾಡಿಕೊಟ್ಟು ಮಾಂತೇಶಿಗೆ ಮಹಾರಾಜ ಕಾಲೇಜಿನಲ್ಲಿ ಮತ್ತು ಬಿ.ಸಿ.ಎಂ. ಹಾಸ್ಟೆಲ್ನಲ್ಲಿ ಸೀಟು ಕೊಡಿಸಿ ಬಿ.ಎ. ಮುಂದುವರೆಸಲು ಅವಕಾಶ ಮಾಡಿಕೊಟ್ಟೆ. ಈ ನಡುವೆ ನಾನು ಊರಿಗೆ ಹೋದಾಗ ನನ್ನ ಅವ್ವನ ತಂಗಿ ಮಗ ಸಿರಿಗೇರಿ ರಾಮಣ್ಣ ಬಿ.ಎ. ಪದವಿ ಕೋರ್ಸು ಮುಗಿಸಿ ಕೆಲವು ವಿಷಯಗಳಲ್ಲಿ ಫೇಲಾಗಿ ತನ್ನ ಊರಿನಲ್ಲಿದ್ದ. ಅವನನ್ನು ಕೂಡ ಮೈಸೂರಿಗೆ ಕರೆದುಕೊಂಡು ಬಂದು ನಾವಿದ್ದ ಮನೆಯಲ್ಲಿಟ್ಟುಕೊಂಡು, ಬಾಕಿ ಉಳಿದ ವಿಷಯಗಳಿಗಾಗಿ ಟ್ಯೂಷನ್ ತೆಗೆದುಕೊಳ್ಳಲು ವ್ಯವಸ್ಥೆ ಮಾಡಿದೆ. ನಂತರ ಬಿ.ಎ. ಪಾಸು ಮಾಡಿಕೊಂಡು ಮುಂದೆ ಕೆ.ಇ.ಬಿ.ಯಲ್ಲಿ ಸರ್ಕಾರಿ ಕೆಲಸಕ್ಕೆ ಸೇರಿದ.
ಕೆ.ಜಿ. ಕೊಪ್ಪಲ ಮನೆಯಲ್ಲಿ ನಾನು ಮಹೇಶ ಅಧಿಕೃತ ಬಾಡಿಗೆದಾರರಾದರೂ ಅನಧಿಕೃತವಾಗಿ ವಿದ್ಯಾರ್ಥಿ ಬಳಗ ಮತ್ತು ನಿರುದ್ಯೋಗಿಗಳ ಬಳಗದ ಸದಸ್ಯರು ಯಾರಾದರೊಬ್ಬರು ಇರುತ್ತಿದ್ದರು. ನಮ್ಮಿಬ್ಬರಿಗೆ ಅಡಿಗೆ ಮಾಡಿಡಲು ಒಪ್ಪಿಕೊಂಡಿದ್ದ ಶಿವಪ್ಪ ಎನ್ನುವ ಅಡಿಗೆಯವನು ನಮ್ಮಲ್ಲಿ ದಿನವೂ ಏರುಪೇರಾಗುತ್ತಿದ್ದ ಸಂಖ್ಯೆ ಮತ್ತು ಹೊಲೆ ಮಾದಿಗರೆಗೆಲ್ಲ ನಾನು ಅಡಿಗೆ ಮಾಡುವುದಿಲ್ಲ ಎಂದು ಹೇಳಿ ಹೊರಟು ಹೋಗಿದ್ದ. ಈ ನಡುವೆ ಹಾಸ್ಟೆಲ್ನಲ್ಲಿ ಸೀಟು ಸಿಗುವವರೆಗೆ ಮಾಂತೇಶಿ ಮತ್ತು ರಾಮಣ್ಣನೇ ತೋಚಿದಂತೆ ಅಡುಗೆ ಮಾಡುತ್ತಿದ್ದರು. ಅದನ್ನೇ ಎಲ್ಲರೂ ಹಂಚಿ ಉಣ್ಣುತ್ತಿದ್ದೆವು. ಇದನ್ನೆಲ್ಲ ನೆನಪಿಸಿಕೊಳ್ಳುವ ಸಮಯಕ್ಕೆ ರಾಮಣ್ಣ ಮತ್ತು ಮಾಂತೇಶಿ ಇಬ್ಬರೂ ತೀರಿಕೊಂಡಿದ್ದಾರೆ. ಮುಕ್ತಾಯಕ್ಕ ಹೊಳೆ ದಾಟಿದ ಮನುಷ್ಯ ಸ್ವಭಾವದಂತೆ ಗುರ್ತಿಲ್ಲದವರಂತೆ ದಾವಣಗೆರೆಯಲ್ಲಿ ಅರಾಮ ಇದ್ದಾಳೆ.
ಇದೇ ಸಮಯಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಇಂದಿರಾ ಗಾಂಧಿ ಅವರ ಬಗ್ಗೆ ಅಲಹಾಬಾದ್ ಕೈಕೋರ್ಟ್ ನೀಡಿದ ತೀರ್ಪಿನಂತೆ ಪಾರ್ಲಿಮೆಂಟ್ ಸದಸ್ಯತ್ವವನ್ನು ರದ್ದುಗೊಳಿಸಿದ ಕಾರಣ ದೇಶದಾದ್ಯಂತ ಆಂತರಿಕ ತುರ್ತು ಪರಿಸ್ಥಿತಿ ಘೋಷಣೆಯಿಂದಾಗಿ ಧಾರವಾಡದಲ್ಲಿದ್ದು ಪತ್ರಿಕೆ ನಡೆಸುತ್ತಿದ್ದ ರಾಜಶೇಖರ ಕೋಟಿ ಕೂಡ ಮೈಸೂರಿಗೆ ಬಂದಿದ್ದರು ಹಾಗೂ ನಮ್ಮ ಈ ಬಾಡಿಗೆ ಮನೆಯ ಗೌರವಾನ್ವಿತ ಸದಸ್ಯರಾಗಿದ್ದರು.
ನನಗೆ ಬರುತ್ತಿದ್ದ 600ರೂಗಳ ಸಂಬಳ ಮತ್ತು ಮಹೇಶನ ಊರಿನಿಂದ ಬರುತ್ತಿದ್ದ ಅಕ್ಕಿ ಮತ್ತು ಸಾಂಬಾರು ಪದಾರ್ಥಗಳು ಸೇರಿಕೊಂಡು ಎಲ್ಲರಿಗೂ ಊಟ-ತಿಂಡಿಗಳು ಸಾಧಾರಣವಾಗಿ ನಡೆಯುತ್ತಿದ್ದವು. ಬಿ.ಎ. ಮತ್ತು ಎಂ.ಎ.ಗಳಲ್ಲಿ ಹಾಸ್ಟೆಲ್ನಲ್ಲಿನ ಸೊಗಸಾದ ಊಟ ನಂತರ ಪಾಲ್ ಸೈಮನ್ಸ್ ಜೊತೆ ಅಡಿಗೆ ಭಟ್ಟನ ಕೈರುಚಿ ನೋಡಿದ್ದ ನನಗೆ ಇಲ್ಲಿನ ಅನಿಶ್ಚಿತವಾದ ಊಟೋಪಚಾರಗಳನ್ನು ಸಹಿಸಿಕೊಳ್ಳುವುದು ಕಷ್ಟವಾಗುತ್ತಿತ್ತು. ಆದರೇನು? ನಮ್ಮ ಮಿತ್ರ ಬಳಗದ ಬೆಚ್ಚಗಿನ ಸೆಳೆತಗಳು ಇದನ್ನೆಲ್ಲ ಮೀರಿ ಒಬ್ಬರಿಗೊಬ್ಬರು ಸಹಕರಿಸಿಕೊಂಡು ಕಾಲ ಹಾಕುತ್ತಿದ್ದೆವು.
ದಸರಾ ರಜೆ ಬಂದು ಊರಿಗೆ ಹೋದಾಗ ಅಪ್ಪನನ್ನು ಒಮ್ಮೆ ಮೈಸೂರಿಗೆ ಕರೆತಂದು ದಸರಾ ಹಬ್ಬ ಮತ್ತು ನಮ್ಮ ಕಾಲೇಜು ತೋರಿಸಬೇಕೆಂಬ ಆಸೆಯಾಯಿತು. ಈ ಬಾರಿ ದಸರೆಯಲ್ಲಿ ಊರಿಗೆ ಹೋದಾಗ ಸೈಕಲ್ ಹಿಂದಿನ ಸೀಟಿನಲ್ಲಿ ಕೂರಿಸಿಕೊಂಡು ನಮ್ಮ ಅಜ್ಜಿ (ಅಪ್ಪನ ತಾಯಿ) ಪಕ್ಕೀರಜ್ಜಿಯ ಹೆಸರಿಗಿದ್ದ ಹಳ್ಳದಾಚೆಗಿನ ಹೊಲದಲ್ಲಿನ ಬೆಳೆ ನೋಡಲು ಹೋಗಿದ್ದೆವು. ಅಣ್ಣ ಸರಿಯಾಗಿ ಕೆಲಸ ಮಾಡದೆ ಎಲ್ಲಾ ಕಡೆ ನಿರೀಕ್ಷಿತ ಉತ್ಪಾದನೆ ಇಲ್ಲವೆಂದು ನನ್ನ ಬಳಿ ಅಪ್ಪ ಅಲವತ್ತುಕೊಂಡಿದ್ದ. ಅವನೂ ಆಗ ತಾನೆ ಓದುವುದನ್ನು ಬಿಟ್ಟು ತೋಟದ ಕೆಲಸಗಳಲ್ಲಿ ತೊಡಗಿದ್ದರಿಂದಲೋ ಏನೋ ವ್ಯವಸಾಯದಲ್ಲಾಗಲೀ, ತೋಟ ಮಾಡುವುದರಲ್ಲಾಗಲೀ, ಅಪ್ಪನ ನಿರೀಕ್ಷಿತ ಮಟ್ಟದ ಕೆಲಸಗಾರನಾಗಿರಲಿಲ್ಲ. ಅದಕ್ಕೆ ನಮ್ಮವ್ವನ ಕಟಿಪಿಟಿಯೂ ಕಾರಣವಾಗಿತ್ತು. ನಮ್ಮ ಸೈಕಲ್ ಸವಾರಿ ಮುಗಿದು ಮನೆಗೆ ಬಂದಾಗ ಮೈಸೂರು ದಸರಾ ನೋಡಲು ಕರೆದುಕೊಂಡು ಹೋಗುವ ತೀರ್ಮಾನ ಅಪ್ಪನಿಗೆ ಹೇಳಿ ಒಪ್ಪಿಸಿದೆ. ನಂತರ ರೈಲಿನಲ್ಲಿ ಮಾರನೇ ದಿನ ಅಪ್ಪನೊಡನೆ ಮೈಸೂರಿಗೆ ಪ್ರಯಾಣ ಬೆಳೆಸಿದೆ.
ಮೈಸೂರು ನಗರ ದಸರಾ ಹಬ್ಬದ ಸಂಭ್ರಮದಲ್ಲಿ ಗಿಜುಗುಡುತ್ತಿತ್ತು. ವಿದ್ಯುತ್ ಅಲಂಕಾರದಿಂದ ಶೃಂಗಾರಗೊಂಡಿದ್ದರಿಂದ ಚಾಮುಂಡೇಶ್ವರಿ ಬೆಟ್ಟ, ಸಂಜೆ ವೇಳೆ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡ ನಮ್ಮ ಕಾಲೇಜನ್ನು ಎಲ್ಲಾ ತೋರಿಸಿದೆ. ನಾನು ಈಗ್ಗೆ 2-3 ವರ್ಷಗಳ ಹಿಂದೆ ಇಲ್ಲಿಯೇ ಓದಿ ಈಗ ಅಲ್ಲಿಯೇ ಮೇಷ್ಟರಾಗಿ ಕೆಲಸ ಮಾಡುತ್ತಿರುವುದನ್ನು ಕಣ್ಣಾರೆ ಕಂಡ ಅಪ್ಪ ಖುಷಿಗೊಂಡಿದ್ದ. ಅರಮನೆ, ಚಾಮುಂಡಿ ಬೆಟ್ಟ, ನಮ್ಮ ಕಾಲೇಜು, ಎಲ್ಲ ನೋಡಿದ ಅಪ್ಪ `ನಾನಿನ್ನು ಸತ್ತರೂ ಚಿಂತೆಯಿಲ್ಲ, ನೀನೊಂದು ದಡ ಸೇರಿದೆ’ ಎಂದು ಹೇಳಿ ಪುಳಕಗೊಂಡಿದ್ದ. ಮಾರನೇ ದಿನ ಸಂಜೆ ಕೃಷ್ಣರಾಜ ಸಾಗರ ಅಣೆಕಟ್ಟು ವೀಕ್ಷಣೆಗೆ ಹೋಗುವ ಮಾತಾಡಿದಾಗ ಅವನು ಆಸಕ್ತಿ ತೋರಲಿಲ್ಲ. ಹಾಗಾಗಿ ಅವನನ್ನು ರಾಮನಗರದಲ್ಲಿದ್ದ ಅಕ್ಕನ ಮನೆಗೆ ಬಸ್ಸಿನಲ್ಲಿ ಹತ್ತಿಸಿ ಕಳಿಸಿದೆ.
ದೇಶಾದಾದ್ಯಂತ ತುರ್ತು ಪರಿಸ್ಥಿತಿ, ದೇವರಾಜ ಅರಸರ 20 ಅಂಶದ ಕಾರ್ಯಕ್ರಮಗಳು, ಈ ಬಗ್ಗೆ ರಾಷ್ಟ್ರಮಟ್ಟದಲ್ಲಿ ಜೆಪಿ ಅವರು ಸೇರಿದಂತೆ ವಿರೋಧ ಪಕ್ಷಗಳ ಧುರೀಣರನ್ನು ಬಂಧಿಸಿ ಜೈಲಿನಲ್ಲಿಡುವಂತಾದ ವಿಷಯಗಳ ಚರ್ಚೆ ನಮ್ಮ ಕೆ.ಜಿ.ಕೊಪ್ಪಲ ಮನೆಯಲ್ಲಿ ನಡೆಯುತ್ತಿತ್ತು. ತುರ್ತು ಪರಿಸ್ಥಿತಿಯ ಕಾರಣದಿಂದಾಗಿ ವಿದ್ಯಾರ್ಥಿಗಳಿಂದ ಆಗಾಗ ನಡೆಯುತ್ತಿದ್ದ ಮುಷ್ಕರಗಳಾಗಲಿ, ವಿದ್ಯಾರ್ಥಿ ಸಂಘದ ಚುನಾವಣೆಗಳಾಗಲೀ ನಡೆಯದೆ, ಎಲ್ಲರೂ ಬೆದರಿದಂತೆ, ಸ್ವಯಂ ನಿಯಂತ್ರಿತರಾದವರಂತೆ ಕೆಲಸ ಮಾಡುವ ವಾತಾವರಣ, ಶೈಕ್ಷಣಿಕ ಮತ್ತು ಸರ್ಕಾರಿ ಕಛೇರಿಗಳಲ್ಲಿ ಮೂಡಿದಂತೆ ತೋರುತ್ತಿತ್ತು.
ಅಪ್ಪನನ್ನು ಊರಿಗೆ ಕಳಿಸಿ, ನಂತರದ ದಿನಗಳಲ್ಲಿ ಓದು, ತರಗತಿಗಳ ಪಾಠ ಮತ್ತು ಸಮಾಜವಾದಿ ಯುವಜನ ಸಭಾ, ಲೋಹಿಯಾ, ಅಂಬೇಡ್ಕರ್ ಚಿಂತನೆಗಳ ಕಡೆ ವಾಲಿಕೊಂಡಿದ್ದೆ. ಅಪ್ಪನಿಗೆ 80-85 ವರ್ಷಗಳಾಗಿರಬಹುದು. ಆಗಿದ್ದರೂ ಎಂದೂ ಮನೆಯಲ್ಲಿ ಕೂತು ವಿಶ್ರಾಂತಿ ಪಡೆಯುವ ಪರಿಪಾಟ ಅಪ್ಪನಿಗಿರಲಿಲ್ಲ. ಬೆಳಿಗ್ಗೆ ಎದ್ದು ದನಕರುಗಳ ಕೊಟ್ಟಿಗೆಯ ಕಸವನ್ನು ತಿಪ್ಪೆಗೆ ಹಾಕಿ, ಚಾ ಕುಡಿದು ತೋಟಕ್ಕೆ ಹೋದರೆ ಮತ್ತೆ ಬರುವುದು ರಾತ್ರಿಗೆ, ಬಂದು ಬಿಸಿನೀರಿನಲ್ಲಿ ಸ್ನಾನ ಮಾಡಿ ಊಟ ಮಾಡಿದರೆ ಅವನ ದಿನಚರಿ ಮುಗಿಯುತ್ತಿತ್ತು. ಯಾರಾದರೂ ಊರಿನಿಂದಲೋ ಇಲ್ಲ ನಮ್ಮ ಚಿಕ್ಕಪ್ಪಂದಿರಾಗಿದ್ದ ನಾಗಪ್ಪ, ಮಹಾದೇವಪ್ಪ ಮತ್ತು ಭೀಮಪ್ಪ ಇವರುಗಳು ಏನಾದರೂ ಮಾತಾಡೋ ನೆಪದಲ್ಲಿ ಸಂಜೆ ಸೇರಿಕೊಂಡರೆ ಸಾರಾಯಿ ಸಮಾರಾಧನೆ ಆಗಿ ಊಟ ಮಾಡುತ್ತಿದ್ದರು. ಇಲ್ಲ ಊರಲ್ಲಿನ ಲಿಂಗಾಯತ ಸ್ನೇಹಿತರಲ್ಲಿ ವಾರಕ್ಕೋ 15ದಿನಗಳಿಗೊಮ್ಮೆಯೋ ಗೌಪ್ಯವಾಗಿ ನಮ್ಮಲ್ಲಿನ ಕೋಣೆಯೊಂದರಲ್ಲಿ ಕೂತು ಪಾರ್ಟಿ ಮಾಡುತ್ತಿದ್ದರು. ಅವ್ವ ಲೊಟಗುಡುತ್ತಾ ಜೋಳದ ಹಪ್ಪಳವನ್ನೋ ಇಲ್ಲ ಮನೆಯಲ್ಲಿದ್ದ ಮೊಟ್ಟೆಗಳನ್ನು ಹುರಿದು ಅವರ ಪಾರ್ಟಿಗೆ ನೆಂಚಿಗೆ ಮಾಡಿ ಕೊಡುತ್ತಿದ್ದಳು.
ಅಪ್ಪನ ಅಣ್ಣ ರಂಗಪ್ಪಜ್ಜ ಇದ್ದು, ಅವನು ಮದುವೆಯಾಗಿ, ಮಕ್ಕಳು ಮನಿ ಎಂತೆಲ್ಲಾ ಆದ ಮೇಲೆ ಖಾವಿ ಧರಿಸಿ ಸಾಧುವಾಗಿದ್ದ. ಅವನು ಊರ ಹೊರಗಿನ ಗೋಮಾಳದಲ್ಲಿ ನಮ್ಮಜ್ಜಿ ಫಕ್ಕೀರಜ್ಜಿಯನ್ನು ಸಮಾಧಿ ಮಾಡಿದ್ದು. ಅಲ್ಲಿಯೇ ಒಂದು ವಿಶಾಲ ಗುಡಿಸಲು ಕಟ್ಟಿಕೊಂಡು, ದಿನವೂ ಅಜ್ಜಿಯ ಸಮಾಧಿಯನ್ನು ಪೂಜೆ ಮಾಡಿಕೊಂಡು, ನಮ್ಮ ಊರಿನ ಲಿಂಗಾಯತರ ಮನೆಯಿಂದ ಕಂತೆ ಭಿಕ್ಷೆ ಎತ್ತಿ ಅದರಲ್ಲಿಯೇ ಊಟ ಮಾಡಿಕೊಂಡಿದ್ದ. ಕ್ರಮೇಣ ಎಲ್ಲ ಜನರೂ ಸಾಧು ರಂಗಜ್ಜನ ಮಠ ಎಂದು ಗುರುತಿಸುತ್ತಿದ್ದರು. ಊರಿನ ಲಿಂಗಾಯತರು ಮತ್ತು ಇತರೆ ಜಾತಿಯ ಪ್ರಮುಖರೆಲ್ಲ ಶ್ರಾವಣಮಾಸದಲ್ಲಿ ದೇವಿಪುರಾಣವನ್ನೋ, ಭಜನೆಯನ್ನೋ ಮಾಡುತ್ತಾ ಕೊನೆಯಲ್ಲಿ ಕರಿಯ ಕೊಳವೆಯಂತಹ ವುದರಲ್ಲಿ ಸಾಂಬ್ರಾಣಿಯಂತಹದನ್ನು ನಾದಿ ಚಿಲುಮೆಯಲ್ಲಿ ತುಂಬಿ ಒಂದು ತುದಿಯಲ್ಲಿ ಬಟ್ಟೆಯನ್ನು ಸುತ್ತಿ ಎಡಗೈಯಲ್ಲಿ ಒಂದು ವಿಶೇಷ ಸ್ಟೈಲ್ನಲ್ಲಿ ಹಿಡಿದು ಜೋರಾಗಿ ದಮ್ಮು ಎಳೆಯುತ್ತಿದ್ದರು. ಬಲಕ್ಕೊ ಎಡಕ್ಕೊ ಕೂತವನೊಬ್ಬನು ಕಡ್ಡಿ ಗೀರಿ ಬೆಂಕಿ ಹಚ್ಚಿದರೆ ಉಸಿರು ಬಿಗಿ ಹಿಡಿದು ಎಳದಾಗ ರೈಲ್ವೆ ಉಗಿ ಬಂಡಿ ಹೊಗೆ ಉಗುಳಿದಂತೆ, ಮೂಗು ಬಾಯಿಯಿಂದ ಪುಂಖಾನುಪುಂಖವಾಗಿ ಹೊಗೆ ಹೊರಬರುತ್ತಿತ್ತು. ಹಾಗೆ ಎಳೆದವನು ಮತ್ತೊಬ್ಬನಿಗೆ ಭಯ ಮಿಶ್ರಿತ ಭಕ್ತಿಯಿಂದ ನಮಸ್ಕರಿಸಿ `ಗುರುವೇ ತಿಪ್ಪೇಶಾ’ ಎಂಬ ಉದ್ಘಾರದೊಂದಿಗೆ ಕೊಡುತ್ತಿದ್ದನು. ಆತನೂ ಸೇದಿ ಭಗವಂತನ ಕೃಪೆ, ದೇವಿಯ ಮಹಾತ್ಮೆ ಎಂದೇನೇನೋ ಮಾತಾಡಿಕೊಳ್ಳುತ್ತಿದ್ದರು. ಈ ಪಾರ್ಟಿಯಲ್ಲಿ ಅಪ್ಪನೂ ಆಗಾಗ ಅಲ್ಲಿ ಸೇರಿಕೊಳ್ಳುತ್ತಿದ್ದನು. ನಾವೆಲ್ಲ ಕೆಲವು ಹುಡುಗರು ನಮ್ಮ ಕೇರಿಯಿಂದ ಪ್ರಸಾದದ ಆಸೆಗಾಗಿ ಅಲ್ಲಿಗೆ ಹೋಗುತ್ತಿದ್ದೆವು. ಏಕೆಂದರೆ ಪ್ರತಿ ಭಜನೆ ಮುಗಿದಾಕ್ಷಣ ಪೂಜೆಗಾಗಿ ಒಡೆದ ತೆಂಗಿನ ಕಾಯಿಯ ಹಸಿ ಕೊಬ್ಬರಿಯ ಚೂರುಗಳು, ಜೊತೆಗೆ ಕತ್ತರಿಸಿದ ಬಾಳೆಯ ಹಣ್ಣು ಮಂಡಕ್ಕಿ ಕಾರ ಎಲ್ಲ ಸೇರಿಸಿ ಎಲ್ಲರಿಗೂ ಹಂಚುತ್ತಿದ್ದರು.
ಮಠದ ರಂಗಪ್ಪಜ್ಜ ನಮಗೆ ಸ್ವಂತ ಅಪ್ಪನ ಅಣ್ಣ, ದೊಡ್ಡಪ್ಪನಾಗಿದ್ದವರು ಎನ್ನುವ ವಿಷಯ ನಮಗಾರಿಗೂ ನಮ್ಮ ಬಾಲ್ಯ ಕಳೆಯುವವರೆಗೂ ಗೊತ್ತೇ ಇರಲಿಲ್ಲ. ನಾನು ಮತ್ತೆ ನಮ್ಮ ಕೇರಿಯ ಕಡೆಮನೆ ತಿಪ್ಪಣ್ಣ, ಕರಿಬಸಪ್ಪ, ಕುಬೇರ ಜೋಗಪ್ಪ ತುಂಗಣ್ಣ ಸಂಜೆ 4-5 ಗಂಟೆಯ ಸಮಯಕ್ಕೆ ಮಠದ ಕಡೆಗೆ ಹೋಗಿ ಅಲ್ಲಿಯೇ ಇದ್ದ ಬಾವಿಯಿಂದ ನೀರು ಸೇದಿ ಮಠದಲ್ಲಿನ ಗಿಡಬಳ್ಳಿಗಳಿಗೆ ಹೊಯ್ಯುತ್ತಿದ್ದವು. ನೀರು ಸೇದಿ ಹಾಕಿದ ನಾಟಕ ಮುಗಿದ ಮೇಲೆ ಎಲ್ಲರಿಗೂ ಅಲ್ಲಿದ್ದ ಮಣ್ಣಿನ ಮುಚ್ಚಳಗಳಲ್ಲಿ ಊರಲ್ಲಿನ ಕಂತೆ ಭಿಕ್ಷೆಯಲ್ಲಿ ತಂದ ರೊಟ್ಟಿ ಮತ್ತು ಎಲ್ಲರ ಮನೆಯ ಸಾರನ್ನು ಒಂದೇ ಮಡಕೆಯಲ್ಲಿ ಕುದಿಸಿಟ್ಟದ್ದನ್ನು ಬಡಿಸುತ್ತಿದ್ದರು. ಅದನ್ನೆಲ್ಲ ನಾವು ತುಂಬಾ ಖುಷಿಯಿಂದ ಉಣ್ಣುತ್ತಿದ್ದೆವು. ನಂತರ ಎಲ್ಲ ಮಣ್ಣಿನ ಮುಚ್ಚಳದಂತಿದ್ದ ತಟ್ಟೆಯನ್ನು ತೊಳೆದಿಟ್ಟು ಅವರ ಕಾಲಿಗೆ ನಮಸ್ಕರಿಸಿ ಮನೆಗೆ ಹೋಗುತ್ತಿದ್ದೆವು. ನಮ್ಮಲ್ಲೆಲ್ಲ ದೊಡ್ಡವನಾಗಿದ್ದ ಕಡೆಮನೆ ತಿಪ್ಪಣ್ಣನೇ ನಮ್ಮ ಎಲ್ಲರನ್ನೂ ಕೂಡಿಸಿ ಕರೆದುಕೊಂಡು ಹೋಗುತ್ತಿದ್ದ. ಎಲ್ಲರಿಗೂ ಬೇರೆ ಬೇರೆ ನೀಡಿದ ಮೇಲೆ ಮಠದೊಳಗೆ ಅಜ್ಜ ಹೋಗುತ್ತಿದ್ದರು. ನಮಗೆ ನೀಡಿದ ರೊಟ್ಟಿಯಲ್ಲಿ ಕಡೆಮನೆ ತಿಪ್ಪಣ್ಣನಿಗೆ ಹೆಚ್ಚುವರಿಯಾಗಿ ತನಗೆ ಕೊಡುವುದರ ಬಗ್ಗೆ ಬಂದವರಿಗೆಲ್ಲ ಮೊದಲೇ ಕೊಡುವಂತೆ ತಾಕೀತು ಮಾಡಿರುತ್ತಿದ್ದ. ಕೆಲವು ಸಮಯ ತಟ್ಟೆಗಳು ಕಡಿಮೆ ಇದ್ದುದರಿಂದ ಒಂದೇ ತಟ್ಟೆಯಲ್ಲಿ ಇಬ್ಬರು ಅಥವಾ ಮೂವರು ಕೂತು ಉಣ್ಣುವುದಾದರೆ, ನಮಗೆ ಸಾಕೆಂದು ಮೊದಲೇ ಎದ್ದು ಅವನಿಗೆ ಹೆಚ್ಚಿನ ರೊಟ್ಟಿ ಉಣ್ಣಲು ಅವಕಾಶ ಮಾಡಿಕೊಡಬೇಕಾಗಿತ್ತು. ಹಾಗೆ ಮಾಡದಿದ್ದರೆ ನಾಳೆ ಮತ್ತೆ ನಿಮ್ಮನ್ನು ಇಲ್ಲಿಗೆ ಕರೆತರುವುದಿಲ್ಲ ಎನ್ನೋ ಧಮಕಿ ಹಾಕುತ್ತಿದ್ದ. ಅವನು ನಮ್ಮೆಲ್ಲರಿಗಿಂತಲೂ 2-3 ವರ್ಷಕ್ಕೂ ಹಿರಿಯವನು, ನಮ್ಮ ಚಿಕ್ಕಪ್ಪ ಭೀಮಪ್ಪನ ಮಗನಾಗಿದ್ದ ಅವರಿಗೆ ಮನೆಯಲ್ಲಿ ಆರೇಳು ಹೆಣ್ಣು ಮಕ್ಕಳ ನಂತರ ಹುಟ್ಟಿದ ಕಾರಣ ಇವನಿಗೆ ಯಾವ ಕೆಲಸವನ್ನೂ ಹೇಳುತ್ತಿರಲಿಲ್ಲ. ವಿಶೇಷವಾಗಿ ಬುಗುರಿ, ಚಿನ್ನಿ ದಾಂಡು, ಕೀಳಾಪಟ್ಟಿ ಆಟಗಳಲ್ಲಿ ನಮಗೆ ಗುರುವಾಗಿದ್ದವನು. ಆದರೆ ಊರ ಎಲ್ಲರ ದೃಷ್ಟಿಯಲ್ಲಿ ದಂಡಪಿಂಡ ಎಂಬಂತೆ ಅವನನ್ನು ಅವರ ಮನೆಯವರೂ ಸೇರಿದಂತೆ ಊರಿನಲ್ಲಿ ಜನ ಪರಿಗಣಿಸಿದ್ದರು. ಆದರೀಗ ಒಂದು ದಂಡನ್ನೇ ಕಟ್ಟುವಷ್ಟು ಮಕ್ಕಳನ್ನು, ಮೊಮ್ಮಕ್ಕಳನ್ನು ಪಡೆದು ದುಡಿಮೆ ಮಾಡಿಕೊಂಡು ಹಾಯಾಗಿದ್ದಾನೆ. ಊರಲ್ಲಿರುವಾಗಲೆಲ್ಲ ನನ್ನನ್ನು ಸೆಳೆದುಕೊಂಡಿದ್ದ ಅವನು ನಂತರದ ದಿನಗಳಲ್ಲಿ ಸಣ್ಣ ವ್ಯತ್ಯಾಸದಿಂದ ದೂರವಾಗಿದ್ದಾನೆ. ಈಗ ಮತ್ತೆ ಕರೆದು ಮಾತಾಡಿಸಬೇಕೆಂದು ನೆನಪಾದಾಗ ಅನ್ನಿಸುತ್ತಿದೆ.
ಅಜ್ಜನ ಗುಡಿಸಲು ಅರ್ಥಾತ್ ಮಠ ಸುಮಾರು ಅರ್ಧ ಎಕರೆಯಲ್ಲಿ ಸುತ್ತ ಬೇಲಿಯ ಮಧ್ಯದಲ್ಲಿನ ಅಜ್ಜಿ ಸಮಾದಿಗೆ ಮತ್ತು ಅಜ್ಜಯ್ಯ ಇರುವಿಕೆಗೆ ತೆಂಗಿನ ಗರಿ ಮತ್ತು ಭತ್ತದ ಹುಲ್ಲಿನ ಮುಚ್ಚಳಿಕೆಯಿಂದ ಗಾಳಿ ಬಿಸಿಲು ಮಳೆಗಳಿಂದ ರಕ್ಷಣೆ ಪಡೆದಿತ್ತು. ಆಗಾಗ ಅಜ್ಜಯ್ಯ ಮಠ ಕಟ್ಟುತ್ತೇನೆಂದು ಹಣ ಸಂಗ್ರಹದಲ್ಲಿ ತೊಡಗಿದ್ದರೆಂದು, ಅಪ್ಪ ಮನೆಯಲ್ಲಿ ಮಾತಾಡುತ್ತಿದ್ದರು. ಹಬ್ಬ ಹರಿದಿನಗಳಲ್ಲಿ ದೊಡ್ಡಪ್ಪ ಮನೆಗೆ ಬಂದರೆ ಅವರಿಗೆ ವಿಶೇಷವಾಗಿ ಪಾದಪೂಜೆ ಮಾಡಿ ಆ ನೀರನ್ನೆಲ್ಲ ಮನೆಯ ಎಲ್ಲ ದಿಕ್ಕುಗಳಿಗೂ ಪ್ರೋಕ್ಷಿಸುತ್ತಿದ್ದರು. ಹಾಗೆ ನಮ್ಮಲ್ಲಿನ ಇತರೆ ನಾಲ್ಕು ಚಲವಾದಿ ಮನೆತನದವರೂ ಕರೆದು ಪಾದಪೂಜೆ ಮಾಡುತ್ತಿದ್ದರು. ನಮ್ಮೂರ ಹತ್ತಿರದ ಕಡ್ಲಬಾಳ ಊರಿನ ತೇರಿಗೆ ಮತ್ತು ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿಯ ರಥೋತ್ಸವಕ್ಕೆ ಹೋಗಿ ವಾರಗಟ್ಟಲೇ ಅಲ್ಲಿದ್ದು, ಅನೇಕ ಇತರೆ ಸಾಧು ಸಂತರ ಸಂಗಡದಲ್ಲಿ ಭಜನೆ ಮತ್ತು ಗಾಂಜಾ ಸೇವನೆ ಮಾಡುತ್ತಿದ್ದುದರ ಬಗ್ಗೆ ಅವರ ಜೊತೆ ಹೋಗಿ ಬಂದವರು ಆಗಾಗ ಮಾತಾಡಿಕೊಳ್ಳುತ್ತಿದ್ದರು.
ಈ ರೀತಿಯಲ್ಲಿ ಇದ್ದ ದೊಡ್ಡಪ್ಪ ನಾನು ಸಾಗರದ ಹೈಸ್ಕೂಲಿನಲ್ಲಿ ಓದುವ ಸಮಯದಲ್ಲಿ ಒಂದೆರಡು ದಿನಗಳ ಅಸ್ವಸ್ಥತೆಯಿಂದ ಹರಿಹರದ ಹತ್ತಿರವಿರುವ ಗುತ್ತೂರಿನ ಗುರು ಬಸಜ್ಜನ ಮಠದಲ್ಲಿ ತೀರಿಹೋಗಿದ್ದರು. ಅಲ್ಲಿಯ ಮಠದಲ್ಲಿಯೇ ಅವರ ಸಮಾಧಿ ಮಾಡಿದ್ದಾರೆ. ಅದೇ ಮಠದಲ್ಲಿ ನನ್ನ ಗುರುಗಳಾಗಿದ್ದ
ಪ್ರೊ. ಬಿ. ಕೃಷ್ಣಪ್ಪನವರು ಮತ್ತವರ ತಂಗಿ ಹಾಲಮ್ಮ ತಮ್ಮ ಬಾಲ್ಯದ ದಿನಗಳಲ್ಲಿ ಗಿಡಗಳಿಗೆ ನೀರು ಹಾಕುವುದು, ಹೂ ಕೀಳುವ ಸೇವೆ ಮಾಡುತ್ತಿದ್ದರು ಎಂಬುದನ್ನು ಕೃಷ್ಣಪ್ಪನವರ ತಂಗಿ ಹಾಲಜ್ಜಿ ಆಗಾಗ ನಮ್ಮೂರಿಗೆ ಬಂದಾಗ ಜ್ಞಾಪಿಸಿಕೊಳ್ಳುತ್ತಿದ್ದರು. ಅಪ್ಪನ ಅಣ್ಣ ಈ ರೀತಿಯ ಜೀವನ ಸಾಗಿಸುತ್ತಾ ಕಾಲವಾದರೆ ಅಪ್ಪ ಒಂದಲ್ಲವೆಂದರೂ ಎರಡು ಮದುವೆಯಾಗಿ, ಮ್ಯಾಳ ಮಾಡುತ್ತಾ ಅವರೆಲ್ಲರಿಗೂ ನಾಯಕನಾಗಿ, ಮಾಡಿದ ಹೊಲಮನಿ ಕೆಲಸಗಳಲ್ಲಿ ಸೈ ಎನಿಸಿಕೊಂಡು, ನಾನು ಎಂ.ಎ. ಮಾಡಿ ಅಧ್ಯಾಪಕನಾಗಿರುವವರೆಗೆ ಬದುಕಿದ್ದೇ ಒಂದು ಪವಾಡ. ಸದಾ ಕೆಲಸದಲ್ಲಿ ತೊಡಗಿರುತ್ತಿದ್ದ ಅಪ್ಪ ಸಣ್ಣಪುಟ್ಟ ಖಾಯಿಲೆಗಳಿಗೆ ಜಗ್ಗುತ್ತಿರಲಿಲ್ಲ ಯವ್ವನದ ಕಾಲಘಟ್ಟದಲ್ಲಿ ಎಲೆ ಅಡಿಕೆ ತಂಬಾಕು ಬೀಡಿ ಸೇದುತ್ತಿದ್ದ ಅಪ್ಪ ನಂತರದ ದಿನಗಳಲ್ಲಿ ಕೆಮ್ಮು ದಮ್ಮುಗಳ ಕಾಟದಿಂದ ಅವನ್ನೆಲ್ಲ ಬಿಟ್ಟು ಬಿಟ್ಟಿದ್ದನು. ನಾನು ಕೆಲಸಕ್ಕೆ ಸೇರಿ ಊರಿಗೆ ಹೋದಾಗ ಅವ್ವನಿಗೆ, ಓಬಜ್ಜನಿಗೆ, ಅಪ್ಪನಿಗೆ ವಿಶೇಷವಾಗಿ ಸಣ್ಣ ಮೊತ್ತದ ಹಣ ಕೊಡಲು ಹೋದಾಗಲೆಲ್ಲ `ನನಗ್ಯಾಕೆ ಕೊಡುತ್ತೀ, ನಿಮ್ಮವ್ವನಿಗೇ ಕೊಡು’ ಎಂದು ಹೇಳಿ ಸುಮ್ಮನಾಗುತ್ತಿದ್ದ. ಇಂತಹ ಅಪ್ಪನನ್ನು ನಾನು ಅಧ್ಯಾಪಕನಾಗಿ ಕೆಲಸಕ್ಕೆ ಸೇರಿದ ಒಂದು ವರ್ಷ ತುಂಬಿದ ದಿನ (4.12.1975)ರಲ್ಲಿ ನಾನು ಎರಡನೇ ಬಿ.ಎ. ಕ್ಲಾಸ್ ರೂಮ್ನಲ್ಲಿ ಪಾಠ ಮಾಡುವಾಗ ತಂತಿ ಸಂದೇಶದಲ್ಲಿ ಅಪ್ಪ ತೀರಿದ ಸುದ್ದಿ ಹೊತ್ತು ತಂದಿತ್ತು. ಅಂದಿಗೆ ಸಂಬಳ ಬಂದು 4 ದಿನಗಳಾಗಿದ್ದರೂ ಎಲ್ಲಾ ಬಟವಾಡೆ ಮಾಡಿ ನನ್ನಲ್ಲಿ 50ರೂಗಳು ಮಾತ್ರ ಜೇಬಿನಲ್ಲಿದ್ದವು. ನೇರ ರಮಾವಿಲಾಸ್ ರಸ್ತೆಯಲ್ಲಿದ್ದ ಮಯೂರ ಪ್ರಿಂರ್ಸ್ನಲ್ಲಿಗೆ ಹೋಗಿ ಪಿ. ಮಲ್ಲೇಶ್ ಅವರಿಂದ 100 ರೂಗಳ ಸಾಲ ಪಡೆದು ನಾನು ಮತ್ತು ನನ್ನ ಕಾಲೇಜಿನಲ್ಲಿಯೇ ಓದುತ್ತಿದ್ದ ನಮ್ಮೂರಿನ ಹುಡುಗ ಮಾಂತೇಶಿಯನ್ನು ಕರೆದುಕೊಂಡು ರಾತ್ರಿಯ ಬಸ್ ಹತ್ತಿ ಬೆಳಗಿನ ಜಾವಕ್ಕೆ ಊರಿಗೆ ಬಂದು ಸೇರಿದೆ. ಅಪ್ಪನ ಸೋತ ಮುಖನೋಡಿ ನಾನು ತೀವ್ರ ಮೌನಕ್ಕೆ ಜಾರಿದೆ. ಎಂದೂ ಏನಲೇ ಎಂದು ಗದರಿಸದೆ ತನ್ನೆಲ್ಲ ಶಕ್ತಿ ಮೀರಿದ ದುಡಿಮೆಯಿಂದ, ಪ್ರೀತಿಯಿಂದ ನಮ್ಮನ್ನು ಸಾಕಿದ ಅಪ್ಪ, ಅವನ ಜೀವನದ ಹೋರಾಟಕ್ಕೆ ಅಂತ್ಯ ಹಾಡಿದ್ದ. ನಮ್ಮೆಲ್ಲರನ್ನು ತಿದ್ದಿ ಬೆಳೆಸಿ ಬದುಕಲು ನಮಗೆ ಅನುವು ಮಾಡಿ ಇಹಲೋಕದ ವ್ಯಾಪಾರ ಮುಗಿಸಿದ್ದ ಅಪ್ಪನ ನೆನಪು ನನ್ನ ಮನಸ್ಸಿನಾಳದಲ್ಲಿ ದಿನವೂ ಸ್ಫೂರ್ತಿಯಾಗಿ, ಸಾಮಾನ್ಯ ನ್ಯಾಯದ ದೊಂದಿಯಾಗಿ ಅನುರಣಿಸುತ್ತಿರುತ್ತಾನೆ.
ನಾನು ಕೆ.ಜಿ. ಕೊಪ್ಪಲಿನ ಮನೆಯಿಂದ ಮಹಾರಾಜ ಕಾಲೇಜಿಗೆ ಹೋಗಿ ಬರುತ್ತಿದ್ದೆ. ಬಿಡುವಿನ ವೇಳೆಯಲ್ಲಿ ನಾನು ಮಹೇಶ ಇತರೆ ಸ್ನೇಹಿತರು ಜೆಪಿ ಚಳುವಳಿ ನವನಿರ್ಮಾಣ ಕ್ರಾಂತಿ, ಜಾತಿ ವಿನಾಶ ಸಮ್ಮೇಳನ, ಬೂಸಾ ಚಳುವಳಿಗಳಲ್ಲಿ ಭಾಗವಹಿಸಿದ್ದೆವು. ಈ ಎಲ್ಲ ಸಂಘಟನೆಗಳ ಮೂಲ ಹೋರಾಟಗಾರರು ಮೈಸೂರಿನಲ್ಲಿದ್ದ ಎಂ.ಡಿ. ನಂಜುಂಡಸ್ವಾಮಿ, ಪಿ. ಮಲ್ಲೇಶ್, ಕೆ. ರಾಮದಾಸ್, ಮಾದೇವ, ಭಕ್ತ, ರಾಜಶೇಖರ ಕೋಟಿ, ರಾಮದೇವ ರಾಕೆ, ನಂಜುಂಡೇ ಗೌಡ, ಗೋವಿಂದಯ್ಯ, ಶಂಕರಲಿಂಗಪ್ಪ, ಗೊಟ್ಟಿಗೆರೆ ಶಿವರಾಜು, ಇಂದೂಧರ ಹೊನ್ನಾಪುರ, ದೇವನೂರ ಶಿವಮಲ್ಲು, ವಿಶ್ವವಿದ್ಯಾಲಯದ ಗಂಗೋತ್ರಿಯಿಂದ ಪ್ರೊ. ರಾಮಲಿಂಗಂ, ಕೆ.ಎಂ. ಜಯರಾಮಯ್ಯ, ಹೊರೆಯಾಲ ದೊರೆಸ್ವಾಮಿ, ಚಂದ್ರಶೇಖರ ತಾಳ್ಯ, ಎಲ್ಲರೂ ಇದೇ ಪೂರ್ಣಾವಧಿ ಕೆಲಸವೆಂಬಂತೆ ತೊಡಗಿಸಿಕೊಂಡಿದ್ದರು. ಹಾಗೆಯೇ ರಾಷ್ಟ್ರ ಮತ್ತು ರಾಜ್ಯ ಸರ್ಕಾರಗಳಲ್ಲಿನ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಇಂತಹ ವಿಷಯಗಳ ಬಗ್ಗೆ ಬೆಳಕು ಚೆಲ್ಲುವ `ಮ್ಯಾನ್ ಕೈಂಡ್’, `ಬಂಡಾಯ’, `ಶೋಷಿತ’, `ನರ’, `ಪಂಚಮ’ ಎಂಬ ಅಕಾಲಿಕ ಪತ್ರಿಕೆಗಳನ್ನು ಅಸಾಧ್ಯ ಹಣಕಾಸಿನ ತೊಂದರೆಗಳ ನಡುವೆಯೂ ಹೊರ ತರುತ್ತಿದ್ದರು.
ಆ ದಿನಗಳಲ್ಲಿ ಇಂತಹದೇ ಪತ್ರಿಕೆಯಲ್ಲಿ ನಮ್ಮೂರಿನಲ್ಲಿ ನಡೆದ ಹಿಂದುಳಿದ ಜಾತಿಯ ಹುಡುಗಿಯೊಬ್ಬಳನ್ನು ಲಿಂಗಾಯತರ ಹುಡುಗನೊಬ್ಬ ಕೆಣಕಿದ ಬಗ್ಗೆ ನಾನು ಊರಿಗೆ ಹೋದಾಗ ತಿಳಿಯಿತು. ಈ ಕೃತ್ಯ ಎಸಗಿದವನನ್ನು ಯಾರೂ ವಿಚಾರಿಸುವಂತಿರಲಿಲ್ಲ. ಹುಡುಗಿಯ ಕಡೆಯವರು ಯಾರೂ ಅದನ್ನು ಪ್ರಶ್ನಿಸಲೂ ಇಲ್ಲ. ಇದೆಲ್ಲ ಗೊತ್ತಾದ ನಾನು ನರ ಬಂಡಾಯದ ಪತ್ರಿಕೆಗೆ ಬರೆದು ಪ್ರಕಟಿಸಿದ್ದೆ. ಆ ಪ್ರತಿಗಳನ್ನು ಮಾಂತೇಶಿ ಊರಿಗೆ ತೆಗೆದುಕೊಂಡು ಹೋಗಿ ಊರಲ್ಲೆಲ್ಲಾ ಹಂಚಿದನು. ವಿಷಯ ತಿಳಿದ ಊರಿನ ಪ್ರಮುಖರು, ಈ ರುದ್ರಪ್ಪ ಊರ ಮಾನ ಹರಾಜು ಹಾಕಿದ ಎಂದೆಲ್ಲ ಕೂಗಾಡಿದ್ದರು.
`ಅವನು ಊರಿಗೆ ಬರಲಿ ವಿಚಾರಿಸುತ್ತೇವೆ’ ಎಂದೆಲ್ಲಾ ಕೂಗಾಡಿದರು. ನಾನು ತಿಂಗಳೊಪ್ಪತ್ತಿನಲ್ಲಿ ಊರಿಗೆ ಹೋದಾಗ ಯಾರೂ ಆ ಬಗ್ಗೆ ಮಾತಾಡಲಿಲ್ಲ. ಮುಖ್ಯ ಕಾರಣ ಬರೆದುದೆಲ್ಲ ನಿಜವಾದ ಘಟನೆಯಾಗಿತ್ತು. ಮತ್ತೆ ಹೆಚ್ಚು ಕೆದಕಿದರೆ ತಮಗೆ ಇದು ಅವಮಾನದ ಘಟನೆಯ ಮರು ಪ್ರಸ್ತಾಪವಾಗಿ ವಿಪರೀತಕ್ಕೆ ಹೋಗಬಹುದೆಂದು ಸುಮ್ಮನಾಗಿದ್ದರು. ಹೀಗೆ ನಾನು ಮೈಸೂರಲ್ಲಿದ್ದಾಗ ಊರ ಘಟನೆಗಳಿಗೆ ಸ್ಪಂದಿಸುತ್ತಾ ಇರುವುದು ಮೈಸೂರಿನಲ್ಲಿದ್ದ ಪ್ರಗತಿಪರ ಸಂಘಟನೆಗಳ ಮತ್ತು ವಿಚಾರವಂತರ ಒಡನಾಟವೇ ಅದಕ್ಕೆ ಕಾರಣವಾಗಿತ್ತು ಎಂಬುದನ್ನ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.
ಮುಂದುವರಿಯುವುದು
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಪಿಎಂ ಕಿಸಾನ್ ನಿಧಿ ಯೋಜನೆ | ರೈತರ ಖಾತೆಗಳಿಗೆ ಬರುವ ಮಂಗಳವಾರ ಹಣ ವರ್ಗಾವಣೆ
![](https://suddidina.com/wp-content/uploads/2024/06/pm_kisan_suddidina.jpg)
ಸುದ್ದಿದಿನಡೆಸ್ಕ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬರುವ ಮಂಗಳವಾರ 18 ರಂದು ’ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಯೋಜನೆಯಡಿ 9 ಕೋಟಿ 3 ಲಕ್ಷ ರೈತರ ಖಾತೆಗೆ 20 ಸಾವಿರ ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಲಿದ್ದಾರೆ. ಕೇಂದ್ರ ಗ್ರಾಮೀಣಾಭಿವೃದ್ಧಿ, ಕೃಷಿ ಹಾಗೂ ರೈತ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಈ ವಿಷಯ ಪ್ರಕಟಿಸಿದ್ದಾರೆ.
ಅವರು, ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಹತ್ತು ವರ್ಷಗಳಲ್ಲಿ 11 ಕೋಟಿ ರೈತರ ಖಾತೆಗಳಿಗೆ 3 ಲಕ್ಷ ಕೋಟಿ ರೂಪಾಯಿಗಳನ್ನು ಯೋಜನೆಯಡಿ ವರ್ಗಾಯಿಸಲಾಗಿದೆ ಎಂದು ಹೇಳಿದರು.
ಜೂನ್ 18 ರಂದು ವಾರಾಣಸಿಯಲ್ಲಿ ನಡೆಯಲಿರುವ ಪ್ರಧಾನಿಮಂತ್ರಿಯವರ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಎಲ್ಲ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದಾಗಿ ಅವರು ತಿಳಿಸಿದರು.
ರೈತರ ಕಲ್ಯಾಣ ವಿಷಯಕ್ಕೆ ಸಂಬಂಧಿಸಿದ ಎಲ್ಲ ವಿಚಾರಗಳ ಬಗ್ಗೆ ಅಧಿಕಾರಗಳೊಂದಿಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದ ಅವರು, ಸರ್ಕಾರದ 100 ದಿನಗಳ ಕಾರ್ಯ ಯೋಜನೆಯ ಬಗ್ಗೆ ಪರಿಶೀಲನೆ ನಡೆಸಿದ್ದಾಗಿ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಭಾರತೀಯ ಸೇನೆ | ವಿವಿಧ ಹುದ್ದೆಗಳಿಗೆ ಸೇರಬಸುವ ಅಭ್ಯರ್ಥಿಗಳಿಗೆ ಉಚಿತ ತರಬೇತಿ : ಅರ್ಜಿ ಆಹ್ವಾನ
![](https://suddidina.com/wp-content/uploads/2024/06/army_training_suddidina.jpg)
ಸುದ್ದಿದಿನ,ದಾವಣಗೆರೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಭಾರತೀಯ ಸೇನೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), 3(ಬಿ) ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ.
ತರಬೇತಿಗಾಗಿ ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ https://bcwd.karnataka.gov.in ನಿಂದ ಪಡೆಯಬಹುದು. ದೂ.ಸಂ: ದಕ್ಷಿಣ ಕನ್ನಡ ಜಿಲ್ಲೆ : ದೂ.ಸಂ. 0824-2225078, ಉಡುಪಿ ಜಿಲ್ಲೆ 0820-2574881, ಉತ್ತರ ಕನ್ನಡ ಜಿಲ್ಲೆ : ದೂ.ಸಂ. 08382-226589ನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
JOB NEWS | ಡಿ.ಇಡಿ ಮತ್ತು ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಇಂದು ರಾತ್ರಿ ನರೇಂದ್ರ ಮೋದಿ ಪ್ರಮಾಣವಚನ; ರಾಷ್ಟ್ರಪತಿ ಭವನ ಸಜ್ಜು : ದೆಹಲಿಗೆ ಬಂದಿಳಿದ ವಿದೇಶಿ ಗಣ್ಯರು; ಎಲ್ಲೆಡೆ ಬಿಗಿ ಭದ್ರತೆ
-
ಅಂತರಂಗ6 days ago
ನಾಳೆ ಡಾ.ಅಂಬೇಡ್ಕರ್ ಬರಹಗಳು ಮತ್ತು ಅವರ ಪ್ರಭಾವಿತ ಸಾಧಕರ ಸಂದರ್ಶನ ಸರಣಿ ಕಾರ್ಯಕ್ರಮ
-
ದಿನದ ಸುದ್ದಿ7 days ago
ನೀಟ್ ಫಲಿತಾಂಶ | ಗ್ರೇಸ್ ಅಂಕಗಳ ಪರಿಶೀಲನೆಗೆ ಸಮಿತಿ ರಚನೆ
-
ದಿನದ ಸುದ್ದಿ6 days ago
ಪ್ರಧಾನಿಯಾಗಿ ಮೋದಿ ಪದಗ್ರಹಣ | ಹೇಗಿತ್ತು ಸಮಾರಂಭ ; ಯಾರೆಲ್ಲಾ ಬಂದಿದ್ರು..
-
ಕ್ರೀಡೆ6 days ago
ಕುಂದುವಾಡ ಪ್ರೀಮಿಯರ್ ಲೀಗ್ -6 ; ಡಿ ರಾಕ್ಸ್ ತಂಡಕ್ಕೆ ರೋಚಕ ಜಯ
-
ದಿನದ ಸುದ್ದಿ5 days ago
ಕೊಲೆ ಕೇಸ್ ; ನಾಳೆ ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ
-
ದಿನದ ಸುದ್ದಿ6 days ago
ಮಸ್ಕಿ | ಬಿಜೆಪಿ ಕಚೇರಿಯಲ್ಲಿ ಆತ್ಮಾವಲೋಕನ ಸಭೆ