ಲೈಫ್ ಸ್ಟೈಲ್
ರಕ್ತದಾನ–ಜೀವದಾನ
“ಮಾನವ ಮೂಳೆ ಮಾಂಸದ ತಡಿಕೆ” ಈ ಸಾಲನ್ನು ಕೇಳಿದ ಎಲ್ಲರಿಗೂ ಈ ವಿಚಾರ ತಿಳಿದೇ ಇರುತ್ತದೆ. ಮಾನವನ ದೇಹದ ಒಳಗೆ ಮಿದುಳು, ಹೃದಯ, ಯಕೃತ್ತು, ಮೂತ್ರಪಿಂಡ ಸೇರಿದಂತೆ ಇನ್ನೂ ಕೆಲವು ಅಂಗಗಳು ಮಾನವನ ‘ಜೀವ’ಕ್ಕೆ ಅವಶ್ಯಕವಾದರೆ ಕೇವಲ ಮೂಳೆ ಮಾಂಸಗಳನ್ನೊಳಗೊಂಡ ಕೈ ಕಾಲುಗಳು ‘ಜೀವನಕ್ಕೆ ಬೇಕಾಗಿವೆ.
ಜೀವ ಮತ್ತು ಜೀವನ ಎರಡೂ ಹೊಂದಿಕೊಂಡು ಸಾಗಬೇಕಾದರೆ ದೇಹದ ಒಳಗೆ ನಿತ್ಯವೂ ಪ್ರತಿಕ್ಷಣವೂ ಸಂಚರಿಸುವ ರಕ್ತ ಈ ಎಲ್ಲ ಅಂಗಾಂಗಗಳ ಜೀವಕ್ಕೆ ಬೇಕು. ಆದರೆ ದೇಹದಲ್ಲಿ ರಕ್ತದ ಪ್ರಮಾಣವೇ ಕಡಿಮೆಯಾದರೆ, ಜೀವ ಮತ್ತು ಜೀವನ ಎರಡಕ್ಕೂ ಅಪಾಯ ಕಟ್ಟಿಟ್ಟದ್ದು.
ಎಲ್ಲೋ ಒಂದು ರಸ್ತೆ ಅಪಘಾತವಾಗುತ್ತದೆ. ಕಾಲು ಮುರಿದು ವಿಪರೀತ ರಕ್ತಸ್ರಾವವಾಗಿ ಆಸ್ಪತ್ರೆಗೆ ಸಾಗಿಸಿದರೆ ಅಲ್ಲಿ ವೈದ್ಯರು ಬರೀ ಐ.ವಿ. ಫ್ಲೂಯಿಡ್ಸ್ನಲ್ಲಿ ಉಪಚರಿಸಲು ಸಾಧ್ಯವಾಗದೆ ರಕ್ತದ ಅವಶ್ಯಕತೆಯ ಬಗ್ಗೆ ತಿಳಿಸುತ್ತಾರೆ.
ಒಂದೊಮ್ಮೆ ಗರ್ಭಿಣಿ ತಿಂಗಳು ತುಂಬಿ ಪ್ರಸವದ ನಂತರ ತಡೆಯಲಾರದ ರಕ್ತಸ್ರಾವವಾಗಿ ವೈದ್ಯರು ರಕ್ತ ಬೇಕಾಗುತ್ತದೆ ಎನ್ನುತ್ತಾರೆ. ಇನ್ನೊಂದು ಕಡೆ ಒಬ್ಬ ವ್ಯಕ್ತಿ ಡೆಂಗ್ಯೂ ಜ್ವರಕ್ಕೆ ತುತ್ತಾಗಿ ರಕ್ತದಲ್ಲಿ ಪ್ಲೇಟಲೆಟ್ಸ್ ಕಡಿಮೆಯಾಗಿ ರಕ್ತ ಹಾಕದೇ ಉಳಿಗಾಲವಿಲ್ಲವೆಂಬ ಸ್ಥಿತಿಗೆ ತಲುಪುತ್ತಾನೆ. ಅಲ್ಲೊಬ್ಬ ತಲಸೀಮಿಯ, ಇಲ್ಲೊಬ್ಬ ಹೀಮೋಫೀಲಿಯ ರೋಗಗಳಿಂದ ಪೀಡಿತರಾಗಿರುತ್ತಾರೆ. ಈ ಎಲ್ಲಾ ಸನ್ನಿವೇಶಗಳನ್ನೂ ದಿನನಿತ್ಯ ಎಲ್ಲಾದರೊಂದು ಕಡೆ ಕಂಡಿರುತ್ತೇವೆ ಇಲ್ಲವೆ ಕೇಳಿರುತ್ತೇವೆ. ಈ ಎಲ್ಲಕ್ಕೂ ಪರಿಹಾರ ರಕ್ತವೇ ಆಗಿರುತ್ತದೆ. ಅಂದರೆ ದೇಹದಲ್ಲಿರುವ ರಕ್ತ ಅಥವಾ ರಕ್ತದ ಯಾವುದೇ ಒಂದು ಅಂಶ ಕಡಿಮೆಯಾದರೂ ರಕ್ತ ಹಾಕಬೇಕಾದ ಪರಿಸ್ಥಿತಿ ತಲುಪುತ್ತದೆ.
ಒಬ್ಬ ವ್ಯಕ್ತಿಗೆ ರಕ್ತ ಹಾಕಬೇಕಾದರೆ ಅದು ಇನ್ನೊಬ್ಬ ವ್ಯಕ್ತಿ ದಾನ ಮಾಡಿದರೇನೆ ಸಾಧ್ಯವಾಗುತ್ತದೆಯೇ ಹೊರತು ಬೇರೆಲ್ಲಿಂದಲೂ ಅಲ್ಲ. ರಕ್ತದಾನವೆಂದರೆ ಜೀವದಾನ. ಒಬ್ಬ ವ್ಯಕ್ತಿಯ ಒಂದು ಬಾಟಲಿ ರಕ್ತದಿಂದ ಮೂರು ಜೀವಗಳನ್ನು ಉಳಿಸಬಹುದು. ಒಬ್ಬ ವ್ಯಕ್ತಿಯ ಕೇವಲ ಐದು ನಿಮಿಷದ ಸಮಯ ಇನ್ನೊಬ್ಬರ ಜೀವಿತಾವಧಿಯೂ ಆಗಬಲ್ಲದು. ಹಾಗಿದ್ದರೆ ರಕ್ತದಾನದ ಬಗ್ಗೆ ಒಂದಿಷ್ಟು ತಿಳಿದುಕೊಳ್ಳೋಣ.
ರಕ್ತವನ್ನು ಯಾರು ದಾನ ಮಾಡಬಹುದು?:
ಆರೋಗ್ಯವಂತ ವ್ಕಕ್ತಿ ಯಾರಾದರೂ ರಕ್ತವನ್ನು ದಾನ ಮಾಡಬಹುದು. ಆದರೂ ರಕ್ತದಾನದ ನಂತರ ದಾನಿಯ ಆರೋಗ್ಯವೂ ಮುಖ್ಯವಾಗುವ ಕಾರಣ ಕೆಲವು ನಿಬಂಧನೆಗಳನ್ನು ಹಾಕಲಾಗುತ್ತದೆ. ವಯೋಮಿತಿ 18 ರಿಂದ 60 ವರ್ಷಗಳೊಳಗೆ ಮತ್ತು ದೇಹದ ತೂಕ 50 ಕೆ.ಜಿ.ಗಿಂತ ಜಾಸ್ತಿಯಿರಬೇಕಾಗುತ್ತದೆ.
ರಕ್ತದಾನವನ್ನು ಯಾರು ಮಾಡಲಾಗುವುದಿಲ್ಲ?
- ರಕ್ತದಲ್ಲಿ ಹೀಮೊಗ್ಲೊಬಿನ್ ಅಂಶ ಕಡಿಮೆಯಿರುವವರು
- ಕಳೆದೊಂದು ವರ್ಷದಲ್ಲಿ ಯಾವುದೇ ಸಾಂಕ್ರಾಮಿಕ ರೋಗಗಳಿಂದ ಪೀಡಿತರಾಗಿದ್ದರೆ.
ಕಳೆದೊಂದು ವರ್ಷದಲ್ಲಿ ಯಾವುದೇ ಶಸ್ತ್ರಚಿಕಿತ್ಸೆಗಳಪಟ್ಟಿದ್ದರೆ ಸ್ವತಃ ರಕ್ತ ಹಾಕಿಸಿಕೊಂಡಿದ್ದರೆ. - ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿರುವವರು.
- ದೇಹದ ಒಳಗಿನ ಯಾವುದೇ ಅಂಗಾಂಗವು, ರೋಗಪೀಡಿತವಾಗಿದ್ದರೆ.
- ಕಳೆದ 6 ತಿಂಗಳಲ್ಲಿ ಹಚ್ಚೆ ಹಾಕಿಸಿಕೊಂಡಿದ್ದರೆ, ಕಿವಿ ಚುಚ್ಚಿಸಿಕೊಂಡಿದ್ದರೆ, ಅಥವಾ ಹಲ್ಲು ಕೀಳಿಸಿಕೊಂಡಿದ್ದರೆ.
- ಕಳೆದ ಮೂರು ದಿನಗಳಲ್ಲಿ ಯಾವುದೇ ಮಾತ್ರೆ, ಔಷಧಿ/ಇಂಜೆಕ್ಷನ್ಗಳನ್ನು ತೆಗೆದುಕೊಂಡಿದ್ದರೆ.
ರಕ್ತದಾನದ ಮೊದಲು ಅನುಸರಿಸಬೇಕಾದ ಅಂಶಗಳು
- ರಕ್ತದಾನದ ಮೂರು ದಿನಗಳ ಅವಧಿಯಲ್ಲಿ ಮಧ್ಯಪಾನ ಹಾಗೂ 10 ರಿಂದ 12 ತಾಸಿನ ಅವಧಿಯಲ್ಲಿ ಧೂಮಪಾನವನ್ನು ಮಾಡಿರಬಾರದು.
- ರಕ್ತದಾನದ ಹಿಂದಿನ ದಿನ ಸಾಕಷ್ಟು ನೀರು ಹಾಗೂ ಹೆಚ್ಚಿನ ದ್ರವ ಪದಾರ್ಥಗಳನ್ನು ಸೇವಿಸಿದ್ದರೆ ಒಳಿತು
- ರಕ್ತದಾನದ ಹಿಂದಿನ ರಾತ್ರಿ ಸಂಪೂರ್ಣ ನಿದ್ರೆ ಮಾಡಿರಬೇಕು.
- ಉಪಾಹಾರ ಹಾಗೂ ರಕ್ತದಾನ ಮಾಡುವ ನಡುವೆ 3 ತಾಸುಗಳಿಗಿಂತ ಜಾಸ್ತಿ ಸಮಯ ಕಳೆದಿರಬಾರದು, ಹಾಗೇನಾದರೂ ಇದ್ದಲ್ಲಿ ಇನ್ನೊಮ್ಮೆ ಉಪಾಹಾರ ಸೇವಿಸುವುದು ಸೂಕ್ತ
ರಕ್ತದಾನದ ನಂತರ ಅನುಸರಿಸಬೇಕಾದ ಅಂಶಗಳು
- ಮುಂದಿನ 2-3 ತಾಸುಗಳವರೆಗೆ ವಾಹನ ಚಲಾಯಿಸುವಂತಿಲ್ಲ, ಮತ್ತು ಅಂದಿನ ಯಾವುದೇ ಪ್ರಯಾಣಗಳನ್ನು ಮುಂದೂಡುವುದು ಸೂಕ್ತ.
- ನಂತರ ದಾನಿಗಳು ಮುಂದಿನ 2 ದಿನಗಳ ನಂತರ ಸಾಕಷ್ಟು ನೀರು ಮತ್ತು ಇತರೆ ದ್ರವ ಆಹಾರಗಳನ್ನು ಸೇವಿಸಬೇಕಾಗುತ್ತದೆ.
- ಮುಂದಿನ 3 ತಿಂಗಳವರೆಗೆ(ಪುರುಷರು) ಮತ್ತು 4 ತಿಂಗಳವರೆಗೆ(ಮಹಿಳೆಯರು) ಮತ್ತೆ ರಕ್ತದಾನ ಮಾಡುವಂತಿಲ್ಲ.
ರಕ್ತದಾನದ ನಂತರ ಸಂಭವಿಸಬಹುದಾದ ತೊಂದರೆಗಳು
- ರೋಗಿಯ ಆರೋಗ್ಯದಷ್ಟೇ ದಾನಿಯ ಆರೋಗ್ಯವು ಮುಖ್ಯವಾಗುತ್ತದೆ. ಆದ್ದರಿಂದ ರಕ್ತದಾನ ಮಾಡುವ ಸ್ಥಳಗಳಲ್ಲಿಯೇ ದಾನಿಗಳನ್ನು ಪರೀಕ್ಷಿಸಿ ಸಂಭವಿಸಬಹುದಾದ ತೊಂದರೆಗಳಿದ್ದಲ್ಲಿ ಅವರನ್ನು ಅನರ್ಹರೆಂದು ಪರಿಗಣ ಸಿ ತಿರಸ್ಕರಿಸಲಾಗುತ್ತದೆ ಮತ್ತು ಅರ್ಹರಾದವರನ್ನು ಆ ಅವಧಿಯ ಪೂರ್ತಿಯೂ ಪರಿವೀಕ್ಷಣೆಯಲ್ಲಿರಿಸಲಾಗುತ್ತದೆ.
- ಸುಸ್ತಾಗುವುದು, ನಿಶ್ಯಕ್ತಿಯೆನಿಸುಬಹುದು
ರಕ್ತ ತೆಗೆದುಕೊಂಡ ಜಾಗದಲ್ಲಿ ರಕ್ತಸ್ರಾವವಾಗಬಹುದು - ತುಂಬಾ ವಿರಳವಾಗಿ ಕೈ ಕಾಲುಗಳು ಸೆಳೆತಕ್ಕೊಳಗಾಗಬಹುದು.
- ಈ ಎಲ್ಲಾ ತೊಂದರೆಗಳನ್ನು ಗಮನಿಸಲೆಂದೇ ರಕ್ತದಾನದ ನಂತರ 10-15 ನಿಮಿಷಗಳ ಕಾಲ ದಾನಿಯನ್ನು ಅಲ್ಲೇ ಇರಿಸಿಕೊಳ್ಳಲಾಗುತ್ತದೆ. ಹಾಗೇನಾದರೂ ಸಂಭವಿಸಿದಲ್ಲಿ ತಕ್ಷಣದಲ್ಲಿ ಅವರಿಗೆ ಅಲ್ಲೇ ಉಪಚರಿಸಿ ಅಲ್ಲಿರುವ ವೈದ್ಯಾಧಿಕಾರಿಗಳ ಸಲಹೆಯಂತೆ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ.
ರಕ್ತದಾನದಿಂದಾಗುವ ಲಾಭಗಳೇನು?
ದೇಹದ ಆರೋಗ್ಯ ಕಾಪಾಡುವಲ್ಲಿ ಸಹಕಾರಿಯಾಗುತ್ತದೆ
ದೇಹದಲ್ಲಿ ಹೊಸ ರಕ್ತಕಣಗಳ ಉತ್ಪತ್ತಿ ಹೆಚ್ಚಾಗುತ್ತದೆ
ಅಧಿಕ ರಕ್ತದೊತ್ತಡ ಮತ್ತು ಸಕ್ಕರೆ ಅಂಶಗಳನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗುತ್ತದೆ
ಬೊಜ್ಜು ಕರಗಿಸುವಲ್ಲಿ ಸಹಕಾರಿಯಾಗುತ್ತದೆ
ವಿವಿಧ ಕಾನ್ಸರ್ಗಳ ಸಂಭವವನ್ನು ಕಡಿಮೆ ಮಾಡುತ್ತದೆ.
ಈ ಎಲ್ಲದಕ್ಕೂ ಹೆಚ್ಚಾಗಿ ಬೇರೊಬ್ಬರ ಜೀವ ಉಳಿಸುವಲ್ಲಿ ಸಹಕಾರಿಯಾಗುತ್ತದೆ. ಒಬ್ಬರಲ್ಲಿ ಹರಿಯುವ ರಕ್ತ ಇನ್ನೊಬ್ಬರ ಜೀವನಾಡಿಗಳಲ್ಲಿ ಸಂಚರಿಸಿ ಅವರ ಜೀವವನ್ನೂ ಕಾಪಾಡುತ್ತದೆ. ಇದಕ್ಕಿಂತ ಇನ್ಯಾವ ಸಾರ್ಥಕತೆ ಬೇಕು ಹೇಳಿ.

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಕಣ
Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

ದಿನದ ಸುದ್ದಿ
ಗೃಹಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ
ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.
ಗೃಹ ಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.
ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243




