ಬಹಿರಂಗ
ಭಾರತದ ಇತಿಹಾಸದ ಅಂಬೇಡ್ಕರ್ವಾದಿ ವಿಶ್ಲೇಷಣೆ
- ರಘೋತ್ತಮ ಹೊ.ಬ
ಭಾರತದ ಇತಿಹಾಸ ಅದು ಹೇಗಿದೆ ಎಂದು ಯಾರಾದರೂ ತಾವು ಕಲಿತದ್ದನ್ನು ನೆನಪಿಸಿಕೊಂಡರೆ ಅಥವಾ ಕಲಿಯಲು ಹೊರಟರೆ ಅವರಿಗೆ ತಿಳಿದುಬರುವುದು ಬರೀ ಮುಸ್ಲಿಂ ಆಕ್ರಮಣಕಾರರ ಧಾಳಿಯ ಅನುಕ್ರಮಣಿಕೆ ಎಂಬುದು. ನಿಜ, ಅಲ್ಲಿ ತದನಂತರ ಬ್ರಿಟಿಷರು, ಫ್ರೆಂಚರು, ಡಚ್ಚರು, ಪೋರ್ಚುಗೀಸರು, ಹೀಗೆ ವಿದೇಶಿ ಧಾಳಿಕೋರರ ದಾಖಲೀಕರಣವೂ ಇದೆ. ಆದರೆ ಅತಿ ಮಹತ್ವದ್ದಾಗಿ ಅಂದರೆ ಎರಡು ಅಥವಾ ಎರಡೂವರೆ ಸಾವಿರ ವರ್ಷಗಳ ಇತಿಹಾಸದಲ್ಲಿ ಅತಿ ಹೆಚ್ಚು ವ್ಯಾಪಕವಾಗಿ ಕಾಣಬರುವುದೆಂದರೆ ಅಥವಾ ಕಾಣಿಸಲ್ಪಡುವುದೆಂದರೆ ಅದು ಮುಸ್ಲಿಂ ಆಕ್ರಮಣ ಮತ್ತು ಧಾಳಿಗಳು. ಯಾಕೆ ಹೀಗೆ? ಈ ನಿಟ್ಟಿನಲ್ಲಿ ಹೇಳುವುದಾದರೆ ಭಾರತದ ಇತಿಹಾಸದ ಈ ಬಗೆಯ ದಾಖಲೀಕರಣವೇ ತಪ್ಪು ಎಂಬುದು.
ಹೇಗೆ? ಅಂಬೇಡ್ಕರ್ರವರ ಸಂಶೋಧನಾಭರಿತ ಬರಹಗಳ (ಇಂಗ್ಲಿಷ್ ಸಂ.3, ಪು.275) ಆಧಾರದ ಮೇಲೆ ಹೇಳುವುದಾದರೆ ಭಾರತದ ಇತಿಹಾಸ ಬರೆದಿರುವ ಅಥವಾ ದಾಖಲಿಸಿರುವ ಕಾರ್ಯವೇ ತಪ್ಪು ಮಾರ್ಗದಲ್ಲಿ ನಡೆದಿದೆ ಅಥವಾ ಕೆಲವು ತಪ್ಪು ಕಲ್ಪನೆಗಳ ಹಾದಿಯಲ್ಲಿ ಅದು ಬರೆಯಲ್ಪಟ್ಟಿದೆ ಎಂಬುದು. ಹಾಗಿದ್ದರೆ ಭಾರತದ ಇತಿಹಾಸದ ದಾಖಲೀಕರಣ ಮಾಡಿಕೊಂಡ ಅಥವಾ ದಾಖಲಿಸಿದವರು ಮಾಡಿದ ಮೊದಲ ತಪ್ಪು ಕಲ್ಪನೆ ಏನು? ಉತ್ತರ: ಮೊದಲನೆಯದು, ಇಡೀ ಇತಿಹಾಸದ ಉದ್ದಕ್ಕೂ ಭಾರತದ ಸಂಸ್ಕೃತಿ ಒಂದೇ ತೆರನಾಗಿತ್ತು ಎಂದುಕೊಂಡದ್ದು. ಎರಡನೆಯದು, ಭಾರತದ ರಾಜಕಾರಣದಲ್ಲಿ ನಡೆದ ಸಂಘರ್ಷಗಳೆಲ್ಲವೂ ಕೇವಲ ರಾಜಕೀಯ ಮತ್ತು ವಂಶಪರಂಪರೆಯ ಅಂಶಗಳನ್ನಷ್ಟೆ ಹೊಂದಿದ್ದವು, ಮತ್ತಾವುದೇ ಸಾಮಾಜಿಕ ಮತ್ತು ಆಧ್ಯಾತ್ಮಿಕ ಅಂಶಗಳನ್ನು ಅದು ಒಳಗೊಂಡಿರಲಿಲ್ಲ ಎಂದುಕೊಂಡದ್ದು.
ಸತ್ಯ, ಉದಾಹರಣೆಗೆ ಭಾರತದ ಇತಿಹಾಸ ಭಾರತವನ್ನು ಉದ್ದಕ್ಕೂ ಒಂದೇ ಸಂಸ್ಕೃತಿ ಹೊಂದಿತ್ತು ಎಂದು ಕಲ್ಪಿಸಿಕೊಂಡಿತ್ತು ಎಂಬ ಪರಿಕಲ್ಪನೆಗೆ ಪೂರಕವಾಗಿ ಹೇಳುವುದಾದರೆ ಭಾರತದ ಇತಿಹಾಸ ಬ್ರಾಹ್ಮಣಧರ್ಮ, ಬೌದ್ಧಧರ್ಮ ಮತ್ತು ಜೈನಧರ್ಮಗಳನ್ನು ತನ್ನ ಇತಿಹಾಸದ ವಿವಿಧ ಹಂತಗಳು ಎಂದುಕೊಳ್ಳಲಿಲ್ಲ! ಹಾಗೆಯೇ ಅವುಗಳ ನಡುವೆ ಯಾವುದೇ ಮೂಲಭೂತ ಸಂಘರ್ಷಗಳು ತಿಕ್ಕಾಟಗಳು ನಡೆದೇ ಇಲ್ಲ ಎಂದುಕೊಂಡದ್ದು! ಇತಿಹಾಸದ ದಾಖಲೀಕರಣದ ಇಂತಹ ತಪ್ಪು ನಡೆಯಿಂದಾಗಿ ಭಾರತದ ಇತಿಹಾಸ ಒಂದು ಯಾಂತ್ರಿಕ ಪ್ರಕ್ರಿಯೆಯಾಗಿ ದಾಖಲಾಗಿದೆ. ಹೇಗೆಂದರೆ ಒಂದು ವಂಶದ ನಂತರ ಮತ್ತೊಂದು ವಂಶ…, ಒಬ್ಬ ಆಡಳಿತಗಾರನ ನಂತರ ಮತ್ತೊಬ್ಬ ಆಡಳಿತಗಾರ… ಹೀಗೆ.
ಹಾಗಿದ್ದರೆ ಇತಿಹಾಸ ರಚಿಸಲ್ಪಟ್ಟ ಈ ಮಾದರಿಗೆ ಸೂಚಿಸಬಹುದಾದ ಅಥವಾ ಅಳವಡಿಸಬಹುದಾದ ಪರಿಹಾರ ಸಾಮಗ್ರಿಗಳು? ಮೊದಲನೆಯದು, ಭಾರತದಲ್ಲಿ ಸಾಮಾನ್ಯ ಸಂಸ್ಕೃತಿ ಎಂಬುದು ಇರಲೇ ಇಲ್ಲ ಎಂಬುದನ್ನು ಅರಿಯುವುದು. ಎರಡನೆಯದು, ಮುಸ್ಲಿಮರ ಧಾಳಿಗಿಂತಲಿನ ಮೊದಲಿನ ಇತಿಹಾಸ ಬೌದ್ಧಧರ್ಮ ಮತ್ತು ಬ್ರಾಹ್ಮಣಧರ್ಮಗಳ ನಡುವಿನ ಮಾರಕ ಕಾಳಗ ಎಂಬುದನ್ನು ಅರಿಯುವುದು, ಗುರುತಿಸುವುದು.
ಸಾಮಾನ್ಯ ಸಂಸ್ಕೃತಿ ಇಲ್ಲ ಎಂಬುದರ ಬಗ್ಗೆ ಹೇಳುವುದಾದರೆ, ಇತಿಹಾಸದಲ್ಲಿ ಭಾರತದಲ್ಲಿ ಮೂರು ಬಗೆಯ ಭಾರತಗಳಿದ್ದವು. 1.ಬ್ರಾಹ್ಮಣ ಭಾರತ 2.ಬೌದ್ಧ ಭಾರತ 3.ಹಿಂದೂ ಭಾರತ. ಈ ಮೂರೂ ಪ್ರತಿಯೊಂದೂ ತನ್ನದೇ ಆದ ಪ್ರತ್ಯೇಕ ಸಂಸ್ಕೃತಿಗಳನ್ನು ಹೊಂದಿದ್ದವು. ಹಾಗೆಯೇ ಮುಸ್ಲಿಂ ಆಕ್ರಮಣಕ್ಕಿಂತ ಮೊದಲು ಬೌದ್ಧಧರ್ಮ ಮತ್ತು ಬ್ರಾಹ್ಮಣಧರ್ಮಗಳ ನಡುವೆ ಮಾರಕ ಕಾಳಗ ನಡೆದಿತ್ತು ಎಂಬುದರ ಬಗ್ಗೆ ಹೇಳುವುದಾದರೆ, ಭಾರತದ ಇತಿಹಾಸದ ಈ ಪ್ರಮುಖ ಅಂಶವನ್ನು ಕಡೆಗಣಿಸಿದರೆ ಅಥವಾ ಇತಿಹಾಸ ಅಧ್ಯಯನಕಾರರು ಗುರುತಿಸುವಲ್ಲಿ ವಿಫಲರಾದರೆ ಭಾರತದ ನೈಜ ಇತಿಹಾಸ ಆ ಮೂಲಕ ಇತಿಹಾಸ ಎಂಬ ಆ ಪದದ ಅರ್ಥ ಮತ್ತು ಉದ್ದೇಶ ಈಡೇರುವುದು ಸಾಧ್ಯವೇ ಇಲ್ಲ ಎಂಬುದು.
ಆದ್ದರಿಂದ ಈ ಅಂಶಗಳ ಬಗ್ಗೆ , ಅದರಲ್ಲೂ ಭಾರತದ ಇತಿಹಾಸ ಬೌದ್ಧಧರ್ಮ ಮತ್ತು ಬ್ರಾಹ್ಮಣಧರ್ಮಗಳ ನಡುವಿನ ಸಂಘರ್ಷ ಎಂಬ ಬಗ್ಗೆ ನಾವು ತಿಳಿದುಕೊಳ್ಳುವುದಾದರೆ ಈ ಅಂಶ ಹೆಕ್ಕುವ ಅಂಬೇಡ್ಕರ್ರವರ ವಿಚಾರಗಳನ್ನು ದಾಖಲಿಸುವುದಾದರೆ ಅಂಬೇಡ್ಕರ್ರವರು ಹೇಳುವುದು “ಭಾರತದ ಇತಿಹಾಸದಲ್ಲಿ ಭಾರತದ ಮೇಲೆ ನಡೆದಿರುವ ಮುಸ್ಲೀಮರ ಧಾಳಿಯ ಅಂಶಗಳ ಬಗ್ಗೆ ಸಿಕ್ಕಾಪಟ್ಟೆ ಒತ್ತು ನೀಡಲಾಗಿದೆ. ಹಿಮಪಾತ ಉಂಟಾಗುವಾಗ ಒಂದು ಅಲೆಯಾದ ಮೇಲೆ ಮತ್ತೊಂದು ಅಲೆ ಬರುವಂತೆ ಒಟ್ಟಾರೆ ಒಂದು ಬೃಹತ್ ಹಿಮಪಾತದ ರೀತಿ ಮುಸ್ಲಿಂ ಧಾಳಿಕೋರರು ಭಾರತಕ್ಕೆ ಬಂದರು, ಈ ಜನರನ್ನು ಸುತ್ತುವರಿದರು ಮತ್ತು ಇಲ್ಲಿಯ ರಾಜರನ್ನು ಕೆಳಗಿಳಿಸಿದರು… ಹೀಗೆ ರೀಲುಗಟ್ಟಲೆ ಬರೆಯಲಾಗಿದೆ. ಈ ನಿಟ್ಟಿನಲ್ಲಿ ಇಂತಹ ಸಂಕುಚಿತ ದೃಷ್ಟಿಕೋನದಲ್ಲಿ ನೋಡಿದರು ಕೂಡ ಈ ಅಧ್ಯಯನಯೋಗ್ಯ ಇಂತಹ ಧಾಳಿಗಳಲ್ಲಿ ಕೇವಲ ಮುಸ್ಲಿಂ ಧಾಳಿಗಳಷ್ಟೇ ಅಲ್ಲ, ಇತರ ಧಾಳಿಗಳೂ ಕೂಡ ಮಹತ್ವ ಪಡೆಯುತ್ತವೆ ಎಂಬುದು. ಹಾಗೆಯೇ ಇತರೆ ಆಕ್ರಮಣಗಳು, ಧಾಳಿಗಳು ಅಂತಹ ಪ್ರಮುಖವಾದುವಲ್ಲ ಎನಿಸಿದರೂ ಕೂಡ ಅವು ಮುಸ್ಲಿಂ ಧಾಳಿಗಳಷ್ಟೆ ಮಹತ್ವ ಪಡೆಯುತ್ತವೆ. ಈ ಹಿನ್ನೆಲೆಯಲ್ಲಿ ಹೇಳುವುದಾದರೆ ಹಿಂದೂ ಭಾರತವನ್ನು ಮುಸ್ಲಿಂ ಧಾಳಿಕೋರರು ಆಕ್ರಮಿಸಿದರೆ ಬೌದ್ಧ ಭಾರತವನ್ನು ಬ್ರಾಹ್ಮಣ ಆಕ್ರಮಣಕಾರರು ಆಕ್ರಮಿಸಿದರು”. (ಅಂಬೇಡ್ಕರ್ ಬರಹಗಳು, ಇಂಗ್ಲಿಷ್ ಸಂ.3, ಪು.273).
ಅರೆ, ಇದೇನಿದು? ಬ್ರಾಹ್ಮಣ ಆಕ್ರಮಣಕಾರರು? ಎಂದು ಯಾರಿಗಾದರೂ ಅನಿಸದಿರದು. ಆದರೆ ಭಾರತದ ಇತಿಹಾಸ ಇದನ್ನು ಗುರುತಿಸುವಲ್ಲಿ ವಿಫಲವಾಗಿರುವುದು ಅಥವಾ ಗುರುತಿಸದೆ ಮರೆಮಾಚಿರುವುದು ಏಕೆ ಎಂಬ ಪ್ರಶ್ನೆ ಎಂಥವರಿಗಾದರೂ ಕಾಡದಿರದು. ಹಾಗೆಯೇ ಅದಕ್ಕೆ ಉತ್ತರವೂ ಕೂಡ ಅಷ್ಟೆ ಸುಲಭವಾಗಿ ಸಿಗುತ್ತದೆ. ಇರಲಿ, ಅದನ್ನು ಮುಂದೆ ಎಂದಾದರೂ ಚರ್ಚಿಸೋಣ. ಈ ದಿಸೆಯಲ್ಲಿ ಮತ್ತೆ ಈ ಲೇಖನದ ಮುಖ್ಯ ಉದ್ದೇಶಕ್ಕೆ ಬರುವುದಾದರೆ, ಹಾಗಿದ್ದರೆ ಮುಸ್ಲಿಂ ಆಕ್ರಮಣ ಮತ್ತು ಬ್ರಾಹ್ಮಣರ ಆಕ್ರಮಣಗಳ ನಡುವೆ ಏನಾದರೂ ಸಾಮ್ಯತೆ ಇತ್ತಾ? ಅಂಬೇಡ್ಕರರ ಪ್ರಕಾರ ಎರಡು ಆಕ್ರಮಣಗಳಲ್ಲೂ ಸಾಕಷ್ಟು ಸಾಮ್ಯತೆ ಇತ್ತು. ಉದಾಹರಣೆಗೆ ತಮ್ಮ ವಂಶಪಾರಂಪರ್ಯ ಆಳ್ವಿಕೆಯ ಉಳಿಯುವಿಕೆಗಾಗಿ ಮುಸ್ಲಿಂ ಆಕ್ರಮಣಕಾರರು ಪರಸ್ಪರ ಕಾದಾಡಿದರೆ ಉದಾಹರಣೆಗೆ ಹೇಳುವುದಾದರೆ ಅರಬ್ಬರು, ಟರ್ಕರು, ಮಂಗೋಲಿಯನ್ನರು, ಆಪ್ಘನ್ನರು… ಹೀಗೆ ಪರಸ್ಪರ ಕಾದಾಡಿದರೆ ಬ್ರಾಹ್ಮಣ ಆಕ್ರಮಣಕಾರರು ಕೂಡ ಪರಸ್ಪರ ಕಾದಾಡಿದರು. ಆದರೆ ಒಂದು ವ್ಯತ್ಯಾಸವೆಂದರೆ ಮುಸ್ಲಿಮರು ಹಿಂದೂ ಭಾರತದ ಮೇಲೆ ಧಾಳಿ ನಡೆಸಿದರೆ ಬ್ರಾಹ್ಮಣ ಆಕ್ರಮಣಕಾರರು ಬೌದ್ಧಧರ್ಮ ಮತ್ತು ಬೌದ್ಧ ಸಾಮ್ರಾಜ್ಯವಾದ ಮೌರ್ಯ ಸಾಮ್ರಾಜ್ಯದ ಮೇಲೆ ಧಾಳಿ ನಡೆಸಿದರು. ಈ ಹಿನ್ನೆಲೆಯಲ್ಲಿ ಹಿಂದೂ ಭಾರತದ ಮೇಲೆ ಮುಸ್ಲಿಂ ಆಕ್ರಮಣಕಾರರು ನಡೆಸಿದ ಧಾಳಿ ಅಧ್ಯಯನಯೋಗ್ಯವಾದುದಾದರೆ ಬೌದ್ಧ ಭಾರತದ ಮೇಲೆ ಬ್ರಾಹ್ಮಣ ಆಕ್ರಮಣಕಾರರು ನಡೆಸಿದ ಧಾಳಿ ಕೂಡ ಅಷ್ಟೇ ಅಧ್ಯಯನಯೋಗ್ಯವಾದುದು. ಹಾಗಂತ ಬೌದ್ಧಧರ್ಮ ಆ ಮೂಲಕ ಬೌದ್ಧ ಭಾರತ ನಾಶಗೊಳಿಸಲು ಬ್ರಾಹ್ಮಣ ಆಕ್ರಮಣಕಾರರು ನಡೆಸಿದ ಧಾಳಿ ಹಿಂದೂ ಭಾರತದ ಮೇಲೆ ಮುಸ್ಲಿಂ ಆಕ್ರಮಣಕಾರರು ನಡೆಸಿದ ಧಾಳಿಗಿಂತ ಭಿನ್ನವೇನಿರಲಿಲ್ಲ. ಒಟ್ಟಾರೆ ಬೌದ್ಧ ಭಾರತದ ಮೇಲೆ ಬ್ರಾಹ್ಮಣ ಆಕ್ರಮಣಕಾರರು ನಡೆಸಿದ ಧಾಳಿ ಮುಸ್ಲಿಂ ಆಕ್ರಮಣಕಾರರಷ್ಟೇ ಭೀಕರ ಮತ್ತು ಹಿಂಸಾತ್ಮಕವಾಗಿತ್ತು.
ಮತ್ತೂ ಮುಂದುವರೆದು ಹೇಳುವುದಾದರೆ ಜನತೆಯ ಸಾಮಾಜಿಕ ಮತ್ತು ಆಧ್ಯಾತ್ಮಿಕ ಜೀವನದ ಮೇಲೆ ಬೀರಿದ ಶಾಶ್ವತ ಪರಿಣಾಮಗಳ ಆಧಾರದ ಮೇಲೆ ಹೇಳುವುದಾದರೆ ಬೌದ್ಧಭಾರತದ ಮೇಲೆ ಬ್ರಾಹ್ಮಣ ಆಕ್ರಮಣಕಾರರ ಧಾಳಿ ಅದೆಷ್ಟು ತೀವ್ರವಾಗಿತ್ತೆಂದರೆ ಇದಕ್ಕೆ ಹೋಲಿಸಿದರೆ ಹಿಂದೂ ಭಾರತದ ಮೇಲೆ ಮುಸ್ಲಿಮರ ಆಕ್ರಮಣ ಏನೇನೂ ಅಲ್ಲದ್ದಾಗಿತ್ತು. In fact ಆ ಧಾಳಿ ಭಾರತದ ಮೇಲೆ ಕೇವಲ ಅಲ್ಪಪ್ರಮಾಣದ ತೆಳು ಪರಿಣಾಮ ಬೀರಿತ್ತಷ್ಟೆ. ಏಕೆಂದರೆ ಮುಸ್ಲಿಂ ಆಕ್ರಮಣಕಾರರು ದೇವಸ್ಥಾನಗಳು, ಮಠಗಳು… ಹೀಗೆ ಹಿಂದೂ ಧರ್ಮದ ಹೊರ ರಚನೆಗಳ ಮೇಲೆ ಧಾಳಿ ನಡೆಸಿದರಷ್ಟೆ ಹೊರತು ಸಂಪೂರ್ಣ ಹಿಂದೂ ಧರ್ಮವನ್ನೇ ನಿರ್ಮೂಲನೆಗೊಳಿಸುವುದಾಗಲೀ ಅಥವಾ ಜನತೆಯ ಆಧ್ಯಾತ್ಮಿಕ ಜೀವನದ ಮೇಲೆ ಆಳವಾದ ಪರಿಣಾಮ ಬೀರಿದ್ದ ಹಿಂದೂ ಧರ್ಮದ ಶಾಸ್ತ್ರಗಳು-ಪುರಾಣಗಳು, ತತ್ವಗಳಿಗೆ ಧಕ್ಕೆಯುಂಟುಮಾಡುವ, ನಾಶಗೊಳಿಸುವ ಯಾವುದೇ ಕ್ರಿಯೆಯನ್ನು ಮುಸ್ಲಿಂ ಆಕ್ರಮಣಕಾರರು ಮಾಡಲಿಲ್ಲ. ಆದರೆ ಇದಕ್ಕೆ ವಿರುದ್ಧವಾಗಿ ಬೌದ್ಧಧರ್ಮದ ಮೇಲೆ ನಡೆದ ಬ್ರಾಹ್ಮಣ ಆಕ್ರಮಣ ಬೌದ್ಧ ತತ್ವಗಳನ್ನು ಸಂಪೂರ್ಣವಾಗಿ ಬದಲಿಸಿತು. ಹೇಗೆಂದರೆ ಬೌದ್ಧತತ್ವ ತಮ್ಮ ಆಧ್ಯಾತ್ಮಿಕ ಜೀವನದ ಶಾಶ್ವತ ಮತ್ತು ಸತ್ಯದ ತತ್ವವೆಂದು ಜನತೆ ಶತಶತಮಾನಗಳ ಕಾಲ ಒಪ್ಪಿದ್ದನ್ನು, ಜೀವನಮಾರ್ಗವಾಗಿ ಅಳವಡಿಸಿಕೊಂಡಿದ್ದನ್ನು ಬ್ರಾಹ್ಮಣ ಆಕ್ರಮಣ ಸಂಪೂರ್ಣವಾಗಿ ನಾಶಗೊಳಿಸಿತು.
ಇದನ್ನು ದಾಖಲಿಸುತ್ತಾ ಅಂಬೇಡ್ಕರ್ರವರು ಇದನ್ನು ನೀರಿನ ಕೊಳವೊಂದರಲ್ಲಿ ಆಟವಾಡುತ್ತಿರುವ ಒಂದು ಮಗುವಿಗೆ ಹೋಲಿಸುತ್ತಾ ಹೇಳುವುದು “ಮುಸ್ಲಿಂ ಆಕ್ರಮಣಕಾರರು ಮಗು ಆಟ ಆಡುತ್ತಿದ್ದ ಆ ನೀರಿನ ತೊಟ್ಟಿಯನ್ನು ತುಸು ಕದಡಿದರಷ್ಟೆ, ಅದೂ ಸ್ವಲ್ಪ ಸಮಯ. ನಂತರ ನೀರನ್ನು ಕದಡಿ ಕದಡಿ ಸುಸ್ತಾದ ಮುಸ್ಲಿಂ ಆಕ್ರಮಣಕಾರರು ಅದನ್ನು ಹಾಗೆಯೇ ಬಿಟ್ಟರು. ಪರಿಣಾಮ ಪದರ ಪದರಾಗಿ ಕಸ ತಳ ಸೇರಿಸುವ ಕೆಲಸವನ್ನಷ್ಟೆ ಅವರು ಮಾಡಿದರು. ಅಂದಹಾಗೆ ನೀರಿನಲ್ಲಿ ಆಟವಾಡುತ್ತಿದ್ದ ಮಗುವನ್ನು ಹಿಂದೂ ತತ್ವಗಳು ಎನ್ನುವುದಾದರೆ ಆ ‘ಮಗುವನ್ನು’ ಹೊರಗೆಸೆಯುವ ಕ್ರಿಯೆಯನ್ನು ಮುಸ್ಲಿಂ ಆಕ್ರಮಣಕಾರರು ಎಂದಿಗೂ ಮಾಡಲಿಲ್ಲ. ದುರಂತವೆಂದರೆ ಇದಕ್ಕೆ ವಿರುದ್ಧವಾಗಿ ಬೌದ್ಧಧರ್ಮದೊಂದಿಗಿನ ತನ್ನ ಸಂಘರ್ಷದಲ್ಲಿ ಬ್ರಾಹ್ಮಣರು ಆ ನೀರಿನ ತೊಟ್ಟಿಯನ್ನು ಸಂಪೂರ್ಣ ಗುಡಿಸಿಹಾಕಿದ್ದರು. ಹೇಗೆಂದರೆ ನೀರನ್ನು ಸಂಪೂರ್ಣ ಖಾಲಿಗೊಳಿಸಿದ ಬ್ರಾಹ್ಮಣಧರ್ಮ ಅದರೊಳಗಿದ್ದ ಬೌದ್ಧ ಮಗುವನ್ನು ಹೊರತೆಗೆದು ತನ್ನ ನೀರನ್ನು ಅಲ್ಲಿ ತುಂಬಿಸಿ ತನ್ನ ಮಗುವನ್ನು ಅಲ್ಲಿ ಇಟ್ಟಿತು. ಈ ದಿಸೆಯಲ್ಲಿ ಬೌದ್ಧಧರ್ಮದಿಂದ ಹರಿದುಬಂದಿದ್ದ ಪರಿಶುದ್ಧವಾದ ಸುಗಂಧಭರಿತವಾದ ಶ್ರೇಷ್ಠ ನೀರಿಗೆ ಹೋಲಿಸಿದಾಗ ತನ್ನ ನೀರು ಅದೆಷ್ಟು ಕೊಳಕಾಗಿದೆ, ಅದೆಷ್ಟು ಗಲೀಜಾಗಿದೆ ಎಂಬುದು ತಿಳಿದಿದ್ದರೂ ಬ್ರಾಹ್ಮಣಧರ್ಮ ಅದರ ಬಗ್ಗೆ ಕೊಂಚವೂ ತಲೆಕೆಡಸಿಕೊಳ್ಳಲಿಲ್ಲ”. (ಅದೇ ಕೃತಿ, ಪು.274)
ಹಾಗೆಯೇ ಬೌದ್ಧ ಮಗುವಿಗೆ ಹೋಲಿಸಿಕೊಂಡರೆ ತನ್ನ ಮಗು ಅದೆಷ್ಟು ಕೊಳಕು, ಭಯಂಕರ ಎಂಬ ಬಗ್ಗೆಯೂ ಬ್ರಾಹ್ಮಣಧರ್ಮ ತಲೆಕೆಡಿಸಿಕೊಳ್ಳಲಿಲ್ಲ. ಬದಲಿಗೆ ನೀರಿನ ಕೊಳದಲ್ಲಿದ್ದ ಆ ನೀರನ್ನು (ಬೌದ್ಧತತ್ವಗಳು) ಸಂಪೂರ್ಣ ಖಾಲಿಗೊಳಿಸಿ ಅದರಲ್ಲಿದ್ದ ಮಗುವನ್ನು(ಬೌದ್ಧಧರ್ಮ) ಹೊರತೆಗೆದು ಅದರಲ್ಲಿ ತನ್ನ ನೀರನ್ನು(ಬ್ರಾಹ್ಮಣ ತತ್ವಗಳು) ತುಂಬಿ ತನ್ನ ಮಗುವನ್ನು(ಬ್ರಾಹ್ಮಣ ಧರ್ಮವನ್ನು) ಬ್ರಾಹ್ಮಣಧರ್ಮ ಇಟ್ಟಿತು. ಈ ದಿಸೆಯಲ್ಲಿ ಹೇಳುವುದಾದರೆ ಬ್ರಾಹ್ಮಣಧರ್ಮ ತನ್ನ ಆಕ್ರಮಣದಿಂದ ತಾನು ಗಳಿಸಿದ ರಾಜಕೀಯ ಅಧಿಕಾರವನ್ನು ಬೌದ್ಧಧರ್ಮವನ್ನು ನಾಶಗೊಳಿಸಲು ಬಳಸಿಕೊಂಡಿತು ಮತ್ತು ಹಾಗೆ ನಾಶಗೊಳಿಸಿತೂ ಕೂಡ. ಇದಕ್ಕೆ ವ್ಯತಿರಿಕ್ತವಾಗಿ ಇಸ್ಲಾಂ ಧರ್ಮ ಹಿಂದೂ ಧರ್ಮವನ್ನು ಅತಿಕ್ರಮಿಸಲಿಲ್ಲ, ಇಸ್ಲಾಂ ತನ್ನ ಯೋಜನೆಯ ಉದ್ದೇಶವನ್ನು ಪರಿಪೂರ್ಣವಾಗಿ ಕಾರ್ಯರೂಪಕ್ಕೆ ತರಲಿಲ್ಲ. ಆದರೆ ಬ್ರಾಹ್ಮಣಧರ್ಮ ಕಾರ್ಯರೂಪಕ್ಕೆ ತಂದಿತು. ಒಂದು ಧರ್ಮವಾಗಿ ಅದು ಬೌದ್ಧಧರ್ಮವನ್ನು ಹೊಡೆದೋಡಿಸಿ ಅದರ ಜಾಗದಲ್ಲಿ ತನ್ನ ಧರ್ಮವನ್ನು ಪ್ರತಿಷ್ಠಾಪಿಸಿತು.
ಇಂತಹ ಪ್ರತಿಷ್ಠಾಪನೆಯ ಕೆಲಸ ಅದು ಒಂದು ತಿಂಗಳು, ಎರಡು ತಿಂಗಳು ಅಥವಾ ಒಂದು ವರ್ಷ, ಎರಡು ವರ್ಷಗಳೂ ನಡೆದಿದ್ದಲ್ಲ. ಬದಲಿಗೆ ಒಂದು ಸಾವಿರ ವರ್ಷಗಳವರೆಗೆ ಬೌದ್ಧಧರ್ಮ ಮತ್ತು ಬ್ರಾಹ್ಮಣಧರ್ಮಗಳ ನಡುವೆ ಇಂತಹ ಸಂಘರ್ಷ ನಡೆದಿದೆ. ಕ್ರಿ.ಪೂ.185ರಲ್ಲಿ ಪುಷ್ಯಮಿತ್ರ ಶುಂಗನಿಂದ ಆರಂಭವಾದ ಇಂತಹ ಸಂಘರ್ಷ ದೇಶದ ಉದ್ದಗಲಕ್ಕೂ [ಯಾಕೆಂದರೆ ಅಶೋಕನ ಕಾಲದಲ್ಲಿ(ಕ್ರಿ.ಪೂ.268-ಕ್ರಿ.ಪೂ.232) ಬೌದ್ಧಧರ್ಮ ಇಡೀ ಭಾರತವನ್ನು ಆಕ್ರಮಿಸಿತ್ತು] ನಡೆದಿದೆ. ದುರಂತವೆಂದರೆ ಬೌದ್ಧಧರ್ಮ ಮತ್ತು ಬ್ರಾಹ್ಮಣಧರ್ಮಗಳ ನಡುವೆ ನಡೆದಿರುವ ಇಂತಹ ಸಂಘರ್ಷ ಅಥವಾ ಮಾರಕ ಕಾಳಗವನ್ನು ಭಾರತದ ಇತಿಹಾಸ ಗಮನಿಸಲೇಹೋಗಿಲ್ಲ, ದಾಖಲಿಸಲೇಹೋಗಿಲ್ಲ. ಈ ದಿಸೆಯಲ್ಲಿ ಇತಿಹಾಸದ ಈ ಮಗ್ಗುಲನ್ನು ಅಂದರೆ ಬ್ರಾಹ್ಮಣಧರ್ಮ ಮತ್ತು ಬೌದ್ಧಧರ್ಮಗಳ ನಡುವಿನ ನಿರಂತರ ಕಾಳಗವನ್ನು ಅಧ್ಯಯನ ಮಾಡದೇ ಅಥವಾ ಆ ದೃಷ್ಟಿಕೋನದಲ್ಲಿ ಭಾರತದ ಇತಿಹಾಸವನ್ನು ನೋಡದೆ ಹೋದರೆ ಭಾರತದ ಈಗಿನ ಸಾಮಾಜಿಕ ಸ್ಥಿತಿಗತಿಯನ್ನು, ಜಾತಿ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳಲು ಖಂಡಿತ ಸಾಧ್ಯವಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
ದಾವಣಗೆರೆ: ಎಸ್ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಎಸ್ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ4 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ


