Connect with us

ದಿನದ ಸುದ್ದಿ

ಪ್ರಾಟೆಸ್ಟೆಂಟ್ ಕ್ರಿಶ್ಚಿಯನ್ ಮಾದರಿಯಲ್ಲಿ ಬೌದ್ಧ ಧರ್ಮ ಕಟ್ಟಲು ಬಾಬಾಸಾಹೇಬ್ ಅಂಬೇಡ್ಕರರು ರೂಪಿಸಿದ್ದ ನೀಲನಕ್ಷೆ

Published

on

  • ರಘೋತ್ತಮ ಹೊ.ಬ

1954 ಡಿಸೆಂಬರ್ 4 ರಂದು ಬರ್ಮಾದ ರಂಗೂನ್ ನಲ್ಲಿ ಅಂತರರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯುತ್ತದೆ. ಆ ಸಮ್ಮೇಳನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ರು ಮುಖ್ಯ ಅತಿಥಿಯಾಗಿರುತ್ತಾರೆ. ಆ ಸಂದರ್ಭದಲ್ಲಿ ಬೌದ್ಧ ಶಾಸನ ಕೌನ್ಸಿಲ್ ನಲ್ಲಿ ಅವರು ಭಾರತದಲ್ಲಿ ಬೌದ್ಧ ಧರ್ಮ ಬೆಳೆಸಲು ಕೈಗೊಳ್ಳಬೇಕಾದ ಕ್ರಮಗಳೇನು ಎಂಬುದನ್ನು ವಿವರಿಸಲು ಸಭೆಗೆ ನೀಲನಕ್ಷೆ ಮಾದರಿಯಲ್ಲಿ ಒಂದು ಮನವಿ ಪತ್ರ ಸಲ್ಲಿಸುತ್ತಾರೆ.

ಆ ನೀಲನಕ್ಷೆಯ ಮುಖ್ಯಾಂಶಗಳನ್ನು ದಾಖಲಿಸುವುದಾದರೆ

ಮೊದಲಿಗೆ ಬಾಬಾಸಾಹೇಬರು ಹೇಳುವುದು ಮತಾಂತರ ಹೊಂದಿದವರಿಗೆ ಅಗತ್ಯವಾಗಿರುವ ಒಂದು ಬೌದ್ಧ ಧರ್ಮಗ್ರಂಥದ ಬಗ್ಗೆ. ಈ ನಿಟ್ಟಿನಲ್ಲಿ ಕ್ರೈಸ್ತ ಧರ್ಮ ಹೋಲಿಸುವ ಅವರು ಕ್ರೈಸ್ತ ಧರ್ಮ ಬೆಳೆಯಲು ಕಾರಣ ಅವರಲ್ಲಿ ಇರುವ ಬೈಬಲ್ ನಂತಹ ಯಾರಾದರೂ ಸುಲಭವಾಗಿ ಇಟ್ಟುಕೊಳ್ಳಬಹುದಾದ ಸಣ್ಣ ಪುಸ್ತಕ. ಆದರೆ ಬೌದ್ಧ ಧರ್ಮಕ್ಕೆ ಅಂತಹ ಅನುಕೂಲ ಇಲ್ಲ ಎನ್ನುತ್ತಾರೆ.

ಇದಕ್ಕೆ ಅವರು ಕೊಡುವ ಕಾರಣ ಸಾಮಾನ್ಯ ಅನುಯಾಯಿಯೊಬ್ಬ ಬೌದ್ಧ ಧರ್ಮಕ್ಕೆ ಸಂಬಂಧಿಸಿದ ಪಾಳಿ ಭಾಷೆಯ 73 ಆ ಬೃಹತ್ ಸಂಪುಟಗಳನ್ನು ಓದಲಾರ ಎಂಬುದು. ಖಂಡಿತ, ಬಾಬಾಸಾಹೇಬರು ಹೇಳುವಂತೆ 73 ಆ ಬೃಹತ್ ಸಂಪುಟಗಳನ್ನು ಸಾಮಾನ್ಯ ಓದುಗನಿರಲಿ ಪಂಡಿತರೂ ಕೂಡ ಓದಲಾರರು. ಈ ನಿಟ್ಟಿನಲ್ಲಿ ಬೈಬಲ್ ಮಾದರಿಯಲ್ಲೇ ಬೌದ್ಧಧರ್ಮಕ್ಕೂ ಧರ್ಮ ಗ್ರಂಥವೊಂದನ್ನು ತಯಾರಿಸುವ ಇಂಗಿತ ವ್ಯಕ್ತಪಡಿಸುವ ಬಾಬಾಸಾಹೇಬರು ಆ ಗ್ರಂಥದಲ್ಲಿ ಬುದ್ಧನ ಸಾಮಾಜಿಕ ಮತ್ತು ನೈತಿಕ ನಿಲುವಿಗೆ ಹೆಚ್ಚು ಒತ್ತು ಕೊಡಬೇಕಾದ ಅಗತ್ಯತೆ ಹೇಳುತ್ತಾರೆ.

ಯಾಕೆಂದರೆ ಅವರು ಹೇಳುವುದು ಇದುವರೆಗೂ ಬೌದ್ಧ ಗ್ರಂಥಗಳಲ್ಲಿ ಆದ್ಯತೆ ಕೊಟ್ಟಿರುವುದು ಧ್ಯಾನ, ಚಿಂತನೆ ಮತ್ತು ಅಭಿಧಮ್ಮಕ್ಕೆ. ಈ ದಿಸೆಯಲ್ಲಿ ಈ ಮಾದರಿಯಲ್ಲಿ ಅಂದರೆ ಧ್ಯಾನ, ಚಿಂತನೆ ಮತ್ತು ಅಭಿಧಮ್ಮದ ಮಾದರಿಯಲ್ಲಿ ಭಾರತದಲ್ಲಿ ಬೌದ್ಧ ಧರ್ಮ ಹರಡುವುದನ್ನು ಮುಂದುವರೆಸಿದ್ದೇ ಆದರೆ ಅದು ಅಕ್ಷರಶಃ ಬೌದ್ಧ ಧರ್ಮದ ಬೆಳವಣಿಗೆಗೆ ಮಾರಣಾಂತಿಕವಾಗಿ ಪರಿಣಮಿಸಲಿದೆ ಎನ್ನುತ್ತಾರೆ ಅಂಬೇಡ್ಕರರು.

ಇನ್ನು ಎರಡನೇ ಅಂಶ ತಮ್ಮ ಆ ನೀಲನಕ್ಷೆಯಲ್ಲಿ ಬಾಬಾಸಾಹೇಬರು ಹೇಳುವುದು; ಬೌದ್ಧ ಧರ್ಮದಲ್ಲಿ ಸಾಮಾನ್ಯ ಅನುಯಾಯಿಗಳಿಗೆ ಕ್ರೈಸ್ತ ಧರ್ಮದ ಮಾದರಿಯಲ್ಲಿ ದೀಕ್ಷೆ ನೀಡುವ ಪದ್ಧತಿ ಆರಂಭಿಸುವ ಬಗ್ಗೆ. ಯಾಕೆಂದರೆ ಅವರು ಹೇಳುವುದು ಬೌದ್ಧ ಧರ್ಮದಲ್ಲಿ ಭಿಕ್ಕುಗಳಿಗೆ ಮಾತ್ರ ಈ ಥರದ ದೀಕ್ಷಾ ನೀಡುವ ಪದ್ಧತಿ ಇದ್ದು ಮತಾಂತರ ಆಗುವ ಸಾಮಾನ್ಯ ಅನುಯಾಯಿಗಳಿಗೆ ಅಂತಹ ಯಾವುದೇ ದೀಕ್ಷಾ ಪದ್ಧತಿ ಇಲ್ಲ ಎಂದು.

ಈ ಹಿನ್ನೆಲೆಯಲ್ಲಿ ಎಷ್ಟೋ ಜನ ಬೌದ್ಧ ಧರ್ಮಕ್ಕೆ ಸೇರುತ್ತಾರದರೂ ಅಂತಹ ಒಂದು ದೀಕ್ಷಾ ಪದ್ಧತಿ ಇಲ್ಲದ್ದರಿಂದಾಗಿ ಇದ್ದಕ್ಕಿದ್ದಂತೆ ಅವರು ಬಿಟ್ಟು ಹೋಗುತ್ತಿದ್ದಾರೆ. ಆದ್ದರಿಂದ ಕ್ರೈಸ್ತ ದೀಕ್ಷೆಯ ಮಾದರಿಯಲ್ಲಿ ಯಾವುದೇ ಒಬ್ಬ ವ್ಯಕ್ತಿ ಬೌದ್ಧ ಎನಿಸಿಕೊಳ್ಳಲು ಕಡ್ಡಾಯವಾಗಿ ಅಂತಹ ಒಂದು ದೀಕ್ಷೆ ಸ್ವೀಕರಿಸುವ ಅಗತ್ಯತೆ ಅವರು ಹೇಳುತ್ತ ಅಂತೆಯೇ ಒಂದು ಬೌದ್ಧ ದೀಕ್ಷಾ ಪದ್ಧತಿಯನ್ನು ಆರಂಭಿಸುವ ಬಗ್ಗೆ ಅಂಬೇಡ್ಕರ್ ರು ಸ್ಪಷ್ಟವಾಗಿ ಒತ್ತಿ ಹೇಳುತ್ತಾರೆ.

ಹಾಗೆಯೇ ಆ ದೀಕ್ಷೆಯಲ್ಲಿ ಕೇವಲ ಪಂಚಶೀಲ ಉಚ್ಛರಿಸಿದರಷ್ಟೆ ಸಾಲದು ಜೊತೆಗೆ ಅಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸಬೇಕು ಹೇಗೆಂದರೆ ದೀಕ್ಷೆ ಸ್ವೀಕರಿಸಿದ ತಕ್ಷಣ ಆತನಲ್ಲಿ ತಾನು ಹಿಂದೂ ಎಂಬ ಮನೋಭಾವ ಹೋಗಬೇಕು ಆತ ಹೊಸ ಮನುಷ್ಯನಂತೆ ಆಗಬೇಕು ಎಂದು ಅಂಬೇಡ್ಕರರು ತಮ್ಮ ಆ ದೀಕ್ಷಾ ಪದ್ಧತಿ ಇರಬೇಕಾದ ರೀತಿಯನ್ನು ಹೇಳುತ್ತಾರೆ.

ಮುಂದುವರಿದು ಬೌದ್ಧ ಧರ್ಮ ಬೆಳವಣಿಗೆಯ ತಮ್ಮ ಆ ಬೃಹತ್ ಯೋಜನೆಯ ನೀಲನಕ್ಷೆಯಲ್ಲಿ ಅವರು ಹೇಳುವುದು ಬೌದ್ಧ ಧರ್ಮ ಬೋಧಕರ ಬಗ್ಗೆ. ಈ ನಿಟ್ಟಿನಲ್ಲಿ ಬೌದ್ಧ ಧರ್ಮ ಬೋಧಕರನ್ನು ನೇಮಿಸಿಕೊಳ್ಳಬೇಕೆನ್ನುವ ಅಂಬೇಡ್ಕರರು ಅಂತಹ ಬೋಧಕರು ಸಾಮಾನ್ಯ ಅನುಯಾಯಿಗಳಿಗೆ ಧಮ್ಮ ಬೋಧಿಸಬೇಕು ಮತ್ತು ಅನುಯಾಯಿಗಳು ಬುದ್ಧನ ಆ ಧಮ್ಮವನ್ನು ಹೇಗೆ ಪಾಲಿಸುತ್ತಿದ್ದಾರೆ ಎಂಬುದನ್ನೂ ಗಮನಿಸುತ್ತಿರಬೇಕು ಎನ್ನುತ್ತಾರೆ.

ಹಾಗೆಯೇ ಆ ಬೋಧಕರಿಗೆ ಸಂಬಳ ನೀಡುವ ಅಗತ್ಯತೆ ಹೇಳುವ ಅಂಬೇಡ್ಕರರು ಮದುವೆಯಾಗಿರುವವರನ್ನು ಕೂಡ ಅಂತಹ ಬೌದ್ಧ ಧಮ್ಮ ಬೋಧಕ ವೃತ್ತಿಗೆ ನೇಮಿಸಿಕೊಳ್ಳಬಹುದು ಎನ್ನುತ್ತಾರೆ, ಜೊತೆಗೆ ಅಂತಹವರು ಆರಂಭದಲ್ಲಿ ಪಾರ್ಟ್ ಟೈಮ್ ವೃತ್ತಿ ಮಾಡುತ್ತಿದ್ದರು ಕೂಡ ತಪ್ಪೇನಿಲ್ಲ ಎನ್ನುತ್ತಾರೆ. ಅಂದರೆ ಬಾಬಾಸಾಹೇಬರ ಪ್ರಕಾರ ಅಂತಹ ಧಮ್ಮ ಬೋಧಕರು ತಮ್ಮ ಧಮ್ಮ ಬೋಧನೆಯ ಜೊತೆ ಜೊತೆಗೆ ತಮ್ಮ ಸಂಸಾರ ಮತ್ತು ತಮ್ಮ ವೃತ್ತಿಯನ್ನೂ ಕೂಡ ನಿರ್ವಹಿಸಬಹುದು.

ಮುಂದುವರಿದು ಬಾಬಾಸಾಹೇಬರು ಹೇಳುವುದು ಬೌದ್ಧ ಧಾರ್ಮಿಕ ಪೂಜಾ ಶಾಲೆಗಳನ್ನು ಸ್ಥಾಪಿಸುವ ಬಗ್ಗೆ. ಅಂದಹಾಗೆ ಅಂತಹ ಶಾಲೆಗಳಲ್ಲಿ ಉದ್ದೇಶಿತ ಆ ಧಮ್ಮ ಬೋಧಕರು ಬೌದ್ಧ ಧರ್ಮವನ್ನು ಬೋಧಿಸಬಹುದು, ಅದರ ಜೊತೆಗೆ ಇತರ ಧರ್ಮಗಳನ್ನು ಬೌದ್ಧ ಧರ್ಮದ ಜೊತೆಗೆ ಹೋಲಿಸಿ ಧಮ್ಮದ ಅಧ್ಯಯನ ಮಾಡಬಹುದು ಎನ್ನುತ್ತಾರೆ.

ಈ ಸಂದರ್ಭದಲ್ಲಿ ಬಾಬಾಸಾಹೇಬರು ಒಂದು ಪ್ರಮುಖ ವಿಚಾರ ಪ್ರಸ್ತಾಪಿಸುತ್ತಾರೆ. ಅದು ವಿಹಾರದಲ್ಲಿ ಪ್ರತಿ ಭಾನುವಾರ ಬೌದ್ಧ ಪೂಜಾ ಸಂಪ್ರದಾಯವೊಂದನ್ನು ಆರಂಭಿಸುವ ಬಗ್ಗೆ. ಅಂದಹಾಗೆ ಅಂತಹ ಪೂಜೆಯ ನಂತರ ಧಮ್ಮ ಪ್ರವಚನ ಮಾಡಬೇಕು ಎಂದು ಅವರು ಸ್ಪಷ್ಟವಾಗಿ ಹೇಳುತ್ತಾರೆ.

ಒಟ್ಟಾರೆ ಬಾಬಾಸಾಹೇಬ್ ಅಂಬೇಡ್ಕರ ಈ ನೀಲನಕ್ಷೆಯಂತೆ ಒಂದು ಬೌದ್ಧ ಧರ್ಮ ಗ್ರಂಥ ರಚಿಸುವುದು, ಒಂದು ಬೌದ್ಧ ದೀಕ್ಷಾ ಪದ್ಧತಿ ಸೃಷ್ಟಿಸುವುದು, ಬೌದ್ಧ ಬೋಧಕರನ್ನು ನೇಮಿಸಿಕೊಳ್ಳುವುದು ಮತ್ತು ಪೂಜಾ ಪದ್ಧತಿಯೊಂದನ್ನು ಪ್ರಾರಂಭಿಸಿ ಪ್ರತಿ ಭಾನುವಾರ ಬೌದ್ಧ ಅನುಯಾಯಿಗಳು ಅಂತಹ ವಾರದ ಪ್ರಾರ್ಥನೆಯಲ್ಲಿ ಕಡ್ಡಾಯ ವಾಗಿ ಪಾಲ್ಗೊಳ್ಳುವಂತೆ ಮಾಡುವುದು ಅವರ ಆ ಮಹತ್ವದ ಯೋಜನೆ ಮತ್ತು ಯೋಚನೆಯಾಗಿತ್ತು.

ಹಾಗಿದ್ದರೆ ಧಮ್ಮ ಬೆಳೆಸಲು ಇದಿಷ್ಟೇ ಸಾಕೆ? ವಿಹಾರಗಳು ಬೇಡವೆ? ಇದಕ್ಕೂ ತಮ್ಮ ನೀಲನಕ್ಷೆಯಲ್ಲಿ ಹೇಳುವ ಬಾಬಾಸಾಹೇಬರು ಭಾರತದ ನಾಲ್ಕು ಪ್ರಮುಖ ನಗರಗಳಲ್ಲಿ ಅಂದರೆ ಮದ್ರಾಸ್, ಬಾಂಬೆ, ನಾಗಪುರ ಮತ್ತು ದೆಹಲಿಯಲ್ಲಿ ದೊಡ್ಡ ದೊಡ್ಡ ಬೌದ್ಧ ದೇಗುಲಗಳನ್ನು ವಿಹಾರಗಳನ್ನು ನಿರ್ಮಿಸುವ ವಿಚಾರ ಪ್ರಸ್ತಾಪಿಸುತ್ತಾರೆ. ಹಾಗೆಯೇ ಮಿಶನರಿ ಮಾದರಿಯಲ್ಲಿ ಈ ನಾಲ್ಕು ನಗರಗಳಲ್ಲಿ ಅಂದರೆ ಮದ್ರಾಸ್, ಬಾಂಬೆ, ನಾಗಪುರ ಮತ್ತು ದೆಹಲಿಯಲ್ಲಿ ಪ್ರೌಢಶಾಲೆಗಳು ಮತ್ತು ಕಾಲೇಜುಗಳನ್ನು ಸ್ಥಾಪಿಸುವ ಯೋಜನೆ ಕೂಡ ಬಾಬಾಸಾಹೇಬರು ತಮ್ಮ ಆ ನಕ್ಷೆಯಲ್ಲಿ ಹೇಳುತ್ತಾರೆ.

ಮುಂದುವರಿದು ಎಲ್ಲಾ ಧರ್ಮದವರಲ್ಲಿ ಬೌದ್ಧ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡಿಸಲು ಬೌದ್ಧ ಧರ್ಮದ ಬಗ್ಗೆ ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸುವ, ಗೆದ್ದವರಿಗೆ ಬಹುಮಾನ ನೀಡುವ ಮಾತನ್ನೂ ಬಾಬಾಸಾಹೇಬರು ಹೇಳುತ್ತಾರೆ. ಈ ನಿಟ್ಟಿನಲ್ಲಿ ಭಾರತದಲ್ಲಿ ಬೌದ್ಧ ಧರ್ಮ ಪುನರುತ್ಥಾನಕ್ಕೆ ತಾನು ಹೀಗೆ ಪ್ರಾಥಮಿಕ ತಯಾರಿ ಮಾಡಿಕೊಂಡಿದ್ದೇನೆ ಮತ್ತು ಮುಂದೆಂದೂ ಅದು ಭಾರತದಿಂದ ಕಾಣೆಯಾಗದಂತೆ ನಾನು ಎಚ್ಚರಿಕೆ ವಹಿಸುವುದಾಗಿ ಬರ್ಮಾದ ಆ ಅಂತರರಾಷ್ಟ್ರೀಯ ಸಭೆಗೆ ಅವರು ತಿಳಿಸುತ್ತಾರೆ.

ನಿಜ ಹೇಳಬೇಕೆಂದರೆ ಅಂಬೇಡ್ಕರರು ಹಾಕಿಕೊಂಡಿದ್ದ ಈ ನೀಲ ನಕ್ಷೆ ಕಾರ್ಯ ರೂಪಕ್ಕೆ ಬಂದಿದ್ದರೆ ಖಂಡಿತ ಭಾರತದಲ್ಲಿ ಬೌದ್ಧ ಧರ್ಮ ಅಕ್ಷರಶಃ ಪುನರುಜ್ಜೀವನ ಗೊಂಡಿರುತ್ತಿತ್ತು. ಆದರೆ ದುರಂತ ಎಂದರೆ ಅವರು ಆ ನೀಲನಕ್ಷೆ ತಯಾರಿಸಿದ ಎರಡೇ ವರ್ಷದಲ್ಲಿ ಪರಿನಿಬ್ಬಾಣ ಹೊಂದಿದ್ದರು. ಈ ನಡುವೆ ಮತ್ತೂ ದುರಂತವೆಂದರೆ ಬಾಬಾಸಾಹೇಬರ ಅನುಯಾಯಿಗಳಿಗೆ ಅದನ್ನು ಅಂದರೆ ಬೌದ್ಧ ಧರ್ಮವನ್ನು ಪುನರುಜ್ಜೀವನ ಗೊಳಿಸುವ ಮಾತಿರಲಿ ಅಂಬೇಡ್ಕರರು ಹಾಕಿ ಕೊಂಡಿದ್ದ ಆ ನೀಲನಕ್ಷೆಯತ್ತ ಕಣ್ಣೆತ್ತಿ ನೋಡುವ ತಾಳ್ಮೆಯೂ ಇಲ್ಲದಿರುವುದು. ಈ ನಿಟ್ಟಿನಲ್ಲಿ ತಡವಾಗಿದ್ದರೂ ಈಗಲಾದರೂ ಬೌದ್ಧ ಧರ್ಮದ ಪುನರುತ್ಥಾನಕ್ಕೆ ಬಾಬಾಸಾಹೇಬರು ಹಾಕಿದ್ದ ನೀಲನಕ್ಷೆಯತ್ತ ಅವರ ಅನುಯಾಯಿಗಳು ನೋಡಲಿ. ಬೌದ್ಧ ಧರ್ಮದ ಪುನರುತ್ಥಾನಕ್ಕೆ, ಪುನರುಜ್ಜೀವನಕ್ಕೆ ಪಣ ತೊಡಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.

4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

Published

on

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.

“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.

ಶ್ರೀ ಎ. ಜಯಪ್ಪ ಅವರು ಎನ್‌.ಎಸ್‌.ಎಸ್‌. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.

ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್‌. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

Published

on

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.

ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್‌ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.

ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending