Connect with us

ಅಂತರಂಗ

ಯಜ್ಞದ ಬಗ್ಗೆ ಡಾ.ಬಿ.ಆರ್.ಅಂಬೇಡ್ಕರ್ ಹೇಳಿದ್ದು..!

Published

on

  • ಡಾ.ಬಿ.ಆರ್.ಅಂಬೇಡ್ಕರ್

ರ್ಯಧರ್ಮವು ಯಜದಿಂದ ಕೂಡಿದ ಧರ್ಮವಾಗಿತ್ತು, ಯಜ್ಞವು ದೇವತ್ವವನ್ನು ಹೊಂದುವ ಅಂದರೆ ದೇವಗಣದಲ್ಲಿ ಪ್ರವೇಶ ಪಡೆಯುವ ಒಂದು ಸಾಧನವಾಗಿತ್ತು.

ಅಷ್ಟೇ ಅಲ್ಲ, ಅದು ದೇವತೆಗಳನ್ನು ನಿಯಂತ್ರಿಸುವ ಸಾಧನವೂ ಆಗಿತ್ತು. ಸಂಪ್ರದಾಯದಂತೆ ಯಜ್ಞಗಳ ಸಂಖ್ಯೆ ಇಪ್ಪತ್ತೊಂದು, ಅವುಗಳನ್ನು ಏಳರ ಮೂರು ಗುಂಪುಗಳನ್ನಾಗಿ ವಿಭಾಗಿಸಲಾಗಿತ್ತು. ಮೊದಲನೆಯ ಗುಂಪಿನಲ್ಲಿ ಬೆಣ್ಣೆ, ಹಾಲು, ಧಾನ್ಯ ಮೊದಲಾದವುಗಳ ಯಜ್ಞಗಳು ಸೇರಿದ್ದವು. ಎರಡನೆಯ ಗುಂಪಿನಲ್ಲಿ ಸೋಮ ಯಾಗಗಳು ಸೇರಿದ್ದವು.

ಮತ್ತು ಪಶು ಯಾಗಗಳು ಮೂರನೆಯ ಗುಂಪಿಗೆ ಸೇರಿದ್ದವು. ಯಜ್ಞಗಳು ಅಲ್ಪಕಾಲವಿರಬಹುದು ಅಥವಾ ಒಂದು ವರ್ಷ ಅಥವಾ ಅದಕ್ಕೂ ಹೆಚ್ಚು ದೀರ್ಘ ಅವಧಿಯ ಯಜ್ಞವಾಗಬಹುದು. ಈ ಎರಡನೆ ಜಾತಿಯ ಯಜ್ಞವನ್ನು ‘ಸತ್ರ’ವೆಂದು ಕರೆಯುತ್ತಿದ್ದರು. ಯಜ್ಞದ ಪರವಾಗಿ ಹೀಗೆ ವಾದಮಾಡಲಾಗುತ್ತದೆ: ಯಜ್ಞ ಮಾಡುವವನು ಶಾಶ್ವತ ಪುಣ್ಯವನ್ನು ಪಡೆಯುತ್ತಾನೆ.

ಕೇವಲ ಯಜ್ಞ ಮಾಡುವ ಯಜಮಾನನ ಆತ್ಮವೊಂದೇ ಅಲ್ಲ, ಅವನ ಪಿತೃಗಳೂ ಸಹ ಯಜ್ಞದಿಂದ ಲಾಭ ಪಡೆಯುತ್ತಾರೆ. ಅವನು ತಾನು ಅರ್ಪಿಸುವ ಆಹುತಿಗಳಿಂದ ಪಿತೃಗಳಿಗೆ ಸಂತೋಷವನ್ನು ಕೊಡುತ್ತಾನೆ. ಅಷ್ಟೇ ಅಲ್ಲ, ಅವರ ಸ್ಥಾನವನ್ನು ಹೆಚ್ಚಿಸುತ್ತಾನೆ ಮತ್ತು ಉನ್ನತ ಲೋಕದ ವಾಸಿಯಾಗಲು (ಅವರನ್ನು) ಮೇಲೆ ಕಳುಹಿಸುತ್ತಾನೆ.

ಯಜ್ಜವು ಕೇವಲ: ಪಾರಲೌಕಿಕ ಸುಖವನ್ನು ಸಂಪಾದಿಸುವ ಸಾಧನವೊಂದೇ ಆಗಿರಲಿಲ್ಲ. ಮಹಾಯಜ್ಞಗಳಲ್ಲಿ ಹಲವು ಈ ಜಗತ್ತಿನ ಒಳ್ಳೆಯ ವಸ್ತುಗಳನ್ನು ಸಂಪಾದಿಸುವುದಕ್ಕೆಂದೇ ಇದ್ದುವು. ಲಾಭಾಕಾಂಕ್ಷೆಯಿಲ್ಲದೇ ನಿರುದ್ದಿಶ್ಯವಾಗಿ ಯಜ್ಞ ಮಾಡುವುದು ಆರ್ಯರಿಗೇ ಅರಿಯದ ವಿಷಯವಾಗಿತ್ತು. ವೈದಿಕ ಕಾಲದ ಭಾರತದಲ್ಲಿ ಕೃತಜ್ಞತಾರ್ಪಣೆಯೂ ಇರಲಿಲ್ಲ.

ಸಾಮಾನ್ಯವಾಗಿ ಯಾವ ದೇವತೆಯನ್ನು ಕುರಿತು ಯಜ್ಞ ಮಾಡಲಾಗುತ್ತಿತ್ತೋ, ಆ ದೇವತೆಯು (ತನಗೆ ಅರ್ಪಿಸಿದ ಆಹುತಿಗಳಿಗೆ ಪ್ರತಿಯಾಗಿ ಕೊಡುವ ಉಡುಗೊರೆಯೇ ಯಜ್ಞದಿಂದಾಗುವ ಲಾಭ, ಯಜ್ಞವು ಈ ಮಾತುಗಳಿಂದ ಪ್ರಾರಂಭವಾಗುತ್ತಿತ್ತು. ಅವನು ದೇವನಿಗೆ ಈ ಮಾತುಗಳಿಂದ ಯಜ್ಞವನ್ನು ಅರ್ಪಿಸುತ್ತಾನೆ. “ನೀನು ನನಗೆ ಕೊಡು, ನಾನು ನಿನಗೆ ಕೊಡುವೆನು, ನೀನು ನನಗೆ ಅನುಗ್ರಹಿಸು, ನಾನು ನಿನಗೆ ಅರ್ಪಿಸುವನು.”

ಯಜ್ಞ ಸಮಾರಂಭವು ಭಯಭಕ್ತಿಯನ್ನು ಹುಟ್ಟಿಸುವಂತೆ ಇರುತ್ತಿತ್ತು, ಆಡುವ ಪ್ರತಿಯೊಂದು ಶಬ್ದವೂ ಪರಿಣಾಮಕಾರಿಯಾಗಿರುತ್ತಿತ್ತು ಮತ್ತು ಶಬ್ದ ಉಚ್ಚಾರ ಅಥವಾ ಸ್ವರವೂ ಸಹ ಮಹತ್ವಪೂರ್ಣವಾಗಿರುತ್ತಿತ್ತು. ಅಲ್ಲದೆ ಸಮಾರಂಭದ ಬಹುಭಾಗ ಕೈಚಳಕದಿಂದ ಕೂಡಿದ್ದಿತು ಮತ್ತು ತೋರುವಷ್ಟು ಮಹತ್ವವುಳ್ಳದ್ದಾಗಿಲ್ಲವೆಂದು ಪುರೋಹಿತರೆಲ್ಲರೂ ತಿಳಿದಿದ್ದರು ಎಂಬ ಸೂಚನೆಗಳು (ಅಲ್ಲಲ್ಲಿ) ಕಂಡುಬರುತ್ತವೆ.

ಯಜ್ಞವೆಂದರೆ ಪುರೋಹಿತರಿಗೆ ದಕ್ಷಿಣೆಯೆಂದರ್ಥ, ದಕ್ಷಿಣೆಯ ಬಗೆಗೆ ನಿಯಮಗಳು ಸ್ಪಷ್ಟವಾಗಿದ್ದವು. ಮತ್ತು ಅವುಗಳನ್ನು ಪ್ರತಿಪಾದಿಸುವವರಿಗೆ ಯಾವುದೇ ಸಂಕೋಚವಿರಲಿಲ್ಲ, ಪುರೋಹಿತರು ದಕ್ಷಿಣೆಗಾಗಿಯೇ ಯಜ್ಞವನ್ನು ಮಾಡುತ್ತಿದ್ದರು. ಅಲ್ಲಿ ಬೆಲೆಯುಳ್ಳ ಬಟ್ಟೆಗಳು, ಗೋವುಗಳು, ಕುದುರೆ ಅಥವಾ ಬಂಗಾರ ಹೀಗೆ ಯಾವುದನ್ನು ಯಾವಾಗ ಕೊಡಬೇಕೆಂಬುದನ್ನೂ ಲಕ್ಷಪೂರ್ವಕವಾಗಿ ಹೇಳಿದ್ದಾರೆ.

ಪುರೋಹಿತರು ಬಹುಸಂಕೀರ್ಣವಾದ ವಿಧಾನಗಳನ್ನು ಏರ್ಪಾಡು ಮಾಡಿಕೊಂಡಿದ್ದರು ಮತ್ತು ಪ್ರತಿಯೊಂದು ಸಂದರ್ಭದಲ್ಲಿಯೂ ದಕ್ಷಿಣೆಯನ್ನು ಕೇಳುತ್ತಿದ್ದರು. ಯಾವನ ಲಾಭಕ್ಕಾಗಿ ಯಜ್ಞವನ್ನು ಮಾಡುತ್ತಾನೋ ಅವನೊಬ್ಬನೇ ಯಜ್ಞದ ಎಲ್ಲ ಖರ್ಚನ್ನೂ ವಹಿಸಬೇಕೆಂದ ಮೇಲೆ ಖರ್ಚು ಅತಿಯಾಗುವುದು ಸಹಜ. ಒಂದು ಕಡೆ, ಯಜ್ಞದ ದಕ್ಷಿಣೆಯು ಒಂದು ಸಾವಿರ ಆಕಳುಗಳಷ್ಟು ಎಂದು ಹೇಳಿದೆ.

ಅಂದಮೇಲೆ ಯಜ್ಞ ಎಷ್ಟು ದುಬಾರಿಯಾಗಿತ್ತೆಂಬುದನ್ನು ತಿಳಿಯಬಹುದು. ಈ ಲೋಭಕ್ಕಾಗಿ ಸಾವಿರ ಆಕಳುಗಳನ್ನು ಕೊಟ್ಟವನು ಸರ್ಗದಲ್ಲಿ ಎಲ್ಲವನ್ನು ಪಡೆಯುತ್ತಾನೆಂದು ಪುರೋಹಿತನು ಘೋಷಿಸುವಂತೆ ಆಯಿತು. ಈ ವಿಷಯದಲ್ಲಿ ಪುರೋಹಿತನು ಒಳ್ಳೆಯ ದೃಷ್ಟಾಂತಗಳನ್ನು ಕೊಡಬಹುದಿತ್ತು. ಸ್ವರ್ಗದಲ್ಲಿಯ ದೇವತೆಗಳು ತಮ್ಮ ಜೊತೆಯ ದೇವತೆಗಳಿಗೆ ಸಹಾಯ ಮಾಡಿದಾಗ ಪ್ರತಿಫಲವನ್ನು ಕೇಳುವ ಹಕ್ಕು ಇದ್ದೇ ಇರುತ್ತದೆ.

ಪಶು ಯಜ್ಞವು ಮುಖ್ಯ ಯಜ್ಞವಾಗಿತ್ತು. ಅದು ಬಹಳ ವೆಚ್ಚ ಮತ್ತು ಅನಾಗರಿಕವೂ ಆಗಿತ್ತು. ಆರ್ಯರ ಧರ್ಮದಲ್ಲಿ ಐದು ತೆರನಾದ ಪಶುಗಳನ್ನು ಯಜ್ಞಕ್ಕೆ ಯೋಗ್ಯವೆಂದು ಹೇಳಲಾಗಿದೆ. ಯಜ್ಞಕ್ಕೆ ಯೋಗ್ಯವಾದ ಪಶುಗಳ ಪಟ್ಟಿಯಲ್ಲಿ ಮನುಷ್ಯನು ಮೊದಲಿಗನು, ಮನುಷ್ಯ ಯಜ್ಞವು ಅತ್ಯಂತ ದುಬಾರಿಯಾಗಿತ್ತು. ಮನುಷ್ಯ ಯಜ್ಞದ ನಿಯಮಗಳ ಪ್ರಕಾರ ಕೊಲ್ಲಲ್ಪಡುವ ವ್ಯಕ್ತಿಯು ಮರೋಹಿತ (ವರ್ಗದವ)ನೂ ಆಗಿರಬಾರದು, ದಾಸನೂ ಆಗಿರಬಾರದು.

ಅವನು ಕ್ಷತ್ರಿಯ ಅಥವಾ ವೈಶ್ಯನಿರಬೇಕು. ಆ ಕಾಲದ ಸಾಮಾನ್ಯ ಮೌಲ್ಯದ ಪ್ರಕಾರ ಯಜ್ಞ ಪಶುವಾದ ಮನುಷ್ಯನನ್ನು ಕೊಳ್ಳಬೇಕಾದರೆ ಅವನ ಬೆಲೆ ಒಂದು ಸಾವಿರ ಆಕಳು, ಮನುಷ್ಯ ಯಜ್ಞವು ಬಹುವೆಚ್ಚದ್ದೂ ಮತ್ತು ಅನಾಗರಿಕವೂ ಆಗಿತ್ತಲ್ಲದೆ ಅದು ಓಕರಿಕ ಬರುವಂತಹದೂ ಆಗಿದ್ದಿರಬೇಕು. ಏಕೆಂದರೆ ಯಜ್ಞ ಮಾಡುವವರು ಯಜ್ಞ ಪಶುವಾದ ಮನುಷ್ಯನನ್ನು ಕೊಲ್ಲುವುದಷ್ಟೇ ಅಲ್ಲ, ಅವನನ್ನು ತಿನ್ನಬೇಕಾಗಿತ್ತು. ಮನುಷ್ಯನ ಅನಂತರದ ಸ್ಥಾನ ಕುದುರೆಯದು.

ಅದೂ ಸಹ ಬಹಳ ವೆಚ್ಚದ ಯಜ್ಞವಾಗಿತ್ತು. ಏಕೆಂದರೆ ಕುದುರೆಯು ಆರ್ಯರಿಗೆ ಭಾರತವನ್ನು ಜಯಿಸುವಲ್ಲಿ ಅಪರೂಪದ ಹಾಗೂ ಅವಶ್ಯಕವಾದ ಪಾಣಿಯಾಗಿತ್ತು. ಇಂತಹ ಸೈನಿಕ ಮಹತ್ವದ ಮತ್ತು ಸಮರ್ಥವಾದ ಪ್ರಾಣಿಯನ್ನು ಯಜ್ಞ ಪಶುವನ್ನಾಗಿ ಸಂಹರಿಸಿ ಆಹುತಿಗಳನ್ನು ಅರ್ಪಿಸುವುದು ಆರ್ಯರಿಗೆ ಸುಲಭವಾಗಿರಲಿಲ್ಲ. ಅಶ್ವಮೇಧ (ಕುದುರೆಯ ಯಜ್ಜುವು ಓಕರಿಕೆ ಬರುವಂತಹುದೂ ಆಗಿರಬೇಕು, ಏಕೆಂದರೆ ಅದರ ವಿಧಿಗಳಲ್ಲಿ ಒಂದರ ಪ್ರಕಾರ ಕುದುರೆಯನ್ನು ಕೊಲ್ಲುವುದಕ್ಕಿಂತ ಮೊದಲು ಯಜ್ಞಮಾಡುವವನ ಹೆಂಡತಿಯ ಜೊತೆ ಕುದುರೆಯು ಸಂಭೋಗ ಮಾಡಬೇಕಾಗಿತ್ತು.

ಜನರು ಕೃಷಿಯ ಉದ್ದೇಶಗಳಿಗಾಗಿ ಉಪಯೋಗಿಸುತ್ತಿದ್ದ ದನಗಳನ್ನೇ ಹೆಚ್ಚಾಗಿ ಯಜ್ಞಗಳಲ್ಲಿ ಬಲಿಕೊಡುತ್ತಿದ್ದರು. ಸಾಮಾನ್ಯವಾಗಿ ಅವು ಆಕಳುಗಳು ಮತ್ತು ಎತ್ತುಗಳಾಗಿದ್ದವು. ಯಜ್ಞಗಳ ವೆಚ್ಚ ಅತಿಯಾಗಿತ್ತು. ಆದುದರಿಂದ ಅವುಗಳಿಗೆ ಬೇಕಾದ ದುಬಾರಿ ಖರ್ಚಿನ ವಿಚಾರ

ಮಾಡಿದರೆ ಅವು ಕಣ್ಮರೆಯಾಗಬೇಕಾಗಿತ್ತು. ಆದರೆ ಅವು ಹಾಗೆ ಕಣ್ಮರೆಯಾಗಲಿಲ್ಲ. ಕಾರಣವಿಷ್ಟೇ, ಯಜ್ಞ ನಿಂತುಹೋದರೆ ಮರೋಹಿತರ ದಕ್ಷಿಣೆಯೂ ಇಲ್ಲದಂತೆ ಆಗುತ್ತಿತ್ತು. ಯಜ್ಜಗಳನ್ನು ಮಾಡದಿದ್ದರೆ ದಕ್ಷಿಣೆಯಿಲ್ಲ. (ದಕ್ಷಿಣೆಯಿಲ್ಲದಿದ್ದರೆ) ಬ್ರಾಹ್ಮಣರು ಉಪವಾಸ ಸಾಯಬೇಕಾಗುತ್ತಿತ್ತು. ಆದ್ದರಿಂದ ಬ್ರಾಹ್ಮಣರು ಅತಿವೆಚ್ಚದ ಯಜ್ಞ ಪಶುಗಳಿಗೆ ಬದಲಿ ವಸ್ತುಗಳನ್ನು ಕಂಡುಹಿಡಿದರು.

ಮನುಷ್ಯ ಯಜ್ಞದಲ್ಲಿ ಬ್ರಾಹ್ಮಣರು ಜೀವಂತ ಮನುಷ್ಯನಿಗೆ ಬದಲಾಗಿ ಹುಲ್ಲಿನ, ಲೋಹದ ಅಥವಾ ಮಣ್ಣಿನ ಮನುಷ್ಯನನ್ನು ಅರ್ಪಿಸಲು ಅನುಮತಿ ನೀಡಿದರು. ಆದರೆ ಅವರು ನರ ಯಜ್ಞವನ್ನು ಸಂಪೂರ್ಣವಾಗಿ ತ್ಯಜಿಸಲಿಲ್ಲ. ಹಾಗೆ ಮಾಡಿದರೆ ಆ ಯಜ್ಞವೇ ನಿಂತು ಹೋಗಬಹುದು ಮತ್ತು ತಮಗೆ ದಕ್ಷಿಣೆ ಸಿಗುವುದಿಲ್ಲವೆಂಬ ಹೆದರಿಕೆ ಅವರಿಗೆ ಇರಬೇಕು. ಮನುಷ್ಯ ಯಜ್ಞವು ಅಪರೂಪವಾಗುತ್ತ ಬಂದಂತೆ, ಅದಕ್ಕೆ ಬದಲಾಗಿ ಪಶು ಯಜ್ಞವು ಹೆಚ್ಚಾಗಿ ರೂಢಿಯಲ್ಲಿ ಬಂದಿತು, ಪಶು ಯಜ್ಞವು ಸಹ ಲೌಕಿಕರಿಗೆ ಖರ್ಚಿನ ಸಮಸ್ಯೆಯಾಗಿತ್ತು.

ಇಲ್ಲಿಯೂ ಯಜ್ಞವು ಸಂಪೂರ್ಣ ಕಣ್ಮರೆಯಾಗಬಾರದೆಂದು, ಮನುಷ್ಯ ಮತ್ತು ಕುದುರೆಗಳ ಬದಲಿಗೆ ದನಗಳನ್ನು ಅನುಮತಿಸಿದಂತೆ, ದನಗಳ ಬದಲಿಗೆ ಇನ್ನೂ ಚಿಕ್ಕ ಪ್ರಾಣಿಗಳನ್ನು ಬಲಿಕೊಡಲು ಬ್ರಾಹ್ಮಣರು ಅನುಮತಿಸಿದರು. ಇವೆಲ್ಲವೂ ಯಜ್ಞದ ಆಚರಣೆಯನ್ನು ಉಳಿಸಿಕೊಳ್ಳುವುದಕ್ಕಾಗಿತ್ತು. ಹೀಗೆ ಮಾಡುವುದರಿಂದ ಬ್ರಾಹ್ಮಣರ ಉಪಜೀವನಕ್ಕೆ ಬೇಕಾದ ದಕ್ಷಿಣೆಗೆ ಸಂಚಕಾರ ಬರಲಿಲ್ಲ. ಯಜ್ಞಗಳನ್ನು ಮುಂದುವರಿಸಿಕೊಂಡು ಹೋಗಬೇಕೆಂಬ ಬ್ರಾಹ್ಮಣರ ಹಟ ಎಷ್ಟಿತ್ತೆಂದರೆ ಕೇವಲ ಅನ್ನವನ್ನು ಬಲಿಯಾಗಿ ಅರ್ಪಿಸುವುದರಿಂದಲೂ ಅವರು ತೃಪ್ತರಾದರು.

ಆದರೆ, ಆರ್ಯರ ಯಜಗಳ ಬದಲಿ ವ್ಯವಸ್ಥೆಯಿಂದ ಅದರ ಭೀಕರತೆ ಕಡಿಮೆಯಾಯಿತೆಂದು ಭಾವಿಸಬಾರದು. ಬದಲಿ ವ್ಯವಸ್ಥೆಯೆಂದರೆ, ಅತಿ ಖರ್ಚಿನ ಮತ್ತು ಬಹಳ ಭೀಕರವಾದ ಯಜ್ಞಗಳನ್ನು ಪೂರ್ಣವಾಗಿ ತ್ಯಜಿಸಿ ಕಡಿಮೆ ಖರ್ಚಿನ ಹಾಗೂ ಸೌಮ್ಯವಾದ ಯಜ್ಞಗಳನ್ನು ಮಾಡುವುದಾಗಿರಲಿಲ್ಲ. ಯಜ್ಞಮಾಡುವವನು ತನ್ನ ಸಾಮರ್ಥ್ಯಕ್ಕೆ ಅನುಗುಣವಾಗಿ ಆಹುತಿಗಳನ್ನು ಅರ್ಪಿಸಬೇಕೆನ್ನುವುದೇ ಆದರ ಅರ್ಥ, ಅವನು ಬಡವನಾಗಿದ್ದರೆ ಅನ್ನವನ್ನು ಆಹುತಿಯಾಗಿ ಅರ್ಪಿಸಬಹುದು. ಸುಸ್ಥಿತಿಯಲ್ಲಿದ್ದರೆ ಒಂದು ಆಡನ್ನು ಬಲಿ ಕೊಡಬಹುದು.

ಅವನು ಶ್ರೀಮಂತನಿದ್ದರೆ ಮನುಷ್ಯ ಅಥವಾ ಕುದುರೆ ಅಥವಾ ಆಕಳು ಅಥವಾ ಎತ್ತು ಬಲಿ ಪಶು ಆಗಬಹುದು. ಬದಲಿ ವ್ಯವಸ್ಥೆಯ ಪರಿಣಾಮವೆಂದರೆ, ಯಜ್ಞವನ್ನು ಎಲ್ಲರ ಸಾಮರ್ಥ್ಯಕ್ಕೆ ಒಳಪಡಿಸಿದಂತಾಯ್ತು ಮತ್ತು ಒಟ್ಟಿನಲ್ಲಿ ಬ್ರಾಹ್ಮಣರು ಹೆಚ್ಚು ಲಾಭ ಪಡೆಯುವಂತಾಯಿತು. ಆದರಿಂದ ಪಶುಯಜ್ಞವನ್ನು ನಿಲ್ಲಿಸಲಾಗಿಲ್ಲ. ಬದಲಾಗಿ ಸಾವಿರಾರು ಪಶುಗಳನ್ನು ಬಲಿಕೊಡುವುದು ನಡೆದೇ ಇತ್ತು.

ಯಜ್ಞಗಳಲ್ಲಿ ಆಗಾಗ್ಗೆ ದನಗಳ ಕಗ್ಗೋಲೆ ನಡೆಯುತ್ತಿತ್ತು. ಅಲ್ಲಿ ಬ್ರಾಹ್ಮಣರು ಕಟುಕರಾಗಿದ್ದರು. ಬೌದ್ಧ ಸಾಹಿತ್ಯದಲ್ಲಿ ಬರುವ ಯಜ್ಞದ ಉಲ್ಲೇಖಗಳನ್ನು ನೋಡಿದಾಗ ಈ ಮುಗ್ಧಪಶುಗಳ ಕಗ್ಗೋಲೆಯ ವ್ಯಾಪಕತೆಯ ಕಲ್ಪನೆ ಬರುತ್ತದೆ. ‘ಸುತ್ತನಿಪಾತ’ದಲ್ಲಿ ಕೋಸಲದ ರಾಜ, ಪಸನದಿ ಮಾಡಬೇಕಾದ ಯಜ್ಞದ ವರ್ಣನೆಯಿದೆ. ಅಲ್ಲಿ ಹೀಗೆ ಹೇಳಿದೆ: ಯಜ್ಞದಲ್ಲಿ ಕೊಲ್ಲುವುದಕ್ಕಾಗಿ ಐದು ನೂರು ಎತ್ತುಗಳು, ಐದು ನೂರು ಕುರಿಗಳನ್ನು ಕಂಬಗಳಿಗೆ ಕಟ್ಟಿದ್ದರು ಮತ್ತು ಪುರೋಹಿತರು ಹೇಳಿದ ಕೆಲಸಗಳನ್ನು ಮಾಡುವುದಕ್ಕಾಗಿ ನಿಯಮಿಸಲ್ಪಟ್ಟಿದ್ದ ರಾಜನ ಸೇವಕರು ಅಶ್ರುಪೂರ್ಣ ಕಣ್ಣುಳ್ಳವರಾಗಿ ತಮ್ಮ ತಮ್ಮ ಕೆಲಸಗಳನ್ನು ಮಾಡುತ್ತಿದ್ದರು.

ಯಜ್ಞವು ಕಗ್ಗೋಲೆಯನ್ನು ಒಳಗೊಂಡಿತ್ತಷ್ಟೇ ಅಲ್ಲ. ಅದೊಂದು ಸ್ವಚ್ಛಾ ವಿಹಾರೋತ್ಸವವಾಗಿತ್ತು. ಸುಟ್ಟ ಮಾಂಸವಲ್ಲದೆ ಮದ್ಯವೂ ಅಲ್ಲಿರುತ್ತಿತ್ತು. ಬ್ರಾಹ್ಮಣರು ಸೋಮ ಮತ್ತು ಸುರಾಪಾನ ಮಾಡುತ್ತಿದ್ದರು. ಪ್ರತಿಯೊಂದು ಯಜ್ಞ ಮುಗಿದ ನಂತರ ಜೂಜಾಟವಾಡುತ್ತಿದ್ದರು ಮತ್ತು ಇನ್ನೂ ಅಸಾಧಾರಣವಾದ ಒಂದು ಮಾತೆಂದರೆ ಅದರ ಜೊತೆಯಲ್ಲಿಯೇ ಬಯಲಿನಲ್ಲಿ ಮೈಥುನ ನಡೆಯುತ್ತಿತ್ತು. ಯಜ್ಞವೆಂದರೆ ವ್ಯಭಿಚಾರವಾಗಿತ್ತು ಮತ್ತು ಅದರಲ್ಲಿ ಧರ್ಮವೆಂಬುದೇನೂ ಉಳಿದಿರಲಿಲ್ಲ. ಆರ್ಯರ ಧರ್ಮವು ಕೇವಲ ಆಚರಣೆಗಳ ಸರಮಾಲೆಯಾಗಿತ್ತು. ಈ ಆಚರಣೆಗಳ ಹಿಂದೆ

ಒಳ್ಳೆಯ ಮತ್ತು ನೈತಿಕ ಜೀವನಕ್ಕಾಗಿ ಹಂಬಲವಿರಲಿಲ್ಲ. ಸಚ್ಚಾರಿತ್ರಕ್ಕಾಗಿ ಪಿಪಾಸೆಯಿರಲಿಲ್ಲ. ಅವರ ಧರ್ಮದಲ್ಲಿ ಅಧ್ಯಾತ್ಮದ ಯಾವ ತಳಹದಿಯೂ ಇರಲಿಲ್ಲವೆಂಬ ಬಗ್ಗೆ ‘ಋಗೈದ’ದ ಸೂಕ್ತಗಳು ಒಳ್ಳೆಯ ಸಾಕ್ಷ್ಯವನ್ನೊದಗಿಸುತ್ತವೆ. ಸೂಕ್ತಗಳೆಂದರೆ ಆರ್ಯರು ತಮ್ಮ ದೇವತೆಗಳನ್ನು ಉದ್ದೇಶಿಸಿ ಮಾಡಿದ ಪ್ರಾರ್ಥನೆಗಳು. ಈ ಪ್ರಾರ್ಥನೆಗಳಲ್ಲಿ ಅವರು ಏನನ್ನು ಬೇಡುತ್ತಾರೆ? ಆಮಿಷಗಳಿಂದ ತಮ್ಮನ್ನು ದೂರ ಇಡಬೇಕೆಂದು ಬೇಡುತ್ತಾರೆಯೆ? ಬಹಳ ಸೂಕ್ತಗಳು ಇಂದ್ರನ ಸ್ತುತಿ ಪರವಾಗಿದೆ.

ಆರ್ಯರ ಶತ್ರುಗಳನ್ನು ನಾಶ ಮಾಡಿದ್ದಕ್ಕಾಗಿ ಅವನನ್ನು ಅವು ಸ್ತುತಿಸುತ್ತವೆ. ಕೃಷ್ಣನೆಂಬ ಅಸುರನ ಗರ್ಭಿಣಿಯರಾದ ಎಲ್ಲ ಹೆಂಡಂದಿರನ್ನು ಕೊಂದದ್ದಕ್ಕಾಗಿ ಅವನನ್ನು ಸ್ತುತಿಸುತ್ತವೆ. ಲಕ್ಷಗಟ್ಟಲೆ ಅಸುರರನ್ನು ಸಂಹಾರ ಮಾಡಿದ್ದಕ್ಕಾಗಿ ಅವನನ್ನು ಸುತ್ತಿಸುತ್ತವೆ. ಅನಾರ್ಯರ ಆಹಾರ ಧಾನ್ಯಗಳೆಲ್ಲ ತಮಗೆ ದೊರೆಯಬೇಕು ಮತ್ತು ಅನಾರ್ಯರ ಧನ ಸಂಪತ್ತೆಲ್ಲ ತಮಗೇ ಸಿಗಬೇಕು ಎಂಬ ಆಸೆಯಿಂದ ಅನಾರ್ಯರನ್ನು ಇನ್ನೂ ಹೆಚ್ಚಾಗಿ ನಾಶಪಡಿಸು ಎಂದು ಆರ್ಯರು ಇಂದ್ರನನ್ನು ಪ್ರಾರ್ಥಿಸುತ್ತಾರೆ. ಆಧ್ಯಾತ್ಮಿಕವಾಗಿರುವುದನ್ನು ಮತ್ತು ಉದಾತ್ತವಾಗಿರುವುದನ್ನು ಬಿಟ್ಟು ‘ಋಗ್ವದ’ದ ಸೂತ್ರಗಳು ಕೆಟ್ಟ ವಿಚಾರಗಳು ಮತ್ತು ಕೆಟ್ಟ ಉದ್ದೇಶಗಳಿಂದ ತುಂಬಿವೆ. ನೈತಿಕ ಜೀವನವೆಂದು ಯಾವುದನ್ನು ಕರೆಯಬಹುದೋ ಅದರ ಬಗೆಗೆ ಆರ್ಯರ ಧರ್ಮವು ಯಾವ ಕಾಲಕ್ಕೂ ಕಾಳಜಿ ಹೊಂದಿರಲಿಲ್ಲ.

-ಮಾಹಿತಿ ಮೂಲ: ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಸುಪ್ರಸಿದ್ಧ ಗ್ರಂಥ “ಪ್ರಾಚೀನ ಭಾರತದಲ್ಲಿ‌ ಕ್ರಾಂತಿ ಮತ್ತು ಪ್ರತಿಕ್ರಾಂತಿ”.
ಸಂಪುಟ-3. ಪುಟ ಸಂಖ್ಯೆ- 190,191,192,193.

(ಪೋಸ್ಟ್ ಸೆಲೆ: Vikas R Mourya ಫೇಸ್‌ಬುಕ್‌ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂತರಂಗ

ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ

Published

on

~ ಡಾ. ಸುಜಾತಾ ಚಲವಾದಿ

ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.

ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.

ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.

ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.

ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.

ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.

ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.

ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್‌ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.

1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.

ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.

ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.

ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.

26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.

ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು

Published

on

ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.

ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.

ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.

ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.

ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.

——————————————————————-

ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?

ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.

ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?

ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.

ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?

ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.

ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?

ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.

ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.

ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?

ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)

ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?

ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)

ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?

ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.

ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?

ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.

ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending