ರಾಜಕೀಯ
ಚಿತ್ರದುರ್ಗ ಕಾಂಗ್ರೆಸ್ ನಲ್ಲಿ ಅಸಮಾಧಾನ: ಸಮರ್ಥರಿಗೆ ಅವಕಾಶ ನೀಡುವಂತೆ ಆಗ್ರಹ
ಸುದ್ದಿದಿನ, ಚಿತ್ರದುರ್ಗ: ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಚಿತ್ರದುರ್ಗ ಕಾಂಗ್ರೆಸ್ ಪಾಳೆಯದಲ್ಲಿ ಅಸಮಾಧಾನ ಹೊರಬಿದ್ದಿದೆ. ಜಿಲ್ಲಾ ಕಾಂಗ್ರೆಸ್ನ ಹಿರಿಯ ನಾಯಕರ ಕಾರ್ಯದ ಕುರಿತು ಮುಖಂಡರು ಹಾಗೂ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗ ನಗರಸಭೆ ಹಾಗೂ ಹೊಸದುರ್ಗ ಪುರಸಭೆಯಲ್ಲಿ ಕಾಂಗ್ರೆಸ್ ಸಂಪೂರ್ಣ ನೆಲಕ್ಕಚ್ಚಿದ್ದು, ಇದಕ್ಕೆ ಹಿರಿಯ ನಾಯಕರ ನಿರ್ಲಕ್ಷ್ಯ ಕಾರಣವೆಂದು ಕಾರ್ಯಕರ್ತರು ದೂರುತ್ತಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯ ಕಾಂಗ್ರೆಸ್ನ ಹೀನಾಯ ಸೋಲಿನ ಹೊಣೆಹೊತ್ತು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಫಾತ್ಯರಾಜನ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಕಾರ್ಯದರ್ಶಿ ಎನ್.ಡಿ.ಕುಮಾರ್ ಆಗ್ರಹಿಸಿದ್ದಾರೆ.
ಕೋಟೆನಾಡಿನಲ್ಲಿ ಕಾಂಗ್ರೆಸ್ ಛಿದ್ರ: ನೈತಿಕ ಹೊಣೆ ಹೊರುವರೇ ಮಾಜಿ ಸಚಿವ ಆಂಜನೇಯ ?
ಟಿಕೆಟ್ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಫಾತ್ಯರಾಜನ್ ಹಾಗೂ ಅವರ ತಂಡ ಸೃಷ್ಟಿಸಿದ ಗೊಂದಲ, ನಿರ್ಲಕ್ಷ್ಯದಿಂದ ಪಕ್ಷ ಹೀನಾಯವಾಗಿ ಸೋತಿದೆ. ಆದ್ದರಿಂದ ನೈತಿಕ ಹೊಣೆಹೊತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ ಮುಂದಾಗಬೇಕು. ಸಮರ್ಥರ ಕೈಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.