Connect with us

ದಿನದ ಸುದ್ದಿ

ಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್ 9 ರಂದು ನಡೆಯಲಿರುವ ಮತದಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮತ್ತು ಚುನಾವಣಾ ಆಯೋಗವು ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ ಎಂದು ಚುನಾವಣಾಧಿಕಾರಿ ಸಂತೋಷ್‌ ಕುಮಾರ್‌ ತಿಳಿಸಿದರು.

ಅವರು ಇಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಸಂಬಂಧ ಮಹಾನಗರ ಪಾಲಿಕೆ ಕಚೇರಿಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷಿಯಲ್ಲಿ ಮಾಧ್ಯಮದವರನ್ನು ಕುರಿತು ಮಾತನಾಡಿದರು.

ನಂ-107 ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 1,13,399 ಪುರುಷರು , 1,17,690 ಮಹಿಳೆಯರು ಹಾಗೂ 43 ಇತರರು ಒಟ್ಟು 2,31,072 ಸಾಮಾನ್ಯ ಮತದಾರಿದ್ದಾರೆ, ಇವರಲ್ಲಿ 1,494-ಪುರುಷರು, 1,376-ಮಹಿಳೆಯರು ಒಟ್ಟು 2,870 ಯುವ ಮತದಾರರು, 1,375 ಪುರುಷರು , 1,137-ಮಹಿಳೆಯರು ಒಟ್ಟು 2,512 ವಿಕಲಚೇತನ (PWD) ಮತದಾರರು , 891 ಪುರುಷರು 1,083-ಮಹಿಳೆಯರು ಒಟ್ಟು 1974 ಮತದಾರರು 85+ ವರ್ಷ ಮೇಲ್ಪಟ್ಟವರು , 8 ಪುರುಷರು , 20-ಮಹಿಳೆಯರು ಒಟ್ಟು 28 ಮತದಾರರು 100+ ವರ್ಷ ಮೇಲ್ಪಟ್ಟವರು ಮತ್ತು 34-ಪುರುಷರು , 1–ಮಹಿಳೆಯರು ಒಟ್ಟು 35 ಸೇವಾ ಮತದಾರರು ಇದ್ದಾರೆ. ಎಲ್ಲರಿಗೂ ಮತದಾನದ ಹಕ್ಕನ್ನು ಚಲಾಯಿಸಲು ಅನುಕೂಲ ಮಾಡಿಕೊಡಲಾಗಿದೆ ಎಂದರು.

ಕ್ಷೇತ್ರದಲ್ಲಿ ಒಟ್ಟು 284 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ನಗರ ವ್ಯಾಪ್ತಿಯಲ್ಲಿ 234 ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿ 50 ಮತಗಟ್ಟೆಗಳು ಸೇರಿವೆ. ಪ್ರತಿಯೊಂದು ಮತಗಟ್ಟೆಯಲ್ಲಿ ಕಾಯ್ದಿರಿಸಿದ ಕೊಠಡಿ, ಕುಡಿಯುವ ನೀರು, ರ‍್ಯಾಂಪ್ ವ್ಯವಸ್ಥೆ, ಶೌಚಾಲಯ, ನೆರಳು ಮತ್ತು ಕ್ಯೂ ಮ್ಯಾನೇಜ್‌ಮೆಂಟ್ ಫಿಡಿಂಗ್‌ ಕೊಠಡಿ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ 229 ಮಂದಿ ಹಿರಿಯ ನಾಗರಿಕರು ಮತ್ತು ವಿಕಲಚೇತನರು ಅಂಚೆ ಪತ್ರದ ಮೂಲಕ ಮನೆಯಿಂದಲೇ ಮತದಾನ ಮಾಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ತಿಳಿಸಿದರು.

ಪಾರದರ್ಶಕ ಮತದಾನಕ್ಕೆ ತಂತ್ರಜ್ಞಾನದ ಬಳಕೆ

ಚುನಾವಣಾ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆಯಲು 284 ಮತಗಟ್ಟೆಗಳಲ್ಲೂ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ಮತದಾನದ ದಿನದಂದು ನೇರ ಪ್ರಸಾರ ಇರಲಿದೆ. ಸ್ಟ್ರಾಂಗ್ ರೂಮ್‌ಗಳಲ್ಲಿ ಇವಿಎಂ, ಕಂಟ್ರೋಲ್ ಯೂನಿಟ್ ಮತ್ತು ವಿವಿಪ್ಯಾಟ್ ಯಂತ್ರಗಳನ್ನು ಕಮಿಷನಿಂಗ್ ಮಾಡಿ ಸಜ್ಜುಗೊಳಿಸಲಾಗಿದೆ. ತಾಂತ್ರಿಕ ತೊಂದರೆ ಎದುರಾದರೆ ತಕ್ಷಣ ಬದಲಿಸಲು ‘ರಿಸರ್ವ್ ಯಂತ್ರಗಳನ್ನು’ ಸೆಕ್ಟರ್ ಅಧಿಕಾರಿಗಳ ಬಳಿ ಇರಿಸಲಾಗಿದೆ ಎಂದರು.

ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಕಣ್ಗಾವಲು

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ವ್ಯಾಪಕ ಭದ್ರತೆ ನಿಯೋಜಿಸಲಾಗಿದೆ. ಸುಮಾರು 1,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದ್ದು, ಇದರಲ್ಲಿ ಸಿಎಪಿಎಫ್ (CAPF), ಎಎಸ್ಐ, ಎಚ್‌ಸಿ ಮತ್ತು ಪಿಸಿ ಸಿಬ್ಬಂದಿಗಳು ಸೇರಿದ್ದಾರೆ.

ಸೂಕ್ಷ್ಮ ಮತಗಟ್ಟೆಗಳು: 76 ಮತಗಟ್ಟೆಗಳನ್ನು ‘ಸೂಕ್ಷ್ಮ’ (Critical) ಎಂದು ಗುರುತಿಸಲಾಗಿದ್ದು, ಅಲ್ಲಿ ಹೆಚ್ಚುವರಿ ಕೇಂದ್ರ ಸಶಸ್ತ್ರ ಪಡೆಗಳನ್ನು ನಿಯೋಜಿಸಲಾಗಿದೆ.

ಮುಂದಿನ 48 ಗಂಟೆಗಳ ಕಾಲ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಫ್ಲೈಯಿಂಗ್ ಸ್ಕ್ವಾಡ್ (SST), ಅಕೌಂಟಿಂಗ್ ಟೀಮ್ ಮತ್ತು ಸೆಕ್ಟರ್ ಅಧಿಕಾರಿಗಳು ಹಗಲಿರುಳು ಕಾರ್ಯನಿರ್ವಹಿಸಲಿದ್ದಾರೆ.

ಇವಿಎಂ ವಿವರ: BU: 568, CU: 284, VVPAT: 284. ಮೀಸಲು (Reserve): BU: 169, CU: 70, VVPAT: 100.

ಸಾರಿಗೆ ಮತ್ತು ವಿತರಣಾ ಕೇಂದ್ರ

ಮತದಾನದ ಸಾಮಗ್ರಿಗಳನ್ನು ವಿತರಿಸಲು ಮತ್ತು ಸ್ವೀಕರಿಸಲು ಡಿ.ಆರ್.ಆರ್ (DRR) ಸಂಸ್ಥೆಯ ಶಾಲೆಯನ್ನು ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಕೇಂದ್ರವನ್ನಾಗಿ ಮಾಡಲಾಗಿದೆ. ಮತದಾನದ ನಂತರ ಇವಿಎಂಗಳನ್ನು ಇದೇ ಕೇಂದ್ರದ ಸ್ಟ್ರಾಂಗ್ ರೂಮ್‌ನಲ್ಲಿ ಇರಿಸಲಾಗುವುದು. ಚುನಾವಣಾ ಸಿಬ್ಬಂದಿ ಮತ್ತು ಸಾಮಗ್ರಿಗಳ ಸಾಗಾಟಕ್ಕಾಗಿ 28 ಕೆಎಸ್ಆರ್‌ಟಿಸಿ ಬಸ್‌ಗಳು, 39 ಮಿನಿ ಬಸ್‌ಗಳು ಹಾಗೂ 5 ಜೀಪ್‌ಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದರು.

ಮೇ 4ರಂದು ಡಿ.ಆರ್.ಆರ್ ಶಾಲೆಯಲ್ಲಿಯೇ ಮತ ಎಣಿಕೆ ಕಾರ್ಯ ನಡೆಯಲಿದ್ದು, ಸಾರ್ವಜನಿಕರು ಶಾಂತಿಯುತವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಡಳಿತ ಮನವಿ ಮಾಡುತ್ತದೆ ಎಂದರು.

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ: ಪೊಲೀಸರಿಂದ ಬಿಗಿ ಕ್ರಮ

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತವಾಗಿ ನಡೆಸಲು ಪೊಲೀಸ್ ಇಲಾಖೆ ಸಂಪೂರ್ಣ ಸಜ್ಜಾಗಿದೆ.

ಬಹಿರಂಗ ಪ್ರಚಾರಕ್ಕೆ ತೆರೆ: ಹೊರಗಿನವರಿಗೆ ನಿರ್ಬಂಧ

ಇಂದು ಸಂಜೆ 5:30ಕ್ಕೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದ್ದು, ಪ್ರಚಾರಕ್ಕಾಗಿ ಬಂದಿರುವ ಹೊರಗಿನ ವ್ಯಕ್ತಿಗಳು ತಕ್ಷಣವೇ ಕ್ಷೇತ್ರವನ್ನು ತೊರೆಯಬೇಕು. ಇದಕ್ಕಾಗಿ ಪೊಲೀಸರು ಹೋಟೆಲ್‌ಗಳು, ರೆಸಾರ್ಟ್‌ಗಳು, ಕಲ್ಯಾಣ ಮಂಟಪಗಳು ಮತ್ತು ಲಾಡ್ಜ್‌ಗಳಲ್ಲಿ ತಪಾಸಣೆ ನಡೆಸಲಿದ್ದಾರೆ, ಯಾವುದೇ ರಾಜಕೀಯ ಪಕ್ಷ ಅಥವಾ ಧಾರ್ಮಿಕ ಸಂಸ್ಥೆಗಳು ಮುಂದಿನ 48 ಗಂಟೆಗಳ ಕಾಲ ಮೆರವಣಿಗೆ ಅಥವಾ ಪ್ರತಿಭಟನೆ ನಡೆಸುವಂತಿಲ್ಲ.

ನೈತಿಕ ಸಂಹಿತೆ ಉಲ್ಲಂಘನೆ: ಕಟ್ಟುನಿಟ್ಟಿನ ನಿಗಾ

ಶಸ್ತ್ರಾಸ್ತ್ರ ನಿಷೇಧ: ಮಾರಕಾಸ್ತ್ರಗಳು, ಕತ್ತಿ, ಈಟಿ ಅಥವಾ ದೈಹಿಕ ಹಿಂಸೆಗೆ ಪ್ರಚೋದಿಸುವ ಯಾವುದೇ ವಸ್ತುಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ.

ಚೆಕ್ ಪೋಸ್ಟ್ ತಪಾಸಣೆ: ನಗರದ ವಿವಿಧ ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆ ಚುರುಕುಗೊಳಿಸಲಾಗಿದ್ದು, ಈಗಾಗಲೇ 15.37 ಲಕ್ಷ ರೂಪಾಯಿ ನಗದು ಮತ್ತು 233.49 ಲೀಟರ್‌ ಅಂದರೆ ರೂ. 133849/- ಗಳಷ್ಟು ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ತಂಡಗಳ ನಿಯೋಜನೆ: ಮತದಾರರಿಗೆ ಆಮಿಷ ಒಡ್ಡಲು ಕುಕ್ಕರ್, ಸೀರೆ ಮುಂತಾದ ವಸ್ತುಗಳನ್ನು ಹಂಚುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಫ್ಲೈಯಿಂಗ್ ಸ್ಕ್ವಾಡ್‌ಗಳು ತಕ್ಷಣವೇ ಕ್ರಮ ಕೈಗೊಳ್ಳುತ್ತಿವೆ. ಹಲವೆಡೆ ಈಗಾಗಲೇ ಎಫ್‌ಐಆರ್ ದಾಖಲಿಸಲಾಗಿದೆ ಎಂದರು.

ಸೋಷಿಯಲ್ ಮೀಡಿಯಾ ಮೇಲೆ ಹದ್ದಿನ ಕಣ್ಣು

ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಐಡಿ ಸೃಷ್ಟಿಸಿ ಅಭ್ಯರ್ಥಿಗಳ ಪರ ಅಥವಾ ವಿರುದ್ಧ ಅಪಪ್ರಚಾರ ನಡೆಸುವವರ ಮೇಲೆ ಸೈಬರ್ ಪೊಲೀಸ್ ತಂಡ ನಿಗಾ ಇರಿಸಿದೆ. ಎಂ.ಸಿ.ಸಿ (ಮಾದರಿ ನೀತಿ ಸಂಹಿತೆ) ಉಲ್ಲಂಘಿಸುವ ಪೋಸ್ಟ್‌ಗಳನ್ನು ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ ಎಂದರು.

ಮತದಾನದ ಸಮಯ: ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಟೋಕನ್ ವ್ಯವಸ್ಥೆ: ಸಂಜೆ 6 ಗಂಟೆಯ ಒಳಗೆ ಮತಗಟ್ಟೆಗೆ ಬಂದು ಸಾಲಿನಲ್ಲಿ ನಿಂತಿರುವ ಮತದಾರರಿಗೆ ಟೋಕನ್ ನೀಡಲಾಗುವುದು. ಟೋಕನ್ ಪಡೆದ ಪ್ರತಿಯೊಬ್ಬರಿಗೂ ಮತದಾನಕ್ಕೆ ಅವಕಾಶವಿರುತ್ತದೆ.

ಮಾಕ್ ಪೋಲ್: ಮತದಾನದ ದಿನ ಬೆಳಿಗ್ಗೆ 5:30 ರಿಂದ 7 ಗಂಟೆಯವರಿಗೆ ಅಭ್ಯರ್ಥಿಗಳ ಏಜೆಂಟರ ಸಮ್ಮುಖದಲ್ಲಿ ‘ಮಾಕ್ ಪೋಲ್’ ನಡೆಯಲಿದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಸಿಬ್ಬಂದಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ

Published

on

ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹರಿಹರ ಇವರ ಸಂಯುಕ್ತ ಆಶ್ರಯದಲ್ಲಿ 11 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

ಶಿಬಿರದಲ್ಲಿ ಸತ್ಯನಾರಾಯಣ ಕ್ಯಾಂಪ್‌ನ ಡಾ. ರಾಮಾಂಜನೇಯ ಸ್ವಾಮಿ ಅವರು ಇದುವರೆಗೆ 110 ಬಾರಿ ರಕ್ತದಾನ ಮಾಡಿರುವುದು ವಿಶೇಷವಾಗಿದ್ದು, ಈ ಬಾರಿ ತಮ್ಮ ಮಗನೊಂದಿಗೆ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ ಬಿ.ಕೆ. (ವಿ.ಆರ್.ಡಬ್ಲ್ಯೂ) ಎಂಬ ವಿಶೇಷ ಚೇತನರು 5ನೇ ಬಾರಿ ರಕ್ತದಾನ ಮಾಡಿ ಗಮನಾರ್ಹರಾಗಿದ್ದಾರೆ.

ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ (ಟಿ.ಎಚ್.ಒ) ಉಮಣ್ಣ ಅವರು ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲವಾದುದರಿಂದ ರಕ್ತದಾನದ ಮಹತ್ವ ಅತ್ಯಂತ ಮಹತ್ತರವಾಗಿದೆ ಎಂದು ತಿಳಿಸಿದರು.

ವೈದ್ಯಾಧಿಕಾರಿಗಳಾದ ಡಾ. ರೇವತಿ ಎಚ್ ಬುಟ್ಟೆ ಅವರು ಮಾತನಾಡಿ, ಗ್ರಾಮದ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿರುವುದು ಸಂತೋಷದ ಸಂಗತಿ. ಅತಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದಾನವು ಅನೇಕ ರೋಗಿಗಳ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು. ದಾವಣಗೆರೆ ಕೇಂದ್ರ ರಕ್ತ ನಿಧಿಯ ಡಾ. ಗೀತಾ ಡಿ.ಎಚ್. ಹಾಗೂ ಸಿಬ್ಬಂದಿಗಳು ರಕ್ತವನ್ನು ಸಂಗ್ರಹಿಸಿದರು.

ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಉಮೇಶ್ ಎಂ.ಆರ್.ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರಾದ ವಿಶ್ವನಾಥ್ ಡಿ.ಆರ್. (ಉಪನ್ಯಾಸಕರು), ವಿಶ್ವನಾಥ್ ಎ.ಎಸ್., ಬನ್ನಿಕೋಡು ಸುರೇಶ್, ರೇವಣಸಿದ್ದಪ್ಪ, ಕೆ.ಜಿ. ಸಂತೋಷ್, ಜಿ.ಎಂ. ಮುರುಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಕೆ. ಬೇವಿನಹಳ್ಳಿ ಮತ್ತು ಸಾಲಕಟ್ಟೆ ಗ್ರಾಮಸ್ಥರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ

Published

on

ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.

ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.

2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.

ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.

ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.

ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)

ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.

ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.

ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.

ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.

ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್‌, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್‌ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending